Connect with us

ದಿನದ ಸುದ್ದಿ

ಹುಟ್ಟು ಹಬ್ಬ | “ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ಸಿಡಿದೆದ್ದರೆ ನೀನು ನನ್ನ ಸಂಗಾತಿ”..! : ಚೆ ಗುವೆರಾ

Published

on

  • ಶಿವಸ್ವಾಮಿ, ಯುವಚಿಂತಕರು

ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ, ಸೋಲಿಗಿಂತ ಸಾವನ್ನೆ ಹೆಚ್ಚು ಇಷ್ಟಪಡುತ್ತೇನೆ”. ಎಂದು ನಿರಂತರವಾಗಿ ಹೋರಾಡುತ್ತಲೇ ತನ್ನ ವಿರೋಧಿಗಳಿಗೆ ಸಿಂಹಸ್ವಪ್ನವಾಗಿ ಎಂದಿಗೂ ಸೋಲನ್ನು ಒಪ್ಪಿಕೊಳ್ಳದೆ ತನ್ನನ್ನು ತಾನೇ ಸಾವಿಗೆ ಅರ್ಪಿಸಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರದ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೋ ಚೆಗುವಾರ.

ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ದಂಪತಿಗಳ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ ಜನಿಸಿದನು.ಚೆಗುವರ ಚಿಕ್ಕಂದಿನಿಂದಲೇ ಶೋಷಿತ ಬಡವರ, ಶ್ರಮಿಕರ ಬಗ್ಗೆ ಅಪಾರವಾದ ಕಾಳಜಿ ಮತ್ತು ಪ್ರೀತಿಯನ್ನು ಬೆಳೆಸಿಕೊಂಡು ಎಡಪಂಥೀಯವಾದದ ಬಗ್ಗೆ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯವಾಗಿ ಗಣತಂತ್ರವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತು.

19 ನೇಯ ವಯಸ್ಸಿನಲ್ಲಿಯೇ ವೈದ್ಯಕೀಯ ವೃತ್ತಿ ಕಲಿಕೆಗಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರವೇಶಾತಿ ಪಡೆದು ಮತ್ತೆ ಒಂದು ವರ್ಷ ರಜೆ ಪಡೆದು ತನ್ನ ಮಿತ್ರ ಅಲ್ಬಟ್ರೋ ಗ್ರೆನಾಡೇ ಜೊತೆ ಸೇರಿ ಮೋಟಾರ್ ಸೈಕಲ್ ಮೂಲಕ ದಕ್ಷಿಣ ಅಮೇರಿಕಾ ಪ್ರವಾಸ ಮಾಡುತ್ತಾನೆ ತಾನೊಬ್ಬ ಕ್ರಾಂತಿಕಾರಿಯಾಗಲು ಈ ಪ್ರವಾಸದ ಅನುಭವಗಳೇ ಕಾರಣವೆಂದು ಅವನೇ ಬರೆದುಕೊಂಡಿದ್ದಾನೆ.

ದಕ್ಷಿಣ ಅಮೆರಿಕಾದ ಆಂಡೀಸ್ ಪರ್ವತದ ಮಾಚು ಪಿಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂ ಮಾಲೀಕರಿಂದ ತುಂಡು ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನರ ಕಡುಬಡತನದ ಹೀನಾಯ ಬದುಕಿನ ಸ್ಥಿತಿಯನ್ನು ಹತ್ತಿರದಿಂದ ಕಂಡು ನಾನು ಈ ಜನರಿಗೆ ಏನಾದರೂ ಸಹಾಯ ಮಾಡಬೇಕೆಂದರೆ ನನ್ನ ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ಮೂಲಕ ರಾಜಕೀಯ ರಂಗವನ್ನು ಪ್ರವೇಶಿಸಬೇಕೆಂದು ಮನವರಿಕೆಯಾಯಿತು ಎಂದು ತನ್ನ ಮೋಟಾರ್ ಸೈಕಲ್ ಡೈರಿಯಲ್ಲಿ ಬರೆದುಕೊಳ್ಳುತ್ತಾನೆ.

ಮೋಟಾರ್ ಸೈಕಲ್ ಪ್ರವಾಸ ಚೆಗುವಾರನ ಕ್ರಾಂತಿಕಾರಿ ಬದುಕಿನ ಒಂದು ದೊಡ್ಡ ತಿರುವು ಪ್ರವಾಸದ ಜೊತೆಗಾರ ಅಲ್ಬಟ್ರೋ ಗ್ರಾನಡಾಸ್ ಚೆಗುವಾರನ ಕುರಿತು ಹೇಳುತ್ತಾ…ಟೆಟೆ (ಚೇ ನನ್ನನ್ನು ಪ್ರೀತಿಯಿಂದ ಕರೆಯುತಿದ್ದ ಹೆಸರು )ನನ್ನು ನಾನು ಮೊದಲು ಭೇಟಿಯಾಗಿದ್ದು 1941 ರಲ್ಲಿ ನನ್ನ ಸಹೋದರ ಥಾಮಸ್ ಮೂಲಕ ನನಗಾಗ 13 ವರ್ಷ ನಮ್ಮಿಬ್ಬರನ್ನು ಒಟ್ಟಿಗೆ ಕೂಡಿಸಿದ ವಿಷಯವೆಂದರೆ ‘ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ’ ಚೇ…ಮನೆಗೆ ಪ್ರತಿದಿನ ಭೇಟಿ ನೀಡಿದಾಗಲೂ ನನ್ನನ್ನು ಆಕರ್ಷಿಸಿದ್ದ ಅಲ್ಲಿನ ಅಪಾರವಾದ ಗ್ರಂಥಭಂಡಾರವನ್ನು ನನ್ನದೆಂಬಂತೆ ಬಳಸುಕೊಳ್ಳುತಿದ್ದೆ.

ನಾವು ಎಷ್ಟೋ ರಾತ್ರಿಗಳನ್ನ ಚೆರ್ಚೆಗಳಲ್ಲಿ ಕಳೆದಿದ್ದೇವೆ, ಒಮ್ಮೆ ವಿದ್ಯಾರ್ಥಿ ಚಳುವಳಿಯಲ್ಲಿ ನನ್ನ ಬಂಧನವಾಯಿತು ಆಗ ನನ್ನ ಸಹೋದರ ಥಾಮಸ್ ಜೊತೆ ಚೆಗುವಾರ ನನ್ನ ನೋಡಲು ಪೊಲೀಸ್ ಠಾಣೆಗೆ ಬಂದಿದ್ದ ನಾನು ಅವನ ಜೊತೆ ಮಾತನಾಡುತ್ತಾ ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಕರೆತರುವಂತೆ ನಾನು ಅವನಿಗೆ ಹೇಳಿದೆ, ಅದಕ್ಕೆ ಅವನು ಹೇಳಿದ ಮಾತು ಬೀದಿಗಿಳಿಯಿರಿ ಎಂದು ಹೇಳುತಿದ್ದೀರಲ್ಲ!ಪೊಲೀಸರೆಲ್ಲ ನಮ್ಮ ಮೇಲೆ ದೊಣ್ಣೆಗಳಿಂದ ಸರಿಯಾಗಿ ಬಾರಿಸಲಿ ಅಂತಲೋ! ಅದೆಲ್ಲ ಆಗುವುದಿಲ್ಲ,ನನಗೆ ಪಿಸ್ತೂಲು ಕೊಟ್ಟರೆ ಮಾತ್ರ ನಾನು ಬೀದಿಗಿಳಿಯುತ್ತೇನೆ ಎಂದಿದ್ದ ಅದೆಷ್ಟೋ ! ನೆನಪುಗಳು ನನ್ನೊಂದಿಗಿವೆ.

ಚೆಗುವಾರ 1953 ರಲ್ಲಿ ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಮತ್ತೆ ಪ್ರವಾಸ ಹೊರಟು ಗ್ವಾಟಮಾಲಕ್ಕೆ ಬರುತ್ತಾನೆ ಅಲ್ಲಿ ಯುದ್ಧದಲ್ಲಿ ಮುಳುಗಿದ ದೇಶವೊಂದರ ಅನುಭವ ದೊರೆಯುತ್ತದೆ, ನಂತರ 1954 ರಲ್ಲಿ ಅರ್ಬೆನ್ಜ್ ರ ಸಮಾಜವಾದಿ ಸರ್ಕಾರದ ವಿರುದ್ಧ CIA ಪ್ರೇರಿತ ಕ್ಷಿಪ್ರ ಕ್ರಾಂತಿಯನ್ನು ಕಣ್ಣಾರೆ ಕಂಡು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಳನ್ನು ರೂಪಿಸಲು ಲ್ಯಾಟಿನ್ ಅಮೆರಿಕಾದಂತಹ ಯಾವುದೇ ಸರ್ಕಾರವನ್ನು ಅಮೆರಿಕಾದಂತ ಸಾಮ್ರಾಜ್ಯ ಷಾಹಿ ದೇಶ ವಿರೋಧಿಸುತ್ತದೆ ಮತ್ತು ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಯಥಾಸ್ಥಿಯಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಚೆಗುವಾರ ಸೂಕ್ಷ್ಮವಾಗಿ ಗ್ರಹಿಸಿದರು.

ಇಂತಹ ಸ್ಥಿತಿಯನ್ನು ಸರಿಪಡಿಸಲು ‘ಸಶಸ್ತ್ರ ಹೋರಾಟದ ಬುಲೆಟ್ ಕ್ರಾಂತಿಯೊಂದೇ ಮದ್ದು‘ಚೆಗುವಾರ ಯೋಚಿಸುತ್ತಾನೆ ನಂತರ ಗ್ವಾಟೆಮಾಲಾದಿಂದ ಹೊರಬಂದು ಚೆಗುವಾರ ಫಿಡೆಲ್ ಕ್ಯಾಸ್ಟ್ರೋರೊಂದಿಗೆ ಜೊತೆಯಾಗಿ ಕ್ಯೂಬಾದ ಸರ್ವಾಧಿಕಾರಿ ಜನರಲ್ ಪುಲ್ಗೆನ್ಸಿಯೋ ಬಟಿಸ್ಟಾ ರ ವಿರುದ್ಧ ಸೇನಾ ದಂಡಾಯಾತ್ರೆ ಕೈಗೊಳ್ಳುವ ಯೋಜನೆ ರೂಪಿಸಿ, 1956 ರಲ್ಲಿ ಚೆಗುವಾರ ಮತ್ತು ಕ್ಯಾಸ್ಟ್ರೊ ಒಂದಾಗಿ ಹಲವು ಹೋರಾಟಗಾರರೊಂದಿಗೆ ಜನರಲ್ ಬಟಿಸ್ಟಾ ನ ಸರ್ಕಾರವನ್ನು ಕಿತ್ತೊಗೆಯಲು ಕ್ಯೂಬಾಕ್ಕೆ ಬಂದು ಸಿಯೆರಾ ಮತ್ತು ಮೈ ಸ್ಟ್ರಾ ಪರ್ವತಗಳಲ್ಲಿ ಅಡಗಿಕೊಳ್ಳುತ್ತಾರೆ.

ಇದರ ಅರಿವಾಗಿ ಎಚ್ಚೆತ್ತ ಬಟಿಸ್ಟಾ ಸರ್ಕಾರ ಹೆಚೆಚ್ಚು ಸೈನಿಕ ಪಡೆಗಳನ್ನು ಸಜ್ಜುಗೊಳಿಸಿ ಚೆಗುವಾರ ಮತ್ತು ಕ್ಯಾಸ್ಟ್ರೋ ನೇತೃತ್ವದ ಕ್ರಾಂತಿಕಾರಿಗಳನ್ನು ಸದೆಬಡಿಯಲು 10 ಸಾವಿರ ಸೈನಿಕ ಪಡೆಗಳನ್ನು ನಿಯೋಜಿಸುತ್ತಾನೆ ಕ್ರಾಂತಿಕಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲೇಂದೆ ಸರ್ಕಾರಿ ಸೈನಿಕರು ಸಾಮಾನ್ಯ ಜನರನ್ನು ವಿಚಾರಣೆಗೆಂದೇ ಎಳೆದೊಯ್ಯುತ್ತಿದ್ದರು. ಜೊತೆಗೆ ಅಮಾಯಕರಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಮಕ್ಕಳನ್ನೂ ಒಳಗೊಂಡಂತೆ ಶಂಕಿತರನ್ನು ಸಾರ್ವಜನಿಕವಾಗಿ ಕೊಲೆಗೈದು ಅವರ ಶವಗಳನ್ನು ಬೀದಿಗಳಲ್ಲಿ ಸಾರ್ವಜನಿಕವಾಗಿ ನೇತು ಹಾಕುತ್ತಿದ್ದರು.

ಅಂದರೆ ಸಾಮಾನ್ಯ ಜನರು ಕ್ರಾಂತಿಕಾರಿಗಳ ಜೊತೆ ಸೇರದಂತೆ ಎಚ್ಚರಿಕೆ ನೀಡುವುದು ಮತ್ತು ಭಯ ಹುಟ್ಟಿಸುವುದು ಇದರ ಉದ್ದೇಶವಾಗಿತ್ತು. ಸರ್ವಾಧಿಕಾರಿ ಬಟಿಸ್ಟಾನ ಈ ವರ್ತನೆಗಳಿಂದ ಗೆರಿಲ್ಲಾ ಹೋರಾಟಗಾರರಿಗೆ ಬೆಂಬಲ ಇನ್ನಷ್ಟು ಹೆಚ್ಚಾಗುತ್ತಲೇ ಹೋಯಿತು. ಉದಾಹರಣೆ ವಕೀಲರು, ವಾಸ್ತುಶಿಲ್ಪಿಗಳು, ವೈದ್ಯರು, ಆಕೌಟೆಂಟ್‍ಗಳು ಸಾಮಾಜಿಕಕರ್ತರು ಮುಂತಾದ ಸುಮಾರು 45 ಸಂಘಟನೆಗಳು ಜುಲೈ 26ರ ಚಳುವಳಿಗೆ ಬೆಂಬಲ ಘೋಷಿಸಿದವು. ಅಮೇರಿಕಾ ಸರ್ವಾಧಿಕಾರಿ ಬಟಿಸ್ಟಾಗೆ, ವಿಮಾನ, ಹಡಗು, ಟ್ಯಾಂಕ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ಒದಗಿಸಿತು.

‘ನಾಪಾಂಬಾಂಬಿ’ನಂತಹ ವಿನಾಶಕಾರಿ ಅಸ್ತ್ರಗಳು ಇದ್ದಾಗಲೂ ಬಟಿಸ್ಟಾನಿಂದ ಗೆರಿಲ್ಲಾ ಹೋರಾಟಗಾರರನ್ನು ಸೋಲಿಸಲು ಸಾಧ್ಯವಾಗಲಿಲ್ಲ. 1958 ಮಾರ್ಚ್ ಚುನಾವಣೆಗಳನ್ನು ಸರ್ವಾಧಿಕಾರಿ ಬಟಿಸ್ಟಾ ವಿರುದ್ಧ ಕ್ಯೂಬಾ ಜನತೆ ಬಹಿಷ್ಕರಿಸಿತು. ರಾಜಧಾನಿ ಹವಾನದಲ್ಲಿ 75% ಚುನಾವಣಾ ಬಹಿಷ್ಕಾರ ಇದ್ದರೆ ಸ್ಯಾಂಟಿಯಾಗೋ ನಗರದಲ್ಲಿ ಶೇ 98% ರಷ್ಟು ಬಹಿಷ್ಕಾರಗಳು ನಡೆದವು. ಇದೇ ಸಂದರ್ಭದಲ್ಲಿ ಕ್ರಾಂತಿಕಾರಿಗಳು ಬಟಿಷ್ಟಾನನನ್ನು ನೇರವಾಗಿ ಸೋಲಿಸಲು ಮುಖ್ಯ ನಗರಗಳಿಗೆ ಬಂದರು.

ಆದರೆ ಸರ್ವಾಧಿಕಾರಿ ಬಟಿಷ್ಟಾ ಅಮೆರಿಕಾದೊಂದಿಗೆ ಸಮಾಲೋಚಿಸಿ ದೇಶಬಿಟ್ಟು ಪಲಾಯನ ಮಾಡಿದ. 1958 ಡಿಸೆಂಬರ್ 31ರಂದು ಬಟಿಸ್ಟಾ ದುರಾಡಳಿತವನ್ನು ಪತನ ಮಾಡಲಾಯಿತು. 1959ರ ಜನವರಿಯಲ್ಲಿ ರಾಜಧಾನಿ ಹವಾನ ನಗರವನ್ನು ಪ್ರವೇಶಿಸಿ ಅಧಿಕಾರವನ್ನು ವಶಕ್ಕೆ ತೆಗೆದುಕೊಂಡ ಮೊಟ್ಟ ಮೊದಲ ಬಂಡಾಯಗಾರ ಪಿಡಲ್ ಕ್ಯಾಸ್ಟ್ರೋ ಜೊತೆ ಚೆಗುವಾರ ಕೂಡ ಇದ್ದರು. ಚೆಗುವಾರ ಮತ್ತು ಕ್ಯಾಸ್ಟ್ರೋ ಕ್ಯೂಬಾದ ಹೊಸ ನಾಯಕರಾದರು.

