ಬಹಿರಂಗ
‘ಸ್ವಾಭಿಮಾನ’ ಕುರಿತು ಅಂಬೇಡ್ಕರರ ಆತ್ಮಕತೆಯ ಪುಟಗಳಿಂದ..!
– ರಘೋತ್ತಮ ಹೊ.ಬ
”ಎಲ್ಲಿ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆಯೋ ಅಲ್ಲಿ ನಿಮ್ಮ ಚಪ್ಪಲಿಯನ್ನು ಸಹ ಬಿಡಬೇಡಿ” Self respect ಅಥವಾ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಶ್ರೇಷ್ಠ ನುಡಿಗಳಿವು. ಬಹುಶಃ ವ್ಯಕ್ತಿಗೌರವ ಅಥವಾ ಸ್ವಾಭಿಮಾನದ ಬಗ್ಗೆ ಅಂಬೇಡ್ಕರರು ತಲೆಕೆಡಿಸಿಕೊಂಡಷ್ಟು ಈ ವಿಶ್ವದಲ್ಲಿ ಯಾರೂ ತಲೆಕೆಡಿಸಿಕೊಂಡಿರಲಿಕ್ಕಿಲ್ಲ. ಅದರಲ್ಲೂ ದಲಿತರ ಸ್ವಾಭಿಮಾನದ ಪ್ರಶ್ನೆ? ಹಾಗೆಯೇ ದಲಿತ ಮಹಿಳೆಯ ಸ್ವಾಭಿಮಾನದ ಪ್ರಶ್ನೆ? ಇಂತಹ ಪ್ರಶ್ನೆಗಳಿಗೆ ಉತ್ತರ ಹುಡುಕುವುದರಲ್ಲಿಯೇ, ಶೋಷಿತರಿಗೆ ಸ್ವಾಭಿಮಾನದ ಪಾಠ ಕಲಿಸುವುದರಲ್ಲಿಯೇ, ಆತ್ಮಗೌರವ ತಂದುಕೊಡುವುದರಲ್ಲಿಯೇ ಅಂಬೇಡ್ಕರ್ರವರು ತಮ್ಮ ಜೀವನವಿಡೀ ಶ್ರಮಿಸಿದರು. ಒಂದರ್ಥದಲ್ಲಿ ಅವರು ಸ್ವಾಭಿಮಾನದ ಕಿಡಿ.
ಕಿಡಿ ಅಥವಾ ಕೋಪ, ಹಾಗೆಂದಾಕ್ಷಣ ಅಂಬೇಡ್ಕರರು ಇದ್ದಕ್ಕಿದ್ದ ಹಾಗೆಯೇ ದಲಿತರ ಸ್ವಾಭಿಮಾನದ ಬಗ್ಗೆ ಈ ಪರಿ ತಲೆಕೆಡಿಸಿಕೊಂಡರೆ ಅಥವಾ ಯಾರದೋ ಮೇಲಿನ ದ್ವೇಷಕ್ಕೆ ಹಾಗೆ ನಿರ್ಧಾರಕ್ಕೆ ಬಂದರೆ? ಖಂಡಿತ ಇಲ್ಲ. ಹಾಗಿದ್ದರೆ? 1935 ಅಕ್ಟೋಬರ್ 13ರಂದು ನಾಸಿಕ್ನ ಈಯೋಲಾ ಎಂಬಲ್ಲಿ ಅಂಬೇಡ್ಕರರು ಕೇಳುವ ಪ್ರಶ್ನೆಗಳನ್ನು ನೋಡಿ.
- ಈ ಭಾರತದಲ್ಲಿ ನೀವೊಬ್ಬರೇ(ದಲಿತರು) ಯಾಕೆ ಶೋಷಣೆಗೊಳಗಾಗುತ್ತಿದ್ದೀರಿ?
- ಹಿಂದೂ ಧರ್ಮ ನಿಮಗೆ ಕರುಣೆ ತೋರಿಸುತ್ತಿಲ್ಲವೇಕೆ?
- ಹಿಂದುತ್ವದಲ್ಲಿ ನಿಮಗೆ ಸಮಾನತೆ ಇದೆಯೇ?
- ಹಿಂದುತ್ವದಲ್ಲಿ ನಿಮಗೆ ಸ್ವಾತಂತ್ರ್ಯವಿದೆಯೇ?
ಬಹುಶಃ ಈ ಪ್ರಶ್ನೆಗಳು ಹಿಂದೂಗಳಿಗೆ ಎಲ್ಕೆಜಿ ಮಕ್ಕಳ ಪ್ರಶ್ನೆಗಳ ಹಾಗೆ ಕಾಣಬಹುದು. ಆದರೆ ಶೋಷಿತರಿಗೆ? ಅವು ಅಂಬೇಡ್ಕರರ ಸ್ವಾಭಿಮಾನದ ಕಿಡಿಯ ಸಣ್ಣ ಕಣಗಳಂತೆ ಕಂಡರೆ ಅತಿಶಯೋಕ್ತಿಯೇನಲ್ಲ. ಯಾಕೆಂದರೆ ಅಂಬೇಡ್ಕರರಿಂದ ಇಂತಹ ಪ್ರಶ್ನೆಗಳನ್ನು ಎದುರಿಸಿದ ಯಾವುದೇ ದಲಿತನಾದರೂ “ತನ್ನೊಬ್ಬನ ಮೇಲೆ ಯಾಕೆ ದೌರ್ಜನ್ಯ ನಡೆಯುತ್ತಿದೆ? ಯಾಕೆಂದರೆ ನಾನು ಕೀಳು ಜಾತಿಯವನು. ಹಿಂದೂಗಳೆಲ್ಲ ನಮಗೆ ಕರುಣೆ ತೋರಿಸುತ್ತಿಲ್ಲ, ಯಾಕೆಂದರೆ ನಾವು ಕರುಣೆಗೆ ಅರ್ಹರಲ್ಲ. ಹಿಂದೂಗಳೆಲ್ಲ ನಮಗೆ ಸಮಾನತೆ ನೀಡುತ್ತಿಲ್ಲ, ಯಾಕೆಂದರೆ ನಾವು ಸಮಾನತೆಗೆ ಅರ್ಹರಲ್ಲ. ಹಿಂದುತ್ವದಲ್ಲಿ ನಮಗೆ ಸ್ವಾತಂತ್ರ್ಯವಿಲ್ಲ, ಯಾಕೆಂದರೆ ನಾವು ಸ್ವಾತಂತ್ರ್ಯಕ್ಕೂ ಕೂಡ ಅರ್ಹರಲ್ಲ” ಎಂದುಕೊಳ್ಳುತ್ತಾನೆಯೇ? ಖಂಡಿತ ಇಲ್ಲ. ಬದಲಿಗೆ ಆತ ಅಂಬೇಡ್ಕರರ ಪ್ರಶ್ನೆಗಳ ಬಗ್ಗೆ ಗಹನವಾಗಿ ಚಿಂತಿಸುತ್ತಾನೆ. ನಾನು ಯಾರು? ನಾನೇಕೆ ಹೀಗಾದೆ? ನನ್ನ ಹೀನಾಯ ಸ್ಥಿತಿಗೆ ಕಾರಣರಾರು? ಎಂದು ತನ್ನನ್ನೆ ತಾನು ಪ್ರಶ್ನಿಸಿಕೊಳ್ಳುತ್ತಾನೆ. ಒಮ್ಮೆ ಆತ ಪ್ರಶ್ನಿಸಿಕೊಳ್ಳಲು ಪ್ರಾರಂಭಿಸಿದನೆಂದರೆ ಮುಗಿಯಿತು ಆತ ಸ್ವಾಭಿಮಾನಿಯಾದನೆಂದೇ ಅರ್ಥ. ಅಂದಹಾಗೆ ಅಂಬೇಡ್ಕರರು ಬಯಸಿದ್ದು ಇದನ್ನೆ!
ಹಾಗೆ ಹೇಳುವುದಾದರೆ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಪ್ರಶ್ನೆ ಇಲ್ಲಿಗೇ ಮುಗಿಯುವುದಿಲ್ಲ. ಅವರ ಆತ್ಮಕತೆಯ ಪುಟಗಳತ್ತ ಚಿತ್ತಹರಿಸುವುದಾದರೆ, ಅಂಬೇಡ್ಕರರು 1936 ಮೇ 17ರಂದು ಥಾಣೆ ಜಿಲ್ಲೆಯ ಕಲ್ಯಾಣ್ ಎಂಬಲ್ಲಿ ತನ್ನ ಸ್ವಾಭಿಮಾನವನ್ನು ಕೆಣಕಿದ ಬಾಲ್ಯದ ಕೆಟ್ಟ ಘಟನೆಯನ್ನು ಹೀಗೆ ವಿವರಿಸುತ್ತಾರೆ2 “ನಾನು ಇಂಧೋರ್ ಸಮೀಪದ ಮಹೌ ಎಂಬಲ್ಲಿ ಹುಟ್ಟಿದೆ. ನನ್ನ ತಂದೆ ಮಹೌನಲ್ಲಿ ಸೇನೆಯ ಸುಬೇದಾರ್ ಹುದ್ದೆಯಲ್ಲಿದ್ದರು. ನಾವು ಅಲ್ಲಿದ್ದಷ್ಟು ದಿನ ಅಂದರೆ ಸೇನೆಯ ಕ್ವಾರ್ಟರ್ಸ್ನ ಕಾರ್ಯಸ್ಥಾನದಲ್ಲಿಷ್ಟೂ ದಿನ ನಮಗೆ ಅಸ್ಪøಶ್ಯತೆಯ ಗಂಧ ಗಾಳಿಯು ತಿಳಿದಿರಲಿಲ್ಲ. ಆದರೆ ನನ್ನ ತಂದೆ ಸೇನೆಯಿಂದ ನಿವೃತ್ತರಾಗಿ ಸತಾರಕ್ಕೆ ಬಂದಾಗ ನನಗೆ ಅಸ್ಪøಶ್ಯತೆಯ ಪ್ರಥಮ ಅನುಭವವಾಯಿತು.
ಮುಖ್ಯವಾಗಿ ಅದು ಕ್ಷೌರಕ್ಕೆ ಸಂಬಂಧಪಟ್ಟಂತೆ. ಯಾಕೆಂದರೆ ಸತಾರದಲ್ಲಿ ಅಷ್ಟೊಂದು ಕ್ಷೌರಿಕರಿದ್ದರೂ ಯಾವುದೇ ಕ್ಷೌರಿಕನೂ ನಮ್ಮ ತಲೆಕೂದಲು ಕತ್ತರಿಸಲು ಮುಂದೆ ಬರುತ್ತಿರಲಿಲ್ಲ. ಈ ಕಾರಣಕ್ಕಾಗಿ ದುರಂತವೆಂದರೆ ನಮ್ಮ ಹಿರಿಯ ಅಕ್ಕನೇ ನಮ್ಮನ್ನು ಮನೆಯ ಹೊರಗಡೆ ಕೂರಿಸಿ ನಮ್ಮ ತಲೆಗೂದಲನ್ನು ಕತ್ತರಿಸಬೇಕಾಗುತ್ತಿತ್ತು! ಒಂದರ್ಥದಲಿ ಇದು ನನ್ನನ್ನು ವಿಚಲಿತಗೊಳಿಸಿತು. ಯಾಕೆ ಹೀಗೆ ಇಷ್ಟೊಂದು ಕ್ಷೌರಿಕರಿದ್ದರೂ ನಮ್ಮ ಕೂದಲನ್ನು ಕತ್ತರಿಸಲು ಅವರು ಮುಂದೆ ಬರುತ್ತಿಲ್ಲವೇಕೆ? ಎಂಬ ಪ್ರಶ್ನೆ ನನ್ನನ್ನು ಪದೇ ಪದೇ ಕಾಡತೊಡಗಿತು”.
ಮತ್ತೊಂದು ಘಟನೆ : “ನಮ್ಮ ತಂದೆ ಗೋರೆಗಾಂವ್ನಲ್ಲಿರಬೇಕಾದರೆ ಅವರು ಒಮ್ಮೆ ನಮ್ಮನ್ನು ಗೋರೆಗಾಂವ್ಗೆ ಬನ್ನಿ ಎಂದು ಕರೆದರು. ಹಾಗೆಯೇ ಪ್ರಯಾಣದ ಖರ್ಚಿಗೆ ಎಂದು ಅವರು ಸ್ವಲ್ಪ ಹಣವನ್ನೂ ಕಳುಹಿಸಿದ್ದರು. ಆ ಹಣದಿಂದ ಹೊಸಬಟ್ಟೆ ಖರೀದಿಸಿ, ರೈಲಿನಲ್ಲಿ ಪಯಣಿಸುವ ಕನಸು ಕಾಣುತ್ತಾ ಖುಷಿಯಿಂದ ನಾನು, ನನ್ನ ಸಹೋದರ ಮತ್ತು ನನ್ನ ಅಕ್ಕನ ಮಗಳು ಮೂವರು ಗೋರೆಗಾಂವ್ನತ್ತ ಹೊರಟೆವು. ಹಾಗೆಯೇ ನಾವು ಬರುವುದಾಗಿ ಅದಾಗಲೇ ನಮ್ಮ ತಂದೆಯವರಿಗೆ ಪತ್ರವೊಂದನ್ನು ಸಹ ಕಳುಹಿಸಿದ್ದೆವು. ಆದರೆ ಅದು ಅವರಿಗೆ ತಲುಪಿರಲಿಲ್ಲ.
ಆ ಕಾರಣಕ್ಕಾಗಿ ನಾವು ಗೋರೆಗಾಂವ್ ತಲುಪಿದಾಗ ನಮ್ಮ ತಂದೆಯವರು ಕಳುಹಿಸಿರಬಹುದೆನ್ನುವ ಸೇವಕನಿಗಾಗಿ ನಾವು ಹುಡುಕಿದರೂ ಆತ ನಮಗೆ ಕಾಣಲಿಲ್ಲ. ವಿಧಿಯಿಲ್ಲದೆ ಮುಕ್ಕಾಲು ಗಂಟೆ ನಾವು ಸ್ಟೇಷನ್ನಲ್ಲಿಯೇ ಕಳೆದೆವು. ಯಾರಾದರೂ ಬರಬಹುದು ನಮ್ಮನ್ನು ಕರೆದುಕೊಂಡು ಹೋಗಬಹುದು ಎಂದು ಕಾಯುತ್ತಾ ಕುಳಿತೆವು. ಅದೇ ಸಮಯಕ್ಕೆ ಅಲ್ಲಿಗೆ ಬಂದ ಸ್ಟೇಷನ್ ಮಾಸ್ಟರ್ ’ನೀವು ಯಾರಿಗಾಗಿ ಕಾಯುತ್ತಿದ್ದೀರಿ? ಯಾವ ಜಾತಿ? ಎಲ್ಲಿಗೆ ಹೋಗಬೇಕು?’ ಎಂದೆಲ್ಲ ಕೇಳಿದ. ನಾನು ಅವನಿಗೆ ‘ನಾವು ಮಹಾರ್ ಜಾತಿಗೆ ಸೇರಿದವರು’ ಎಂದು ನೇರವಾಗಿಯೇ ಹೇಳಿದೆ. ನಾನು ಹಾಗೆನ್ನುತ್ತಲೇ ಆತ ಆಘಾತಕ್ಕೊಳಗಾದ! ತಕ್ಷಣ ನಮ್ಮಿಂದ ಐದು ಹೆಜ್ಜೆ ಹಿಂದೆ ಸರಿದ! ಆದರೆ ನಾವು ಉತ್ತಮವಾಗಿ ಡ್ರೆಸ್ ಮಾಡಿಕೊಂಡಿದ್ದನ್ನು ನೋಡಿ ಉತ್ತಮ ಕುಲಕ್ಕೆ ಸೇರಿದವರಿರಬಹುದೆಂದುಕೊಂಡು ಎತ್ತಿನಗಾಡಿಯೊಂದನ್ನು ವ್ಯವಸ್ಥೆ ಮಾಡುವುದಾಗಿ ಹೇಳಿದ.
ಆದರೆ ನಾವು ಮಹಾರ್ ಜಾತಿಯವರಾಗಿದ್ದರಿಂದ ಯಾವುದೇ ಎತ್ತಿನಗಾಡಿಯವನು ನಮ್ಮನ್ನು ಕೂರಿಸಿಕೊಂಡು ಹೋಗಲು ಮುಂದೆ ಬರಲಿಲ್ಲ. ಕಡೆಗೂ ಒಬ್ಬ ಒಪ್ಪಿಕೊಂಡನಾದರೂ ಆತನ ಕಂಡೀಷನ್ ಏನೆಂದರೆ ‘ನಾನು ಗಾಡಿ ಚಲಾಯಿಸುವುದಿಲ್ಲ. ನಿಮ್ಮಲ್ಲೆ ಯಾರಾದರೊಬ್ಬರು ಗಾಡಿ ಚಲಾಯಿಸಿ. ನಾನು ನಿಮ್ಮ ಜೊತೆ ಬರುತ್ತೇನೆ’ ಎಂಬುದಾಗಿತ್ತು! ಅಂದಹಾಗೆ ಆತ ಹಾಗೆ ಬರುತ್ತೇನೆ ಎಂದಾಗ ಸಮಯ ಸಂಜೆ ಏಳು ಗಂಟೆಯಾಗಿತ್ತು. ಹಾಗೆಯೇ ಮಿಲಿಟರಿ ಏರಿಯಾದವನಾದ್ದರಿಂದ ನನಗೆ ಗಾಡಿ ಚಲಾಯಿಸುವುದು ಕಷ್ಟವೇನಿರಲಿಲ್ಲ. ಅವನ ಕಂಡೀಷನ್ಗೆ ಒಪ್ಪಿಕೊಂಡು ನಾನು ಮತ್ತು ಉಳಿದ ಮಕ್ಕಳೆಲ್ಲ ಗಾಡಿಯಲ್ಲಿ ಗೋರೆಗಾಂವ್ ಕಡೆ ಹೊರಟೆವು”.
“ಸ್ವಲ್ಪ ದೂರ ಹೋದನಂತರ ಒಂದು ಊರಿನ ಹೊರಗಡೆ ಒಂದು ಕೊಳ ಕಂಡೆವು. ‘ಮುಂದೆ ಎಲ್ಲಿಯೂ ನಿಮಗೆ ನೀರು ಸಿಗುವ ಸಾಧ್ಯತೆ ಇಲ್ಲವಾದ್ದರಿಂದ ನೀವು ಇಲ್ಲಿಯೇ ನಿಮ್ಮ ಊಟವನ್ನು ಮಾಡಬಹುದು’ ಎಂದು ಗಾಡಿಯವನು ನಮಗೆ ಸೂಚಿಸಿದ. ಅವನು ಹೇಳಿದ ಹಾಗೆ ಗಾಡಿಯಿಂದ ಇಳಿದ ನಾವು, ಅಲ್ಲಿಯೇ ನಾವು ತಂದಿದ್ದ ಬುತ್ತಿಯನ್ನು ತಿಂದು ಕೆಸರು ಕೆಸರಾದ ಗಬ್ಬುನಾರುತ್ತಿದ್ದ ಆ ಕೊಳದ ನೀರನ್ನೆ ಕುಡಿದೆವು. ಗಾಡಿಯವ ಗ್ರಾಮದ ಒಳಕ್ಕೆ ಹೋಗಿ ಅಚ್ಚುಕಟ್ಟಾಗಿ ತನ್ನ ಊಟ ಮುಗಿಸಿ ಮತ್ತೆ ನಮ್ಮ ಬಳಿ ಬಂದ”!
“ಇತ್ತ ನಮ್ಮ ಪ್ರಯಾಣ ಮುಂದುವರಿದ ಹಾಗೇ ಕತ್ತಲು ಹೆಚ್ಚಾಗತೊಡಗಿತ್ತು. ಯಾವುದೇ ಬೀದಿ ದೀಪವಾಗಲೀ ಬೆಳಕಿನ ಸಣ್ಣ ತುಣುಕಾಗಲೀ ನಮಗೆ ಕಾಣಲಿಲ್ಲ. ಈ ಕಾರಣಕ್ಕಾಗಿ ಭಯಗೊಂಡ ನಾವು ಕತ್ತಲೆ ಮತ್ತು ಒಂಟಿತನದಿಂದಾಗಿ ಹೆದರಿ ಜೋರಾಗಿ ಅಳಲಾರಂಭಿಸಿದೆವು. ಅಷ್ಟೊತ್ತಿಗಾಗಲೇ ಅರ್ಧರಾತ್ರಿಯಾಗಿತ್ತು. ಆ ಸಂದರ್ಭದಲ್ಲಿ ನಾವು ಎಂತಹ ಸ್ಥಿತಿ ತಲುಪಿದ್ದೆವೆಂದರೆ ‘ನಾವು, ನಮ್ಮಪ್ಪರಾಣೆಗೂ ಗೋರೆಗಾಂವ್ ತಲುಪುವುದಿಲ್ಲ’ ಎಂದು ಹತಾಶೆಗೊಂಡೆವು. ಹಾಗೆ ಮುನ್ನಡೆಯುತ್ತಲೇ ನಾವು ಒಂದು ಚೆಕ್ಪೋಸ್ಟ್ ತಲುಪಿದೆವು. ಚೆಕ್ಪೋಸ್ಟ್ನ ಕಾವಲುಗಾರನನ್ನು ನಾನು ‘ಇಲ್ಲಿ ಎಲ್ಲಾದರೂ, ತಿನ್ನಲು ಏನಾದರೂ ಸಿಗುತ್ತದೆಯಾ?’ ಎಂದು ಕೇಳಿದೆ. ಕಾವಲುಗಾರ ಪರ್ಷಿಯನ್ ಭಾಷೆ ಮಾತನಾಡುತ್ತಿದ್ದನಾದ್ದರಿಂದ ಅವನ ಜೊತೆ ಪರ್ಷಿಯನ್ ಭಾಷೆಯಲ್ಲಿಯೇ ಮಾತನಾಡಿದೆ. ನಮ್ಮ ಹಿನ್ನೆಲೆ ತಿಳಿದ ಆತ ಕೂಡ ಅಷ್ಟೆ, ಅಷ್ಟೆ ಕ್ರೂರವಾಗಿ ಉತ್ತರಿಸಿದ ಹಾಗೂ ಸಮೀಪದಲ್ಲಿ ಬೆಟ್ಟವೊಂದಿದೆ ಅಲ್ಲಿ ನಿಮಗೆ ಏನಾದರೂ ಸಿಗುತ್ತದೆಂಬಂತೆ ಸಮೀಪದಲ್ಲೇ ಇದ್ದ ಬೆಟ್ಟದತ್ತ ಕೈತೋರಿಸಿದ.
ವಿಧಿಯಿಲ್ಲದೆ ಹೇಗೋ ಆ ರಾತ್ರಿಯನ್ನು ನಾವು ಅಲ್ಲೇ ಆ ಬೆಟ್ಟದ ಪಕ್ಕದಲ್ಲಿಯೇ ಇದ್ದ ಕೊರಕಲೊಂದರಲ್ಲಿ ಕಳೆದೆವು! ಹಾಗೆಯೇ ಬೆಳಿಗ್ಗೆಯಾದದ್ದೆ ತಡ ಗೋರೆಗಾಂವ್ನತ್ತ ಮತ್ತೆ ನಮ್ಮ ಪ್ರಯಾಣವನ್ನು ಮುಂದುವರಿಸಿದೆವು. ಹೀಗೆ ಸಾಗಿದ ನಮ್ಮ ಪ್ರಯಾಣ ಕೊನೆಗೊಂಡದ್ದು ಮಧ್ಯಾಹ್ನಕ್ಕೆ. ಏಕೆಂದರೆ ಆ ದಿನ ನಾವು ಗೋರೆಗಾಂವ್ ತಲುಪಿದಾಗ ಮಧ್ಯಾಹ್ನವಾಗಿತ್ತು. ಅದೂ ವಿಪರೀತ ಸುಸ್ತಾಗಿದ್ದೆವು. ಒಂದರ್ಥದಲ್ಲಿ ಅರ್ಧ ಸತ್ತಿದ್ದೆವು ಎಂದರೆ ಅತಿಶಯೋಕ್ತಿಯೆನಲ್ಲ”!”
ಮರದಡಿಯಲ್ಲಿ ಗಳಗಳನೆ ಅತ್ತದ್ದು4! “ಮೂರನೆಯ ಘಟನೆಯೊಂದನ್ನು ಇಲ್ಲಿ ಹೇಳಲೇ ಬೇಕು. ಅದು ನಾನು ಬರೋಡ ರಾಜ್ಯದಲ್ಲಿ ಹುದ್ದೆಯಲ್ಲಿದ್ದ ಸಂದರ್ಭ. ಉನ್ನತ ಶಿಕ್ಷಣಕ್ಕೆ ವಿದೇಶಕ್ಕೆ ತೆರಳುವಾಗ ಬರೋಡ ರಾಜ್ಯದಿಂದ ನಾನು ವಿದ್ಯಾರ್ಥಿ ವೇತನ ಪಡೆದಿದ್ದೆ. ಆ ಸಂಧರ್ಭದಲ್ಲಿ ಆದ ಒಪ್ಪಂದದಂತೆ ಇಂಗ್ಲೆಂಡಿನಿಂದ ಹಿಂದಿರುಗಿ ಬಂದಾಗ ಒಪ್ಪಂದದಂತೆ ಬರೋಡ ಸಂಸ್ಥಾನದಲ್ಲಿ ಅಧಿಕಾರಿಯಾಗಿ ಉದ್ಯೋಗಕ್ಕೆ ಸೇರಿಕೊಂಡೆ. ದುರಂತವೆಂದರೆ ಆ ಸಂದರ್ಭದಲ್ಲಿ ಬರೋಡದಲ್ಲಿ ನನಗೆ ಉಳಿದುಕೊಳ್ಳಲು ಒಂದು ಮನೆ ಕೂಡ ಸಿಗಲಿಲ್ಲ. ಬರೋಡದಂಥ ಆ ಮಹಾನಗರದಲ್ಲಿ ಒಬ್ಬ ಹಿಂದೂವಿರಬಹುದು, ಮುಸಲ್ಮಾನನಿರಬಹುದು ಯಾರೊಬ್ಬರೂ ನನಗೆ ಬಾಡಿಗೆಗೆ ಮನೆ ಕೊಡಲು ಮುಂದೆಬರಲಿಲ್ಲ. ಕಡೆಗೆ ನಾನು ಪಾರ್ಸಿ ಧರ್ಮಛತ್ರವೊಂದರಲ್ಲಿ ಉಳಿದುಕೊಳ್ಳಲು ನಿರ್ಧರಿಸಿದೆ.ಅಮೆರಿಕಾ ಮತ್ತು ಇಂಗ್ಲೆಂಡಿನಿಂದ ಹಿಂದಿರುಗಿ ಬಂದಿದ್ದವನಾದ್ದರಿಂದ ನನ್ನ ಮೈ ಬಣ್ಣ ಸುಂದರವಾಗಿತ್ತು! ಹಾಗೆಯೇ ಆಕರ್ಷಕ ವ್ಯಕ್ತಿತ್ವ ಕೂಡ ನನ್ನದಾಗಿತ್ತು. ಆ ಕಾರಣಕ್ಕಾಗಿ ನನಗೆ ನಾನೇ ಒಂದು ಪಾರ್ಸಿ ಹೆಸರನ್ನು ಇಟ್ಟುಕೊಂಡು ಆ ಧರ್ಮಛತ್ರದಲ್ಲಿ ವಾಸಿಸಲು ಪ್ರಾರಂಭಿಸಿದೆ!
ಅಂದಹಾಗೆ ಆಗ ನಾನು ಇಟ್ಟುಕೊಂಡ ಹೆಸರು ‘ಅಡಲ್ಜಿ ಸೊರಾಬ್ಜಿ’ ಎಂಬುದಾಗಿತ್ತು! ನನ್ನನ್ನು ಪಾರ್ಸಿ ಎಂದು ನಂಬಿದ ಆ ಧರ್ಮಛತ್ರದ ಪಾರ್ಸಿ ಜನಾಂಗದ ಮ್ಯಾನೇಜರ್ ನನಗೆ ದಿನವೊಂದಕ್ಕೆ 2ರೂ ಬಾಡಿಗೆಯಂತೆ ಮನೆ ನೀಡಿದ. ಆದರೆ ಸತ್ಯ ಗೊತ್ತಾಗಲೇಬೇಕಲ್ಲವೆ? ಯಾಕೆಂದÀರೆ ಬರೋಡದ ರಾಜಶ್ರೇಷ್ಠ ಗಾಯಕವಾಡ ಮಹಾರಾಜರು ತನ್ನ ಆಸ್ಥಾನದಲ್ಲಿ ಮಹಾರ್ ಹುಡುಗನೊಬ್ಬನನ್ನು ಅಧಿಕಾರಿಯಾಗಿ ನೇಮಿಸಿಕೊಂಡಿರುವ ಸುದ್ದಿ ಅದಾಗಲೇ ಕಾಡ್ಗಿಚ್ಚಿನಂತೆ ಹರಡಿತ್ತು! ಮತ್ತು ನಾನು ಪಾರ್ಸಿ ಧರ್ಮಛತ್ರವೊಂದರಲ್ಲಿ ಸುಳ್ಳು ಹೆಸರಿನಲ್ಲಿ ಉಳಿದುಕೊಂಡಿದ್ದು ಕೂಡ ಅನುಮಾನಕ್ಕೆ ಕಾರಣವಾಗಿತ್ತು. ಕಡೆಗೂ ನನ್ನ ಗುಟ್ಟು ಹೊರಬಿತ್ತು”.
“ಏಕೆಂದರೆ ಅಲ್ಲಿ ನಾನು ಉಳಿದುಕೊಂಡಿದÀ್ದ ಎರಡನೇ ದಿನ ನಾನು ತಿಂಡಿ ತಿಂದು ಕಛೇರಿಗೆ ತೆರಳಲು ಪ್ರಾರಂಭಿಸುತ್ತಿದ್ದಂತೆ ದೊಣ್ಣೆಗಳನ್ನು ಹಿಡಿದಿದ್ದ ಹದಿನೈದರಿಂದ ಇಪ್ಪತ್ತು ಜನರಷ್ಟಿದ್ದ ಪಾರ್ಸಿ ಜನರ ಗುಂಪೊಂದು ನನ್ನ ಮೇಲೆ ಧಾಳಿ ಮಾಡಿತು. ನನ್ನನ್ನು ಕೊಲ್ಲುವುದಾಗಿ ಕೂಗಾಡಿದ ಆ ಗುಂಪು ನಾನು ಯಾರೆಂದು ಪ್ರಶ್ನಿಸಿತು. ನಾನು ಸಾವಧಾನವಾಗಿ ’ನಾನೊಬ್ಬ ಹಿಂದೂ’ ಎಂದು ಉತ್ತರಿಸಿದೆ. ಆದರೆ ನನ್ನ ಉತ್ತರದಿಂದ ತೃಪ್ತರಾಗದ ಉದ್ರಿಕ್ತ ಆ ಗುಂಪು ನನ್ನ ಮೇಲೆ ಬೈಗುಳಗಳ ಸುರಿಮಳೆಯನ್ನೇ ಸುರಿಸಿತು ಮತ್ತು ನನ್ನನ್ನು ತಕ್ಷಣವೇ ಕೊಠಡಿ ಖಾಲಿ ಮಾಡುವಂತೆ ಆ ಗುಂಪು ಕೂಗಿ ಹೇಳಿತು. ನಿಜಕ್ಕೂ ಹೇಳುವುದಾದರೆ ನನ್ನ ದೃಢಮನಸ್ಸು ಮತ್ತು ನಾನು ಗಳಿಸಿದ ಜ್ಞಾನ ಆ ಸಂದರ್ಭವನ್ನು ನಾನು ಧೈರ್ಯದಿಂದ ಎದುರಿಸಲು ನನಗೆ ಬಲ ನೀಡಿತು ಎನ್ನಬಹುದು.
ಏಕೆಂದರೆ ನಮ್ರತೆಯಿಂದ ಆ ಗುಂಪನ್ನು ನಾನು ನನಗೆ ಎಂಟು ಗಂಟೆಗಳ ಕಾಲಾವಕಾಶ ನೀಡಬೇಕೆಂದು ಕೇಳಿಕೊಂಡೆ. ಹಾಗೆಯೇ ಆ ದಿನ ಪೂರ್ತಿ ನಾನು ಉಳಿದುಕೊಳ್ಳಲು ಮನೆಯೊಂದನ್ನು ಹುಡುಕುವಲ್ಲಿಯೇ ಕಳೆದೆ. ಆದರೆ ‘ನನ್ನ ತಲೆಯನ್ನು ಅಡಗಿಸಿಕೊಳ್ಳಲು’’ಸ್ಥಳವೊಂದನ್ನು ಪಡೆಯುವಲ್ಲಿ ಕಡೆಗೂ ನಾನು ವಿಫಲನಾದೆ! ನನ್ನ ಬಹುತೇಕ ಸ್ನೇಹಿತರನ್ನು ಈ ಸಂದರ್ಭದಲ್ಲಿ ನಾನು ಸಂಪರ್ಕಿಸಿದೆ. ಆದರೆ ಅವರೆಲ್ಲರೂ ನನ್ನ ಬೇಡಿಕೆಗೆ ನಕಾರಾತ್ಮಕವಾಗಿ ಉತ್ತರ ನೀಡಿದರು. ನನಗೆ ವಸತಿ ಒದಗಿಸಿಕೊಡುವಲ್ಲಿ ತಮ್ಮ ಅಸಹಾಯಕತೆಯನ್ನು ಅವರು ಪ್ರದರ್ಶಿಸಿದರು. ನಾನು ತೀವ್ರವಾಗಿ ನಿರಾಶಗೊಂಡೆ ಮತ್ತು ಒಂದರ್ಥದಲಿ ಹತಾಶನಾದೆ.
ಮುಂದೇನು ಮಾಡಲಿ? ನನಗೆ ನಿರ್ಧಾರ ತೆಗೆದುಕೊಳ್ಳಲಾಗಲಿಲ್ಲ. ನಿರಾಶ ಮತ್ತು ಹತಾಶ ಮನಸ್ಥಿತಿಯಲ್ಲಿ ಒಂದೆಡೆ ಮರದ ನೆರಳಲ್ಲಿ ಕುಳಿತೆ. ನನ್ನ ಕಣ್ಣಲ್ಲಿ ನೀರು ಧಾರಾಕಾರವಾಗಿ ಸುರಿಯುತ್ತಿತ್ತು. ದುಖಃ ತಡೆಯಲಾರದೆ ಗಳಗಳನೆ ಅತ್ತೆ. ಕಡೆಗೆ ಮನೆ ದೊರೆಯುವ ಯಾವ ಭರವಸೆಯೂ ಇಲ್ಲದೆ, ಪರ್ಯಾಯ ಮಾರ್ಗವಿಲ್ಲದೆ ಕೆಲಸ ಬಿಡಲು ನಿರ್ಧರಿಸಿದೆ ಮತ್ತು ನನ್ನ ಹುದ್ದೆಗೆ ರಾಜೀನಾಮೆ ಇತ್ತು ಆ ರಾತ್ರಿಯೇ ರೈಲಿನಲ್ಲಿ ವಾಪಸ್ ಮುಂಬೈಗೆ ಪ್ರಯಾಣ ಬೆಳೆಸಿದೆ”.
ಪರಮಶ್ರೇಷ್ಠ, ಅಪ್ಪಟ ಸ್ವಾಭಿಮಾನಿ ಎದುರಿಸಿದ ಘೋರ ಕ್ಷಣಗಳಿವು. ಯಾವ ಜ್ಞಾನಿ ವಿದೇಶಗಳಿಂದ ಸಾಲು ಸಾಲು ಪದವಿಗಳಿಸಿ ಜ್ಞಾನದ ಹೊರೆಯನ್ನೇ ಹೊತ್ತುತಂದನೋ ಅಂತಹ ವಿಶ್ವಜ್ಞಾನಿಗೆ ಭಾರತದಲ್ಲಿ ಸಂದ ಮರ್ಯಾದೆಯಿದು! ಹಾಗೆಯೇ ಜಾತಿಯ ಕೂಪಕ್ಕೆ ಸಿಕ್ಕು ಸಮಾಜ ತಲುಪಿರುವ ದಯನೀಯ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ಇದು. ಅಂಬೇಡ್ಕರ್ರಂತಹ ಮಹಾನ್ ಜ್ಞಾನಿಗೇ ಈ ಸಮಾಜ ಮನೆ ಕೊಡಲು ನಿರಾಕರಿಸಿತೆಂದರೆ ಇನ್ನು ನಮ್ಮಂತಹ ಸಾಮಾನ್ಯ ಅಸ್ಪøಶ್ಯರ ಪಾಡೇನಾಗಬೇಡ! ಅದೂ ಅಂಬೇಡ್ಕರರು ಈ ಜಾತಿವಾದಿಗಳಿಗೋಸ್ಕರ ತಮ್ಮ ಹೆಸರನ್ನು ’ಅಡಲ್ಜಿ ಸೊರಾಬ್ಜಿ’ ಎಂದು ಸುಳ್ಳು ಕೂಡ ಹೇಳಬೇಕಾಯ್ತು!
ಅಂದಹಾಗೆ ಈಗ ಬೇರೆ ಏನು? ದಲಿತರಿಗೆ ಮೇಲ್ಜಾತಿಗಳವರು ಮನೆಕೊಡುತ್ತಾರೆಯೇ? ಖಂಡಿತ ಇಲ್ಲ. ಅದೂ ಕೊಟ್ಟರೂ ದಲಿತರು ಸುಳ್ಳು ಜಾತಿ ಹೇಳಬೇಕಷ್ಟೆ. ಮಹದೇವಯ್ಯ ಎಂಬ ತಮ್ಮ ಹೆಸರನ್ನು ಮಹದೇವೇಗೌಡ, ಮಹದೇವಪ್ಪ, ಮಹದೇವಾಚಾರ್, ಮಹದೇವ ಶೆಟ್ಟಿ ಹೀಗೆ ಬದಲಿಸಿಕೊಂಡು ಸುಳ್ಳು ಹೇಳಬೇಕಷ್ಟೆ! ಅಕಸ್ಮಾತ್ ಮೇಲ್ಜಾತಿ ಜನರಿಗೆ ಇವರ ಒರಿಜಿನಲ್ ಜಾತಿ ಗೊತ್ತಾದರೆ? ಇವರ ಪರಿಸ್ಥಿತಿ ಅಂಬೇಡ್ಕರರಿಗಿಂತೇನು ಭಿನ್ನವಾಗಿರಲಿಕ್ಕಿಲ್ಲ. ಒಂದಂತು ನಿಜ, ಸ್ವಾಭಿಮಾನದ ಜ್ಯೋತಿ ಎದುರಿಸಿದ ಕಷ್ಟದ ಕ್ಷಣಗಳವು.
ಗೋರೆಗಾಂವ್ಗೆ ಹೋಗುವಾಗ ಆ ಕಾಡುಗತ್ತಲಲ್ಲಿ ಬಾಬಾಸಾಹೇಬರ ಆ ಸುಂದರ ದೇಹ, ಮಗುವಿನ ಮನಸ್ಸು ಅದೆಷ್ಟು ನೊಂದಿರಬೇಡ? ನೀರು ಆಹಾರ ಇಲ್ಲದೆ ಅದೆಷ್ಟು ದಣಿದಿರಬೇಡ? ಹಿಂದೂ ಜಾತಿವ್ಯವಸ್ಥೆ ಕಂಡರೆ ಸಿಟ್ಟು ಬರುವುದು ಈ ಕಾರಣಕ್ಕೆ. ಮೇಲು-ಕೀಳು ವ್ಯವಸ್ಥೆ ಸೃಷ್ಟಿಸಿ, ಸ್ಪøಶ್ಯ-ಅಸ್ಪøಶ್ಯ ಎಂಬ ಅಂತರ ಸೃಷ್ಟಿಸಿ ತಮ್ಮೊಳಗೇ ಇರುವ ಕೆಲವರನ್ನು ಪ್ರಾಣಿಗಳಿಗಿಂತ ಹೀನಾಯವಾಗಿ ಕಂಡು ನಿರಂತರ ದೌರ್ಜನ್ಯ ಎಸಗುತ್ತಿರುವ ಅಮಾನವೀಯ ಸಂಸ್ಕøತಿಯದು. ಇಂತಹ ಅಮಾನವೀಯ ಸಂಸ್ಕøತಿಯು ಮಾನವೀಯತೆಯ ಸಾಕಾರದಂತಿರುವ ಅಂಬೇಡ್ಕರರ ವಿರುದ್ಧ ನಡೆಸಿರುವ ದೌರ್ಜನ್ಯವಿದೆಯಲ್ಲಾ ಅದು ಎಂದೂ ಕ್ಷಮಿಸಲಾರದಂಥದ್ದು. ಶೋಷಿತ ಸಮುದಾಯ, ತನ್ನ ನಾಯಕನಿಗೆ ಅಪಮಾನ ಎಸಗಿರುವ ಆ ಅನಾಗರೀಕ ಸಮಾಜವನ್ನು ಎಂದಿಗೂ ಕ್ಷಮಿಸುವುದಿಲ್ಲ. ಕ್ಷಮಿಸಲೂ ಬಾರದು.
ಹಾಗಿದ್ದರೆ ಆ ಅನಾಗರೀಕ ಸಮಾಜಕ್ಕೆ, ಅದು ಎಸಗಿರುವ ಪಾಪಕ್ಕೆ ಶಿಕ್ಷೆ? ಶೋಷಿತರು ಸ್ವಾಭಿಮಾನಿಗಳಾಗುವುದು. ಅಂಬೇಡ್ಕರರ ಮಾರ್ಗದಲ್ಲಿ ಉತ್ತಮ ಶಿಕ್ಷಣ ಪಡೆದು ಶೋಷಿತ ಸಮುದಾಯಗಳು ಸ್ವಾಭಿಮಾನದ ಮೇರು ಪರ್ವತಗಳಾಗುವುದು. ಯಾಕೆಂದರೆ ನಮ್ಮನ್ನು ಕಂಡರೆ ಆಗದವರ ಎದುರಲ್ಲಿ ನಾವು ಇನ್ನೂ ಉತ್ತಮ ಮಟ್ಟದಲ್ಲಿ ಬದುಕುವುದಿದೆಯಲ್ಲಾ, ಅವರಿಗಿಂತ ಎಲ್ಲದರಲ್ಲೂ ಒಂದು ಕೈ ಮೇಲೆನಿಸಿಕೊಳ್ಳುವುದಿದೆಯಲ್ಲಾ ದೌರ್ಜನ್ಯಕೋರರನ್ನು ಅದಕ್ಕಿಂತ ಮಾನಸಿಕವಾಗಿ ಕುಗ್ಗಿಸುವ ಅಂಶ ಬೇರೊಂದಿರಲಿಕ್ಕಿಲ್ಲ. ಅವರು ಕುಗ್ಗಿದರೆಂದರೆ ಅಂಬೇಡ್ಕರ್ ಗೆದ್ದರೆಂದೇ ಅರ್ಥ. ಈ ನಿಟ್ಟಿನಲಿ ಶೋಷಿತ ಸಮುದಾಯ ಎಚ್ಚೆತ್ತುಕೊಳ್ಳಲಿ. ತನ್ನ ಎದೆಯಲ್ಲಿ ಅಂಬೇಡ್ಕರರ ಸ್ವಾಭಿಮಾನದ ಕೆಚ್ಚನ್ನು ತುಂಬಿಕೊಳ್ಳಲಿ. ತನ್ಮೂಲಕ ದೌರ್ಜನ್ಯಕೋರರಿಗೆ ತಕ್ಕ ಉತ್ತರ ನೀಡಲಿ.
ಆಕರ ಗ್ರಂಥಗಳು
- Dr.Babasaheb Ambedkar writings and speeches (vol.17. part III, P.120,123,124,127)
- Ibid,P.108
- Ibid,P.108
- Ibid,P.109, 110
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ3 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ


