Connect with us

ದಿನದ ಸುದ್ದಿ

ಕೋವಿಡ್-19 ಕೋಲಾಹಲ

Published

on

  • ಡಾ.ಎಚ್.ಎಸ್.ಅನುಪಮಾ

ಬೆಳಗಾವಿ ಹತ್ತಿರದ ಹಳ್ಳಿಗೆ ಚೀನಾದಿಂದ ಟೆಕ್ಕಿ ದಂಪತಿಗಳು ಬಂದಿಳಿದರು. ಮೊದಲಾಗಿದ್ದರೆ ತಮ್ಮೂರಿಗೆ ವಿದೇಶದಿಂದ ಬಂದವರ ಕಾಣಲು ಹಳ್ಳಿಯ ಅಬಾಲವೃದ್ಧ ಸ್ತ್ರೀಪುರುಷರಾದಿಯಾಗಿ ಎಲ್ಲರೂ ಕುತೂಹಲಿಗಳಾಗಿರುತ್ತಿದ್ದರು. ಕರೆಕರೆದು ಮಾತಾಡಿಸುತ್ತಿದ್ದರು. ಇಣುಕಿ ನೋಡುತ್ತಿದ್ದರು. ಆದರೆ ಈಗ ಬಂದವರು ತಾವು ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಇದ್ದೇವೆಂದು ಪ್ರಮಾಣಪತ್ರ ತೋರಿಸಿದರೂ ಕೇಳದೇ ಆ ಜೋಡಿಯನ್ನು ಅಟ್ಟಾಡಿಸಿ ಬೈದು, ಪೊಲೀಸರ ಕರೆದು, ಆಂಬುಲೆನ್ಸಿನಲ್ಲಿ ಕೂಡಿ ಹಾಕಿ ಊರು ಬಿಟ್ಟೋಡಿಸಿದರು. ಅಷ್ಟೇ ಅಲ್ಲ, ವಾಟ್ಸಾಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಆ ಜೋಡಿಯ ಭಾವಚಿತ್ರ ಹಂಚಿಕೊಂಡು ಅವರನ್ನು ಯಾರೂ ನಿಮ್ಮ ಊರುಗಳೊಳಗೆ ಬಿಟ್ಟುಕೊಳ್ಳಬೇಡಿ ಎಂದು ಪ್ರಚಾರ ಮಾಡಿದರು.

ಮಂಡ್ಯದ ಹೊರಭಾಗದಲ್ಲಿ ನಾರುಬೇರುಗಳ ಔಷಧಿ ಮತ್ತು ಮಸಾಲೆ ಪದಾರ್ಥಗಳನ್ನು ಹೊತ್ತು ದಕ್ಷಿಣ ಆಫ್ರಿಕಾದಲ್ಲಿ ವ್ಯಾಪಾರ ಮಾಡಿಬಂದ ಹಕ್ಕಿಪಿಕ್ಕಿ ಸಮುದಾಯದ ಅಲೆಮಾರಿಗಳು ತಮ್ಮ ನೆಲೆಗೆ ವಾಪಸಾದದ್ದೇ ಉಳಿದವರು ಭಯಭೀತರಾದರು. ಹಕ್ಕಿಪಿಕ್ಕಿಟೆಂಟುಗಳೊಳಗೆಅಲ್ಲೋಲಕಲ್ಲೋಲವಾಯಿತು.ಕೊನೆಗೆ ವಿದೇಶದಿಂದ ಹಿಂದಿರುಗಿದವರಿಗೆ ಬೇರೆ ವ್ಯವಸ್ಥೆ ಮಾಡುವಂತಾಯಿತು.

ಮತ್ತೊಂದೆಡೆ ಭಾರತದ ಹಳ್ಳಿ, ನಗರ, ಕೇರಿಗಳಲ್ಲಿ ಟಿವಿ, ಜಾಲತಾಣಗಳಿಂದ ಕರೋನಾ ಅತಿಸುದ್ದಿಯಿಂದ ಭಯದ ವ್ಯಾಧಿ ಹರಡತೊಡಗಿದೆ. ಹೊರಗೆ ಹೋಗಬೇಡಿ. ಮುಟ್ಟಬೇಡಿ. ಮನೆಗೆ ಕರೆಯಬೇಡಿ. ಕೆಮ್ಮುವವರ ಬಳಿ ನಿಲ್ಲಬೇಡಿ ಎಂಬಿತ್ಯಾದಿ ಬೇಡಗಳ ನಡುವೆ ಆಗಲೇ ವ್ಯಕ್ತಿಗಳ ನಡುವಿರುವ ದೂರ ವಿಸ್ತಾರವಾಗತೊಡಗಿದೆ.

‘ಅಯ್ಯೋ, ತಂಡಿಕೆಮ್ಮ ಅಂತ ಸರ್ಕಾರಿ ಆಸ್ಪತ್ರೆಗೆ ಹೋದ್ರೆ ಅಲ್ಲಿ ರಕ್ತ ಟೆಸ್ಟ್ ಮಾಡಿ ಕಡೆಗೆ 14 ದಿನ ಕ್ವಾಣೇಲಿ ಕೂಡಿ ಹಾಕ್ತಾರಂತೆ’ ಎಂಬ ಹೆದರಿಕೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಲು ಕೆಲವರು ಹೆದರಿದರೆ; ತಂತಮ್ಮ ಮನೆಯ ಮದುವೆ, ತೀರ್ಥಯಾತ್ರೆ, ಧಾರ್ಮಿಕ ಕಾರ್ಯಗಳೆಲ್ಲವನ್ನು ರದ್ದು ಮಾಡಿದ್ದಾರೆ ಮತ್ತೆ ಕೆಲವರು. ಶಾಲೆಯೂ ಇಲ್ಲದೆ, ಪರೀಕ್ಷೆಯೂ ಇಲ್ಲದೇ ಪಾಸಾಗಿ ಮುಂದಿನ ತರಗತಿಗೆ ಹೋದ ಮಕ್ಕಳು ಸಮಯ ಕಳೆಯಲು ಹೊಸಹೊಸ ಯೋಜನೆಗಳನ್ನು ಹಾಕತೊಡಗಿವೆ.

