Connect with us

ನೆಲದನಿ

ಜಾತಿ ಪ್ರಜ್ಞೆ ಮತ್ತು ಪ್ರಗತಿಪರತೆಯ ನಡುವೆ ಡಾ. ರಾಜ್..!

Published

on

  • ನಾ ದಿವಾಕರ

ಒಂದು ಸಮಾಜ ಮತ್ತು ಸಮಾಜೋ ಸಾಂಸ್ಕೃತಿಕ ಸ್ಥಿತ್ಯಂತರಗಳು ಒಬ್ಬ ನಟನನ್ನು ರೂಪಿಸುತ್ತದೆಯೋ ಅಥವಾ ಒಬ್ಬ ಚಿತ್ರ ನಟ ಸಾಮಾಜಿಕ ಚಿಂತನೆಗಳನ್ನು, ಸ್ವರೂಪವನ್ನು ತನ್ನ ಪಾತ್ರಗಳ ಮೂಲಕ ಬಿಂಬಿಸುತ್ತಾನೋ ? ಈ ಪ್ರಶ್ನೆ ಬಹುಶಃ ಭಾರತದಲ್ಲಿ ಮಾತ್ರ ಪ್ರಸ್ತುತತೆ ಪಡೆಯುತ್ತದೆ. ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಸ್ತುತ ಎನಿಸುತ್ತದೆ.

ಏಕೆಂದರೆ ಚಿತ್ರ ನಟರ ಮೂಲಕ ಸಮಾಜವನ್ನು ನೋಡುವ ಪರಂಪರೆಯೊಂದಿಗೇ , ಸಾಮಾಜಿಕ ನೆಲೆಯಲ್ಲಿ ನಿಂತು ಚಿತ್ರ ನಟರನ್ನು ನಿಷ್ಕರ್ಷೆಗೊಳಪಡಿಸುವ ಪರಂಪರೆಯೂ ಇಲ್ಲಿ ಬೆಳೆದುಬಂದಿದೆ. ಈ ಪರಂಪರೆಗೆ ಸುದೀರ್ಘ ಇತಿಹಾಸವೇನೂ ಇಲ್ಲ. ಬಹುಶಃ 1960ರ ದಶಕದ ನಂತರ ಕಂಡುಬಂದ ವಿದ್ಯಮಾನ ಇದು. 1970-80ರಲ್ಲಿ ಒಂದು ತಳಪಾಯವನ್ನು ನಿರ್ಮಿಸಿಕೊಂಡು ಈಗ ಬೃಹತ್ ವೃಕ್ಷವಾಗಿ ನಮ್ಮೆದುರು ನಿಂತಿದೆ.

ಮೂಲದಲ್ಲಿ ಈ ಬೃಹತ್ ವೃಕ್ಷಕ್ಕೆ ಬೀಜ ಬಿತ್ತಿದವರಾರು, ನೀರೆರೆದು ಪೋಷಿಸಿದವರಾರು ಎಂದು ನಾವು ಯೋಚಿಸುತ್ತಾ ಕುಳಿತರೆ ಕೊನೆಗೆ ನಮ್ಮನ್ನು ನಾವೇ ಹಳಿಯುತ್ತಲೋ, ನಮ್ಮ ಬೆನ್ನು ನಾವೇ ತಟ್ಟಿಕೊಳ್ಳುತ್ತಲೋ ಕಾಲ ಕಳೆಯಬೇಕಾಗುತ್ತದೆ. ಏಕೆಂದರೆ ಇದು ಸಾಮಾಜಿಕ ಪಲ್ಲಟಗಳಿಂದ ಉಗಮಿಸಿದ ವಿದ್ಯಮಾನವಲ್ಲ. ಬದಲಾಗಿ ಈ ವಿದ್ಯಮಾನದಿಂದ ಕೆಲವು ಸಾಮಾಜಿಕ ಪಲ್ಲಟಗಳು ಕಂಡುಬಂದವು.

ಚಲನ ಚಿತ್ರ ನಟರನ್ನು ನಮ್ಮ ನಡುವೆ ತಂದು ನಿಲ್ಲಿಸಿ ಮೌಲ್ಯಮಾಪನ ಮಾಡುವ ಮೂಲಕ ಅವರಲ್ಲಿ ನಮ್ಮ ಸುತ್ತಲಿನ ಮೌಲ್ಯಗಳನ್ನು ಕಂಡುಕೊಳ್ಳುವ ಯತ್ನ ಒಂದೆಡೆಯಾದರೆ, ಮತ್ತೊಂದೆಡೆ ರಜತ ಪರದೆಯ ಮೇಲೆ ನಮ್ಮ ಸುತ್ತಲಿನ ಸಮಾಜವನ್ನು ಮೂಡಿಸಿ ಮೌಲ್ಯಗಳನ್ನು ಬಿತ್ತುವ ಪ್ರಕ್ರಿಯೆಯೂ ಚಾಲನೆ ಪಡೆದಿದ್ದನ್ನು ನಾವು ಗಮನಿಸಬೇಕು.

ಇದರ ನೇರ ಪರಿಣಾಮವೇ 1960-70ರ ದಶಕದ ಸಾಮಾಜಿಕ ಕಥಾವಸ್ತುಗಳ ಚಲನಚಿತ್ರಗಳ ಮಹಾಪೂರ. ಇದು ಕೇವಲ ದಕ್ಷಿಣ ಭಾರತಕ್ಕೆ ಸೀಮಿತವಲ್ಲ. ಹಿಂದಿ ಚಿತ್ರರಂಗದಲ್ಲಿ 1940-50ರ ದಶಕಗಳಲ್ಲಿ ನಡೆದ ಪ್ರಯತ್ನಗಳು ನಮ್ಮಲ್ಲಿ ನಡೆದಿದ್ದು ತಡವಾಗಿ. ಏಕೆಂದರೆ ದಕ್ಷಿಣ ಭಾರತದ ಚಲನಚಿತ್ರ ರಂಗ ತನ್ನ ರಂಗಸಜ್ಜಿಕೆಯನ್ನು ಬದಲಿಸಲು ಹೆಚ್ಚು ಕಾಲ ಬೇಕಾಗಿತ್ತು.

ಪೌರಾಣಿಕ-ಭಕ್ತಿರಸ ಕಥನಗಳನ್ನು ದಾಟಿ, ಅದೇ ಕಥಾವಸ್ತುಗಳನ್ನು ಸಾಮಾಜಿಕ ಚೌಕಟ್ಟಿನಲ್ಲಿ ಅಳವಡಿಸುವ ಪ್ರಯತ್ನದ ಫಲ ಈ ಮನ್ವಂತರದ ಘಟ್ಟದಲ್ಲಿ ಕಾಣಬಹುದಾಗಿತ್ತು. ಇಂದಿಗೂ ಕೆಲವು ಸಂದೇಶಾತ್ಮಕ ಅಥವಾ ಕಾದಂಬರಿ ಆಧರಿತ ಚಿತ್ರಗಳನ್ನು ಹೊರಗಿಟ್ಟು ನೋಡಿದಾಗ ಮೂರು ರೀತಿಯ ಕಥನಗಳು ಪರದೆಯ ಮೇಲೆ ವಿಭಿನ್ನ ಶೈಲಿಯಲ್ಲಿ, ವೈವಿಧ್ಯಮಯ ಸ್ವರೂಪಗಳಲ್ಲಿ ಕಂಡುಬರುತ್ತವೆ.

ಒಂದು, ತಂದೆ ಮಗನ ಸಂಘರ್ಷ. ತಾನು ಪ್ರೀತಿಸುವ ಹುಡುಗಿಯನ್ನು ಪ್ರಾಣ ತೆತ್ತಾದರೂ ಪಡೆಯುವ ಛಲ, ಹಂಬಲ ಮತ್ತು ಹಪಹಪಿಯಿಂದ ನಾಯಕ ನಟ ತನ್ನ ಹೆತ್ತವರನ್ನೂ ಧಿಕ್ಕರಿಸಿ, ಸಾಯಲೂ ಸಿದ್ಧವಾಗುವ ಕಥಾವಸ್ತು. ಇದರ ಮೂಲ ಮುಘಲ್‍ಎ-ಅಝಮ್ ನಲ್ಲಿ ಕಾಣಬಹುದು. ಇದು ಚಾರಿತ್ರಿಕ ಹಿನ್ನೆಲೆಯ ಕಾಲ್ಪನಿಕ ಕಥಾವಸ್ತು ಇರುವ ಚಿತ್ರ.

ಎರಡನೆಯದು ಕಳ್ಳ ಪೊಲೀಸ್ ಆಟ. ಕೆಳವರ್ಗದ ಅಥವಾ ಬಡತನದ ಬೇಗೆಯಲ್ಲಿ ಬೆಂದು ತನ್ನ ಸಮಸ್ಯೆಗಳಿಗೆ ಸಾಮಾಜಿಕ ಸ್ಥಿತ್ಯಂತರಗಳೇ ಕಾರಣ ಎಂದು ಭಾವಿಸಿ ವಾಮಮಾರ್ಗದ ಮೂಲಕ ತನ್ನ ಜೀವನ ಸುಧಾರಣೆಗಾಗಿ ಕಳ್ಳತನ, ದರೋಡೆ, ಕೊಲೆ ಸುಲಿಗೆಯಲ್ಲೂ ತೊಡಗುವ ನಾಯಕನ ಸುತ್ತಲಿನ ಕಥಾವಸ್ತು. ಇದಕ್ಕೆ ಅಶೋಕ್ ಕುಮಾರ್ ನಟಿಸಿರುವ ಕಿಸ್ಮತ್ ಸ್ಪೂರ್ತಿ.

ಮೂರನೆಯದು ಬಡತನ, ಊಳಿಗಮಾನ್ಯ ದೌರ್ಜನ್ಯ, ಭೂಮಿಯ ಪ್ರಶ್ನೆ, ಗ್ರಾಮೀಣ ಬದುಕು ಮತ್ತು ಶೋಷಣೆಯ ವಿರುದ್ಧ ಸಿಡಿದೇಳುವ ಯುವ ಮನಸ್ಸಿನ ಚಿತ್ರಣ. ತಾಯಿ ಮತ್ತು ಮಗನ ನಡುವಿನ ತಾತ್ವಿಕ ಸಂಘರ್ಷ. ಇದನ್ನು ಮದರ್ ಇಂಡಿಯಾ ಚಿತ್ರದಲ್ಲಿ ಕಾಣಬಹುದು. ನಾಲ್ಕನೆಯದು ಅಣ್ಣ ತಮ್ಮಂದಿರ ನಡುವೆ ಸೈದ್ಧಾಂತಿಕ ಸಂಘರ್ಷ. ಸಮಾಜ ಬದಲಾವಣೆಗೆ ವ್ಯವಸ್ಥೆಯ ಒಳಗಿದ್ದುಕೊಂಡೇ ಹೋರಾಡುವ ಒಬ್ಬ, ವ್ಯವಸ್ಥೆಯ ವಿರುದ್ಧ ದಂಗೆ ಎದ್ದು ಹೋರಾಡುವ ಮತ್ತೊಬ್ಬ ಇವರ ನಡುವಿನ ಸಂಘರ್ಷ, ಪೊಲೀಸ್-ಡಕಾಯಿತ ಹೀಗೆ. ಈ ಕಥಾವಸ್ತು ಗಂಗಾ ಜಮುನಾ ಚಿತ್ರದಲ್ಲಿದೆ. ಈ ನಾಲ್ಕೂ ಚಿತ್ರಗಳು 1950-60ರ ನಡುವೆ ಬಂದವು.

1960ರ ದಶಕದ ನಂತರ ಇಲ್ಲಿಯವರೆಗೂ ಈ ನಾಲ್ಕು ಕಥಾವಸ್ತುಗಳನ್ನು ಹೊರತುಪಡಿಸಿದ ಚಲನಚಿತ್ರಗಳನ್ನು , ವಾಣಿಜ್ಯ ಚಿತ್ರಗಳ ವಲಯದಲ್ಲಿ ಕಾಣಲು ಸಾಧ್ಯವೇ ಇಲ್ಲ. ಇದರೊಳಗೇ Taming of the Shrew ಆಂಗ್ಲ ಕಥೆಯಲ್ಲಿನ, ಹಠಮಾರಿ ಹೆಣ್ಣನ್ನು ಮಣಿಸುವ ಕಥೆ ಸೇರಿಕೊಳ್ಳುತ್ತದೆ. ಅಲ್ಲಿಯವರೆಗೂ ಸಾಮಾಜಿಕ ಕಥಾವಸ್ತುಗಳಿಂದ ತುಸು ದೂರವೇ ಇದ್ದ ದಕ್ಷಿಣ ಭಾರತದ ಚಿತ್ರರಂಗಕ್ಕೆ ಈ ಸಂದರ್ಭದಲ್ಲಿ ನೆಲೆಯಾಗಿ ನಿಂತ ನಟರು ಎಂಜಿಆರ್, ಶಿವಾಜಿಗಣೇಶನ್, ಎನ್‍ಟಿಆರ್, ನಾಗೇಶ್ವರ್‍ರಾವ್, ಪ್ರೇಂ ನಜೀರ್ ಮತ್ತು ನಮ್ಮ ರಾಜಕುಮಾರ್. ಇವರ ವರ್ಚಸ್ಸು ಬೆಳೆಯುವುದರಲ್ಲಿ ಕಥೆಗಾರರ ಪಾತ್ರ ಬಹಳ ದೊಡ್ಡದು.

1960ರ ದಶಕ ಭಾರತೀಯ ಸಮಾಜದಲ್ಲಿ ಹಲವಾರು ಪಲ್ಲಟಗಳಿಗೆ, ವಿಪ್ಲವಗಳಿಗೆ ಸಾಕ್ಷಿಯಾಗಿತ್ತು. ಸಾಮಾಜಿಕ ಬದಲಾವಣೆಗಾಗಿ ಜನಸಾಮಾನ್ಯರಲ್ಲಿ ಇದ್ದ ತುಡಿತ ಸಾಹಿತ್ಯದಲ್ಲೂ ವ್ಯಕ್ತವಾಗತೊಡಗಿತ್ತು. ಒಂದು ಸ್ವಸ್ಥ ಸಮಾಜ ಎಂದರೆ ಹೀಗೇ ಇರಬೇಕು ಎನ್ನುವ ಚಿಂತನೆಗಳು ಸ್ಪಷ್ಟ ನೆಲೆ ಕಂಡುಕೊಂಡಿದ್ದೂ ಈ ದಶಕದಲ್ಲೇ. ಮತ್ತೊಂದೆಡೆ ರಾಜಕೀಯ ಬದಲಾವಣೆಗಳು ಈ ದಶಕದ ಉತ್ತರಾರ್ಧದಲ್ಲಿ ತೀವ್ರತೆ ಪಡೆದುಕೊಂಡರೂ, ಆರಂಭದಲ್ಲಿ ಮೌಲ್ಯಯುತ ಸಮಾಜ ಆದರ್ಶಪ್ರಾಯವಾಗಿತ್ತು.

ರಾಜಕೀಯ ವಲಯದಲ್ಲೂ ಇದೇ ರೀತಿಯ ಮೌಲ್ಯಯುತ ಅಭಿವ್ಯಕ್ತಿಗೆ ಅಂದು ಅವಕಾಶವಿತ್ತು. ಈ ಮೌಲ್ಯಗಳ ಮೂಲಕವೇ ಒಂದು ಸಭ್ಯ, ಸಂಯಮಶೀಲ, ಸಂವೇದನಾಶೀಲ ಸಮಾಜ ನಿರ್ಮಾಣ ಸಾಧ್ಯ ಎನ್ನುವ ಒಂದು ದೃಢ ಸಂಕಲ್ಪ ಸಾಹಿತ್ಯಕ ಸ್ವರೂಪ ಪಡೆದಂತೆಯೇ, ಸಂಘಟನಾತ್ಮಕ ಸ್ವರೂಪವನ್ನೂ ಪಡೆದಿತ್ತು. ಸಿನಿಮಾ ಮೂಲಕವೂ ಇದೇ ಅಭಿವ್ಯಕ್ತಿಯನ್ನು ಕಾಣಬಹುದಿತ್ತು.

ಈ ಸಂದರ್ಭದಲ್ಲಿ ಹೊರಬಂದ ಸಾಮಾಜಿಕ ಕಥಾವಸ್ತುವಿನ ಚಲನಚಿತ್ರಗಳು ಜನಸಾಮಾನ್ಯರನ್ನು ಹೆಚ್ಚಾಗಿ ಆಕರ್ಷಿಸಿದವು. ರಾಮಾಯಣದ ರಾಮ, ಮಹಾಭಾರತದ ಧರ್ಮರಾಯ, ಹರಿಶ್ಚಂದ್ರ ಕಾವ್ಯದ ಹರಿಶ್ಚಂದ್ರರನ್ನು ಜನರು ಸಾಮಾಜಿಕ ಚಿತ್ರಗಳ ನಾಯಕರಲ್ಲಿ ನೋಡಲು ಬಯಸುತ್ತಿದ್ದರು. ಡಾ ರಾಜ್ ಅಭಿನಯದ ನಮ್ಮ ಸಂಸಾರ, ನಂದಗೋಕುಲ, ದೇವರ ಮಕ್ಕಳು ಹೀಗೆ ಹಲವು ಚಿತ್ರಗಳನ್ನು ನೆನೆಯಬಹುದು. ಈ ಸಂದರ್ಭದಲ್ಲೇ ಎಂಜಿಆರ್ ತಮ್ಮ ರಾಜಕೀಯ ಪ್ರವೇಶಕ್ಕೆ ಅನುಕೂಲವಾಗುವಂತಹ ರಾಬಿನ್ ಹುಡ್ ಮಾದರಿಯ ಚಿತ್ರಗಳನ್ನು ಸಾಮಾಜಿಕ ಚೌಕಟ್ಟಿನಲ್ಲೇ ನೀಡಿದ್ದನ್ನೂ ಗಮನಿಸಬೇಕು. ರೈತರಿಗಾಗಿ, ಕಾರ್ಮಿಕರಿಗಾಗಿ, ಶೋಷಿತರಿಗಾಗಿ ತನ್ನ ಪ್ರಾಣ ನೀಡುವ ನಾಯಕ ಪರದೆಯ ಮೇಲೆ ವಿಜೃಂಭಿಸತೊಡಗಿದ್ದು ಈ ಅವಧಿಯಲ್ಲೇ.

ಇದರ ಮುಂದುವರೆದ ಭಾಗವಾಗಿ ದುಷ್ಟ ಶಿಕ್ಷಕ-ಶಿಷ್ಟ ರಕ್ಷಕನ ಪಾತ್ರವೂ ಮುನ್ನೆಲೆಗೆ ಬಂದಿತ್ತು. ಸಮಾಜದ ದುಷ್ಟ ಶಕ್ತಿಗಳನ್ನು ಸದೆಬಡಿಯುವ ಹೀರೋ ಕೊನೆಗೆ ಪ್ರಾಣ ತೆತ್ತರೂ ಜನ ಸ್ವೀಕರಿಸುತ್ತಿದ್ದುದನ್ನು 1960ರ ದಶಕದಲ್ಲಿ ಕಾಣಬಹುದಿತ್ತು. ಆದರೆ 1980ರ ನಂತರ ನಾಯಕ ನಟ ಸಾಯುವುದನ್ನು ಜನರು ಬಯಸುತ್ತಿರಲಿಲ್ಲ. ಇದು ಬೇರೆ ವಿಚಾರ. ಸಮಾಜದಲ್ಲಿ ದುಷ್ಟರಿದ್ದಾರೆ, ಅವರನ್ನು ಮುಗಿಸಬೇಕು, ಒಳ್ಳೆಯ ಸಮಾಜ ಕಟ್ಟಬೇಕು ಈ ಹಿನ್ನೆಲೆಯಲ್ಲಿ ಮನೆಮನೆಯಲ್ಲೂ ಕಂಡುಬಂದ ತಾಕಲಾಟಗಳನ್ನು, ಒಳಿತು ಕೆಡಕುಗಳನ್ನು ಪರದೆಯ ಮೇಲೆ ಬಿಂಬಿಸುವ ಮೂಲಕ ಸೋದರರ ನಡುವಿನ ಕಲಹಗಳು ಎಷ್ಟೋ ಚಿತ್ರಗಳ ಕಥಾವಸ್ತುವಾಗಿತ್ತು.

ಪುನಃ ಇಲ್ಲಿ ನಾಯಕ ನಟ ಧರ್ಮರಾಯ ಅಥವಾ ಶ್ರೀರಾಮ. ಕೆಲವೊಮ್ಮೆ ಹರಿಶ್ಚಂದ್ರನಂತೆ ಎಲ್ಲವನ್ನೂ ತ್ಯಾಗಮಾಡುವಂತೆಯೂ ಬಿಂಬಿಸಲ್ಪಟ್ಟ. ಖಳನಾಯಕನಿಗೆ ಸಿದ್ಧ ಮಾದರಿಗಳನ್ನು ಹುಡುಕಲಿಲ್ಲ. ನಾಯಕ ನಟರ ಈ ಮಾದರಿಗಳನ್ನೇ ವೀಕ್ಷಕರು ಸಮಾಜದಲ್ಲೂ ಹುಡುಕಲಾರಂಭಿಸಿದ್ದರು. ತಲೆ ಬಾಚುವ ಶೈಲಿಯಿಂದ ಹಿಡಿದು ಧರಿಸುವ ಉಡುಪು, ನಡಿಗೆಯ ಶೈಲಿಯವರೆಗೂ ಪರದೆಯ ಮೇಲಿನ ಹೀರೋಗಳು ಯುವ ಪೀಳಿಗೆಯ ಮೇಲೆ ಪ್ರಭಾವ ಬೀರಲಾರಂಭಿಸಿದ್ದರು.

ಹಾಗಾಗಿ ಸಿನಿಮಾ ಕಥೆ ಬರೆಯುವವರಿಗೆ ಇದೇ ಮೌಲ್ಯಗಳ ಚೌಕಟ್ಟಿನಲ್ಲೇ ಹೀರೋ ಪಾತ್ರವನ್ನು ಕಟ್ಟಿಕೊಡುವುದೂ ಅನಿವಾರ್ಯವಾಯಿತು. ಮುತ್ತುರಾಜ್ ಡಾ ರಾಜ್ ಆಗಿ ಉದಯಿಸಿದ್ದು ಹೀಗೆ. ನಮಗೆ ಡಾ ರಾಜ್ ಇಷ್ಟವಾಗುವುದಕ್ಕೂ ಇದೇ ಕಾರಣ. ತೆಲುಗಿನಲ್ಲಿ ಎನ್‍ಟಿಆರ್, ತಮಿಳಿನ ಎಂಜಿಆರ್ ಜನಪ್ರಿಯರಾದದ್ದೂ ಈ ಕಾರಣಕ್ಕೇ. ಈ ಚೌಕಟ್ಟಿನಿಂದ ಹೊರನಿಂತದ್ದು ಶಿವಾಜಿ, ನಾಗೇಶ್ವರರಾವ್.

ಇದನ್ನು ಅಪರಾಧ ಎಂದೇನೂ ಭಾವಿಸಬೇಕಿಲ್ಲ. ಆಗಿನ ಸಮಾಜ ಅದನ್ನು ಬಯಸಿತ್ತು, ಚಿತ್ರ ನಿರ್ಮಾಪಕರು ನೀಡಿದರು. ಆಗಿನ ಕಥಾವಸ್ತುಗಳು ಹೀರೋಗಾಗಿ ರೂಪುಗೊಳ್ಳುತ್ತಿರಲಿಲ್ಲ. ಹೀರೋ ಈ ಕಥಾವಸ್ತುವಿನ ಮೂಲಕ ಜನಮಾನಸದಲ್ಲಿ ಮನೆ ಮಾಡುತ್ತಿದ್ದ. ಇದು ಬದಲಾಗಿದ್ದು 1975-80ರ ನಂತರ. ನಾಯಕ ನಟನ ವರ್ಚಸ್ಸನ್ನು ಗಮನದಲ್ಲಿಟ್ಟುಕೊಂಡೇ ಕಥೆ ಹೆಣೆಯುವ ಪರಂಪರೆ ಆರಂಭವಾಗಿದ್ದು ಈ ದಶಕದಲ್ಲಿ. ಡಾ ರಾಜ್ ಸಹ ಇದಕ್ಕೆ ಹೊರತಾಗಲಿಲ್ಲ. ಡಾ ರಾಜ್ ಸ್ವಂತ ನಿರ್ಮಾಣ ಸಂಸ್ಥೆ ಆರಂಭವಾಗಿದ್ದೂ ಈ ಹಂತದಲ್ಲೇ. ಡಾ ರಾಜ್ ನಟನೆಯ ಚಿತ್ರಗಳನ್ನು ಈ ಎರಡು ಅವಧಿಗಳ ನಡುವೆ ಪರದೆಯನ್ನಿಟ್ಟು ನೋಡಿದರೆ ವ್ಯತ್ಯಾಸ ಸ್ಪಷ್ಟವಾಗಿ ತಿಳಿಯುತ್ತದೆ.

ಮತ್ತೊಂದೆಡೆ ಚಿತ್ರ ನಟರನ್ನು ಜಾತಿಯ ಚೌಕಟ್ಟಿನಲ್ಲಿ ನೋಡುವ ಪರಂಪರೆ ಆರಂಭವಾದದ್ದೂ ಈ ಸಂದರ್ಭದಲ್ಲೇ ಹೆಚ್ಚು. ಚಿತ್ರನಟರನ್ನು ಬಾಹ್ಯ ಸಮಾಜ ಜಾತಿಯ ಮೂಲಕ ಗುರುತಿಸುವ ಪರಂಪರೆ ಆರಂಭವಾದದ್ದು 1980ರ ನಂತರ. ಹಾಗಾಗಿಯೇ ನಮಗೆ ಬಾಲಣ್ಣ,. ಅಶ್ವಥ್, ವಾದಿರಾಜ್, ನರಸಿಂಹರಾಜು, ಉದಯಕುಮಾರ್, ದಿನೇಶ್ ಇವರಾರೂ ಅಸ್ಮಿತೆಗಳ ಚೌಕಟ್ಟಿನಲ್ಲಿ ಕಾಣಲಿಲ್ಲ. ನಾಗ್ ಸೋದರರೂ ಸಹ. ಈಗ ನಾವು ಈ ಸಂದರ್ಭದಿಂದ ಬಹುತೇಕ ಅರ್ಧಶತಮಾನದಷ್ಟು ದೂರ ಬಂದಿದ್ದೇವೆ. ಈ ಮಹಾನ್ ಕಲಾವಿದರ ನಟನೆ ಇಂದಿಗೂ ನಮ್ಮನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಅವರು ಪರದೆಯ ಮೇಲೆ ಕಟ್ಟಿಕೊಟ್ಟ ಆದರ್ಶಗಳು ನಮ್ಮ ನಡುವೆ ನಶಿಸಿಹೋಗುತ್ತಿದ್ದರೂ ಅದನ್ನು ಮೌಲ್ಯೀಕರಿಸಲು ನಾವು ಸಿದ್ಧರಾಗಿದ್ದೇವೆ. ಏಕೆಂದರೆ 1990ರ ನಂತರದ ಚಿತ್ರರಂಗ ಈ ಮೌಲ್ಯಗಳನ್ನು ದಾಟಿ ಬಂದಿದೆ.

ಈ ಸಂದರ್ಭದಲ್ಲಿ ನಾವು ಡಾ ರಾಜ್ ಅವರನ್ನು ಯಾವ ನೆಲೆಯಲ್ಲಿಟ್ಟು ಕಾಣಬೇಕು ? ಅವರ ನಟನೆಯನ್ನು ಎಲ್ಲರೂ ಇಷ್ಟಪಡಬೇಕು ಎಂದು ಅಪೇಕ್ಷಿಸುವುದೇ ತಪ್ಪಲ್ಲವೇ ? ಡಾ ರಾಜ್ ಒಬ್ಬ ನಟನೇ ಅಲ್ಲ ಎನ್ನುವವರು ಯಾರೇ ಆಗಿರಲಿ ಅವರಿಗೆ ನಟನೆಯ ಬಗ್ಗೆ ಅತ್ಯದ್ಭುತವಾದ ಕಲ್ಪನೆ, ಜ್ಞಾನ ಮತ್ತು ಅಭಿನಯ ಕಲೆಯ ಜ್ಞಾನ ಇರಬೇಕು. ಇಲ್ಲವಾದರೆ ಅದು ಬೀಸು ಹೇಳಿಕೆಯಾಗಿರಬೇಕು. ಇದು ಎಲ್ಲ ನಟರಿಗೂ ಅನ್ವಯಿಸುತ್ತದೆ. ಇನ್ನು ರಾಜ್ ನಟನೆ ಇಷ್ಟವಾಗುವುದಿಲ್ಲ ಎಂದರೆ ಅದು ನಾವು ಅಭಿನಯವನ್ನು ನೋಡುವ ನಮ್ಮದೇ ಆದ ರೀತಿಯನ್ನು ಅವಲಂಬಿಸುತ್ತದೆ. ಕೆಲವರಿಗೆ ಇಷ್ಟವಾಗದಿದ್ದರೆ ಏನಂತೆ, ಅದು ಡಾ ರಾಜ್‍ಗೆ ಅಪಚಾರ ಎಸಗಿದಂತೆ ಎಂದು ಏಕೆ ಭಾವಿಸಬೇಕು.

ಇಲ್ಲಿಯೂ ಜಾತಿಪ್ರಜ್ಞೆಯ ನೆಲೆಯಲ್ಲಿ ನಾವು ನಿಷ್ಕರ್ಷೆ ಮಾಡುತ್ತಾ ಹೋದರೆ ಭಾರತದ ಬಾಲಿವುಡ್ ಕೋಮುವಾದದ ಪ್ರಯೋಗಾಲಯವಾಗಿಬಿಡುತ್ತದೆ. ಅಲ್ಲವೇ ? ಹಾಗಾಗುವುದು ಬೇಡ. ಸಾಹಿತ್ಯ, ಕಲೆ, ನೃತ್ಯ, ಸಿನಿಮಾ, ರಂಗಭೂಮಿ ಇವೆಲ್ಲವೂ ಸಮಾಜದ ಆ ಹೊತ್ತಿನ ಸ್ಥಿತ್ಯಂತರಗಳನ್ನು ಬಿಂಬಿಸುವ ಆಕರಗಳೂ ಹೌದು, ವಾಹಿನಿಗಳೂ ಹೌದು. ಈ ಆಕರಗಳಲ್ಲಿ ಉದಯಿಸುವ ಕಲಾವಿದರು ತಮ್ಮದೇ ಆದ ನೆಲೆಯಲ್ಲಿ ತಮ್ಮ ಅಂಗಿಕ ಅಭಿನಯವನ್ನೋ, ಕಲಾಪ್ರತಿಭೆಯನ್ನೋ, ಅಕ್ಷರ ಪಾಂಡಿತ್ಯವನ್ನೋ ಹೊರಸೂಸುತ್ತಾರೆ. ಆ ಭೂಮಿಕೆಯಿಂದಾಚೆಗಿನ ಅವರ ವ್ಯಕ್ತಿತ್ವಕ್ಕೆ ಚ್ಯುತಿ ಬಾರದಂತೆ, ಅವರ ಪರದೆಯ ಮೇಲಿನ, ರಂಗದ ಮೇಲಿನ ಅಭಿವ್ಯಕ್ತಿಯನ್ನೂ ಗೌರವಿಸುವುದು ಪ್ರಜ್ಞಾವಂತ ಸಮಾಜದ ಆದ್ಯತೆಯಾಗಬೇಕು.

ಪ್ರಗತಿಪರ ಮನಸುಗಳಿಗೆ ರಾಜ್ ಹೇಗೆ ನೆರವಾಗುತ್ತಾರೆ ? ಅಥವಾ ಹೇಗೆ ನೆರವಾಗುವುದಿಲ್ಲ ? ಈ ಪ್ರಶ್ನೆಗಳಿಗೆ ಉತ್ತರ ಶೋಧಿಸಲು ಸಾಧ್ಯವೇ ? ಇಲ್ಲ ಎಂದ ಮೇಲೆ ಪ್ರಗತಿಪರರಲ್ಲಿ ಒಡಕು ಮೂಡಿಸಲು ರಾಜ್ ಏಕೆ ದಾಳವಾಗಬೇಕು ? ಭೈರಪ್ಪನವರ ಒಂದು ಹೇಳಿಕೆಗೆ ನಾವು ಇಷ್ಟೊಂದು ಮೌಲ್ಯ ನೀಡಬೇಕೇ ? ಹೀಗೆ ಹಲವು ಪ್ರಶ್ನೆಗಳು ಮೂಡುತ್ತಲೇ ಹೋಗುತ್ತವೆ. ನಮ್ಮ ಮುಂದಿನ ಸವಾಲುಗಳಿಗೆ ಈ ಪ್ರಶ್ನೆಗಳು ಯಾವ ರೀತಿಯಲ್ಲೂ ಸಾಂತ್ವನ ನೀಡುವುದಿಲ್ಲ. ಹಾಗಿದ್ದ ಮೇಲೆ ಪ್ರಾಮಾಣಿಕ ಪ್ರಗತಿಪರರನ್ನೂ ಅವಹೇಳನ ಮಾಡಲು ಡಾ ರಾಜ್ ಏಕೆ ಬಳಕೆಯಾಗಬೇಕು. ಇದು ನಾವು ರಾಜ್ ಅವರಿಗೆ ಮಾಡುವ ಅಪಚಾರ. ಬೇಡ ಅಲ್ಲವೇ ?

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending