ಭಾವ ಭೈರಾಗಿ
ಕನಸುಗಳ ವ್ಯಾಖ್ಯಾನ..!

- ಕ್ರಾಂತಿರಾಜ್ ಒಡೆಯರ್, ಪ್ರಾಧ್ಯಾಪಕರು, ಮೈಸೂರು
ಹಲವು ಜನರು ತಮ್ಮ ನಿದ್ರಾವಸ್ಥೆಯಲ್ಲಿ ಕನಸುಗಳನ್ನು ಕಂಡು, ಅವು ನೆನಪಿದ್ದರೆ, ಅವುಗಳನ್ನು ಶುಭ ಕನಸುಗಳು ಹಾಗು ಕೆಟ್ಟ ಕನಸುಗಳೆಂದು ವಿಂಗಡಿಸಿ, ಒಳ್ಳೆಯ ಕನಸುಗಳನ್ನು ಕಂಡಿದ್ದರೆ, ನಂತರದ ದಿನಗಳಲ್ಲಿ ಒಳ್ಳೆಯದಾಗುವುದೆಂದು, ಕೆಟ್ಟ ಕನಸುಗಳನ್ನು ಕಂಡಿದ್ದರೆ, ಅದು ಪಾಪವೆಂದೂ, ಮುಂದೊಂದು ದಿನ ಏನಾದರು ಕೇಡು ಕಾದಿದೆಯೆಂದು ತಿಳಿದು, ಪಾಪ ಕಳೆದುಕೊಳ್ಳಲು ಅಥವಾ ಕೇಡಿನಿಂದ ಪಾರಾಗಲು, ದೇವಸ್ಥಾನಗಳಿಗೋ ಅಥವಾ ದೇವಮಾನವರ ಬಳಿಗೋ ಹೋಗಿ ಪೂಜೆ, ಹೋಮ, ಹವನ ಮಾಡಿಸಿ, ಪಾಪ ಅಥವಾ ಕೇಡಿನಿಂದ ಪಾರಾದವೆಂಬ ನಂಬಿಕೆಯಿಂದ ನಿಟ್ಟ್ಟುಸಿರು ಬಿಡುವುದನ್ನು ನಾನು ಹಲವರಿಂದ ಕೇಳಿದ್ದು ಅಲ್ಲದೇ ಕೆಲವು ಸ್ನೇಹಿತರು ನನ್ನ ಬಳಿಯೂ ಪ್ರಸ್ತಾಪ ಮಾಡಿದ್ದೂ ಇದೆ.
ಇಂತಹವರ ನಂಬಿಕೆಗಳು ಮಾಹಿತಿ ಮತ್ತು ಜ್ಞಾನದ ಕೊರತೆಯಿಂದ ಕೂಡಿದ್ದು, ಕನಸುಗಳನ್ನು ಮೂಢನಂಬಿಕೆಯ ದೃಷ್ಟಿಯಲ್ಲಿ ನೋಡದೇ, ವೈಜ್ಞಾನಿಕ ತಳಹದಿಯಲ್ಲಿ ನೋಡಬೇಕೆಂಬುದು ಈ ಒಂದು ಲೇಖನದ ಉದ್ದೇಶ.
ಕನಸುಗಳ ಬಗ್ಗೆ 1899 ರಲ್ಲಿ ಆಸ್ಟ್ರಿಯಾ ದೇಶದ ಖ್ಯಾತ ಮನೋಶಾಸ್ತ್ರಜ್ಞ ಸಿಗ್ಮನ್ದ್ದ್ ಫ್ರಾಯ್ಡ್ ಅವರು ತಮ್ಮ ಸುಧೀರ್ಘ ಸಂಶೋಧನೆಯ ಮೂಲಕ ಕನಸುಗಳ ಮೂಲ ಮತ್ತು ಅವುಗಳ ಅರ್ಥವನ್ನು ‘INTERPRETATION OF DREAMS‘ ಎಂಬ ಪುಸ್ತಕದ ಮೂಲಕ ಇಡೀ ವಿಶ್ವಕ್ಕೇ ತಿಳಿಸಿಕೊಟ್ಟಿದ್ದಾರೆ. ಅವರ ಪ್ರಕಾರ, ಮನುಷ್ಯರು ತಮ್ಮ ಸುಪ್ತ ಮನಸಿನಲ್ಲಿ ಅಡಗಿಸಿಟ್ಟ ಬಯಕೆಗಳು, ನಿದ್ರಾವಸ್ಥೆಯಲ್ಲಿ ಕನಸುಗಳಾಗಿ ಬರುವುವೆಂದೂ, ಅವು, ನಾವು ಶಾಂತಿಯುತವಾಗಿ ನಿದ್ರಿಸಲು ಸಹಾಯಕರಾಗಿ ಅಥವಾ ರಕ್ಷಕರಾಗಿ ಕಾರ್ಯ ನಿರ್ವಹಿಸುವುವುವೆಂದೂ ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ. ಮನುಷ್ಯರಿಗೆ ಕನಸು ಬೀಳುವುದು ಸಹಜ ಪ್ರಕ್ರಿಯೆಯಾಗಿದ್ದು, ಕನಸು ಬೀಳುವ ಮನುಷ್ಯರು ಆರೋಗ್ಯಕರ ಮನಸ್ಸನ್ನು ಹೊಂದಿರುತ್ತಾರೆ.
ಹಾಗೆಯೇ ಕನಸೇ ಬೀಳದ ಮನುಷ್ಯರು ಆರೋಗ್ಯಕರ ಮನಸ್ಸನ್ನು ಹೊಂದಿರುವುದಿಲ್ಲವೆಂದು ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ.
ಸಹಜವಾಗಿ ಕನಸುಗಳು ನಿದ್ರಾವಸ್ಥೆಯಲಿ ನಾವು ಉಪಪ್ರಜ್ಞಾಸ್ಥಿತಿಯಲ್ಲಿ ಇರುವಾಗ ಬರುವುವು. ಹಾಗೆಯೇ, ಶಾಂತ ಮನಸ್ಥಿತಿಯಲ್ಲಿ ಇರುವ ವ್ಯಕ್ತಿಗಳಿಗೆ ಮಾತ್ರ ಕನಸುಗಳು ಬರುವುದು.
ಪ್ರಜ್ಞಾಸ್ಥಿತಿಯಲ್ಲಿ ಇರುವಾಗ, ಹಾಗೆಯೇ ಅಶಾಂತ ಮನಸ್ಥಿತಿಯಲ್ಲಿ ಇರುವ ವಕ್ತಿಗಳಿಗೆ ಕನಸುಗಳು ಬರುವುದಿಲ್ಲ. ಇದರ ಅರ್ಥ, ಮನುಷ್ಯರು ತುಂಬಾ ದಣಿದಿದ್ದಾಗ ಅಥವಾ ಮದ್ಯಪಾನ ಮಾಡಿದಾಗ, ಅವರ ದೇಹ ಶಾಂತ ಸ್ಥಿತಿಗೆ ಹೋಗಿ, ಆ ಸಂದರ್ಭದಲ್ಲಿ ಅವರು ನಿದ್ರಾವಸ್ಥೆಗೆ ಹೋದಾಗ ಕನಸುಗಳು ಬರುವುದು ಗ್ಯಾರಂಟಿ.
ನಮಗೆ ಎಂತಹ ಕನಸುಗಳು ಬೀಳುತ್ತವೆಯೆಂದು ಅವಲೋಕಿಸಿ ನೋಡಿದಾಗ, ಅವು ಲೈಂಗಿಕವಾಗಿದ್ದು, ಅಂದರೆ, ವ್ಯಕ್ತಿಗೆ ಅಥವಾ ವ್ಯಕ್ತಿಗಳಿಗೆ ಸಂಭದಿಸಿದ್ದಾಗಿರುತ್ತವೆ. ಆ ವ್ಯಕ್ತಿ ಅಥವಾ ವ್ಯಕ್ತಿಗಳು ನಮಗೆ ಬಹಳ ಹತ್ತಿರದವರಾಗಿದ್ದು, ಕುಟುಂಬದ ಸದಸ್ಯರೊ, ಸ್ನೇಹಿತರೋ, ನಾವು ಕೆಲಸ ಮಾಡುವ ವಾತಾವರಣಕ್ಕೆ ಸಂಬಂಧಿಸಿದವರೋ, ನಮ್ಮ ವೈರಿಗಳೋ, ನಾವು ಜೀವನದಲ್ಲಿ ಹೆದರಿಕೊಳ್ಳುವ ವ್ಯಕ್ತಿಯೋ ಅಥವಾ ಪ್ರೀತಿಸುವವರೋ ಆಗಿರುತ್ತಾರೆ. ಮತ್ತು ಕನಸಿನಲ್ಲಿ ಬರುವ ಘಟನೆಗಳು ನಮ್ಮ ಜೀವನದಲ್ಲಿ ನೆಡೆದಿರುವುವೇ ಅಥವಾ ನಮ್ಮ ಆಲೋಚನೆಯಲ್ಲಿ ಬಂದಿರುವುವೇ ಆಗಿರುತ್ತವೆ.
ವ್ಯಕ್ತಿಗಳು ಅಥವಾ ಘಟನೆಗಳು ಕನಸಿನಲ್ಲಿ ಬರುವ ರೀತಿಯನ್ನು ಅವಲೋಕಿಸುವುದಾದರೆ, ಮನುಷ್ಯರು ಹೇಗಿದ್ದಾರೋ ಹಾಗೆಯೇ ಕಾಣಿಸಿಕೊಳ್ಳಬಹುದು ಅಥವಾ ಅವರ ದೇಹದ ಯಾವುದಾದರೊಂದು ಭಾಗ ಮಾತ್ರ ಕಾಣಿಸಬಹುದು ಅಥವಾ ಅವರು ಇರುವುದಕ್ಕಿಂತ ದಪ್ಪ ಅಥವಾ ಸಣ್ಣ ಆಕಾರಗಲ್ಲಿ ಕಾಣಿಸಿಕೊಳ್ಳಬಹುದು. ಇನ್ನೊಂದು ರೀತಿಯಲ್ಲಿ ನೋಡುವುದಾದರೆ, ಯಾವುದಾದರೂ ವಿಕಾರ ಚಿತ್ರ ಅಥವಾ ಭಯಂಕರ ಆಕಾರ ಅಥವಾ ಯಾವುದಾದರೊಂದು ವಸ್ತು ಅಥವಾ ನಾವು ಭಯಪಡುವ ವಸ್ತು ಕನಸಿನಲ್ಲಿ ಘಟನೆಗಳ ಜೊತೆ ಬರುತ್ತವೆ.
ಅವು ಕೆಟ್ಟ ಘಟನೆಗಳು ಆಗಿರಬಹುದು ಅಥವಾ ಸಂತೋಷ ಪಡುವ ಘಟನೆಗಳೂ ಆಗಿರಬಹುದು. ಒಟ್ಟಿನಲ್ಲಿ, ಆ ವ್ಯಕ್ತಿಗಳು ಅಥವಾ ಘಟನೆಗಳೂ ನಮ್ಮ ಸುಪ್ತ ಮನಸಿನಲ್ಲಿ ಅಡಗಿದ್ದು, ಕನಸಿನ ಮೂಲಕ ಬರಬಹುದು ಅಥವಾ ಅಡಗಿರುವ ಬಯಕೆಗಳನ್ನು ಸ್ವೀಕರಿಸಲು ಮನಸ್ಸು ಒಪ್ಪದಿದ್ದಾಗ ಹಾಗು ಅವುಗಳ ಬಗ್ಗೆ ಪಾಪಪ್ರಜ್ಞೆ ಕಾಡಿದಾಗ, ಆ ವ್ಯಕ್ತಿಗಳ ಹಾಗು ವಸ್ತುಗಳ ಬಗ್ಗೆ ಮನಸ್ಸಿನಲ್ಲಿ ಅಡಗಿರುವ ಬಯಕೆಗಳು ಬೇರೆ ರೂಪ ತಾಳಿ ಕಾಣಿಸಿಕೊಳ್ಳುತ್ತವೆ.
ಹಾಗಾದರೆ ಈ ಕನಸುಗಳನ್ನು ಓದುವುದು ಹೀಗೆ ಎಂದು ಅವಲೋಕಿಸಿದಾಗ, ವ್ಯಕ್ತಿಗಳು ಹಾಗು ಘಟನೆಗಳೂ ಸಹಜ ರೂಪದಲ್ಲಿ ಬಂದರೆ, ಕನಸುಗಳನ್ನು ಅರ್ಥಮಾಡಿಕೊಳ್ಳುವು ಸುಲಭ. ಆದರೆ, ವಿಕಾರ ರೂಪದಲ್ಲೋ, ಯಾವುದೋ ವಸ್ತುವಿನ ರೂಪದಲ್ಲೋ, ಕೆಟ್ಟ ಹಾಗು ಒಳ್ಳೆಯ ಸಂದರ್ಭದ ರೂಪದಲ್ಲೋ ಅಥವಾ ಸಂಬಂಧವಿಲ್ಲದ ರೂಪದಲ್ಲೋ ಬಂದರೆ, ಕನಸನ್ನು ಅರ್ಥ ಮಾಡಿಲೊಳ್ಳುವುದು ಕಷ್ಟ. ಆದರೆ, ಅವುಗಳನ್ನು ಅರ್ಥ ಮಾಡಿಕೊಳ್ಳಲು ಸಿಗ್ಮನ್ಡ್ ಫ್ರಾಯ್ಡ್ ಅವರು ಸುಲಭ ವಿಧಾನವನ್ನು ತಿಳಿಸಿದ್ದಾರೆ.
ಉದಾಹರಣೆಗೆ: ನನ್ನ ಗೆಳೆಯ, “ಅವನಿಗೆ ಹಲವು ಬಾರಿ ತನ್ನ ಕುಟುಂಬದ ಕೆಲವು ಸದಸ್ಯರೊಡನೆ ಅಂದರೆ, ತನ್ನ ತಾಯಿ, ತಂಗಿ, ಅಕ್ಕ, ಚಿಕ್ಕಪ್ಪ ಹಾಗು ದೊಡ್ಡಪ್ಪನ ಮಗಳ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಹಾಗೆ ಕನಸಿನಲ್ಲಿ ಬರುತ್ತಿರುವುದಾಗಿ ಹೇಳಿ ತನ್ನ ಬಗ್ಗೆಯೇ ಅಸಯ್ಯ ಪಟ್ಟಿಕೊಂಡನು”. ಅದಕ್ಕೆ ಪ್ರತಿಕ್ರಿಯಿಸುತ್ತಾ ನಾನು, “ಆ ಕನಸುಗಳ ಬಗ್ಗೆ ಅಸಯ್ಯ ಪಟ್ಟಿಕೊಳ್ಳುವಂತದ್ದು ಏನೂ ಇಲ್ಲ. ಯಾವುದೋ ಸಂದರ್ಭದಲ್ಲಿ ಅವರ ದೇಹದ ಸೂಕ್ಷ್ಮ ಭಾಗಗಳನ್ನು ತಪ್ಪಿ ನೋಡಿದ್ದು, ಅಥವಾ ಕೆಲವು ಸಂದರ್ಭಗಳಲ್ಲಿ ಕೆಟ್ಟ ಆಲೋಚನೆಗಳಿಂದ ಅವರ ಬಗ್ಗೆ ಯೋಚಿಸಿದ್ದರೆ ಅದು ಸುಪ್ತ ಮನಸ್ಸಿನಲ್ಲಿ ಅಡಗಿದ್ದು, ಕನಸಿನಲ್ಲಿ ಗೊತ್ತಿಲ್ಲದೆಯೇ ಬರುತ್ತದೆ.
ಅದನ್ನು ವೈಜ್ಞಾನಿಕವಾಗಿ ಆಲೋಚಿಸಬೇಕೇ ಹೊರತು ಅದರ ಬಗ್ಗೆ ಅಸಯ್ಯ ಪಟ್ಟಿಕೊಳ್ಳಬಾರದೆಂದು” ಹೇಳಿದಾಗ ಸ್ವಲ್ಪ ಸಮಾಧಾನವಾದನು. ಹಾಗೆಯೇ ಮತ್ತೊಬ್ಬ ಗೆಳೆಯ, “ಕನಸಿನಲ್ಲಿ ಅವನು ತನ್ನ ಪ್ರೇಯಸಿಯ ಜೊತೆಯಲ್ಲಿದ್ದಾಗ ಯಾವುದೋ ಒಂದು ಪುಟ್ಟ ಮಗು ಅವರು ಎಲ್ಲೆಲ್ಲಿ ಹೋಗುತ್ತಾರೋ ಅಲ್ಲೆಲ್ಲ ಬರುತ್ತಿದ್ದು, ಪಕ್ಕದಲ್ಲಿ ಹುಲ್ಲಿನ ಮೆದೆಗೆ ಬೆಂಕಿ ಬಿದ್ದ ಹಾಗೆ, ಅದು ಒಂದು ನೀರು ಇರುವ ಜಾಗಕ್ಕೆ ಹತ್ತಿರವಾಗಿತ್ತೆಂದು ಹೇಳಿದ”. ಅದಕ್ಕೆ ಪ್ರತಿಕ್ರಿಯಿಸಿದ ನಾನು “ಅವನ ಪ್ರೇಮದ ವಿಷಯ ಹುಡುಗಿ ಮನೆಯವರಿಗೆ ಗೊತ್ತಾಗುವ ಭಯವಿದ್ದು, ಹಾಗೆಯೇ ಅವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತವಾಗಿ ಮುರಿದುಬೀಳುವ ಭಯವಿದ್ದಾಗ ಈ ತರಹದ ಕನಸ್ಸುಗಳು ಬರುತ್ತವೆ ಎಂದು ಹೇಳಿದೆ”.
ಕನಸುಗಳನ್ನು ಅರ್ಥ ಮಾಡಿಕೊಳ್ಳುವುದು ಸ್ವಲ್ಪ ಕಷ್ಟದ ಕೆಲಸ. ಇದಕ್ಕೋಸ್ಕರ ಸಿಗ್ಮುಂಡ್ ಫ್ರಾಯ್ಡ್ ಅವರು “ಫ್ರೀ ಅಸೋಸಿಯೇಷನ್” ಎಂಬ ತಂತ್ರವನ್ನು ಕಂಡುಹಿಡಿದರು.
ಒಟ್ಟಿನಲ್ಲಿ ಹೇಳುವುದಾದರೆ ಕನಸುಗಳು ಬೀಳುವುದು ಸಾಮಾನ್ಯವಾಗಿದ್ದು ಅದನ್ನು ಜನರು ಮೂಢನಂಬಿಕೆಯಿಂದ ನೋಡದೆ ವೈಜ್ಞಾನಿಕ ತಳಹದಿಯಲ್ಲಿ ನೋಡಬೇಕು.
(ಖ್ಯಾತ ಮನೋಶಾಸ್ತ್ರಜ್ಞ ಸಿಗ್ಮನ್ಡ್ ಫ್ರಾಯ್ಡ್ ಅವರಿಂದ ಪ್ರೇರಿತನಾಗಿ ಬರೆದಿರುವ ಲೇಖನ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮಣ್ಣ ಮಕ್ಕಳು

- ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ
ಮಣ್ಣ ಮಕ್ಕಳು ನಾವು
ಹಗಳಿರುಳೆನ್ನದೆ ಬೆವರು ಬಸಿದು
ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು
ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ
ಕಸುಬಿಗೆ ಆಳಾದವರು ಸವಳು ನೀರಲಿ ಮೈತೊಳೆದು
ಚಿಂದಿ ಅಂಗಿಯಲಿ ಶಾಲೆಗೆ ದಾಖಲಾದವರು.
ಬರಿಗಾಲಲಿ ಕಾಡು ದಾರಿಯಲಿ ಮೈಲು ದೂರ ನಡೆದು
ನೆಗ್ಗಿಲ ಮುಳ್ಳು ತುಳಿದವರು ; ನಿಬ್ಬು ನೆಗ್ಗಿದ ಪೆನ್ನಿನಲಿ
ಹೆಸರು ಬರೆಯಲು ಕಲಿತವರು ಹರಿದ ಪಠ್ಯದಲಿ ಅಕ್ಷರ ಹುಡುಕಿ ಒಡೆದ ಪ್ಲೇಟಿನಲಿ ಬರೆದವರು.
ತೂತು ಬಿದ್ದ ಸೂರಿನಲಿ ಇಣುಕಿದ ಚುಕ್ಕಿ ಚಂದ್ರಮರ ನೋಡಿ
ವಿದ್ಯುತ್ ದೀಪದ ಕನಸು ಕಂಡವರು
ಮೋಸ ವಂಚನೆಗೆ ಬಗ್ಗದೆ ಶೋಷಣೆಗೆ ಸಿಡಿದವರು
ಮಣ್ಣ ಮಕ್ಕಳು ನಾವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು

ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.
ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.
- ಬಸವರಾಜ ಹೂಗಾರ
ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.
ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.
- ಡಾ.ರಹಮತ್ ತರೀಕೆರೆ
ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.
- ಬಿ.ಶ್ರೀನಿವಾಸ,ಕೃತಿ ಲೇಖಕ
ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.
ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.
“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.
ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.
ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.
ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ
- ಡಾ.ರಾಮಚಂದ್ರ ಹಂಸನೂರು, ಬೆಟಗೇರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂತಃಕರಣೆಯ ಹುಡುಕುತ್ತಾ..

- ಬಿ.ಶ್ರೀನಿವಾಸ
ಒಂದು ಊರಿನ ಮೌನ ಅರ್ಥವಾಗಬೇಕಾದರೆ, ದುಃಖ ಅರ್ಥವಾಗಬೇಕಾದರೆ ನಾವು ಏನನ್ನು ಮಾಡಬೇಕು? ನಾವು ಹೇಗೆ ಬದುಕಬೇಕು? ಗಾಯಗೊಂಡ ಬೆಟ್ಟ-ಗುಡ್ಡ ,ನದಿ ತೊರೆಗಳ ಬತ್ತಿಹೋದ ನೆಲದ ಕಣ್ಣಿಂದ ಪ್ರಾಣಿ-ಪಕ್ಷಿಗಳ ಆ ದೈನೇಸಿ ನೋಟಗಳಿಂದ ತಪ್ಪಿಸಿಕೊಳ್ಳುವುದಾದರೂ ಹೇಗೆ? ಪ್ರೀತಿ ,ಸಹಾನುಭೂತಿ ಗಳನ್ನು ಕಳೆದುಕೊಂಡವರು ಮಾತ್ರ ನಮ್ಮ ಸುತ್ತಮುತ್ತಲ ಬದುಕು ನರಕ ಸದೃಶವಾಗಿದ್ದರೂ ನೆಮ್ಮದಿಯಿಂದ ಉಣ್ಣ ಬಲ್ಲರು. ನಿದ್ರಿಸಬಲ್ಲರು, ಬರೆಯಬಲ್ಲರು.
ಬಳ್ಳಾರಿ ಜಿಲ್ಲೆಯ ಸೊಂಡೂರು ಮತ್ತು ಸುತ್ತಮುತ್ತಲಿನ ಪ್ರದೇಶದ ಬಹುತೇಕ ಹಳ್ಳಿಗಳು ರೋಗಗ್ರಸ್ತ ಪೀಡಿತರಂತೆ ಕಾಣುತ್ತಿವೆ .ಕಳೆದ ದಶಕದ ಅವಧಿಯೊಂದರಲ್ಲಿ ನಡೆದ ಗಣಿಗಾರಿಕೆಯಿಂದಾಗಿ ಇಡೀ ಪ್ರದೇಶ ಶಾಶ್ವತ ಬರಪೀಡಿತ ಪ್ರದೇಶವಾಗಿ ಬಿಟ್ಟಿದೆ. ಅದಿರು ಸಾಗಾಣಿಕೆಯ ಹೆಚ್ಚಳದಿಂದಾಗಿ ಕಾರ್ಬನ್ ಡೈಯಾಕ್ಸೈಡ್ ಆಸ್ಫೋಟಿಸಿದೆ. ಅಪರೂಪದ ಗಿಡ-ಮರಗಳು, ಪಕ್ಷಿಗಳು ,ಅಳಿವಿನಂಚಿಗೆ ತಳ್ಳಲ್ಪಟ್ಟಿವೆ.
ಶಾಲೆಗಳು ಮಕ್ಕಳಿಲ್ಲದೆ ಮುಚ್ಚಲ್ಪಟ್ಟವು. ಅದಿರು ಹೊತ್ತ ಲಾರಿಗಳಲ್ಲಿ ಮಕ್ಕಳ ಅಕ್ಷರಗಳನ್ನು ತುಂಬಿ ಕಳುಹಿಸಲಾಯಿತು. ಜನರು ಇಂತಹ ಬದುಕಿಗೆ ಹೊಂದಿಕೊಳ್ಳದೆ ಅನ್ಯ ಮಾರ್ಗವೇ ಇರಲಿಲ್ಲ. ಸತತ ಒಂದೂವರೆ ದಶಕಕ್ಕೂ ಹೆಚ್ಚು ಕಾಲ ನಡೆದ ಗಣಿಗಾರಿಕೆಯಿಂದಾಗಿ ಜನರ ಸಾಕ್ಷರತೆಯ ಪ್ರಮಾಣ ಮತ್ತು ಜೀವನಾಯುಷ್ಯ ಪ್ರಮಾಣ ಪಾತಾಳಕ್ಕೆ ಕುಸಿದಿದೆ . ರಕ್ತಹೀನತೆಯಿಂದ ಬಳಲುವ ಮಹಿಳೆಯರ ಸಂಖ್ಯೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಗಿಂತಲೂ ಜಾಸ್ತಿಯಾಗಿದೆ. 5 ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣವು ಅಧಿಕವಾಗಿದೆ.
ಇಲ್ಲಿನ ಸಂಪನ್ಮೂಲ ಇರುವುದೇ ತಮ್ಮ ಭೋಗ ವಿಲಾಸಕ್ಕೆ ಎಂದು ರಾಜಕೀಯವರ್ಗ,ಉದ್ಯಮಿಗಳು ಮತ್ತು ಕೆಲ ಆಡಳಿತಶಾಹಿ ಅಧಿಕಾರಿಗಳು ತಿಳಿದುಕೊಂಡಿದ್ದರು ಬಳ್ಳಾರಿ ಜಿಲ್ಲೆ ಇರುವುದೇ ಲೋಲುಪತೆ ಗೋಸ್ಕರ ಇಲ್ಲಿ ಹಣವೊಂದಿದ್ದರೆ ಏನೆಲ್ಲಾ ಸಾಧಿಸಬಹುದು ಮತಗಳನ್ನು ಮತದಾರರನ್ನು ಕೊಂಡುಕೊಳ್ಳಬಹುದು, ರಾಜಕೀಯ ಚುನಾವಣಾ ಪ್ರಚಾರಕ್ಕೆ ದಿನವೊಂದಕ್ಕೆ ಲಕ್ಷದಂತೆ ತಿಂಗಳುಗಟ್ಟಲೆ ಪ್ರಚಾರ ಮಾಡಿದ ಸಿನಿತಾರೆಯರಿಗೇನೂ ಕಡಿಮೆ ಇಲ್ಲ.ಸಂಪನ್ಮೂಲಗಳ ಹಗಲು ದರೋಡೆ ರಾಜಾರೋಷವಾಗಿ ನಡೆದುಹೋಯಿತು.
ಈ ಊರುಗಳಲ್ಲಿ ಬುಡುಬುಡುಕಿಯವರಿದ್ದರು, ಹಗಲುವೇಷಗಾರರು, ನಕ್ಕುನಗಿಸುವ ಹಾಡುಗಾರರು, ಬಯಲಾಟದವರು,ಕುರ್ರಮಾಮುಡು ವಸ್ತುನ್ನಾಡು…ಟಿಮ್ ಟಿಮ್….ಎನ್ನುತ್ತ ಬರುವವರು,ಗಿಣಿಶಾಸ್ತ್ರ ಹೇಳುವವರು ,ಬಣ್ಣಬಣ್ಣದ ಹರಳು ಮಾರುವ ಮಹಾ ಗಟ್ಟಿಗಿತ್ತಿಯರು, ಕಾಡಿನ ಗರ್ಭ ಹೊಕ್ಕು ಒಣ ಮರದ ಕಟ್ಟಿಗೆ ತಂದು, ಹೊತ್ತು ಮಾರಿ ಜೀವಿಸುವ ಲಂಬಾಣಿ ಯಾಡಿಗಳಿದ್ದರು. ಜೊತೆಗೆ ಅವರ ಉಡಿಗಳಲ್ಲಿ ಕಾರಿ, ಕವಳಿ,ಪುಟ್ಲಾಸು, ಬಿಕ್ಕಿ ಹಣ್ಣಿನಂತಹ ಹಣ್ಣುಗಳು ಇರುತ್ತಿದ್ದವು.
ಆಹಾರ ಸಂಪಾದನೆಯ ಬೇರೆ ಮೂಲಗಳೇ ಗೊತ್ತಿಲ್ಲದ ಇವರಿಗೆ ಭಿಕ್ಷೆಯೊಂದೇ ಉಳಿದಿರುವ ಮಾರ್ಗ. ಇವರುಗಳೆಲ್ಲಾ ಸಮಾಜದ ಕಣ್ಣಿನಲ್ಲಿ ಅಪರಾಧಿಗಳಂತೆ ಕಾಣುತ್ತಿರುವುದು ಪರಿಸ್ಥಿತಿಯ ವ್ಯಂಗ್ಯ .ಇವರನ್ನು ಇವರ ಕಲೆಯನ್ನು ಗೌರವಿಸುವ ಒಂದು ಸಮುದಾಯವೇ ನಾಶವಾಗಿಹೋಯಿತು.ರೊಕ್ಕಾ ಕೊಟ್ಟರೆ ಏನು ಬೇಕಾದುದನ್ನು ಪಡೆಯಬಹುದೆಂಬ ಅಹಂ-ಭಾವಹೀನ ಮನುಷ್ಯರನ್ನು ಸೃಷ್ಟಿಸುತ್ತಾ ನಡೆದಿದೆ.
ಸೊಂಡೂರು -ಬಳ್ಳಾರಿ ಜಿಲ್ಲೆಯ ಮಲೆನಾಡು .ಪುಟ್ಟ ಕಾಶ್ಮೀರ. ಬೆಟ್ಟ ಗುಡ್ಡಗಳಿಂದ ಆವೃತವಾದ ಸುಂದರನಾಡು .ಅತಿ ಫಲವತ್ತಾದ ಮಣ್ಣು ತುಂಬಿದ ನೆಲ. ಜಲಮೂಲಗಳುಳ್ಳ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ, ಸೊಂಡೂರಿನ ಸುತ್ತಮುತ್ತ ಸುಮಾರು 40 ಕಿಲೋಮೀಟರ್ ಉದ್ದದ, 15 ಕಿಲೋಮೀಟರುಗಳಷ್ಟು ಅಗಲದ ಬೆಟ್ಟಗಳಲ್ಲಿ ಕಬ್ಬಿಣ, ತಾಮ್ರ ಮತ್ತು ಮ್ಯಾಂಗನೀಸ್ ಅದಿರಿನ ಗಣಿಗಳಿವೆ. ಇಲ್ಲಿ ದೊರೆಯುವ ಹೆಮಟೈಟ್ ಉತ್ತಮ ದರ್ಜೆಯ ಕಬ್ಬಿಣದ ಅದಿರು. ಹಾಗೆಯೇ ಮ್ಯಾಂಗನೀಸ್ ಕೂಡ ಡೇರಸ್ ಫಿಲೈಟ್ ಎಂಬ ಕಲ್ಲುಗಳಲ್ಲಿ ಹೇರಳವಾಗಿ ದೊರೆಯುತ್ತದೆ.
ಇದೇ ರೀತಿಯ ಸಂಪತ್ತು ಬೇರೆ ಕಡೆಗಳಲ್ಲಿ ಸಿಗುವುದಿಲ್ಲ ಎಂದಲ್ಲ. ವಿಶ್ವದರ್ಜೆಯ ಶ್ರೇಷ್ಠ ಮಟ್ಟದ ಮ್ಯಾಂಗನೀಸ್ ಅದಿರಿನ ನಿಕ್ಷೇಪಗಳು ಸುಬ್ರಾಯನಹಳ್ಳಿ ,ರಾಮಘಡಗಳಂತಹ ಹಳ್ಳಿಗಳ ಶಿಖರಗಳಲ್ಲಿ ದೊರೆಯುತ್ತವೆ. ಈ ಅದಿರಿನ ವಿಶೇಷವೆಂದರೆ ಬಹುತೇಕ ಅದಿರುಗಳಲ್ಲಿ ಸೇರಿಹೋಗಿರುವ ಫಾಸ್ಪೇಟ್ ಮತ್ತು ಸಲ್ಫರ ನಿಗದಿತ ಅಂಶಕ್ಕಿಂತ ಕಡಿಮೆ ಇರುವುದರಿಂದ ಇಲ್ಲಿನ ಮ್ಯಾಂಗನೀಸ್ ವಿಶ್ವ ಪ್ರಸಿದ್ಧವಾಗಿದೆ ಹಾಗಾಗಿ ಇಲ್ಲಿನ ಅದಿರಿಗೆ ವಿಶೇಷ ಬೇಡಿಕೆ.
ಬಳ್ಳಾರಿ ಜಿಲ್ಲೆಯ ಸೊಂಡೂರು ಕೇವಲ ಒಂದು ಊರು,ಪ್ರದೇಶ ಆಗಿರಬಹುದು .ಆದರೆ ಆತ ಊರಿನ ದುರಂತ ಇಡೀ ಪ್ರಪಂಚವನ್ನೇ ಪ್ರತಿನಿಧಿಸುವುದರ ಸಂಕೇತ. ಗಣಿಗಾರಿಕೆ ಆರಂಭವಾದಾಗಲೇ ಊರಿನ ಅವನತಿಯ ಆರಂಭವಾಯಿತು. ಯಥೇಚ್ಛವಾಗಿ ಗಣಿಗಾರಿಕೆಗೆ ಸರ್ಕಾರವೇ ಅನುಮತಿ ನೀಡುವಾಗ ಅದರ ಹೆಸರಿನಲ್ಲಿ ರಾಜಕಾರಣಿಗಳು ಅಕ್ರಮ ಗಣಿಗಾರಿಕೆ ನಡೆಸುವಾಗಲಂತೂ ಊರು ಆಹುತಿಯಾಗಿ ಬಿಟ್ಟಿತ್ತು. ಮನುಷ್ಯರು ಕೂಲಿಯ ಯಂತ್ರಗಳಾಗಿ ಹೋದರು.
ಮನುಷ್ಯನೇ ಸಂಶೋಧಿಸಿದ ಮೂಲ ಕಸುಬುಗಳಾದ ಕೃಷಿ ,ಬಡಗಿತನ, ಕ್ರೀಡೆ ಹಾಗೂ ಮೈಥುನಗಳು ಸಹ ಕೇವಲ ಯಾಂತ್ರಿಕವೆಂಬಂತೆ ಆಗಿಹೋದವು.ಎಷ್ಟೋ ದಿನಗಟ್ಟಲೆ,ತಿಂಗಳುಗಟ್ಟಲೆ, ಗಣಿಗಾರಿಕೆ ಬೆಟ್ಟಗಳ ತುತ್ತತುದಿಯಲ್ಲಿ ನಡೆಯುತ್ತಿತ್ತು.ಕೂಲಿಯವರೂ ಅಷ್ಟೂ ದಿನಗಳ ಕಾಲ ಅಲ್ಲಿಯೇ ಇರಬೇಕಾಗುತ್ತಿತ್ತು. ಕೂಲಿಯ ಹೆಣ್ಣು ಗಂಡುಗಳು ಅದಿರಿನ ನಿಕ್ಷೇಪದ ಬಯಲಿನಲ್ಲಿಯೇ ಮೈಥುನಕ್ಕಿಳಿದುಬಿಡುತ್ತಿದ್ದರು.ಮಕ್ಕಳು ಉಣ್ಣುವ ಅನ್ನದಲ್ಲಿ ಕೆಂಪುಧೂಳು ಸೇರಿಸಿಯೇ ಉಣ್ಣಬೇಕಾಗುತ್ತತ್ತು. ಕಂಟೇನರುಗಳಲ್ಲಿಯೇಇವರ ಜೀವನ ಮುಗಿದುಹೋಗಿರುತ್ತಿತ್ತು.ಮನುಷ್ಯ ಹೀಗೂ ಬದುಕಬಲ್ಲ ಎಂಬುದನ್ನು ಯಾರೂ ಕೂಡ ಯೋಚಿಸಲಿಲ್ಲ.
ಗಣಿ ಸಾವ್ಕಾರಗಳು ಸಾಮಾನ್ಯ ಜನರ ಕಣ್ಣಿಗೆ ಇಂದಿಗೂ ವೈಭೋಗದ ತುಣುಕುಗಳ ಹಾಗೆ ಕಾಣಿಸುತ್ತಿದ್ದಾರೆ. ಜನರನ್ನು ,ಅವರ ಗಮನವನ್ನು ಬೇರೆಡೆಗೆ ಸೆಳೆಯದಂತೆ ಎಷ್ಟು ಪ್ರಯತ್ನಗಳು ನಡೆದಿರುತ್ತವೆ ಎಂದರೆ, ಊರಿನಲ್ಲಿ ಎಲೆಕ್ಷನ್ ಇರಲಿ ,ಇಲ್ಲದಿರಲಿ ,ಧಣಿ- ರಾಜಕಾರಣಿಯ ವಿವಿಧ ರೀತಿಯ ಬಣ್ಣಬಣ್ಣದ ಕಟೌಟುಗಳು ದಾರಿಯುದ್ದಕ್ಕೂ ರಾರಾಜಿಸುತ್ತವೆ. ಪ್ರತಿವಾರವೂ ಕಟೌಟ್ಗಳು ಬದಲಾಗುತ್ತಲೇ ಇರುತ್ತದೆ.
ಇನ್ನು ಕೆಲ ಸಾಹುಕಾರ ಗಳಂತೂ ತಾವೇ ಆಧುನಿಕ ಶ್ರೀ ಕೃಷ್ಣದೇವರಾಯ ಎಂದು ಭಾವಿಸಿ ,ಅವನಂತೆಯೇ ವೇಷಧರಿಸಿ ನಿಂತು ಬೃಹತ್ ಕಟೌಟುಗಳನ್ನು ನಗರದ ವಿವಿಧ ಕಡೆಗಳಲ್ಲಿ ನಿಲ್ಲಿಸಲಾಯಿತು.ಬಳ್ಳಾರಿಯ ಗಣಿಧಣಿಗಳದ್ದೂ ಇನ್ನೊಂದು ರೀತಿ.ಮುಂಜಾನೆಯ ಟಿಫನ್ನಿಗೆ ಬೆಂಗಳೂರಿನ ಎಂ.ಟಿ.ಆರ್.ಹೋಟೆಲ್ಲಿಗೆ ಹೆಲಿಕಾಪ್ಟರ್ ನಲ್ಲಿ ಹೋದರೆ,ಅದಕ್ಕೂ ಮುನ್ನ ಹೆಲಿಕಾಪ್ಟರ್ ನಲ್ಲಿ ಹೈದರಾಬಾದ್ ವರೆಗೂ ವಾಕಿಂಗ್ ಹೋಗುವವರಿದ್ದರು.ವಿಮಾನದಲ್ಲಿ ಮಧ್ಯಾನ್ಹದ ಊಟಕ್ಕೆ ಬೊಂಬಾಯಿಗೆ ಹೋಗುತ್ತಿದ್ದರು.ರಾತ್ರಿ ಮತ್ತೆಲ್ಲಿಗೋ…!ಎಷ್ಟೋ ಜನ ಸಿನಿಮಾದವರು ರಾತ್ರೋರಾತ್ರಿ ಬಂದುಹೋಗುವುದನ್ನು ನೋಡಿದವರು ಇದ್ದರು.
ಲೋಲುಪತೆಗೆ ಜನರ ಬದುಕನ್ನೆ ಆಹುತಿ ತೆಗೆದುಕೊಂಡ ಧಣಿಗಳು,ಕೊನೆಗೆ ಜನರು ತಮ್ಮ ಕಡೆಗೆ ದೃಷ್ಟಿ ಹರಿಸಲೆಂದು ಸದಾ ಒಂದಿಲ್ಲೊಂದು ಸುದ್ದಿಯಿಂದ ಜನರನ್ನು ಭ್ರಮಾಲೋಕದಲ್ಲಿ ತಿರುಗುವಂತೆ ನೋಡಿಕೊಂಡರು.”ಸಾಮೂಹಿಕ ಮದುವೆ”ಗಳಂತಹ ಕೃತ್ರಿಮ ಕಾರ್ಯಕ್ರಮಗಳಿಗೆ ಕೈ ಹಾಕಿದರು.ಆ ಮೂಲಕ ಅಲ್ಲಿ ಬಂದ ವಧು-ವರರಿಗೆ ತಾಳಿ- ಬಟ್ಟೆ ಕೊಡುವುದರ ಮೂಲಕ “ದಾನಶೂರ”ರು ಎನಿಸಿಕೊಂಡರು.ಆದರೆ ಇಂತಹ ವಿವಾಹಗಳು ಹೆಸರಿನಲ್ಲಿ ಜನರು ಪ್ರಶ್ನೆ ಕೇಳುವುದನ್ನು,ಆಲೋಚನೆಯನ್ನೆ ಮಾಡದಿರುವ ಹಾಗೆ,ಅರ್ಥಮಾಡಿಕೊಳ್ಳುವ ಅವರು ಗುಣವನ್ನೆ ನಾಶಪಡಿಸಲಾಯಿತು.ಇಂತಹ ಗಣಿಧಣಿಗಳ ಭಿಕ್ಷೆಗೆ ಕೆಲ ಮಠಾಧೀಶರು ಕೈಚಾಚಿದರು.
ಜನರ ಬದುಕು ಕುಸಿಯಲು ಎಷ್ಟೊಂದು ಜನ ಒಂದಾದರು?
ನೆನೆಸಿಕೊಂಡರೆ ರೋಷ ಆವೇಶವೂ ಅಂತಕರುಣೆಯೂ ಒಟ್ಟಿಗೆಉಕ್ಕಿಬರುತ್ತದೆ.
ಜಿಲ್ಲೆಯ ಗಡಿಪ್ರದೇಶದ ಒಂದು ಬಹುಮುಖ್ಯವಾದ ಹಳ್ಳಿ ಕಮ್ಮತ್ತೂರು. ಈ ಊರಿನಲ್ಲಿ ನಡೆದಷ್ಟು ಗಣಿಗಾರಿಕೆ ಮತ್ತು ಡಿಪ್ಪಿಂಗ್ ಬೇರೆಲ್ಲೂ ನಡೆದಿರಲಿಕ್ಕಿಲ್ಲ .ಊರಿನ ಮನೆ ಗಳಿಗಿಂತಲೂ ಅಧಿಕವಾದ ಸ್ಟಾಕ್ ಯಾರ್ಡ್ಗಳು ನಿರ್ಮಾಣವಾದವು. ಧೂಳಿನಿಂದಾಗಿ ಮತ್ತು ವಿಪರೀತ ಶಬ್ದದಿಂದಾಗಿ ಅಸ್ತಮಕ್ಕೆ, ಕಿವುಡುತನಕ್ಕೆ ಬಲಿಯಾದವರಿಗೆ ಲೆಕ್ಕವಿಲ್ಲ. ಅಪರಿಮಿತ ಗಣಿಗಾರಿಕೆಯ ಪ್ರಭಾವದಿಂದಾಗಿ ಆಕ್ಸಿಜನ್ ಪ್ರಮಾಣ ಕುಸಿತ ಕಂಡಿತು. ಇಡೀ ಊರಿಗೆ ಊರೇ ಐಸಿಯುನಲ್ಲಿ ಇರುವಂತೆ ಭಾಸವಾಗುತ್ತಿದೆ.ಇಂತಹ ಎಷ್ಟೋ ಹಳ್ಳಿಗಳು ಉಸಿರಾಡಲು ಕಷ್ಟಪಡುತ್ತಿವೆ.
ಒಂದು ಕಾಲದ ರೈತ ಹೊಲ, ಗದ್ದೆ, ಮಣ್ಣನ್ನು ಪೂಜಿಸುತ್ತಿದ್ದ. ಆರಾಧಿಸುತ್ತಿದ್ದ .ಗುಡ್ಡಬೆಟ್ಟ ಸೂರ್ಯ ಚಂದ್ರ ತಾರೆಯರೇ ಆತನ ದೇವರುಗಳಾಗಿದ್ದವು. ದುಡಿಮೆಯೇ ಆತನ ಸಂಪತ್ತು. ಇಂತಹ ಕುಟುಂಬಗಳು ಇಲ್ಲದ, ಪ್ರಕೃತಿಯೂ ಇಲ್ಲದ ,ಅಭಿಶಾಪದ ಊರುಗಳಲ್ಲಿ ಶಾಪಗ್ರಸ್ತರಂತೆ ಮತ್ತೊಮ್ಮೆ ಯುದ್ಧಕ್ಕೆ ಹೊರಟ ಕೆಂಪು ಸೈನಿಕರಂತೆ ಇಲ್ಲಿನ ಜನ ಕಾಣಿಸುತ್ತಾರೆ.
ಎಲ್ಲಾ ಮುಗಿದ ಮೇಲೆ ಊರ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ದಿನಾಂಕ: 6 -10-2016 ರಂದು ಸರ್ಕಾರ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿ ಆದೇಶಿಸಿತು.
ಕಾಲವೀಗ ತಣ್ಣಗೆ ನಿಶ್ಯಬ್ದ..!
ಯಾರದ್ದೋ ಹೆಣವೊಂದು ಸದ್ದಿಲ್ಲದೆ ಬಿದ್ದುಕೊಂಡಿರುವ, ಇನ್ನೂ ಯಾರೋ ಬರುವವರಿದ್ದಾರೆ ಎಂದು ಹೆಣವನ್ನು ಎತ್ತದೆ, ಕಾದು ಕುಳಿತಿರುವಂತೆ ಸೊಂಡೂರಿನ ಬೀದಿಗಳಿವೆ.
ಬಡತನದ ರೇಖೆಗಳನ್ನೆಲ್ಲಾ ಮೈಮೇಲೆ ಹೊದ್ದು ಕುಳಿತವರಂತೆ ಕಾಣುವ ಮುದುಕರು ,ಸಾಯಲಿಕ್ಕೂ ಆಗದೆ ಬದುಕಲೂ ಆಗಿದೆ, ದುಸ್ಥಿತಿಗೆ ಕಾರಣವನ್ನು ಹುಡುಕುತ್ತಿರುವವರ ಹಾಗೆ ಹಣೆಗೆ ಕೈ ಹಚ್ಚಿ ಕುಳಿತ ದೃಶ್ಯಗಳು ಹೃದಯವನ್ನು ಕಲಕುತ್ತದೆ .ಇದು ನಾಗರಿಕ ಸಮಾಜವೊಂದು ತನ್ನದೇ ಊರಿನ ಸಮುದಾಯವನ್ನು ಚಿತ್ರಹಿಂಸೆಗೆ ಒಳಪಡಿಸಿದ ಹಾಗೆ.ನಾನು ಕಂಡು ಮಾತನಾಡಿಸಿದರವಲ್ಲಿ ” ನನ್ನ ಹಣೆಬರಹ…ನೋಡಪಾ, ಅಲಸಂದಿ,ಅವರೆ,ಜ್ವಾಳ,ನವಣಿ,
ಸಜ್ಜಿ ಬೆಳೀತಿದ್ದೆ. ಏಪೆಂಪ್ಸಿಗೆ ಹಾಕಿ ರೊಕ್ಕ ಎಣಿಸ್ಕಂಡು ಬರ್ತಿದ್ದೆ.ಮಕ್ಕಳು ಮೀರಿ ಎಲ್ಲ ಆರಾಮಾಗಿದ್ವಿ…ಮೈನ್ಸು ಮೈನ್ಸೂ ಅಂತಂದು ಮೈಯೆಲ್ಲಾ ತಗಂಬುಡ್ತು ನನ್ನಪ್ಪನೆ” ಎಂದು ವಿಷಾದದಿಂದ ಹೇಳುತ್ತಾರೆ.
ದೂರದ ಊರುಗಳ ಗೆಳೆಯರಿಗೆ ಸೊಂಡೂರು ಎನ್ನುವುದು ಸುಂದರ ಸ್ವಪ್ನದ ಹಾಗೆ, ಕಾಡುತ್ತಲೇ ಇರುತ್ತದೆ. ಗಣಿಗಾರಿಕೆಯಿಂದ ರಾಜ್ಯ,ದೇಶ ವ್ಯಾಪಿ ಸುದ್ದಿಯಾಗಿ, ಅಂತರಾಷ್ಟ್ರೀಯ ಪ್ರಖ್ಯಾತಿಯನ್ನು ಗಳಿಸಿಬಿಟ್ಟಿತು. ಈಗಲೂ ‘ಚುನಾವಣೆ ‘ಎಂಬ ಶಬ್ದ ಕೇಳಿದರೆ ಸಾಕು, ಜನರ ಕಣ್ಣಲ್ಲಿ ಹೊಳಪು ಮೂಡುತ್ತದೆ. ಬಾಯಲ್ಲಿ ನೀರೂರುತ್ತದೆ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬ ಎಂದು ನಾವು ಭಾವಿಸಿದ್ದು ,ಇಲ್ಲಿ ಅಣಕದಂತೆ ಭಾಸವಾಗುತ್ತಿದೆ.
*******
ಆದರೆ ,ಅಭಿವೃದ್ಧಿಯ ದೃಷ್ಟಿಯಿಂದ ಹೊರಗಿನ ಪ್ರಪಂಚಕ್ಕೆ ಸಾಕಷ್ಟು ಶ್ರೀಮಂತ, ಎಲ್ಲಾ ಬ್ರಾಂಡೆಡ್ ಕಂಪನಿಗಳ ಅಂಗಡಿಗಳಿರುವ ಹೊಸಪೇಟೆ-ಬಳ್ಳಾರಿಯಂತಹ ಊರುಗಳಲ್ಲಿ ಸ್ಟಾರ್ ಹೋಟೆಲ್ಗಳು ನಡೆಯುತ್ತಿವೆ. ಸೊಂಡೂರಿನ ಗಾಂಧಿ ಕರಕುಶಲ ಕೈಗಾರಿಕಾ ಕೇಂದ್ರಕ್ಕೂ ಬೀಗ ಬಿದ್ದಿದೆ.
ಹೌದು, ಅಭಿವೃದ್ಧಿಯೆಂದರೆ ಈ ಪ್ರದೇಶಗಳ ಜನತೆ ಹಸಿವಿನಿಂದ ಸ್ವಾತಂತ್ರ್ಯ ಪಡೆದಿದ್ದಾರೆಯೆ ?ಲಿಂಗ ಅಸಮಾನತೆಯಿಂದ ಸಾಮಾಜಿಕ ಅಸಮಾನತೆಯ,ಅವಮಾನಳಿಂದ ಸ್ವಾತಂತ್ರ್ಯ ಪಡೆದಿದ್ದಾರೆಯೆ ?ಎನ್ನುವ ಅಮರ್ತ್ಯಸೇನರು ಕೇಳುವ ಪ್ರಶ್ನೆಗಳನ್ನು ಕೇಳಿಕೊಂಡರೆ…ಎಲ್ಲಾ ಪ್ರಶ್ನೆಗಳಿಗೂ “ಇಲ್ಲ”ಎಂಬ ರೆಡಿ ಉತ್ತರ ದೊರಕುವುದು.
ಈ ಎಲ್ಲಾ ಸ್ವಾತಂತ್ರ್ಯಗಳನ್ನು ಯಾರೋ ಕೊಡಲು ಸಾಧ್ಯವಿಲ್ಲ.ಅವರು ಪಡೆದುಕೊಳ್ಳುವ ಸಾಮರ್ಥ್ಯವನ್ನು ನಿರ್ಮಾಣ ಮಾಡುವುದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ.
***
ವಯಸ್ಸಾಗಿ ಮುದುಕರಾದಾಗ ಮೂಲೆಯಲ್ಲಿ ಎಲ್ಲೋ ಒಂದು ಕಡೆ ಕುಳಿತು ಅಂತರ್ಮುಖಿಗಳಾಗಿಬಿಡುವುದು ವಯೋಸಹಜ ಗುಣ. ಆದರಿಲ್ಲಿ ಮಕ್ಕಳೂ ಅಂತರ್ಮುಖಿಗಳಾದರೆ… ?ಕಥೆಗಳು ಬೆಂಕಿಯ ಕೆನ್ನಾಲಗೆ ಹಾಗೆ ಸುಡುತ್ತಿವೆ. ಈ ಜನಗಳು ಅನುಭವಿಸಿದ, ಅನುಭವಿಸುತ್ತಿರುವ ಕರಾಳ ನೋವುಗಳನ್ನು ಹಿಡಿದಿಡಲು ಒಂದು ಜೀವನ ಸಾಕಾಗುವುದಿಲ್ಲ ಎನಿಸುತ್ತಿದೆ.
ಇಲ್ಲಿನ ಎಲ್ಲಾ ಅಕ್ಷರಗಳು ವರ್ತಮಾನದ ಒತ್ತಡಗಳಿಂದಲೇ ಬಂದಿರುವುವು ಎಂದೇ ಭಾವಿಸಿದ್ದೇನೆ. ಹಿಂದಿನಿಂದಲೂ ನನ್ನನ್ನು ಕಾಡುತ್ತಿದ್ದ ಘಟನೆಗಳು, ನಂತರದಲ್ಲಿ ಗಣಿಗಾರಿಕೆಯೆಂಬ ಪೀಕ್ ಅವಧಿಯಲ್ಲಿನ ಘಟನೆಗಳು ,ಜನರ ಬದುಕು, ನಂತರದ ದಿನಗಳಲ್ಲಿ ಅಕ್ರಮ ಗಣಿಗಾರಿಕೆಯಿಂದ ಬೀದಿಪಾಲಾದ ಕುಟುಂಬಗಳ ರೋದನವನ್ನು ಕೆಲಮಟ್ಟಿಗಾದರೂ ತಿಳಿಸಬೇಕಿತ್ತು.
ಬರಹಗಾರನೊಬ್ಬ ಯಾಕೆ ಬರೆಯುತ್ತಾನೆ ಎಂಬುದನ್ನು ಪೂರ್ಣ ಅರ್ಥಮಾಡಿಸಿದ್ದು ಈ ಬರಹಗಳೆ.ಎದೆಯ ಮೂಲೆಯಲ್ಲಿ ಅಡಗಿದ್ದ ಭಾವಗಳು ಕಾಡಿದಾಗಲೆಲ್ಲ ಸಣ್ಣ ಸಣ್ಣ ಚೀಟಿಗಳಲ್ಲಿ ಬರೆದು,ಇತ್ತೀಚೆಗೆ ಮೊಬೈಲಿನಲ್ಲಿ ಟೈಪಿಸಿ ಕೊಂಡು ನಿರಾಳವಾಗುತ್ತಿದ್ದೆ.ಬಹಳ ವರ್ಷಗಳ ಹಿಂದಿನಿಂದಲೂ ಹಿಡಿದಿಟ್ಟುಕೊಂಡಿದ್ದ ಕರಾಳ ಸತ್ಯಗಳನ್ನು ಬರೆಯುವಾಗ ಕಣ್ಣು ಮುಂಜಾದದ್ದು,ಎದೆ ಭಾರವಾದದ್ದೂ ಇದೆ.ಸಾಮಾನ್ಯ ಕೃಷಿಕನೋರ್ವ ಕಣ್ಣೆದುರೇ ಹುಚ್ಚನಾಗಿ ತಿರುಗಾಡುವಾಗ ತುಂಬಾ ಡಿಸ್ಟರ್ಬ್ ಆಗಿದ್ದಿದೆ.
ಹೀಗೆ ನನ್ನನ್ನು ,ಡಿಸ್ಟರ್ಬ್ ಮಾಡಿದ ಈ ಭಾವಗಳು ನನ್ನ ಎದೆಯಿಂದ ಹಾರಿ ಹೀಗೆ ಹೊರಬರುವ ತನಕವೂ ಸಮಾಧಾನವಿದ್ದಿಲ್ಲ.ನಾನು ಸಾಮಾಜಿಕ ಜವಾಬ್ದಾರಿಯೊಂದಿಗೆ ನನಗನಿಸಿದ ಭಾವಗಳನ್ನು ಹೊರಹಾಕಿರುವೆ…..ನಿಟ್ಟುಸಿರಿನೊಂದಿಗೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ1 day ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ18 hours ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