‘ಅರೆ, ಎಲ್ಲಾದರೂ ಸಾಧ್ಯವೇ? ಸಾಧ್ಯವೇ ಇಲ್ಲ’ ಎನ್ನುವಂತಹುದೆಲ್ಲ ತಂತಾನೇ ಅನಿವಾರ್ಯವಾಗಿ, ಸಾಧ್ಯವೂ ಆಗಿ ಏರ್‌ಪೋರ್ಟುಗಳು, ಮಾಲುಗಳು, ದೇವಳ-ಆಶ್ರಮ-ಮಠಗಳು, ಹೋಟೆಲು ಬೀಚುಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದರೆ, ಗುಡಿಸಲು-ಟೆಂಟು-ಸ್ಲಮ್ಮುವಾಸಿಗಳು, ಕೂಲಿಗಳು, ಮನೆದೇವಿಯರು ತಂತಮ್ಮ ದಿನನಿತ್ಯದ ಹೊಟ್ಟೆಪಾಡಿನ ಕೆಲಸಗಳಲ್ಲಿ ಮುಳುಗಿ ಹೋಗಿದ್ದಾರೆ.

ಇಷ್ಟೆಲ್ಲ ಉಲ್ಟಾಪಲ್ಟಾ, ಕೋಲಾಹಲ, ಅಸಂಭವ ಸಂಭವ ಆಗುತ್ತಿರುವುದಾದರೂ ಏತಕ್ಕೆ? ಭಯಕ್ಕೆ, ಪ್ರಾಣಭಯಕ್ಕೆ. ನಿಜ. ಜೀವಿಗಳ ಚಟುವಟಿಕೆಯನ್ನೆಲ್ಲ ನಿಯಂತ್ರಿಸುವ ಮುಖ್ಯ ಚಾಲನಾ ಶಕ್ತಿ ಭಯ ಎನ್ನುವುದು ಮತ್ತೆ ಸಾಬೀತಾಗಿದೆ. ಅದರಲ್ಲೂ ಪ್ರಾಣಭಯ ಆವರಿಸಿಕೊಂಡಿತೆಂದರೆ ಯಮನಿಯಮಗಳು ಮರೆತು ಹೋಗುತ್ತವೆ. ಸಂಬಂಧಗಳು ಕಾಣೆಯಾಗುತ್ತವೆ. ಎತ್ತ, ಏನುಗಳು ಸತ್ತು ಹೋಗುತ್ತವೆ.

ನಾವೆಳೆದ ಗಡಿಗಳೆಂಬ ಹುಸಿರೇಖೆಗಳು ತಂತಾವೇ ಅಳಿಸಿ ಹೋಗುತ್ತವೆ. ಜೈಲುಗಳ ಬಾಗಿಲುಗಳು ತೆರೆದುಕೊಳ್ಳುತ್ತವೆ. ತಮ್ಮ ಮೇಲೆ ತಾವೇ ಆರೋಪಿಸಿಕೊಂಡ ಹುಸಿ ಶಕ್ತಿಗಳೆಲ್ಲ ಕರಗಿಹೋಗಿ ಸುಮ್ಮಸುಮ್ಮನೆ ‘ಮಹಾನ್’ ಆದವರು ಬೆತ್ತಲಾಗಿ ನಿಜಸ್ವರೂಪ ಬಯಲಾಗುತ್ತದೆ. ಸರ್ವಾಧಿಕಾರಿಯಿಂದ ಹಿಡಿದು ಬೀದಿ ಬದಿಯ ಭಿಕಾರಿಯವರೆಗೂ; ಪರಮಾಣು ಶಸ್ತ್ರಾಸ್ತ್ರ ಹೊಂದಿದವರಿಂದ ಹಿಡಿದು ಚಿಂದಿ ಆಯುವವರವರೆಗೆ ಪ್ರಾಣಭಯ ಆವರಿಸಿದಾಗ ಎಲ್ಲರಿಗೂ ಬದುಕುಳಿವ ಹಂಬಲದ ಹೊರತು ಮತ್ತೆಲ್ಲ ಮರೆತುಹೋಗುತ್ತದೆ.

ಹೌದು. ಕೋವಿಡ್-19 ವೈರಸ್‌ನಿಂದ ಹರಡುತ್ತಿರುವ ಕಾಯಿಲೆ ಮತ್ತು ಮರಣ ಭೀತಿ ಇಡಿಯ ವಿಶ್ವವನ್ನೇ ಆವರಿಸಿದ ೨೦೨೦ರ ಮಾರ್ಚ್ ಹೊತ್ತಿಗೆ ಗಡಿ, ಮೂರ್ತಿ, ಸ್ಮಾರಕ, ಮಾಲು, ಮಹಲು, ಫ್ಯಾಷನ್, ಯುದ್ಧ, ದಂಗೆಗಳೇ ಮೊದಲಾದ ಮನುಷ್ಯ ಅಹಂಕಾರದ ನಿರ್ಮಿತಿಗಳೆಲ್ಲಾ ತಾತ್ಕಾಲಿಕವಾಗಿಯಾದರೂ ಪೊಳ್ಳು ಎಂದೆನಿಸುವಂತೆ ಅಣುರೇಣುತೃಣವೊಂದು ನಿವಾಳಿಸಿ ಬಿಸಾಡಿದೆ. ಲಕ್ಷ ಕೋಟಿ ರೂಪಾಯಿಗಳನ್ನು ಗಾಳಿಯಲ್ಲೇ ಸೃಷ್ಟಿಸುವ ಷೇರು ಮಾರುಕಟ್ಟೆ ಎಂಬ ಮಾಯಾನಗರಿ ಮೇಣದರಮನೆಯಂತೆ ಕರಗಿ ಹೋಗುತ್ತಿದೆ.

ಯಾವುದೂ ಬೇಡ, ಯಾರಿಗೂ ಬೇಡವೆನುವಂತಹ ತಾತ್ಕಾಲಿಕ ಸ್ಮಶಾನ ವೈರಾಗ್ಯ ಆವರಿಸಿದಂತಿದೆ. ಧರ್ಮಗುರುಗಳ ಸಾಕ್ಷಿಯಿಲ್ಲದೆ ಎಲ್ಲ ಶವಗಳನ್ನೂ ಮಿಲಿಟರಿ-ಮುನ್ಸಿಪಾಲಿಟಿ ಲಾರಿಗಳು ಹೊತ್ತೊಯ್ದು ವಿದ್ಯುತ್ ಚಿತಾಗಾರದಲ್ಲಿ ಸುಟ್ಟುಬಿಡುತ್ತಿವೆ. ಧರ್ಮ-ಜಾತಿ ಭೇದವಿಲ್ಲದೆ ಬದುಕಿರುವವರನ್ನೂ, ಮರಣಿಸಿದವರನ್ನೂ ವೈರಸ್ ಆವರಿಸಿಕೊಂಡಿದೆ. ಎರಡು ಕಾಲಿನವರ ಸಾಧನೆ ಏನೇ ಇರಲಿ, ಪ್ರಕೃತಿಯೆದುರು ಎಲ್ಲವೂ ತೃಣವೇ, ನಿಜ ದೈವ ಪ್ರಕೃತಿಯೇ ಎಂಬ ಪಾಠ ಮತ್ತೆಮತ್ತೆ ಕಲಿಯಬೇಕಾಗಿದೆ.

ವೈರಸ್ ಎಂಬ ವಿಸ್ಮಯ-ಅಪಾಯ

ಆನೆ, ತಿಮಿಂಗಿಲಗಳಿಂದ ಹಿಡಿದು ಬ್ಯಾಕ್ಟೀರಿಯಾಗಳಂತಹ ಏಕಕೋಶ ಜೀವಿಗಳ ತನಕ ಜೀವಿಗಳಿಗೆ ನಾನಾ ಕಾಯಿಲೆಗಳನ್ನುಂಟುಮಾಡುವ; ಏಡ್ಸ್, ಪೋಲಿಯೋ, ದಡಾರ, ಸಿಡುಬು, ಮೈಲಿಬೇನೆ, ಕಾಮಾಲೆ, ವಾಂತಿಭೇದಿ, ರುಬೆಲ್ಲಾ, ಇನ್‌ಫ್ಲುಯೆಂಜಾ, ಹಂದಿಗೋಡು ಕಾಯಿಲೆ, ಮಂಗನ ಕಾಯಿಲೆ, ಮಂಗನಬಾವು ಮತ್ತಿತರ ನೂರಾರು ಕಾಯಿಲೆಗಳಿಗೆ ಕಾರಣವಾದ ವೈರಸ್‌ಗಳು ಬಲು ವಿಚಿತ್ರ, ವಿಶಿಷ್ಟ ಅಪಾಯಕಾರಿ ಕಣಗಳು. ಪಕ್ಷಿ, ಪ್ರಾಣಿ, ಗಿಡ, ಶಿಲೀಂಧ್ರ, ಬ್ಯಾಕ್ಟೀರಿಯಾ ಇತ್ಯಾದಿ ಬೇರೊಂದು ಜೀವಿಯ ಜೀವಕೋಶದೊಳಗೆ ಮಾತ್ರ ಬದುಕಬಲ್ಲ ಸೂಕ್ಷ್ಮಾಣುಗಳು ಅವು. ಇತ್ತ ‘ಜೀವಿ’ಯೂ ಅಲ್ಲ. ಅತ್ತ ‘ಅಜೀವಿ’ಗಳೂ ಅಲ್ಲ. ಜೀವಿ ಅಜೀವಿಗಳ ನಡುವಿರುವ ಅತ್ಯಂತ ಸರಳ, ಅತಿ ಸಣ್ಣ ಕಣ ವೈರಸ್ ಸಂಪೂರ್ಣ ಬೇರೆ ಜೀವಕೋಶವನ್ನು ಅವಲಂಬಿಸಿರುವಂಥವು.

ವೈರಸ್ಸುಗಳ ಗಾತ್ರ ಬಲು ಕಿರಿದು. ಎಲ್ಲೋ ಕೆಲವನ್ನು ಹೊರತುಪಡಿಸಿದರೆ ಎಲ್ಲವೂ ಬ್ಯಾಕ್ಟೀರಿಯಾಗಿಂತ ಸಣ್ಣವು. ಪೋಲಿಯೋ ವೈರಸ್ ಉಪ್ಪಿನ ಒಂದು ಕಣದ 10 ಸಾವಿರದಲ್ಲಿ ಒಂದನೇ ಭಾಗದಷ್ಟು ಗಾತ್ರದ್ದು; ಕೋವಿಡ್ ಐದು ಸಾವಿರದ ಒಂದು ಭಾಗದಷ್ಟು ದೊಡ್ಡದು. ವೈರಸ್ಸುಗಳಿಗಿಂತ ಬ್ಯಾಕ್ಟೀರಿಯಾಗಳು 8-10 ಪಟ್ಟು ದೊಡ್ಡದಿರುತ್ತವೆ. 1931ರಲ್ಲಿ ಎಲೆಕ್ಟ್ರಾನ್ ಮೈಕ್ರೋಸ್ಕೋಪ್ ಕಂಡುಹಿಡಿದ ಮೇಲೆಯೇ ನಾವು ವೈರಸ್ಸುಗಳನ್ನು, ಅವುಗಳ ರೂಪರಚನೆಯನ್ನು ಕಂಡದ್ದು.

ಪ್ರಾಣಿಗಳ ದೇಹದಲ್ಲಷ್ಟೇ ಇರುವ ಕೆಲವು ವೈರಸ್‌ಗಳು ಮನುಷ್ಯರನ್ನು ತಲುಪಿ ಹೊಸಹೊಸ ಕಾಯಿಲೆಗಳಿಗೆ ಕಾರಣವಾಗುತ್ತವೆ. ಹೀಗೆ ಏಡ್ಸ್ ಕಾಯಿಲೆ ದಕ್ಷಿಣ ಆಫ್ರಿಕಾದ ಚಿಂಪಾಂಜಿಗಳಿಂದ; ಸಾರ‍್ಸ್ ಕಾಯಿಲೆ ಸಿವೆಟ್ ಬೆಕ್ಕುಗಳಿಂದ; ಕೆಎಫ್‌ಡಿ ಮಂಗಗಳಿಂದ; ಮರ‍್ಸ್-2019 ಒಂಟೆಗಳಿಂದ; ಈಗ ಕೋವಿಡ್-19 ಬಾವಲಿಗಳಿಂದ ಬಂದಂಥವು. ಶ್ವಾಸನಾಳ, ಬಾಯಿ, ಗಂಟಲು, ಚರ್ಮ, ಲೈಂಗಿಕ ಅಂಗಾಂಗಗಳು, ಕೀಟದ ಕಡಿತ ಮುಂತಾದ ಮಾರ್ಗಗಳಿಂದ ಮಾನವ ದೇಹದೊಳಗೆ ಪ್ರಾಣಿ ವೈರಸ್‌ಗಳು ಹೊಕ್ಕಿಬಿಡುತ್ತವೆ. ಮುಖ ನೆಕ್ಕಿದ ಒಂಟೆ, ತಲೆಮೇಲೆ ಹತ್ತಿದ ಮಂಗ, ಕಾಲಸಂದಿ ತೂರಿಕೊಳುವ ಬೆಕ್ಕು, ರೋಗವಾಹಕ ಜೀವಿಯ ಅರೆಬೆಂದ ಮಾಂಸದಡುಗೆ, ತರಕಾರಿ-ಮಾಂಸದ ಮಾರುಕಟ್ಟೆಗಳಲ್ಲಾಗುವ ಮನುಷ್ಯ-ಪ್ರಾಣಿ ಸಂಪರ್ಕ – ಇವೇ ಮೊದಲಾದ ಕಾರಣಗಳಿಗೆ ಮನುಷ್ಯರಲ್ಲಿ ಪ್ರಾಣಿಯ ವೈರಸ್ ಸೇರಿಬಿಡಬಹುದು. ಹಾಗೆಯೇ ಇಕೋ ಟೂರಿಸಂ, ಅತಿಕ್ರಮಣ, ಒತ್ತುವರಿ, ವಲಸೆಗಳಿಂದ ಪ್ರಾಣಿಗಳಿಗೆ ನಮ್ಮ ವೈರಸ್‌ಗಳನ್ನು ನಾವೂ ದಾಟಿಸುತ್ತಿರಬಹುದು.

ನವೆಂಬರ್ 2019ರಿಂದ ಇದುವರೆಗೆ ಕೊಲ್ಲಿ ರಾಷ್ಟ್ರಗಳಲ್ಲಿ ಅದರಲ್ಲೂ ಸೌದಿ ಅರೇಬಿಯಾದಲ್ಲಿ ಎರಡು ಸಾವಿರಕ್ಕಿಂತ ಹೆಚ್ಚು ಜನರನ್ನು ಕೊಂದಿರುವ ಮರ‍್ಸ್ ತಾನು ಅಂಟಿದ 30% ಜನರನ್ನು ಕೊಂದು ಹಾಕುವಷ್ಟು ಅಪಾಯಕಾರಿ. ಈಗ ಬಂದೆರಗಿರುವ ಕೋವಿಡ್-19ರ ಸ್ವಭಾವ ನಮಗಿನ್ನೂ ತಿಳಿದಿಲ್ಲ. ಈ ಬರಹ ಬರೆಯುತ್ತಿರುವ 22-3-20ರ ಮಧ್ಯಾಹ್ನದವರೆಗೆ ಕೋವಿಡ್-19 ನಿಂದ 3,12,500 ರೋಗಿಗಳು ಬಾಧಿತರಾಗಿದ್ದರೆ 13,424 ಜನ ಮರಣ ಹೊಂದಿದ್ದಾರೆ. ಮೂರು ತಿಂಗಳಲ್ಲಿ ಅಂಟಾರ್ಕ್ಟಿಕಾ ಬಿಟ್ಟು ಎಲ್ಲ ಖಂಡಗಳಿಗೂ ಅದು ಹರಡಿದೆ. 167ಕ್ಕಿಂತ ಹೆಚ್ಚು ದೇಶಗಳಲ್ಲಿ ಕೋವಿಡ್‌ನ ಸೋಂಕಿದೆ. ಈಗದು ಯೂರೋಪ್ ಕೇಂದ್ರಿತ. ಇಟಲಿ, ಇರಾನ್, ಸ್ಪೇನ್‌ನಲ್ಲಿ ವೇಗವಾಗಿ ಹರಡುತ್ತಿದೆ. ಮರಣ ಪ್ರಮಾಣ 3.4 % ಇದೆ.

ಏನಿದು ಕರೋನಾ, ಕೋವಿಡ್?

ಡಿಸೆಂಬರ್ 2019ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಉಸಿರಾಟದ ತೀವ್ರ ತೊಂದರೆಯನ್ನುಂಟುಮಾಡುವ ಹಲವು ರೋಗಿಗಳು ಆಸ್ಪತ್ರೆಗೆ ದಾಖಲಾದರು. ಹೊಸವರ್ಷ ಕೊಡುತ್ತಿರುವ ಕೊಡುಗೆಯೋ ಎಂಬಂತೆ ರೋಗಕಾರಣವಾದ ‘ಹೊಸ ಕರೋನಾ ವೈರಸ್’ ಪತ್ತೆಯಾಯಿತು. ವುಹಾನ್‌ನ ಕಡಲ ಆಹಾರಪದಾರ್ಥಗಳ ಸಗಟು ಮಾರುಕಟ್ಟೆಯಿಂದ ಅದು ಹರಡಿದೆ ಎನ್ನಲಾಯಿತು.

ಬಾವಲಿಗಳ ದೇಹಲ್ಲಿರುವ ಕರೋನಾ ವೈರಸ್‌ಗೆ 96% ಸಾಮ್ಯತೆ ಇರುವ ವೈರಾಣು ರೋಗಿಗಳಲ್ಲಿ ಪತ್ತೆಯಾಯಿತು. ಆದರೆ ಮಾರುಕಟ್ಟೆಯಲ್ಲಿ ಬಾವಲಿಯ ಮಾರಾಟ ಇಲ್ಲದಿದ್ದ ಕಾರಣ ಪ್ಯಾಂಗೊಲಿನ್‌ನಂತಹ ಮಧ್ಯವರ್ತಿ ಪ್ರಾಣಿಯಿಂದ ಅಥವಾ ಮಾರುಕಟ್ಟೆಯಲ್ಲಿದ್ದ ಹಾವಿನ ಮಾಂಸದಿಂದ ಅದು ಬಂದಿರಬಹುದೆಂದು ಶಂಕಿಸಲಾಯಿತು. ಕೊನೆಗೆ ಅದಕ್ಕೆ ಕೋವಿಡ್-19 ಎಂಬ ನಾಮಕರಣ ಮಾಡಿದರು. ಇಲ್ಲಿಯವರೆಗೆ ಗೊತ್ತಿರದ ಹೊಸ ವೈರಸ್ ಆಗಿದ್ದರಿಂದ ‘ನೊವೆಲ್’ ವೈರಸ್ ಎಂದು ಕರೆಸಿಕೊಂಡಿತು.

ಸೂರ್ಯನ ಚಿತ್ರ ಬರೆವಾಗ ಉರೂಟು ಸೊನ್ನೆಯ ಸುತ್ತ ಪ್ರಭೆ ಬರೆಯುತ್ತಿದ್ದೆವು, ನೆನಪಿದೆಯೆ? ಅದು ಸೌರ ಕರೋನಾ. ಅಂಥದೇ ರಚನೆಯನ್ನು ಮೈತುಂಬ ಹೊದ್ದಿರುವಂಥವು ಕರೋನಾ ವೈರಸ್‌ಗಳು. ಎಲ್ಲ ರೀತಿಯ ಕರೋನಾ ವೈರಸ್ಸುಗಳೂ ಮಾರಣಾಂತಿಕವಲ್ಲ. ಕೆಲವು ನೆಗಡಿ, ಕೆಮ್ಮು, ಸಣ್ಣ ಜ್ವರಕ್ಕೆ ಮುಗಿದುಹೋಗುತ್ತವೆ. ಹೊಸಋತುವಿನ ಆರಂಭದ ದಿನಗಳ ತಂಡಿ, ಸಣ್ಣಜ್ವರ, ಗಂಟಲುರಿ ಕರೋನಾದಿಂದ ಆಗಿರುವ ಸಾಧ್ಯತೆಯೂ ಇದೆ. ಎಲ್ಲೋ ಕೆಲವೊಮ್ಮೆ ದುಷ್ಟತನವನ್ನೆಲ್ಲ ಆವಾಹಿಸಿಕೊಂಡುಬರುವ ಕೇಡಿಗ ತಳಿಗಳು ಹುಟ್ಟಿಬಿಡುತ್ತವೆ. ಈಗ ಚಾಲ್ತಿಯಲ್ಲಿರುವ ಮರ‍್ಸ್-2019 ಕೋವಿಡ್-19ಅಂತಹವು.

10 ಸಾವಿರ ವರ್ಷಗಳ ಹಿಂದೆ ಭೂಮಿಗೆ ಬಂದ ಕರೋನಾ ವೈರಸ್ ಬಿಸಿರಕ್ತದ ಬೆನ್ನೆಲುಬಿರುವ ಪ್ರಾಣಿಗಳು, ಹಕ್ಕಿ, ಬಾವಲಿಗಳಿಂದ ಮನುಷ್ಯರಿಗೆ ಬಂದಿದ್ದು. ಹಂದಿ, ದನ, ಕೋಳಿ, ನಾಯಿ, ಫೆರೆಟ್, ಕುದುರೆ, ಟರ್ಕಿ, ಬೆಕ್ಕು, ಮೊಲಗಳಲ್ಲಿ ಶೀತ, ಭೇದಿ, ಕರುಳಿನ ತೊಂದರೆಯುಂಟುಮಾಡುವ ಈ ವೈರಸ್ ಮನುಷ್ಯರನ್ನು ಬಾಧಿಸತೊಡಗಿದ್ದು ಇತ್ತೀಚಿನ ಶತಮಾನಗಳಲ್ಲಿ. ನೂರಿನ್ನೂರು ವರ್ಷಗಳ ಹಿಂದೆ ಪ್ರಾಣಿಗಳ ಶ್ವಾಸಕ್ರಿಯೆಯನ್ನು ಬಾಧಿಸುವ ಕರೋನಾ ವೈರಸ್ ಬಂದರೆ, ಇತ್ತೀಚೆಗೆ ಮನುಷ್ಯರನ್ನು ಬಾಧಿಸುವ ಸಾರ‍್ಸ್, ಮರ‍್ಸ್ ಕಾಯಿಲೆಯ ವೈರಸ್ ಉತ್ಪತ್ತಿಯಾಗಿವೆ.

ಕೋವಿಡ್ 19 ಬಂದರೆ ಏನಾಗುವುದು?

  • ಏನೂ ಆಗದೇ ಇರಬಹುದು. ಈ ಸಾಧ್ಯತೆಯೇ ಹೆಚ್ಚು.
  • ಕೆಲವರಿಗೆ ವೈರಸ್ ಸೋಂಕುಂಟಾದ ಹದಿನಾಲ್ಕು ದಿನಗಳೊಳಗೆ ತಂಡಿ, ಗಂಟಲುರಿ, ಸಣ್ಣ ಜ್ವರ, ಭೇದಿ ಶುರುವಾಗುತ್ತದೆ.
  • ನಂತರ ಮೂಗು, ಗಂಟಲ ಮೂಲಕ ಶ್ವಾಸಕೋಶ ಪ್ರವೇಶಿಸುವ ವೈರಸ್ ಕೆಲವರಲ್ಲಿ ತೀವ್ರತರದ ನ್ಯುಮೋನಿಯಾ ಉಂಟುಮಾಡುತ್ತದೆ. ಅತಿಜ್ವರ, ಕೆಮ್ಮು, ದಮ್ಮು, ವಾಂತಿ, ತಲೆನೋವು, ಉಸಿರಾಟದ ತೊಂದರೆ ಹೆಚ್ಚುತ್ತದೆ.
  • ಅತಿ ತೀವ್ರತರವಾಗುವ ಕೆಲವು ಪ್ರಕರಣಗಳಲ್ಲಿ ವಿವಿಧ ಅಂಗಾಂಗಗಳ ವೈಫಲ್ಯತೆಯಾಗಿ ಮರಣವುಂಟಾಗುತ್ತದೆ.
  • ಇದುವರೆಗೆ ರೋಗ ಬಾಧಿಸಿದವರಲ್ಲಿ 60 ವರ್ಷ ಮೇಲ್ಪಟ್ಟವರು, ರೋಗನಿರೋಧಕ ಶಕ್ತಿ ಕುಂಠಿತಗೊಂಡವರು, ಎಳೆಯ ಮಕ್ಕಳೇ ಹೆಚ್ಚಿದ್ದಾರೆ. ಬಡದೇಶಗಳಿಗಿಂತ ಮುಂದುವರೆದ ದೇಶಗಳನ್ನು ಹೆಚ್ಚು ಬಾಧಿಸಿದೆ. ಇಂದು ವಿಶ್ವಪಿಡುಗು (ಪ್ಯಾಂಡೆಮಿಕ್) ಎಂದು ಘೋಷಿಸಲ್ಪಟ್ಟಿದೆ. ಯಾಕೆಂದರೆ ಅದು ಸುಲಭದಲ್ಲಿ ಹರಡುವಂಥದು. ಆದರೆ ಇದರಿಂದಾಗುವ ಸಾವುನೋವುಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಅದಕ್ಕಾಗಿ ಸರ್ಕಾರಗಳು, ಸಂಸ್ಥೆಗಳು, ಸಮಾಜಗಳು ನಾನಾ ಸಲಹೆ, ಸೂಚನೆಯಿತ್ತಿವೆ.

ಹರಡುವಿಕೆ ತಡೆಯಲು ಇರುವ ಕೆಲವು ಸುಲಭ ತಂತ್ರಗಳಿವು

  1. ಅತಿ ಅನಿವಾರ್ಯವಲ್ಲದ ಎಲ್ಲ ಪ್ರಯಾಣ ರದ್ದುಗೊಳಿಸಿ ಇದ್ದಲ್ಲೇ ಇರುವುದು.
  2. ಬಟ್ಟೆ ಮೇಲೆ ವೈರಸ್ 6 ರಿಂದ 12 ಗಂಟೆ ಕಾಲ ಬದುಕಬಹುದು. ಈ ವೈರಸ್ ಉಷ್ಣಸೂಕ್ಷ್ಮ. 30-35 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಗೆ ಹಾಗೂ ಸೋಪಿಗೆ ಸತ್ತು ಹೋಗುತ್ತದೆ. ಹಾಗಾಗಿ ಪದೇಪದೇ ಸೋಪು ನೀರಿನಲ್ಲಿ ಕೈ ತೊಳೆಯಬೇಕು. ಸೋಪು ಹಚ್ಚಿ ಬಟ್ಟೆ ತೊಳೆದು ಬಿಸಿಲಲ್ಲಿ ಒಣಗಿಸಬೇಕು.
  3. ಕೆಮ್ಮುವಾಗ ಸೀನುವಾಗ ಮುಖಗವಸಿನಿಂದ ಅಥವಾ ವಸ್ತ್ರದಿಂದ ಮೂಗುಬಾಯಿ ಮುಚ್ಚಿಕೊಂಡಿರಬೇಕು. ಯಾಕೆಂದರೆ ಒಮ್ಮೆ ಸೀನಿದರೆ ಅಥವಾ ಕೆಮ್ಮಿದರೆ 20,000 ಕಿರುಹನಿಗಳು ವಾತಾವರಣಕ್ಕೆ ಸೇರುತ್ತವೆ. ಪ್ರತಿ ಕಿರುಹನಿಯೂ ನೂರಾರು ವೈರಸ್ ಕಣಗಳನ್ನು ಹೊಂದಿದ್ದು ಎದುರಿರುವವರನ್ನು ಬೇರೆಬೇರೆ ರೀತಿ ತಲುಪುತ್ತವೆ. ಹಾಗಾಗಿ ಜನರ ನಡುವೆ ಇರುವಾಗಲೆಲ್ಲ ಮುಖಗವಸು ತೊಡಬೇಕು.
  4. ಕೆಮ್ಮುವವರು, ಸೀನುವವರಿಂದ ಮೂರು ಮೀಟರ್ ದೂರ ಇದ್ದರೆ ಒಳ್ಳೆಯದು. ಮೂರು ಮೀಟರ್ (10 ಅಡಿ) ಅಂತರ ಸಿಕ್ಕರಷ್ಟೇ ಕೆಮ್ಮು, ಸೀನಿನ ಹನಿಗಳು ನೆಲ ಮುಟ್ಟುತ್ತವೆ.
  5. ಬಂದವರನ್ನು ಸ್ವಾಗತಿಸುತ್ತ ಅಪ್ಪಿಕೊಳ್ಳುವುದು, ಕೈಕುಲುಕುವುದು, ಮುತ್ತಿಕ್ಕುವುದು ಮಾಡಬಾರದು. ಸಾಮಾಜಿಕ ಅಂತರವಿಟ್ಟುಕೊಂಡು ದೂರದಿಂದಲೇ ಹಾರೈಸಬೇಕು.
  6. ಲೋಹದ ಮೇಲ್ಮೈ ಮೇಲೆ ವೈರಸ್ 12 ಗಂಟೆ ಕಾಲ ಜೀವಂತ ಇರಬಲ್ಲದು. ಹಾಗಾಗಿ ಅಂತಹ ಮೇಲ್ಮೈಗಳನ್ನು ಮುಟ್ಟುತ್ತ ಇರುವವರು ಪದೇಪದೇ ಸೋಪು ಹಚ್ಚಿ (ಸ್ಯಾನಿಟೈಸರ್ ಹಚ್ಚಿ ಅಲ್ಲ) ಕೈ ತೊಳೆಯಬೇಕು. ಅಂತಹ ಮೇಲ್ಮೈಗಳನ್ನೂ ಶುಚಿಗೊಳಿಸಬೇಕು.
  7. ನಮ್ಮ ಮೈಕೈಮೇಲೆ 5-10 ನಿಮಿಷ ವೈರಸ್ ಜೀವಂತ ಉಳಿಯಬಹುದು. ಆದರೆ ಆ 5-10 ನಿಮಿಷದಲ್ಲಿ ನಾವು ಅಪ್ರಜ್ಞಾಪೂರ್ವಕವಾಗಿ ಕಣ್ಣು, ಮೂಗು, ಬಾಯಿ, ಕಿವಿ ಮುಟ್ಟಿ ಅಲ್ಲೆಲ್ಲ ಸೇರಿಸಿರುತ್ತೇವೆ. ಹಾಗಾಗಿ ನಮ್ಮ ಮೈ ಮುಖ ಮುಟ್ಟಿಕೊಳ್ಳುತ್ತಿರುವುದನ್ನು ನಿಲ್ಲಿಸಬೇಕು.

2018ರಲ್ಲಿ ಮಲೇರಿಯಾದಿಂದ ವಿಶ್ವಾದ್ಯಂತ 4 ಲಕ್ಷ ಜನ ಸತ್ತಿದ್ದಾರೆ. ಏಡ್ಸ್‌ನಿಂದ 7.7 ಲಕ್ಷ ಜನ ಅಸು ನೀಗಿದ್ದಾರೆ. ಪ್ರತಿ ವರ್ಷ 22 ಸಾವಿರ ಜನ ಡೆಂಗಿಗೆ ಬಲಿಯಾಗುತ್ತಾರೆ. ಹುಚ್ಚುನಾಯಿ ಕಡಿತದ ರೇಬಿಸ್‌ನಿಂದ ವಾರ್ಷಿಕ 55 ಸಾವಿರ ಜನ ಸಾಯುತ್ತಾರೆ. ಒಂದೂವರೆ ಲಕ್ಷ ಜನ ಟೈಫಾಯ್ಡ್‌ನಿಂದ ಸಾಯುತ್ತಾರೆ. 40 ಸಾವಿರ ಜನ ರಸ್ತೆ ಅಪಘಾತಗಳಿಂದ ಸಾಯುತ್ತಾರೆ. ಹಾಗಿರುವಾಗ ಇದುವರೆಗೆ 13000 ಜನರನ್ನು ಕೊಂದ ಕೋವಿಡ್ ಬಗೆಗೇಕೆ ಇಷ್ಟು ಭೀತಿ?

ಭೀತಿ ಏಕೆಂದರೆ ನಮಗೆ ಅದರ ಬಗ್ಗೆ ಗೊತ್ತಿರುವುದಕ್ಕಿಂತ ಗೊತ್ತಿಲ್ಲದಿರುವುದೇ ಹೆಚ್ಚು. ಅದರ ಕಾರಣ, ನಿಯಂತ್ರಣ, ಚಿಕಿತ್ಸೆ, ಪರಿಣಾಮ, ಲಸಿಕೆ, ಹರಡುವಿಕೆ ಬಗೆಗೆ ಹೆಚ್ಚು ಗೊತ್ತಿಲ್ಲ. ಇನ್ನೂ ಲಸಿಕೆ, ಚುಚ್ಚುಮದ್ದು ಕಂಡುಹಿಡಿದಿಲ್ಲ. ಮನುಷ್ಯರ ಮೇಲೆ ಪ್ರಯೋಗಿಸಬಹುದಾದ ಲಸಿಕೆ ಕಂಡುಹಿಡಿಯಲು ತಿಂಗಳುಗಳೇ ಬೇಕಾಗಬಹುದು. ಬೃಹತ್ ಪ್ರಮಾಣದಲ್ಲಿ ಲಸಿಕೆ ತಯಾರಿಸಲು ವರುಷಗಳೇ ಬೇಕಾಗಬಹುದು. ಹಾಗಾಗಿ ಇದರ ಬಗೆಗೆ ಮುನ್ನೆಚ್ಚರಿಕೆ ವಹಿಸುವುದೇ ಸೂಕ್ತವಾಗಿದೆ.

14ನೇ ಶತಮಾನದ ಬ್ಯುಬೋನಿಕ್ ಪ್ಲೇಗ್ ವಿಶ್ವದ ಕಾಲುಭಾಗ ಜನಸಂಖ್ಯೆಯನ್ನು ಕೊಂದು ಹಾಕಿತ್ತು. 102 ವರ್ಷ ಕೆಳಗೆ, 1918ರಲ್ಲಿ ಬಂದ ಎಚ್೧ಎನ್೧ ಇನ್‌ಫ್ಲುಯೆಂಜಾ ಕಾಯಿಲೆ ವಿಶ್ವಾದ್ಯಂತ ಮಿಂಚಿನಂತೆ ಹರಡಿ 5 ಕೋಟಿ ಜನರನ್ನು ಬಲಿ ತೆಗೆದುಕೊಂಡಿತ್ತು. (ವಿಶ್ವದ ಮೂರನೆ ಒಂದು ಭಾಗ ಜನರಿಗೆ ಸೋಕಿದ ಆ ವೈರಸ್ ಹಕ್ಕಿಗಳಿಂದ ಮನುಷ್ಯರಿಗೆ ಬಂದಿತ್ತು.) 2009ರ ಇನ್‌ಫ್ಲುಯೆಂಜಾ ಎಚ್1ಎನ್1 ಕನಿಷ್ಟ 2 ಲಕ್ಷ ಜನರನ್ನು ಬಲಿ ತೆಗೆದುಕೊಂಡಿತು. (ಅದು ಹಂದಿಗಳಿಂದ ಮನುಷ್ಯರಿಗೆ ರವಾನೆಯಾಗಿತ್ತು.) ಇದೂ ಅಂತಹ ಒಂದು ವಿಶ್ವವ್ಯಾಧಿಯಾಗದಿರಲಿ ಎನ್ನುವುದೇ ಈ ಎಲ್ಲ ಮುನ್ನೆಚ್ಚರಿಕೆಗಳ ಉದ್ದೇಶವಾಗಿದೆ.

ಆದ್ದರಿಂದ ಕೋವಿದಕ್ಕೆ ಅಂಜದೇ, ಆತಂಕದಿಂದ ದಿನ ದೂಡದೇ, ಸಮಯ ವ್ಯಯವಾಯಿತೆಂದು ದುಃಖಿಸದೇ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳೋಣ. ಅನಿವಾರ್ಯವಲ್ಲದ, ತುರ್ತು ಅಲ್ಲ ಎಲ್ಲ ತಿರುಗಾಟ, ಕಾರ್ಯಕ್ರಮಗಳನ್ನು ಕೂಡಲೇ ನಿಲ್ಲಿಸೋಣ. ಚಿಕಿತ್ಸೆಯ ಹುಸಿ ಭರವಸೆಗಳಿಗೆ, ಗಾಳಿಸುದ್ದಿಗಳಿಗೆ ಕಿವಿಗೊಡದಿರೋಣ. ಅನಾಯಾಸವಾಗಿ ಸಿಕ್ಕ ಈ ವಿರಾಮ-ರಜೆಯ ಅಮೂಲ್ಯ ಸಮಯವನ್ನು ಕುಟುಂಬದೊಂದಿಗೆ ಕಳೆಯಲಿಕ್ಕೆ, ಆತ್ಮಾವಲೋಕನ ಮಾಡಿಕೊಳ್ಳಲಿಕ್ಕೆ, ನಾಳಿನ ನಡೆಗಳ ಬಗೆಗೆ ಯೋಚಿಸಲಿಕ್ಕೆ ವಿನಿಯೋಗಿಸೋಣ. ನಮ್ಮ ಮುಂದಿನ ತಲೆಮಾರಿಗೆ ಆರೋಗ್ಯವಂತ ನೆಲ, ಸಮಾಜ ಬಿಟ್ಟು ಹೋಗುವುದು ಹೇಗೆಂಬ ಬಗೆಗೆ ಚಿಂತಿಸೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending