Connect with us

ದಿನದ ಸುದ್ದಿ

ದಲಿತ ರಾಜಕೀಯ – ದಲಿತ ಚಳವಳಿಯ ಚಿಲ್ಲರೆ ಅಂಗಡಿಗಳ ಜೋರು ವ್ಯಾಪಾರದ ಈ ಕಾಲದಲ್ಲಿ

Published

on

  • ಬಿ.ಎಲ್.ರಾಜು, ಪ್ರಾಧ್ಯಾಪಕರು, ಸಾಗರ

ನಾವು ನಮಗೆ ಕೇಳಿಕೊಳ್ಳಲೇಬೇಕಾದ ಕೆಲವು ಪ್ರಶ್ನೆಗಳು ನನ್ನನ್ನು ಕಾಡುತ್ತಿವೆ. ಭೂಮಿ, ಬಂಡವಾಳ ಮತ್ತು ರಾಜಕೀಯಾಧಿಕಾರಗಳನ್ನು ಮೇಲ್ಜಾತಿಗಳ ಶಾಶ್ವತ ಕಬ್ಜಾದಲ್ಲಿರಿಸಿ ಸೃಷ್ಟಿಸಲಾಗಿರುವಂತದ್ದು ಜಾತಿವ್ಯವಸ್ಥೆ. ಇದೊಂದು ಶುದ್ದ ರಾಜಕೀಯ- ಆರ್ಥಿಕ ಸಂಚು. ಆದರೆ ಅದು ಕಾರ್ಯಾಚರಣೆ ಮಾಡುವುದು ಸಮಾಜದಲ್ಲಿ. ಸಾಮಾಜಿಕ ಕ್ರಿಯೆಗಳ ಮೂಲಕ ಆ ರಾಜಕೀಯ ಆರ್ಥಿಕ ವ್ಯವಸ್ಥೆಗಳು ತಮ್ಮ ಶಕ್ತಿ- ಸಂಪನ್ಮೂಲಗಳನ್ನು ಕೆಳಜಾತಿಗಳಿಗೆ ನಿರಾಕರಿಸುತ್ತವೆ. ಅದರ ಭಾಗವಾಗಿ ಮಡಿ, ಮೈಲಿಗೆ, ಮೇಲು ಕೀಳು, ಶುದ್ಧ ಅಶುದ್ದ ಪರಿಕಲ್ಪನೆಗಳನ್ನು ಗ್ರಹಿಸಬೇಕು.

ಆ ರಾಜಕೀಯ ಆರ್ಥಿಕ ಶಕ್ತಿ ಸಂಪನ್ಮೂಲಗಳ ಮೇಲೆ ದಲಿತರು ಹಿಡಿತ ಸಾಧಿಸಲು ಎಲ್ಲಿಯವರೆಗೆ ಸಾಧ್ಯವಿಲ್ಲವೊ ಅಲ್ಲಿಯವರೆಗೆ ಜಾತಿ ತಾರತಮ್ಯಗಳು ಸಾಯುವುದಿಲ್ಲ. ಜಾತಿ ವ್ಯವಸ್ಥೆ ನಿರಂತರವಾಗಿ ಮುಂದುವರೆಯುತ್ತದೆ.

ಭೂಮಿ ಬಂಡವಾಳ ರಾಜಕೀಯಾಧಿಕಾರಗಳ ನಿರಂತರ ನಿರಾಕರಣೆಗೆ ಒಳಗಾದ ಈ ದೇಶದ ಸಾವಿರಾರು ತಬ್ಬಲಿ ಕೆಳಜಾತಿ ಸಮುದಾಯಗಳಿಗೆ ಬಿಡುಗಡೆಯ ದಾರಿಯನ್ನು ತೋರಿದ್ದು ಬಾಬಾಸಾಹೇಬರು. ಅವರು ತಮ್ಮ ಚಿಂತನೆ, ಕ್ರಿಯೆ ಮತ್ತು ಹೋರಾಟಗಳ ಮೂಲಕ ರೂಢಿಸಿಕೊಟ್ಟ ಜ್ಞಾನಮಾರ್ಗವೇ ದಲಿತರ ಬಿಡುಗಡೆಯ ದಾರಿ. ಇದೇ ದಾರಿಯಲ್ಲಿ ಹೋಗಿದ್ದರೆ ತಳಸಮುದಾಯಗಳು 21 ನೇ ಶತಮಾನದ ಸವಾಲುಗಳನ್ನೆದುರಿಸಲು ಸಜ್ಜಾದ ಜ್ಞಾನಸಮುದಾಯಗಳಾಗಿ ಮೇಲೇಳುವ ಎಲ್ಲಾ ಅವಕಾಶಗಳಿದ್ದವು.

ಆದರೆ ಜ್ಞಾನ ಮಾರ್ಗವನ್ನು ಬಲವಾಗಿ ಅಪ್ಪಿಕೊಂಡು ಮುನ್ನಡೆಯಬೇಕಿದ್ದ ದಲಿತ ಸಮುದಾಯಗಳು ಆತ್ಮವಂಚನೆಯ ವಿರಾಟ್ ಕಾಲಘಟ್ಟದಲ್ಲಿವೆ. ಸವಲತ್ತುಗಳನ್ನ ಪಡೆದುಕೊಂಡ ದಲಿತರಲ್ಲಿನ ಮಧ್ಯಮ ಮತ್ತು ಮೇಲ್ವರ್ಗಗಳು, ಜಾತಿವ್ಯವಸ್ಥೆಯಲ್ಲಿರುವ ಮೇಲ್ಜಾತಿಗಳ ಎಲ್ಲಾ ವ್ಯಸನಗಳನ್ನು ತಮ್ಮದನ್ನಾಗಿಸಿಕೊಂಡಿವೆ. ಆ ವ್ಯಸನಗಳನ್ನೇ ತಮ್ಮ ಶ್ರೇಷ್ಟತೆಯ ಗುರುತುಗಳನ್ನಾಗಿ ಮಾಡಿಕೊಂಡಿವೆ. ಈ ಎರಡೂ ವರ್ಗಗಳಿಗೆ ಬಾಬಾಸಾಹೇಬರು ಕಟ್ಟಿಕೊಟ್ಟ ಮೌಲ್ಯಗಳಾಗಲಿ, ತೋರಿದ ಜ್ಞಾನಮಾರ್ಗವಾಗಲಿ, ಆಧ್ಯಾತ್ಮದ ದಾರಿಯಾಗಲಿ ಬೇಕಿಲ್ಲದ ಸ್ಥಿತಿಗೆ ಬಂದು ನಿಂತಿವೆ. ತಮ್ಮ ಶೋಷಕ ವ್ಯವಸ್ಥೆಯು ಕಟ್ಟಿಕೊಟ್ಟ ಮನುಪ್ರಣೀತ ಆಚರಣೆ, ಸಂಪ್ರದಾಯಗಳಲ್ಲೆ ಸುಖಿಸುತ್ತಿವೆ. ಇದೊಂತರ ಸ್ಟಾಕ್ ಹೋಂ ಸಿಂಡ್ರೋಪಮ್. ಶೋಷಕನನ್ನೆ ಮೆಚ್ಚಿ ಅನುಕರಿಸುವುದು.

ಇದೇ ದಲಿತ ಮಧ್ಯಮ, ಮೇಲ್ವರ್ಗಗಳು ತಮ್ಮ ಅಹಮ್ಮಿಗೆ, ಅನುಕೂಲಕ್ಕೆ, ಸವಲತ್ತುಗಳಿಗೆ ಏಟುಬಿದ್ದಾಗ ಮಾತ್ರ ಅಂಬೇಡ್ಕರರ ಸಂವಿಧಾನದ ಆಸರೆ ಪಡೆಯುತ್ತವೆ.

ಸಂಖ್ಯೆಯಲ್ಲಿ ಬಹುಸಂಖ್ಯಾತರಾದ ದಲಿತರ ಕೆಳ/ಬಡವರ್ಗ ತನ್ನ ಅಸ್ಥಿತ್ವಕ್ಕಾಗಿ ಅನ್ನ, ಸೂರು, ಬಟ್ಟೆಗಳಂತ ಪ್ರಾಥಮಿಕ ಅವಶ್ಯಕತೆಗಳಿಗಾಗಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳ ನಂತರವೂ ಹೆಣಗಾಡುತ್ತಲೇ ಇವೆ. ಈಗಲೂ ಅವು ಅತ್ಯಂತ ಹೀನಾಯ & ಅನಾಥ ಸ್ಥಿತಿಯಲ್ಲಿವೆ.

ಭಾರತದ ಮಟ್ಟಿಗೆ ತುಂಬಾ ಅತ್ಯಂತ ವೈಚಾರಿಕ ಮಾನವೀಯತೆಯ ನೆಲೆಗಟ್ಟನ್ನ ಪ್ರತಿಪಾದಿಸಿ, ಪ್ರಜಾಪ್ರಭುತ್ವದ ಆತ್ಯಂತಿಕ ಆದರ್ಶಗಳನ್ನು ಸಂವಿಧಾನಕ್ಕೆ ಅಳವಡಿಸಿದ ಬಾಬಾಸಾಹೇಬರ ಚಿಂತನಾಧಾರೆ ಭಾರತೀಯರಿಗೆ ಧಾರಾಳವಾಗಿ ಹರಿದುಬಂದದ್ದು ಅವರ ಮಹಾಪರಿನಿಬ್ಬಾಣದ ನಂತರವೆ.. ಅದರಲ್ಲೂ ಎಪ್ಪತ್ತರ ದಶಕದಲ್ಲಿ.
ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಪ್ರೊ. ಬಿ. ಕೃಷ್ಣಪ್ಪನವರು ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕಿದ ನಂತರ.

ಪ್ರೊ. ಬಿ.ಕೆ.ಯವರು ಬಾಬಾಸಾಹೇಬರ ಚಿಂತನೆಯನ್ನು ತನ್ನ ಭಾಷಣ, ಹಾಡು, ಹೋರಾಟ, ಪ್ರತಿಭಟನೆಗಳ ಭಾಗವಾಗಿಸಿಕೊಂಡು ರಾಜ್ಯದ ಪ್ರತಿ ದಲಿತರ ಕೇರಿಗೆ ಕೊಂಡೊಯ್ದರು. ಸಾವಿರಾರು ವರ್ಷ ಅಸ್ಪೃಶ್ಯತೆಯ ಕಳಂಕ ಹೊತ್ತು ಗುಲಾಮಗಿರಿಯಲ್ಲೇ ಉಸಿರಾಡಿಕೊಂಡಿದ್ದ ಜನರ ನರನಾಡಿಗಳಿಗೆ ಬಾಬಾಸಾಹೇಬರ ಚಿಂತನೆಯನ್ನು ತುಂಬಿದರು, ಆ ಮೂಲಕ ರಾಜಕೀಯ ಪ್ರಜ್ಞೆ ಮತ್ತು ಪ್ರತಿಭಟನೆಯ ಕೆಚ್ಚನ್ನು ಜಾಗೃತಗೊಳಿಸಿದರು.

ದಲಿತರ ನೋವಿಗಷ್ಟೇ ಅಲ್ಲ, ಹಿಂದುಳಿದ ವರ್ಗಗಳ ಪಾಲಿಗೂ ಭರವಸೆ ತುಂಬಿದವರು ಪ್ರೊ. ಬಿ.ಕೆ.
ಆ ಹೊತ್ತಿಗೆ ಎಚ್ಚೆತ್ತ ದಲಿತ ಅಕ್ಷರಸ್ಥ ತಲೆಮಾರು ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ಸಾಗರಕ್ಕೆ ಹರಿದು ಬಂತು. ಅವರ ಅದಮ್ಯ ಹೋರಾಟದ ಕುಲುಮೆಯಲ್ಲಿ ಕವಿಗಳಾಗಿ, ಹೋರಾಟಗಾರರಾಗಿ, ಸಾಹಿತಿಗಳಾಗಿ, ಯುವ ಮುಂದಾಳುಗಳಾಗಿ ಮೇಲೆದ್ದರು. ಅಷ್ಟರಮಟ್ಟಿಗೆ ಸ್ಥಗಿತಕೊಂಡಿದ್ದ ರಾಜ್ಯದ ರಾಜಕಾರಣವನ್ನು ಬೆಚ್ಚಿಬೀಳಿಸಿದ್ದು, ಫ್ಯೂಡಲ್ ಶಕ್ತಿಗಳನ್ನು ಬಗ್ಗಿಸಿದ್ದ ಪ್ರೊ. ಬಿ. ಕೃಷ್ಣಪ್ಪ ದಲಿತ ಚಳವಳಿ ಕರ್ನಾಟಕದ ಚೆರಿತ್ರೆಯನ್ನು ಇನ್ನೊಂದು ಮಗ್ಗುಲಿಗೆ ಹೊರಳಿಸಿದರು.

ಬಿ. ಕೆ. ಯವರ ನಂತರ ಬಂದ ದಲಿತ ರಾಜಕಾರಣಿಗಳು ಮತ್ತು ಹೋರಾಟದ ದಾರಿಗೆ ನುಸುಳಿದ ಅವಕಾಶವಾದಿಗಳಿಬ್ಬರೂ ಸೇರಿ ಪ್ರೊ. ಬಿ.ಕೆ.ಕಟ್ಟಿದ ದಲಿತ ಚಳವಳಿಯನ್ನು ಒಳಜಾತಿಗಳ ಆಧಾರದ ಮೇಲೆ ಹತ್ತಾರು ಬಣಗಳಾಗಿ ಒಡೆದರು. ಅವರ ವಯಕ್ತಿಕ ದರ್ದುಗಳ ನಿವಾರಣೆಗೆ ಚಳವಳಿಯನ್ನು ಬಲಿಕೊಟ್ಟರು. ದಲಿತರ ಮೇಲಿ ದೌರ್ಜನ್ಯಗಳು ಮಿತಿಮೀರಿದ ಹೊತ್ತಲ್ಲೆ ಈ ದಲಿತ ರಾಜಕಾರಣ-ಚಳವಳಿಯ (ನ)ಕಲಿಗಳು ತಮ್ಮ ಹೊಟ್ಟೆ ತುಂಬಿಸಿಕೊಂಡರು.

ಪ್ರೊ. ಬಿ. ಕೆ. ಯವರೇ ಕೊನೆ..
ಆನಂತರ ರಾಜ್ಯದ ಯಾವ ಮೂಲೆಯಿಂದಲಾದರೂ ಸರಿ, ಅಖಂಡ ದಲಿತ ಸಮುದಾಯದ ಏಳಿಗೆಗೆ ಬದ್ಧನಾದ ಒಬ್ಬನೇ ಒಬ್ಬ ರಾಜಕೀಯ ನಾಯಕನಾಗಲಿ, ಅಖಂಡ ದಲಿತ ಚಳವಳಿಗೆ ಕಟಿಬದ್ಧನಾದ ಒಬ್ಬ ಚಳವಳಿಗಾರನಾಗಲಿ ಈ ಹೊತ್ತಿಗೂ ಹುಟ್ಟಿಬರಲಿಲ್ಲ. ದಲಿತ ರಾಜಕಾರಣ ಮತ್ತು ದಲಿತ ಚಳವಳಿಗಳು ಈಗ ಕೇವಲ ಒಳಜಾತಿಗಳ ಮೇಲಾಟಗಳು ಮಾತ್ರ. ಅಂಬೇಡ್ಕರರು ಕೇವಲ ಒಂದು ಫೋಟೊ ಆಗುವುದು ಮತ್ತು ಬಿ.ಕೆ.ಯವರನ್ನು ಒಂದು ಹೆಸರನ್ನಾಗಿಸಿ ಮರೆವಿಗೆ ಸರಿಸುವುದು ಅವರ ಹಿಡನ್ ಅಜೆಂಡಾ.

ಇದನ್ನು ಸರಳವಾಗಿ ರೂಪಕಾತ್ಮಕವಾಗಿ ಹೇಳುವುದಾದರೆ ದಲಿತರ ಬೀದಿಗಳಲ್ಲಿ ರಾಜಕೀಯ ಮತ್ತು ಚಳವಳಿಗಳ ಚಿಲ್ಲರೆ ಅಂಗಡಿಗಳು ತಲೆ ಎತ್ತಿವೆ. ಒಂದೊಂದು ಅಂಗಡಿಯಲ್ಲಿ ಒಂದೊಂದು ವ್ಯಾಪಾರ. ಲಾಭವೇ ವ್ಯಾಪಾರದ ಅಂತಿಮ ಗುರಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending