ದಿನದ ಸುದ್ದಿ
ಇದು ಭ್ರಷ್ಟಾಚಾರದ ಒಂದು ಮುಖ್ಯ ಆಯಾಮ ಅಲ್ಲವೇ ? ಸಜ್ಜನ, ಪ್ರಾಮಾಣಿಕ ಸಚಿವ ಸುರೇಶ್ ಕುಮಾರ್ ರವರು ಉತ್ತರ ಕೊಡಬೇಕು..!

ಭ್ರಷ್ಟಾಚಾರಕ್ಕೆ ಹಲವು ಆಯಾಮಗಳಿವೆ. ನೇರವಾಗಿ ಲಂಚ ತೆಗೆದುಕೊಳ್ಳುವ ಭ್ರಷ್ಟಾಚಾರಕ್ಕಿಂತ ತಂತ್ರಗಾರಿಕೆಯ ಕಡತ ಭ್ರಷ್ಟಾಚಾರಗಳು ಅತ್ಯಂತ ಅಪಾಯಕಾರಿ. ಅಂತಹ ಭ್ರಷ್ಟಾಚಾರದ ವಾಸನೆ ಸಚಿವ ಸುರೇಶ್ ಕುಮಾರ್ ಕಡತದಿಂದ ಬರುತ್ತಿದೆ.
ಲಾಕ್ ಡೌನ್ ಘೋಷಣೆಯಾಗುತ್ತಿದ್ದಂತೆ ಶಾಲಾ ಕಾಲೇಜುಗಳು ರಜೆ ಘೋಷಿಸಿ, ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿತ್ತು. ಅದರಲ್ಲಿ ಮೊದಲನೆಯದ್ದು, ಯಾವುದೇ ಶಾಲೆಗಳು ಫೀಸ್ ಸಂಗ್ರಹ ಮಾಡಬಾರದು ಎನ್ನುವುದಾಗಿತ್ತು. ಲಾಕ್ ಡೌನ್ ನಿಂದ ಕೆಲಸ ಬಿಟ್ಟು ಮನೆಯಲ್ಲಿರುವ ಪೋಷಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಕೈಗೊಂಡ ಉತ್ತಮ ನಿರ್ಧಾರ ಇದಾಗಿತ್ತು. ಇದಾದ ಬಳಿಕ ಖಾಸಗಿ ಶಾಲಾ ಮಾಫಿಯಾ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಸರ್ಕಾರಕ್ಕೆ ಒತ್ತಡ ಹಾಕಿದ್ದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಲಾಭಿಗೆ ಮಣಿಯದೆ ಜನರ ಹಿತ ಕಾಯ್ದಿದ್ದರು.
ಇದೀಗ ಖಾಸಗಿ ಶಿಕ್ಷಣ ಸಂಸ್ಥೆಯ ಲಾಬಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಎಡತಾಕಿ ಕೆಲಸ ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇನ್ಮುಂದೆ ಖಾಸಗಿ ಶಾಲೆಗಳ ಶುಲ್ಕ ವಸೂಲಿ ದರ್ಬಾರ್ ಪ್ರಾರಂಭವಾಗಲಿದೆ.
ಗುರುವಾರ ಎಪ್ರಿಲ್ 23 ರಂದು ಸುರೇಶ್ ಕುಮಾರ್ ರವರು ಸ್ವತಃ ಸಹಿ ಹಾಕಿ ಆದೇಶವೊಂದನ್ನು ಮಾಡಿದ್ದಾರೆ. ಇವತ್ತಿನಿಂದ ಖಾಸಗಿ ಶಾಲೆಗಳು ಶುಲ್ಕ ವಸೂಲಿ ಮಾಡಬಹುದು ಎಂಬುದು ಸುರೇಶ್ ಕುಮಾರ್ ಆದೇಶದ ಸಾರಾಂಶ. ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಸಭೆ ನಡೆಸಿ, ಗೈಡ್ ಲೈನ್ಸ್ ರೂಪಿಸಿ ಅಧಿಕಾರಿಗಳೇ ಹೊರಡಿಸಬೇಕಾದ ಆದೇಶವನ್ನು ಸುರೇಶ್ ಕುಮಾರ್ ಯಾಕೆ ಹೊರಡಿಸಿದ್ರು ? ಜನ ಕೆಲಸವಿಲ್ಲದೆ, ಆದಾಯವಿಲ್ಲದೆ ಮನೆಯಲ್ಲಿದ್ದಾರೆ. ಅವರು ಶಾಲಾ ಫೀಸ್ ಕಟ್ಟುವುದೆಲ್ಲಿಂದ ? ಶುಲ್ಕ ಕಟ್ಟಲು ಬಲವಂತ ಮಾಡಬಾರದು ಎಂದು ಆದೇಶದಲ್ಲಿ ಹೇಳಿದ್ದರೂ ಸ್ವ ಇಚ್ಚೆಯೋ, ಬಲವಂತವೊ ಎಂಬುದರ ಪರಿಶೀಲನೆಗೆ ನೋಡಲ್ ಅಧಿಕಾರಿಗಳ ನೇಮಕವಾಗಿದೆಯೇ ? ಇಲ್ಲ !
ತನ್ನ ಮಗನಿಗೋ ಮಗಳಿಗೋ ಫೀಸ್ ಕಟ್ಟದೇ ಇದ್ದರೆ ಮುಂದಿನ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂಬ ಆತಂಕದಲ್ಲಿ ಲಕ್ಷಗಟ್ಟಲೆ ಹಣವನ್ನು ಬಡ್ಡಿಗೆ ತಗೊಂಡು ಹೊಂದಿಸಿ ಶುಲ್ಕ ಕಟ್ಟುವುದು ಬಲವಂತದ ವ್ಯಾಪ್ತಿಯಲ್ಲಿ ಬರುತ್ತದೋ, ಸ್ವ ಇಚ್ಚೆಯ ವ್ಯಾಪ್ತಿಯಲ್ಲಿ ಬರುತ್ತದೋ ? ಇವೆಲ್ಲದರ ಪ್ರಜ್ಞೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಇಲ್ಲ ಎಂದರೆ ಮೂರ್ಖತನವಾಗುತ್ತದೆ. ಈ ಅಪಾಯಗಳ ಅರಿವಿದ್ದೇ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಲಾಭ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ. ಇದರ ಹಿಂದೆ 500 ಕೋಟಿ ರೂಗಳ ವಹಿವಾಟು ನಡೆದಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಸಜ್ಜನ, ಪ್ರಾಮಾಣಿಕ ಸಚಿವ ಸುರೇಶ್ ಕುಮಾರ್ ರವರು ಅವರ ಸಹಿ ಇರುವ ಆದೇಶದ ಬಗ್ಗೆ ಎದ್ದಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡದಿದ್ದರೆ ಅನುಮಾನಗಳು ಹಾಗೇ ಉಳಿದು ಬಿಡುತ್ತವೆ.
(ಇದು ಲೇಖಕರೊಬ್ಬರ ಅಭಿಪ್ರಾಯ, ಅನಿವಾರ್ಯ ಕಾರಣಗಳಿಂದಾಗಿ ಹೆಸರು ಗೌಪ್ಯವಾಗಿಡಲಾಗಿದೆ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕ : ಸಚಿವ ಎಸ್. ಮಧು ಬಂಗಾರಪ್ಪ

ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಖಾಲಿ ಇರುವ 2120 ದೈಹಿಕ ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 2500 ಹುದ್ದೆಗಳ ಭರ್ತಿ ಪ್ರಸ್ತಾವನೆ ಆರ್ಥಿಕ ಇಲಾಖೆಯ ಸಮಾಲೋಚನೆಯಲ್ಲಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ಆದಷ್ಟು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ವಿಧಾನಪರಿಷತ್ತಿಗೆ ಸೋಮವಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
