ಬಹಿರಂಗ
‘ಚುನಾವಣಾ ಬಾಂಡು’ ಎಂಬ ಕುಟಿಲ ಯೋಜನೆಯನ್ನು ರದ್ದು ಮಾಡಬೇಕು, ಈಗಲೇ..!
- ನಿಧಿ ನೀಡಿಕೆ ಕಾನೂನುಬದ್ಧವಾಗಿರುವ ವರೆಗೆ ರಾಜಕೀಯ ಪಕ್ಷಗಳಿಗೆ ಯಾರು ನಿಧಿ ನೀಡುತ್ತಾರೆ ಎಂದು ತಿಳಿಯುವ ಹಕ್ಕು ಸಾರ್ವಜನಿಕರಿಗೆ ಇಲ್ಲ ಎಂಬ ಒಂದು ದಂಗುಬಡಿಸುವ ಹೇಳಿಕೆಯನ್ನು ಸರಕಾರದ ಪರವಾಗಿ ಅಟಾರ್ನಿ ಜನರಲ್ ನೀಡಿದ್ದಾರೆ. ತದ್ವಿರುದ್ಧವಾಗಿ, ಸುಪ್ರಿಂ ಕೋರ್ಟ್ ಜನತೆಗೆ ತಿಳಿಯುವ ಹಕ್ಕು ಇದೆ ಎಂಬ ನಿಲುವನ್ನು ಘೋಷಿಸಿದೆ. ಹೀಗಿರುವಾಗ, ಅದು ಒಂದು ಅಂತಿಮ ತೀರ್ಪು ಕೊಡುವ ವರೆಗೆ ಈ ಯೋಜನೆಗೆ ತಡೆಯಾಜ್ಞೆಯನ್ನಾದರೂ ಕೊಡಬಹುದಿತ್ತು.
ಮಾರ್ಚ್ 2018 ರಲ್ಲಿ ಜಾರಿಗೆ ಬಂದ ಚುನಾವಣಾ ಬಾಂಡುಗಳ ಯೋಜನೆ ಕಾರ್ಪೊರೇಟ್ ನಿಧಿಗಳನ್ನು, ಕಮಿಶನ್ ಲಂಚಗಳನ್ನು ಮತ್ತು ಕಪ್ಪು ಹಣವನ್ನು ಆಳುವ ಪಕ್ಷದ ಖಜಾನೆಗೆ ಎಳೆದುಕೊಳ್ಳುವ ಒಂದು ಭಂಡ ಮತ್ತು ಅಪಾರದರ್ಶಕ ವಿಧಾನ.
ಆದ್ದರಿಂದಲೇ, ಸಿಪಿಐ(ಎಂ), ಈ ಯೋಜನೆಯನ್ನು ಮತ್ತು ಅದಕ್ಕಾಗಿ ಮಾಡಿದ ತಿದ್ದುಪಡಿಗಳನ್ನು ಸುಪ್ರಿಂ ಕೋರ್ಟಿನಲ್ಲಿ ಪ್ರಶ್ನಿಸಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್(ಎಡಿಆರ್-ಪ್ರಜಾಸತ್ತಾತ್ಮಕ ಸುಧಾರಣೆಗಳ ಸಂಘ) ಕೂಡ ಈ ಯೋಜನೆಯನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಹಾಕಿದೆ. ಚುನಾವಣಾ ಬಾಂಡುಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿರುವ ಏಕೈಕ ಪಕ್ಷ ಸಿಪಿಐ(ಎಂ).
ಈ ಯೋಜನೆಯಲ್ಲಿ ಅನಾಮಧೇಯ ದಾನಿಗಳು ಒಂದು ರಾಜಕೀಯ ಪಕ್ಷಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ)ದ ಇದಕ್ಕಾಗಿ ನಿಯೋಜಿತವಾದ ಖಾತೆಗಳ ಮೂಲಕ ಎಷ್ಟು ಬೇಕಾದರೂ ಹಣವನ್ನು ಕೊಡಬಹುದು. ಇದಕ್ಕಾಗಿ, ಜನತಾ ಪ್ರಾತಿನಿಧ್ಯ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಕಂಪನಿಗಳ ಕಾಯ್ದೆ ಮತ್ತು ಆರ್ಬಿಐ ಕಾಯ್ದೆಯನ್ನು ತಿದ್ದುಪಡಿ ಮಾಡಲಾಯಿತು. ಕಂಪನಿಗಳು ಮೂರು ವರ್ಷಗಳ ನಿವ್ವಳ ಲಾಭದ 7.5% ದ ವರೆಗಿನ ಮೊತ್ತವನ್ನು ಮಾತ್ರ ದೇಣಿಗೆಯಾಗಿ ಕೊಡಬಹುದು ಎಂದಿದ್ದ ಮಿತಿಯನ್ನು ತೆಗೆಯಲಾಯಿತು. ಇನ್ನೂ ಅಪಾಯಕಾರಿ ಸಂಗತಿಯೆಂದರೆ, ಭಾರತದಲ್ಲಿ ಕಾರ್ಯನಿರ್ವಹಿಸುವ ವಿದೇಶಿ ಕಂಪನಿಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಅನುವಾಗುವಂತೆಯೂ ಕಾಯ್ದೆಯನ್ನು ತಿದ್ದುಪಡಿ ಮಾಡಲಾಯಿತು.
ಅರುಣ್ ಜೇಟ್ಲಿ ತರ್ಕಗಳು
ದಾನಿ ಯಾರೆಂಬುದು ಎಸ್ಬಿಐಗೆ ಗೊತ್ತಿರುತ್ತದೆ. ಇದು ಸರಕಾರೀ ಒಡೆತನ್ ಬ್ಯಾಂಕ್ ಆಗಿರುವುದರಿಂದಾಗಿ, ಅದರ ಮೂಲಕ ಸರಕಾರಕ್ಕೂ ಗೊತ್ತಾಗುತ್ತದೆ. ಆದ್ದರಿಂದ ಕಾರ್ಪೊರೇಟ್ಗಳು ಮತ್ತು ದೊಡ್ಡ ದೇಣಿಗೆದಾರರು ಪ್ರತಿಪಕ್ಷಕ್ಕಿಂತ ಆಳುವ ಪಕ್ಷಕ್ಕೇ ದೇಣಿಗೆ ಕೊಡಲು ಮುಂದೆ ಬರುತ್ತಾರೆ. ದಾನಿಗಳ ಹೆಸರನ್ನು ಸಾರ್ವಜನಿಕಗೊಳಿಸುವುದಿಲ್ಲವಾದ್ದರಿಂದ, ಅವರು ಈಗ ಯಾವುಧೇ ಭಯವಿಲ್ಲದೆ ಯಾರಿಗಾದರೂ ದೇಣಿಗೆ ಕೊಡಬಹುದು ಎಂಬ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ತರ್ಕಕ್ಕೆ ತದ್ವಿರುದ್ಧವಾಗಿ, ಸರಕಾರಕ್ಕೆ ದಾನಿಯ ಹೆಸರು ಗೊತ್ತಾಗುವುದರಿಂದಾಗಿ, ಈ ಬಾಂಡ್ಗಳು ಮುಖ್ಯವಾಗಿ ಆಳುವ ಪಕ್ಷಕ್ಕೇ ಬರುವುದನ್ನು ಖಾತ್ರಿ ಮಾಡಿಕೊಂಡಂತಾಗಿದೆ.
ಇದರ ಫಲಿತಾಂಶ ನಿರೀಕ್ಷಿಸಿದಂತೆಯೇ ಇದೆ. ನವಂಬರ್ 2018ರ ವರೆಗೆ ಎಸ್ಬಿಐ ಕೊಟ್ಟಿರುವ ಬಾಂಡುಗಳಲ್ಲಿ 95%ವನ್ನು ಬಿಜೆಪಿ ಪಡೆದಿದೆ. ಚುನಾವಣೆಗಳ ಪ್ರಕಟಣೆಯ ನಂತರ ನೀಡಲಾರಂಭಿಸಿರುವ ಚುನಾವಣಾ ಬಾಂಡುಗಳಲ್ಲೂ ಇದು ಮುಂದುವರೆಯಲಿದೆ.
ಅರುಣ್ ಜೇಟ್ಲಿಯವರ ಇನ್ನೊಂದು ತರ್ಕ, ಇದರಿಂದಾಗಿ ರಾಜಕೀಯ ನಿಧಿ ನೀಡಿಕೆ ಕಾನೂನುಬದ್ಧ ರೀತಿಗಳಲ್ಲಿ ಬರುವಂತಾಗುತ್ತದೆ ಎಂಬುದು ಕೂಡ ಸರಿಯಲ್ಲ ಎಂಬುದು ಸಾಬೀತಾಗಿದೆ. ಏಕೆಂದರೆ ಈ ಚುನಾವಣೆಗಳಲ್ಲಿ ಅಪಾರ ಮೊತ್ತಗಳನ್ನು ನಗದಿನ ಮೂಲಕವೇ ನಿಯೋಜಿಸಲಾಗುತ್ತಿದೆ. ಎಪ್ರಿಲ್ 1 ರ ವರೆಗೆ ಚುನಾವಣಾ ಆಯೋಗದ ಅಧಿಕಾರಿಗಳು 1,400 ಕೋಟಿ ರೂ.ಗಳಷ್ಟು ನಗದನ್ನು ವಶಪಡಿಸಿಕೊಂಡಿದ್ದಾರೆ. ಇದು ಚುನಾವಣೆಗಳಲ್ಲಿ ಹರಿದಾಡುತ್ತಿರುವ ಕಪ್ಪು ಹಣದ ಒಂದು ಸಣ್ಣ ಭಾಗವಷ್ಟೇ.
ಸುಪ್ರಿಂ ಕೋರ್ಟ್, ಅರ್ಜಿಗಳನ್ನು ಹಾಕಿದ ಸುಮಾರು ಒಂದು ವರ್ಷದ ನಂತರ, ಒಂದು ಮಧ್ಯಂತರ ಆದೇಶ ನೀಡಿ, ರಾಜಕೀಯ ಪಕ್ಷಗಳು ತಾವು ಪಡೆದಿರುವ ಚುನಾವಣಾ ಬಾಂಡುಗಳು, ಮತ್ತು ಅವನ್ನು ಯಾರಿಂದ ಪಡೆಯಲಾಯಿತು ಎಂಬುದರ ವಿವರಗಳನ್ನು ಸೀಲಾದ ಲಕೋಟೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು ಎಂದು ಹೇಳಿದೆ. ನ್ಯಾಯಾಲಯ ಈ ಯೋಜನೆಯನ್ನು ಸದ್ಯಕ್ಕೆ ನಿಲ್ಲಿಸುವ ತಡೆಯಾಜ್ಞೆಯನ್ನು ಕೊಟ್ಟಿಲ್ಲ. ಪಕ್ಷಗಳು ನೀಡುವ ವಿವರಗಳನ್ನು ಚುನಾವಣಾ ಆಯೋಗ ತಿಳಿಸಬೇಕು ಎಂದು ಕೂಡ ಹೇಳಿಲ್ಲ. ಬಾಂಡುಗಳನ್ನು ನೀಡುವ ಅವಧಿಯನ್ನು ಮೇ ತಿಂಗಳಲ್ಲಿ 10 ದಿನಗಳಿಂದ ೫ ದಿನಗಳಿಗೆ ಇಳಿಸಿದೆಯಷ್ಟೇ. ನ್ಯಾಯಾಲಯ, ಮೇ ೩೦ರಂದು, ಚುನಾವಣೆಗಳು ಮುಗಿದು ಹೋದ ನಂತರ ಈ ಕೇಸಿನ ಮುಂದಿನ ವಿಚಾರಣೆಯನ್ನು ಮಾಡುತ್ತದೆ.
ಅರೆಮನಸ್ಸಿನ ಮತ್ತು ನಿರಾಶಾದಾಯಕ ಆದೇಶ
ಇದೊಂದು ಅರೆಮನಸ್ಸಿನ ಮತ್ತು ನಿರಾಶಾದಾಯಕ ಆದೇಶ. ಏಕೆಂದರೆ, ಅದು ಮೂರು ದಿನಗಳ ಕಾಲ ಎಲ್ಲ ಕಡೆಗಳಿಂದ ತರ್ಕಗಳನ್ನು ಆಲಿಸಿತು. ಚುನಾವಣಾ ಆಯೋಗ ನ್ಯಾಯಲಯದಲ್ಲಿ ಸಲ್ಲಿಸಿದ ಅಫಿಡವಿಟ್ನಲ್ಲಿ ಕಾಯ್ದೆಗಳಲ್ಲಿನ ಬದಲಾವಣೆಗಳು ರಾಜಕೀಯ ಪಕ್ಷಗಳ ರಾಜಕೀಯ ಹಣಕಾಸು/ನಿಧಿ ನೀಡಿಕೆಯ ಪಾರದರ್ಶಕತೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತವೆಂದು ಹೇಳಿದೆ. ಬಾಂಡುಗಳ ಮೂಲವನ್ನು ವರದಿ ಮಾಡದಿರುವುದು, ಎಂದರೆ, ರಾಜಕೀಯ ಪಕ್ಷ ಸರಕಾರೀ ಕಂಪನಿಗಳಿಂದ ಮತ್ತು ವಿದೇಶಿ ಮೂಲಗಳಿಂದ ದೇಣಿಗೆಗಳನ್ನು ತಗೊಂಡಿದೆಯೋ ಎಂಬುದನ್ನು ದೃಢಪಡಿಸಲಾಗುವುದಿಲ್ಲ ಎಂದಾಗುತ್ತದೆ ಎಂದೂ ಆಯೋಗ ಹೇಳಿದೆ.
ಅಟಾರ್ನಿ ಜನರಲ್ ಅವರು ನಿಧಿ ನೀಡಿಕೆ ಕಾನೂನುಬದ್ಧವಾಗಿರುವ ವರೆಗೆ ರಾಜಕೀಯ ಪಕ್ಷಗಳಿಗೆ ಯಾರು ನಿಧಿ ನೀಡುತ್ತಾರೆ ಎಂದು ತಿಳಿಯುವ ಹಕ್ಕು ಸಾರ್ವಜನಿಕರಿಗೆ ಇಲ್ಲ ಎಂಬ ಒಂದು ದಂಗುಬಡಿಸುವ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಜನತೆಗೆ ತಿಳಿಯುವ ಹಕ್ಕು ಇದೆ ಎಂಬ ನಿಲುವನ್ನು ನ್ಯಾಯಾಲಯ ಘೋಷಿಸಿರುವಾಗ, ಅದು ಒಂದು ಅಂತಿಮ ತೀರ್ಪು ಕೊಡುವ ವರೆಗೆ ಈ ಯೋಜನೆಗೆ ತಡೆಯಾಜ್ಞೆಯನ್ನಾದರೂ ಕೊಡಬಹುದಿತ್ತು.
ಈ ನಡುವೆ ಚುನಾವಣೆಗಳ ಹಿನ್ನೆಲೆಯಲ್ಲಿ ಚುನಾವಣಾ ಬಾಂಡುಗಳ ಮೂಲಕ ನಿಧಿ ನೀಡಿಕೆಯಲ್ಲಿ ಭಾರೀ ಹೆಚ್ಚಳ ಕಾಣಬಂದಿದೆ. ಒಂದು ಮಾಹಿತಿ ಹಕ್ಕು (ಆರ್ಟಿಐ) ಪ್ರಶ್ನೆಗೆ ಎಸ್ಬಿಐ ನೀಡಿರುವ ಉತ್ತರದ ಪ್ರಕಾರ, ಇಡೀ 2018ಕ್ಕೆ ಹೋಲಿಸಿದರೆ, 2019ರ ಮೊದಲ ಮೂರು ತಿಂಗಳಲ್ಲೇ ಚುನಾವಣಾ ಬಾಂಡ್ಗಳಿಗೆ 62% ಹೆಚ್ಚು ಹಣ ಬಂದಿದೆ. 2018ರಲ್ಲಿ ಒಟ್ಟು 1,056.73 ಕೋಟಿ ರೂ.ಗಳ ಮೊತ್ತದ ಚುನಾವಣಾ ಬಾಂಡುಗಳನ್ನು ಕೊಡಲಾಗಿದ್ದರೆ, ಈ ವರ್ಷದ ಜನವರಿಯಿಂದ ಮಾರ್ಚ್ ವರೆಗಿನ ಅವಧಿಯಲ್ಲೇ ನೀಡಿರುವ ಬಾಂಡುಗಳ ಮೊತ್ತ 1,716 ಕೋಟಿ ರೂ.ಗಳು. ನಿಜವಾದ ಚುನಾವಣಾ ತಿಂಗಳುಗಳಾದ ಎಪ್ರಿಲ್ ಮತ್ತು ಮೇ ನಲ್ಲಿ ಇದು ಇನ್ನೂ ಹೆಚ್ಚುತ್ತದೆ ಎಂದು ನಿರೀಕ್ಷಿಸಬಹುದು. ಸುಪ್ರಿಂ ಕೋರ್ಟ್ ಈ ಯೋಜನೆಗೆ ತಡೆಯಾಜ್ಞೆ ನೀಡುವ ಮೂಲಕ ಈ ಹರಿವನ್ನಾದರೂ ನಿಲ್ಲಿಸಬಹುದಾಗಿತ್ತು.
ಆಳುವ ಪಕ್ಷಕ್ಕೆ ದೊಡ್ಡ ಕಾರ್ಪೊರೇಟ್ಗಳ ಮತ್ತು ಕಾನೂನುಬಾಹಿರವಾದ ಹಣ ನೀಡಿಕೆಯನ್ನು ಕಾನೂನುಬದ್ದಗೊಳಿಸುವ ಈ ಕುಟಿಲ ಯೋಜನೆಯನ್ನು ಸುಪ್ರಿಂ ಕೊರ್ಟ್ ಕೊನೆಗೊಳಿಸುತ್ತದೆ ಎಂದು ಆಶಿಸಬೇಕಾಗಿದೆ.
(ಈ ವಾರದ ಜನಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
–ಪ್ರಕಾಶ ಕಾರಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.



