ದಿನದ ಸುದ್ದಿ
ಕೋವಿಡ್-19 ಕೋಲಾಹಲ
- ಡಾ.ಎಚ್.ಎಸ್.ಅನುಪಮಾ
ಬೆಳಗಾವಿ ಹತ್ತಿರದ ಹಳ್ಳಿಗೆ ಚೀನಾದಿಂದ ಟೆಕ್ಕಿ ದಂಪತಿಗಳು ಬಂದಿಳಿದರು. ಮೊದಲಾಗಿದ್ದರೆ ತಮ್ಮೂರಿಗೆ ವಿದೇಶದಿಂದ ಬಂದವರ ಕಾಣಲು ಹಳ್ಳಿಯ ಅಬಾಲವೃದ್ಧ ಸ್ತ್ರೀಪುರುಷರಾದಿಯಾಗಿ ಎಲ್ಲರೂ ಕುತೂಹಲಿಗಳಾಗಿರುತ್ತಿದ್ದರು. ಕರೆಕರೆದು ಮಾತಾಡಿಸುತ್ತಿದ್ದರು. ಇಣುಕಿ ನೋಡುತ್ತಿದ್ದರು. ಆದರೆ ಈಗ ಬಂದವರು ತಾವು ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಇದ್ದೇವೆಂದು ಪ್ರಮಾಣಪತ್ರ ತೋರಿಸಿದರೂ ಕೇಳದೇ ಆ ಜೋಡಿಯನ್ನು ಅಟ್ಟಾಡಿಸಿ ಬೈದು, ಪೊಲೀಸರ ಕರೆದು, ಆಂಬುಲೆನ್ಸಿನಲ್ಲಿ ಕೂಡಿ ಹಾಕಿ ಊರು ಬಿಟ್ಟೋಡಿಸಿದರು. ಅಷ್ಟೇ ಅಲ್ಲ, ವಾಟ್ಸಾಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಆ ಜೋಡಿಯ ಭಾವಚಿತ್ರ ಹಂಚಿಕೊಂಡು ಅವರನ್ನು ಯಾರೂ ನಿಮ್ಮ ಊರುಗಳೊಳಗೆ ಬಿಟ್ಟುಕೊಳ್ಳಬೇಡಿ ಎಂದು ಪ್ರಚಾರ ಮಾಡಿದರು.
ಮಂಡ್ಯದ ಹೊರಭಾಗದಲ್ಲಿ ನಾರುಬೇರುಗಳ ಔಷಧಿ ಮತ್ತು ಮಸಾಲೆ ಪದಾರ್ಥಗಳನ್ನು ಹೊತ್ತು ದಕ್ಷಿಣ ಆಫ್ರಿಕಾದಲ್ಲಿ ವ್ಯಾಪಾರ ಮಾಡಿಬಂದ ಹಕ್ಕಿಪಿಕ್ಕಿ ಸಮುದಾಯದ ಅಲೆಮಾರಿಗಳು ತಮ್ಮ ನೆಲೆಗೆ ವಾಪಸಾದದ್ದೇ ಉಳಿದವರು ಭಯಭೀತರಾದರು. ಹಕ್ಕಿಪಿಕ್ಕಿಟೆಂಟುಗಳೊಳಗೆಅಲ್ಲೋಲಕಲ್ಲೋಲವಾಯಿತು.ಕೊನೆಗೆ ವಿದೇಶದಿಂದ ಹಿಂದಿರುಗಿದವರಿಗೆ ಬೇರೆ ವ್ಯವಸ್ಥೆ ಮಾಡುವಂತಾಯಿತು.
ಮತ್ತೊಂದೆಡೆ ಭಾರತದ ಹಳ್ಳಿ, ನಗರ, ಕೇರಿಗಳಲ್ಲಿ ಟಿವಿ, ಜಾಲತಾಣಗಳಿಂದ ಕರೋನಾ ಅತಿಸುದ್ದಿಯಿಂದ ಭಯದ ವ್ಯಾಧಿ ಹರಡತೊಡಗಿದೆ. ಹೊರಗೆ ಹೋಗಬೇಡಿ. ಮುಟ್ಟಬೇಡಿ. ಮನೆಗೆ ಕರೆಯಬೇಡಿ. ಕೆಮ್ಮುವವರ ಬಳಿ ನಿಲ್ಲಬೇಡಿ ಎಂಬಿತ್ಯಾದಿ ಬೇಡಗಳ ನಡುವೆ ಆಗಲೇ ವ್ಯಕ್ತಿಗಳ ನಡುವಿರುವ ದೂರ ವಿಸ್ತಾರವಾಗತೊಡಗಿದೆ.
‘ಅಯ್ಯೋ, ತಂಡಿಕೆಮ್ಮ ಅಂತ ಸರ್ಕಾರಿ ಆಸ್ಪತ್ರೆಗೆ ಹೋದ್ರೆ ಅಲ್ಲಿ ರಕ್ತ ಟೆಸ್ಟ್ ಮಾಡಿ ಕಡೆಗೆ 14 ದಿನ ಕ್ವಾಣೇಲಿ ಕೂಡಿ ಹಾಕ್ತಾರಂತೆ’ ಎಂಬ ಹೆದರಿಕೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಲು ಕೆಲವರು ಹೆದರಿದರೆ; ತಂತಮ್ಮ ಮನೆಯ ಮದುವೆ, ತೀರ್ಥಯಾತ್ರೆ, ಧಾರ್ಮಿಕ ಕಾರ್ಯಗಳೆಲ್ಲವನ್ನು ರದ್ದು ಮಾಡಿದ್ದಾರೆ ಮತ್ತೆ ಕೆಲವರು. ಶಾಲೆಯೂ ಇಲ್ಲದೆ, ಪರೀಕ್ಷೆಯೂ ಇಲ್ಲದೇ ಪಾಸಾಗಿ ಮುಂದಿನ ತರಗತಿಗೆ ಹೋದ ಮಕ್ಕಳು ಸಮಯ ಕಳೆಯಲು ಹೊಸಹೊಸ ಯೋಜನೆಗಳನ್ನು ಹಾಕತೊಡಗಿವೆ.
‘ಅರೆ, ಎಲ್ಲಾದರೂ ಸಾಧ್ಯವೇ? ಸಾಧ್ಯವೇ ಇಲ್ಲ’ ಎನ್ನುವಂತಹುದೆಲ್ಲ ತಂತಾನೇ ಅನಿವಾರ್ಯವಾಗಿ, ಸಾಧ್ಯವೂ ಆಗಿ ಏರ್ಪೋರ್ಟುಗಳು, ಮಾಲುಗಳು, ದೇವಳ-ಆಶ್ರಮ-ಮಠಗಳು, ಹೋಟೆಲು ಬೀಚುಗಳು ಜನರಿಲ್ಲದೆ ಬಿಕೋ ಎನ್ನುತ್ತಿದ್ದರೆ, ಗುಡಿಸಲು-ಟೆಂಟು-ಸ್ಲಮ್ಮುವಾಸಿಗಳು, ಕೂಲಿಗಳು, ಮನೆದೇವಿಯರು ತಂತಮ್ಮ ದಿನನಿತ್ಯದ ಹೊಟ್ಟೆಪಾಡಿನ ಕೆಲಸಗಳಲ್ಲಿ ಮುಳುಗಿ ಹೋಗಿದ್ದಾರೆ.
ಇಷ್ಟೆಲ್ಲ ಉಲ್ಟಾಪಲ್ಟಾ, ಕೋಲಾಹಲ, ಅಸಂಭವ ಸಂಭವ ಆಗುತ್ತಿರುವುದಾದರೂ ಏತಕ್ಕೆ? ಭಯಕ್ಕೆ, ಪ್ರಾಣಭಯಕ್ಕೆ. ನಿಜ. ಜೀವಿಗಳ ಚಟುವಟಿಕೆಯನ್ನೆಲ್ಲ ನಿಯಂತ್ರಿಸುವ ಮುಖ್ಯ ಚಾಲನಾ ಶಕ್ತಿ ಭಯ ಎನ್ನುವುದು ಮತ್ತೆ ಸಾಬೀತಾಗಿದೆ. ಅದರಲ್ಲೂ ಪ್ರಾಣಭಯ ಆವರಿಸಿಕೊಂಡಿತೆಂದರೆ ಯಮನಿಯಮಗಳು ಮರೆತು ಹೋಗುತ್ತವೆ. ಸಂಬಂಧಗಳು ಕಾಣೆಯಾಗುತ್ತವೆ. ಎತ್ತ, ಏನುಗಳು ಸತ್ತು ಹೋಗುತ್ತವೆ.
ನಾವೆಳೆದ ಗಡಿಗಳೆಂಬ ಹುಸಿರೇಖೆಗಳು ತಂತಾವೇ ಅಳಿಸಿ ಹೋಗುತ್ತವೆ. ಜೈಲುಗಳ ಬಾಗಿಲುಗಳು ತೆರೆದುಕೊಳ್ಳುತ್ತವೆ. ತಮ್ಮ ಮೇಲೆ ತಾವೇ ಆರೋಪಿಸಿಕೊಂಡ ಹುಸಿ ಶಕ್ತಿಗಳೆಲ್ಲ ಕರಗಿಹೋಗಿ ಸುಮ್ಮಸುಮ್ಮನೆ ‘ಮಹಾನ್’ ಆದವರು ಬೆತ್ತಲಾಗಿ ನಿಜಸ್ವರೂಪ ಬಯಲಾಗುತ್ತದೆ. ಸರ್ವಾಧಿಕಾರಿಯಿಂದ ಹಿಡಿದು ಬೀದಿ ಬದಿಯ ಭಿಕಾರಿಯವರೆಗೂ; ಪರಮಾಣು ಶಸ್ತ್ರಾಸ್ತ್ರ ಹೊಂದಿದವರಿಂದ ಹಿಡಿದು ಚಿಂದಿ ಆಯುವವರವರೆಗೆ ಪ್ರಾಣಭಯ ಆವರಿಸಿದಾಗ ಎಲ್ಲರಿಗೂ ಬದುಕುಳಿವ ಹಂಬಲದ ಹೊರತು ಮತ್ತೆಲ್ಲ ಮರೆತುಹೋಗುತ್ತದೆ.
ಹೌದು. ಕೋವಿಡ್-19 ವೈರಸ್ನಿಂದ ಹರಡುತ್ತಿರುವ ಕಾಯಿಲೆ ಮತ್ತು ಮರಣ ಭೀತಿ ಇಡಿಯ ವಿಶ್ವವನ್ನೇ ಆವರಿಸಿದ ೨೦೨೦ರ ಮಾರ್ಚ್ ಹೊತ್ತಿಗೆ ಗಡಿ, ಮೂರ್ತಿ, ಸ್ಮಾರಕ, ಮಾಲು, ಮಹಲು, ಫ್ಯಾಷನ್, ಯುದ್ಧ, ದಂಗೆಗಳೇ ಮೊದಲಾದ ಮನುಷ್ಯ ಅಹಂಕಾರದ ನಿರ್ಮಿತಿಗಳೆಲ್ಲಾ ತಾತ್ಕಾಲಿಕವಾಗಿಯಾದರೂ ಪೊಳ್ಳು ಎಂದೆನಿಸುವಂತೆ ಅಣುರೇಣುತೃಣವೊಂದು ನಿವಾಳಿಸಿ ಬಿಸಾಡಿದೆ. ಲಕ್ಷ ಕೋಟಿ ರೂಪಾಯಿಗಳನ್ನು ಗಾಳಿಯಲ್ಲೇ ಸೃಷ್ಟಿಸುವ ಷೇರು ಮಾರುಕಟ್ಟೆ ಎಂಬ ಮಾಯಾನಗರಿ ಮೇಣದರಮನೆಯಂತೆ ಕರಗಿ ಹೋಗುತ್ತಿದೆ.
ಯಾವುದೂ ಬೇಡ, ಯಾರಿಗೂ ಬೇಡವೆನುವಂತಹ ತಾತ್ಕಾಲಿಕ ಸ್ಮಶಾನ ವೈರಾಗ್ಯ ಆವರಿಸಿದಂತಿದೆ. ಧರ್ಮಗುರುಗಳ ಸಾಕ್ಷಿಯಿಲ್ಲದೆ ಎಲ್ಲ ಶವಗಳನ್ನೂ ಮಿಲಿಟರಿ-ಮುನ್ಸಿಪಾಲಿಟಿ ಲಾರಿಗಳು ಹೊತ್ತೊಯ್ದು ವಿದ್ಯುತ್ ಚಿತಾಗಾರದಲ್ಲಿ ಸುಟ್ಟುಬಿಡುತ್ತಿವೆ. ಧರ್ಮ-ಜಾತಿ ಭೇದವಿಲ್ಲದೆ ಬದುಕಿರುವವರನ್ನೂ, ಮರಣಿಸಿದವರನ್ನೂ ವೈರಸ್ ಆವರಿಸಿಕೊಂಡಿದೆ. ಎರಡು ಕಾಲಿನವರ ಸಾಧನೆ ಏನೇ ಇರಲಿ, ಪ್ರಕೃತಿಯೆದುರು ಎಲ್ಲವೂ ತೃಣವೇ, ನಿಜ ದೈವ ಪ್ರಕೃತಿಯೇ ಎಂಬ ಪಾಠ ಮತ್ತೆಮತ್ತೆ ಕಲಿಯಬೇಕಾಗಿದೆ.
ವೈರಸ್ ಎಂಬ ವಿಸ್ಮಯ-ಅಪಾಯ
ಆನೆ, ತಿಮಿಂಗಿಲಗಳಿಂದ ಹಿಡಿದು ಬ್ಯಾಕ್ಟೀರಿಯಾಗಳಂತಹ ಏಕಕೋಶ ಜೀವಿಗಳ ತನಕ ಜೀವಿಗಳಿಗೆ ನಾನಾ ಕಾಯಿಲೆಗಳನ್ನುಂಟುಮಾಡುವ; ಏಡ್ಸ್, ಪೋಲಿಯೋ, ದಡಾರ, ಸಿಡುಬು, ಮೈಲಿಬೇನೆ, ಕಾಮಾಲೆ, ವಾಂತಿಭೇದಿ, ರುಬೆಲ್ಲಾ, ಇನ್ಫ್ಲುಯೆಂಜಾ, ಹಂದಿಗೋಡು ಕಾಯಿಲೆ, ಮಂಗನ ಕಾಯಿಲೆ, ಮಂಗನಬಾವು ಮತ್ತಿತರ ನೂರಾರು ಕಾಯಿಲೆಗಳಿಗೆ ಕಾರಣವಾದ ವೈರಸ್ಗಳು ಬಲು ವಿಚಿತ್ರ, ವಿಶಿಷ್ಟ ಅಪಾಯಕಾರಿ ಕಣಗಳು. ಪಕ್ಷಿ, ಪ್ರಾಣಿ, ಗಿಡ, ಶಿಲೀಂಧ್ರ, ಬ್ಯಾಕ್ಟೀರಿಯಾ ಇತ್ಯಾದಿ ಬೇರೊಂದು ಜೀವಿಯ ಜೀವಕೋಶದೊಳಗೆ ಮಾತ್ರ ಬದುಕಬಲ್ಲ ಸೂಕ್ಷ್ಮಾಣುಗಳು ಅವು. ಇತ್ತ ‘ಜೀವಿ’ಯೂ ಅಲ್ಲ. ಅತ್ತ ‘ಅಜೀವಿ’ಗಳೂ ಅಲ್ಲ. ಜೀವಿ ಅಜೀವಿಗಳ ನಡುವಿರುವ ಅತ್ಯಂತ ಸರಳ, ಅತಿ ಸಣ್ಣ ಕಣ ವೈರಸ್ ಸಂಪೂರ್ಣ ಬೇರೆ ಜೀವಕೋಶವನ್ನು ಅವಲಂಬಿಸಿರುವಂಥವು.
ವೈರಸ್ಸುಗಳ ಗಾತ್ರ ಬಲು ಕಿರಿದು. ಎಲ್ಲೋ ಕೆಲವನ್ನು ಹೊರತುಪಡಿಸಿದರೆ ಎಲ್ಲವೂ ಬ್ಯಾಕ್ಟೀರಿಯಾಗಿಂತ ಸಣ್ಣವು. ಪೋಲಿಯೋ ವೈರಸ್ ಉಪ್ಪಿನ ಒಂದು ಕಣದ 10 ಸಾವಿರದಲ್ಲಿ ಒಂದನೇ ಭಾಗದಷ್ಟು ಗಾತ್ರದ್ದು; ಕೋವಿಡ್ ಐದು ಸಾವಿರದ ಒಂದು ಭಾಗದಷ್ಟು ದೊಡ್ಡದು. ವೈರಸ್ಸುಗಳಿಗಿಂತ ಬ್ಯಾಕ್ಟೀರಿಯಾಗಳು 8-10 ಪಟ್ಟು ದೊಡ್ಡದಿರುತ್ತವೆ. 1931ರಲ್ಲಿ ಎಲೆಕ್ಟ್ರಾನ್ ಮೈಕ್ರೋಸ್ಕೋಪ್ ಕಂಡುಹಿಡಿದ ಮೇಲೆಯೇ ನಾವು ವೈರಸ್ಸುಗಳನ್ನು, ಅವುಗಳ ರೂಪರಚನೆಯನ್ನು ಕಂಡದ್ದು.
ಪ್ರಾಣಿಗಳ ದೇಹದಲ್ಲಷ್ಟೇ ಇರುವ ಕೆಲವು ವೈರಸ್ಗಳು ಮನುಷ್ಯರನ್ನು ತಲುಪಿ ಹೊಸಹೊಸ ಕಾಯಿಲೆಗಳಿಗೆ ಕಾರಣವಾಗುತ್ತವೆ. ಹೀಗೆ ಏಡ್ಸ್ ಕಾಯಿಲೆ ದಕ್ಷಿಣ ಆಫ್ರಿಕಾದ ಚಿಂಪಾಂಜಿಗಳಿಂದ; ಸಾರ್ಸ್ ಕಾಯಿಲೆ ಸಿವೆಟ್ ಬೆಕ್ಕುಗಳಿಂದ; ಕೆಎಫ್ಡಿ ಮಂಗಗಳಿಂದ; ಮರ್ಸ್-2019 ಒಂಟೆಗಳಿಂದ; ಈಗ ಕೋವಿಡ್-19 ಬಾವಲಿಗಳಿಂದ ಬಂದಂಥವು. ಶ್ವಾಸನಾಳ, ಬಾಯಿ, ಗಂಟಲು, ಚರ್ಮ, ಲೈಂಗಿಕ ಅಂಗಾಂಗಗಳು, ಕೀಟದ ಕಡಿತ ಮುಂತಾದ ಮಾರ್ಗಗಳಿಂದ ಮಾನವ ದೇಹದೊಳಗೆ ಪ್ರಾಣಿ ವೈರಸ್ಗಳು ಹೊಕ್ಕಿಬಿಡುತ್ತವೆ. ಮುಖ ನೆಕ್ಕಿದ ಒಂಟೆ, ತಲೆಮೇಲೆ ಹತ್ತಿದ ಮಂಗ, ಕಾಲಸಂದಿ ತೂರಿಕೊಳುವ ಬೆಕ್ಕು, ರೋಗವಾಹಕ ಜೀವಿಯ ಅರೆಬೆಂದ ಮಾಂಸದಡುಗೆ, ತರಕಾರಿ-ಮಾಂಸದ ಮಾರುಕಟ್ಟೆಗಳಲ್ಲಾಗುವ ಮನುಷ್ಯ-ಪ್ರಾಣಿ ಸಂಪರ್ಕ – ಇವೇ ಮೊದಲಾದ ಕಾರಣಗಳಿಗೆ ಮನುಷ್ಯರಲ್ಲಿ ಪ್ರಾಣಿಯ ವೈರಸ್ ಸೇರಿಬಿಡಬಹುದು. ಹಾಗೆಯೇ ಇಕೋ ಟೂರಿಸಂ, ಅತಿಕ್ರಮಣ, ಒತ್ತುವರಿ, ವಲಸೆಗಳಿಂದ ಪ್ರಾಣಿಗಳಿಗೆ ನಮ್ಮ ವೈರಸ್ಗಳನ್ನು ನಾವೂ ದಾಟಿಸುತ್ತಿರಬಹುದು.
ನವೆಂಬರ್ 2019ರಿಂದ ಇದುವರೆಗೆ ಕೊಲ್ಲಿ ರಾಷ್ಟ್ರಗಳಲ್ಲಿ ಅದರಲ್ಲೂ ಸೌದಿ ಅರೇಬಿಯಾದಲ್ಲಿ ಎರಡು ಸಾವಿರಕ್ಕಿಂತ ಹೆಚ್ಚು ಜನರನ್ನು ಕೊಂದಿರುವ ಮರ್ಸ್ ತಾನು ಅಂಟಿದ 30% ಜನರನ್ನು ಕೊಂದು ಹಾಕುವಷ್ಟು ಅಪಾಯಕಾರಿ. ಈಗ ಬಂದೆರಗಿರುವ ಕೋವಿಡ್-19ರ ಸ್ವಭಾವ ನಮಗಿನ್ನೂ ತಿಳಿದಿಲ್ಲ. ಈ ಬರಹ ಬರೆಯುತ್ತಿರುವ 22-3-20ರ ಮಧ್ಯಾಹ್ನದವರೆಗೆ ಕೋವಿಡ್-19 ನಿಂದ 3,12,500 ರೋಗಿಗಳು ಬಾಧಿತರಾಗಿದ್ದರೆ 13,424 ಜನ ಮರಣ ಹೊಂದಿದ್ದಾರೆ. ಮೂರು ತಿಂಗಳಲ್ಲಿ ಅಂಟಾರ್ಕ್ಟಿಕಾ ಬಿಟ್ಟು ಎಲ್ಲ ಖಂಡಗಳಿಗೂ ಅದು ಹರಡಿದೆ. 167ಕ್ಕಿಂತ ಹೆಚ್ಚು ದೇಶಗಳಲ್ಲಿ ಕೋವಿಡ್ನ ಸೋಂಕಿದೆ. ಈಗದು ಯೂರೋಪ್ ಕೇಂದ್ರಿತ. ಇಟಲಿ, ಇರಾನ್, ಸ್ಪೇನ್ನಲ್ಲಿ ವೇಗವಾಗಿ ಹರಡುತ್ತಿದೆ. ಮರಣ ಪ್ರಮಾಣ 3.4 % ಇದೆ.
ಏನಿದು ಕರೋನಾ, ಕೋವಿಡ್?
ಡಿಸೆಂಬರ್ 2019ರಲ್ಲಿ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಉಸಿರಾಟದ ತೀವ್ರ ತೊಂದರೆಯನ್ನುಂಟುಮಾಡುವ ಹಲವು ರೋಗಿಗಳು ಆಸ್ಪತ್ರೆಗೆ ದಾಖಲಾದರು. ಹೊಸವರ್ಷ ಕೊಡುತ್ತಿರುವ ಕೊಡುಗೆಯೋ ಎಂಬಂತೆ ರೋಗಕಾರಣವಾದ ‘ಹೊಸ ಕರೋನಾ ವೈರಸ್’ ಪತ್ತೆಯಾಯಿತು. ವುಹಾನ್ನ ಕಡಲ ಆಹಾರಪದಾರ್ಥಗಳ ಸಗಟು ಮಾರುಕಟ್ಟೆಯಿಂದ ಅದು ಹರಡಿದೆ ಎನ್ನಲಾಯಿತು.
ಬಾವಲಿಗಳ ದೇಹಲ್ಲಿರುವ ಕರೋನಾ ವೈರಸ್ಗೆ 96% ಸಾಮ್ಯತೆ ಇರುವ ವೈರಾಣು ರೋಗಿಗಳಲ್ಲಿ ಪತ್ತೆಯಾಯಿತು. ಆದರೆ ಮಾರುಕಟ್ಟೆಯಲ್ಲಿ ಬಾವಲಿಯ ಮಾರಾಟ ಇಲ್ಲದಿದ್ದ ಕಾರಣ ಪ್ಯಾಂಗೊಲಿನ್ನಂತಹ ಮಧ್ಯವರ್ತಿ ಪ್ರಾಣಿಯಿಂದ ಅಥವಾ ಮಾರುಕಟ್ಟೆಯಲ್ಲಿದ್ದ ಹಾವಿನ ಮಾಂಸದಿಂದ ಅದು ಬಂದಿರಬಹುದೆಂದು ಶಂಕಿಸಲಾಯಿತು. ಕೊನೆಗೆ ಅದಕ್ಕೆ ಕೋವಿಡ್-19 ಎಂಬ ನಾಮಕರಣ ಮಾಡಿದರು. ಇಲ್ಲಿಯವರೆಗೆ ಗೊತ್ತಿರದ ಹೊಸ ವೈರಸ್ ಆಗಿದ್ದರಿಂದ ‘ನೊವೆಲ್’ ವೈರಸ್ ಎಂದು ಕರೆಸಿಕೊಂಡಿತು.
ಸೂರ್ಯನ ಚಿತ್ರ ಬರೆವಾಗ ಉರೂಟು ಸೊನ್ನೆಯ ಸುತ್ತ ಪ್ರಭೆ ಬರೆಯುತ್ತಿದ್ದೆವು, ನೆನಪಿದೆಯೆ? ಅದು ಸೌರ ಕರೋನಾ. ಅಂಥದೇ ರಚನೆಯನ್ನು ಮೈತುಂಬ ಹೊದ್ದಿರುವಂಥವು ಕರೋನಾ ವೈರಸ್ಗಳು. ಎಲ್ಲ ರೀತಿಯ ಕರೋನಾ ವೈರಸ್ಸುಗಳೂ ಮಾರಣಾಂತಿಕವಲ್ಲ. ಕೆಲವು ನೆಗಡಿ, ಕೆಮ್ಮು, ಸಣ್ಣ ಜ್ವರಕ್ಕೆ ಮುಗಿದುಹೋಗುತ್ತವೆ. ಹೊಸಋತುವಿನ ಆರಂಭದ ದಿನಗಳ ತಂಡಿ, ಸಣ್ಣಜ್ವರ, ಗಂಟಲುರಿ ಕರೋನಾದಿಂದ ಆಗಿರುವ ಸಾಧ್ಯತೆಯೂ ಇದೆ. ಎಲ್ಲೋ ಕೆಲವೊಮ್ಮೆ ದುಷ್ಟತನವನ್ನೆಲ್ಲ ಆವಾಹಿಸಿಕೊಂಡುಬರುವ ಕೇಡಿಗ ತಳಿಗಳು ಹುಟ್ಟಿಬಿಡುತ್ತವೆ. ಈಗ ಚಾಲ್ತಿಯಲ್ಲಿರುವ ಮರ್ಸ್-2019 ಕೋವಿಡ್-19ಅಂತಹವು.
10 ಸಾವಿರ ವರ್ಷಗಳ ಹಿಂದೆ ಭೂಮಿಗೆ ಬಂದ ಕರೋನಾ ವೈರಸ್ ಬಿಸಿರಕ್ತದ ಬೆನ್ನೆಲುಬಿರುವ ಪ್ರಾಣಿಗಳು, ಹಕ್ಕಿ, ಬಾವಲಿಗಳಿಂದ ಮನುಷ್ಯರಿಗೆ ಬಂದಿದ್ದು. ಹಂದಿ, ದನ, ಕೋಳಿ, ನಾಯಿ, ಫೆರೆಟ್, ಕುದುರೆ, ಟರ್ಕಿ, ಬೆಕ್ಕು, ಮೊಲಗಳಲ್ಲಿ ಶೀತ, ಭೇದಿ, ಕರುಳಿನ ತೊಂದರೆಯುಂಟುಮಾಡುವ ಈ ವೈರಸ್ ಮನುಷ್ಯರನ್ನು ಬಾಧಿಸತೊಡಗಿದ್ದು ಇತ್ತೀಚಿನ ಶತಮಾನಗಳಲ್ಲಿ. ನೂರಿನ್ನೂರು ವರ್ಷಗಳ ಹಿಂದೆ ಪ್ರಾಣಿಗಳ ಶ್ವಾಸಕ್ರಿಯೆಯನ್ನು ಬಾಧಿಸುವ ಕರೋನಾ ವೈರಸ್ ಬಂದರೆ, ಇತ್ತೀಚೆಗೆ ಮನುಷ್ಯರನ್ನು ಬಾಧಿಸುವ ಸಾರ್ಸ್, ಮರ್ಸ್ ಕಾಯಿಲೆಯ ವೈರಸ್ ಉತ್ಪತ್ತಿಯಾಗಿವೆ.
ಕೋವಿಡ್ 19 ಬಂದರೆ ಏನಾಗುವುದು?
- ಏನೂ ಆಗದೇ ಇರಬಹುದು. ಈ ಸಾಧ್ಯತೆಯೇ ಹೆಚ್ಚು.
- ಕೆಲವರಿಗೆ ವೈರಸ್ ಸೋಂಕುಂಟಾದ ಹದಿನಾಲ್ಕು ದಿನಗಳೊಳಗೆ ತಂಡಿ, ಗಂಟಲುರಿ, ಸಣ್ಣ ಜ್ವರ, ಭೇದಿ ಶುರುವಾಗುತ್ತದೆ.
- ನಂತರ ಮೂಗು, ಗಂಟಲ ಮೂಲಕ ಶ್ವಾಸಕೋಶ ಪ್ರವೇಶಿಸುವ ವೈರಸ್ ಕೆಲವರಲ್ಲಿ ತೀವ್ರತರದ ನ್ಯುಮೋನಿಯಾ ಉಂಟುಮಾಡುತ್ತದೆ. ಅತಿಜ್ವರ, ಕೆಮ್ಮು, ದಮ್ಮು, ವಾಂತಿ, ತಲೆನೋವು, ಉಸಿರಾಟದ ತೊಂದರೆ ಹೆಚ್ಚುತ್ತದೆ.
- ಅತಿ ತೀವ್ರತರವಾಗುವ ಕೆಲವು ಪ್ರಕರಣಗಳಲ್ಲಿ ವಿವಿಧ ಅಂಗಾಂಗಗಳ ವೈಫಲ್ಯತೆಯಾಗಿ ಮರಣವುಂಟಾಗುತ್ತದೆ.
- ಇದುವರೆಗೆ ರೋಗ ಬಾಧಿಸಿದವರಲ್ಲಿ 60 ವರ್ಷ ಮೇಲ್ಪಟ್ಟವರು, ರೋಗನಿರೋಧಕ ಶಕ್ತಿ ಕುಂಠಿತಗೊಂಡವರು, ಎಳೆಯ ಮಕ್ಕಳೇ ಹೆಚ್ಚಿದ್ದಾರೆ. ಬಡದೇಶಗಳಿಗಿಂತ ಮುಂದುವರೆದ ದೇಶಗಳನ್ನು ಹೆಚ್ಚು ಬಾಧಿಸಿದೆ. ಇಂದು ವಿಶ್ವಪಿಡುಗು (ಪ್ಯಾಂಡೆಮಿಕ್) ಎಂದು ಘೋಷಿಸಲ್ಪಟ್ಟಿದೆ. ಯಾಕೆಂದರೆ ಅದು ಸುಲಭದಲ್ಲಿ ಹರಡುವಂಥದು. ಆದರೆ ಇದರಿಂದಾಗುವ ಸಾವುನೋವುಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಅದಕ್ಕಾಗಿ ಸರ್ಕಾರಗಳು, ಸಂಸ್ಥೆಗಳು, ಸಮಾಜಗಳು ನಾನಾ ಸಲಹೆ, ಸೂಚನೆಯಿತ್ತಿವೆ.
ಹರಡುವಿಕೆ ತಡೆಯಲು ಇರುವ ಕೆಲವು ಸುಲಭ ತಂತ್ರಗಳಿವು
- ಅತಿ ಅನಿವಾರ್ಯವಲ್ಲದ ಎಲ್ಲ ಪ್ರಯಾಣ ರದ್ದುಗೊಳಿಸಿ ಇದ್ದಲ್ಲೇ ಇರುವುದು.
- ಬಟ್ಟೆ ಮೇಲೆ ವೈರಸ್ 6 ರಿಂದ 12 ಗಂಟೆ ಕಾಲ ಬದುಕಬಹುದು. ಈ ವೈರಸ್ ಉಷ್ಣಸೂಕ್ಷ್ಮ. 30-35 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಗೆ ಹಾಗೂ ಸೋಪಿಗೆ ಸತ್ತು ಹೋಗುತ್ತದೆ. ಹಾಗಾಗಿ ಪದೇಪದೇ ಸೋಪು ನೀರಿನಲ್ಲಿ ಕೈ ತೊಳೆಯಬೇಕು. ಸೋಪು ಹಚ್ಚಿ ಬಟ್ಟೆ ತೊಳೆದು ಬಿಸಿಲಲ್ಲಿ ಒಣಗಿಸಬೇಕು.
- ಕೆಮ್ಮುವಾಗ ಸೀನುವಾಗ ಮುಖಗವಸಿನಿಂದ ಅಥವಾ ವಸ್ತ್ರದಿಂದ ಮೂಗುಬಾಯಿ ಮುಚ್ಚಿಕೊಂಡಿರಬೇಕು. ಯಾಕೆಂದರೆ ಒಮ್ಮೆ ಸೀನಿದರೆ ಅಥವಾ ಕೆಮ್ಮಿದರೆ 20,000 ಕಿರುಹನಿಗಳು ವಾತಾವರಣಕ್ಕೆ ಸೇರುತ್ತವೆ. ಪ್ರತಿ ಕಿರುಹನಿಯೂ ನೂರಾರು ವೈರಸ್ ಕಣಗಳನ್ನು ಹೊಂದಿದ್ದು ಎದುರಿರುವವರನ್ನು ಬೇರೆಬೇರೆ ರೀತಿ ತಲುಪುತ್ತವೆ. ಹಾಗಾಗಿ ಜನರ ನಡುವೆ ಇರುವಾಗಲೆಲ್ಲ ಮುಖಗವಸು ತೊಡಬೇಕು.
- ಕೆಮ್ಮುವವರು, ಸೀನುವವರಿಂದ ಮೂರು ಮೀಟರ್ ದೂರ ಇದ್ದರೆ ಒಳ್ಳೆಯದು. ಮೂರು ಮೀಟರ್ (10 ಅಡಿ) ಅಂತರ ಸಿಕ್ಕರಷ್ಟೇ ಕೆಮ್ಮು, ಸೀನಿನ ಹನಿಗಳು ನೆಲ ಮುಟ್ಟುತ್ತವೆ.
- ಬಂದವರನ್ನು ಸ್ವಾಗತಿಸುತ್ತ ಅಪ್ಪಿಕೊಳ್ಳುವುದು, ಕೈಕುಲುಕುವುದು, ಮುತ್ತಿಕ್ಕುವುದು ಮಾಡಬಾರದು. ಸಾಮಾಜಿಕ ಅಂತರವಿಟ್ಟುಕೊಂಡು ದೂರದಿಂದಲೇ ಹಾರೈಸಬೇಕು.
- ಲೋಹದ ಮೇಲ್ಮೈ ಮೇಲೆ ವೈರಸ್ 12 ಗಂಟೆ ಕಾಲ ಜೀವಂತ ಇರಬಲ್ಲದು. ಹಾಗಾಗಿ ಅಂತಹ ಮೇಲ್ಮೈಗಳನ್ನು ಮುಟ್ಟುತ್ತ ಇರುವವರು ಪದೇಪದೇ ಸೋಪು ಹಚ್ಚಿ (ಸ್ಯಾನಿಟೈಸರ್ ಹಚ್ಚಿ ಅಲ್ಲ) ಕೈ ತೊಳೆಯಬೇಕು. ಅಂತಹ ಮೇಲ್ಮೈಗಳನ್ನೂ ಶುಚಿಗೊಳಿಸಬೇಕು.
- ನಮ್ಮ ಮೈಕೈಮೇಲೆ 5-10 ನಿಮಿಷ ವೈರಸ್ ಜೀವಂತ ಉಳಿಯಬಹುದು. ಆದರೆ ಆ 5-10 ನಿಮಿಷದಲ್ಲಿ ನಾವು ಅಪ್ರಜ್ಞಾಪೂರ್ವಕವಾಗಿ ಕಣ್ಣು, ಮೂಗು, ಬಾಯಿ, ಕಿವಿ ಮುಟ್ಟಿ ಅಲ್ಲೆಲ್ಲ ಸೇರಿಸಿರುತ್ತೇವೆ. ಹಾಗಾಗಿ ನಮ್ಮ ಮೈ ಮುಖ ಮುಟ್ಟಿಕೊಳ್ಳುತ್ತಿರುವುದನ್ನು ನಿಲ್ಲಿಸಬೇಕು.
2018ರಲ್ಲಿ ಮಲೇರಿಯಾದಿಂದ ವಿಶ್ವಾದ್ಯಂತ 4 ಲಕ್ಷ ಜನ ಸತ್ತಿದ್ದಾರೆ. ಏಡ್ಸ್ನಿಂದ 7.7 ಲಕ್ಷ ಜನ ಅಸು ನೀಗಿದ್ದಾರೆ. ಪ್ರತಿ ವರ್ಷ 22 ಸಾವಿರ ಜನ ಡೆಂಗಿಗೆ ಬಲಿಯಾಗುತ್ತಾರೆ. ಹುಚ್ಚುನಾಯಿ ಕಡಿತದ ರೇಬಿಸ್ನಿಂದ ವಾರ್ಷಿಕ 55 ಸಾವಿರ ಜನ ಸಾಯುತ್ತಾರೆ. ಒಂದೂವರೆ ಲಕ್ಷ ಜನ ಟೈಫಾಯ್ಡ್ನಿಂದ ಸಾಯುತ್ತಾರೆ. 40 ಸಾವಿರ ಜನ ರಸ್ತೆ ಅಪಘಾತಗಳಿಂದ ಸಾಯುತ್ತಾರೆ. ಹಾಗಿರುವಾಗ ಇದುವರೆಗೆ 13000 ಜನರನ್ನು ಕೊಂದ ಕೋವಿಡ್ ಬಗೆಗೇಕೆ ಇಷ್ಟು ಭೀತಿ?
ಭೀತಿ ಏಕೆಂದರೆ ನಮಗೆ ಅದರ ಬಗ್ಗೆ ಗೊತ್ತಿರುವುದಕ್ಕಿಂತ ಗೊತ್ತಿಲ್ಲದಿರುವುದೇ ಹೆಚ್ಚು. ಅದರ ಕಾರಣ, ನಿಯಂತ್ರಣ, ಚಿಕಿತ್ಸೆ, ಪರಿಣಾಮ, ಲಸಿಕೆ, ಹರಡುವಿಕೆ ಬಗೆಗೆ ಹೆಚ್ಚು ಗೊತ್ತಿಲ್ಲ. ಇನ್ನೂ ಲಸಿಕೆ, ಚುಚ್ಚುಮದ್ದು ಕಂಡುಹಿಡಿದಿಲ್ಲ. ಮನುಷ್ಯರ ಮೇಲೆ ಪ್ರಯೋಗಿಸಬಹುದಾದ ಲಸಿಕೆ ಕಂಡುಹಿಡಿಯಲು ತಿಂಗಳುಗಳೇ ಬೇಕಾಗಬಹುದು. ಬೃಹತ್ ಪ್ರಮಾಣದಲ್ಲಿ ಲಸಿಕೆ ತಯಾರಿಸಲು ವರುಷಗಳೇ ಬೇಕಾಗಬಹುದು. ಹಾಗಾಗಿ ಇದರ ಬಗೆಗೆ ಮುನ್ನೆಚ್ಚರಿಕೆ ವಹಿಸುವುದೇ ಸೂಕ್ತವಾಗಿದೆ.
14ನೇ ಶತಮಾನದ ಬ್ಯುಬೋನಿಕ್ ಪ್ಲೇಗ್ ವಿಶ್ವದ ಕಾಲುಭಾಗ ಜನಸಂಖ್ಯೆಯನ್ನು ಕೊಂದು ಹಾಕಿತ್ತು. 102 ವರ್ಷ ಕೆಳಗೆ, 1918ರಲ್ಲಿ ಬಂದ ಎಚ್೧ಎನ್೧ ಇನ್ಫ್ಲುಯೆಂಜಾ ಕಾಯಿಲೆ ವಿಶ್ವಾದ್ಯಂತ ಮಿಂಚಿನಂತೆ ಹರಡಿ 5 ಕೋಟಿ ಜನರನ್ನು ಬಲಿ ತೆಗೆದುಕೊಂಡಿತ್ತು. (ವಿಶ್ವದ ಮೂರನೆ ಒಂದು ಭಾಗ ಜನರಿಗೆ ಸೋಕಿದ ಆ ವೈರಸ್ ಹಕ್ಕಿಗಳಿಂದ ಮನುಷ್ಯರಿಗೆ ಬಂದಿತ್ತು.) 2009ರ ಇನ್ಫ್ಲುಯೆಂಜಾ ಎಚ್1ಎನ್1 ಕನಿಷ್ಟ 2 ಲಕ್ಷ ಜನರನ್ನು ಬಲಿ ತೆಗೆದುಕೊಂಡಿತು. (ಅದು ಹಂದಿಗಳಿಂದ ಮನುಷ್ಯರಿಗೆ ರವಾನೆಯಾಗಿತ್ತು.) ಇದೂ ಅಂತಹ ಒಂದು ವಿಶ್ವವ್ಯಾಧಿಯಾಗದಿರಲಿ ಎನ್ನುವುದೇ ಈ ಎಲ್ಲ ಮುನ್ನೆಚ್ಚರಿಕೆಗಳ ಉದ್ದೇಶವಾಗಿದೆ.
ಆದ್ದರಿಂದ ಕೋವಿದಕ್ಕೆ ಅಂಜದೇ, ಆತಂಕದಿಂದ ದಿನ ದೂಡದೇ, ಸಮಯ ವ್ಯಯವಾಯಿತೆಂದು ದುಃಖಿಸದೇ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳೋಣ. ಅನಿವಾರ್ಯವಲ್ಲದ, ತುರ್ತು ಅಲ್ಲ ಎಲ್ಲ ತಿರುಗಾಟ, ಕಾರ್ಯಕ್ರಮಗಳನ್ನು ಕೂಡಲೇ ನಿಲ್ಲಿಸೋಣ. ಚಿಕಿತ್ಸೆಯ ಹುಸಿ ಭರವಸೆಗಳಿಗೆ, ಗಾಳಿಸುದ್ದಿಗಳಿಗೆ ಕಿವಿಗೊಡದಿರೋಣ. ಅನಾಯಾಸವಾಗಿ ಸಿಕ್ಕ ಈ ವಿರಾಮ-ರಜೆಯ ಅಮೂಲ್ಯ ಸಮಯವನ್ನು ಕುಟುಂಬದೊಂದಿಗೆ ಕಳೆಯಲಿಕ್ಕೆ, ಆತ್ಮಾವಲೋಕನ ಮಾಡಿಕೊಳ್ಳಲಿಕ್ಕೆ, ನಾಳಿನ ನಡೆಗಳ ಬಗೆಗೆ ಯೋಚಿಸಲಿಕ್ಕೆ ವಿನಿಯೋಗಿಸೋಣ. ನಮ್ಮ ಮುಂದಿನ ತಲೆಮಾರಿಗೆ ಆರೋಗ್ಯವಂತ ನೆಲ, ಸಮಾಜ ಬಿಟ್ಟು ಹೋಗುವುದು ಹೇಗೆಂಬ ಬಗೆಗೆ ಚಿಂತಿಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ5 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ5 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ5 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ5 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



