Connect with us

ಬಹಿರಂಗ

ಚುನಾವಣಾ ಅಕ್ರಮದ ಮೂಲಕ ಸೋಲಿಸಲ್ಪಟ್ಟ ‘ಪ್ರಜಾಪ್ರಭುತ್ವದ ಪಿತ’

Published

on

1951-52 ಡಿಸೆಂಬರ್-ಜನವರಿ ತಿಂಗಳಲ್ಲಿ ಈ ದೇಶದಲ್ಲಿ ಫ್ರಥಮ ಲೋಕಸಭಾ ಚುನಾವಣೆ ನಡೆಯಿತು. 1952ರ ಜನವರಿ 3 ರಂದು ಮತದಾನ ನಡೆದ ಆ ಚುನಾವಣೆಯಲ್ಲಿ ಅಂಬೇಡ್ಕರರು ಬಾಂಬೆ(ಇಂದಿನ ಮುಂಬೈ) ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಾಂಬೆ ನಗರ ಉತ್ತರ ಕ್ಷೇತ್ರ, ಅಂದಿನ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ದ್ವಿಸದಸ್ಯ ಕ್ಷೇತ್ರವಾಗಿತ್ತು. ಅಂದರೆ ಆ ಕ್ಷೇತ್ರದಿಂದ ಓರ್ವ ಸಾಮಾನ್ಯ ವರ್ಗದ ಸದಸ್ಯ ಮತÀ್ತು ಓರ್ವ ಪರಿಶಿಷ್ಟಜಾತಿಯ ಸದಸ್ಯ ಹೀಗೆ ಇಬ್ಬರೂ ಆಯ್ಕೆಯಾಗಬೇಕಿತ್ತು.

ಈ ಪ್ರಕಾರ ಅಲ್ಲಿ ಚುನಾವಣೆ ಘೋಷಣೆಯಾಗಿ 11ಜನ ನಾಮಪತ್ರ ಸಲ್ಲಿಸಿ ಮೂವರು ನಾಮಪತ್ರ ವಾಪಸ್ ಪಡೆದು ಕಣದಲ್ಲಿ 8ಜನ ಅಭ್ಯರ್ಥಿಗಳು ಉಳಿದರು. ಅಂದಹಾಗೆ ಆ 8ಜನ ಅಭ್ಯರ್ಥಿಗಳಲ್ಲಿ ಪರಿಶಿಷ್ಟಜಾತಿಯ ಅಭ್ಯರ್ಥಿಗಳೂ ಇದ್ದರು ಮತ್ತು ಸಾಮಾನ್ಯ ಅಭ್ಯರ್ಥಿಗಳೂ ಇದ್ದರು ಮತ್ತು ಯಾಕೆ ಹೀಗೆ ಇಬ್ಬರನ್ನೂ ಒಟ್ಟಿಗೆ ಮಾಡಲಾಗಿತ್ತೆಂದರೆ ಪರಿಶಿಷ್ಟರು, ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಲು ಅವರೂ ಅರ್ಹರಾದುದರಿಂದ ಸಾಮಾನ್ಯ ಕ್ಷೇತ್ರ ಮತ್ತು ಪರಿಶಿಷ್ಟರ ಕ್ಷೇತ್ರ ಹೀಗೆ ಎರಡನ್ನೂ ಒಟ್ಟಿಗೆ ಮಿಶ್ರ ಮಾಡಲಾಗಿತ್ತು. ಅಂದಹಾಗೆ ಈ ಮಿಶ್ರ ದ್ವಿಸದಸ್ಯ ಕ್ಷೇತ್ರದಲ್ಲಿ ಮೊದಲ ಸ್ಥಾನವನ್ನು ಪರಿಶಿಷ್ಟ ಅಭ್ಯರ್ಥಿಯೇ ಪಡೆದಿದ್ದರೆ ಸಾಮಾನ್ಯ ಅಭ್ಯರ್ಥಿಯಾಗಿ ಪರಿಶಿಷ್ಟಜಾತಿಯ ಅಭ್ಯರ್ಥಿಯೇ ಆಯ್ಕೆಯಾಗಬಹುದಿತ್ತು ಮತ್ತು ಯಥಾಪ್ರಕಾರ ಮೀಸಲು ಕ್ಷೇತ್ರದಿಂದಲೂ ಮತ್ತೋರ್ವ ಪರಿಶಿಷ್ಟ ಆಯ್ಕೆಯಾಗುತ್ತಿದ್ದ. ಅಕಸ್ಮಾತ್ ಮೊದಲ ಸ್ಥಾನದಲ್ಲಿ ಸಾಮಾನ್ಯ ಅಭ್ಯರ್ಥಿಯೇ ಇದ್ದರೆ ಸಹಜವಾಗಿ ಆತ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗುತ್ತಿದ್ದ ಮತ್ತು ಉಳಿದ ಪರಿಶಿಷ್ಟಜಾತಿಯ ಸ್ಥಾನಕ್ಕೆ ಪರಿಶಿಷ್ಟ ಅಭ್ಯರ್ಥಿಗಳಲ್ಲಿ ಯಾರು ಹೆಚ್ಚು ಮತ ಪಡೆದಿರುತ್ತಾರೋ ಅವರು ಆಯ್ಕೆಯಾಗುತ್ತಿದ್ದರು. ಒಟ್ಟಾರೆ ದ್ವಿಸದಸ್ಯ ಸ್ಥಾನದ ಆಯ್ಕೆಯ ಈ ಪ್ರಕ್ರಿಯೆ ಗೊಂದಲಮಯವಾಗೇನು ಇರಲಿಲ್ಲ.

ದ್ವಿಸದಸ್ಯ ಈ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ಹೇಗಿತ್ತೆಂದರೆ ಕಣದಲ್ಲಿ ಅಭ್ಯರ್ಥಿಗಳು 8 ಮಂದಿ ಇದ್ದುದರಿಂದ ಪ್ರತೀ ಮತದಾನ ಕೇಂದ್ರದಲ್ಲಿಯೂ ಪ್ರತೀ ಅಭ್ಯರ್ಥಿಗೆ ಒಂದರಂತೆ 8 ಮತ ಪಟ್ಟಿಗೆಗಳನ್ನು(ಬೂತ್‍ಗಳನ್ನು) ಇಡಲಾಗಿತ್ತು. ಮತದಾರನಿಗೆ ಸಾಮಾನ್ಯ ಕ್ಷೇತ್ರಕ್ಕೊಂದು ಮತ್ತು ಮೀಸಲು ಕ್ಷೇತ್ರಕ್ಕೊಂದು ಹೀಗೆ ಎರಡು ಬೇರೆ ಬೇರೆ ಬಣ್ಣದ ಮತ ಪತ್ರಗಳನ್ನು ನೀಡಲಾಗಿತ್ತು. ಸಾಮಾನ್ಯ ಕ್ಷೇತ್ರದ ಮತಪತ್ರದಲ್ಲಿ ಪರಿಶಿಷ್ಟ ಅಭ್ಯರ್ಥಿಗಳನ್ನೂ ಒಳಗೊಂಡಂತೆ ಎಲ್ಲಾ ಎಂಟು ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಗಳಿದ್ದವು. ಪರಿಶಿಷ್ಟರ ಮೀಸಲಿನ ಮತಪತ್ರದಲ್ಲಿ ಕೇವಲ ಪರಿಶಿಷ್ಟ ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಗಳು ಮಾತ್ರ ಇದ್ದವು. ಮತದಾರ ಆ ಎರಡೂ ಮತಪತ್ರಗಳನ್ನು ಪಡೆದು ಎರಡರಲ್ಲೂ ತನಗೆ ಇಷ್ಟವಾದ ಅಭ್ಯರ್ಥಿಗಳ ಚಿಹ್ನೆಗಳಿಗೆ ಮುದ್ರೆಯೊತ್ತಿ ಸಹಿ ಮಾಡಿ ಸಂಬಂಧಿಸಿದ ಆ ಅಭ್ಯರ್ಥಿಗಳ ಮತಪೆಟ್ಟಿಗೆಗಳಲ್ಲಿ ಮಾತ್ರ ಹಾಕಬೇಕಿತ್ತು.

ಈ ಹಿನ್ನೆಲೆಯಲ್ಲಿ ಮತದಾರನೋರ್ವ ಅಭ್ಯರ್ಥಿಯೊಬ್ಬರಿಗೆ ತಾನು ನೀಡಿದ ಮತವನ್ನು, ಸಂಬಂಧಿತ ಮತಪತ್ರವನ್ನು ಅದೇ ಅಭ್ಯರ್ಥಿಯ ಮತಪೆಟ್ಟಿಗೆಯಲ್ಲಿ ಹಾಕದೆ ಬೇರೆ ಅಭ್ಯರ್ಥಿಯ ಮತಪೆಟ್ಟಿಗೆಗೆ ಹಾಕಿದರೆ ಅದು ಕುಲಗೆಟ್ಟ ಮತವಾಗುತ್ತಿತ್ತು. ಗಮನಾರ್ಹವೆಂದರೆ ಮತದಾರ ತನಗೆ ನೀಡಲಾದ ಎರಡೂ ಮತಪತ್ರಗಳನ್ನು ತನ್ನಿಷ್ಟದ ಒಂದೇ ಅಭ್ಯರ್ಥಿಯ ಮತಪೆಟ್ಟಿಗೆಗೆ ಹಾಕಿದರೂ ಅದರಲ್ಲಿ ಒಂದು ಮತ ಕುಲಗೆಡುತ್ತಿತ್ತು ಈ ನಿಟ್ಟಿನಲ್ಲಿ ಇದನ್ನು ‘ಹಾಗೆ ಮಾಡುವುದು ಅಕ್ರಮ’ ಎಂದು ಅಂದಿನ ಜನಪ್ರತಿನಿಧಿ ಕಾಯಿದೆ ಸ್ಪಷ್ಟವಾಗೇ ಘೋಷಿಸಿತ್ತು. ಇದಲ್ಲದೆ ಮತದಾರ ತನಗೆ ಕೇವಲ ಒಂದು ಓಟು ಹಾಕುವ ಮಾತ್ರ ಇಚ್ಚೆ ಇದೆ, ಇನ್ನೊಂದು ಓಟು ಹಾಕುವ ಇಚ್ಚೆ ಇಲ್ಲ ಎಂದರೆ ಆತ ತನ್ನಿಷ್ಟದ ಆ ಒಂದು ಓಟನ್ನು ಮಾತ್ರ ಹಾಕಿ ಉಳಿದ ಒಂದು ಮತಪತ್ರವನ್ನು ವಾಪಸ್ ಮತಗಟ್ಟೆಯ ಅಧಿಕಾರಿಗೆ ನೀಡುವ ಅವಕಾಶವೂ ದ್ವಿಸದಸ್ಯ ಆ ಕ್ಷೇತ್ರದಲ್ಲಿ ಇತ್ತು.

ಈ ಪ್ರಕಾರ ಅಂಬೇಡ್ಕರರು ಸ್ಪರ್ಧಿಸಿದ್ದ ಬಾಂಬೆ ನಗರ ಉತ್ತರ ಆ ಕ್ಷೇತ್ರಕ್ಕೆ 1952 ಜನವರಿ 3 ರಂದು ಚುನಾವಣೆ ನಡೆದು ಜನವರಿ 7ರಂದು ಮತಎಣಿಕೆ ಪ್ರಾರಂಭವಾಗಿ ಜನವರಿ 11ಕ್ಕೆ ಎಣಿಕೆ ಮುಕ್ತಾಯವಾಯಿತು. ಫಲಿತಾಂಶವನ್ನು ಕ್ರಮಸಂಖ್ಯೆ, ಪಡೆದ ಮತಗಳು ಮತ್ತು ಆ ಅಭ್ಯರ್ಥಿಗಳ ಮತಪೆಟ್ಟಿಗೆಗಳಲ್ಲಿ ಬಿದ್ದ ಬೇರೆ ಅಭ್ಯರ್ಥಿಗಳ ಮತಗಳು ಅರ್ಥಾತ್ ಕುಲಗೆಟ್ಟ ಮತಗಳ ಪ್ರಕಾರ ಪಟ್ಟಿಮಾಡಿ ದಾಖಲಿಸುವುದಾದರೆ..

ಅಭ್ಯರ್ಥಿ ಪಡೆದ ಮತ @ ಕುಲಗೆಟ್ಟ ಮತ

1. ಡಾ.ಅಂಬೇಡ್ಕರ್ * 1,23,576 @ 2921
2. ಅಶೋಕ್ ಆರ್.ಮೆಹ್ತಾ * 1,39,741 @ 5,597
3. ಎಸ್.ಎ.ಡಾಂಗೆ * 96,755 @ 39,165
4. ಗೋಪಾಲ್ ವಿ.ದೇಶ್‍ಮುಖ್ * 40,786 @ 6,634
5. ವಿಠಲ್ ಬಿ.ಗಾಂಧಿ * 1,49,138 @ 10,881
6. ಕೇಶವ ಬಿ.ಜೋಶಿ * 15,195 @ 1,168
7. ನಾರಾಯಣ್ ಎಸ್.ಕಜ್ರೋಳ್ಕರ್ * 1,38,137 @ 6,892
8. ನೀಲಕಾಂತ್ ಬಿ.ಪಾರುಯೇಕರ್ * 12,560 @ 1,025

ಈ ಪಟ್ಟಿಯ ಪ್ರಕಾರ ಎರಡು ಸ್ಥಾನ ಇದ್ದ ಈ ಕ್ಷೇತ್ರದಲ್ಲಿ ಸಾಮಾನ್ಯ ಕ್ಷೇತ್ರದಿಂದ ಸಾಮಾನ್ಯ ಅಭ್ಯರ್ಥಿಯಾಗಿ ಅತಿ ಹೆಚ್ಚು ಮತ ಪಡೆದ(1,49,138) ವಿಠಲ್ ಬಿ.ಗಾಂಧಿ ಆಯ್ಕೆಯಾದರೆ ಪರಿಶಿಷ್ಟ ಮೀಸಲು ಕ್ಷೇತ್ರದಿಂದ ನಾರಾಯಣ್ ಎಸ್.ಕಜ್ರೋಳ್ಕರ್ 1,38,137 ಮತ ಪಡೆದು ಆಯ್ಕೆಯಾದರು. 1,23,576 ಮತ ಪಡೆದ ಅಂಬೇಡ್ಕರರು ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಜ್ರೋಳ್ಕರ್ ವಿರುದ್ಧ 14,561 ಮತಗಳ ಅಂತರದಿಂದ ಸೋತರೆ ಸಾಮಾನ್ಯ ಕ್ಷೇತ್ರದಲ್ಲಿ ಅಂಬೇಡ್ಕರರ ಎಸ್‍ಸಿಎಫ್(ಷೆಡ್ಯೂಲ್ಡ್ ಕ್ಯಾಸ್ಟ್ ಫೆಡರೇಷನ್) ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದ ಸೋಷಿಯಲಿಸ್ಟ್ ಪಾರ್ಟಿಯ ಅಶೋಕ್ ಆರ್.ಮೆಹ್ತಾ 1,39,741 ಮತ ಪಡೆದು ಅದೇ ಕಾಂಗ್ರೆಸ್‍ನ ವಿಠಲ್ ಬಿ.ಗಾಂಧಿಯವರ ಎದುರು 9,397 ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಅಂದಹಾಗೆ ಇಲ್ಲಿ ವ್ಯಾಪಕವಾಗಿ ದಾಖಲಿಸಲ್ಪಟ್ಟ ಕುಲಗೆಟ್ಟ ಮತಗಳು? ಅಂಬೇಡ್ಕರರು ಸೋತಿದ್ದೇ ಅಥವಾ ಸೋಲಿಸಲ್ಪಟ್ಟಿದ್ದೇ ಕುಲಗೆಡಿಸಲ್ಪಟ್ಟ ಈ ಮತಗಳ ಕಾರಣಕ್ಕಾಗಿ! ಸೋತ ನಂತರ ಸ್ವತಃ ಅಂಬೇಡ್ಕರರು ಈ ಸಂಬಂಧ 1952 ಏಪ್ರಿಲ್ 21ರಂದು ಅಂದಿನ ಚುನಾವಣಾ ಆಯೋಗಕ್ಕೆ ದೂರು ದಾಖಲಿಸುತ್ತಾರೆ ಮತ್ತು ತಮ್ಮ ಆ ದೂರಿನಲ್ಲಿ ಬಾಬಾಸಾಹೇಬರು ಅತಿ ಹೆಚ್ಚು ಕುಲಗೆಟ್ಟ ಮತಗಳನ್ನು ‘ಪಡೆದ’ ಕಮ್ಯೂನಿಸ್ಟ್ ಪಕ್ಷದ ನಾಯಕ ಶ್ರೀಪಾದ ಅಮೃತ ಡಾಂಗೆ ಮತ್ತು ಪಕ್ಷೇತರ ಅಭ್ಯರ್ಥಿ ಗೋಪಾಲ್ ವಿ.ದೇಶ್‍ಮುಖ್, ಈ ಇಬ್ಬರೂ ಅಭ್ಯರ್ಥಿಗಳು ನಡೆಸಿದ ಅಕ್ರಮಗಳನ್ನು ಹೂಡಿದ ವಾಮಮಾರ್ಗಗಳನ್ನು ಹೇಳುತ್ತಾ ಹೋಗುತ್ತಾರೆ. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.17, ಭಾಗ.1, ಪು.411).

ಅಂಬೇಡ್ಕರರ ಆ ದೂರಿನ ಮುಖ್ಯಾಂಶಗಳನ್ನು ಪ್ರಸ್ತಾಪಿಸುವುದಾದರೆ, ಮೊದಲೇ ಹೇಳಿದ ಹಾಗೆ ಒಬ್ಬ ಮತದಾರ ತನ್ನ ಎರಡೂ ಓಟುಗಳನ್ನು ಒಬ್ಬನೇ ಅಭ್ಯರ್ಥಿಯ ಮತಪೆಟ್ಟಿಗೆಗೆ ಹಾಕುವುದು ತಪ್ಪು, ಅದು ಕುಲಗೆಡುತ್ತದೆ. ಆದರೆ ಆಶ್ಚರ್ಯವೆಂದರೆ ಹಾಗೆ ಮತಗಳನ್ನು ಕುಲಗೆಡಿಸಲೆಂದೇ ಮೇಲ್ಕಂಡ ಈ ಇಬ್ಬರು ಅಭ್ಯರ್ಥಿಗಳು ಚುನಾವಣೆಯಲ್ಲಿ ಭರಪೂರ ಪ್ರಚಾರ ನಡೆಸಿದ್ದರು. ಹೀಗೆ ಮತಗಳನ್ನು ಕುಲಗೆಡಿಸುವುದರಿಂದ ತಾವು ಗೆಲ್ಲಲಾಗುವುದಿಲ್ಲ ಎಂದು ಈ ಇಬ್ಬರೂ ಅಭ್ಯರ್ಥಿಗಳಿಗೂ ಗೊತ್ತಿತ್ತು. ಆದರೆ ಅವರ ಅಂತಹ ನಡೆಯ ಒಟ್ಟಾರೆ ಉದ್ದೇಶ? ಅಂಬೇಡ್ಕರರನ್ನು ಸೋಲಿಸುವುದಾಗಿತ್ತು!

ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ಅಂದರೆ 39,165 ಕುಲಗೆಟ್ಟ ಮತಗಳನ್ನು ಪಡೆದ ಕಮ್ಯೂನಿಸ್ಟ್ ನಾಯಕ ಎಸ್.ಎ.ಡಾಂಗೆ ಪ್ರಚಾರದ ಸಮಯದಲ್ಲಿ ಹೊರಡಿಸಿದ್ದ ಒಂದು ಕರಪತ್ರದಲ್ಲಿ ಕಣದಲ್ಲಿರುವ ಪ್ರಚಂಡ ಅಭ್ಯರ್ಥಿ ತಾನಾಗಿದ್ದು ಮತದಾರರು ‘ತಮ್ಮೆರಡು ಓಟುಗಳನ್ನು’ ನನಗೇ ನೀಡಬೇಕು ಎಂದು ಆಗ್ರಹಿಸಿದ್ದರು! ಅಲ್ಲದೆ ಅದೇ ಡಾಂಗೆಯವರು ತಮ್ಮ ಪಕ್ಷ ಕಮ್ಯೂನಿಸ್ಟ್ ಪಕ್ಷದ ಮುಖವಾಣಿ ‘ಯುಗಾಂತರ’ ಎಂಬ ಮರಾಠಿ ವಾರಪತ್ರಿಕೆಯಲ್ಲಿ ಹೊರಡಿಸಿದ್ದ ಜಾಹೀರಾತಿನಲ್ಲಿ ‘ಮತದಾರರು ತಮ್ಮ ಎರಡೂ ಓಟುಗಳನ್ನು’ ತಮ್ಮ ಒಂದೇ ಡಬ್ಬಕ್ಕೆ ಹಾಕಬೇಕು ಎಂದು ತಮ್ಮ ಗುರುತಾದ ‘ಇಂಜಿನ್’ ಚಿತ್ರ ಸಮೇತ ಕೋರಿದ್ದರು! ಡಾಂಗೆಯವರ ಒಟ್ಟಾರೆ ಉದ್ದೇಶ ಸ್ಪಷ್ಟ ಇತ್ತು ಅಂದರೆ ಅದು ತನಗೆ ಲಾಭವಾಗಬೇಕು ಎಂದಲ್ಲ, ಬದಲಿಗೆ ಅಂಬೇಡ್ಕರರಿಗೆ ನಷ್ಟವಾಗಬೇಕು ಎಂದು!

ಈ ಸಂಬಂಧ ಕರಪತ್ರವೊಂದರಲ್ಲಿ ಕುದ್ದು ಅಂಬೇಡ್ಕರರ ಹೆಸರನ್ನೇ ಉಲ್ಲೇಖಿಸಿದ್ದ ಸದರಿ ಡಾಂಗೆ “ಪರಿಶಿಷ್ಟ ಜಾತಿಗೆ ಸೇರಿದ್ದ ಅಂಬೇಡ್ಕರರು ದ್ವಿಸದಸ್ಯ ಈ ಕ್ಷೇತ್ರದಲ್ಲಿ ಸಾಮಾನ್ಯ ಅಭ್ಯರ್ಥಿ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿ ಹೀಗೆ ಎರಡೂ ಸ್ಥಾನಗಳ ಅಭ್ಯರ್ಥಿಯಾಗುವ ಅವಕಾಶ ಹೊಂದಿದ್ದಾರೆ. ಆದುದರಿಂದ ಪರಿಶಿಷ್ಟಜಾತಿಗೆ ಸೇರಿಲ್ಲದ ಮತದಾರರು ಪರಿಶಿಷ್ಟಜಾತಿಯ ಅಂಬೇಡ್ಕರರಿಗೆ ಓಟು ಕೊಟ್ಟರೆ ಅದು ಪರಿಶಿಷ್ಟರ ಮತ ಹಕ್ಕನ್ನು ಕಸಿದುಕೊಂಡಂತೆ ಆಗುತ್ತದೆ. ಆದ್ದರಿಂದ ಮತದಾರರು ತಮ್ಮ ಎರಡೂ ಮತಗಳನ್ನು ನನ್ನ ‘ಇಂಜಿನ್’ ಗುರುತಿಗೇ ನೀಡಿ”!

ಅಬ್ಬಾ! ಎಂತಹ ತಂತ್ರ! ಸಾಮಾನ್ಯ ಕ್ಷೇತ್ರ ಆಗಿದ್ದ ಆ ಬಾಂಬೆ ಉತ್ತರ ಕ್ಷೇತ್ರದಿಂದ ಅಂಬೇಡ್ಕರ್ ಕೇವಲ ಪರಿಶಿಷ್ಟರ ಓಟುಗಳಿಂದ ಮಾತ್ರ ಗೆಲ್ಲಬೇಕಂತೆ, ಪರಿಶಿಷ್ಟಜಾತಿಗೆ ಸೇರಿಲ್ಲದ ಮತದಾರರು ಅಂಬೇಡ್ಕರರಿಗೆ ಮತ ಹಾಕಿದರೆ ಅದು ಪರಿಶಿಷ್ಟರ ಹಕ್ಕನ್ನು ಕಸಿದುಕೊಂಡಂತೆಯಂತೆ. ಆ ಕಾರಣಕ್ಕಾಗಿ ಮತದಾರ ಎರಡೂ ಓಟುಗಳನ್ನು ಒಬ್ಬ ವ್ಯಕ್ತಿಯ ಡಬ್ಬಕ್ಕೇ ಹಾಕಿ ತನ್ನ ಮತವನ್ನು ಕುಲಗೆಡಿಸಿಕೊಳ್ಳಬೇಕಂತೆ! ಈ ನಿಟ್ಟಿನಲ್ಲಿ ಈ ಚುನಾವಣೆಯಲ್ಲಿ ಡಾಂಗೆಯವರು ತಮ್ಮ ಕುಯುಕ್ತಿಯ ಇಂಥ ನಡೆಯಿಂದ ಮತದಾರರನ್ನು ಎಷ್ಟು ದಿಕ್ಕುತಪ್ಪಿಸುವುದು ಸಾಧ್ಯವೋ ಅಷ್ಟೂ ದಿಕ್ಕುತಪ್ಪಿಸಿದರು ತನ್ಮೂಲಕ ಅಂಬೇಡ್ಕರರು ಚುನಾವಣೆಯಲ್ಲಿ ಸೋಲುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು! ಹೇಗೆಂದರೆ ಕುಲಗೆಟ್ಟ ಒಟ್ಟು ಮತಗಳು 74,333. ಅದರಲ್ಲಿ ಡಾಂಗೆಯವರ ಇಂತಹ ಅಪಪ್ರಚಾರದಿಂದ ಬರೋಬ್ಬರಿ ಅವರೊಬ್ಬರಿಗೇ ಬಿದ್ದ ಕುಲಗೆಟ್ಟ ಮತಗಳೇ 39,165! ಅಂದಹಾಗೆ ಅಂಬೇಡ್ಕರ್ ಸೋತದ್ದು? 14,561 ಮತಗಳಿಂದ! ಈ ಹಿನ್ನೆಲೆಯಲ್ಲಿ ಅಂಬೇಡ್ಕರರ ಸೋಲಿನ ಅಂತರಕ್ಕಿಂತ ಮೂರು ಪಟ್ಟು ಹೆಚ್ಚು ಮತ ಕುಲಗೆಡಿಸುವಲ್ಲಿ ಡಾಂಗೆ ಯಶಸ್ವಿಯಾಗಿದ್ದರು. ಡಾಂಗೆಯವರ ಇಂತಹ ಹೀನ ತಂತ್ರವನ್ನು ತಮ್ಮ ಆ ಚುನಾವಣಾ ದೂರಿನಲ್ಲಿ ಅಂಬೇಡ್ಕರರು ಸಾಕ್ಷಿ ಸಮೇತ, ಅಂದರೆ ಕರಪತ್ರ ಪ್ರತಿ, ಪೇಪರ್ ಕಟಿಂಗ್‍ಗಳನ್ನು ಲಗತ್ತಿಸುವುದರ ಜೊತೆ ಕ್ರಮ ಕೈಗೊಳ್ಳಬೇಕೆಂದು ಆಯೋಗಕ್ಕೆ ಅರುಹಿದ್ದರು.

ಮುಂದುವರಿದು ಅಂಬೇಡ್ಕರರು ಮತ್ತೋರ್ವ ಅಭ್ಯರ್ಥಿಯ ಅಪಪ್ರಚಾರವನ್ನು ಸಾಕ್ಷಿ ಸಮೇತ ದಾಖಲಿಸಿದ್ದರು. ಅದು ಪಕ್ಷೇತರ ಅಭ್ಯರ್ಥಿ ಹಿಂದುತ್ವವಾದಿ ಗೋಪಾಲ್ ವಿ.ದೇಶ್‍ಮುಖ್‍ರವರಿಗೆ ಸಂಬಂಧಿಸಿದ್ದು. ಸದರಿ ದೇಶ್‍ಮುಖ್ ‘ವಿವಿಧ ವೃತ್ತಾ’ ಎಂಬ ಪತ್ರಿಕೆಯಲ್ಲಿ ಡಿಸೆಂಬರ್ 31, 1951ರಲ್ಲಿ ಹೊರಡಿಸಿದ್ದ ಪತ್ರಿಕಾ ಹೇಳಿಕೆಯಲ್ಲಿ “ಬಾಂಬೆ ಉತ್ತರ ಕ್ಷೇತ್ರವು ದ್ವಿಸದಸ್ಯ ಸಾಮಾನ್ಯ ಕ್ಷೇತ್ರವಾಗಿದ್ದು ಇಲ್ಲಿ ಎರಡೂ ಸ್ಥಾನಗಳನ್ನು ಪರಿಶಿಷ್ಟರೇ ಗೆಲ್ಲುವಂತಹ ತಂತ್ರವನ್ನು ಅಂಬೇಡ್ಕರರು ರೂಪಿಸಿದ್ದಾರೆ. ಆ ಕಾರಣದಿಂದ ಮತದಾರರು ಅಂಬೇಡ್ಕರರ ಇಂತಹ ತಂತ್ರವನ್ನು ಸೋಲಿಸಲು ತಮ್ಮ ಎರಡೂ ಓಟುಗಳನ್ನು ಅಂಬೇಡ್ಕರರನ್ನು ಹೊರತು ಪಡಿಸಿ ಇತರರಿಗೆ ನೀಡಿ. ಆ ಮೂಲಕ ಪರಿಶಿಷ್ಟೇತರರೂ ಆಯ್ಕೆಯಾಗುವಂತೆ ಮಾಡಿ” ಎಂದಿದ್ದರು. ಮುಂದುವರಿದು ಅದೇ ದೇಶ್‍ಮುಖ್ ಅದೇ ‘ವಿವಿಧ ವೃತ್ತಾ’ ಪತ್ರಿಕೆಯಲ್ಲಿ “ಮತದಾರನೋರ್ವ ಹಿಂದೂ ಅಭ್ಯರ್ಥಿಯ ಪೆಟ್ಟಿಗೆಯಲ್ಲಿ ಮಾತ್ರ ತನ್ನ ಎರಡೂ ಮತಗಳನ್ನು ಹಾಕಬೇಕು ಮತ್ತು ಅದು ಯಾವುದೇ ರೀತಿಯಲ್ಲೂ ಕಾನೂನಿಗೆ ವಿರುದ್ಧವಲ್ಲ” ಎಂಬ ಹೇಳಿಕೆ ನೀಡಿ ಕೋಮುಭಾವವನ್ನು ಬಹಿರಂಗವಾಗೇ ಬಡಿದೆಬ್ಬಿಸಿದ್ದರು! (ಇಲ್ಲಿ ದೇಶ್‍ಮುಖ್‍ರ ‘ಹಿಂದೂ ಅಭ್ಯರ್ಥಿಗೆ ಮಾತ್ರ’ ಎಂಬ ಪದವನ್ನು ಗಮನಿಸಬೇಕು! ಅಂದರೆ ಅಂಬೇಡ್ಕರರು ಒಟ್ಟಾರೆ ಪರಿಶಿಷ್ಟರು ಹಿಂದೂಗಳಲ್ಲ ಎಂಬುದು ಆ ಕಾಲದಲ್ಲೇ 1952ರಲ್ಲೇ ಸ್ಪಷ್ಟ.) ಈ ಸಂಬಂಧ ದೇಶ್‍ಮುಖ್‍ರ ಇಂತಹ ಕೋಮುಭಾವದ ಪತ್ರಿಕಾ ಹೇಳಿಕೆಯ ವರದಿಯ ತುಣುಕನ್ನೂ ಸಹ ಅಂಬೇಡ್ಕರರು ತಮ್ಮ ಆ ಚುನಾವಣಾ ತಕರಾರು ಅರ್ಜಿಯ ಜೊತೆ ಲಗತ್ತಿಸಿದ್ದರು.

ಒಟ್ಟಾರೆ ಹೇಳುವುದಾದರೆ ಕಮ್ಯೂನಿಸ್ಟ್ ನಾಯಕ ಶ್ರೀಪಾದ ಅಮೃತ ಡಾಂಗೆ, ಹಿಂದುತ್ವವಾದಿ ನಾಯಕ ಗೋಪಾಲ್ .ವಿ.ದೇಶ್‍ಮುಖ್ ಇಬ್ಬರೂ “ವಯಕ್ತಿಕವಾಗಿ ಅವರಿಬ್ಬರಿಗು ಯಾವುದೇ ಲಾಭವಾಗದಿದ್ದರೂ ಅಂಬೇಡ್ಕರರ ಗೆಲುವಿನ ಸಂಭವವನ್ನು ತಪ್ಪಿಸುವ ಏಕೈಕ ಉದ್ದೇಶ ಇಟ್ಟುಕೊಂಡು ಎರಡೂ ಓಟುಗಳನ್ನು ತಮಗೆ ಹಾಕಿ” ಎಂಬ ಚುನಾವಣಾ ಹೀನ ತಂತ್ರ ಹೆಣೆದು, ಮತದಾರರನ್ನು ಗೊಂದಲಗೊಳಿಸುವಲ್ಲಿ ಯಶಸ್ವಿಯಾದರು. ಇದನ್ನು ಉಲ್ಲೇಖಿಸುತ್ತಾ ಅಂಬೇಡ್ಕರರು ತಮ್ಮ ಆ ಚುನಾವಣಾ ದೂರಿನಲ್ಲಿ ಸದರಿ ಬಾಂಬೆ ಸಿಟಿ ಉತ್ತರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಈ ಇಬ್ಬರು ಅಭ್ಯರ್ಥಿಗಳ ಇಂತಹ ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಅನೂರ್ಜಿತಗೊಳಿಸಿ ಮರುಚುನಾವಣೆ ನಡೆಸಬೇಕು ಎಂದು ಕೋರಿದರು.

ಅಂತೆಯೇ ಅಂಬೇಡ್ಕರರು ಸಲ್ಲಿಸಿದ ಆ ಚುನಾವಣಾ ದೂರಿನ ವಿಚಾರಣೆ ಶ್ರೀ ಎನ್.ಜೆ.ವಾಡಿಯಾ, ಶ್ರೀ ಎಂ.ಕೆ.ಲಲ್ಕಾಕ, ಶ್ರೀ ಜಿ.ಪಿ.ಮುರುಡೇಶ್ವರ್ ರವರನ್ನೊಳಗೊಂಡ ಚುನಾವಣಾ ಟ್ರಿಬ್ಯೂನಲ್‍ನಲ್ಲಿ ನಡೆಯುತ್ತದೆ ಮತ್ತು ಸ್ವತಃ ಅಂಬೇಡ್ಕರರೇ ಆ ಟ್ರಿಬ್ಯೂನಲ್ ಮುಂದೆ ವಿಚಾರಣೆಗೆ ಹಾಜರಾಗಿ ಜನಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 123(2)ರ ಅಡಿಯಲ್ಲಿ ಚುನಾವಣೆಯಲ್ಲಿ ಮತದಾರರ ಮೇಲೆ ‘ಅಕ್ರಮ ಪ್ರಭಾವ’ ಬೀರಿದ ಆ ಇಬ್ಬರು ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ, ಸೆಕ್ಷನ್ 100ರ ಪ್ರಕಾರ “ಭಾರಿ ಅಕ್ರಮದ ಆಧಾರದಲ್ಲಿ ಸದರಿ ಚುನಾವಣೆಯನ್ನು ರದ್ದುಪಡಿಸುವಂತೆ””ಪ್ರಬಲ ವಾದ ಮಂಡಿಸುತ್ತಾರೆ. ಅಂದಹಾಗೆ ಜನಪ್ರತಿನಿಧಿ ಕಾಯ್ದೆ ಅಂದಿನ ನಿಯಮ 25(1)ರ ಪ್ರಕಾರವೇ ‘ಮತದಾರನೊಬ್ಬ ತನ್ನ ಎರಡೂ ಮತವನ್ನೂ ಒಂದೇ ಬ್ಯಾಲಟ್ ಬಾಕ್ಸ್‍ನಲ್ಲಿ ಹಾಕುವುದು ಕಾನೂನಿಗೆ ವಿರುದ್ಧ’.

ಹೀಗಿರುವಾಗ ಸ್ಪರ್ಧಿಸಿದ್ದ ಅಭ್ಯರ್ಥಿಗಳೇ ಕಾನೂನಿಗೆ ವಿರುದ್ಧವಾದ ಇಂತಹ ಕ್ರಿಯೆ ನಡೆಸಿ ಎಂದು ಮತದಾರರಿಗೆ ಬಹಿರಂಗವಾಗಿ ಪತ್ರಿಕಾ ಪ್ರಕಟಣೆಗಳ ಮೂಲಕ ಆಗ್ರಹಿಸುತ್ತಾರೆ ಎಂದರೆ ಇದು ಚುನಾವಣಾ ಅಕ್ರಮದ ಉದ್ದೇಶಪೂರ್ವಕ ಆಚರಣೆಯಲ್ಲದೆ ಮತ್ತೇನು? ಮತ್ತು ಅದು ನ್ಯಾಯಬದ್ಧ ಚುನಾವಣೆ ಹೇಗಾಗುತ್ತದೆ? ಮುಂದುವರಿದು ಅಂಬೇಡ್ಕರರು “ನಾನು ನನ್ನ ಸ್ಥಾನವನ್ನು 13000 ಓಟುಗಳಿಂದ ಕಳೆದುಕೊಂಡೆ. ಡಾ.ದೇಶ್‍ಮುಖ್ ಮತ್ತು ಶ್ರೀ ಡಾಂಗೆ ಇಂತಹ ನೀಚ ತಂತ್ರಗೈಯದಿದ್ದರೆ ಕೇವಲ ಶ್ರೀ ಡಾಂಗೆಯವರು ಕುಲಗೆಡಿಸಿದ ಆ 39000 ಓಟುಗಳಲ್ಲೇ ಖಂಡಿತ ನಾನು ಬಹುಸಂಖ್ಯೆಯ ಓಟುಗಳನ್ನು ಪಡೆಯುತ್ತಿದ್ದೆ. (ಆ ಮೂಲಕ ಆಯ್ಕೆಯಾಗುತ್ತಿದ್ದೆ). ಈ ನಿಟ್ಟಿನಲ್ಲಿ ಮತದಾರರ ಮೇಲೆ ಹೀಗೆ ಶ್ರೀ ಡಾಂಗೆ ಮತ್ತು ಶ್ರೀ ದೇಶ್‍ಮುಖ್ ಅಕ್ರಮ ಪ್ರಭಾವ ಬೀರಿದ್ದಕ್ಕೆ ಸಾಕ್ಷಿಯಾಗಿ ಭಾರೀ ಸಂಖ್ಯೆಯ ಕುಲಗೆಟ್ಟ ಮತಗಳು(73,333) ನ್ಯಾಯಾಲಯದ ಮುಂದಿದೆ.

ನ್ಯಾಯಾಲಯ ಈ ವ್ಯಾಪಕ ಅಕ್ರಮವನ್ನು ಗಣನೆಗೆ ತೆಗೆದುಕೊಳ್ಳಬೇಕು. ಇದರ ಆಧಾರದ ಮೇಲೆ ಬಾಂಬೆ ನಗರ ಉತ್ತರ ಆ ಕ್ಷೇತ್ರದಲ್ಲಿ ವ್ಯಾಪಕ ಪ್ರಮಾಣದ ಚುನಾವಣಾ ಭ್ರಷ್ಟ ಆಚರಣೆಗಳು ನಡೆದಿರುವುದರಿಂದ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 100ರ ಅಡಿಯಲ್ಲಿ ಆ ಚುನಾವಣೆಯನ್ನು ಅನೂರ್ಜಿತಗೊಳಿಸಬೇಕು” ಎಂದು ವಿಚಾರಣಾ ನ್ಯಾಯಾಲಯದ ಮುಂದೆ ತಮ್ಮ ನಿಖರ ವಾದ ಮಂಡಿಸುತ್ತಾರೆ.

ಅಂಬೇಡ್ಕರರ ಈ ವಾದಕ್ಕೇ ಜಯ ಸಿಕ್ಕಿತೆ? ಖಂಡಿತ ಇಲ್ಲ. ಎಲ್ಲ ಚುನಾವಣಾ ವಿಚಾರಣೆಗಳಂತೆ ಇದೂ ಕೂಡ ‘ಹಿಯರಿಂಗ್ ಮುಂದಕ್ಕೆ’ ಎಂಬಂತೆ ಮುಂದೆ ಹೋಯಿತು. ಅಂಬೇಡ್ಕರರಿಗೆ ನ್ಯಾಯ ಧಕ್ಕಲಿಲ್ಲ. ಆದರೆ ಸತ್ಯ? ಅಂದರೆ ಅಂಬೇಡ್ಕರರನ್ನು ಈ ದೇಶದ ಪ್ರಥಮ ಲೋಕಸಭಾ ಚುನಾವಣೆಯಲ್ಲಿ ತಂತ್ರಗೈದು ಸೋಲಿಸಿದ ಸತ್ಯ? ಅವರೇ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ರೂಪದಲ್ಲಿ ಸದ್ಯ ನಮ್ಮ ಮುಂದೆ ಇದೆ. ಖಂಡಿತ, ಹೆಂಡ, ಬಾಡು, ದುಡ್ಡಿಗೆ ಚುನಾವಣೆ ಗೆಲ್ಲುತ್ತಿರುವ ಈ ಕಾಲದಲ್ಲಿ, ಹಾಗೆಯೇ ವಿವಿಧ ಜಾತಿಗಳನ್ನು ಎತ್ತಿಕಟ್ಟಿ, ಅಭ್ಯರ್ಥಿಗಳ ಮೂಲಕ ನಾನಾ ಅಪಪ್ರಚಾರ ನಡೆಸುವ ಈ ಕಾಲದಲ್ಲಿ ಅಂಬೇಡ್ಕರರ ಅಂದಿನ ಸೋಲು ಕೂಡ ಅಂತಹ ‘ಕಾಲದ’ ಕಹಿ ವಾಸ್ತವವಾಗುತ್ತದೆ.

ಯಾಕೆಂದರೆ ‘ವಿಕಿಪಿಡಿಯಾ ಅಂತರ್ಜಾಲ’ ತಾಣದಲ್ಲಿ ದಾಖಲಾಗಿರುವಂತೆ 1952ರ ಭಾರತದ ಪ್ರಥಮ ಲೋಕಸಭಾ ಚುನಾವಣೆಯ ಅತಿ ಪ್ರಮುಖ ಸೋಲು ಡಾ.ಅಂಬೇಡ್ಕರರದ್ದು! ಇಲ್ಲಿ ಪ್ರತ್ಯೇಕ ಮತದಾನ ಪದ್ಧತಿಯ ಅನಿವಾರ್ಯತೆಯನ್ನು ಕೂಡ ದಾಖಲಿಸಬೇಕಾಗುತ್ತದೆ. 1932ರಲ್ಲಿ ಅಂಬೇಡ್ಕರರು ಒತ್ತಾಯಿಸಿದ ಈ ಮತದಾನ ಪದ್ಧತಿ ಜಾರಿಯಾಗಿದಿದ್ದರೆ 1952ರಲ್ಲಿ ಅವರು ಖಂಡಿತ ಸೋಲುತ್ತಿರಲಿಲ್ಲ. ಜಿ.ವಿ.ದೇಶ್‍ಮುಖ್‍ರಂಥ ಹಿಂದೂ ಕೋಮುವಾದಿ ಅದೆಷ್ಟೇ ಕೋಮು ಪ್ರಚೋದನೆ ನಡೆಸಿದ್ದರೂ ‘ಪ್ರತ್ಯೇಕ ಮತದಾನ’ದ ಪರಿಶಿಷ್ಟರೇ ಪರಿಶಿಷ್ಟರಿಗೆ ಮಾತ್ರ ಮತ ಹಾಕುವ ಆ ಪದ್ಧತಿಯಲ್ಲಿ ಬಾಬಾಸಾಹೇಬರು ಸ್ಪಷ್ಟವಾಗಿ ಆಯ್ಕೆಯಾಗಿರುತ್ತಿದ್ದರು. ಆದರೆ ಅಂಬೇಡ್ಕರರ ಆ ಮಹತ್ವದ ಬೇಡಿಕೆಯನ್ನು ಮಹಾತ್ಮ ಗಾಂಧಿ ‘ಅರ್ಥಮಾಡಿಕೊಂಡು’ ಜಾರಿಯಾಗದಂತೆ ತಡೆದರು. ಆ ಮೂಲಕ ಅಂಬೇಡ್ಕರರ ಸೋಲಿಗೆ 1932ರಲ್ಲೇ ಗಾಂಧಿ ಮುನ್ನುಡಿ ಬರೆದಿದ್ದರು.

ಒಟ್ಟಾರೆ ಗಾಂಧಿಯವರ ಮುನ್ನುಡಿ ಮತ್ತು ಅದಕ್ಕೆ ಪೂರಕವಾಗಿ ಡಾಂಗೆ ಮತ್ತು ದೇಶ್‍ಮುಖ್‍ರ ಇಂತಹ ಚುನಾವಣಾ ಅಕ್ರಮದ ಬೆನ್ನುಡಿ ಈ ದೇಶದ ಜನರಿಗೆ ಓಟುಹಾಕುವ ಹಕ್ಕುಗಳಿಸಿಕೊಟ್ಟ ‘ಭಾರತದ ಪ್ರಜಾಪ್ರಭುತ್ವದ ಪಿತ’ ಅಂಬೇಡ್ಕರರ ಸೋಲಿಗೆ ಕಾರಣವಾದವು ಎಂಬುದು ಪ್ರಜಾಪ್ರಭುತ್ವದ ವ್ಯಂಗ್ಯವೆನಿಸಿದರೂ ಘಟಿಸಿರುವುದಂತೂ ಸತ್ಯ.

 –ರಘೋತ್ತಮ ಹೊ.ಬ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

Published

on

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.

1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)

ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್‌ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.

2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ

ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.

3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)

ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.

4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ

ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.

5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)

ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.

6. ಸಮನ್ವಯದ ದಾರಿ….

ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ3 days ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ4 days ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ6 days ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ1 week ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

ದಿನದ ಸುದ್ದಿ1 week ago

ಕುಂದುವಾಡದಲ್ಲಿ ದೂಡಾ ಹೊಸ ಬಡಾವಣೆ ನಿರ್ಮಾಣ ಯೋಜನೆ ಕೈ ಬಿಡಲು ರೈತರ ಆಗ್ರಹ | ವಸತಿ ಯೋಜನೆ ಕೈ ಬಿಡಿ ಎಂದು ದೂಡಾಗೆ ಸೂಚಿಸಿದ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ದೂಡಾದಿಂದ ನಿರ್ಮಾಣ ಮಾಡಲು ಹೊರಟಿರುವ ವಸತಿ(ಹೊಸ ಲೇ ಔಟ್) ಯೋಜನೆಯನ್ನ ಈ ಕೂಡಲೇ ಕೈ ಬಿಡಬೇಕು ಎಂದು ರೈತರು ನಗರಾಭಿವೃದ್ದಿ...

ದಿನದ ಸುದ್ದಿ1 week ago

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ ....

ದಿನದ ಸುದ್ದಿ2 weeks ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ2 weeks ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

ದಿನದ ಸುದ್ದಿ2 weeks ago

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ....

Trending