Connect with us

ದಿನದ ಸುದ್ದಿ

ಹುಟ್ಟು ಹಬ್ಬ | “ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ಸಿಡಿದೆದ್ದರೆ ನೀನು ನನ್ನ ಸಂಗಾತಿ”..! : ಚೆ ಗುವೆರಾ

Published

on

  • ಶಿವಸ್ವಾಮಿ, ಯುವಚಿಂತಕರು

ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ, ಸೋಲಿಗಿಂತ ಸಾವನ್ನೆ ಹೆಚ್ಚು ಇಷ್ಟಪಡುತ್ತೇನೆ”. ಎಂದು ನಿರಂತರವಾಗಿ ಹೋರಾಡುತ್ತಲೇ ತನ್ನ ವಿರೋಧಿಗಳಿಗೆ ಸಿಂಹಸ್ವಪ್ನವಾಗಿ ಎಂದಿಗೂ ಸೋಲನ್ನು ಒಪ್ಪಿಕೊಳ್ಳದೆ ತನ್ನನ್ನು ತಾನೇ ಸಾವಿಗೆ ಅರ್ಪಿಸಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರದ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೋ ಚೆಗುವಾರ.

ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ದಂಪತಿಗಳ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ ಜನಿಸಿದನು.ಚೆಗುವರ ಚಿಕ್ಕಂದಿನಿಂದಲೇ ಶೋಷಿತ ಬಡವರ, ಶ್ರಮಿಕರ ಬಗ್ಗೆ ಅಪಾರವಾದ ಕಾಳಜಿ ಮತ್ತು ಪ್ರೀತಿಯನ್ನು ಬೆಳೆಸಿಕೊಂಡು ಎಡಪಂಥೀಯವಾದದ ಬಗ್ಗೆ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯವಾಗಿ ಗಣತಂತ್ರವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತು.

19 ನೇಯ ವಯಸ್ಸಿನಲ್ಲಿಯೇ ವೈದ್ಯಕೀಯ ವೃತ್ತಿ ಕಲಿಕೆಗಾಗಿ ವಿಶ್ವವಿದ್ಯಾನಿಲಯಕ್ಕೆ ಪ್ರವೇಶಾತಿ ಪಡೆದು ಮತ್ತೆ ಒಂದು ವರ್ಷ ರಜೆ ಪಡೆದು ತನ್ನ ಮಿತ್ರ ಅಲ್ಬಟ್ರೋ ಗ್ರೆನಾಡೇ ಜೊತೆ ಸೇರಿ ಮೋಟಾರ್ ಸೈಕಲ್ ಮೂಲಕ ದಕ್ಷಿಣ ಅಮೇರಿಕಾ ಪ್ರವಾಸ ಮಾಡುತ್ತಾನೆ ತಾನೊಬ್ಬ ಕ್ರಾಂತಿಕಾರಿಯಾಗಲು ಈ ಪ್ರವಾಸದ ಅನುಭವಗಳೇ ಕಾರಣವೆಂದು ಅವನೇ ಬರೆದುಕೊಂಡಿದ್ದಾನೆ.

ದಕ್ಷಿಣ ಅಮೆರಿಕಾದ ಆಂಡೀಸ್ ಪರ್ವತದ ಮಾಚು ಪಿಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂ ಮಾಲೀಕರಿಂದ ತುಂಡು ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನರ ಕಡುಬಡತನದ ಹೀನಾಯ ಬದುಕಿನ ಸ್ಥಿತಿಯನ್ನು ಹತ್ತಿರದಿಂದ ಕಂಡು ನಾನು ಈ ಜನರಿಗೆ ಏನಾದರೂ ಸಹಾಯ ಮಾಡಬೇಕೆಂದರೆ ನನ್ನ ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ಮೂಲಕ ರಾಜಕೀಯ ರಂಗವನ್ನು ಪ್ರವೇಶಿಸಬೇಕೆಂದು ಮನವರಿಕೆಯಾಯಿತು ಎಂದು ತನ್ನ ಮೋಟಾರ್ ಸೈಕಲ್ ಡೈರಿಯಲ್ಲಿ ಬರೆದುಕೊಳ್ಳುತ್ತಾನೆ.

ಮೋಟಾರ್ ಸೈಕಲ್ ಪ್ರವಾಸ ಚೆಗುವಾರನ ಕ್ರಾಂತಿಕಾರಿ ಬದುಕಿನ ಒಂದು ದೊಡ್ಡ ತಿರುವು ಪ್ರವಾಸದ ಜೊತೆಗಾರ ಅಲ್ಬಟ್ರೋ ಗ್ರಾನಡಾಸ್ ಚೆಗುವಾರನ ಕುರಿತು ಹೇಳುತ್ತಾ…ಟೆಟೆ (ಚೇ ನನ್ನನ್ನು ಪ್ರೀತಿಯಿಂದ ಕರೆಯುತಿದ್ದ ಹೆಸರು )ನನ್ನು ನಾನು ಮೊದಲು ಭೇಟಿಯಾಗಿದ್ದು 1941 ರಲ್ಲಿ ನನ್ನ ಸಹೋದರ ಥಾಮಸ್ ಮೂಲಕ ನನಗಾಗ 13 ವರ್ಷ ನಮ್ಮಿಬ್ಬರನ್ನು ಒಟ್ಟಿಗೆ ಕೂಡಿಸಿದ ವಿಷಯವೆಂದರೆ ‘ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ’ ಚೇ…ಮನೆಗೆ ಪ್ರತಿದಿನ ಭೇಟಿ ನೀಡಿದಾಗಲೂ ನನ್ನನ್ನು ಆಕರ್ಷಿಸಿದ್ದ ಅಲ್ಲಿನ ಅಪಾರವಾದ ಗ್ರಂಥಭಂಡಾರವನ್ನು ನನ್ನದೆಂಬಂತೆ ಬಳಸುಕೊಳ್ಳುತಿದ್ದೆ.

ನಾವು ಎಷ್ಟೋ ರಾತ್ರಿಗಳನ್ನ ಚೆರ್ಚೆಗಳಲ್ಲಿ ಕಳೆದಿದ್ದೇವೆ, ಒಮ್ಮೆ ವಿದ್ಯಾರ್ಥಿ ಚಳುವಳಿಯಲ್ಲಿ ನನ್ನ ಬಂಧನವಾಯಿತು ಆಗ ನನ್ನ ಸಹೋದರ ಥಾಮಸ್ ಜೊತೆ ಚೆಗುವಾರ ನನ್ನ ನೋಡಲು ಪೊಲೀಸ್ ಠಾಣೆಗೆ ಬಂದಿದ್ದ ನಾನು ಅವನ ಜೊತೆ ಮಾತನಾಡುತ್ತಾ ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳನ್ನು ಪ್ರತಿಭಟನೆಗೆ ಕರೆತರುವಂತೆ ನಾನು ಅವನಿಗೆ ಹೇಳಿದೆ, ಅದಕ್ಕೆ ಅವನು ಹೇಳಿದ ಮಾತು ಬೀದಿಗಿಳಿಯಿರಿ ಎಂದು ಹೇಳುತಿದ್ದೀರಲ್ಲ!ಪೊಲೀಸರೆಲ್ಲ ನಮ್ಮ ಮೇಲೆ ದೊಣ್ಣೆಗಳಿಂದ ಸರಿಯಾಗಿ ಬಾರಿಸಲಿ ಅಂತಲೋ! ಅದೆಲ್ಲ ಆಗುವುದಿಲ್ಲ,ನನಗೆ ಪಿಸ್ತೂಲು ಕೊಟ್ಟರೆ ಮಾತ್ರ ನಾನು ಬೀದಿಗಿಳಿಯುತ್ತೇನೆ ಎಂದಿದ್ದ ಅದೆಷ್ಟೋ ! ನೆನಪುಗಳು ನನ್ನೊಂದಿಗಿವೆ.

ಚೆಗುವಾರ 1953 ರಲ್ಲಿ ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಮತ್ತೆ ಪ್ರವಾಸ ಹೊರಟು ಗ್ವಾಟಮಾಲಕ್ಕೆ ಬರುತ್ತಾನೆ ಅಲ್ಲಿ ಯುದ್ಧದಲ್ಲಿ ಮುಳುಗಿದ ದೇಶವೊಂದರ ಅನುಭವ ದೊರೆಯುತ್ತದೆ, ನಂತರ 1954 ರಲ್ಲಿ ಅರ್ಬೆನ್ಜ್ ರ ಸಮಾಜವಾದಿ ಸರ್ಕಾರದ ವಿರುದ್ಧ CIA ಪ್ರೇರಿತ ಕ್ಷಿಪ್ರ ಕ್ರಾಂತಿಯನ್ನು ಕಣ್ಣಾರೆ ಕಂಡು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಳನ್ನು ರೂಪಿಸಲು ಲ್ಯಾಟಿನ್ ಅಮೆರಿಕಾದಂತಹ ಯಾವುದೇ ಸರ್ಕಾರವನ್ನು ಅಮೆರಿಕಾದಂತ ಸಾಮ್ರಾಜ್ಯ ಷಾಹಿ ದೇಶ ವಿರೋಧಿಸುತ್ತದೆ ಮತ್ತು ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಯಥಾಸ್ಥಿಯಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಚೆಗುವಾರ ಸೂಕ್ಷ್ಮವಾಗಿ ಗ್ರಹಿಸಿದರು.

ಇಂತಹ ಸ್ಥಿತಿಯನ್ನು ಸರಿಪಡಿಸಲು ‘ಸಶಸ್ತ್ರ ಹೋರಾಟದ ಬುಲೆಟ್ ಕ್ರಾಂತಿಯೊಂದೇ ಮದ್ದು‘ಚೆಗುವಾರ ಯೋಚಿಸುತ್ತಾನೆ ನಂತರ ಗ್ವಾಟೆಮಾಲಾದಿಂದ ಹೊರಬಂದು ಚೆಗುವಾರ ಫಿಡೆಲ್ ಕ್ಯಾಸ್ಟ್ರೋರೊಂದಿಗೆ ಜೊತೆಯಾಗಿ ಕ್ಯೂಬಾದ ಸರ್ವಾಧಿಕಾರಿ ಜನರಲ್ ಪುಲ್ಗೆನ್ಸಿಯೋ ಬಟಿಸ್ಟಾ ರ ವಿರುದ್ಧ ಸೇನಾ ದಂಡಾಯಾತ್ರೆ ಕೈಗೊಳ್ಳುವ ಯೋಜನೆ ರೂಪಿಸಿ, 1956 ರಲ್ಲಿ ಚೆಗುವಾರ ಮತ್ತು ಕ್ಯಾಸ್ಟ್ರೊ ಒಂದಾಗಿ ಹಲವು ಹೋರಾಟಗಾರರೊಂದಿಗೆ ಜನರಲ್ ಬಟಿಸ್ಟಾ ನ ಸರ್ಕಾರವನ್ನು ಕಿತ್ತೊಗೆಯಲು ಕ್ಯೂಬಾಕ್ಕೆ ಬಂದು ಸಿಯೆರಾ ಮತ್ತು ಮೈ ಸ್ಟ್ರಾ ಪರ್ವತಗಳಲ್ಲಿ ಅಡಗಿಕೊಳ್ಳುತ್ತಾರೆ.

ಇದರ ಅರಿವಾಗಿ ಎಚ್ಚೆತ್ತ ಬಟಿಸ್ಟಾ ಸರ್ಕಾರ ಹೆಚೆಚ್ಚು ಸೈನಿಕ ಪಡೆಗಳನ್ನು ಸಜ್ಜುಗೊಳಿಸಿ ಚೆಗುವಾರ ಮತ್ತು ಕ್ಯಾಸ್ಟ್ರೋ ನೇತೃತ್ವದ ಕ್ರಾಂತಿಕಾರಿಗಳನ್ನು ಸದೆಬಡಿಯಲು 10 ಸಾವಿರ ಸೈನಿಕ ಪಡೆಗಳನ್ನು ನಿಯೋಜಿಸುತ್ತಾನೆ ಕ್ರಾಂತಿಕಾರಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲೇಂದೆ ಸರ್ಕಾರಿ ಸೈನಿಕರು ಸಾಮಾನ್ಯ ಜನರನ್ನು ವಿಚಾರಣೆಗೆಂದೇ ಎಳೆದೊಯ್ಯುತ್ತಿದ್ದರು. ಜೊತೆಗೆ ಅಮಾಯಕರಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಮಕ್ಕಳನ್ನೂ ಒಳಗೊಂಡಂತೆ ಶಂಕಿತರನ್ನು ಸಾರ್ವಜನಿಕವಾಗಿ ಕೊಲೆಗೈದು ಅವರ ಶವಗಳನ್ನು ಬೀದಿಗಳಲ್ಲಿ ಸಾರ್ವಜನಿಕವಾಗಿ ನೇತು ಹಾಕುತ್ತಿದ್ದರು.

ಅಂದರೆ ಸಾಮಾನ್ಯ ಜನರು ಕ್ರಾಂತಿಕಾರಿಗಳ ಜೊತೆ ಸೇರದಂತೆ ಎಚ್ಚರಿಕೆ ನೀಡುವುದು ಮತ್ತು ಭಯ ಹುಟ್ಟಿಸುವುದು ಇದರ ಉದ್ದೇಶವಾಗಿತ್ತು. ಸರ್ವಾಧಿಕಾರಿ ಬಟಿಸ್ಟಾನ ಈ ವರ್ತನೆಗಳಿಂದ ಗೆರಿಲ್ಲಾ ಹೋರಾಟಗಾರರಿಗೆ ಬೆಂಬಲ ಇನ್ನಷ್ಟು ಹೆಚ್ಚಾಗುತ್ತಲೇ ಹೋಯಿತು. ಉದಾಹರಣೆ ವಕೀಲರು, ವಾಸ್ತುಶಿಲ್ಪಿಗಳು, ವೈದ್ಯರು, ಆಕೌಟೆಂಟ್‍ಗಳು ಸಾಮಾಜಿಕಕರ್ತರು ಮುಂತಾದ ಸುಮಾರು 45 ಸಂಘಟನೆಗಳು ಜುಲೈ 26ರ ಚಳುವಳಿಗೆ ಬೆಂಬಲ ಘೋಷಿಸಿದವು. ಅಮೇರಿಕಾ ಸರ್ವಾಧಿಕಾರಿ ಬಟಿಸ್ಟಾಗೆ, ವಿಮಾನ, ಹಡಗು, ಟ್ಯಾಂಕ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ಒದಗಿಸಿತು.

‘ನಾಪಾಂಬಾಂಬಿ’ನಂತಹ ವಿನಾಶಕಾರಿ ಅಸ್ತ್ರಗಳು ಇದ್ದಾಗಲೂ ಬಟಿಸ್ಟಾನಿಂದ ಗೆರಿಲ್ಲಾ ಹೋರಾಟಗಾರರನ್ನು ಸೋಲಿಸಲು ಸಾಧ್ಯವಾಗಲಿಲ್ಲ. 1958 ಮಾರ್ಚ್ ಚುನಾವಣೆಗಳನ್ನು ಸರ್ವಾಧಿಕಾರಿ ಬಟಿಸ್ಟಾ ವಿರುದ್ಧ ಕ್ಯೂಬಾ ಜನತೆ ಬಹಿಷ್ಕರಿಸಿತು. ರಾಜಧಾನಿ ಹವಾನದಲ್ಲಿ 75% ಚುನಾವಣಾ ಬಹಿಷ್ಕಾರ ಇದ್ದರೆ ಸ್ಯಾಂಟಿಯಾಗೋ ನಗರದಲ್ಲಿ ಶೇ 98% ರಷ್ಟು ಬಹಿಷ್ಕಾರಗಳು ನಡೆದವು. ಇದೇ ಸಂದರ್ಭದಲ್ಲಿ ಕ್ರಾಂತಿಕಾರಿಗಳು ಬಟಿಷ್ಟಾನನನ್ನು ನೇರವಾಗಿ ಸೋಲಿಸಲು ಮುಖ್ಯ ನಗರಗಳಿಗೆ ಬಂದರು.

ಆದರೆ ಸರ್ವಾಧಿಕಾರಿ ಬಟಿಷ್ಟಾ ಅಮೆರಿಕಾದೊಂದಿಗೆ ಸಮಾಲೋಚಿಸಿ ದೇಶಬಿಟ್ಟು ಪಲಾಯನ ಮಾಡಿದ. 1958 ಡಿಸೆಂಬರ್ 31ರಂದು ಬಟಿಸ್ಟಾ ದುರಾಡಳಿತವನ್ನು ಪತನ ಮಾಡಲಾಯಿತು. 1959ರ ಜನವರಿಯಲ್ಲಿ ರಾಜಧಾನಿ ಹವಾನ ನಗರವನ್ನು ಪ್ರವೇಶಿಸಿ ಅಧಿಕಾರವನ್ನು ವಶಕ್ಕೆ ತೆಗೆದುಕೊಂಡ ಮೊಟ್ಟ ಮೊದಲ ಬಂಡಾಯಗಾರ ಪಿಡಲ್ ಕ್ಯಾಸ್ಟ್ರೋ ಜೊತೆ ಚೆಗುವಾರ ಕೂಡ ಇದ್ದರು. ಚೆಗುವಾರ ಮತ್ತು ಕ್ಯಾಸ್ಟ್ರೋ ಕ್ಯೂಬಾದ ಹೊಸ ನಾಯಕರಾದರು.

ಸರ್ಕಾರದ ನೇತೃತ್ವವನ್ನು ಕ್ಯಾಸ್ಟ್ರೋ ವಹಿಸಿಕೊಂಡರು. ಮುಂದೆ ಪಿಡಲ್ ಕ್ಯಾಸ್ಟ್ರೊ ಸರ್ಕಾರದಲ್ಲಿ ಚೆಗುವಾರ ಕೃಷಿ ಮಂತ್ರಿಯಾಗಿ ಕ್ರಾಂತಿಕಾರಿ ಸುಧಾರಣೆಗಳನ್ನು ತಂದರು. ಭೂಸುಧಾರಣೆಯೊಂದಿಗೆ ಚೆಗುವಾರ ಕೇಂದ್ರೀಕರಿಸಿದ ಮತ್ತೊಂದು ಪ್ರಧಾನ ಕ್ಷೇತ್ರವೆಂದರೆ ‘ಶಿಕ್ಷಣಕ್ಷೇತ್ರ’ ಅವರು ರಾಷ್ಟ್ರೀಯ ಸಾಕ್ಷರತೆಗಾಗಿ ಹೆಚ್ಚು ಹೊತ್ತುಕೊಟ್ಟರು. ಅವರ ಒತ್ತಾಸೆಯಂತೆ ಕ್ಯೂಬಾ ಸಕಾರವೂ 1961ನೇ ವರ್ಷವನ್ನು ಶಿಕ್ಷಣ ವರ್ಷವೆಂದು ಘೋಷಿಸಿತು.

ಇದರ ಸಲುವಾಗಿ ಹಳ್ಳಿಗಾಡುಗಳಲ್ಲಿ ಬಹುತೇಕ ಅಕ್ಷರಸ್ಥರಿಗೆ ಓದುಬರಹ ಕಲಿಸಲು ಸಾಕ್ಷರತ ಆಂದೋಲವನ್ನು ಕೈಗೊಳ್ಳಲಾಯಿತು. ಈ ಆಂದೋಲನ ಮುಗಿಯುವ ವೇಳೆಗೆ 7 ಲಕ್ಷಕ್ಕೂ ಹೆಚ್ಚು ಮಂದಿಗೆ ಓದು ಬರಹ ಕಲಿಸಲಾಯಿತು. ಇಂತಹ ಕ್ರಾಂತಿಕಾರ ಕೆಲಸದಿಂದ ದೇಶದ ಸಾಕ್ಷರತೆ ಶೇ 96 ಕ್ಕೆ ಏರಿಕೆಯಾಯಿತು. ಆನಂತರ ಅವರು 1965ರಲ್ಲಿ ಕ್ಯೂಬಾವನ್ನು ಬಿಟ್ಟು ಹೊರಟು ತೃತೀಯ ಜಗತ್ತಿನ ಕ್ರಾಂತಿಗಳಿಗೆ ಬೆಂಬಲವಾಗಿ ಅವರು ತನ್ನ ಸುತ್ತಾಟವನ್ನು ಮುಂದುವರಿಸಿದರು. ಅದರ ಭಾಗವಾಗಿಯೇ ಅವರು ಬೊಲಿವಿಯದಲ್ಲಿ ಗೆರಿಲ್ಲಾ ಯೋಧರನ್ನು ಸಂಘಟಿಸಲು ಯತ್ನಿಸಿದರು.

ಆದರೆ ಬೊವಿಲಿಯಾದಲ್ಲಿ ಚೆಗುವಾರಗೆ ಸಾಮಾನ್ಯ ಜನರ ನೆರವು ಸಿಗಲಿಲ್ಲಾ ಕ್ರಾಂತಿಕಾರಿಗಳ ಜೊತೆ ಸೇರಲು ಸಾಮಾನ್ಯಜನ ಎದುರುತ್ತಿದ್ದರು. ಆದರೂ ಎದೆಗುಂದದೆ ಚೆಗುವಾರ ತನ್ನ ಹೋರಾಟವನ್ನು ಮುಂದುವರಿಸಿದರು. ಆದರೆ ಅಮೆರಿಕಾದ CIA ನೆರವಿನಿಂದ ಬೊಲಿವಿಯಾ ಪಡೆಗಳು ಗೆರಿಲ್ಲಾ ಹೋರಾಟಗಾರರನ್ನು ಪತ್ತೆಹಚ್ಚಿ ಹಲವು ಗೆರಿಲ್ಲಾ ಯೋಧರನ್ನು ಕೊಂದು ಚೆಗುವಾರನನ್ನು 1967 ಅಕ್ಟೋಬರ್ 8ರಂದು ಸೆರೆಹಿಡಿದರು.

ನಂತರ ಹಿಗುಎರಾ ಎಂಬ ಗ್ರಾಮದ ಶಾಲೆಯಲ್ಲಿ ಕೂಡಿಹಾಕಿ ಮಾರನೆ ದಿನ ಅಕ್ಟೋಬರ್ 9 ರಂದು ಮಧ್ಯಾಹ್ನ 1.30ರ ಸುಮಾರಿಗೆ ಅಮೆರಿಕಾದ CIA ಅಧಿಕಾರಿಗಳ ಸಮ್ಮುಖದಲ್ಲಿ ಸಿಐಎ ರೇಂಜರ್ಗಳು ತೀರ ಸಮೀಪದಿಂದ ಗುಂಡಿಟ್ಟು ಚೆಗುವಾರನನ್ನು ಹತ್ಯೆಗೈಯುತ್ತಾರೆ. ನಂತರ ಅವನ ಮುಖವನ್ನು ಪಡಿಯಚ್ಚು ತೆಗೆದು ಅವನ ದೇಹವನ್ನು ಹತ್ತಿರದಿಂದ ಫೊಟೋ ತೆಗೆಯಲಾಯಿತು. ಮತ್ತು ಅವನ ಕೈಗಳನ್ನು ಮುಂಗೈಬಳಿ ಕತ್ತರಿಸಿ ಅವನ್ನು ಆಲ್ಕೊಹಾಲಿನಲ್ಲಿ ರಕ್ಷಿಸಿಟ್ಟರು. ಕಾರಣ ನಾವು ಕೊಂದ ವ್ಯಕ್ತಿ ಚೆಗೆವಾರ ಎಂಬುದರ ಋಜುವಾತುವಿಗಾಗಿ ಅವರ ಹಾಗೆ ಮಾಡಿದರು.

ಚೆ ಗುವೆರಾ ಸತ್ತ ಸುದ್ದಿ ತಿಳಿದು ಜಗತ್ತಿನಾದ್ಯಂತ ಅವನ ಸಂಗಾತಿಗಳು ಶೋಕತಪ್ತರಾದರು. ಈಗ ಚೆ ಕೈಗಳನ್ನು ಕ್ಯೂಬಾ ರಕ್ಷಿಸಿಟ್ಟಿದೆ. ಮತ್ತು ಇವು ವಿಮೋಚನೆಗಾಗಿ ಹೋರಾಟದಲ್ಲಿ ಅಸ್ತ್ರಗಳನ್ನು ಹಿಡಿದ ಕೈಗಳೂ, ತಮ್ಮ ಗಮನಾರ್ಹ ಚಿಂತನೆಗಳನ್ನು ಬರೆದು ಹಂಚಿದ ಕೈಗಳು, ಕಬ್ಬಿನ ಪ್ಲಾಂಟೇಷನ್‍ಗಳಲ್ಲಿ, ಬಂದರುಕಟ್ಟೆಗಳ ಮುಂತಾದ ನಿರ್ಮಾಣದ ಸ್ಥಳಗಳಲ್ಲಿ ಕೆಲಸ ಮಾಡಲು ಬಳಸಿದ ಕೈಗಳು ಎಂದು ಕ್ಯಾಸ್ಟ್ರೊ ಉದ್ಘರಿಸುತ್ತಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಅಮೇರಿಕಾದಂತ ದುಷ್ಟಶಕ್ತಿಗಳು ಚೆ ನ ದೇಹವನ್ನು ಮಾತ್ರ ಹತ್ಯೆ ಮಾಡಿರಬಹುದು.

ಆದರೆ ಚೆಗುವಾರ ಹಂಚಿದ ಕ್ರಾಂತಿಕಾರಿ ಆಲೋಚನೆಗಳನ್ನು ನಿಯಂತ್ರಿಸಲು ಅಥವಾ ಹತ್ಯೆ ಮಾಡಲು ಸಾಧ್ಯವಿಲ್ಲಾ ! ಚೆಗೆವಾರ ಶೋಷಿತ ಜನತೆಗೆ ತಮ್ಮ ಬದುಕನ್ನು ಅರ್ಪಿಸಿಕೊಂಡವರು. ಆಗಾಗಿ ಅವಕಾಶವಂಚಿತ ಸಮುದಾಯಗಳಿಗೆ ಚೆಗುವಾರ ಎಂದೆಂದಿಗೂ ಸ್ಫೂರ್ತಿಯಾಗಿರುತ್ತಾರೆ ಅನ್ನುವುದರಲ್ಲಿ ಯಾವ ಅನುಮಾವೂ ಇಲ್ಲ.

ಐರಿಶ್ ಬಂಡಾಯಗಾರರ ರಕ್ತ ನನ್ನ ಮಗನ ಧಮನಿಗಳಲ್ಲಿ ಹರಿಯುತ್ತಿತ್ತು ಎಂಬುದನ್ನು ನಾವು ಮೊಟ್ಟ ಮೊದಲು ಗಮನಿಸೇಕಾದ ವಿಚಾರ’ ಎಂದು ಚೆಗುವಾರನ ಮರಣದ ನಂತರ ಅವರ ತಂದೆ ಪ್ರತಿಕ್ರಿಯಿಸಿದ ಹಾಗೆ, ಚೆ… ಇಲ್ಲವಾಗಿ ಹಲವು ವರ್ಷಗಳು ಕಳೆದಿದ್ದರೂ ಅವನು ತನ್ನ ವಿಚಾರ, ಆಲೋಚನೆಗಳ, ಮಾನವೀಯವಾದ ವ್ಯಕ್ತಿತ್ವಗಳ ಮೂಲಕ ದಬ್ಬಾಳಿಕೆ, ಶೋಷಣೆ ಅನ್ಯಾಯಗಳ ವಿರುದ್ಧಾ ಇಂದಿಗೂ ಸಿಡಿದೇಳುವ ಕ್ರಾಂತಿಯ ಕಿಡಿಯಾಗಿ ತನ್ನ ನಂತರದ ತಲೆಮಾರಿಗೆ ಸ್ಫೂರ್ತಿಯ ಚಿಲುಮೆಯಾಗಿ ಸದಾ ಜೊತೆಯಾಗುತ್ತಲೇ ಇರುತ್ತಾನೆ.

ನಮ್ಮ ನಡುವೆ ಇರುವ ವಿದ್ಯಾವಂತ ಬುದ್ಧಿವಂತ ರೆನಿಸಿಕೊಂಡವರು, ನಾವು ಶ್ರೇಷ್ಠ ಉಳಿದವರು ಕನಿಷ್ಠವೆಂದು ಜಾತಿ ಧರ್ಮ ದೇವರುಗಳ ಹೆಸರಿನಲ್ಲಿ ಭಯ ಹುಟ್ಟಿಸಿ ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯವೆಸಗುತಿದ್ದರು ಇಲ್ಲಿನ ಸರ್ಕಾರಗಳು ಮತ್ತು ಜನಸಾಮಾನ್ಯರು ಅದರ ವಿರುದ್ಧ ಸಿಡಿದೇಳುವುದಿರಲಿ, ಕೊನೆ ಪಕ್ಷ ವಿರೋಧ ವ್ಯಕ್ತ ಪಡಿಸದೆ ಜಾಣ ಕುರುಡರಂತೆ ಮೌನವಹಿಸುತ್ತಿರುವುದು ದುರಂತವೇ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending