ದಿನದ ಸುದ್ದಿ
ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ನಾಲ್ಕು ವರ್ಷ : 1059.92 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಪ್ರಗತಿ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್ಸಿಟಿ ಯೋಜನೆ ಪ್ರಾರಂಭವಾದಾಗಿನಿಂದ ಇಂದಿನವರೆಗೆ ನಗರದಲ್ಲಿ ರೂ.1059.92 ಕೋಟಿ ವೆಚ್ಚದಲ್ಲಿ 74 ಕಾಮಗಾರಿಗಳನ್ನು ರೂಪಿಸಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ದಾವಣಗೆರೆ ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಶರೀಫ್ ತಿಳಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ಸಿಟಿ ಯೋಜನೆಗೆ ಆಯ್ಕೆಯಾಗಿ ಜೂ.25 ಕ್ಕೆ 4 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ಸ್ಮಾರ್ಟ್ಸಿಟಿ ಲಿ, ಕಚೇರಿಯಲ್ಲಿ ಮಂಗಳವಾರ ಕರೆಯಲಾಗಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೂ.5.88 ಕೋಟಿಯಲ್ಲಿ 12 ಕಾಮಗಾರಿಗಳು ಮುಕ್ತಾಯಗೊಂಡಿವೆ. ರೂ. 549.06 ಕೋಟಿಯಲ್ಲಿ 41 ಕಾಮಗಾರಿಗಳು ಪ್ರಗತಿಯಲ್ಲಿವೆ. ರೂ.161.73 ಕೋಟಿಯಲ್ಲಿ 09 ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದು, ಡಿ.ಪಿ.ಆರ್ ಹಂತದಲ್ಲಿ ರೂ.353.25 ಕೋಟಿ ವೆಚ್ಚದಲ್ಲಿ 12 ಕಾಮಗಾರಿಗಳಿವೆ.ದಾವಣಗೆರೆ ಜಿಲ್ಲೆಯು ಸ್ಮಾರ್ಟ್ಸಿಟಿ ಯೋಜನೆಯಡಿ ಮೊದಲ ಹಂತದಲ್ಲೇ ಆಯ್ಕೆಯಾಗಿದ್ದು, ಈ ಯೋಜನೆಯಲ್ಲಿ ಎಬಿಡಿ ಹಾಗೂ ಪಾನ್ಸಿಟಿ ಎಂದು ಎರಡು ವಿಭಾಗ ಮಾಡಿ ನಗರದಾದ್ಯಂತ ಹಲವಾರು ಕಾಮಗಾರಿಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದರು.
ಮೊದಲ ಹಂತದಲ್ಲಿ ರೂ.1.39 ಕೋಟಿಯಲ್ಲಿ 9 ಪಾರ್ಕ್ಗಳು ಹಾಗೂ ಎರಡನೇ ಹಂತದಲ್ಲಿ 37 ಪಾರ್ಕ್ಗಳನ್ನು ಆಯ್ಕೆ ಮಾಡಿಕೊಂಡು ಪಾರ್ಕ್ನಲ್ಲಿ ಇ-ಶೌಚಾಲಯಗಳನ್ನು ಒಂದು ಯುರೋಪಿಯನ್ ಶೈಲಿ ಹಾಗೂ ಇನ್ನೊಂದು ಭಾರತೀಯ ಶೈಲಿಯಲ್ಲಿ ನಿರ್ಮಿಸಲಾಗುತ್ತಿದೆ. 1 ರಿಂದ 10 ರ ವರೆಗಿನ ನಾಣ್ಯ ಹಾಕಿದರೆ ಇ-ಶೌಚಾಲಯ ಬಾಗಿಲು ತೆರಯುತ್ತದೆ. ಪ್ರತಿ 5 ಜನರ ಉಪಯೋಗದ ನಂತರ ಸ್ವಯಂ ಚಾಲಿತವಾಗಿ ಒಳಗಡೆ ಫ್ಲೋರ್ನ್ನು ಸ್ವಚ್ಛಗೊಳಿಸುತ್ತದೆ ಎಂದರು.
ರೂ. 3.58 ಕೋಟಿಯಲ್ಲಿ ನಗರದ 52 ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಸ್ಮಾರ್ಟ್ ಬಸ್ ಶೆಲ್ಟರ್ಗಳನ್ನು ನಿರ್ಮಿಸಲಾಗುತ್ತಿದ್ದು, ಎಲ್ಲಾ ಬಸ್ಗಳಿಗೆ ಜಿಪಿಎಸ್ ಅಳವಡಿಸಿ ಬಸ್ ಬರುವ ಸಮಯನ್ನು ಪ್ರದರ್ಶಿಸುವಂತೆ ಎಲ್ಇಡಿ ಫಲಕಗಳನ್ನು ಅಳವಡಿಸಲಾಗುವುದು. ರೂ. 25.41 ಕೋಟಿ ವೆಚ್ಚದಲ್ಲಿ ಹಳೇ ಬಸ್ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿಯನ್ನು ರೂಪಿಸಲಾಗಿದ್ದು, 21420.74 ಚ.ಮೀ. ವಿಸ್ತೀರ್ಣದಲ್ಲಿ ಕೆಳ ಮಹಡಿಯಲ್ಲಿ 92 ನಾಲ್ಕು ಚಕ್ರದ ವಾಹನ ಮತ್ತು 122 ದ್ವಿಚಕ್ರ ವಾಹನ ನಿಲುಗಡೆ ಹಾಗೂ ನೆಲ ಮಹಡಿಯಲ್ಲಿ 12 ಬಸ್ ನಿಲ್ಲುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ನಿಲ್ದಾಣದಲ್ಲಿ ಅಂಗಡಿಗಳು, ನಿರ್ವಹಣಾ ಕೊಠಡಿ, ಶೌಚಾಲಯ, ಸ್ನಾನದ ಕೊಠಡಿ, ರ್ಯಾಂಪ್, ಪ್ರಯಾಣಿಕರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರು, ಲಿಫ್ಟ್, ಬಸ್ ಸಂಚಾರದ ಫಲಕಗಳು ಹಾಗೂ ಭದ್ರತೆಗಾಗಿ ಸಿ.ಸಿ ಟಿವಿ ಅಳವಡಿಸಲಾಗುವುದು ಎಂದರು.
ಬೈಸಿಕಲ್ ಷೇರಿಂಗ್ ಸಿಸ್ಟಮ್ ಹಾಗೂ ಇ-ರಿಕ್ಷಾ: ನಗರದಲ್ಲಿ ಸಾರ್ವಜನಿಕರಿಗೆ ಪರಿಸರ ಸ್ನೇಹಿ ಮತ್ತು ಸುರಕ್ಷತೆ ಸಂಚಾರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರೂ.9.90 ಕೋಟಿಗಳಲ್ಲಿ ಸಾರ್ವಜನಿಕ ಬೈಸಿಕಲ್ ಷೇರಿಂಗ್ ಸಿಸ್ಟಮ್ ಅಳವಡಿಸಲಾಗುವುದು. 20 ಡಾಕಿಂಗ್ ಸ್ಟೇಷನ್ಸ್ಗಳಿದ್ದು, 100 ವಿದ್ಯುತ್ ಚಾಲಿತ ಮತ್ತು 100 ಸಾಮಾನ್ಯ ಬೈಸಿಕಲ್ ವ್ಯವಸ್ಥೆ ಮಾಡಲಾಗುವುದು. ಈ ಕಾಮಗಾರಿಗೆ ಈಗಾಗಲೇ ಗುತ್ತಿಗೆ ನೀಡಲಾಗಿದ್ದು, ಮುಂದಿನ 15 ರಿಂದ 20 ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ಪರಿಸರ ಮಾಲಿನ್ಯ ಕಡಿಮೆ ಮಾಡುವ ದೃಷ್ಠಿಯಿಂದ ಹಾಗೂ ಉದ್ಯೋಗ ನೀಡುವ ಸಲುವಾಗಿ ಆಧುನಿಕ ತಂತ್ರಜ್ಞಾನವುಳ್ಳ ಬ್ಯಾಟರಿ ಚಾಲಿತ 80 ಆಟೋಗಳನ್ನು ಸ್ಥಳೀಯರಿಗೆ (60:40) ಸಬ್ಸಿಡಿ ಆಧಾರದಲ್ಲಿ ನೀಡಲಾಗುವುದು. ಈಗಾಗಲೇ ನಾಲ್ವರು ಮುಂದೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಟೋಗಳನ್ನು ವಿತರಿಸಲಾಗುವುದು. ಮಹಿಳೆಯರಿಗೆ ಶೇ.75 ರಷ್ಟು ಸಬ್ಸಿಯಡಿಯಲ್ಲಿ ನೀಡಲಿದ್ದೇವೆ ಎಂದರು.
ಜಿಲ್ಲೆಯ ಸಾರ್ವಜನಿಕರ ಹಿತದೃಷ್ಠಿಯಿಂದ ರೂ.2.85 ಕೋಟಿಗಳಲ್ಲಿ ವಿದ್ಯುತ್ ಚಿತಾಗಾರವನ್ನು ನಿರ್ಮಿಸಲು ಚಿಂತಿಸಲಾಗಿದ್ದು, ಈ ಕುರಿತು ಸರ್ವೆ ಕಾರ್ಯ ನಡೆಯುತ್ತಿದೆ. ನಗರದಲ್ಲಿ ಜನರ ಆರೋಗ್ಯಾಭಿವೃದ್ಧಿ ಮತ್ತು ಮಕ್ಕಳ ಆಟಕ್ಕೆ ಅನುಕೂಲವಾಗುವಂತೆ ವ್ಯಾಯಾಮ ಶಾಲೆ ಮತ್ತು ಮಕ್ಕಳ ಆಟಿಕೆ ಉಪಕರಣಗಳನ್ನು ನಗರದ 16 ಉದ್ಯಾನವನಗಳಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಯಲ್ಲಿ ಬೈಸಿಕಲ್, ಸೀಟೆಡ್ ಚೆಸ್ಟ್ ಪ್ರಸ್, ಎಚ್ಡಿ ಸಿಟ್ ಆಫ್, ಎಚ್.ಡಿ. ಸ್ಕಾಟ್ ಪುಶಿಂಗ್, ಹೆಲ್ತ್ ವಾಕರ್ ಸೇರಿದಂತೆ ಮಕ್ಕಳ ಆಟಿಕೆ ಉಪಕರಣಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ತುಂಗಾಭದ್ರ ನದಿಗೆ ಅಣೆಕಟ್ಟು ನಿರ್ಮಾಣ: ದಾವಣಗೆರೆ ನಗರಕ್ಕೆ 24*7 ಕುಡಿಯುವ ನೀರು ಒದಗಿಸಲು ತುಂಗಾಭದ್ರ ನದಿಗೆ 550 ಮೀ ಉದ್ದದ ಹಾಗೂ 2.5 ಮೀ ಅಗಲದ ಅಣೆಕಟ್ಟನ್ನು ರಾಜನಹಳ್ಳಿ ಜಾಕ್ವಲ್ ಬಳಿ ರೂ.76.11 ಕೋಟಿಯಲ್ಲಿ ನಿರ್ಮಿಸಲಾಗುವುದು. ಈ ಅಣೆಕಟ್ಟಿನಲ್ಲಿ 0.2 ಟಿಎಂಸಿ ನೀರು ಶೇಖರಣೆ ಮತ್ತು 50+5 ಸ್ವಯಂ ಚಾಲಿತ ಗೇಟ್ ನಿರ್ಮಾಣ ಮಾಡಲಾಗುವುದು. ಈ ಕಾಮಗಾರಿಯನ್ನು ಒಂದರೆಡು ತಿಂಗಳಿನಲ್ಲಿ ಪಾರಂಭಿಸಲಾಗುವುದು ಎಂದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ರೂ.120 ಕೋಟಿಯಲ್ಲಿ ಅಭಿವೃದ್ಧಿಪಡಿಸಿ ಅದರಲ್ಲಿ ಮೂರು ಘಟಕಗಾಳಾಗಿ ಬಸ್ ಟರ್ಮಿನಲ್, ಕೆಎಸ್ಆರಟಿಸಿ ಕಚೇರಿ ಹಾಗೂ ಶಾಪಿಂಗ್ ಮಾಲ್ ಮತ್ತು ಚಿತ್ರ ಮಂದಿರ ನಿರ್ಮಿಸಲಾಗುವುದು. ಒಂದು ನೆಲಮಹಡಿ ಸೇರಿದಂತೆ 4 ಮಹಡಿಯ ಕಟ್ಟಡವನ್ನು ನಿರ್ಮಿಸಲಾಗುವುದು. 45 ಬಸ್ಗಳ ನಿಲುಗಡೆ ಹಾಗೂ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಿ ಭದ್ರತೆಯ ದೃಷ್ಟಿಯಿಂದ ಸಿ,ಸಿ.ಕ್ಯಾಮಾರಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.
ನಗರದ ಎಂಟು ಸರ್ಕಾರಿ ಕಚೇರಿಗಳ ಮೇಲ್ಚಾವಣಿಯಲ್ಲಿ ರೂ.2.21 ಕೋಟಿ ವೆಚ್ಚದಲ್ಲಿ ಸೋಲಾರ್ ಪ್ಯಾನಲ್ಸ್ ಅಳವಡಿಕೆ ಮಾಡಿ ಸೌರ ವಿದ್ಯುಚ್ಛಕ್ತಿಯನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಉಳಿತಾಯ ಮತ್ತು ಬೆಸ್ಕಾಂ ಇಲಾಖೆಗೆ ಪ್ರತಿ ಯೂನಿಟ್ಗೆ ಪಾವತಿಸುತ್ತಿದ್ದ ರೂ. 8.50 ಬದಲಿಗೆ ಪ್ರತಿ ಯೂನಿಟ್ಗೆ ರೂ. 5.90 ಗಳನ್ನು 25 ವರ್ಷಗಳವರೆಗೆ ಪಾವತಿಸಲು ನಿಗದಿಯಾಗಿರುತ್ತದೆ. ಹೆಚ್ಚುವರಿಯಾಗಿರುವ ವಿದ್ಯುಚ್ಛಕ್ತಿಯನ್ನು ಬೆಸ್ಕಾಂ ಇಲಾಖೆಗೆ ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಅಪರಾಧ ನಿಯಂತ್ರಿಸಲು, ಸ್ವಚ್ಚತೆ ಬಗ್ಗೆ ಮಾಹಿತಿ ಪಡೆಯಲು ಮತ್ತು ಸುರಕ್ಷತೆಯ ದೃಷ್ಠಿಯಿಂದ ಸಿ.ಸಿ ಟಿವಿ ಕ್ಯಾಮರಾಗಳನ್ನು ರೂ.74.84 ಕೋಟಿ ವೆಚ್ಚದಲ್ಲಿ ಅಳವಡಿಸಲಾಗುವುದು. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್, ಇಂಟಲಿಜೆಂಟ್ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿ, ಈ ಯೋಜನೆಯಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ನಿಂದ ಸಾರ್ವಜನಿಕರಿಗೆ ಸಾರಿಗೆ ಮತ್ತು ತುರ್ತು ಸೇವೆಗಳ ಮಾಹಿತಿ ನೀಡುವುದು, ಆನ್ಲೈನ್ ಅಪ್ಲಿಕೇಷನ್ಗಳನ್ನು ನಿಯಂತ್ರಣದಲ್ಲಿಡುವ ವ್ಯವಸ್ಥೆ ಕಲ್ಪಿಸುವುದು, ವಾಯು ಮಾಲಿನ್ಯದ ಮಾಹಿತಿಗಾಗಿ ಸೆನ್ಸಾರ್ಗಳನ್ನು ಅಳವಡಿಸುವುದು ಸೇರಿದಂತೆ ಇ-ಕಲಿಕಾ ಕೇಂದ್ರದ ಮೂಲಕ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು. ಇ-ಆಡಳಿತ ಕಾರ್ಯಕ್ರಮದಲ್ಲಿ ಕಿಯೋಸ್ಕ್, ಒಂದು ನಗರ ಒಂದು ಸಂಖ್ಯೆ ಮತ್ತು ಇತರೆ ಸಾರ್ವಜನಿಕ ಸೇವೆಗಳನ್ನು ರೂಪಿಸಲಾಗಿದೆ ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ನಾಗರಿಕರಿಗೆ ಒದಗಿಸಲಾಗುವುದು ಎಂದರು.
ನಗರದ 10 ಸರ್ಕಾರಿ ಕಚೇರಿಗಳ ಆವರಣಗಳಲ್ಲಿ 2.42 ಕೋಟಿ ವೆಚ್ಚದಲ್ಲಿ ಡಿಸ್ಪ್ಲೇ ಬೋರ್ಡ್ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿ, ಹವಾಮಾನ ವರದಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ಹಲವು ಮಾಹಿತಿಗಳನ್ನು ನೇರ ಪ್ರಸಾರ ಮತ್ತು 19 ಸರ್ಕಾರಿ ಶಾಲೆಗಳಲ್ಲಿ 2.57 ಕೋಟಿ ವೆಚ್ಚದಲ್ಲಿ ಗಣಕಯಂತ್ರದ ಲ್ಯಾಬ್ಗಳನ್ನು ಒದಗಿಸಿ ಡಿಜಿಟಲ್ ತರಗತಿಗಳನ್ನು ಸ್ಥಾಪಿಸಲಾಗುವುದು ಎಂದರು.
ನಗರದಲ್ಲಿ ನಾಲ್ಕು ರಸ್ತೆಗಳನ್ನು ಸ್ಮಾರ್ಟ್ ರಸ್ತೆಗಳನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು, ಕಾಮಗಾರಿಯು ಪೂರ್ಣಗೊಳ್ಳುವ ಹಂತದಲ್ಲಿವೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಈ ರಸ್ತೆಗಳಲ್ಲಿ ಮಳೆ ನೀರು ಪೈಪ್ ಚರಂಡಿ, ವಿದ್ಯುತ್, ದೂರವಾಣಿ ಯುಜಿಡಿ, ಗ್ಯಾಸ್ ನೀರಿನ ಪೈಪ್ಲೈನ್ಗಳನ್ನು ಭೂಗತವಾಗಿ ಸ್ಥಾಪಿಸಲಾಗುವುದು. ರಸ್ತೆಗಳ ಬದಿಯಲ್ಲಿ ಸುಂದರವಾದ ಮರಗಳನ್ನು ನೆಡುವುದರಿಂದ ಮತ್ತು ಎಲ್.ಇ.ಡಿ ಬೀದಿ ದೀಪಗಳನ್ನು ಅಳವಡಿಸುವುದರಿಂದ ಈ ರಸ್ತೆಗಳು ಸುಂದರವಾಗಿ ಕಾಣುತ್ತವೆ ಎಂದು ತಿಳಿಸಿದರು.
ಸ್ಮಾರ್ಟ್ ಸಿಟಿ ಮುಖ್ಯ ಅಭಿಯಂತರ ಸತೀಶ್, ಮುಖ್ಯ ಹಣಕಾಸು ಅಧಿಕಾರಿ ಪ್ರಭಾವತಿ, ಟೀಮ್ ಲೀಡರ್ ಶ್ರೀನಾಥ್ರೆಡ್ಡಿ, ಜನರಲ್ ಮ್ಯಾನೇಜರ್ ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತರ ಗುರಪಾದಯ್ಯ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.
ಹೇಳಿಕೆ
- ಸ್ಮಾರ್ಟ್ಸಿಟಿ ಯೋಜನೆಯಲ್ಲಿ ನಗರದ ಹೊರ ವಲಯದಲ್ಲಿರುವ ಗಾಜಿನ ಮನೆಗೆ ಶೌಚಾಲಯ ನಿರ್ಮಾಣ, ರೂ. 5 ಕೋಟಿ ವೆಚ್ಚದಲ್ಲಿ ಆಕರ್ಷಕ ಅಕ್ವೇರಿಯಂ, ಲೇಸರ್ ಶೋ, ಪ್ಲಾಂಟೇನ್ ಹಾಗೂ ಟಂಗಲ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ನಗರದಲ್ಲಿ ಪೊಲೀಸರ ನೈಟ್ ಬೀಟ್ ಬದಲಾಗಿ ದ್ರೋಣ್ಬೀಟ್ ಮಾಡಲು ಉದ್ದೇಶಿಸಿದ್ದ್ದು, ಇದು ನಿರ್ಮಾಣವಾದರೆ ಪೊಲೀಸರಿಗೆ ರಾತ್ರಿ ವೇಳೆ ಬೀಟ್ ಮಾಡವುದು ತಪ್ಪಲಿದೆ. ಈ ಯೋಜನೆ ಸಾಕಾರಗೊಂಡರೆ ಇದು ದೇಶದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ನಗರದಲ್ಲಿ ಸಾರ್ಟ್ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಹಾಗೂ ಮುಂದೆ ನಡೆಯಲಿರುವ ಕಾಮಗಾರಿ ಬಗ್ಗೆ ಊಹಾಪೋಹಗಳಿಗೆ ಕಿವಿಕೊಡಬೇಡಿ. ಎಲ್ಲಾ ಕಾಮಗಾರಿಗಳು ಗುಣಮಟ್ಟ ಮತ್ತು ತ್ವರಿತ ಗತಿಯಲ್ಲಿ ನಡೆಯುವಂತೆ ಹಾಗೂ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮ ವಹಿಸಲಾಗುವುದು.
|ದಾವಣಗೆರೆ ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ, ಶರೀಫ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ10 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ10 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

