Connect with us

ಬಹಿರಂಗ

ಸ್ವಾಭಿಮಾನ v/s ಜೀತಗಾರಿಕೆ

Published

on

ಸ್ವಾಭಿಮಾನ ಅಥವಾ ಆತ್ಮಗೌರವ ಅಥವಾ ಸ್ವಂತಿಕೆ… ಹೀಗೆ ಹೇಗೆ ಬೇಕಾದರೂ ಕರೆಯಿರಿ ಅದು ಮಾನವ ಜೀವನದ ಬಹುದೊಡ್ಡ ಅಂಗ ಅಥವಾ ಅಂಶ. ಅದು ಹೇಗಿರುತ್ತದೆ? ಯಾವ ರೂಪದಲ್ಲಿ ಇರುತ್ತದೆ? ಬಹುಶಃ ಅದನ್ನು ಪದಗಳಲ್ಲಿ ಹೇಳುವುದು, ವರ್ಣಿಸುವುದು ಅಸಾಧ್ಯ. ಬದಲಿಗೆ ಬದುಕಿ ತೋರಬೇಕಷ್ಟೆ. ಬದುಕು ಎಂದಾಕ್ಷಣ ಸ್ವಾಭಿಮಾನ ಎಂಬ ಆ ಅಂಶ ಸಂದರ್ಭದ ರೂಪದಲ್ಲಿ ಎದುರಾಗುತ್ತದೆ, ಕಾಲದ ನಿರಂತರ ಪರೀಕ್ಷೆಯಲ್ಲಿ ಅದು ಮತ್ತೆ ಮತ್ತೆ ಎದುರು ಬರುತ್ತದೆ.

ಉದಾಹರಣೆಗೆ ಒಬ್ಬ ಮಹಿಳೆಗೆ ಒಬ್ಬ ಪುರುಷನ ಎದುರು ಸ್ವಾಭಿಮಾನ ಮತ್ತು ಸ್ವಾವಲಂಬನೆ ಸರಿದೂಗಿಸಕೊಳ್ಳುವುದು ಅಥವಾ ಕಾಪಾಡಿಕೊಳ್ಳುವುದು ಕಷ್ಟವಾದರೆ, ಒಬ್ಬ ಬಡವನಿಗೆ ಸಿರಿವಂತನ ಎದುರು ಅದೇ ಸ್ವಾಭಿಮಾನ ಸರಿದೂಗಿಸಿಕೊಳ್ಳುವುದು, ಕಾಪಾಡಿಕೊಳ್ಳುವುದು ಕಷ್ಟ. ಅಂದಹಾಗೆ ಸ್ವಾಭಾವಿಕವಾಗಿ ಅಲ್ಲಿ ಸಂಘರ್ಷದ ವಾತಾವರಣ ಏರ್ಪಡುತ್ತದೆ ಮತ್ತು ಅಂತಹ ಸಂಘರ್ಷದ ವಾತಾವರಣವನ್ನು ಪರಸ್ಪರರು ನಿಭಾಯಿಸುವುದರ ಮೂಲಕ ಪರಸ್ಪರರ ಸ್ವಾಭಿಮಾನವನ್ನು ಕಾಪಾಡಿಕೊಳ್ಳಬಹುದು. ವಾಸ್ತವವೆಂದರೆ ಹೀಗೆಯೇ ಶೋಷಿತ ಸಮುದಾಯಗಳು ಮತ್ತು ಮೇಲ್ವರ್ಗಗಳ ನಡುವೆ ಕೂಡ ಇಂತಹ ಸ್ವಾಭಿಮಾನದ ಪ್ರಶ್ನೆ ಬರುತ್ತದೆ ಎಂಬುದು.

ನಿಜ, ಸ್ವಾಭಿಮಾನದ ಪ್ರಶ್ನೆ ಎದುರಾದಾಗ ಅಲ್ಲಿ ಮತ್ತದೆ ಸಂಘರ್ಷದ ಪ್ರಶ್ನೆ ಕೂಡ ಎದುರಾಗುತ್ತದೆ. “ನಿನ್ನನ್ನು ಮುಟ್ಟಿಸಿಕೊಳ್ಳುವುದಿಲ್ಲ, ನೀನು ಆಚೆ ನಿಲ್ಲು, ನೀನು ದೇವಸ್ಥಾನ ಪ್ರವೇಶಿಸಬೇಡ, ನೀನು ನಮ್ಮ ಬೀದಿ ಪ್ರವೇಶಿಸಬೇಡ, ನೀನು ನಮ್ಮ ಬೀದಿಯ ಕೀಳು ಕೆಲಸಗಳನ್ನು ಮಾಡಲೆಂದೇ ಇರುವುದು, ನೀನು ನಮ್ಮ ಜಮೀನಿನಲ್ಲಿ ಜೀತಮಾಡಲೆಂದೇ ಇರುವುದು…” ಇತ್ಯಾದಿ ಸಂದರ್ಭಗಳು ಶೋಷಿತ ಸಮುದಾಯಗಳ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲವು ಸಂದರ್ಭಗಳು. ಹಾಗಂತ ಇಲ್ಲಿ ಸ್ವಾಭಿಮಾನ ಅಡ ಇಡಬೇಕೆ? ಖಂಡಿತ ಸಲ್ಲದು. ಇದನ್ನೆ ಬಾಬಾಸಾಹೇಬ್ ಅಂಬೇಡ್ಕರ್‌ರವರು ಹೇಳಿದ್ದು “ಸ್ವಾಭಿಮಾನ ಇಲ್ಲದ ಮನುಷ್ಯನ ಬಾಳು ಜೀವಂತ ಶವದಂತೆ” ಎಂದು. ಅರ್ಥಾತ್ ಸ್ವಾಭಿಮಾನ ಗಳಿಸಿಕೊಳ್ಳಲು ಶೋಷಿತ ಸಮುದಾಯಗಳು ನಿರಂತರ ಯತ್ನಿಸಬೇಕು ಎಂಬುದು ಅಂಬೇಡ್ಕರರ ಆಶಯ.

ಈ ಸಂದರ್ಭದಲ್ಲಿ ಇಲ್ಲಿ ಮತ್ತದೇ ಅಂದರೆ ಸಂಘರ್ಷದ ಪ್ರಶ್ನೆ ಬರುತ್ತದೆ. ಏಕೆಂದರೆ ಶೋಷಿತ ಸಮುದಾಯಗಳಿಗೆ ಬಡತನ ಇರುತ್ತದೆ, ಸ್ವಾವಲಂಬನೆಗಾಗಿ ಉದ್ಯೊÃಗ ಇರುವುದಿಲ್ಲ, ಜಮೀನು ಇರುವುದಿಲ್ಲ. ಹಾಗೆಯೇ ಆತನಿಗೆ ಆತನ ಮಾನ-ಪ್ರಾಣದ ಪ್ರಶ್ನೆ ಎದುರಾಗುತ್ತದೆ. ತನ್ನ ಮನೆಯ ಹೆಣ್ಣು ಮಕ್ಕಳ ಮಾನದ ಪ್ರಶ್ನೆ ಎದುರಾಗುತ್ತದೆ. ಏಕೆಂದರೆ ತನ್ನ ಬಡತನದ ಕಾರಣಕ್ಕಾಗಿ ಆತ ಮೇಲ್ವರ್ಗದವರ ಮುಂದೆ ಕೈಚಾಚಬೇಕಾಗಬಹುದು, ಉದ್ಯೊÃಗ ಇಲ್ಲದ ಕಾರಣಕ್ಕಾಗಿ ಅವರ ಮುಂದೆ ಕೈಚಾಚಬೇಕಾಗಬಹುದು. ಹಾಗೆಯೇ ತನ್ನ ಮನೆಯ ಹೆಣ್ಣು ಮಕ್ಕಳ ರಕ್ಷಣೆಗಾಗಿ ಆತ ಮೇಲ್ವರ್ಗದವರ ಮುಂದೆ ಕೈಚಾಚಬೇಕಾಗಬಹುದು.

ಖಂಡಿತ, ಇಂತಹ ಕೈಚಾಚುವಿಕೆಯ ಸಂದರ್ಭ ಬರುತ್ತದೆ ಎಂಬ ಕಾರಣಕ್ಕಾಗಿಯೇ ಅಂಬೇಡ್ಕರ್‌ರವರು ಶೋಷಿತ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕೊಡಿಸಿದ್ದು. ಬಜೆಟ್‌ನಲ್ಲಿ ಸರ್ಕಾರ ಇವರಿಗೋಸ್ಕರ ಸಾಕಷ್ಟು ಅನುದಾನ ಮೀಸಲಿಡುವ ಪದ್ಧತಿ ಜಾರಿಗೆ ತಂದದ್ದು. ಹಾಗೆಯೇ ಇವರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತದೆ, ಸಂಘರ್ಷದ ವಾತಾವರಣ ಮೂಡುತ್ತದೆ, ರಕ್ಷಣೆ ಸಿಗಲಿ ಎಂಬ ಕಾರಣಕ್ಕಾಗಿಯೇ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆ ರೂಪಿಸುವಿಕೆಗೆ ಸಂವಿಧಾನದಲ್ಲಿ ಅವಕಾಶ ನೀಡಿದ್ದು.

ಅಂದಹಾಗೆ ಇಂತಹ ಸಾರ್ವಜನಿಕ ಅವಕಾಶಗಳನ್ನು ನೀಡಿಸುವುದರಷ್ಟರಲ್ಲಿಯೇ ಅಂಬೇಡ್ಕರ್‌ರವರು ತೃಪ್ತಿ ಹೊಂದಿದರೇ? ಊಹ್ಞೂಂ, ಸ್ವತಃ ಅವರೇ ಸ್ವಾಭಿಮಾನದ ಸಂಕೇತವಾಗಿ ಬದುಕಿದರು. ಉದಾಹರಣೆಗೆ ಯಾವ ಸಮಾಜ ಕನಿಷ್ಠ ಶಿಕ್ಷಣ ಪಡೆಯಲು ಪರದಾಡುತ್ತಿತ್ತೋ ಅಂತಹ ಸಮಾಜದ ಮುಂದೆ ಅಂಬೇಡ್ಕರ್‌ರವರು ಸ್ವತಃ ಸಾಲು ಸಾಲು ಪದವಿಗಳನ್ನು ಪಡೆದರು, ಮಾದರಿಯಾದರು. ಹಾಗೆಯೇ ಯಾವ ಸಮಾಜ ಬರೀ ಹರಿದ, ಚಿಂದಿಯಾದ ಕೊಳಕು ಬಟ್ಟೆಗಳನ್ನು ಧರಿಸಿ ಸಮಾಜದ ಮುಂದೆ ತನ್ನನ್ನು ತಾನಿರುವುದೇ ಹೀಗೆ ಎಂದು ಬಿಂಬಿಸಿಕೊಂಡಿತ್ತೊ ಅಥವಾ ಸಮಾಜ ಹಾಗೆ ಬಿಂಬಿಸಿತ್ತೊ ಅದಕ್ಕೆ ವಿರುದ್ಧವಾಗಿ ಅಂಬೇಡ್ಕರ್‌ರವರು ಸದಾ ಗರಿ ಗರಿ ಕೋಟು ಧರಿಸಿದರು. ಮಾದರಿಯಾದರು. ಹಾಗೆಯೇ ಯಾವ ಸಮಾಜ ತನ್ನ ನಡುವಿನ ಮೇಲ್ವರ್ಗದವರನ್ನು ಸದಾ “ಬುದ್ಧಿ, ಸ್ವಾಮಿ” ಎಂದು ಉಚ್ಛಾರಣೆಯಲ್ಲಿಯೂ ಜೀತಗಾರಿಕೆ ತೋರುತ್ತಿತ್ತೊ, ಸ್ವಾಭಿಮಾನ ಮರೆಯುತ್ತಿತ್ತೊ ಅಂತಹ ಉಚ್ಛಾರಣೆಯ ಜೀತಗಾರಿಕೆಯ ನಡುವೆ ಅಂಬೇಡ್ಕರ್‌ರವರು “ಮಿಸ್ಟರ್, ಸರ್” ಎಂಬ ಪದ ಬಳಸಿದರು. ಉದಾಹರಣೆಗೆ 1932ರಲ್ಲಿ ಅಂದರೆ ಸುಮಾರು 90 ವರ್ಷಗಳ ಹಿಂದೆಯೇ ಪೂನಾ ಒಪ್ಪಂದದ ಸಂದರ್ಭದಲ್ಲಿ ಅಂಬೇಡ್ಕರ್‌ರವರು ಸ್ವತಃ ಮಹಾತ್ಮ ಗಾಂಧಿಯವರನ್ನು “ಮಿಸ್ಟರ್ ಗಾಂಧಿ” ಎಂದು ಉಚ್ಛರಿಸಿರುವುದನ್ನು ಅವರ ಬರಹಗಳು ಮತ್ತು ಭಾಷಣಗಳಲ್ಲಿ ನಾವು ಈಗಲೂ ಕಾಣಬಹುದು. ಈ ನಿಟ್ಟಿನಲ್ಲಿ ಹೇಳುವುದಾದರೆ ಅದು ಉಚ್ಛಾರಣೆಯಲ್ಲಿಯೂ ಸ್ವಾಭಿಮಾನದ ಸಂಕೇತಿಸುವಿಕೆಗೆ ಶೋಷಿತ ಸಮುದಾಯಗಳಿಗೆ ಅಕ್ಷರಶಃ ಮಾದರಿಯಾಗುತ್ತದೆ.

ಹಾಗಿದ್ದರೆ ಅಂಬೇಡ್ಕರ್‌ರವರು ಹೀಗೆಲ್ಲ ಕಾನೂನಾತ್ಮಕ ಮತ್ತು ವಯಕ್ತಿಕ ಬದುಕಿನ ಮೂಲಕ ನಮಗೆ ಸ್ವಾಭಿಮಾನದ ದಾರಿ ತೋರಿಸಿದರು ಎಂದಾಕ್ಷಣ ಸ್ವಾಭಿಮಾನ ಸಿಕ್ಕಿಯೇ ಬಿಟ್ಟಿತು ಎಂದರ್ಥವೇ? ಖಂಡಿತ ಇಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಅಂಬೇಡ್ಕರ್‌ರವರು ಹಿಂದೂ ಧರ್ಮದಲ್ಲಿಯೇ ಶೋಷಿತ ಸಮುದಾಯದ ವ್ಯಕ್ತಿಯೋರ್ವ ಉಳಿದರೆ ಆತನ ಮುಂದೆ ಮತ್ತದೇ ಸ್ವಾಭಿಮಾನದ ಸಂಘರ್ಷದ ಸಂದರ್ಭ ಎದುರಾಗುತ್ತದೆ ಎಂದು ಮತಾಂತರದ ಮತ್ತೊಂದು ಹಾದಿ ತೋರಿದರು.

ಮತಾಂತರ, ಅದೊಂದು ಈಗಿರುವ ಸಾಮಾಜಿಕ ಮತ್ತು ಸಾಂಸ್ಕೃತಿಕ ವಾತಾವರಣದ ಬದಲಾವಣೆಯಷ್ಟೆ ಹೊರತು ಇನ್ನೊಬ್ಬರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕ್ರಿಯೆಯಲ್ಲ. ಈ ನಿಟ್ಟಿನಲ್ಲಿ ಸ್ವತಃ ಅಂಬೇಡ್ಕರ್‌ರವರು ಬೌದ್ಧ ಧರ್ಮಕ್ಕೆ ತಮ್ಮ 10 ಲಕ್ಷ ಅನುಯಾಯಿಗಳೊಡನೆ ಅ ಕಾಲದಲ್ಲೆ ಮತಾಂತರ ಹೊಂದಿದರು. ಎಲ್ಲಿ ಸ್ವಾಭಿಮಾನವಿಲ್ಲವೋ ಅಲ್ಲಿ ನನ್ನ ಚಪ್ಪಲಿಯನ್ನೂ ಸಹ ಬಿಡುವುದಿಲ್ಲ ಎಂದು ವ್ಯವಸ್ಥೆಗೆ ಸಾರಿ ಹೇಳಿದರು ಮತ್ತು ಹಾಗೆ ಬದುಕಿ ತೋರಿಸಿದರೂ ಕೂಡ. ಅಕ್ಷರಶಃ ಅಂಬೇಡ್ಕರ್‌ರವರು ಅನುಸರಿಸಿದ ಈ ಬೌದ್ಧ ಧರ್ಮದೆಡೆಗಿನ ಮತಾಂತರದ ಹಾದಿ ಕೂಡ ಪ್ರಸ್ತುತದ ಶೋಷಿತ ಸಮುದಾಯಗಳ ಸ್ವಾಭಿಮಾನದ ತಾಕಲಾಟಕ್ಕೆ ಖಂಡಿತ ಉತ್ತರವಾಗುತ್ತದೆ.

ಈ ನಡುವೆ ಬಾಬಾಸಾಹೇಬ್ ಅಂಬೇಡ್ಕರ್‌ರವರ ಬದುಕು ಎಂದಾಕ್ಷಣ ಅಲ್ಲಿ ರಾಜಕೀಯ ಬದುಕಿನ ಪ್ರಶ್ನೆಯೂ ಬರುತ್ತದೆ. ಅಲ್ಲಿಯೂ ಅಷ್ಟೆ ಅಂಬೇಡ್ಕರ್‌ರವರು ತಮ್ಮದೇ ಸ್ವಂತ ಪಕ್ಷಗಳ ಮೂಲಕ ರಾಜಕಾರಣ ಮಾಡಿ ಬದುಕಿದರೇ ವಿನಹ ಆಗ ಅಸ್ತಿತ್ವದಲ್ಲಿದ್ದ ಇತರೆ ರಾಜಕೀಯ ಪಕ್ಷಗಳನ್ನು ಅವರು ಸೇರಲಿಲ್ಲ. ಮತ್ತೆ ಹೇಳುವುದಾದರೆ ಇಲ್ಲಿಯೂ ಅವರಿಗೆ ಎದುರಾದದ್ದು ಮತ್ತದೇ ಸ್ವಾಭಿಮಾನದ ಪ್ರಶ್ನೆ.

ಹೀಗಿರುವಾಗ, ಅಂಬೇಡ್ಕರ್‌ರವರು ಶೋಷಿತ ಸಮುದಾಯಗಳಿಗೆ ಒದಗಿಸಿಕೊಟ್ಟ ಹಕ್ಕುಗಳು ಮತ್ತು ಅವರು ಬದುಕಿದ ರೀತಿ ಹೀಗಿರುವಾಗ ಅಂದರೆ ಸ್ವಾಭಿಮಾನದ ದಿಟ್ಟ ಮಾರ್ಗವಾಗಿರುವಾಗ ಶೋಷಿತ ಸಮುದಾಯಗಳು ಪ್ರಸ್ತುತ ಹೇಗೆ ಬದುಕಬೇಕು ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಸ್ವಾಭಿಮಾನದ ನಡೆಗಳಿಗೆ ವಿರುದ್ಧವಾಗಿ ರಾಜಿಯಾಗಬೇಕೆ? ಆತ್ಮಗೌರವ ಮಾರಿಕೊಳ್ಳಬೇಕೆ? ಎಂಬ ಪ್ರಶ್ನೆಗಳು ಮೂಡಿಬರುತ್ತವೆ. ಅಕ್ಷರಶಃ ಹೇಳುವುದಾದರೆ ಶೋಷಿತ ಸಮುದಾಯಗಳು ಸ್ವಾಭಿಮಾನಕ್ಕೆ, ಸ್ವಾಭಿಮಾನ ಉಳಿಸಿಕೊಳ್ಳುವ ದಿಕ್ಕಿನಲ್ಲಿ ಎಂದಿಗೂ ರಾಜಿಯಾಗಬಾರದು ಎಂಬುದು.

ಹಾಗಿದ್ದರೆ ಸಂಘರ್ಷ? ಉತ್ತರ: ಸಂಘರ್ಷದ ವಾತಾವರಣದಿಂದ ದೂರ ಸರಿಯಬೇಕಷ್ಟೆ. ಉದಾಹರಣೆಗೆ ಬಾಬಾಸಾಹೇಬ್ ಅಂಬೇಡ್ಕರ್‌ರವರು ಶೋಷಿತ ಸಮುದಾಯಗಳಿಗಾಗಿ ಪ್ರತ್ಯೇಕ ಹಳ್ಳಿಗಳ ವ್ಯವಸ್ಥೆ ಮಾಡಬೇಕು ಎಂದಿದ್ದರು. ಇದರರ್ಥ ಹಿಂದೂಗಳೊಡಗಿನ ಸಂಘರ್ಷದಿಂದ ಮುಕ್ತರಾಗುವುದೇ ಆಗಿತ್ತು. ಹಾಗೆಯೇ ಅಸಮಾನ ಸಾಮಾಜಿಕ ವಾತಾವರಣದಿಂದ ಹೊರಬರಲು ಪಟ್ಟಣ ಪ್ರದೇಶಗಳಿಗೆ ವಲಸೆ ಹೋಗುವುದು ಮತ್ತು ಅಲ್ಲಿ ತಮ್ಮಿಷ್ಟ ಬಂದ ಉದ್ಯೋಗ ಅನುಸರಿಸುವುದು… ಇದೂ ಕೂಡ ಸ್ವಾಭಿಮಾನದ ಮಾರ್ಗವಾಗಿದೆ. ಹಾಗೆಯೇ ಧಾರ್ಮಿಕ ಸ್ವಾಭಿಮಾನಕ್ಕೆ ಧಕ್ಕೆ. ಮೊದಲೇ ಹೇಳಿದ ಹಾಗೆ ಇದಕ್ಕೂ ಕೂಡ ಅಂಬೇಡ್ಕರರು ತೋರಿದ ಬೌದ್ಧ ಧರ್ಮದ ಪರಿಹಾರವಿದೆ. ಇನ್ನು ರಾಜಕಾರಣ, ಅಲ್ಲಿಯೂ ಕೂಡ ತಮ್ಮದೇ ಸ್ವಂತ ಪಕ್ಷಗಳ ಮೂಲಕ ರಾಜಕಾರಣ ಮಾಡುವ ಪರಿಹಾರವಿದೆ. ಇನ್ನು ಶಿಕ್ಷಣ, ಉದ್ಯೋಗ, ಉತ್ತಮ ಬದುಕು, ಉತ್ತಮ ಮಾತುಕತೆಯ(ಮೇಲ್ವರ್ಗದವರೊಡನೆ) ಶೈಲಿ, ಉತ್ತಮ ಆರೋಗ್ಯ… ಇವೆಲ್ಲವೂ ಕೂಡ ಸ್ವಾಭಿಮಾನದ ಬದುಕಿನ ವಿವಿಧ ಮಾದರಿಗಳಾಗಿವೆ. ಅಂಬೇಡ್ಕರರು ಬದುಕಿದ ರೀತಿಗಳಾಗಿವೆ.

ಹಾಗಿದ್ದರೆ ಇಂತಹ ಸ್ವಾಭಿಮಾನ ಮತ್ತು ಅದಕ್ಕೆ ವಿರುದ್ಧವಾದ ಪರಿಕಲ್ಪನೆಯಾದ ಜೀತಗಾರಿಕೆ ಅರ್ಥಾತ್ ಗುಲಾಮಗಿರಿಯ ಬದುಕು ಇವುಗಳ ನಡುವೆ ಅಂತಹ ವ್ಯತ್ಯಾಸವೇನಿದೆ ಎಂಬ ಪ್ರಶ್ನೆ ಬರುತ್ತದೆ. ಉತ್ತರವೇನೆಂದರೆ ಅವೆರಡರ ಅಂದರೆ ಸ್ವಾಭಿಮಾನ ಮತ್ತು ಜೀತಗಾರಿಕೆಯ ನಡುವಿನ ಅಂತರ ತುಂಬಾ ತೆಳುವಾದದ್ದು ಎಂಬುದು. ಹಾಗಿದ್ದರೆ ಅದರ ವ್ಯಾಖ್ಯಾನ? ಖಂಡಿತ, ಅದನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ. ಬದಲಿಗೆ ನಾವು ಬದುಕುವ ರೀತಿಯ ಮೇಲೆ ಅದು ನಿರ್ಧರಿತವಾಗುತ್ತದೆ. ಅಂದರೆ ಹೆಜ್ಜೆ ಹೆಜ್ಜೆಗೂ ಶೋಷಿತ ಸಮುದಾಯಗಳಿಗೆ ಸೇರಿದ ವ್ಯಕ್ತಿಗಳಿಗೆ ತಾನು ಜೀತಗಾರಿಕೆಗೆ ಬೀಳುವುದಿಲ್ಲ ಅಥವಾ ತನ್ನ ಸಮುದಾಯವನ್ನು ಬೀಳಿಸುವುದಿಲ್ಲ, ಬದಲಿಗೆ ಸ್ವಾಭಿಮಾನದಿಂದ ಬದುಕುತ್ತೇನೆ, ಆ ಮಾರ್ಗದಲ್ಲಿಯೇ ನಡೆಯುತ್ತೇನೆ ಎಂಬ ಪ್ರಜ್ಞೆ ಇರಬೇಕು. ನಿಜ ಇದು ಕಷ್ಟದ ಹಾದಿ. ಆದರೆ ಅನಿವಾರ್ಯದ ಹಾದಿ ಕೂಡ ಇದಾಗಿದೆ. ಹಾಗೆಯೇ ಇದು ಬರೀ ಸಿದ್ಧಾಂತವಲ್ಲ. ಬದಲಿಗೆ ನಿರಂತರ ಪ್ರಾಯೋಗಿಕವಾದುದು. ಹಾಗೆ ಇದು ಯಾರೋ ಒಬ್ಬರಿಗೆ ಅಥವಾ ಶೋಷಿತ ಸಮುದಾಯಗಳೊಳಗೆ ಬರುವ ಯಾವುದೋ ಒಂದು ಉಪಜಾತಿಗೆ ಅನ್ವಯವಾಗುತ್ತದೆಯೆಂಬಂತೆಯಲ್ಲ. ಬದಲಿಗೆ ಎಲ್ಲಾ ಉಪಜಾತಿಗಳಿಗೆ ಹೆಣ್ಣು-ಗಂಡು ಎಂಬ ಭೇದವಿಲ್ಲದೆ ಇದು ಅನ್ವಯವಾಗುತ್ತದೆ.ಉದಾಹರಣೆಗೆ ಮಲ ಹೊರುವ, ಶೌಚಾಲಯ ಶುಚಿಗೊಳಿಸುವ ವೃತ್ತಿಯಲ್ಲಿ ಅಂತಹ ಸ್ವಾಭಿಮಾನದ ಅಂಶವೇನಿದೆ? ಖಂಡಿತ ಇಲ್ಲ. ಪರಿಹಾರ ಅಂತಹ ವೃತ್ತಿಗಳನ್ನು ಮಾಡುವುದನ್ನು ಕೈಬಿಡುವುದೇ ಆಗಿದೆ.

ಆದ್ದರಿಂದ ಅಂಬೇಡ್ಕರ್ ಜಯಂತಿಯ ಈ ಸಂದರ್ಭದಲ್ಲಿ ಶೋಷಿತ ಸಮುದಾಯಗಳಿಗೆ ಸೇರಿದ ಪ್ರತಿಯೊಬ್ಬ ವ್ಯಕ್ತಿಯೂ ಸ್ವಾಭಿಮಾನದ ಇಂತಹ ಪಾಠ ಕಲಿಯಬೇಕಿದೆ. ಆ ಮೂಲಕ ಸಮಾನತೆಯ ಬದುಕಿನೆಡೆಗೆ ದಿಟ್ಟ ಹೆಜ್ಜೆ ಇಡಬೇಕಿದೆ.

ರಘೋತ್ತಮ ಹೊ.ಬ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

Published

on

~ಗೋವರ್ಧನ ನವಿಲೇಹಾಳು

ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.

ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು  ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ  ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ;  ಎಚ್ಚರಿಕೆಯೂ ಹೌದು.

ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಎಲೆಕ್ಟ್ರಾಲ್ ಬಾಂಡ್‌ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್‌ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.

ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.

ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್‌ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.

ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್‌ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್‌ಗಳಾಗಿ ಪರಿವರ್ತಿಸುತ್ತದೆ.

ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.

ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ

ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.

ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.

ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.

ಸುದ್ದಿದಿನ | ವಾಟ್ಸಾಪ್ | 9980346243

Continue Reading

ದಿನದ ಸುದ್ದಿ

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

Published

on

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್‌ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಜಯದೇವ ವೃತ್ತದಲ್ಲಿ ಸೇರಿದ ಎಸ್‌ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು  ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.

ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್‌ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್‌ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್‌ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

Continue Reading
Advertisement

Title

ದಿನದ ಸುದ್ದಿ3 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ3 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ3 days ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

ದಿನದ ಸುದ್ದಿ4 days ago

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

~ಗೋವರ್ಧನ ನವಿಲೇಹಾಳು ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ...

ದಿನದ ಸುದ್ದಿ4 days ago

ಉಪಚುನಾವಣೆ | ಕಾಂಗ್ರೆಸ್ ಗೆ ನಿರೀಕ್ಷೆಗೂ ಮೀರಿ ಜನಬೆಂಬಲ : ಸಿಎಂ‌ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ದಿನದ ಸುದ್ದಿ4 days ago

ಎಸ್ ಎಸ್ ಹಾದಿಯಲ್ಲಿ ಸಮರ್ಥ್ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ: ಜನರು ಹೆಚ್ಚಿನ ನಿರೀಕ್ಷೆಯೊಂದಿಗೆ ಮತದಾನಕ್ಕೆ ಸಜ್ಜಾಗಿದ್ದಾರೆ. ಅಪ್ಪಾಜಿ ಅವರು ಜಾತಿ, ಮತ, ಪಕ್ಷ ಮತ್ತು ಧರ್ಮ ಬೇಧವಿಲ್ಲದೆ ಎಲ್ಲರನ್ನು ಸಮಾನವಾಗಿ ನೋಡುತ್ತಿದ್ದ ಅಜಾತ ಶತ್ರುಗಳಾಗಿದ್ದರು. ಅದೇ...

ದಿನದ ಸುದ್ದಿ5 days ago

ಸಂಪಾದಕೀಯ | ಕುಟುಂಬ ಉತ್ತರಾಧಿಕಾರ vs ಬದಲಾವಣೆಯ ಗಾಳಿ: ಉಪಚುನಾವಣೆಯ ಸವಾಲು

–ಗೋವರ್ಧನ ನವಿಲೇಹಾಳು ಕರ್ನಾಟಕದ ರಾಜಕೀಯ ಆಖಾಡದಲ್ಲಿ ಏಪ್ರಿಲ್ 9, 2026ರಂದು ನಡೆಯುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗಳು ಕೇವಲ ಎರಡು ಸೀಟುಗಳ ಚುನಾವಣೆಯಲ್ಲ. ಇದು...

ದಿನದ ಸುದ್ದಿ2 weeks ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ2 weeks ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ3 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

Trending