ಸರ್ಕಾರದ ನೇತೃತ್ವವನ್ನು ಕ್ಯಾಸ್ಟ್ರೋ ವಹಿಸಿಕೊಂಡರು. ಮುಂದೆ ಪಿಡಲ್ ಕ್ಯಾಸ್ಟ್ರೊ ಸರ್ಕಾರದಲ್ಲಿ ಚೆಗುವಾರ ಕೃಷಿ ಮಂತ್ರಿಯಾಗಿ ಕ್ರಾಂತಿಕಾರಿ ಸುಧಾರಣೆಗಳನ್ನು ತಂದರು. ಭೂಸುಧಾರಣೆಯೊಂದಿಗೆ ಚೆಗುವಾರ ಕೇಂದ್ರೀಕರಿಸಿದ ಮತ್ತೊಂದು ಪ್ರಧಾನ ಕ್ಷೇತ್ರವೆಂದರೆ ‘ಶಿಕ್ಷಣಕ್ಷೇತ್ರ’ ಅವರು ರಾಷ್ಟ್ರೀಯ ಸಾಕ್ಷರತೆಗಾಗಿ ಹೆಚ್ಚು ಹೊತ್ತುಕೊಟ್ಟರು. ಅವರ ಒತ್ತಾಸೆಯಂತೆ ಕ್ಯೂಬಾ ಸಕಾರವೂ 1961ನೇ ವರ್ಷವನ್ನು ಶಿಕ್ಷಣ ವರ್ಷವೆಂದು ಘೋಷಿಸಿತು.

ಇದರ ಸಲುವಾಗಿ ಹಳ್ಳಿಗಾಡುಗಳಲ್ಲಿ ಬಹುತೇಕ ಅಕ್ಷರಸ್ಥರಿಗೆ ಓದುಬರಹ ಕಲಿಸಲು ಸಾಕ್ಷರತ ಆಂದೋಲವನ್ನು ಕೈಗೊಳ್ಳಲಾಯಿತು. ಈ ಆಂದೋಲನ ಮುಗಿಯುವ ವೇಳೆಗೆ 7 ಲಕ್ಷಕ್ಕೂ ಹೆಚ್ಚು ಮಂದಿಗೆ ಓದು ಬರಹ ಕಲಿಸಲಾಯಿತು. ಇಂತಹ ಕ್ರಾಂತಿಕಾರ ಕೆಲಸದಿಂದ ದೇಶದ ಸಾಕ್ಷರತೆ ಶೇ 96 ಕ್ಕೆ ಏರಿಕೆಯಾಯಿತು. ಆನಂತರ ಅವರು 1965ರಲ್ಲಿ ಕ್ಯೂಬಾವನ್ನು ಬಿಟ್ಟು ಹೊರಟು ತೃತೀಯ ಜಗತ್ತಿನ ಕ್ರಾಂತಿಗಳಿಗೆ ಬೆಂಬಲವಾಗಿ ಅವರು ತನ್ನ ಸುತ್ತಾಟವನ್ನು ಮುಂದುವರಿಸಿದರು. ಅದರ ಭಾಗವಾಗಿಯೇ ಅವರು ಬೊಲಿವಿಯದಲ್ಲಿ ಗೆರಿಲ್ಲಾ ಯೋಧರನ್ನು ಸಂಘಟಿಸಲು ಯತ್ನಿಸಿದರು.

ಆದರೆ ಬೊವಿಲಿಯಾದಲ್ಲಿ ಚೆಗುವಾರಗೆ ಸಾಮಾನ್ಯ ಜನರ ನೆರವು ಸಿಗಲಿಲ್ಲಾ ಕ್ರಾಂತಿಕಾರಿಗಳ ಜೊತೆ ಸೇರಲು ಸಾಮಾನ್ಯಜನ ಎದುರುತ್ತಿದ್ದರು. ಆದರೂ ಎದೆಗುಂದದೆ ಚೆಗುವಾರ ತನ್ನ ಹೋರಾಟವನ್ನು ಮುಂದುವರಿಸಿದರು. ಆದರೆ ಅಮೆರಿಕಾದ CIA ನೆರವಿನಿಂದ ಬೊಲಿವಿಯಾ ಪಡೆಗಳು ಗೆರಿಲ್ಲಾ ಹೋರಾಟಗಾರರನ್ನು ಪತ್ತೆಹಚ್ಚಿ ಹಲವು ಗೆರಿಲ್ಲಾ ಯೋಧರನ್ನು ಕೊಂದು ಚೆಗುವಾರನನ್ನು 1967 ಅಕ್ಟೋಬರ್ 8ರಂದು ಸೆರೆಹಿಡಿದರು.

ನಂತರ ಹಿಗುಎರಾ ಎಂಬ ಗ್ರಾಮದ ಶಾಲೆಯಲ್ಲಿ ಕೂಡಿಹಾಕಿ ಮಾರನೆ ದಿನ ಅಕ್ಟೋಬರ್ 9 ರಂದು ಮಧ್ಯಾಹ್ನ 1.30ರ ಸುಮಾರಿಗೆ ಅಮೆರಿಕಾದ CIA ಅಧಿಕಾರಿಗಳ ಸಮ್ಮುಖದಲ್ಲಿ ಸಿಐಎ ರೇಂಜರ್ಗಳು ತೀರ ಸಮೀಪದಿಂದ ಗುಂಡಿಟ್ಟು ಚೆಗುವಾರನನ್ನು ಹತ್ಯೆಗೈಯುತ್ತಾರೆ. ನಂತರ ಅವನ ಮುಖವನ್ನು ಪಡಿಯಚ್ಚು ತೆಗೆದು ಅವನ ದೇಹವನ್ನು ಹತ್ತಿರದಿಂದ ಫೊಟೋ ತೆಗೆಯಲಾಯಿತು. ಮತ್ತು ಅವನ ಕೈಗಳನ್ನು ಮುಂಗೈಬಳಿ ಕತ್ತರಿಸಿ ಅವನ್ನು ಆಲ್ಕೊಹಾಲಿನಲ್ಲಿ ರಕ್ಷಿಸಿಟ್ಟರು. ಕಾರಣ ನಾವು ಕೊಂದ ವ್ಯಕ್ತಿ ಚೆಗೆವಾರ ಎಂಬುದರ ಋಜುವಾತುವಿಗಾಗಿ ಅವರ ಹಾಗೆ ಮಾಡಿದರು.

ಚೆ ಗುವೆರಾ ಸತ್ತ ಸುದ್ದಿ ತಿಳಿದು ಜಗತ್ತಿನಾದ್ಯಂತ ಅವನ ಸಂಗಾತಿಗಳು ಶೋಕತಪ್ತರಾದರು. ಈಗ ಚೆ ಕೈಗಳನ್ನು ಕ್ಯೂಬಾ ರಕ್ಷಿಸಿಟ್ಟಿದೆ. ಮತ್ತು ಇವು ವಿಮೋಚನೆಗಾಗಿ ಹೋರಾಟದಲ್ಲಿ ಅಸ್ತ್ರಗಳನ್ನು ಹಿಡಿದ ಕೈಗಳೂ, ತಮ್ಮ ಗಮನಾರ್ಹ ಚಿಂತನೆಗಳನ್ನು ಬರೆದು ಹಂಚಿದ ಕೈಗಳು, ಕಬ್ಬಿನ ಪ್ಲಾಂಟೇಷನ್‍ಗಳಲ್ಲಿ, ಬಂದರುಕಟ್ಟೆಗಳ ಮುಂತಾದ ನಿರ್ಮಾಣದ ಸ್ಥಳಗಳಲ್ಲಿ ಕೆಲಸ ಮಾಡಲು ಬಳಸಿದ ಕೈಗಳು ಎಂದು ಕ್ಯಾಸ್ಟ್ರೊ ಉದ್ಘರಿಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಅಮೇರಿಕಾದಂತ ದುಷ್ಟಶಕ್ತಿಗಳು ಚೆ ನ ದೇಹವನ್ನು ಮಾತ್ರ ಹತ್ಯೆ ಮಾಡಿರಬಹುದು.

ಆದರೆ ಚೆಗುವಾರ ಹಂಚಿದ ಕ್ರಾಂತಿಕಾರಿ ಆಲೋಚನೆಗಳನ್ನು ನಿಯಂತ್ರಿಸಲು ಅಥವಾ ಹತ್ಯೆ ಮಾಡಲು ಸಾಧ್ಯವಿಲ್ಲಾ ! ಚೆಗೆವಾರ ಶೋಷಿತ ಜನತೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡವರು. ಆಗಾಗಿ ಅವಕಾಶವಂಚಿತ ಸಮುದಾಯಗಳಿಗೆ ಚೆಗುವಾರ ಎಂದೆಂದಿಗೂ ಸ್ಫೂರ್ತಿಯಾಗಿರುತ್ತಾರೆ ಅನ್ನುವುದರಲ್ಲಿ ಯಾವ ಅನುಮಾವೂ ಇಲ್ಲ.

ಐರಿಶ್ ಬಂಡಾಯಗಾರರ ರಕ್ತ ನನ್ನ ಮಗನ ಧಮನಿಗಳಲ್ಲಿ ಹರಿಯುತ್ತಿತ್ತು ಎಂಬುದನ್ನು ನಾವು ಮೊಟ್ಟ ಮೊದಲು ಗಮನಿಸೇಕಾದ ವಿಚಾರ’ ಎಂದು ಚೆಗುವಾರನ ಮರಣದ ನಂತರ ಅವರ ತಂದೆ ಪ್ರತಿಕ್ರಿಯಿಸಿದ ಹಾಗೆ, ಚೆ… ಇಲ್ಲವಾಗಿ ಹಲವು ವರ್ಷಗಳು ಕಳೆದಿದ್ದರೂ ಅವನು ತನ್ನ ವಿಚಾರ, ಆಲೋಚನೆಗಳ, ಮಾನವೀಯವಾದ ವ್ಯಕ್ತಿತ್ವಗಳ ಮೂಲಕ ದಬ್ಬಾಳಿಕೆ, ಶೋಷಣೆ ಅನ್ಯಾಯಗಳ ವಿರುದ್ಧಾ ಇಂದಿಗೂ ಸಿಡಿದೇಳುವ ಕ್ರಾಂತಿಯ ಕಿಡಿಯಾಗಿ ತನ್ನ ನಂತರದ ತಲೆಮಾರಿಗೆ ಸ್ಫೂರ್ತಿಯ ಚಿಲುಮೆಯಾಗಿ ಸದಾ ಜೊತೆಯಾಗುತ್ತಲೇ ಇರುತ್ತಾನೆ.

ನಮ್ಮ ನಡುವೆ ಇರುವ ವಿದ್ಯಾವಂತ ಬುದ್ಧಿವಂತ ರೆನಿಸಿಕೊಂಡವರು, ನಾವು ಶ್ರೇಷ್ಠ ಉಳಿದವರು ಕನಿಷ್ಠವೆಂದು ಜಾತಿ ಧರ್ಮ ದೇವರುಗಳ ಹೆಸರಿನಲ್ಲಿ ಭಯ ಹುಟ್ಟಿಸಿ ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯವೆಸಗುತಿದ್ದರು ಇಲ್ಲಿನ ಸರ್ಕಾರಗಳು ಮತ್ತು ಜನಸಾಮಾನ್ಯರು ಅದರ ವಿರುದ್ಧ ಸಿಡಿದೇಳುವುದಿರಲಿ, ಕೊನೆ ಪಕ್ಷ ವಿರೋಧ ವ್ಯಕ್ತ ಪಡಿಸದೆ ಜಾಣ ಕುರುಡರಂತೆ ಮೌನವಹಿಸುತ್ತಿರುವುದು ದುರಂತವೇ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.

ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.

ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.

ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

Published

on

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ

ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?

ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.

ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.

ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ನಿಮ್ಮದು ದರೋಡೆಕೋರ ಸರಕಾರವಲ್ಲವೇ?

ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..

ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending