Connect with us

ದಿನದ ಸುದ್ದಿ

ಪ್ರಖ್ಯಾತ ನೇತ್ರತಜ್ಞ ಡಾ.ಎಂ.ಸಿ.ಮೋದಿ ಬಗ್ಗೆ ನಿಮಗೆಷ್ಟು ಗೊತ್ತು..!?

Published

on

  • ಸಂಗಮೇಶ ಎನ್ ಜವಾದಿ, ಕೊಡಂಬಲ

ಭಾರತದ ಪ್ರಖ್ಯಾತ ನೇತ್ರತಜ್ಞರಲ್ಲೊಬ್ಬರು,ಅವರ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟ ವೃತ್ತಿ ಜೀವನದಲ್ಲಿ ಸುಮಾರು 7 ಲಕ್ಷಕ್ಕಿಂತ ಹೆಚ್ಚು ಜನರಿಗೆ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯ ಲೋಕದಲ್ಲಿ ಜಗತ್ತಪ್ರಸಿದ್ದಿ ಪಡೆದಿರುವ ಎಂ.ಸಿ.ಮೋದಿಯವರ ಸೇವೆ ಅಜರಾಮ ಮತ್ತು ಅನನ್ಯ ಎಂದೇ ಹೇಳಬೇಕಾಗುತ್ತದೆ.

ಅಂದು ಮುಂಬೈ ಒಂದರ ಸಭೆಯಲ್ಲಿ ಸೇರಿದ್ದ ಅನೇಕ ದೇಶಭಕ್ತ ಮಹನೀಯರ ಮಾತುಗಳಿಂದ ಪ್ರಭಾವಿತರಾಗಿ,ತಮಗಿದ್ದ ಸಾವಿರಾರು ರೂಪಾಯಿಗಳ ಆದಾಯದ ಮೂಲವಾಗಿದ್ದ ಖಾಸಗಿ ವೈದ್ಯ ವೃತ್ತಿಯನ್ನು ತೊರೆದು, ಬಿಡಿಗಾಸು ಪಡೆಯದೇ ಅಂಧರಿಗೆ ನೇತ್ರಚಿಕಿತ್ಸೆ ಮಾಡಲು ಸಂಕಲ್ಪಿಸಿ ಸಾವಿರಾರು ಜನರಿಗೆ ನೇತ್ರ ಶಸ್ತ್ರಚಿಕಿತ್ಸೆ ಮಾಡುವುದರೊಂದಿಗೆ ಜನಸಾಮಾನ್ಯರ ಪ್ರೀತಿ – ಸ್ನೇಹಕ್ಕೆ ಸಾಕ್ಷಿಯಾಗುವ ಮೂಲಕ ವಿಶ್ವ ಗಿನ್ನಿಸ್ ದಾಖಲೆ ಮಾಡಿದ ಈ ನಾಡಿನ ಧೀಮಂತ ವೈದ್ಯ ಲೋಕದ ವೈದ್ಯರಾದ ಮುರುಗಪ್ಪ ಚನ್ನವೀರಪ್ಪ ಮೋದಿಯವರು ಎಂದು ಹೆಮ್ಮೆಯಿಂದ ಹೇಳುತ್ತೇವೆ.

ಜನನ,ಕಾಯಕ ಜೀವನ

ಮುರಿಗೆಪ್ಪ ಚನ್ನವೀರಪ್ಪ ಮೋದಿಯವರು ಕರ್ನಾಟಕ ರಾಜ್ಯದ ಬಾಗಲಕೋಟೆ ಜಿಲ್ಲೆಯ ಬೀಳಗಿಯ ಗ್ರಾಮದ ಚನ್ನವೀರಪ್ಪ ಮತ್ತು ದುಂಡಮ್ಮ ದಂಪತಿಗಳ ಮಗನಾಗಿ ದಿನಾಂಕ 04-10-1916 ರಲ್ಲಿ ಜನಿಸಿದರು. ಜಮಖಂಡಿಯ ಪಿ ಬಿ ಶಾಲೆಯಲ್ಲಿ ಪ್ರಾಥಮಿಕ ,ಪ್ರೌಢ ಶಿಕ್ಷಣ ಪಡೆದು ನಂತರ ಬಡತನದ ನಡುವೆಯೂ ವಿದ್ಯಾರ್ಜನೆ ಮುಂದುವರೆಸಿ ಬೆಳಗಾವಿ ಆಯುರ್ವೇದ ಕಾಲೇಜಿನಲ್ಲಿ ಅಭ್ಯಾಸ ಮಾಡಿದರು.

ತದನಂತರ ಮತ್ತೆ ಕೆಬಿ‌ಎಚ್‌ಬಿ ಕಣ್ಣಿನ ಆಸ್ಪತ್ರೆ ಹಾಗೂ ರಾಮವಾಡಿ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ಶಿಕ್ಷಣ ಪಡೆದರು.ಇದಲ್ಲದೆ ಮೋದಿಯವರು ಕೊಲಂಬಿಯಾ ಮತ್ತು ನ್ಯೂಯಾರ್ಕ್ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗಳಿಸಿದರು.ನಂತರ ಬೆಳಗಾವಿಯಲ್ಲಿ ಅವರು ಕಾಯಕ ಜೀವನ ಆರಂಭಿಸಿ ದಾವಣಗೆರೆಯಲ್ಲಿ ನೆಲೆಸಿದರು.

1942 ರಲ್ಲಿ ಕ್ವಿಟ್ ಇಂಡಿಯಾ ಚಳುವಳಿಯ ಸಮಯದಲ್ಲಿ ಮಹಾತ್ಮ ಗಾಂಧಿಯವರ ಭಾಷಣದಿಂದ ಪ್ರೇರಿತರಾಗಿ ಕೆಲವೇ ಸ್ವಯಂಸೇವಕರ ಜತೆ ಹಳ್ಳಿಗಳಿಗೆ ಹೋಗಿ ರೋಗಿಗಳಿಂದ ಹಣ ಪಡೆಯದೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುತ್ತಿದ್ದರು,ಮಾಡಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ.

ಜೊತೆಗೆ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಮಾಡಿರುತ್ತಾರೆ. ಕಣ್ಣಿನ ಪೊರೆ (ಕ್ಯಟರಾಕ್ಟ್) ತೆಗೆಯುವ ಶಸ್ತ್ರ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದ್ದ ಡಾ.ಮೋದಿಯವರು ಪ್ರತಿ ಗ್ರಾಮದಲ್ಲೂ ಶಾಲೆ, ಕಾಲೇಜುಗಳನ್ನು ತೆಗೆದುಕೊಂಡು ಅದನ್ನೇ ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸಿ ಸತತವಾಗಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರು.

ರಷ್ಯಾ ಮತ್ತು ಅಮೇರಿಕ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲೂ ಅವರು ಸೇವೆ ಸಲ್ಲಿಸಿ ಗೌರವಗಳಿಗೆ ಪಾತ್ರರಾಗಿದ್ದಾರೆ.ಇದಲ್ಲದೆ ದಾವಣಗೆರೆ, ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕಣ್ಣು ಚಿಕಿತ್ಸಾಲಯಗಳನ್ನು ಸ್ಥಾಪಿಸಿದ ಶ್ರೀಯುತರು ತಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಸೇವೆ ಒದಗಿಸುತ್ತಿದ್ದರು.

ಸಾಮೂಹಿಕ ನೇತ್ರ ಚಿಕಿತ್ಸೆ ಹಾಗೂ ಸಂಚಾರಿ ಘಟಕವನ್ನು ತೆರೆದ ಮೊದಲ ವೈದ್ಯ ಎಂಬ ಖ್ಯಾತಿಯನ್ನು ಗಳಿಸಿದ್ದ ಹಿರಿಮೆ ಇವರದು ಜೊತೆಗೆ ಮೋದಿಯವರು ತಮ್ಮ ಸ್ವಂತ ಹಣವನ್ನು ವ್ಯಯಿಸಿ ಬಡಜನರ ಸೇವೆ ಮಾಡುತ್ತಿದ್ದರು ಎಂಬುದು ನಾವ್ಯಾರೂ ಮರೆಯಬಾರದು.

ಇನ್ನು ಕಣ್ಣಿನ ಆರೋಗ್ಯದ ಕುರಿತು ಅವರ ಮನಸ್ಸು ಎಷ್ಟು ತುಡಿಯುತ್ತಿತ್ತೆಂದರೆ, ರೈಲಿನಲ್ಲಿ ಪ್ರಯಾಣ ಮಾಡುವಾಗಲೂ ಅಲ್ಲಿನ ಪ್ರಯಾಣಿಕರ ಕಣ್ಣುಗಳನ್ನು ಉಚಿತವಾಗಿ ಪರೀಕ್ಷಿಸಿ ಸಲಹೆ ನೀಡುತ್ತಿದ್ದರು ಎನ್ನುವುದು ಮರೆಯುವಂತಿಲ್ಲ.
ಡಾ. ಮೋದಿಯವರೇ ಹೇಳುತ್ತಿದ್ದ ಹಾಗೆ ಮೊದ ಮೊದಲು ರೋಗಿಗಳು ಇವರ ಶಿಬಿರಕ್ಕೆ ಬರಲು ಹಿಂಜರಿಯುತ್ತಿದ್ದರು.

ಆಪರೇಷನ್‌ ಪದ ಕೇಳಿ ಶಿಬಿರಕ್ಕೆ ಬಂದವರಲ್ಲಿ ಕೆಲವರು ಓಡಿ ಹೋಗುತ್ತಿದ್ದರು. ಆದರೆ ಕ್ರಮೇಣ ಶಸ್ತ್ರ ಚಿಕಿತ್ಸೆಗೊಳಗಾಗಿ ದೃಷ್ಟಿಯನ್ನು ಮತ್ತೆ ಪಡೆದವರನ್ನು ಕಂಡು ಶಿಬಿರಕ್ಕೆ ಬರುವವರು ಹೆಚ್ಚಾದರು. ಹೀಗೆ ಅವರ ಸೇವೆ ನಾಡಿನ ತುಂಬೆಲ್ಲ ಪಸರಿಸಿತ್ತು.

ಈ ಕಾರಣದಿಂದ ಅವರ ಸೇವೆಯನ್ನು ಗುರುತಿಸಿದ ಅಂದಿನ ಕರ್ನಾಟಕ ಸರ್ಕಾರ, ಏಕವ್ಯಕ್ತಿಯ ಯುದ್ಧ (one man’s war) ಎಂಬ ಒಂದು ಕಿರು ದೃಶ್ಯ ದಾಖಲೆಯನ್ನು ತಯಾರಿಸಿದ್ದು ವಿಶೇಷ ಹಾಗಾಗಿ ಅವರು ಮಾಡಿರುವ ಸೇವೆ ನಿಸ್ವಾರ್ಥ ಎಂಬುದು ಇದರಿಂದ ಗೊತ್ತಾಗುತ್ತದೆ.ಈ ಎಲ್ಲಾ ಕಾರಣಗಳಿಂದ ಲಕ್ಷಗಟ್ಟಲೆ ಅಂಧರಿಗೆ ದೃಷ್ಟಿ ನೀಡಿದ ಆ ಮಹಾನ್ ಚೇತನರ ಜ್ಞಾಪಕಾರ್ಥವಾಗಿ ದಾವಣಗೆರೆ ಹಾಗೂ ಬೆಂಗಳೂರಿನಲ್ಲಿ ಮೋದಿ ಕಣ್ಣಿನ ಆಸ್ಪತ್ರೆ ಎಂಬ ಹೆಸರಿನ ಆಸ್ಪತ್ರೆಯು ದಿನನಿತ್ಯ ನೂರಾರು ಜನರಿಗೆ ಸೇವೆ ನೀಡುವಲ್ಲಿ ನಿರಂತವಾಗಿದೆ.

ಗಾಂಧೀಜಿ ಪ್ರೇರಣೆ

ಭಾರತದಲ್ಲಿ ವ್ಯಾಪಕವಾಗಿ ಕಾಡುವ ಅಂಧತ್ವದ ನಿವಾರಣೆ ಇವರ ಬದುಕಿನ ಗುರಿಯಾಯಿತು. ಮಹಾತ್ಮ ಗಾಂಧಿಯವರ ಅರ್ಪಣಾಭಾವ, ಜನಸೇವೆ, ಪ್ರಭಾವ ಇವರ ಮೇಲೆ ಹೆಚ್ಚು ಪರಿಣಾಮ ಬೀರಿತು. ಸಮಾಜದ ಒಳಿತಿಗಾಗಿ ದುಡಿಯಲು ತಮ್ಮನ್ನು ತಾವು ಅರ್ಪಿಸಿಕೊಂಡರು. ವೈಯಕ್ತಿಕ ಸುಖ ಸಂತೋಷ ತ್ಯಜಿಸಿ, ತಮ್ಮ ಪ್ರತಿಭೆ ಮತ್ತು ಪರಿಣತಿಯನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಕಣ್ಣಿಲ್ಲದವರಿಗೆ ಮೋದಿ ಬೆಳಕಾದರು ಬಂಧುಗಳೆ.

ವಿಶ್ವ ದಾಖಲೆ

ಮೋದಿಯವರು ತಿರುಪತಿಯಲ್ಲಿ ಒಂದೆ ದಿನದಲ್ಲಿ 833 ಶಸ್ತ್ರ ಚಿಕಿತ್ಸೆ ಮಾಡಿ ವಿಶ್ವ ದಾಖಲೆ ಸ್ಥಾಪಿಸಿದರು. ಒಟ್ಟಾರೆ 7 ಲಕ್ಷಕ್ಕೂ ಹೆಚ್ಚು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದನ್ನು ಗಿನ್ನಿಸ್ ದಾಖಲೆಗಳ ಪುಸ್ತಕದಲ್ಲಿ ಸೇರಿಸಲಾಗಿದೆ. ವೈದ್ಯಕೀಯ ವೃತ್ತಿಯಲ್ಲಿ ಮೋದಿಯವರ ಸಾಧನೆ ಅನುಪಮ ಮತ್ತು ಅದ್ವಿತೀಯ.

ಭಾರತದ ಬಹುತೇಕ ಪ್ರದೇಶದಲ್ಲಿ ಸಂಚರಿಸಿ, ದೃಷ್ಟಿಹೀನರಿಗೆ ದೃಷ್ಟಿ ಕೊಟ್ಟ ಖ್ಯಾತಿ ಇವರದು. ಸಂಚಾರಿ ನೇತ್ರ ಚಿಕಿತ್ಸಾಲಯವನ್ನು ಸ್ಥಾಪಿಸಿದ ಮೊದಲ ವ್ಯಕ್ತಿ. ಈಗ ಇದು ಬೃಹತ್ತಾಗಿ ಬೆಳೆದಿದೆ. ಸಾಮೂಹಿಕ, ಉಚಿತ ನೇತ್ರ ಚಿಕಿತ್ಸೆಯನ್ನು ಪ್ರಾರಂಭಿಸಿದವರಲ್ಲಿ ಇವರೇ ಮೊದಲಿಗರು. ಅಂಧತ್ವ ನಿವಾರಣೆಗೆ ಇವರು ಹಮ್ಮಿಕೊಂಡ ಆಂದೋಲನದಲ್ಲಿ 1993ರವರೆಗೆ 6,10,564 ಜನರ ಕಣ್ಣುಗಳ ಶಸ್ತ್ರ ಚಿಕಿತ್ಸೆಯನ್ನೂ, 1,21,18,630ಕ್ಕೂ ಹೆಚ್ಚಿನ ರೋಗಿಗಳ ಕಣ್ಣು ತಪಾಸಣೆಯನ್ನು ಇವರು ಮಾಡಿದ್ದಾರೆ.

ಒಂದೇ ದಿನದಲ್ಲಿ ತಿರುಪತಿಯಲ್ಲಿ 833 ಮಂದಿಗೆ ಮೋತಿಬಿಂದು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿ ಗಿನ್ನೆಸ್ ದಾಖಲೆ ಸ್ಥಾಪಿಸಿದ್ದಾರೆ. ಈ ಹಿಂದೆ ಇಂಥ ದಾಖಲೆ ಕೆನಡದ ಆಂಟೇರಿಯೋದ ವೈದ್ಯ ಡಾ. ರಾಬರ್ಟ್ ಮ್ಯಾಕ್ಲ್ಯೂರ್ ಅವರ ಹೆಸರಿನಲ್ಲಿತ್ತು. ಈ ವೈದ್ಯ (1924-78) 20,424 ಶಸ್ತ್ರ ಚಿಕಿತ್ಸೆ ಮಾಡಿ ದಾಖಲೆ ಸ್ಥಾಪಿಸಿದ್ದ. ಡಾ. ಮೋದಿಯವರು ತಮ್ಮ ಜೀವಿತಾವಧಿಯಲ್ಲಿ ಕಣ್ಣಿನ ರೋಗಿಗಳನ್ನು ತಪಾಸಣೆ ಮಾಡಲು 46,120 ಹಳ್ಳಿಗಳನ್ನು ಸಂದರ್ಶಿಸಿದ್ದರು.

ಅಂಧರ ಬಾಳಿಗೆ ಬೆಳಕಾದರ ಡಾ.ಮೋದಿ: ಆಗಿನ ಕಾಲಕ್ಕೆ ಖ್ಯಾತ ನೇತ್ರ ವೈದ್ಯರೆಂದು ಹೆಸರು ಪಡೆದ ಮೋದಿಯವರ ಪ್ರೊಫೆಸರ್ ಆಗಿದ್ದ ಡಾ. ಡಿ.ಎಸ್. ಸರ್‍ದೇಸಾಯ್ ಅವರು ಪಾಟ್ನಾ ಮತ್ತು ಗುಜರಾತಿನಲ್ಲಿ ಹಮ್ಮಿಕೊಂಡಿದ್ದ ನೇತ್ರ ಚಿಕಿತ್ಸೆಯ ಶಿಬಿರದಲ್ಲಿ ಭಾಗವಹಿಸಲು ಮೋದಿಯವರನ್ನು ಆಹ್ವಾನಿಸಿದರು. ಗುರುವಿನ ಜೊತೆ ಕೈಜೋಡಿಸಿ ಸ್ವತಂತ್ರವಾಗಿ ಮೋದಿಯವರು 20 ಮಂದಿಯ ಕಣ್ಣಿನ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿ ಸೈ ಎನಿಸಿಕೊಂಡರು.

ಗ್ರಾಮೀಣ ಜನತೆಗೆ ಸೇವೆ ಮಾಡಲು ಅವರಿಗೆ ಇದು ಮತ್ತಷ್ಟು ಪ್ರೇರಕ ಶಕ್ತಿಯನ್ನು ಕೊಟ್ಟಿತು. ಇದರ ಹಿಂದೆಯೇ ಧಾರವಾಡ ಜಿಲ್ಲೆಯ ನರಗಲ್ ಹಳ್ಳಿಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಯ ಶಿಬಿರವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಸ್ಥಳೀಯರಿಗೆ ಆಗ ಶಸ್ತ್ರ ಚಿಕಿತ್ಸೆಗೆ ತಮ್ಮನ್ನು ಒಡ್ಡಿಕೊಳ್ಳಲು ಇನ್ನೂ ಅಳುಕಿತ್ತು. ಇದನ್ನು ಮನಗಂಡ ಮೋದಿಯವರು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ರೋಗಿಗಳನ್ನುದ್ದೇಶಿಸಿ ಅದು ಅಪಾಯಕಾರಿಯಲ್ಲ ಎಂದು ಮನವರಿಕೆ ಮಾಡಿಕೊಡಲು ದೀರ್ಘ ಪ್ರವಚನವನ್ನೇ ನೀಡುತ್ತಿದರು. ಇದರಿಂದ ಪ್ರೇರಿತರಾಗಿ ಕಣ್ಣಿನ ರೋಗಿಗಳು ಶಸ್ತ್ರ ಚಿಕಿತ್ಸೆಗೆ ಮುಂದಾಗುತ್ತಿದರು.

ಕೇವಲ ಎರಡೇ ಗಂಟೆಯಲ್ಲಿ 20 ಜನರಿಗೆ ಯಶಸ್ವಿಯಾಗಿ ಚಿಕಿತ್ಸೆ ಮಾಡಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.ಹೀಗೆ ಅಂಧರು ನನ್ನ ಬಳಿಗೆ ಬರಲು ಶಕ್ತರಲ್ಲ. ನಾನೇ ಅವರ ಬಳಿಗೆ ಹೋಗಬಾರದೇಕೆ? ಎಂದು ಯೋಚನೆ ಮಾಡುವ ಮೂಲಕ ಲಕ್ಷಾಂತರ ಅಂಧರ ಬಳಿಗೆ ತೆರಳಿ ಅವರ ಕಷ್ಟಕ್ಕೆ ಮಿಡಿದ ಹೃದಯ ಇವರದಾಗಿತ್ತು.ಇದಲ್ಲದೆ ತಮ್ಮ ಸುತ್ತ ತ್ಯಾಗಜೀವಿಗಳ ದೊಡ್ಡ ಗುಂಪನ್ನೇ ಬೆಳೆಸಿ, ಮಾನವೀಯ ಸೇವೆಗೆ ನಿಂತ ಮಹಾನ್ ವ್ಯಕ್ತಿ ಇವರು.

ಇಂಥವರು ಕೂಡ ತಮ್ಮ ಬದುಕಿನಲ್ಲಿ ಕೆಲವೊಂದು ಕಹಿ ಪ್ರಸಂಗಗಳನ್ನು ಎದುರಿಸಬೇಕಾಯಿತು. ಆಧುನಿಕ ಶಸ್ತ್ರ ಚಿಕಿತ್ಸಾ ವೈದ್ಯರು, ಡಾ. ಮೋದಿಯವರು ಕಳಪೆ ಪರಿಸರದಲ್ಲಿ ಶಸ್ತ್ರ ಕ್ರಿಯೆಯನ್ನು ನಡೆಸುತ್ತಾರೆಂದು ದೂರಿದ್ದರು. ಜೊತೆಗೆ ಮೋದಿಯವರ ವೈದ್ಯಕೀಯ ಹಿನ್ನೆಲೆ ಕೇವಲ ಎಲ್.ಐ.ಎಮ್. ಎಂದೂ ಇತರ ವೈದ್ಯರಿಗಿರುವಂತೆ ಎಲ್.ಸಿ.ಪಿ.ಎಸ್.(ಲೈಸೆನ್ಸಿಯೇಟ್ ಆಫ್ ದಿ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್) ಅಲ್ಲವೆಂದೂ ಅವರು ಕಣ್ಣಿನ ಶಸ್ತ್ರ ಚಿಕಿತ್ಸೆ ನಡೆಸಲು ಅರ್ಹರಲ್ಲವೆಂದೂ ಆರೋಪಿಸಿದ್ದರು.

ಕರ್ನಾಟಕ ಸರ್ಕಾರ ಇಂಥ ಆರೋಪಗಳನ್ನು ಸ್ವೀಕರಿಸಲು ಸಿದ್ಧವಿರಲಿಲ್ಲ. ಕಣ್ಣಿನ ಶಸ್ತ್ರ ಚಿಕಿತ್ಸೆಯ ಯಾವುದೇ ಪರಿಣತರಿಗಿಂತ ಇವರು ತ್ವರಿತವಾಗಿ ಚಿಕಿತ್ಸೆ ನಡೆಸುತ್ತಾರೆಂಬುದನ್ನೂ ಒಪ್ಪಿಕೊಂಡಿತು. ಮೋದಿಯವರ ವೃತ್ತಿಪರ ವೈಶಿಷ್ಟ್ಯವೆಂದರೆ ಮೋತಿಬಿಂದು ಶಸ್ತ್ರ ಚಿಕಿತ್ಸೆಗೆ ಇವರು ತೆಗೆದುಕೊಳ್ಳುತ್ತಿದ್ದ ಸಮಯ ಕೇವಲ 14 ಸೆಕೆಂಡುಗಳು ಅಷ್ಟೇ ಆಗಿತ್ತು ಬಂಧುಗಳೆ.

ಗೌರವ ಪ್ರಶಸ್ತಿಗಳು

ಡಾ.ಮೋದಿಯವರ ಸೇವೆ ಮತ್ತು ಸಾಧನೆಗಳನ್ನು ಶ್ಲಾಘಿಸಿ ಕೇಂದ್ರ ಸರಕಾರದಿಂದ 1956 ರಲ್ಲಿ ಪದ್ಮಶ್ರೀ ಪ್ರಶಸ್ತಿ ಹಾಗೂ 1968 ರಲ್ಲಿ ಪದ್ಮಭೂಷಣ ಪ್ರಶಸ್ತಿ ಗೌರವಿಸಲಾಗಿದೆ.ಇನ್ನು ಮೈಸೂರು, ಕರ್ನಾಟಕ ಮತ್ತು ಪುಣೆ ವಿಶ್ವವಿದ್ಯಾಲಯಗಳು ಶ್ರೀಯುತರಿಗೆ ಗೌರವ ಡಾಕ್ಟರೇಟ್ ನೀಡಿವೆ.ಅಲ್ಲದೆ ನೈಟ್‌ ಆಫ್ ಬ್ಲೈಂಡ್, ಅಂಬಾಸೆಡರ್ ಆಫ್ ಗುಡ್ ವಿಲ್ ಪ್ರಶಸ್ತಿ ಹಾಗೂ ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿದೆ.ಇನ್ನ ಅಮೆರಿಕದ Spartanburg ನ ಮೇಯರ್ ಇವರಿಗೆ ಗೌರವ ಪೌರತ್ವ ನೀಡಿ ಗೌರವಿಸಿದ್ದಾರೆ.

ಜೊತೆಗೆ ಕರ್ನಾಟಕ ರಾಜ್ಯದ ವಿಧಾನ ಪರಿಷತ್ತಿನ ಸದಸ್ಯರಾಗಿ 1990 ರಲ್ಲಿ ನೇಮಕಗೊಂಡು ಸೇವೆ ಸಹ ಸಲ್ಲಿಸಿದ್ದಾರೆ ಎಂಬುದು ಮತ್ತೊಂದು ವಿಶೇಷ ಹಾಗೆ ಮೋದಿಯವರು ಎಲ್ಲಾ ಪ್ರಶಸ್ತಿ ಪುರಸ್ಕಾರಗಳಿಂದ ಬಂದ ಹಣವನ್ನು ಬಡವರಿಗಾಗಿ ವ್ಯಯಿಸಿದ್ದಾರೆ.ಹೀಗೆ ಹತ್ತು ಹಲವು ಸಂಘ,ಸಂಸ್ಥೆಗಳಿಂದ ಹಲವಾರು ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿವೆ.

ಕೊನೆಯ ಮಾತು

ಸಾವಿರಾರು ಬಡವರಿಗೆ ಕಣ್ಣಿನ ದೃಷ್ಟಿ ನೀಡಿ ನೇತ್ರದಾನಿ ಎಂದೇ ಹೆಸರುವಾಸಿಯಾಗಿದ್ದ ಡಾ.ಎಂ.ಸಿ.ಮೋದಿಯವರು ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಸೇರಿ ಹಲವಾರು ರಾಜ್ಯಗಳಲ್ಲಿ ದೃಷ್ಟಿದೋಷದ ಸಾವಿರಾರು ರೋಗಿಗಳಿಗೆ ದೃಷ್ಟಿ ನೀಡುವ ಮೂಲಕ ನೇತ್ರದಾನಿ ಎಂಬ ಬಿರುದು ಪಡೆದುಕೊಂಡಿದ್ದರು. ಜನ ಸೇವೆ ಮೂಲಕ ರಾಜ್ಯ ಹೊರರಾಜ್ಯಗಳಲ್ಲದೆ ದೇಶ ವಿದೇಶಗಳಲ್ಲೂ ಡಾ.ಎಂ.ಸಿ.ಮೋದಿ ಅವರು ಮನೆಮಾತಾಗಿದ್ದರು.

ಸಾಮೂಹಿಕ ನೇತ್ರ ಚಿಕಿತ್ಸಾ ಹಾಗೂ ಸಂಚಾರಿ ಘಟಕವನ್ನು ತೆರೆದ ಮೊದಲ ವೈದ್ಯ ಎಂಬ ಖ್ಯಾತಿಯನ್ನೂ ಕೂಡ ಗಳಿಸಿದ್ದ ಅವರು, ರೈಲಿನಲ್ಲಿ ಪ್ರಯಾಣಿಸುವಾಗಲೂ ಅಲ್ಲಿನ ಪ್ರಯಾಣಿಕರ ಕಣ್ಣುಗಳನ್ನು ಪರೀಕ್ಷಿಸುತ್ತಿದ್ದರು. ಡಾ. ಮೋದಿ ಸಾವಿನಲ್ಲೂ ಸಾರ್ಥಕತೆ ಪಡೆದವರು. ಅವರ ನಿಧನಾನಂತರ (11.11.2005) ಅವರ ಎರಡೂ ಕಣ್ಣಗಳನ್ನು ಅವರ ಕುಟುಂಬದವರು ಅಂಧರಿಗೆ ದಾನ ಮಾಡಿದರು.ಕಣ್ಣುಕೊಟ್ಟ ಅಣ್ಣ ಎಂಬ ಬಿರುದು ಈ ದೃಷ್ಟಿಯಿಂದಲೂ ಅವರ ಜೀವನ ಸಾರ್ಥಕವಾಯಿತು.

ಸುದ್ದಿದಿನ.ಕಾಂ | ವಾಟ್ಸಾಪ್ | 9980346243

ದಿನದ ಸುದ್ದಿ

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

Published

on

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.

ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.

ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending