ದಿನದ ಸುದ್ದಿ
ಬದಲಾದ ಸನ್ನಿವೇಶದಲ್ಲಿ ಹೀಗಿರಲಿ ಶಿಕ್ಷಣ ಪದ್ಧತಿ; ಮಗುವಿನ ಜೀವ ಮತ್ತು ಜೀವನ ಎರಡಕ್ಕೂ ಸಿಗಲಿ ಸಮಾನ ಆದ್ಯತೆ
- ವಿ.ಕೆ.ಕುಮಾರಸ್ವಾಮಿ, ಶಿಕ್ಷಕರು, ರಾಮನಗರ
ಇಡೀ ಭೂ ಖಂಡಕ್ಕೆ ವಕ್ಕರಿಸಿರುವ ಕೊರೋನಾ ವಿಷ ಪೀಡೆಯ ಹಾವಳಿಯಿಂದ ಇಂದು ಎಲ್ಲವೂ ಅಯೋಮಯವಾಗಿದೆ. ಈ ವಿಷವರ್ತುಲದಲ್ಲೇ ಬದುಕು ಸವೆಸುವುದು ಸರ್ವರಿಗೂ ಅನಿವಾರ್ಯವಾಗಿದೆ. ಬಹುಕಾಲದಿಂದ ಅಸ್ತಿತ್ವದಲ್ಲಿದ್ದ ನಮ್ಮ ಧೀಮಂತ ಶಿಕ್ಷಣ ವ್ಯವಸ್ಥೆಯೂ ಸಹ ಇದರಿಂದ ಹೊರತಾಗಿಲ್ಲ. ಪ್ರಸ್ತುತ ಸಂದಿಗ್ಧ ಸಂದರ್ಭದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ನೇರವಾಗಿ ಚಾಲನೆ ಕೊಡುವ ಬಗ್ಗೆ ಎಲ್ಲರಲ್ಲೂ ಜಿಜ್ಞಾಸೆ ಇದೆ.
ಹೇಗೋ ಶಾಲೆಗಳು ಪುನರಾರಂಭವಾದರೂ, ಈ ಮೊದಲಿನಂತೆ ಶಿಕ್ಷಣದ ರಥವನ್ನ ಎಳೆಯುವುದು ಪ್ರಾಯಾಸದ ವಿಚಾರವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಹಾಗೂ ಸಂಬಂಧಿಸಿದ ರಾಜ್ಯ ಸರಕಾರಗಳು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿರುವುದು ಒಂದಷ್ಟು ವಿಶ್ವಾಸ ಮೂಡಿಸಿದ್ದರೂ, ಅವುಗಳ ಜಾರಿ ಮತ್ತು ಪಾಲನೆ ಅಷ್ಟು ಸರಾಗದ ಕೆಲಸವಲ್ಲ. ಶಾಲೆಗಳು ಆರಂಭವಾದ ನಂತರ ಸರಕಾರದ ಮಾರ್ಗಸೂಚಿಗಳ ಜೊತೆಗೆ, ಕೈಗೊಳ್ಳಬಹುದಾದ ಇನ್ನಿತರ ಉಪಕ್ರಮಗಳನ್ನು ಕುರಿತು ಒಂದು ಅವಲೋಕನ ಇಲ್ಲಿದೆ.
ಹಿರಿದಾಗಬೇಕಿದೆ ಪೋಷಕರ ಪಾತ್ರ
ಮನೆಯೆ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರುವು ಎಂಬ ನಾಣ್ಣುಡಿಯಂತೆ ಬದಲಾದ ಶೈಕ್ಷಣಿಕ ದಿನಗಳಲ್ಲಿ ಪೋಷಕರು ಸಹ ಶಿಕ್ಷಣ ವ್ಯವಸ್ಥೆಯ ಒಂದು ಭಾಗವಾಗಿ ಹೊರಳಬೇಕಿದೆ. ಈ ಮೊದಲು ಶಿಕ್ಷಕ-ಪಠ್ಯವಸ್ತು–ವಿದ್ಯಾರ್ಥಿ ಕೇಂದ್ರಿತವಾಗಿದ್ದ ತ್ರಿಸೂತ್ರದ ಶಿಕ್ಷಣ ವ್ಯವಸ್ಥೆ ಇಂದು ಪೋಷಕರನ್ನೂ ಒಳಗೊಂಡು ಚತುರ್ ಸೂತ್ರವಾಗಬೇಕಿದೆ. ಶಾಲಾವಧಿಯನ್ನು ಕಡಿತಗೊಳಿಸುವ ಬಗ್ಗೆ ಈಗಾಗಲೇ ಉನ್ನತ ಮಟ್ಟದ ಚಿಂತನೆ ನಡೆಯುತ್ತಿರುವುದರಿಂದ, ಇನ್ನು ಮುಂದೆ ಮಗುವಿಗೆ ಮನೆಯಲ್ಲೂ ಸಹ ಕಲಿಕೆಯಾಗಬೇಕಿದೆ.
ವಿಶೇಷವಾಗಿ ತಾಯಂದಿರು ಸ್ವತಃ ಶಿಕ್ಷಕರಾಗಿ ಬದಲಾಗಬೇಕಿದೆ. ಪ್ರಬುದ್ಧ ಪೌರರ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಹಿರಿದಾಗಿದ್ದು, ಈ ನಿಟ್ಟಿನಲ್ಲಿ ನಾವಿಡುವ ಪ್ರತೀ ಹೆಜ್ಜೆಯೂ ಭವಿಷ್ಯದಲ್ಲಿ ಶಿಕ್ಷಣದ ಸ್ಥಿತಿಸ್ಥಾಪಕತ್ವದ ಮುನ್ನುಡಿಯಾಗುತ್ತದೆ. ಇತಿಹಾಸದಲ್ಲಿ ಶಿವಾಜಿ ಮಹಾರಾಜರ ತಾಯಿ ಜೀಜಾಬಾಯಿಯನ್ನು ಮೊದಲುಗೊಂಡು, ಅನೇಕ ತಾಯಂದಿರು ತಮ್ಮ ಕಂದಮ್ಮಗಳ ಭವಿಷ್ಯಕ್ಕೆ ಅಡಿಪಾಯವಾದದ್ದನ್ನು ಸ್ಮರಿಸಿಕೊಳ್ಳುತ್ತಾ, ಅದೇ ಹಾದಿಯಲ್ಲಿ ಸಾಗಬೇಕಿದೆ.
‘ಹಿತ್ತಲ ಗಿಡ ಮದ್ದಲ್ಲ’ ಎಂಬಂತೆ ಮಕ್ಕಳು ಮನೆಯಲ್ಲಿ ಮೊಂಡು ಬೀಳುವುದು ಸಹಜವೇ. ಆದರೆ ಇಂದಿನ ವಿಷಮ ಪರಿಸ್ಥಿತಿಯಲ್ಲಿ ಮಗುವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲೇಬೇಕಿದೆ. ಪೋಷಕರೂ ಸಹ ಶೈಕ್ಷಣಿಕ ಚಟುವಟಿಕೆಗಳಿಗೆ ಸಮಾನ ಸಹಭಾಗಿತ್ವ ತೋರಬೇಕಿದೆ. ಇಂತಹ ಚತುರ್ ಸೂತ್ರದ ಪಾಲನೆಗೆ ಕ್ರಮೇಣವಾಗಿ ಎಲ್ಲರೂ ಒಗ್ಗಿಕೊಳ್ಳಬೇಕಿದೆ.
ಶಾಲೆಗಳ ಆರಂಭದ ನಂತರವಂತೂ ಮಗುವಿನ ಆರೋಗ್ಯ ರಕ್ಷಣೆಯ ವಿಚಾರ ಅತ್ಯಂತ ಗಂಭೀರವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಗುವಿನ ಭವಿಷ್ಯ ಡೋಲಾಯಮಾನವಾಗದಂತೆ ರಕ್ಷಿಸುವ ಹೊಣೆ ಎಲ್ಲರದ್ದೂ ಆಗಿದೆ. ಮನೆಯಲ್ಲಿ ಅವರಿಗೆ ಸ್ವಚ್ಛವಾದ ಆಹಾರ ಪೂರೈಕೆ, ಪ್ರತಿನಿತ್ಯ ಸ್ನಾನ, ಶಾಲೆಯಲ್ಲಿ ಅವರು ಅನುಸರಿಸಬೇಕಾದ ಕ್ರಮಗಳು, ಅವರ ಓದು ಬರಹದ ಮೇಲೆ ಪೂರ್ಣ ನಿಗಾ ಇಡುವುದು ಇವೆಲ್ಲವೂ ಸಹ ಮಗುವಿನ ಬೆಳವಣಿಗೆಗೆ ಮಹತ್ವದ ಆಧಾರ ಸ್ಥಂಭಗಳಾಗಲಿವೆ. ಶಾಲೆಗೂ ಸಹ ಮನೆಯಿಂದಲೇ ಆಹಾರ ಮತ್ತು ಬಿಸಿ ನೀರಿನ ಪೂರೈಕೆ ಮಾಡುವುದು ಸಮಂಜಸ. ಎಲ್ಲಕ್ಕಿಂತ ಹೆಚ್ಚಾಗಿ ಮಕ್ಕಳಿಗೆ ಹೊರಗಿನ ತಿಂಡಿ-ತಿನಿಸುಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕಿದೆ.
ಶಿಕ್ಷಣ ಸಂಸ್ಥೆಗಳಿಗೆ ಸವಾಲು
ವರ್ಷವಿಡೀ ಪಠ್ಯವಸ್ತುವನ್ನು ಬೋಧಿಸಿ, ಅದನ್ನು ಮಗುವಿಗೆ ಮನದಟ್ಟು ಮಾಡಿಸಿ, ಮಧ್ಯದಲ್ಲಿ ಕೆಲವು ಪಠ್ಯೇತರ ಚಟುವಟಿಕೆಗಳನ್ನು ನಡೆಸಿ, ಕೊನೆಗೆ ಮಕ್ಕಳನ್ನು ಪರೀಕ್ಷೆಗೆ ಒರೆ ಹಚ್ಚುವುದು ನಮ್ಮ ಈ ಮೊದಲಿನ ಶಿಕ್ಷಣ ವ್ಯವಸ್ಥೆಯ ಸಮಗ್ರ ಭಾಗವಾಗಿತ್ತು. ಇಂದಿನ ಬದಲಾದ ಸನ್ನಿವೇಶದಲ್ಲಿ, ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಗುವನ್ನು ಕಾಣದ ಕ್ರಿಮಿಯ ದಾಳಿಯಿಂದ ಪಹರೆ ಮಾಡಬೇಕಾದ ದೊಡ್ಡಮಟ್ಟದ ಜವಾಬ್ದಾರಿ ಶಾಲೆಗಳ ಮೇಲಿದೆ.
ಕೊರೋನಾ ಪೂರ್ವ ಕಾಲದಲ್ಲಿದ್ದಂತೆ, ಕೊರೋನೋತ್ತರ ಕಾಲದಲ್ಲೂ ಮಗುವಿನ ಸಮಗ್ರ ವಿಕಾಸಕ್ಕೆ ಅಗತ್ಯವಾದ ಕ್ರಮಗಳ ಅನುಷ್ಠಾನ ಇಂದು ಶಿಕ್ಷಣ ಸಂಸ್ಥೆಗಳಿಗೆ ಸವಾಲಾಗಿದೆ. ಮಕ್ಕಳ ಸರ್ವಾಂಗೀಣ ಪ್ರಗತಿಯು ಶಿಕ್ಷಣದ ಮೂಲಭೂತ ಗುರಿಯಾಗಿದ್ದು, ಪಾಠಪ್ರವಚನಗಳ ಜೊತೆಗೆ ಮಗುವಿಗೆ ಆರೋಗ್ಯ ಶಿಕ್ಷಣ, ನೈತಿಕ ಮೌಲ್ಯಗಳ ವೃದ್ಧಿ, ದೈಹಿಕ ಬಲವರ್ಧನೆಯಂತಹ ಕಾರ್ಯಕ್ರಮಗಳಿಗೆ ಮತ್ತಷ್ಟು ಸಮಾನ ಪ್ರಾಶಸ್ತ್ಯದ ಅಗತ್ಯವಿದೆ.
ಹಿರಿಯರೊಬ್ಬರು ಸಮಾರಂಭದಲ್ಲಿ ಹೇಳಿದ ಮಾತೊಂದು ನೆನಪಿಗೆ ಬರುತ್ತಿದೆ “ಇಂದಿನ ಶಿಕ್ಷಣ ಪದ್ಧತಿ ಮಗವಿಗೆ ಭವಿಷ್ಯದಲ್ಲಿ ಹೇಗೆ ಹಣ ಸಂಪಾದಿಸಬೇಕು ಎನ್ನುವುದನ್ನಷ್ಟೇ ಕಲಿಸುತ್ತಿದೆ” ಎಂದು. ಇಂತಹ ಅಪವಾದಗಳಿಂದ ಮುಕ್ತವಾಗುವುದರ ಜೊತೆಗೆ, ‘ಶಿಕ್ಷಣವೇ ಜೀವನ’ ಎಂಬ ಶಿಕ್ಷಣ ತಜ್ಞರ ಅಭಿಮತಕ್ಕೆ ಮರುಜೀವ ದೊರಕಬೇಕಿದೆ. ಇಂತಹ ಹಲವು ತಂತ್ರಗಾರಿಕೆಗಳನ್ನು ನಾವಿಂದು ರೂಪಿಸಿಕೊಂಡು ಮುಂದಡಿ ಇಡಬೇಕಿದೆ.
ಉದಾರೀಕರಣ, ಜಾಗತೀಕರಣ, ಔದ್ಯೋಗೀಕರಣದ ವ್ಯವಸ್ಥೆಗಳಿಗೆ ಮಕ್ಕಳನ್ನು ಈಗಲೇ ಸಜ್ಜುಗೊಳಿಸುವ ಪ್ರಯತ್ನದ ಮುನ್ನ, ಮಕ್ಕಳನ್ನ ಮಕ್ಕಳಾಗಿಯೇ ನೋಡಬೇಕಿದೆ. ಸ್ಫರ್ಧೆಗಿಂತ ಸಾಮರಸ್ಯದ ಶಿಕ್ಷಣಕ್ಕೆ ಮಾನ್ಯತೆ ಸಿಗಬೇಕಿದೆ. ಇಲ್ಲವಾದಲ್ಲಿ ಎಲ್ಲವೂ ನಗಣ್ಯವಾಗಿ, ನೀರಿನ ಮೇಲೆ ಹೋಮ ಮಾಡಿದಂತಾಗುತ್ತದೆ. ಸುದೀರ್ಘ ಚರ್ಚಾ ರೀತಿಯ ಬೋಧನಾ ವಿಧಾನವೂ ಸಹ ಮುಂಬರುವ ದಿನಗಳಲ್ಲಿ ತೊಡಕಾಗಬಹುದು. ಹಾಗೆಯೇ ಇದೆಲ್ಲದಕ್ಕೂ ಸಮಯದ ಅಭಾವವೂ ಆಗುತ್ತದೆ.
ಆದ್ದರಿಂದ ಇಂದು ಮಗುವಿನ ಸರ್ವಾಂಗೀಣ ಅಭ್ಯುದಯಕ್ಕೆ ಕಾರಣವಾಗುವ ಕೇಂದ್ರೀಕೃತ ನೂತನ ಬೋಧನಾ ವಿಧಾನಗಳನ್ನು ಅಭಿವೃದ್ಧಿಪಡಿಸಬೇಕಿದೆ. ಪ್ರಯೋಗಾತ್ಮಕ ಹಾಗೂ ಚಟುವಟಿಕಾತ್ಮಕ ಕಲಿಕೆಗೆ ಹೆಚ್ಚು ಒತ್ತು ನೀಡಬೇಕಿದೆ. ಕೋವಿಡ್ನ ಆತಂಕದ ನಡುವೆಯೇ ಇವೆಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ಅತಿ ದೊಡ್ಡ ಹೊಣೆಗಾರಿಕೆ ಇಂದು ನಮ್ಮ ಶಿಕ್ಷಣ ವ್ಯವಸ್ಥೆಯ ಮೇಲೆ ಬಿದ್ದಿದೆ.
ಸಾಮಾಜಿಕ ಅಂತರ ಕಷ್ಟಸಾಧ್ಯ
ಹಿರಿಯರಲ್ಲೇ ಕ್ಷೀಣಿಸುತ್ತಿರುವ ಸಾಮಾಜಿಕ ಅಂತರವನ್ನು ಮಕ್ಕಳಲ್ಲಿ ಮೈಗೂಡಿಸುವುದು ದೊಡ್ಡ ಸಾಹಸವೇ ಸರಿ. ತುಂಟಾಟದ ವಯೋಮಾನದ ಮಕ್ಕಳಿಗೆ ನಾವು ಯಾವುದನ್ನು ಮಾಡಬೇಡಿ ಎನ್ನುತ್ತೇವೋ ಅದನ್ನೇ ಮಾಡುವುದು ಹೆಚ್ಚು. ಪ್ರತಿನಿತ್ಯ ಗೆಳೆಯರ ಒಡನಾಟ, ವಾಟರ್ ಬಾಟಲ್, ಆಹಾರ, ತಿಂಡಿ-ತಿನಿಸುಗಳನ್ನು ವಿನಿಮಯ ಮಾಡಿಕೊಳ್ಳುವಿಕೆ, ಕೈ ತೊಳೆಯುವ ಜಾಗದಲ್ಲಿ ಗುಂಪುಗೂಡುವಿಕೆ, ಶಾಲಾ ವಾಹನಗಳಲ್ಲಿ ಸೀಟಿಗಾಗಿ ನಡೆಯುವ ಕಿತಾಪತಿಗಳು, ತರಗತಿಯಲ್ಲಿ ನಡೆಯುವ ಕೀಟಲೆಗಳು, ಪ್ರಾರ್ಥನೆ, ಆಟದ ಸಮಯದಲ್ಲಾಗುವ ಪೈಪೋಟಿಯುತ ವಾತಾವರಣ ಇವುಗಳ ಮಧ್ಯೆ ಅಂತರ ಮರೀಚೀಕೆಯಾಗಬಹುದು.
ಈ ನಿಟ್ಟಿನಲ್ಲಿ ಅತೀ ಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕಿದೆ. ಇವೆಲ್ಲದರ ನಡುವೆ ಮಕ್ಕಳನ್ನು ತಹಬಂದಿಗೆ ತಂದು, ಅವರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ಕೊಟ್ಟು, ನಂತರ ಬಾಕಿ ಕಾರ್ಯಕ್ರಮಗಳತ್ತ ಗಮನ ಹರಿಹಸಬೇಕಿದೆ. ಅಲ್ಲದೇ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಮಗುವಿನ ಮನಸ್ಸಿನ ಮೇಲೆ ಕೊಂಚವೂ ನಕಾರತ್ಮಕ ಪರಿಣಾಮ ಬೀರದಂತೆ ಎಚ್ಚರಿಕೆವಹಿಸಬೇಕಿದೆ. ಹೀಗೆ ಎಲ್ಲವೂ ಅತ್ಯಂತ ಸವಾಲೇ ಸರಿ.
ಇದಲ್ಲದೆ ನಮ್ಮ ದಿನನಿತ್ಯದ ಕರ್ತವ್ಯಗಳಂತಾಗಿರುವ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ, ಸಾಬೂನಿನಲ್ಲಿ ಆಗಾಗ್ಗೆ ಕೈ ತೊಳೆಯುವುದು, ವಯಕ್ತಿಕ ಸ್ವಚ್ಛತೆ, ಅಂಗಾಂಗಳನ್ನು ಮುಟ್ಟದಿರುವಿಕೆ ಇತ್ಯಾದಿ ಕ್ರಮಗಳನ್ನು ಅಲಕ್ಷಿಸದೆ ಅನುಸರಿಸಬೇಕಿದೆ. ಪೆನ್ನು, ಪುಸ್ತಕ, ಪೆನ್ಸಿಲ್, ಇತ್ಯಾದಿ ವಸ್ತುಗಳನ್ನು ಕೆಲವು ತುಂಟ ಮಕ್ಕಳು ಕದಿಯುತ್ತಿದ್ದ ಬಗ್ಗೆ ಬರುತ್ತಿದ್ದ ದೂರುಗಳು ಮುಂದೆ ಸ್ಯಾನಿಟೈಸರ್, ಮಾಸ್ಕ್, ಸಾಬೂನುಗಳತ್ತ ತಿರುಗುವುದಂತಾದರೆ ಅದು ಮುಂಬರುವ ವಾಸ್ತವದ ನಗೆಹನಿಯೇ ಸರಿ..!
ಒಟ್ಟಾರೆ ನಮ್ಮ ಇಂದಿನ ಶಿಕ್ಷಣ ಪದ್ಧತಿಯಿಂದ ನಾವು ಹಿಂದಿನ ಗುರುಕುಲ ಪದ್ಧತಿಯ ಶಿಕ್ಷಣದ ಕೆಲ ಭಾಗಗಳತ್ತ ಒಳನೋಟ ಬೀರಬೇಕಿದೆ. ಇವೆಲ್ಲವೂ ಶಾಶ್ವತವಾಗಿ ನಡೆಯುತ್ತದೋ ಇಲ್ಲವೋ ಎಂಬ ಅಪನಂಬಿಕೆಯ ನಡುವೆ ಸದ್ಯಕ್ಕಂತೂ ಯಾವುದನ್ನೂ ತಾತ್ಸಾರ ಮನೋಭಾವದಿಂದ ನೋಡುವುದು ಬೇಡವಷ್ಟೆ. ಈ ಮಧ್ಯೆ ವಿಷಕಾರಿ ಕೊರೋನಾ ಮಹಾಮಾರಿಯ ಬಗ್ಗೆ ಪ್ರತಿನಿತ್ಯ ಮಕ್ಕಳಿಗೆ 10 – 15 ನಿಮಿಷಗಳ ಕಾಲ ತಿಳಿ ಹೇಳುವ ಕೆಲಸವೂ ಇಂದು ಜರುಗಬೇಕಿದೆ.
ಶಾಲೆಯಲ್ಲೇ ಶುರುವಾಗಲಿ ಕೊರೋನಾ ವಿರುದ್ಧದ ಹೋರಾಟ
ಮಗುವಿನ ವರ್ತನೆಯಲ್ಲಿ ಆಮೂಲಾಗ್ರ ಬದಲಾವಣೆ ತರುವುದು ಶಿಕ್ಷಣದ ಧ್ಯೇಯೋದ್ದೇಶಗಳಲ್ಲೊಂದು. ಕುಟುಂಬದ ಜೊತೆಗೆ ಮಗುವನ್ನು ಸಾಮಾಜೀಕರಣಗೊಳಿಸುವ ಮಹತ್ತರ ಹೊಣೆ ಶಾಲೆಗಳ ಮೇಲೂ ಸಹ ಇದೆ. ಇಂತಹ ಪ್ರಗತಿಯ ಹಾದಿಯ ನಡುವೆ ನಾವಿಂದು ‘ಸದೃಢ ದೇಹದಲ್ಲಿ ಸದೃಢ ಮನಸ್ಸು’ ಎಂಬ ವಿವೇಕವಾಣಿಯನ್ನು ನೆನೆಯಬೇಕಿದೆ.
ಇಡೀ ಜಗತ್ತನ್ನೇ ನಿತ್ರಾಣಗೊಳಿಸುತ್ತಿರುವ ಕೊರೋನಾ ವಿಷಪೀಡಿಗೆ ಲಸಿಕೆ ಸಿಕ್ಕರೂ, ಶೀಘ್ರವಾಗಿ ಅದು ನಮ್ಮನ್ನು ಬಿಟ್ಟು ಹೋಗದು ಎಂಬ ಕೂಗು ಪ್ರತಿಧ್ವನಿಸುತ್ತಲೇ ಇದೆ. ಇಂತಹ ವಿಷ ಪೀಡೆಯ ವಿರುದ್ಧ ಹೋರಾಡಲು ಅಗತ್ಯವಾದ ಶಕ್ತಿ, ಸಾಮಥ್ರ್ಯಗಳನ್ನು ಪಡೆಯುವಂತಹ, ದೇಹವನ್ನು ಗಟ್ಟಿಗೊಳಿಸುವಂತಹ ಕ್ರಿಯೆಗಳಿಗೆ ಶಾಲೆಗಳಿಂದ ಚಾಲನೆ ಸಿಗಬೇಕಿದೆ. ಪಠ್ಯದೊಂದಿಗೆ ಯೋಗ, ಧ್ಯಾನ, ಪ್ರಾಣಾಯಾಮ, ಸೂರ್ಯ ನಮಸ್ಕಾರ, ಜೊತೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಡುವ ಆಟಗಳಿಗೆ ಇಂದು ಮನ್ನಣೆ ದೊರಕಬೇಕಿದೆ.
ತನ್ಮೂಲಕ ದೇಹ ಗಟ್ಟಿಗೊಳ್ಳುವುದರ ಜೊತೆಗೆ, ಮಗುವಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಾಧ್ಯ. ಆದರೆ ಇವೆಲ್ಲವುಗಳನ್ನು ಅತೀ ಸೂಕ್ಷ್ಮ ಹಾಗೂ ಜಾಗರೂಕವಾಗಿ ನಿರ್ವಹಿಸಬೇಕಷ್ಟೆ. ಇವುಗಳಂತೆ ಚಿತ್ರಕಲೆ, ಸಂಗೀತ, ತೋಟಗಾರಿಕೆ, ಕರಕುಶಲ ಕಲೆ, ನಾಟಕ, ಪ್ರಬಂಧ, ಪ್ರಯೋಗ, ನೃತ್ಯ, ಇವುಗಳ ಮೂಲಕವೂ ಮೂಲಭೂತ ಶಿಕ್ಷಣ ನೀಡುವಂಹ ವ್ಯವಸ್ಥೆಯನ್ನು ಸಜ್ಜುಗೊಳಿಸಬೇಕಿದೆ. ಇಂತಹ ಕ್ರಮಗಳಿಂದ ಸಾಮಾಜಿಕ ಅಂತರ ಪಾಲನೆಯೂ ಸರಳವಾಗುತ್ತದೆ.
ಪೂರ್ವ ತಯಾರಿ ಅಗತ್ಯ
ಸರಕಾರದ ಮಾರ್ಗಸೂಚಿಗಳ ಪಾಲನೆಯಷ್ಟೇ ಅಲ್ಲದೆ ಮುಂಬರುವ ದಿನಗಳಲ್ಲಿ ಶಾಲೆಗಳ ಪಾತ್ರ ನಿರ್ಣಾಯಕವಾಗಲಿದೆ. ಮಕ್ಕಳಂತೆಯೇ ಶಾಲಾ ಸಿಬ್ಬಂದಿಯ ಸುರಕ್ಷತೆ, ಪ್ರತಿನಿತ್ಯ ಕೊಠಡಿಗಳ ಸ್ವಚ್ಛತೆ, ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸಣ್ಣಪುಟ್ಟ ಕಾಯಿಲೆಗಳ ಲಕ್ಷಣಗಳಿದ್ದರೂ ವಿಶೇಷ ಚಿಕಿತ್ಸಾ ಆರೈಕಾ ಕೊಠಡಿಗಳ ನಿರ್ಮಾಣ, ಸಾಧ್ಯವಾದರೆ ಬಿಸಿ ನೀರಿನ ಪೂರೈಕೆ, ಇಂತಹ ಹಲವು ಸೌಕರ್ಯಗಳತ್ತ ಗಮನ ಹರಿಸಬೇಕಿದೆ.
ಇವೆಲ್ಲಕ್ಕೂ ಪೂರ್ವ ತಯಾರಿ ಅತ್ಯಗತ್ಯ. ಏಕೆಂದರೆ ಕೊರೋನಾ ಸಾವಿನೋಟದಾಟದ ನಡುವೆ ನಾವು ನಿರ್ಮಾಣ ಮಾಡಹೊರಟಿರುವುದು ಭವಿಷ್ಯದ ಪೌರರನ್ನು. ಇದರಲ್ಲಿ ಒಂದು ತಪ್ಪು ಹೆಜ್ಜೆ ಇಟ್ಟರೂ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಕೊಂಚವೂ ನಿರ್ಲಕ್ಷ್ಯ ಸಲ್ಲದು. ಮಗುವಿನ ಜೀವ, ಹಾಗೂ ಜೀವನ ನಮ್ಮೆಲ್ಲರ ಸಮಾನ ಆದ್ಯತೆಯಾಗಬೇಕಿದೆ. ಇಷ್ಟೆಲ್ಲದರ ನಡುವೆ ಮಗುವಿನ ಮೇಲೆ ಮಾನಸಿಕ ಒತ್ತಡ ಬೀಳದಂತೆ ಕ್ರಮ ವಹಿಸಬೇಕಿದೆ.
ಶಿಕ್ಷಣ, ಆರೋಗ್ಯ, ಜೀವ, ಜೀವನ, ಮಾನಸಿಕ ವಿಕಾಸ, ದೈಹಿಕ ಬೆಳವಣಿಗೆ, ಒತ್ತಡ ರಹಿತ ಬದುಕು, ಸಹಕಾರ, ಸಹಬಾಳ್ವೆ, ನಿರಾತಂಕ ಹೀಗೆ ಹತ್ತು ಹಲವು ವಿಚಾರಗಳನ್ನು ಇಂದು ಮಗುವಿನ ಮನಸ್ಸಿನಲ್ಲಿ ರಿಜಿಸ್ಟರ್ ಮಾಡುವ ಕೆಲಸ ಶಾಲೆ ಮತ್ತು ಮನೆಗಳಿಂದ ಆಗಬೇಕಿದೆ.
ಬದಲಾಗಬೇಕಿದೆ ಪರೀಕ್ಷಾ ಪದ್ಧತಿ
ಪ್ರಸ್ತುತ ಪರೀಕ್ಷಾ ಪದ್ಧತಿಯು ಅತ್ಯಂತ ಸಮಗ್ರವಾಗಿದ್ದು, ಮುಂದೆ ಶಾಲಾವಧಿಯು ಕಡಿತಗೊಂಡರೆ ಇದೇ ಪದ್ಧತಿಯನ್ನು ಮುಂದುವರೆಸಿಕೊಂಡು ಹೋಗುವುದು ಕಠಿಣವಾಗಬಹುದು. ಸೀಮಿತ ಅವಧಿಗೆ ಪೂರಕವಾಗುವಂತಹ ಪರೀಕ್ಷಾ ಪದ್ಧತಿಯನ್ನು ಇಂದು ನಿರ್ಮಿಸಬೇಕಿದೆ. ಬರವಣಿಗೆಯನ್ನೂ ಒಳಗೊಂಡಂತೆ ಒಂದಷ್ಟು ಪ್ರಾಯೋಗಿಕ ಮತ್ತು ಚಟುವಟಿಕೆ ಆಧಾರಿತ ಪರೀಕ್ಷೆಗೆ ಆದ್ಯತೆ ನೀಡಬೇಕಿದೆ. ಅಲ್ಲದೇ ಈ ರೀತಿಯ ಪರೀಕ್ಷೆಗಳು ಒತ್ತಡರಹಿತವಾಗಿಯೂ ಇರುವುದರ ಜೊತೆಗೆ ಮಕ್ಕಳ ಔದ್ಯೋಗಿಕ ಭವಿಷ್ಯಕ್ಕೂ ಸಹಕಾರಿಯಾಗಿರಬೇಕಾಗುತ್ತದೆ.
ಪರ್ಯಾಯವಾಗುವುದೇ ಆನ್ಲೈನ್ ಕ್ಲಾಸ್..?
ಇಡೀ ವಿಶ್ವವೇ ಸ್ತಬ್ಧವಾಗಿದ್ದರೂ, ಶಿಕ್ಷಣದ ಚಟುವಟಿಕೆಗಳು ಮೊಟಕುಗೊಳ್ಳಬಾರದೆಂದು ಬಹುತೇಕ ಶಿಕ್ಷಣ ಸಂಸ್ಥೆಗಳು ಇಂದು ಆನ್ಲೈನ್ ಶಿಕ್ಷಣದತ್ತ ಮುಖ ಮಾಡಿರುವುದು ನಮ್ಮ ಮುಂದಿರುವ ಸತ್ಯ. ಆದರೆ ತೀರಾ ಸಣ್ಣ ವಯೋಮಾನದ ಮಕ್ಕಳನ್ನು ಮಾತ್ರ ಇದರಿಂದ ಹೊರತಾಗಿಸಬೇಕಷ್ಟೆ.
ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ, ನೇರ ಶಿಕ್ಷಣ ಪದ್ಧತಿ ಬೀರುವಷ್ಟು ಪರಿಣಾಮ ಇದರಲ್ಲಿ ನಿರೀಕ್ಷಿಸಲು ಸಾಧ್ಯವಿಲ್ಲ. ಶಿಕ್ಷಣವೆಂದರೆ ಮಗು ಮತ್ತು ಶಿಕ್ಷಕನ ನಡುವಿನ ದ್ವಿ ಕೇಂದ್ರಿತ ವ್ಯವಸ್ಥೆ ಹಾಗೂ ಚಟುವಟಿಕೆ ಆಧಾರಿತವಾಗಿರಬೇಕು. ಆನ್ಲೈನ್ ತರಗತಿಗಳು ಶಿಕ್ಷಣದ ಏಕಮುಖ ಸಂಚಾರವಾಗಿದೆ. ಒಂದಷ್ಟು ಕಾಲಮಿತಿಯೊಳಗೆ ಇಂತಹ ಹೊಸತನಗಳಿಗೆ ನಾವಿಂದು ಬಲವಂತವಾಗಿ ತೊಡಗಿಸಿಕೊಂಡಿದ್ದೇವಷ್ಟೆ.
ಆದರೆ ಎಂದಿಗೂ ಇದು ಶಾಶ್ವತವಾದ ಪರ್ಯಾಯ ವ್ಯವಸ್ಥೆಯಾಗಲಾರದು. ಶಿಕ್ಷಕರೂ ಸಹ ‘ವರ್ಕ್ ಫ್ರಮ್ ಹೋಮ್’ ಮಾಡಿಯಾರು ಎಂಬುದು ತರ್ಕಕ್ಕೆ ನಿಲುಕದ್ದು. ಒಂದು ವೇಳೆ ಸರಕಾರವೇ ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡಿದರೂ, ಅದು ಸಮಗ್ರ ಹಿಂದೂಸ್ಥಾನದ ಮೂಲೆ ಮೂಲೆಗೂ ತಲುಪುವ ವ್ಯವಸ್ಥೆಯನ್ನು ಅಣಿಗೊಳಿಸಬೇಕಿದೆ.
ಭಾರತ ಹಳ್ಳಿಗಳ ದೇಶವಾಗಿರುವುದರಿಂದ ಎಲ್ಲೆಡೆಯೂ ಸಮರ್ಪಕವಾದ ಡಿಜಿಟಲ್ ಸಂಪರ್ಕವನ್ನು ನಿರೀಕ್ಷಿಸುವುದು ಅಸಾಧ್ಯವಾಗಿದೆ. ಹೀಗಾಗಿ ಸರಕಾರಕ್ಕೂ ಇದು ಸವಾಲಾಗಿಯೇ ಪರಿಣಮಿಸುವುದರಲ್ಲಿ ಅನುಮಾನವೇ ಇಲ್ಲ. ಏಕೆಂದರೆ ಡಿಜಿಟಲ್ ಸಾಧನಗಳು ಮಕ್ಕಳ ಆರೋಗ್ಯಕ್ಕೆ ಬಹುತೇಕ ಹಾನಿಕಾರಕ ಎಂಬ ಅನೇಕ ಸಂಶೋಧನೆಗಳು ಈಗಾಗಲೇ ನಡೆದಿವೆ.
ಇದರಿಂದ ಅವಕಾಶ ವಂಚಿತ ಅನೇಕ ಮಕ್ಕಳಲ್ಲಿ ಕೀಳರಿಮೆ ಉಂಟಾಗಿ ಅವರು ಮಾನಸಿಕವಾಗಿ ಕುಗ್ಗಬಹುದು. ಈಗಾಗಲೇ ಆನ್ಲೈನ್ ತರಗತಿಗೆ ಹಾಜರಾಗದೆ, ಭಯಗೊಂಡು ಆತ್ಮಹತ್ಯೆ ಹಾದಿ ಹಿಡಿಯುತ್ತಿರುವ ಮಕ್ಕಳ ನಡೆ ಗಾಬರಿ ಹುಟ್ಟಿಸುತ್ತಿದೆ.
(ವಿ.ಕೆ.ಕುಮಾರಸ್ವಾಮಿ
ಬರಹಗಾರ ಶಿಕ್ಷಕರು
ವಿರುಪಾಪುರ, ಸುಗ್ಗನಹಳ್ಳಿ ಅಂಚೆ,
ತಿಪ್ಪಸಂದ್ರ ಹೋಬಳಿ, ಮಾಗಡಿ ತಾಲ್ಲೂಕು,
ರಾಮನಗರ ಜಿಲ್ಲೆ – 561101
ಮೊ: 9113906120, 9740840678 (ವಾಟ್ಸಪ್)
ಇ ಮೇಲ್ : kumarvirupapura@gmail.com)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ ತಾಂಡ, ಈಶಾಪುರ, ಹಾರಕನಾಳು ಸಣ್ಣತಾಂಡ, ಹಾರಕನಾಳು ದೊಡ್ಡತಾಂಡ, ಕನ್ನಾಯಕನಹಳ್ಳಿ ಸೇರಿ ಒಟ್ಟು 07 ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೋಸಗಿ ಸುರೇಶ ಎಂಬುವವರು ರೈತರೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳಿಗೆ ತಾವೇ ಎಲ್ಲಾ ರೈತರ ಜಮೀನಿಗೆ ಬೆಳೆ ವಿಮೆ ಹಣ ಪಾವತಿಸುವ ಮೂಲಕ ನಿರಂತರವಾಗಿ 3 ವರ್ಷಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತ ಬಂದಿರುವ ಮಾಹಿತಿಯು ಸಾಕಷ್ಟು ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ಬಗ್ಗೆ ರೈತರು ಸಾಕಷ್ಟು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೂ ದೂರು ನೀಡಿರುತ್ತಾರೆ.
ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯಲ್ಲಿನ ಭ್ರಷ್ಟಚಾರದ ಪ್ರಮುಖ ರೂವಾರಿಯಾದ ಕೋಸಗಿ ಸುರೇಶ ಎಂಬುವವರು ತಾವು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗುಂಡಗತ್ತಿ ಸರ್ಕಲ್ ವ್ಯಾಪ್ತಿಯ ಬಹು ಗ್ರಾಮಗಳಲ್ಲಿಯೂ ಫಸಲ್ ಭೀಮಾ ಯೋಜನೆಯಲ್ಲಿ (ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ) ಸಾಕಷ್ಟು ಅವ್ಯವಹಾರ ನಡೆಸುತ್ತ ಬಂದಿರುತ್ತಾರೆ ಎಂಬ ಅಧಿಕೃತ ಮಾಹಿತಿ ಇರುತ್ತದೆ. ಇವರು ತಾವು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲಿಯೂ ಸಾಕಷ್ಟು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಸಾಕಷ್ಟು ರೈತರಿಗೆ ಸರ್ಕಾರಿ ಯೋಜನೆಗಳನ್ನು ಮಾಡಿಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿರುತ್ತಾರೆ. ಹಾಗೆಯೇ ಬಡವರು, ಅಸಹಾಯಕರ ಜಮೀನುಗಳನ್ನು ಪ್ರಬಲರ ಹೆಸರಿಗೆ ವರ್ಗಾಹಿಸುವ ನೀಚ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಬಡವರ ಜಮೀನುಗಳನ್ನು ಪ್ರಬಲರ ಹೆಸರಿಗೆ ಮಾಡಿದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದು ನಂತರ ಮೂಲ ಖಾತೆದಾರರಿಗೆ ವರ್ಗಾವಣೆಯಾಗಿರುವ ಸಾಕಷ್ಟು ನಿದರ್ಶನಗಳಿಗೆ. ಆದರೆ ಯಾವುದೇ ಒಂದು ಪ್ರಕರಣದಲ್ಲಿಯೂ ಈ ಅಧಿಕಾರಿಗೆ ಶಿಕ್ಷೆಯಾಗದಂತೆ ಹಿರಿಯ ಅಧಿಕಾರಿಗಳರಿವರನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಈ ಕಾರಣಕ್ಕಾಗಿಯೇ ಫಸಲ್ ಭೀಮಾ ಯೋಜನೆಯಂತಹ ದೊಡ್ಡ ಮಟ್ಟದ ಹಗರಣಕ್ಕೂ ಮುಂದಾಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಫಸಲ್ ಭೀಮಾ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವ ಹಾರಕನಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಂ.ಶಿವಣ್ಣ, ಕಂದಾಯ ನಿರೀಕ್ಷಕ ಶ್ರೀ ರಾಘವೇಂದ್ರ, ಹರಪನಹಳ್ಳಿ ತಾಲ್ಲೂಕು ಉಪ ತಹಶೀಲ್ದಾರರಾದ ಶ್ರೀಮತಿ ಕವಿತಾ, ತಹಶೀಲ್ದಾರರಾದ ಶ್ರೀ ಬಿ.ವಿ. ಗಿರೀಶ್ಬಾಬು, ಉಪವಿಭಾಗಾಧಿಕಾರಿಯಾದ ಶ್ರೀ ಸುರೇಶ್ಕುಮಾರ್ ಟಿ, ಹರಪನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ವೈ.ಹೆಚ್. ಚಂದ್ರಶೇಖರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನಿಕೇರಿ ಇವರುಗಳ ವಿರುದ್ಧ ದೂರು ದಾಖಲಿಸಿ, ಈ ಎಲ್ಲಾ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಎಂಬುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್ ಡಾ. ಪ್ರಸಾದ್ ಬಿ ರಾಂಪುರೆ , ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಉಜ್ವಲ್ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್, ಡಾ. ಧನಂಜಯ್ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ5 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ2 days ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ


