Connect with us

ಬಹಿರಂಗ

‘ಸ್ವಾಭಿಮಾನ’ ಕುರಿತು ಅಂಬೇಡ್ಕರರ ಆತ್ಮಕತೆಯ ಪುಟಗಳಿಂದ..!

Published

on

 

ರಘೋತ್ತಮ ಹೊ.ಬ

ಎಲ್ಲಿ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆಯೋ ಅಲ್ಲಿ ನಿಮ್ಮ ಚಪ್ಪಲಿಯನ್ನು ಸಹ ಬಿಡಬೇಡಿ” Self respect ಅಥವಾ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಶ್ರೇಷ್ಠ ನುಡಿಗಳಿವು. ಬಹುಶಃ ವ್ಯಕ್ತಿಗೌರವ ಅಥವಾ ಸ್ವಾಭಿಮಾನದ ಬಗ್ಗೆ ಅಂಬೇಡ್ಕರರು ತಲೆಕೆಡಿಸಿಕೊಂಡಷ್ಟು ಈ ವಿಶ್ವದಲ್ಲಿ ಯಾರೂ ತಲೆಕೆಡಿಸಿಕೊಂಡಿರಲಿಕ್ಕಿಲ್ಲ. ಅದರಲ್ಲೂ ದಲಿತರ ಸ್ವಾಭಿಮಾನದ ಪ್ರಶ್ನೆ? ಹಾಗೆಯೇ ದಲಿತ ಮಹಿಳೆಯ ಸ್ವಾಭಿಮಾನದ ಪ್ರಶ್ನೆ? ಇಂತಹ ಪ್ರಶ್ನೆಗಳಿಗೆ ಉತ್ತರ  ಹುಡುಕುವುದರಲ್ಲಿಯೇ, ಶೋಷಿತರಿಗೆ ಸ್ವಾಭಿಮಾನದ ಪಾಠ ಕಲಿಸುವುದರಲ್ಲಿಯೇ, ಆತ್ಮಗೌರವ ತಂದುಕೊಡುವುದರಲ್ಲಿಯೇ ಅಂಬೇಡ್ಕರ್‍ರವರು ತಮ್ಮ ಜೀವನವಿಡೀ ಶ್ರಮಿಸಿದರು. ಒಂದರ್ಥದಲ್ಲಿ ಅವರು ಸ್ವಾಭಿಮಾನದ ಕಿಡಿ.

ಕಿಡಿ ಅಥವಾ ಕೋಪ, ಹಾಗೆಂದಾಕ್ಷಣ ಅಂಬೇಡ್ಕರರು ಇದ್ದಕ್ಕಿದ್ದ ಹಾಗೆಯೇ ದಲಿತರ ಸ್ವಾಭಿಮಾನದ ಬಗ್ಗೆ ಈ ಪರಿ ತಲೆಕೆಡಿಸಿಕೊಂಡರೆ ಅಥವಾ  ಯಾರದೋ  ಮೇಲಿನ ದ್ವೇಷಕ್ಕೆ  ಹಾಗೆ  ನಿರ್ಧಾರಕ್ಕೆ ಬಂದರೆ? ಖಂಡಿತ ಇಲ್ಲ. ಹಾಗಿದ್ದರೆ? 1935 ಅಕ್ಟೋಬರ್ 13ರಂದು ನಾಸಿಕ್‍ನ ಈಯೋಲಾ ಎಂಬಲ್ಲಿ ಅಂಬೇಡ್ಕರರು  ಕೇಳುವ ಪ್ರಶ್ನೆಗಳನ್ನು ನೋಡಿ.

  1. ಈ ಭಾರತದಲ್ಲಿ ನೀವೊಬ್ಬರೇ(ದಲಿತರು) ಯಾಕೆ ಶೋಷಣೆಗೊಳಗಾಗುತ್ತಿದ್ದೀರಿ?
  2. ಹಿಂದೂ ಧರ್ಮ ನಿಮಗೆ ಕರುಣೆ ತೋರಿಸುತ್ತಿಲ್ಲವೇಕೆ?
  3. ಹಿಂದುತ್ವದಲ್ಲಿ ನಿಮಗೆ ಸಮಾನತೆ ಇದೆಯೇ?
  4. ಹಿಂದುತ್ವದಲ್ಲಿ ನಿಮಗೆ ಸ್ವಾತಂತ್ರ್ಯವಿದೆಯೇ?

ಬಹುಶಃ ಈ ಪ್ರಶ್ನೆಗಳು ಹಿಂದೂಗಳಿಗೆ ಎಲ್‍ಕೆಜಿ ಮಕ್ಕಳ ಪ್ರಶ್ನೆಗಳ ಹಾಗೆ  ಕಾಣಬಹುದು. ಆದರೆ ಶೋಷಿತರಿಗೆ? ಅವು ಅಂಬೇಡ್ಕರರ ಸ್ವಾಭಿಮಾನದ ಕಿಡಿಯ ಸಣ್ಣ ಕಣಗಳಂತೆ ಕಂಡರೆ ಅತಿಶಯೋಕ್ತಿಯೇನಲ್ಲ. ಯಾಕೆಂದರೆ  ಅಂಬೇಡ್ಕರರಿಂದ ಇಂತಹ ಪ್ರಶ್ನೆಗಳನ್ನು ಎದುರಿಸಿದ  ಯಾವುದೇ ದಲಿತನಾದರೂ “ತನ್ನೊಬ್ಬನ ಮೇಲೆ  ಯಾಕೆ  ದೌರ್ಜನ್ಯ ನಡೆಯುತ್ತಿದೆ? ಯಾಕೆಂದರೆ  ನಾನು ಕೀಳು ಜಾತಿಯವನು. ಹಿಂದೂಗಳೆಲ್ಲ ನಮಗೆ ಕರುಣೆ  ತೋರಿಸುತ್ತಿಲ್ಲ, ಯಾಕೆಂದರೆ ನಾವು ಕರುಣೆಗೆ ಅರ್ಹರಲ್ಲ.  ಹಿಂದೂಗಳೆಲ್ಲ ನಮಗೆ ಸಮಾನತೆ ನೀಡುತ್ತಿಲ್ಲ, ಯಾಕೆಂದರೆ ನಾವು ಸಮಾನತೆಗೆ ಅರ್ಹರಲ್ಲ.  ಹಿಂದುತ್ವದಲ್ಲಿ ನಮಗೆ ಸ್ವಾತಂತ್ರ್ಯವಿಲ್ಲ, ಯಾಕೆಂದರೆ ನಾವು ಸ್ವಾತಂತ್ರ್ಯಕ್ಕೂ ಕೂಡ ಅರ್ಹರಲ್ಲ” ಎಂದುಕೊಳ್ಳುತ್ತಾನೆಯೇ? ಖಂಡಿತ ಇಲ್ಲ. ಬದಲಿಗೆ ಆತ  ಅಂಬೇಡ್ಕರರ ಪ್ರಶ್ನೆಗಳ ಬಗ್ಗೆ ಗಹನವಾಗಿ ಚಿಂತಿಸುತ್ತಾನೆ. ನಾನು ಯಾರು? ನಾನೇಕೆ ಹೀಗಾದೆ? ನನ್ನ ಹೀನಾಯ ಸ್ಥಿತಿಗೆ ಕಾರಣರಾರು? ಎಂದು ತನ್ನನ್ನೆ ತಾನು ಪ್ರಶ್ನಿಸಿಕೊಳ್ಳುತ್ತಾನೆ. ಒಮ್ಮೆ ಆತ ಪ್ರಶ್ನಿಸಿಕೊಳ್ಳಲು  ಪ್ರಾರಂಭಿಸಿದನೆಂದರೆ  ಮುಗಿಯಿತು ಆತ ಸ್ವಾಭಿಮಾನಿಯಾದನೆಂದೇ ಅರ್ಥ. ಅಂದಹಾಗೆ ಅಂಬೇಡ್ಕರರು ಬಯಸಿದ್ದು ಇದನ್ನೆ!

ಹಾಗೆ ಹೇಳುವುದಾದರೆ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಪ್ರಶ್ನೆ ಇಲ್ಲಿಗೇ ಮುಗಿಯುವುದಿಲ್ಲ. ಅವರ ಆತ್ಮಕತೆಯ ಪುಟಗಳತ್ತ ಚಿತ್ತಹರಿಸುವುದಾದರೆ, ಅಂಬೇಡ್ಕರರು  1936 ಮೇ 17ರಂದು ಥಾಣೆ ಜಿಲ್ಲೆಯ ಕಲ್ಯಾಣ್ ಎಂಬಲ್ಲಿ ತನ್ನ  ಸ್ವಾಭಿಮಾನವನ್ನು ಕೆಣಕಿದ ಬಾಲ್ಯದ ಕೆಟ್ಟ ಘಟನೆಯನ್ನು ಹೀಗೆ ವಿವರಿಸುತ್ತಾರೆ2 “ನಾನು ಇಂಧೋರ್ ಸಮೀಪದ ಮಹೌ ಎಂಬಲ್ಲಿ ಹುಟ್ಟಿದೆ. ನನ್ನ ತಂದೆ ಮಹೌನಲ್ಲಿ ಸೇನೆಯ ಸುಬೇದಾರ್ ಹುದ್ದೆಯಲ್ಲಿದ್ದರು. ನಾವು ಅಲ್ಲಿದ್ದಷ್ಟು ದಿನ ಅಂದರೆ ಸೇನೆಯ ಕ್ವಾರ್ಟರ್ಸ್‍ನ ಕಾರ್ಯಸ್ಥಾನದಲ್ಲಿಷ್ಟೂ ದಿನ ನಮಗೆ ಅಸ್ಪøಶ್ಯತೆಯ  ಗಂಧ ಗಾಳಿಯು ತಿಳಿದಿರಲಿಲ್ಲ. ಆದರೆ  ನನ್ನ ತಂದೆ  ಸೇನೆಯಿಂದ ನಿವೃತ್ತರಾಗಿ ಸತಾರಕ್ಕೆ ಬಂದಾಗ ನನಗೆ ಅಸ್ಪøಶ್ಯತೆಯ ಪ್ರಥಮ ಅನುಭವವಾಯಿತು.

ಮುಖ್ಯವಾಗಿ ಅದು ಕ್ಷೌರಕ್ಕೆ ಸಂಬಂಧಪಟ್ಟಂತೆ. ಯಾಕೆಂದರೆ  ಸತಾರದಲ್ಲಿ  ಅಷ್ಟೊಂದು ಕ್ಷೌರಿಕರಿದ್ದರೂ ಯಾವುದೇ ಕ್ಷೌರಿಕನೂ ನಮ್ಮ ತಲೆಕೂದಲು ಕತ್ತರಿಸಲು ಮುಂದೆ ಬರುತ್ತಿರಲಿಲ್ಲ.  ಈ ಕಾರಣಕ್ಕಾಗಿ ದುರಂತವೆಂದರೆ ನಮ್ಮ ಹಿರಿಯ ಅಕ್ಕನೇ  ನಮ್ಮನ್ನು ಮನೆಯ  ಹೊರಗಡೆ ಕೂರಿಸಿ  ನಮ್ಮ ತಲೆಗೂದಲನ್ನು ಕತ್ತರಿಸಬೇಕಾಗುತ್ತಿತ್ತು! ಒಂದರ್ಥದಲಿ ಇದು ನನ್ನನ್ನು ವಿಚಲಿತಗೊಳಿಸಿತು. ಯಾಕೆ ಹೀಗೆ ಇಷ್ಟೊಂದು ಕ್ಷೌರಿಕರಿದ್ದರೂ ನಮ್ಮ ಕೂದಲನ್ನು ಕತ್ತರಿಸಲು ಅವರು ಮುಂದೆ ಬರುತ್ತಿಲ್ಲವೇಕೆ? ಎಂಬ ಪ್ರಶ್ನೆ ನನ್ನನ್ನು ಪದೇ ಪದೇ ಕಾಡತೊಡಗಿತು”.

ಮತ್ತೊಂದು ಘಟನೆ : “ನಮ್ಮ ತಂದೆ ಗೋರೆಗಾಂವ್‍ನಲ್ಲಿರಬೇಕಾದರೆ ಅವರು ಒಮ್ಮೆ ನಮ್ಮನ್ನು  ಗೋರೆಗಾಂವ್‍ಗೆ ಬನ್ನಿ ಎಂದು ಕರೆದರು. ಹಾಗೆಯೇ ಪ್ರಯಾಣದ ಖರ್ಚಿಗೆ  ಎಂದು ಅವರು ಸ್ವಲ್ಪ ಹಣವನ್ನೂ ಕಳುಹಿಸಿದ್ದರು. ಆ ಹಣದಿಂದ  ಹೊಸಬಟ್ಟೆ ಖರೀದಿಸಿ, ರೈಲಿನಲ್ಲಿ ಪಯಣಿಸುವ ಕನಸು ಕಾಣುತ್ತಾ  ಖುಷಿಯಿಂದ ನಾನು, ನನ್ನ ಸಹೋದರ ಮತ್ತು  ನನ್ನ ಅಕ್ಕನ ಮಗಳು ಮೂವರು ಗೋರೆಗಾಂವ್‍ನತ್ತ ಹೊರಟೆವು.  ಹಾಗೆಯೇ ನಾವು ಬರುವುದಾಗಿ ಅದಾಗಲೇ ನಮ್ಮ ತಂದೆಯವರಿಗೆ ಪತ್ರವೊಂದನ್ನು ಸಹ ಕಳುಹಿಸಿದ್ದೆವು. ಆದರೆ ಅದು ಅವರಿಗೆ  ತಲುಪಿರಲಿಲ್ಲ.

ಆ ಕಾರಣಕ್ಕಾಗಿ ನಾವು ಗೋರೆಗಾಂವ್ ತಲುಪಿದಾಗ  ನಮ್ಮ ತಂದೆಯವರು ಕಳುಹಿಸಿರಬಹುದೆನ್ನುವ ಸೇವಕನಿಗಾಗಿ ನಾವು ಹುಡುಕಿದರೂ ಆತ ನಮಗೆ ಕಾಣಲಿಲ್ಲ. ವಿಧಿಯಿಲ್ಲದೆ  ಮುಕ್ಕಾಲು ಗಂಟೆ ನಾವು ಸ್ಟೇಷನ್‍ನಲ್ಲಿಯೇ ಕಳೆದೆವು. ಯಾರಾದರೂ ಬರಬಹುದು ನಮ್ಮನ್ನು ಕರೆದುಕೊಂಡು ಹೋಗಬಹುದು ಎಂದು ಕಾಯುತ್ತಾ  ಕುಳಿತೆವು. ಅದೇ ಸಮಯಕ್ಕೆ ಅಲ್ಲಿಗೆ ಬಂದ  ಸ್ಟೇಷನ್ ಮಾಸ್ಟರ್ ’ನೀವು ಯಾರಿಗಾಗಿ ಕಾಯುತ್ತಿದ್ದೀರಿ? ಯಾವ ಜಾತಿ? ಎಲ್ಲಿಗೆ ಹೋಗಬೇಕು?’ ಎಂದೆಲ್ಲ ಕೇಳಿದ. ನಾನು ಅವನಿಗೆ ‘ನಾವು ಮಹಾರ್ ಜಾತಿಗೆ ಸೇರಿದವರು’ ಎಂದು ನೇರವಾಗಿಯೇ ಹೇಳಿದೆ. ನಾನು ಹಾಗೆನ್ನುತ್ತಲೇ ಆತ ಆಘಾತಕ್ಕೊಳಗಾದ! ತಕ್ಷಣ ನಮ್ಮಿಂದ ಐದು ಹೆಜ್ಜೆ ಹಿಂದೆ ಸರಿದ! ಆದರೆ ನಾವು ಉತ್ತಮವಾಗಿ ಡ್ರೆಸ್ ಮಾಡಿಕೊಂಡಿದ್ದನ್ನು ನೋಡಿ ಉತ್ತಮ ಕುಲಕ್ಕೆ ಸೇರಿದವರಿರಬಹುದೆಂದುಕೊಂಡು ಎತ್ತಿನಗಾಡಿಯೊಂದನ್ನು ವ್ಯವಸ್ಥೆ ಮಾಡುವುದಾಗಿ ಹೇಳಿದ.

ಆದರೆ ನಾವು ಮಹಾರ್ ಜಾತಿಯವರಾಗಿದ್ದರಿಂದ ಯಾವುದೇ ಎತ್ತಿನಗಾಡಿಯವನು ನಮ್ಮನ್ನು ಕೂರಿಸಿಕೊಂಡು ಹೋಗಲು ಮುಂದೆ ಬರಲಿಲ್ಲ. ಕಡೆಗೂ ಒಬ್ಬ ಒಪ್ಪಿಕೊಂಡನಾದರೂ  ಆತನ ಕಂಡೀಷನ್ ಏನೆಂದರೆ ‘ನಾನು ಗಾಡಿ ಚಲಾಯಿಸುವುದಿಲ್ಲ. ನಿಮ್ಮಲ್ಲೆ ಯಾರಾದರೊಬ್ಬರು ಗಾಡಿ  ಚಲಾಯಿಸಿ. ನಾನು ನಿಮ್ಮ ಜೊತೆ ಬರುತ್ತೇನೆ’ ಎಂಬುದಾಗಿತ್ತು! ಅಂದಹಾಗೆ ಆತ ಹಾಗೆ ಬರುತ್ತೇನೆ ಎಂದಾಗ ಸಮಯ ಸಂಜೆ ಏಳು ಗಂಟೆಯಾಗಿತ್ತು. ಹಾಗೆಯೇ ಮಿಲಿಟರಿ  ಏರಿಯಾದವನಾದ್ದರಿಂದ ನನಗೆ ಗಾಡಿ ಚಲಾಯಿಸುವುದು  ಕಷ್ಟವೇನಿರಲಿಲ್ಲ. ಅವನ ಕಂಡೀಷನ್‍ಗೆ ಒಪ್ಪಿಕೊಂಡು  ನಾನು ಮತ್ತು ಉಳಿದ ಮಕ್ಕಳೆಲ್ಲ ಗಾಡಿಯಲ್ಲಿ ಗೋರೆಗಾಂವ್ ಕಡೆ ಹೊರಟೆವು”.

“ಸ್ವಲ್ಪ ದೂರ ಹೋದನಂತರ ಒಂದು ಊರಿನ ಹೊರಗಡೆ ಒಂದು ಕೊಳ ಕಂಡೆವು. ‘ಮುಂದೆ ಎಲ್ಲಿಯೂ ನಿಮಗೆ ನೀರು ಸಿಗುವ ಸಾಧ್ಯತೆ ಇಲ್ಲವಾದ್ದರಿಂದ ನೀವು ಇಲ್ಲಿಯೇ ನಿಮ್ಮ ಊಟವನ್ನು ಮಾಡಬಹುದು’ ಎಂದು  ಗಾಡಿಯವನು ನಮಗೆ ಸೂಚಿಸಿದ. ಅವನು ಹೇಳಿದ ಹಾಗೆ ಗಾಡಿಯಿಂದ ಇಳಿದ ನಾವು, ಅಲ್ಲಿಯೇ ನಾವು ತಂದಿದ್ದ ಬುತ್ತಿಯನ್ನು ತಿಂದು ಕೆಸರು ಕೆಸರಾದ ಗಬ್ಬುನಾರುತ್ತಿದ್ದ ಆ ಕೊಳದ ನೀರನ್ನೆ ಕುಡಿದೆವು. ಗಾಡಿಯವ ಗ್ರಾಮದ ಒಳಕ್ಕೆ ಹೋಗಿ ಅಚ್ಚುಕಟ್ಟಾಗಿ ತನ್ನ ಊಟ ಮುಗಿಸಿ ಮತ್ತೆ  ನಮ್ಮ ಬಳಿ ಬಂದ”!

“ಇತ್ತ ನಮ್ಮ ಪ್ರಯಾಣ ಮುಂದುವರಿದ ಹಾಗೇ  ಕತ್ತಲು ಹೆಚ್ಚಾಗತೊಡಗಿತ್ತು. ಯಾವುದೇ ಬೀದಿ ದೀಪವಾಗಲೀ ಬೆಳಕಿನ ಸಣ್ಣ ತುಣುಕಾಗಲೀ ನಮಗೆ ಕಾಣಲಿಲ್ಲ. ಈ ಕಾರಣಕ್ಕಾಗಿ  ಭಯಗೊಂಡ ನಾವು ಕತ್ತಲೆ ಮತ್ತು ಒಂಟಿತನದಿಂದಾಗಿ ಹೆದರಿ ಜೋರಾಗಿ ಅಳಲಾರಂಭಿಸಿದೆವು. ಅಷ್ಟೊತ್ತಿಗಾಗಲೇ ಅರ್ಧರಾತ್ರಿಯಾಗಿತ್ತು. ಆ ಸಂದರ್ಭದಲ್ಲಿ  ನಾವು ಎಂತಹ ಸ್ಥಿತಿ ತಲುಪಿದ್ದೆವೆಂದರೆ ‘ನಾವು, ನಮ್ಮಪ್ಪರಾಣೆಗೂ ಗೋರೆಗಾಂವ್ ತಲುಪುವುದಿಲ್ಲ’ ಎಂದು ಹತಾಶೆಗೊಂಡೆವು. ಹಾಗೆ ಮುನ್ನಡೆಯುತ್ತಲೇ ನಾವು ಒಂದು ಚೆಕ್‍ಪೋಸ್ಟ್ ತಲುಪಿದೆವು. ಚೆಕ್‍ಪೋಸ್ಟ್‍ನ ಕಾವಲುಗಾರನನ್ನು ನಾನು ‘ಇಲ್ಲಿ ಎಲ್ಲಾದರೂ, ತಿನ್ನಲು ಏನಾದರೂ ಸಿಗುತ್ತದೆಯಾ?’ ಎಂದು ಕೇಳಿದೆ. ಕಾವಲುಗಾರ ಪರ್ಷಿಯನ್ ಭಾಷೆ ಮಾತನಾಡುತ್ತಿದ್ದನಾದ್ದರಿಂದ ಅವನ ಜೊತೆ ಪರ್ಷಿಯನ್ ಭಾಷೆಯಲ್ಲಿಯೇ ಮಾತನಾಡಿದೆ. ನಮ್ಮ ಹಿನ್ನೆಲೆ ತಿಳಿದ ಆತ ಕೂಡ ಅಷ್ಟೆ, ಅಷ್ಟೆ ಕ್ರೂರವಾಗಿ ಉತ್ತರಿಸಿದ ಹಾಗೂ ಸಮೀಪದಲ್ಲಿ ಬೆಟ್ಟವೊಂದಿದೆ ಅಲ್ಲಿ ನಿಮಗೆ ಏನಾದರೂ ಸಿಗುತ್ತದೆಂಬಂತೆ ಸಮೀಪದಲ್ಲೇ ಇದ್ದ ಬೆಟ್ಟದತ್ತ ಕೈತೋರಿಸಿದ.

ವಿಧಿಯಿಲ್ಲದೆ ಹೇಗೋ ಆ ರಾತ್ರಿಯನ್ನು ನಾವು ಅಲ್ಲೇ ಆ ಬೆಟ್ಟದ ಪಕ್ಕದಲ್ಲಿಯೇ ಇದ್ದ ಕೊರಕಲೊಂದರಲ್ಲಿ ಕಳೆದೆವು! ಹಾಗೆಯೇ ಬೆಳಿಗ್ಗೆಯಾದದ್ದೆ ತಡ ಗೋರೆಗಾಂವ್‍ನತ್ತ ಮತ್ತೆ ನಮ್ಮ ಪ್ರಯಾಣವನ್ನು ಮುಂದುವರಿಸಿದೆವು. ಹೀಗೆ ಸಾಗಿದ ನಮ್ಮ ಪ್ರಯಾಣ ಕೊನೆಗೊಂಡದ್ದು ಮಧ್ಯಾಹ್ನಕ್ಕೆ. ಏಕೆಂದರೆ ಆ ದಿನ ನಾವು ಗೋರೆಗಾಂವ್ ತಲುಪಿದಾಗ ಮಧ್ಯಾಹ್ನವಾಗಿತ್ತು. ಅದೂ ವಿಪರೀತ ಸುಸ್ತಾಗಿದ್ದೆವು. ಒಂದರ್ಥದಲ್ಲಿ ಅರ್ಧ ಸತ್ತಿದ್ದೆವು ಎಂದರೆ ಅತಿಶಯೋಕ್ತಿಯೆನಲ್ಲ”!”

ಮರದಡಿಯಲ್ಲಿ ಗಳಗಳನೆ ಅತ್ತದ್ದು4! “ಮೂರನೆಯ ಘಟನೆಯೊಂದನ್ನು ಇಲ್ಲಿ ಹೇಳಲೇ ಬೇಕು. ಅದು ನಾನು ಬರೋಡ ರಾಜ್ಯದಲ್ಲಿ ಹುದ್ದೆಯಲ್ಲಿದ್ದ ಸಂದರ್ಭ. ಉನ್ನತ ಶಿಕ್ಷಣಕ್ಕೆ ವಿದೇಶಕ್ಕೆ ತೆರಳುವಾಗ ಬರೋಡ ರಾಜ್ಯದಿಂದ ನಾನು ವಿದ್ಯಾರ್ಥಿ ವೇತನ ಪಡೆದಿದ್ದೆ. ಆ ಸಂಧರ್ಭದಲ್ಲಿ ಆದ ಒಪ್ಪಂದದಂತೆ ಇಂಗ್ಲೆಂಡಿನಿಂದ ಹಿಂದಿರುಗಿ ಬಂದಾಗ ಒಪ್ಪಂದದಂತೆ ಬರೋಡ ಸಂಸ್ಥಾನದಲ್ಲಿ ಅಧಿಕಾರಿಯಾಗಿ ಉದ್ಯೋಗಕ್ಕೆ ಸೇರಿಕೊಂಡೆ. ದುರಂತವೆಂದರೆ ಆ ಸಂದರ್ಭದಲ್ಲಿ ಬರೋಡದಲ್ಲಿ ನನಗೆ ಉಳಿದುಕೊಳ್ಳಲು ಒಂದು ಮನೆ ಕೂಡ ಸಿಗಲಿಲ್ಲ. ಬರೋಡದಂಥ ಆ ಮಹಾನಗರದಲ್ಲಿ ಒಬ್ಬ ಹಿಂದೂವಿರಬಹುದು, ಮುಸಲ್ಮಾನನಿರಬಹುದು ಯಾರೊಬ್ಬರೂ ನನಗೆ ಬಾಡಿಗೆಗೆ ಮನೆ ಕೊಡಲು ಮುಂದೆಬರಲಿಲ್ಲ. ಕಡೆಗೆ ನಾನು ಪಾರ್ಸಿ ಧರ್ಮಛತ್ರವೊಂದರಲ್ಲಿ ಉಳಿದುಕೊಳ್ಳಲು ನಿರ್ಧರಿಸಿದೆ.ಅಮೆರಿಕಾ ಮತ್ತು ಇಂಗ್ಲೆಂಡಿನಿಂದ ಹಿಂದಿರುಗಿ ಬಂದಿದ್ದವನಾದ್ದರಿಂದ ನನ್ನ ಮೈ ಬಣ್ಣ ಸುಂದರವಾಗಿತ್ತು! ಹಾಗೆಯೇ ಆಕರ್ಷಕ ವ್ಯಕ್ತಿತ್ವ ಕೂಡ ನನ್ನದಾಗಿತ್ತು. ಆ ಕಾರಣಕ್ಕಾಗಿ ನನಗೆ ನಾನೇ ಒಂದು ಪಾರ್ಸಿ ಹೆಸರನ್ನು ಇಟ್ಟುಕೊಂಡು ಆ ಧರ್ಮಛತ್ರದಲ್ಲಿ ವಾಸಿಸಲು ಪ್ರಾರಂಭಿಸಿದೆ!

ಅಂದಹಾಗೆ ಆಗ ನಾನು ಇಟ್ಟುಕೊಂಡ ಹೆಸರು ‘ಅಡಲ್ಜಿ ಸೊರಾಬ್ಜಿ’ ಎಂಬುದಾಗಿತ್ತು! ನನ್ನನ್ನು ಪಾರ್ಸಿ ಎಂದು ನಂಬಿದ  ಆ ಧರ್ಮಛತ್ರದ  ಪಾರ್ಸಿ ಜನಾಂಗದ ಮ್ಯಾನೇಜರ್  ನನಗೆ ದಿನವೊಂದಕ್ಕೆ 2ರೂ ಬಾಡಿಗೆಯಂತೆ ಮನೆ ನೀಡಿದ. ಆದರೆ ಸತ್ಯ ಗೊತ್ತಾಗಲೇಬೇಕಲ್ಲವೆ? ಯಾಕೆಂದÀರೆ ಬರೋಡದ ರಾಜಶ್ರೇಷ್ಠ ಗಾಯಕವಾಡ ಮಹಾರಾಜರು ತನ್ನ ಆಸ್ಥಾನದಲ್ಲಿ ಮಹಾರ್ ಹುಡುಗನೊಬ್ಬನನ್ನು ಅಧಿಕಾರಿಯಾಗಿ ನೇಮಿಸಿಕೊಂಡಿರುವ ಸುದ್ದಿ ಅದಾಗಲೇ ಕಾಡ್ಗಿಚ್ಚಿನಂತೆ ಹರಡಿತ್ತು! ಮತ್ತು ನಾನು ಪಾರ್ಸಿ ಧರ್ಮಛತ್ರವೊಂದರಲ್ಲಿ ಸುಳ್ಳು ಹೆಸರಿನಲ್ಲಿ ಉಳಿದುಕೊಂಡಿದ್ದು  ಕೂಡ ಅನುಮಾನಕ್ಕೆ ಕಾರಣವಾಗಿತ್ತು. ಕಡೆಗೂ ನನ್ನ ಗುಟ್ಟು ಹೊರಬಿತ್ತು”.

“ಏಕೆಂದರೆ ಅಲ್ಲಿ ನಾನು ಉಳಿದುಕೊಂಡಿದÀ್ದ ಎರಡನೇ ದಿನ ನಾನು ತಿಂಡಿ ತಿಂದು ಕಛೇರಿಗೆ ತೆರಳಲು  ಪ್ರಾರಂಭಿಸುತ್ತಿದ್ದಂತೆ ದೊಣ್ಣೆಗಳನ್ನು ಹಿಡಿದಿದ್ದ ಹದಿನೈದರಿಂದ ಇಪ್ಪತ್ತು ಜನರಷ್ಟಿದ್ದ ಪಾರ್ಸಿ ಜನರ ಗುಂಪೊಂದು ನನ್ನ ಮೇಲೆ ಧಾಳಿ ಮಾಡಿತು. ನನ್ನನ್ನು ಕೊಲ್ಲುವುದಾಗಿ ಕೂಗಾಡಿದ ಆ ಗುಂಪು ನಾನು ಯಾರೆಂದು ಪ್ರಶ್ನಿಸಿತು.  ನಾನು ಸಾವಧಾನವಾಗಿ ’ನಾನೊಬ್ಬ ಹಿಂದೂ’ ಎಂದು ಉತ್ತರಿಸಿದೆ. ಆದರೆ ನನ್ನ ಉತ್ತರದಿಂದ ತೃಪ್ತರಾಗದ ಉದ್ರಿಕ್ತ ಆ ಗುಂಪು ನನ್ನ ಮೇಲೆ ಬೈಗುಳಗಳ ಸುರಿಮಳೆಯನ್ನೇ ಸುರಿಸಿತು ಮತ್ತು ನನ್ನನ್ನು ತಕ್ಷಣವೇ ಕೊಠಡಿ ಖಾಲಿ ಮಾಡುವಂತೆ ಆ ಗುಂಪು ಕೂಗಿ ಹೇಳಿತು. ನಿಜಕ್ಕೂ ಹೇಳುವುದಾದರೆ ನನ್ನ ದೃಢಮನಸ್ಸು ಮತ್ತು ನಾನು ಗಳಿಸಿದ ಜ್ಞಾನ ಆ ಸಂದರ್ಭವನ್ನು ನಾನು ಧೈರ್ಯದಿಂದ ಎದುರಿಸಲು ನನಗೆ ಬಲ ನೀಡಿತು ಎನ್ನಬಹುದು.

ಏಕೆಂದರೆ ನಮ್ರತೆಯಿಂದ ಆ ಗುಂಪನ್ನು ನಾನು ನನಗೆ ಎಂಟು ಗಂಟೆಗಳ ಕಾಲಾವಕಾಶ ನೀಡಬೇಕೆಂದು ಕೇಳಿಕೊಂಡೆ.  ಹಾಗೆಯೇ ಆ ದಿನ ಪೂರ್ತಿ ನಾನು ಉಳಿದುಕೊಳ್ಳಲು ಮನೆಯೊಂದನ್ನು ಹುಡುಕುವಲ್ಲಿಯೇ ಕಳೆದೆ. ಆದರೆ ‘ನನ್ನ ತಲೆಯನ್ನು ಅಡಗಿಸಿಕೊಳ್ಳಲು’’ಸ್ಥಳವೊಂದನ್ನು ಪಡೆಯುವಲ್ಲಿ ಕಡೆಗೂ ನಾನು ವಿಫಲನಾದೆ! ನನ್ನ ಬಹುತೇಕ ಸ್ನೇಹಿತರನ್ನು ಈ ಸಂದರ್ಭದಲ್ಲಿ ನಾನು ಸಂಪರ್ಕಿಸಿದೆ. ಆದರೆ ಅವರೆಲ್ಲರೂ ನನ್ನ ಬೇಡಿಕೆಗೆ ನಕಾರಾತ್ಮಕವಾಗಿ ಉತ್ತರ ನೀಡಿದರು. ನನಗೆ ವಸತಿ  ಒದಗಿಸಿಕೊಡುವಲ್ಲಿ  ತಮ್ಮ ಅಸಹಾಯಕತೆಯನ್ನು ಅವರು ಪ್ರದರ್ಶಿಸಿದರು. ನಾನು ತೀವ್ರವಾಗಿ ನಿರಾಶಗೊಂಡೆ ಮತ್ತು ಒಂದರ್ಥದಲಿ ಹತಾಶನಾದೆ.

ಮುಂದೇನು ಮಾಡಲಿ? ನನಗೆ ನಿರ್ಧಾರ ತೆಗೆದುಕೊಳ್ಳಲಾಗಲಿಲ್ಲ. ನಿರಾಶ ಮತ್ತು ಹತಾಶ ಮನಸ್ಥಿತಿಯಲ್ಲಿ  ಒಂದೆಡೆ  ಮರದ ನೆರಳಲ್ಲಿ ಕುಳಿತೆ. ನನ್ನ ಕಣ್ಣಲ್ಲಿ ನೀರು ಧಾರಾಕಾರವಾಗಿ ಸುರಿಯುತ್ತಿತ್ತು. ದುಖಃ ತಡೆಯಲಾರದೆ ಗಳಗಳನೆ ಅತ್ತೆ. ಕಡೆಗೆ ಮನೆ ದೊರೆಯುವ ಯಾವ  ಭರವಸೆಯೂ ಇಲ್ಲದೆ, ಪರ್ಯಾಯ ಮಾರ್ಗವಿಲ್ಲದೆ ಕೆಲಸ ಬಿಡಲು ನಿರ್ಧರಿಸಿದೆ ಮತ್ತು ನನ್ನ ಹುದ್ದೆಗೆ ರಾಜೀನಾಮೆ ಇತ್ತು ಆ ರಾತ್ರಿಯೇ ರೈಲಿನಲ್ಲಿ ವಾಪಸ್ ಮುಂಬೈಗೆ ಪ್ರಯಾಣ ಬೆಳೆಸಿದೆ”.

ಪರಮಶ್ರೇಷ್ಠ, ಅಪ್ಪಟ ಸ್ವಾಭಿಮಾನಿ ಎದುರಿಸಿದ  ಘೋರ ಕ್ಷಣಗಳಿವು. ಯಾವ ಜ್ಞಾನಿ ವಿದೇಶಗಳಿಂದ ಸಾಲು ಸಾಲು ಪದವಿಗಳಿಸಿ  ಜ್ಞಾನದ ಹೊರೆಯನ್ನೇ ಹೊತ್ತುತಂದನೋ  ಅಂತಹ  ವಿಶ್ವಜ್ಞಾನಿಗೆ  ಭಾರತದಲ್ಲಿ ಸಂದ ಮರ್ಯಾದೆಯಿದು! ಹಾಗೆಯೇ ಜಾತಿಯ ಕೂಪಕ್ಕೆ ಸಿಕ್ಕು ಸಮಾಜ ತಲುಪಿರುವ ದಯನೀಯ  ಪರಿಸ್ಥಿತಿಯ ಸ್ಪಷ್ಟ ಚಿತ್ರಣ ಇದು. ಅಂಬೇಡ್ಕರ್‍ರಂತಹ ಮಹಾನ್ ಜ್ಞಾನಿಗೇ  ಈ ಸಮಾಜ ಮನೆ ಕೊಡಲು ನಿರಾಕರಿಸಿತೆಂದರೆ ಇನ್ನು ನಮ್ಮಂತಹ ಸಾಮಾನ್ಯ ಅಸ್ಪøಶ್ಯರ ಪಾಡೇನಾಗಬೇಡ! ಅದೂ ಅಂಬೇಡ್ಕರರು  ಈ ಜಾತಿವಾದಿಗಳಿಗೋಸ್ಕರ  ತಮ್ಮ  ಹೆಸರನ್ನು ’ಅಡಲ್ಜಿ ಸೊರಾಬ್ಜಿ’ ಎಂದು ಸುಳ್ಳು ಕೂಡ ಹೇಳಬೇಕಾಯ್ತು!

ಅಂದಹಾಗೆ ಈಗ ಬೇರೆ ಏನು? ದಲಿತರಿಗೆ ಮೇಲ್ಜಾತಿಗಳವರು ಮನೆಕೊಡುತ್ತಾರೆಯೇ?  ಖಂಡಿತ ಇಲ್ಲ. ಅದೂ ಕೊಟ್ಟರೂ  ದಲಿತರು ಸುಳ್ಳು ಜಾತಿ ಹೇಳಬೇಕಷ್ಟೆ. ಮಹದೇವಯ್ಯ ಎಂಬ ತಮ್ಮ ಹೆಸರನ್ನು  ಮಹದೇವೇಗೌಡ, ಮಹದೇವಪ್ಪ, ಮಹದೇವಾಚಾರ್, ಮಹದೇವ ಶೆಟ್ಟಿ ಹೀಗೆ ಬದಲಿಸಿಕೊಂಡು ಸುಳ್ಳು ಹೇಳಬೇಕಷ್ಟೆ! ಅಕಸ್ಮಾತ್  ಮೇಲ್ಜಾತಿ ಜನರಿಗೆ  ಇವರ ಒರಿಜಿನಲ್ ಜಾತಿ ಗೊತ್ತಾದರೆ? ಇವರ ಪರಿಸ್ಥಿತಿ ಅಂಬೇಡ್ಕರರಿಗಿಂತೇನು ಭಿನ್ನವಾಗಿರಲಿಕ್ಕಿಲ್ಲ. ಒಂದಂತು ನಿಜ, ಸ್ವಾಭಿಮಾನದ ಜ್ಯೋತಿ ಎದುರಿಸಿದ ಕಷ್ಟದ ಕ್ಷಣಗಳವು.

ಗೋರೆಗಾಂವ್‍ಗೆ ಹೋಗುವಾಗ ಆ ಕಾಡುಗತ್ತಲಲ್ಲಿ  ಬಾಬಾಸಾಹೇಬರ  ಆ ಸುಂದರ ದೇಹ, ಮಗುವಿನ ಮನಸ್ಸು ಅದೆಷ್ಟು ನೊಂದಿರಬೇಡ? ನೀರು ಆಹಾರ ಇಲ್ಲದೆ ಅದೆಷ್ಟು ದಣಿದಿರಬೇಡ? ಹಿಂದೂ ಜಾತಿವ್ಯವಸ್ಥೆ ಕಂಡರೆ  ಸಿಟ್ಟು ಬರುವುದು  ಈ ಕಾರಣಕ್ಕೆ.  ಮೇಲು-ಕೀಳು ವ್ಯವಸ್ಥೆ  ಸೃಷ್ಟಿಸಿ, ಸ್ಪøಶ್ಯ-ಅಸ್ಪøಶ್ಯ ಎಂಬ ಅಂತರ ಸೃಷ್ಟಿಸಿ  ತಮ್ಮೊಳಗೇ ಇರುವ  ಕೆಲವರನ್ನು  ಪ್ರಾಣಿಗಳಿಗಿಂತ ಹೀನಾಯವಾಗಿ  ಕಂಡು ನಿರಂತರ ದೌರ್ಜನ್ಯ  ಎಸಗುತ್ತಿರುವ ಅಮಾನವೀಯ ಸಂಸ್ಕøತಿಯದು. ಇಂತಹ ಅಮಾನವೀಯ ಸಂಸ್ಕøತಿಯು ಮಾನವೀಯತೆಯ  ಸಾಕಾರದಂತಿರುವ ಅಂಬೇಡ್ಕರರ ವಿರುದ್ಧ  ನಡೆಸಿರುವ ದೌರ್ಜನ್ಯವಿದೆಯಲ್ಲಾ ಅದು ಎಂದೂ ಕ್ಷಮಿಸಲಾರದಂಥದ್ದು. ಶೋಷಿತ ಸಮುದಾಯ, ತನ್ನ ನಾಯಕನಿಗೆ  ಅಪಮಾನ  ಎಸಗಿರುವ ಆ ಅನಾಗರೀಕ ಸಮಾಜವನ್ನು ಎಂದಿಗೂ ಕ್ಷಮಿಸುವುದಿಲ್ಲ. ಕ್ಷಮಿಸಲೂ ಬಾರದು.

ಹಾಗಿದ್ದರೆ ಆ ಅನಾಗರೀಕ ಸಮಾಜಕ್ಕೆ,  ಅದು ಎಸಗಿರುವ ಪಾಪಕ್ಕೆ ಶಿಕ್ಷೆ? ಶೋಷಿತರು ಸ್ವಾಭಿಮಾನಿಗಳಾಗುವುದು. ಅಂಬೇಡ್ಕರರ  ಮಾರ್ಗದಲ್ಲಿ ಉತ್ತಮ ಶಿಕ್ಷಣ ಪಡೆದು  ಶೋಷಿತ ಸಮುದಾಯಗಳು  ಸ್ವಾಭಿಮಾನದ  ಮೇರು ಪರ್ವತಗಳಾಗುವುದು. ಯಾಕೆಂದರೆ ನಮ್ಮನ್ನು ಕಂಡರೆ ಆಗದವರ ಎದುರಲ್ಲಿ ನಾವು ಇನ್ನೂ ಉತ್ತಮ ಮಟ್ಟದಲ್ಲಿ  ಬದುಕುವುದಿದೆಯಲ್ಲಾ, ಅವರಿಗಿಂತ ಎಲ್ಲದರಲ್ಲೂ ಒಂದು ಕೈ ಮೇಲೆನಿಸಿಕೊಳ್ಳುವುದಿದೆಯಲ್ಲಾ ದೌರ್ಜನ್ಯಕೋರರನ್ನು ಅದಕ್ಕಿಂತ ಮಾನಸಿಕವಾಗಿ ಕುಗ್ಗಿಸುವ ಅಂಶ ಬೇರೊಂದಿರಲಿಕ್ಕಿಲ್ಲ. ಅವರು ಕುಗ್ಗಿದರೆಂದರೆ ಅಂಬೇಡ್ಕರ್ ಗೆದ್ದರೆಂದೇ ಅರ್ಥ. ಈ ನಿಟ್ಟಿನಲಿ ಶೋಷಿತ ಸಮುದಾಯ ಎಚ್ಚೆತ್ತುಕೊಳ್ಳಲಿ. ತನ್ನ ಎದೆಯಲ್ಲಿ ಅಂಬೇಡ್ಕರರ ಸ್ವಾಭಿಮಾನದ ಕೆಚ್ಚನ್ನು ತುಂಬಿಕೊಳ್ಳಲಿ. ತನ್ಮೂಲಕ  ದೌರ್ಜನ್ಯಕೋರರಿಗೆ ತಕ್ಕ ಉತ್ತರ ನೀಡಲಿ.

ಆಕರ ಗ್ರಂಥಗಳು

  1. Dr.Babasaheb Ambedkar writings and speeches (vol.17. part III, P.120,123,124,127)
  2. Ibid,P.108 
  3. Ibid,P.108 
  4. Ibid,P.109, 110

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

Published

on

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.

1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)

ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್‌ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.

2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ

ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.

3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)

ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.

4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ

ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.

5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)

ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.

6. ಸಮನ್ವಯದ ದಾರಿ….

ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು

Published

on

~ಗೋವರ್ಧನ ನವಿಲೇಹಾಳು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್‌ಗೆ ಸಂತೋಷದ ಸುದ್ದಿಯಾದರೂ, ಎಸ್‌ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.

ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್‌ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್‌ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.

ಸಮರ್ಥ್ ಶಾಮನೂರು ಅವರ ಮುಂದಿನ ನಡೆ

ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.

ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.

ಬಿಜೆಪಿಯ ಮುಂದಿನ ಸವಾಲುಗಳು

ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.

ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್‌ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.

ಎಸ್‌ಡಿಪಿಐ ಮುಂದಿನ ಸವಾಲು

ಎಸ್‌ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್‌ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್‌ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.

ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.

ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್‌ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.

ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

ದಿನದ ಸುದ್ದಿ3 hours ago

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು...

ದಿನದ ಸುದ್ದಿ2 days ago

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ...

ದಿನದ ಸುದ್ದಿ3 days ago

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ....

ದಿನದ ಸುದ್ದಿ3 days ago

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ...

ದಿನದ ಸುದ್ದಿ3 days ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

ದಿನದ ಸುದ್ದಿ4 days ago

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ: ನದಿ ದಂಡೆಯ ಸಾರ್ವಜನಿಕರು, ರೈತರಿಗೆ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ: ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿ ಪಾತ್ರದ ಗ್ರಾಮಗಳಿಗೆ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರನ್ನು ಪೂರೈಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ...

ದಿನದ ಸುದ್ದಿ4 days ago

ಶಿಕ್ಷಕರು, ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ‘ಚೈಲ್ಡ್ ಹೆಲ್ಪ್‌ಲೈನ್’ ಸಂಖ್ಯೆಯನ್ನು ಪ್ರದರ್ಶಿಸಬೇಕು ಹಾಗೂ ಶಿಕ್ಷಕರು ಮತ್ತು ವಾರ್ಡನ್‌ಗಳಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಆನ್‌ಲೈನ್ ವಂಚನೆಗಳ ಕುರಿತು...

ದಿನದ ಸುದ್ದಿ5 days ago

ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?

ಡಾ. ಗಿರೀಶ್ ಕುಮಾರ್ ಗೌಡ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ನಾಪತ್ತೆ. ಲಾರಿಗಳ ಮಾಲೀಕರೊಂದಿಗೆ ಶ್ಯಾಮಿಲು. ಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್...

ಅಂಕಣ5 days ago

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ...

Trending