ಬಹಿರಂಗ
ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ
ನವ ಉದಾರವಾದದ ಮಾರುಕಟ್ಟೆ ವ್ಯವಸ್ಥೆಯಲ್ಲಿ ದೃಶ್ಯ ಮಾಧ್ಯಮಗಳೂ ಸಂವಹನದ ಸರಕುಗಳು
- ನಾ ದಿವಾಕರ
ಆಧುನಿಕ ತಂತ್ರಜ್ಞಾನ ಯುಗದಲ್ಲಿ ಸಾರ್ವಜನಿಕ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸಬೇಕಾದ ವಿದ್ಯುನ್ಮಾನ ಮಾಧ್ಯಮಗಳ ಸ್ವರೂಪ ಹೇಗಿರಬೇಕು ? ಡಿಜಿಟಲೀಕರಣದತ್ತ ದಾಪುಗಾಲು ಹಾಕುತ್ತಿರುವ ಭಾರತದಲ್ಲಿ ಈ ಪ್ರಶ್ನೆ ಇನ್ನೂ ಹೆಚ್ಚು ಪ್ರಸ್ತುತ ಎನಿಸುತ್ತದೆ. ಮುದ್ರಣ ಮಾಧ್ಯಮ ಎಷ್ಟೇ ವ್ಯಾಪಕವಾದರೂ ಅದು ಅಕ್ಷರಸ್ತರನ್ನು ತಲುಪುವ ಒಂದು ಸಾಧನ. ಆದರೆ ದೃಶ್ಯ ಮಾಧ್ಯಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬಹುದಾದ ಒಂದು ಸಂವಹನ ಸಾಧನವಾಗಿದೆ. ಕಳೆದ ಎರಡು ದಶಕಗಳಲ್ಲಿ ಭಾರತದ ರಾಜಕಾರಣ, ಸಾಮಾಜಿಕ ಪಲ್ಲಟಗಳು, ಸಾಂಸ್ಕೃತಿಕ ತಲ್ಲಣಗಳು ಮತ್ತು ಸಾರ್ವಜನಿಕ ಜೀವನದ ಏಳುಬೀಳುಗಳನ್ನು ದಾಖಲಿಸುತ್ತಲೇ ಬಂದಿರುವ ವಿದ್ಯುನ್ಮಾನ ದೃಶ್ಯ ಮಾಧ್ಯಮಗಳ ಸ್ವರೂಪ ಮತ್ತು ಕಾರ್ಯವೈಖರಿ ಇಂದಿನ ಸನ್ನಿವೇಶದಲ್ಲಿ ಹೆಚ್ಚು ಚರ್ಚೆಗೊಳಗಾಗಬೇಕಿದೆ.
ಇದೇ ಫೆಬ್ರವರಿ 19ರಂದು ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ದೃಶ್ಯ ಮಾಧ್ಯಮಗಳ, ವಿಶೇಷವಾಗಿ ಕನ್ನಡ ಸುದ್ದಿಮನೆಗಳ, ನೈತಿಕತೆ ಮತ್ತು ವೃತ್ತಿಪರತೆಯೇ ಪ್ರಶ್ನಾರ್ಹವಾಗಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಯಚೂರಿನ ಜಿಲ್ಲಾ ನ್ಯಾಯಾಧೀಶರು, ಅಂಬೇಡ್ಕರ್ ಭಾವಚಿತ್ರವನ್ನು ತೆಗೆಯಲು ಒತ್ತಾಯಿಸುವ ಮೂಲಕ ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿದ್ದು ರಾಜ್ಯಾದ್ಯಂತ ಜನರ ಆಕ್ರೋಶಕ್ಕೆ ತುತ್ತಾಗಿದ್ದು ಸಹಜ. ಅಂಬೇಡ್ಕರ್ ಅವರನ್ನು ಅಪಮಾನಿಸಿದ ನ್ಯಾ ಮಲ್ಲಿಕಾರ್ಜುನ ಗೌಡ್ ಅವರನ್ನು ವಜಾ ಮಾಡಲು ಒತ್ತಾಯಿಸಿ ರಾಜ್ಯದ ಎಲ್ಲ ದಲಿತ ಸಂಘಟನೆಗಳು, ಪ್ರಗತಿಪರ ಗುಂಪುಗಳು ಮತ್ತು ವಿಚಾರವಂತರು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿಧಾನಸೌಧ ಚಲೋ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.
ಬಹುಶಃ ಇತ್ತೀಚೆಗೆ ತಾನೇ ಅಂತ್ಯಗೊಂಡ ದೆಹಲಿಯ ರೈತಮುಷ್ಕರವನ್ನು ಹೊರತುಪಡಿಸಿದರೆ, ಫೆಬ್ರವರಿ 19ರ ಪ್ರತಿಭಟನಾ ಮೆರವಣಿಗೆ ಒಂದು ಚಾರಿತ್ರಿಕ ಗಳಿಗೆಯಾಗಿ ಕಾಣುತ್ತದೆ. ಸಾಗರೋಪಾದಿಯಲ್ಲಿ ನೆರೆದ ಜನರ ಆಕ್ರೋಶದ ದನಿಗಳು ಆಳುವವರನ್ನು ತಲುಪಿದ್ದರೂ, ರಸ್ತೆಗಳನ್ನು ನೀಲಿಮಯವಾಗಿಸಿದ ಈ ಜನಸ್ತೋಮ ಕನ್ನಡದ ಸುದ್ದಿಮನೆಗಳನ್ನು ತಲುಪದೆ ಹೋದದ್ದು, ಕನ್ನಡ ವಿದ್ಯುನ್ಮಾನ ಮಾಧ್ಯಮಗಳ ಕ್ಯಾಮರಾ ಕಣ್ಣುಗಳಿಗೆ ಕಾಣದೆ ಹೋದದ್ದು ಸಹಜವಾಗಿಯೇ ಜನಾಕ್ರೋಶಕ್ಕೆ ಗುರಿಯಾಗಿದೆ. ಕನ್ನಡದ ಸುದ್ದಿಮನೆಗಳು ಏಕೆ ಶೋಷಿತ ಜನರ ದನಿಗೆ ಕಿವುಡಾಗಿವೆ ? ಏಕೆ ಶೋಷಿತ ಆಕ್ರೋಶಕ್ಕೆ, ಸಮಸ್ಯೆಗಳಿಗೆ, ಬಿಕ್ಕಟ್ಟುಗಳಿಗೆ ಕುರುಡಾಗಿವೆ ? ಹಿಜಾಬ್ ತೊಟ್ಟ ಪುಟ್ಟ ಹುಡುಗಿಯನ್ನು ಅಟ್ಟಿಸಿಕೊಂಡು ಹೋಗುವ ಕ್ಯಾಮರಾಗಳಿಗೆ, ಬೈಟ್ಗಳಿಗಾಗಿ ಪೀಡಿಸುವ, ರೋಚಕ ಸುದ್ದಿಗಾಗಿ ಹಪಹಪಿಸುವ ಸುದ್ದಿಮನೆಗಳ ಕ್ಯಾಮರಾವಾಹಕರಿಗೆ ಈ ಸಾವಿರಾರು ನೀಲವಸ್ತ್ರದ ಜನರು ಏಕೆ ಗೋಚರಿಸುವುದಿಲ್ಲ. ದೇಶಾದ್ಯಂತ ಬೀದಿಗಿಳಿದು ಪ್ರತಿಭಟಿಸುತ್ತಿರುವ ಲಕ್ಷಾಂತರ ಕಾರ್ಮಿಕರು, ಶ್ರಮಜೀವಿಗಳು, ಮಹಿಳೆಯರು, ಆದಿವಾಸಿಗಳು ಏಕೆ ಕಾಣುವುದಿಲ್ಲ ?
ಬಂಡವಾಳಶಾಹಿ ಅರ್ಥವ್ಯವಸ್ಥೆ ಮತ್ತು ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಹಾಗೂ ಭಾರತೀಯ ಸಮಾಜದಲ್ಲಿ ಇಂದಿಗೂ ಬೇರೂರಿರುವ ಊಳಿಗಮಾನ್ಯ ಧೋರಣೆಯ ಮೇಲರಿಮೆ ಈ ಮೂರೂ ವಿದ್ಯಮಾನಗಳನ್ನು ಭಾರತದ ಮಾಧ್ಯಮಗಳ ಕಾರ್ಯವೈಖರಿಯಲ್ಲಿ ಗುರುತಿಸಬಹುದು. ವಿದ್ಯುನ್ಮಾನ ಮಾಧ್ಯಮಗಳ ಅಸೂಕ್ಷ್ಮತೆಗೆ ಮಾರುಕಟ್ಟೆ ಪ್ರೇರಿತ ಟಿಆರ್ಪಿ ಗಣನೆಯೊಂದೇ ಕಾರಣವಲ್ಲ. ಈ ಮಾಧ್ಯಮಗಳನ್ನು ನಿಯಂತ್ರಿಸುವ ಬಂಡವಳಿಗ ಸಮೂಹ, ನಿರ್ವಹಿಸುವ ಮೇಲ್ಜಾತಿಯ ಮನಸುಗಳು ಮತ್ತು ಇವೆರಡನ್ನೂ ಪ್ರಭಾವಿಸುವ ಮಾರುಕಟ್ಟೆಯ ಅನಿವಾರ್ಯತೆಗಳು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳ ಜನಸ್ಪಂದನೆಯ ಪ್ರಮಾಣವನ್ನೂ ನಿರ್ಧರಿಸುತ್ತವೆ. ಕನ್ನಡದ ಸುದ್ದಿಮನೆಗಳು ಮತ್ತು ವಾರ್ತಾಭಾರತಿಯನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರಿಕೆಗಳೂ ಬೆಂಗಳೂರಿನ ಪ್ರತಿಭಟನೆಯ ಸುದ್ದಿಗೆ ಪ್ರಾಶಸ್ತ್ಯ ನೀಡದಿರುವುದನ್ನು ಈ ನೆಲೆಯಲ್ಲೇ ವ್ಯಾಖ್ಯಾನಿಸಬೇಕಿದೆ.
ಮಾಧ್ಯಮಗಳು ದಲಿತ ಸಮುದಾಯಗಳ ದನಿಗೆ ದನಿಯಾಗುತ್ತಿಲ್ಲ ಎಂಬ ಹಲುಬುವಿಕೆಯ ನಡುವೆಯೇ ಈ ಮಾಧ್ಯಮಗಳ ಮೂಲ ಸ್ವರೂಪವನ್ನೂ ಪರಾಮರ್ಶಿಸಬೇಕಾಗುತ್ತದೆ. ಪ್ರಜಾಪ್ರಭುತ್ವದ ನಾಲ್ಕನೆಯ ಅಂಗ ಸಂಸ್ಥೆಯಾಗಿ, ಸಾಮಾನ್ಯ ಪ್ರಜೆಗಳ ಸಾರ್ವಜನಿಕ ಧ್ವನಿಯಾಗಿ ಕಾರ್ಯನಿರ್ವಹಿಸಬೇಕಾದ ಮಾಧ್ಯಮಗಳು ತಮ್ಮ ಹೊಣೆಗಾರಿಕೆಯನ್ನು ಮರೆತಿರುವುದಷ್ಟೇ ಅಲ್ಲದೆ, ಆಡಳಿತ ವ್ಯವಸ್ಥೆಯೊಡನೆ, ಆಡಳಿತಾರೂಢ ಅಧಿಕಾರ ಕೇಂದ್ರಗಳೊಡನೆ ಮತ್ತು ಸ್ಥಾಪಿತ ಸಾಮಾಜಿಕ ವ್ಯವಸ್ಥೆಯೊಡನೆ ಗುರುತಿಸಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಒಂದು ವರ್ಷದ ಕಾಲ ದೆಹಲಿ ಗಡಿಗಳಲ್ಲಿ ನಡೆದ ಚಾರಿತ್ರಿಕ ರೈತ ಮುಷ್ಕರದ ಸಂದರ್ಭದಲ್ಲೂ ವಿದ್ಯುನ್ಮಾನ ಮಾಧ್ಯಮಗಳು ಇದೇ ನಿಷ್ಕ್ರಿಯತೆ ಮತ್ತು ಅಸೂಕ್ಷ್ಮತೆಯನ್ನು ಪ್ರದರ್ಶಿಸಿದ್ದವು. 2019-20ರಲ್ಲಿ ಸಿಎಎ-ಎನ್ಆರ್ಸಿ ವಿರುದ್ಧ ನಡೆದ ಜನಾಂದೋಲನಗಳ ಸಂದರ್ಭದಲ್ಲೂ ಬಹುಪಾಲು ಸುದ್ದಿಮನೆಗಳು ಆಡಳಿತ ವ್ಯವಸ್ಥೆಯ ವಕ್ತಾರರಂತೆ ವರ್ತಿಸಿದ್ದವು.
ಇಲ್ಲಿ ಬಂಡವಾಳಶಾಹಿ ಮಾರುಕಟ್ಟೆ ವ್ಯವಸ್ಥೆ ಮತ್ತು ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಜ್ಜಾಗಿರುವ ಔದ್ಯಮಿಕ ವಲಯದ ಹಿತಾಸಕ್ತಿಗಳು ಮುನ್ನೆಲೆಗೆ ಬರುತ್ತವೆ. ದೇಶದ ಪ್ರಜೆಗಳ ದನಿಗೆ ದನಿಯಾಗಬೇಕಾದ ಮಾಧ್ಯಮ ವಲಯ ಪ್ರಭುತ್ವದ ದನಿಗೆ ದನಿಗೂಡಿಸಿದರೆ ಏನಾಗಬಹುದು ಎಂಬ ಪ್ರಶ್ನೆಗೆ ಭಾರತದ ವಿದ್ಯುನ್ಮಾನ ಮಾಧ್ಯಮಗಳು, ವಿಶೇಷವಾಗಿ ಕನ್ನಡದ ಸುದ್ದಿಮನೆಗಳು ನಿದರ್ಶನವಾಗಿ ಕಾಣುತ್ತವೆ. ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು ಇಂದು ತಮ್ಮ ವೃತ್ತಿಧರ್ಮದ ಚೌಕಟ್ಟನ್ನು ದಾಟಿ, ಮಾರುಕಟ್ಟೆಯ ಒಂದು ಭಾಗವಾಗಿವೆ. ಕಾರ್ಪೋರೇಟ್ ಉದ್ಯಮಿಗಳ ಒಡೆತನದಲ್ಲೇ ಇರುವ ಬಹುಪಾಲು ಸುದ್ದಿಮನೆಗಳು ಮತ್ತು ವಾಹಿನಿಗಳು ಒಂದೆಡೆ ಮಾರುಕಟ್ಟೆ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ಮತ್ತೊಂದೆಡೆ ಆಡಳಿತಾರೂಢ ಬಿಜೆಪಿ ಮತ್ತು ಅದರ ಹಿಂದುತ್ವ ರಾಜಕಾರಣದೊಂದಿಗೆ ಗುರುತಿಸಿಕೊಳ್ಳುವ ಮೂಲಕ ತಮ್ಮ ಅಸ್ತಿತ್ವವನ್ನೂ ಕಾಪಾಡಿಕೊಳ್ಳಲು ಶ್ರಮಿಸುತ್ತವೆ.
ಬಹುಪಾಲು ಮಾಧ್ಯಮ ಸಮೂಹಗಳ ಒಡೆತನವನ್ನು ಹಿಂದುತ್ವ ರಾಜಕಾರಣದ ಕಾಲಾಳು ಉದ್ಯಮಿಗಳೇ ಹೊಂದಿರುವುದರಿಂದಲೇ ಇಂದು ಕನ್ನಡದ ಮತ್ತು ಹಿಂದಿಯ ಸುದ್ದಿಮನೆಗಳು ಭಟ್ಟಂಗಿತನದ ಪರಾಕಾಷ್ಠೆ ತಲುಪಿವೆ. ಕನ್ನಡದ ಮಟ್ಟಿಗೆ ಹೇಳುವುದಾದರೆ ಕೋವಿದ್ ಸಾಂಕ್ರಾಮಿಕದ ಸಂದರ್ಭದಲ್ಲೇ ಕನ್ನಡದ ಸುದ್ದಿಮನೆಗಳ ಭ್ರಷ್ಟಾತಿಭ್ರಷ್ಟ ಅವತಾರವನ್ನು ಕಂಡಿದ್ದಾಗಿದೆ. ಹಿಂದುತ್ವ ರಾಜಕಾರಣವನ್ನು ವಿರೋಧಿಸುವ ಅಥವಾ ಜನಪರ ಧ್ವನಿಯನ್ನು ಪ್ರತಿನಿಧಿಸುವ ಯಾವುದೇ ಒಂದು ಪ್ರತಿಭಟನೆ, ಪ್ರತಿರೋಧ, ಆಂದೋಲನ ಅಥವಾ ಮುಷ್ಕರ ಈ ವಾಹಿನಿಗಳ ಪಾಲಿಗೆ ನಗಣ್ಯ ಎನಿಸುತ್ತದೆ. ಪ್ರಸ್ತುತ ಹಿಜಾಬ್ ವಿವಾದದಲ್ಲೂ ಇದೇ ಮಾದರಿಯನ್ನು ಗಮನಿಸುತ್ತಿದ್ದೇವೆ. ತಮ್ಮ ಮಾರುಕಟ್ಟೆ ಟಿಆರ್ಪಿ ಹೆಚ್ಚಿಸಿಕೊಳ್ಳುವುದರೊಂದಿಗೇ, ಅತಿಯಾದ ಸ್ವಾಮಿನಿಷ್ಠೆಯನ್ನು ಪ್ರದರ್ಶಿಸುವ ಮೂಲಕ ಕನ್ನಡದ ಸುದ್ದಿಮನೆಗಳು ಜನಸಮೂಹಗಳ ಸಾರ್ವತ್ರಿಕ ಸಮಸ್ಯೆಗಳಿಗೆ ವಿಮುಖವಾಗುತ್ತಿವೆ.
ಒಂದು ಔದ್ಯಮಿಕ ಸಂಸ್ಥೆಯಾಗಿ ಯಾವುದೇ ಮಾಧ್ಯಮ ಸಮೂಹ/ವಾಹಿನಿ/ಸುದ್ದಿಮನೆ ಮಾರುಕಟ್ಟೆಯ ಅನಿವಾರ್ಯತೆಗಳಿಗೆ ತಕ್ಕಂತೆ ವರ್ತಿಸುವುದು ಸಹಜವೇ ಆದರೂ, ಈ ಮಾಧ್ಯಮಗಳನ್ನು ಪ್ರತಿನಿಧಿಸುವ ಪತ್ರಿಕೋದ್ಯೋಗಿಗಳು, ಪತ್ರಕರ್ತರು, ಸುದ್ದಿ ಸಂಪಾದಕರು ಮತ್ತು ವರದಿಗಾರರು ತಮ್ಮ ವೃತ್ತಿಧರ್ಮವನ್ನು ಪಾಲಿಸಬೇಕಲ್ಲವೇ ? ಸಂಘಪರಿವಾರದ ವಕ್ತಾರರಂತೆ ಮಾತನಾಡುವ ಕನ್ನಡದ ಸುದ್ದಿಮನೆಗಳ ಸಂಪಾದಕರು, ನಿರೂಪಕರು ಮತ್ತು ವರದಿಗಾರರು ಈ ವೃತ್ತಿಧರ್ಮವನ್ನು ಮರೆತಿರುವುದರಿಂದಲೇ ಕನ್ನಡದ ಮಾಧ್ಯಮ ಲೋಕ ನೈತಿಕವಾಗಿ ಅಧೋಗತಿಗಿಳಿದಿದೆ. ಈ ಅಧಃಪತನದ ಮೂಲ ಕಾರಣ ಇರುವುದು ಮಾಧ್ಯಮಗಳನ್ನು ಪ್ರತಿನಿಧಿಸುವ ವ್ಯಕ್ತಿಗಳ ಜಾತಿ ಶ್ರೇಷ್ಠತೆಯ ಮೇಲರಿಮೆ ಮತ್ತು ಅಹಮಿಕೆಯಲ್ಲಿ. ತಳಸಮುದಾಯಗಳೊಡನೆ, ಶೋಷಿತ, ತುಳಿತಕ್ಕೊಳಗಾದ, ದಮನಿತ ಜನತೆಯೊಡನೆ ಗುರುತಿಸಿಕೊಳ್ಳಲಾಗದಂತಹ ಒಂದು ತಾತ್ವಿಕ ನೆಲೆಗಳಲ್ಲಿ ಈ ಸಂಪಾದಕರ ವರ್ಗ ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಂಡುಕೊಂಡಿರುತ್ತದೆ.
ಪತ್ರಿಕಾವಲಯದಲ್ಲಿ ಅಥವಾ ವಿದ್ಯುನ್ಮಾನ ಮಾಧ್ಯಮ ವಲಯದಲ್ಲಿರುವ ಪತ್ರಿಕೋದ್ಯೋಗಿಗಳಿಗೆ ಸಮಷ್ಟಿ ಪ್ರಜ್ಞೆ ಸದಾ ಜಾಗೃತಾವಸ್ಥೆಯಲ್ಲಿರಬೇಕಾದ್ದು ಅತ್ಯವಶ್ಯ. ತಾವು ಪ್ರತಿನಿಧಿಸುವ ಮಾಧ್ಯಮ ಸಮೂಹದ ಒಡೆತನಕ್ಕೂ ತಾವು ನಿರ್ವಹಿಸುವ ಸಮಾಜಮುಖಿ ಚಟುವಟಿಕೆಗೂ ನಡುವೆ ಒಂದು ಗೋಡೆ ಅತ್ಯವಶ್ಯವಾಗಿ ಇರಬೇಕು. ಸುದ್ದಿ ವಾಹಕರಾಗಿ, ಸುದ್ದಿ ಸಂಪಾದಕರಾಗಿ ಮತ್ತು ಟಿವಿ ವಾಹಿನಿಯ ನಿರೂಪಕರಾಗಿ ಲಕ್ಷಾಂತರ ಜನರನ್ನು ಕ್ಷಣಮಾತ್ರದಲ್ಲಿ ತಲುಪುವ ಜವಾಬ್ದಾರಿಯನ್ನು ಹೊತ್ತಿರುವ ವ್ಯಕ್ತಿಗಳಲ್ಲಿ ಸಮಷ್ಟಿ ಪ್ರಜ್ಞೆಯೊಡನೆ ಸಮಾಜದ ಆಂತರಿಕ ತುಮುಲಗಳನ್ನು ಗ್ರಹಿಸುವ ತೀಕ್ಷ್ಣತೆಯೂ ಇರಬೇಕಾಗುತ್ತದೆ. ಒಬ್ಬ ಜನಪ್ರತಿನಿಧಿಯಲ್ಲಿ ಇರಬೇಕಾದ ಸೂಕ್ಷ್ಮ ಸಂವೇದನೆಯೇ ಸುದ್ದಿವಾಹಕರಲ್ಲೂ ಇರಬೇಕಾಗುತ್ತದೆ.(ಇಲ್ಲ ಎನ್ನುವುದು ವಾಸ್ತವ.)ಏಕೆಂದರೆ ತಮ್ಮ ಜೀವನೋಪಾಯಕ್ಕಾಗಿ ಮಾಧ್ಯಮದ ಒಡೆಯನನ್ನು ಆಶ್ರಯಿಸಬೇಕಾದರೂ, ಈ ಸುದ್ದಿವಾಹಕರು ಬೌದ್ಧಿಕವಾಗಿ ಜನಸಾಮಾನ್ಯರನ್ನೇ ಪ್ರತಿನಿಧಿಸುತ್ತಾರೆ. ಜನಸಮೂಹಗಳನ್ನು ಕಾಡುವ ಜ್ವಲಂತ ಸಮಸ್ಯೆಗಳು, ಸಂದಿಗ್ಧತೆಗಳು ಮತ್ತು ಜಟಿಲ ಬಿಕ್ಕಟ್ಟುಗಳು ಪ್ರತಿಯೊಬ್ಬ ಸುದ್ದಿವಾಹಕರಲ್ಲೂ ಪ್ರಕ್ಷುಬ್ಧತೆಯನ್ನು ಸೃಷ್ಟಿಸದೆ ಹೋದರೆ, ಅಂಥವರನ್ನು ಸ್ಥಾಪಿತ ವ್ಯವಸ್ಥೆಯ ಏಜೆಂಟರೆಂದಷ್ಟೇ ಪರಿಗಣಿಸಲು ಸಾಧ್ಯ.
ಇಂದು ಕನ್ನಡದ ಸುದ್ದಿಮನೆಗಳಲ್ಲಿ ಇಂತಹ ಏಜೆಂಟರೇ ಪ್ರಧಾನವಾಗಿ ಕಂಡುಬರುತ್ತಿದ್ದಾರೆ. ನೋಟು ಅಮಾನ್ಯೀಕರಣದಿಂದ ಸಿಎಎ-ಎನ್ಆರ್ಸಿವರೆಗೆ, ಜೆಎನ್ಯು ವಿವಾದದಿಂದ ಮೈಸೂರಿನ ರಂಗಾಯಣದವರೆಗೆ, ಕೋವಿದ್ ಸಾಂಕ್ರಾಮಿಕದಿಂದ ಹಿಜಾಬ್ ವಿವಾದದವರೆಗೆ, ಕನ್ನಡದ ಸುದ್ದಿಮನೆಗಳ ಸುದ್ದಿವಾಹಕರು ತಮ್ಮ ವೃತ್ತಿಧರ್ಮಕ್ಕಿಂತಲೂ ಸ್ವಾಮಿನಿಷ್ಠೆಗೇ ಹೆಚ್ಚು ಪ್ರಾಮುಖ್ಯತೆ ನೀಡಿರುವುದನ್ನು ಗಮನಿಸಬೇಕು. ಇದಕ್ಕೆ ಕಾರಣ ಈ ಸುದ್ದಿವಾಹಕರು ತಮ್ಮ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರುವ ಪ್ರಯತ್ನವನ್ನೇ ಮಾಡದಿರುವುದು. ಒಂದೆಡೆ ಧನದಾಹಿ ಬಂಡವಾಳ ವ್ಯವಸ್ಥೆಯ ಆರಾಧಕರಾಗಿ ತಮ್ಮ ಜೀವನೋಪಾಯ ಕಂಡುಕೊಳ್ಳುತ್ತಲೇ ಮತ್ತೊಂದೆಡೆ ತಮ್ಮ ವ್ಯಕ್ತಿಗತ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರಲಾರದೆ, ಮನುಜ ಸೂಕ್ಷ್ಮತೆ ಮತ್ತು ಸಂವೇದನೆಯನ್ನೂ ಕಳೆದುಕೊಂಡು, ಹಿಂದುತ್ವ ರಾಜಕಾರಣದ ಸಾಂಸ್ಕೃತಿಕ ನೆಲೆಗಳಿಗೆ ಮೇವುಣಿಸುತ್ತಿರುವುದು ಕನ್ನಡ ಸುದ್ದಿಮನೆಗಳ ಸುದ್ದಿವಾಹಕರ ಲಕ್ಷಣ.
ಹಾಗಾಗಿಯೇ ಕನ್ನಡದ ಸುದ್ದಿಮನೆಗಳಿಗೆ ಕೊಪ್ಪಳದ ದೇವಸ್ಥಾನದ ಘಟನೆಯಂತಹ ಅಸ್ಪೃಶ್ಯತೆಯ ದೌರ್ಜನ್ಯಗಳು, ಹಾಥ್ರಸ್ನಂತಹ ಶೋಷಿತ ಮಹಿಳೆಯರ ಮೇಲಿನ ಅತ್ಯಾಚಾರಗಳು, ಹಿಜಾಬ್ ವಿವಾದದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಚ್ಯುತಿ, ದಿನನಿತ್ಯ ನಡೆಯುತ್ತಿರುವ ಜಾತಿ ದೌರ್ಜನ್ಯದ ಪ್ರಕರಣಗಳು ಪ್ರಮುಖ ಸುದ್ದಿಯಾಗಿ ಕಾಣುವುದಿಲ್ಲ. ಈ ಸುದ್ದಿಮನೆಗಳ ಕ್ಯಾಮರಾ ಕಣ್ಣುಗಳಿಗೆ ಶೋಷಣೆಯ ನೆಲೆಗಳು ಗೋಚರಿಸುವುದಿಲ್ಲ ಹಾಗೆಯೇ ಶೋಷಣೆಯ ವಿರುದ್ಧ ಸಮಾಜದಲ್ಲಿ ಗಟ್ಟಿಯಾಗಿಯೇ ಕೇಳಿಬರುವ ಪ್ರತಿರೋಧದ ಧ್ವನಿಗಳೂ ಕೇಳಿಸುವುದಿಲ್ಲ. ಹಾಗಾಗಿಯೇ ದೆಹಲಿಯ ರೈತಮುಷ್ಕರದಲ್ಲಿ ಆಳುವ ವರ್ಗಗಳಿಗೆ ಕಂಡ ಕಲ್ಪಿತ ಭಯೋತ್ಪಾದಕರು, ಖಲಿಸ್ತಾನಿಗಳು, ಉಗ್ರಗಾಮಿಗಳೇ ಈ ಸುದ್ದಿಮನೆಯ ಸಂಪಾದಕರಿಗೂ ಹಾಗೆಯೇ ಕಾಣುತ್ತಾರೆ. ಸುದ್ದಿಮನೆಗಳ ಸಂಪಾದಕರಿಗೆ ತಮ್ಮದೇ ಆದ ಕಣ್ಣೋಟ/ಮುನ್ನೋಟ ಇದ್ದಿದ್ದರೆ ದೆಹಲಿಯ ಗಡಿಗಳಲ್ಲಿ ರೈತರೇ ಕಾಣುತ್ತಿದ್ದರು. ಆದರೆ ಈ ಮಾಧ್ಯಮ ವಕ್ತಾರರರ ದೃಷ್ಟಿಗೆ ಮಾರುಕಟ್ಟೆಯ ಪರದೆ, ಜಾತಿ ಶ್ರೇಷ್ಠತೆಯ ಮಸುಕು ಕವಿದಿರುತ್ತದೆ.
ಬಂಡವಾಳಶಾಹಿ ಅರ್ಥವ್ಯವಸ್ಥೆ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಸ್ಥಾಪಿತ ವ್ಯವಸ್ಥೆಯೊಳಗಿನ ಇಂತಹ ಒಳಬಿರುಕುಗಳನ್ನೇ ಹೆಚ್ಚಾಗಿ ಆಶ್ರಯಿಸುತ್ತದೆ. ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ವ್ಯವಸ್ಥೆ, ಅದರೊಳಗಿನ ಶ್ರೇಷ್ಠತೆಯ ವ್ಯಸನ ಮತ್ತು ಅದು ಉಂಟುಮಾಡುವ ಬಿರುಕುಗಳು, ಈ ಜಾತಿ ವ್ಯವಸ್ಥೆಯನ್ನು ಪೋಷಿಸುವ ವೈದಿಕಶಾಹಿ ಸಾಂಸ್ಕೃತಿಕ ರಾಜಕಾರಣ ಇವೆಲ್ಲವೂ ಮಾರುಕಟ್ಟೆಯನ್ನು ಮತ್ತಷ್ಟು ಬಲಪಡಿಸುವ ಸಾಧನಗಳಾಗಿ ಬಳಕೆಯಾಗುತ್ತವೆ. ಹಾಗಾಗಿಯೇ ಪ್ರಜಾವಾಣಿಯಂತಹ ಪತ್ರಿಕೆಯೂ ಸಹ ತನ್ನ ಅಸೂಕ್ಷ್ಮತೆಯನ್ನು ಆಗಿಂದಾಗ್ಗೆ ಪ್ರದರ್ಶಿಸುತ್ತಲೇ ಇರುತ್ತದೆ. ಬಂಡವಾಳಶಾಹಿಯು ತನ್ನ ಉಳಿವಿಗಾಗಿ ಅವಲಂಬಿಸುವ ಪ್ರತಿಯೊಂದು ಸಾಮಾಜಿಕ ನೆಲೆಗಳನ್ನೂ ತನ್ನ ಬಂಡವಾಳದ ಮೂಲಕವೇ ಬಲಪಡಿಸುತ್ತಿರುತ್ತದೆ. ಇದರಲ್ಲಿ ಜಾತಿ ವ್ಯವಸ್ಥೆ ಮತ್ತು ಅದು ಪ್ರತಿನಿಧಿಸುವ ವೈದಿಕಶಾಹಿಯ ಶೋಷಕ ವ್ಯವಸ್ಥೆಯೂ ಒಂದು.
ತನಗೆ ಅತ್ಯವಶ್ಯವಾದ ಸಂವಹನ ಮಾಧ್ಯಮಗಳನ್ನು ಸಂರಕ್ಷಿಸಲು ಬಂಡವಾಳಶಾಹಿ ಮಾರುಕಟ್ಟೆ ಸಮಾಜದ ಬೌದ್ಧಿಕ ನೆಲೆಗಳನ್ನೂ ತನ್ನ ಬಾಹುಗಳಲ್ಲಿ ಬಂಧಿಸಲಾರಂಭಿಸುತ್ತದೆ. ಸಾಮಾನ್ಯ ಅಧ್ಯಯನ, ಸಂಶೋಧನೆ ಮತ್ತು ಪರಿಶೋಧನೆಯ ನೆಲೆಗಳನ್ನೂ ಸಹ ವಾಣಿಜ್ಯೀಕರಣಗೊಳಿಸುವ ಮೂಲಕ, ಸಂವಹನದ ಸೇತುವೆಗಳಲ್ಲಿ ತನ್ನದೇ ಆದ ನಿಯಂತ್ರಕ ಶಕ್ತಿಗಳನ್ನು ರೂಪಿಸುತ್ತಾ ಹೋಗುತ್ತದೆ. ಮಾಧ್ಯಮಗಳು ಏಕೆ ಹೀಗಾಗಿವೆ ? ಶೈಕ್ಷಣಿಕ ವಲಯ, ಬೌದ್ಧಿಕ ವಲಯ, ಅಕಾಡೆಮಿಕ್ ವಲಯ ಏಕೆ ನಿಷ್ಕ್ರಿಯವಾಗಿವೆ ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿ ಕಂಡುಕೊಳ್ಳಬೇಕಿದೆ. ಸಂಸ್ಕೃತಿ, ಕಲೆ, ಜ್ಞಾನ ಮತ್ತು ಬೌದ್ಧಿಕ ಸಂಪತ್ತನ್ನು ಮಾರುಕಟ್ಟೆಯ ಸರಕುಗಳಂತೆಯೇ ಪರಿಗಣಿಸುವ ಮಾರುಕಟ್ಟೆ ವ್ಯವಸ್ಥೆ ಈ ವಲಯಗಳ ಸಂವಹನ ಸೇತುವೆಗಳನ್ನೂ ಹರಾಜು ಮಾರುಕಟ್ಟೆಯ ಜಗುಲಿಯಂತೆಯೇ ಪರಿವರ್ತಿಸಿಬಿಡುತ್ತದೆ. ಹಾಗಾಗಿಯೇ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿಗಳು ಬಿಕರಿಯಾಗುವಂತೆಯೇ ಸಂವಹನ ವಾಹಿನಿಗಳ ಸಂಪಾದಕ, ನಿರೂಪಕ, ಸುದ್ದಿವಾಹಕ ಹುದ್ದೆಗಳೂ ಬಿಕರಿಯಾಗತೊಡಗುತ್ತವೆ.
ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ಶ್ರೇಷ್ಠತೆಯ ನೆಲೆಗಳು ಮಾರುಕಟ್ಟೆ ಬಂಡವಾಳದೊಡನೆ ಸುಲಭವಾಗಿ ರಾಜಿಯಾಗುವುದರಿಂದಲೇ ಬಹುತೇಕ ಸಂವಹನದ ನೆಲೆಗಳು ತಮ್ಮ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡು ದಿನದಿಂದ ದಿನಕ್ಕೆ ಬೆತ್ತಲಾಗುತ್ತಿವೆ. ಆಳುವ ವರ್ಗಗಳ ಸುಳ್ಳುಗಳನ್ನು ವೈಭವೀಕರಿಸುವಷ್ಟೇ ರೋಚಕವಾಗಿ, ವಿನಾಶಕಾರಿ ಯುದ್ಧವನ್ನೂ ವೈಭವೀಕರಿಸುವ, ಕ್ರೂರ ಅತ್ಯಾಚಾರವನ್ನೂ ರಂಜನೀಯವಾಗಿಸುವ ಒಂದು ವಿಕೃತ ಧೋರಣೆಯನ್ನು ಭಾರತದ ಸುದ್ದಿವಾಹಿನಿಗಳಲ್ಲಿ ಕಾಣಬಹುದಾದರೆ ಅದಕ್ಕೆ ಕಾರಣ ಈ ರಾಜೀ ಸೂತ್ರವೇ ಆಗಿರುತ್ತದೆ. ಹಾಗಾಗಿಯೇ ಆಳುವ ವರ್ಗಗಳ, ಪ್ರಭುತ್ವದ ಮತ್ತು ಸ್ಥಾಪಿತ ಹಿತಾಸಕ್ತಿಗಳ ಪರಿಭಾಷೆಯೇ ಮಾಧ್ಯಮದ ಪರಿಭಾಷೆಯೂ ಆಗುತ್ತದೆ. ಜೆಎನ್ಯು ಸಂಘರ್ಷದಲ್ಲಿ, ಹಾಥ್ರಸ್ ಅತ್ಯಾಚಾರ ಪ್ರಕರಣದಲ್ಲಿ, ಕೋವಿದ್ ನಿರ್ವಹಣೆಯಲ್ಲಿ ಇದನ್ನು ನೇರವಾಗಿಯೇ ಕಂಡಿದ್ದೇವೆ. ಹಿಜಾಬ್ ವಿವಾದದಲ್ಲೂ ಕಾಣುತ್ತಿದ್ದೇವೆ.
ಇಲ್ಲಿ ಆಧುನಿಕ ವಿದ್ಯುನ್ಮಾನ ಲೋಕದ ಸಾಮಾಜಿಕ ಮಾಧ್ಯಮಗಳ ಪಾತ್ರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಬಂಡವಾಳಶಾಹಿ ಮಾರುಕಟ್ಟೆಯ ಹಂಗಿಲ್ಲದೆ ಸಮಾಜಮುಖಿಯಾಗಿ, ಜನಸ್ಪಂದನೆಯೊಂದಿಗೆ, ಜನಸಮೂಹಗಳಿಗೆ ದನಿಗೆ ದನಿಯಾಗುವ ನೂತನ ಸಂವಹನ ಸೇತುವೆಗಳನ್ನು ನಾವಿಂದು ನಿರ್ಮಿಸಬೇಕಿದೆ. ಇಲ್ಲಿಯೂ ಸಹ ವ್ಯವಸ್ಥೆಯನ್ನು ಪ್ರತಿನಿಧಿಸುವ ಸಾಮಾಜಿಕ ಮಾಧ್ಯಮಗಳು ಮತ್ತಷ್ಟು ಒಳಬಿರುಕುಗಳನ್ನು ಸೃಷ್ಟಿಸುತ್ತಲೇ ಹೋಗುವ ಸಾಧ್ಯತೆಗಳಿರುತ್ತವೆ. ಇವೆಲ್ಲವನ್ನೂ ಮೀರಿ ಜನಪರ ವಾಹಿನಿಗಳು ವೈಚಾರಿಕತೆಯ ನೆಲೆಯಲ್ಲಿ, ವೈಜ್ಞಾನಿಕ ಮನೋಭಾವದೊಂದಿಗೆ, ಸಾಂವಿಧಾನಿಕ ಬದ್ಧತೆಯೊಂದಿಗೆ, ಪ್ರಜಾಸತ್ತಾತ್ಮಕ ಪ್ರಜ್ಞಾವಂತಿಕೆಯೊಂದಿಗೆ, ಜನಸಮುದಾಯಗಳ ನೋವಿನ ದನಿಗೆ ದನಿಯಾಗಿ ರೂಪುಗೊಳ್ಳಬೇಕಿದೆ. ಭಾರತದ ಸಂವಿಧಾನದ ಆಶಯದಂತೆ ದೇಶವನ್ನು ಒಂದು ಸರ್ವಜನಾಂಗದ ಶಾಂತಿಯ ತೋಟದಂತೆ ರೂಪಿಸಬೇಕಾದರೆ, ಈ ಸಂವಹನ ಸೇತುವೆಗಳು ಬಲಿಷ್ಠವಾಗುವುದು ಅತ್ಯವಶ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.
1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)
ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.
2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ
ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.
3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)
ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.
4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ
ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.
5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)
ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.
6. ಸಮನ್ವಯದ ದಾರಿ….
ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
~ಗೋವರ್ಧನ ನವಿಲೇಹಾಳು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್ಗೆ ಸಂತೋಷದ ಸುದ್ದಿಯಾದರೂ, ಎಸ್ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.
ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.
ಸಮರ್ಥ್ ಶಾಮನೂರು ಅವರ ಮುಂದಿನ ನಡೆ
ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.
ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.
ಬಿಜೆಪಿಯ ಮುಂದಿನ ಸವಾಲುಗಳು
ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.
ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.
ಎಸ್ಡಿಪಿಐ ಮುಂದಿನ ಸವಾಲು
ಎಸ್ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.
ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.
ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.
ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ4 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ4 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ6 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ4 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ3 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ2 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

