Connect with us

ಬಹಿರಂಗ

ಕಾರ್ಪೋರೇಟ್ ಆಧಿಪತ್ಯವೂ ಮಾಧ್ಯಮವೆಂಬೋ ಉದ್ಯಮವೂ

Published

on


ನವ ಉದಾರವಾದದ ಮಾರುಕಟ್ಟೆ ವ್ಯವಸ್ಥೆಯಲ್ಲಿ ದೃಶ್ಯ ಮಾಧ್ಯಮಗಳೂ ಸಂವಹನದ ಸರಕುಗಳು


  • ನಾ ದಿವಾಕರ

ಆಧುನಿಕ ತಂತ್ರಜ್ಞಾನ ಯುಗದಲ್ಲಿ ಸಾರ್ವಜನಿಕ ಸಂವಹನ ಸೇತುವೆಯಾಗಿ ಕಾರ್ಯನಿರ್ವಹಿಸಬೇಕಾದ ವಿದ್ಯುನ್ಮಾನ ಮಾಧ್ಯಮಗಳ ಸ್ವರೂಪ ಹೇಗಿರಬೇಕು ? ಡಿಜಿಟಲೀಕರಣದತ್ತ ದಾಪುಗಾಲು ಹಾಕುತ್ತಿರುವ ಭಾರತದಲ್ಲಿ ಈ ಪ್ರಶ್ನೆ ಇನ್ನೂ ಹೆಚ್ಚು ಪ್ರಸ್ತುತ ಎನಿಸುತ್ತದೆ. ಮುದ್ರಣ ಮಾಧ್ಯಮ ಎಷ್ಟೇ ವ್ಯಾಪಕವಾದರೂ ಅದು ಅಕ್ಷರಸ್ತರನ್ನು ತಲುಪುವ ಒಂದು ಸಾಧನ. ಆದರೆ ದೃಶ್ಯ ಮಾಧ್ಯಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬಹುದಾದ ಒಂದು ಸಂವಹನ ಸಾಧನವಾಗಿದೆ. ಕಳೆದ ಎರಡು ದಶಕಗಳಲ್ಲಿ ಭಾರತದ ರಾಜಕಾರಣ, ಸಾಮಾಜಿಕ ಪಲ್ಲಟಗಳು, ಸಾಂಸ್ಕೃತಿಕ ತಲ್ಲಣಗಳು ಮತ್ತು ಸಾರ್ವಜನಿಕ ಜೀವನದ ಏಳುಬೀಳುಗಳನ್ನು ದಾಖಲಿಸುತ್ತಲೇ ಬಂದಿರುವ ವಿದ್ಯುನ್ಮಾನ ದೃಶ್ಯ ಮಾಧ್ಯಮಗಳ ಸ್ವರೂಪ ಮತ್ತು ಕಾರ್ಯವೈಖರಿ ಇಂದಿನ ಸನ್ನಿವೇಶದಲ್ಲಿ ಹೆಚ್ಚು ಚರ್ಚೆಗೊಳಗಾಗಬೇಕಿದೆ.

ಇದೇ ಫೆಬ್ರವರಿ 19ರಂದು ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ದೃಶ್ಯ ಮಾಧ್ಯಮಗಳ, ವಿಶೇಷವಾಗಿ ಕನ್ನಡ ಸುದ್ದಿಮನೆಗಳ, ನೈತಿಕತೆ ಮತ್ತು ವೃತ್ತಿಪರತೆಯೇ ಪ್ರಶ್ನಾರ್ಹವಾಗಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಯಚೂರಿನ ಜಿಲ್ಲಾ ನ್ಯಾಯಾಧೀಶರು, ಅಂಬೇಡ್ಕರ್ ಭಾವಚಿತ್ರವನ್ನು ತೆಗೆಯಲು ಒತ್ತಾಯಿಸುವ ಮೂಲಕ ಅಂಬೇಡ್ಕರರಿಗೆ ಮತ್ತು ಸಂವಿಧಾನಕ್ಕೆ ಅಪಚಾರ ಎಸಗಿದ್ದು ರಾಜ್ಯಾದ್ಯಂತ ಜನರ ಆಕ್ರೋಶಕ್ಕೆ ತುತ್ತಾಗಿದ್ದು ಸಹಜ. ಅಂಬೇಡ್ಕರ್ ಅವರನ್ನು ಅಪಮಾನಿಸಿದ ನ್ಯಾ ಮಲ್ಲಿಕಾರ್ಜುನ ಗೌಡ್ ಅವರನ್ನು ವಜಾ ಮಾಡಲು ಒತ್ತಾಯಿಸಿ ರಾಜ್ಯದ ಎಲ್ಲ ದಲಿತ ಸಂಘಟನೆಗಳು, ಪ್ರಗತಿಪರ ಗುಂಪುಗಳು ಮತ್ತು ವಿಚಾರವಂತರು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ವಿಧಾನಸೌಧ ಚಲೋ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ.

ಬಹುಶಃ ಇತ್ತೀಚೆಗೆ ತಾನೇ ಅಂತ್ಯಗೊಂಡ ದೆಹಲಿಯ ರೈತಮುಷ್ಕರವನ್ನು ಹೊರತುಪಡಿಸಿದರೆ, ಫೆಬ್ರವರಿ 19ರ ಪ್ರತಿಭಟನಾ ಮೆರವಣಿಗೆ ಒಂದು ಚಾರಿತ್ರಿಕ ಗಳಿಗೆಯಾಗಿ ಕಾಣುತ್ತದೆ. ಸಾಗರೋಪಾದಿಯಲ್ಲಿ ನೆರೆದ ಜನರ ಆಕ್ರೋಶದ ದನಿಗಳು ಆಳುವವರನ್ನು ತಲುಪಿದ್ದರೂ, ರಸ್ತೆಗಳನ್ನು ನೀಲಿಮಯವಾಗಿಸಿದ ಈ ಜನಸ್ತೋಮ ಕನ್ನಡದ ಸುದ್ದಿಮನೆಗಳನ್ನು ತಲುಪದೆ ಹೋದದ್ದು, ಕನ್ನಡ ವಿದ್ಯುನ್ಮಾನ ಮಾಧ್ಯಮಗಳ ಕ್ಯಾಮರಾ ಕಣ್ಣುಗಳಿಗೆ ಕಾಣದೆ ಹೋದದ್ದು ಸಹಜವಾಗಿಯೇ ಜನಾಕ್ರೋಶಕ್ಕೆ ಗುರಿಯಾಗಿದೆ. ಕನ್ನಡದ ಸುದ್ದಿಮನೆಗಳು ಏಕೆ ಶೋಷಿತ ಜನರ ದನಿಗೆ ಕಿವುಡಾಗಿವೆ ? ಏಕೆ ಶೋಷಿತ ಆಕ್ರೋಶಕ್ಕೆ, ಸಮಸ್ಯೆಗಳಿಗೆ, ಬಿಕ್ಕಟ್ಟುಗಳಿಗೆ ಕುರುಡಾಗಿವೆ ? ಹಿಜಾಬ್ ತೊಟ್ಟ ಪುಟ್ಟ ಹುಡುಗಿಯನ್ನು ಅಟ್ಟಿಸಿಕೊಂಡು ಹೋಗುವ ಕ್ಯಾಮರಾಗಳಿಗೆ, ಬೈಟ್‍ಗಳಿಗಾಗಿ ಪೀಡಿಸುವ, ರೋಚಕ ಸುದ್ದಿಗಾಗಿ ಹಪಹಪಿಸುವ ಸುದ್ದಿಮನೆಗಳ ಕ್ಯಾಮರಾವಾಹಕರಿಗೆ ಈ ಸಾವಿರಾರು ನೀಲವಸ್ತ್ರದ ಜನರು ಏಕೆ ಗೋಚರಿಸುವುದಿಲ್ಲ. ದೇಶಾದ್ಯಂತ ಬೀದಿಗಿಳಿದು ಪ್ರತಿಭಟಿಸುತ್ತಿರುವ ಲಕ್ಷಾಂತರ ಕಾರ್ಮಿಕರು, ಶ್ರಮಜೀವಿಗಳು, ಮಹಿಳೆಯರು, ಆದಿವಾಸಿಗಳು ಏಕೆ ಕಾಣುವುದಿಲ್ಲ ?

ಬಂಡವಾಳಶಾಹಿ ಅರ್ಥವ್ಯವಸ್ಥೆ ಮತ್ತು ಭಾರತದ ಶ್ರೇಣೀಕೃತ ಜಾತಿ ವ್ಯವಸ್ಥೆ ಹಾಗೂ ಭಾರತೀಯ ಸಮಾಜದಲ್ಲಿ ಇಂದಿಗೂ ಬೇರೂರಿರುವ ಊಳಿಗಮಾನ್ಯ ಧೋರಣೆಯ ಮೇಲರಿಮೆ ಈ ಮೂರೂ ವಿದ್ಯಮಾನಗಳನ್ನು ಭಾರತದ ಮಾಧ್ಯಮಗಳ ಕಾರ್ಯವೈಖರಿಯಲ್ಲಿ ಗುರುತಿಸಬಹುದು. ವಿದ್ಯುನ್ಮಾನ ಮಾಧ್ಯಮಗಳ ಅಸೂಕ್ಷ್ಮತೆಗೆ ಮಾರುಕಟ್ಟೆ ಪ್ರೇರಿತ ಟಿಆರ್‍ಪಿ ಗಣನೆಯೊಂದೇ ಕಾರಣವಲ್ಲ. ಈ ಮಾಧ್ಯಮಗಳನ್ನು ನಿಯಂತ್ರಿಸುವ ಬಂಡವಳಿಗ ಸಮೂಹ, ನಿರ್ವಹಿಸುವ ಮೇಲ್ಜಾತಿಯ ಮನಸುಗಳು ಮತ್ತು ಇವೆರಡನ್ನೂ ಪ್ರಭಾವಿಸುವ ಮಾರುಕಟ್ಟೆಯ ಅನಿವಾರ್ಯತೆಗಳು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳ ಜನಸ್ಪಂದನೆಯ ಪ್ರಮಾಣವನ್ನೂ ನಿರ್ಧರಿಸುತ್ತವೆ. ಕನ್ನಡದ ಸುದ್ದಿಮನೆಗಳು ಮತ್ತು ವಾರ್ತಾಭಾರತಿಯನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರಿಕೆಗಳೂ ಬೆಂಗಳೂರಿನ ಪ್ರತಿಭಟನೆಯ ಸುದ್ದಿಗೆ ಪ್ರಾಶಸ್ತ್ಯ ನೀಡದಿರುವುದನ್ನು ಈ ನೆಲೆಯಲ್ಲೇ ವ್ಯಾಖ್ಯಾನಿಸಬೇಕಿದೆ.

ಮಾಧ್ಯಮಗಳು ದಲಿತ ಸಮುದಾಯಗಳ ದನಿಗೆ ದನಿಯಾಗುತ್ತಿಲ್ಲ ಎಂಬ ಹಲುಬುವಿಕೆಯ ನಡುವೆಯೇ ಈ ಮಾಧ್ಯಮಗಳ ಮೂಲ ಸ್ವರೂಪವನ್ನೂ ಪರಾಮರ್ಶಿಸಬೇಕಾಗುತ್ತದೆ. ಪ್ರಜಾಪ್ರಭುತ್ವದ ನಾಲ್ಕನೆಯ ಅಂಗ ಸಂಸ್ಥೆಯಾಗಿ, ಸಾಮಾನ್ಯ ಪ್ರಜೆಗಳ ಸಾರ್ವಜನಿಕ ಧ್ವನಿಯಾಗಿ ಕಾರ್ಯನಿರ್ವಹಿಸಬೇಕಾದ ಮಾಧ್ಯಮಗಳು ತಮ್ಮ ಹೊಣೆಗಾರಿಕೆಯನ್ನು ಮರೆತಿರುವುದಷ್ಟೇ ಅಲ್ಲದೆ, ಆಡಳಿತ ವ್ಯವಸ್ಥೆಯೊಡನೆ, ಆಡಳಿತಾರೂಢ ಅಧಿಕಾರ ಕೇಂದ್ರಗಳೊಡನೆ ಮತ್ತು ಸ್ಥಾಪಿತ ಸಾಮಾಜಿಕ ವ್ಯವಸ್ಥೆಯೊಡನೆ ಗುರುತಿಸಿಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಒಂದು ವರ್ಷದ ಕಾಲ ದೆಹಲಿ ಗಡಿಗಳಲ್ಲಿ ನಡೆದ ಚಾರಿತ್ರಿಕ ರೈತ ಮುಷ್ಕರದ ಸಂದರ್ಭದಲ್ಲೂ ವಿದ್ಯುನ್ಮಾನ ಮಾಧ್ಯಮಗಳು ಇದೇ ನಿಷ್ಕ್ರಿಯತೆ ಮತ್ತು ಅಸೂಕ್ಷ್ಮತೆಯನ್ನು ಪ್ರದರ್ಶಿಸಿದ್ದವು. 2019-20ರಲ್ಲಿ ಸಿಎಎ-ಎನ್‍ಆರ್‍ಸಿ ವಿರುದ್ಧ ನಡೆದ ಜನಾಂದೋಲನಗಳ ಸಂದರ್ಭದಲ್ಲೂ ಬಹುಪಾಲು ಸುದ್ದಿಮನೆಗಳು ಆಡಳಿತ ವ್ಯವಸ್ಥೆಯ ವಕ್ತಾರರಂತೆ ವರ್ತಿಸಿದ್ದವು.

ಇಲ್ಲಿ ಬಂಡವಾಳಶಾಹಿ ಮಾರುಕಟ್ಟೆ ವ್ಯವಸ್ಥೆ ಮತ್ತು ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಜ್ಜಾಗಿರುವ ಔದ್ಯಮಿಕ ವಲಯದ ಹಿತಾಸಕ್ತಿಗಳು ಮುನ್ನೆಲೆಗೆ ಬರುತ್ತವೆ. ದೇಶದ ಪ್ರಜೆಗಳ ದನಿಗೆ ದನಿಯಾಗಬೇಕಾದ ಮಾಧ್ಯಮ ವಲಯ ಪ್ರಭುತ್ವದ ದನಿಗೆ ದನಿಗೂಡಿಸಿದರೆ ಏನಾಗಬಹುದು ಎಂಬ ಪ್ರಶ್ನೆಗೆ ಭಾರತದ ವಿದ್ಯುನ್ಮಾನ ಮಾಧ್ಯಮಗಳು, ವಿಶೇಷವಾಗಿ ಕನ್ನಡದ ಸುದ್ದಿಮನೆಗಳು ನಿದರ್ಶನವಾಗಿ ಕಾಣುತ್ತವೆ. ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು ಇಂದು ತಮ್ಮ ವೃತ್ತಿಧರ್ಮದ ಚೌಕಟ್ಟನ್ನು ದಾಟಿ, ಮಾರುಕಟ್ಟೆಯ ಒಂದು ಭಾಗವಾಗಿವೆ. ಕಾರ್ಪೋರೇಟ್ ಉದ್ಯಮಿಗಳ ಒಡೆತನದಲ್ಲೇ ಇರುವ ಬಹುಪಾಲು ಸುದ್ದಿಮನೆಗಳು ಮತ್ತು ವಾಹಿನಿಗಳು ಒಂದೆಡೆ ಮಾರುಕಟ್ಟೆ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ಮತ್ತೊಂದೆಡೆ ಆಡಳಿತಾರೂಢ ಬಿಜೆಪಿ ಮತ್ತು ಅದರ ಹಿಂದುತ್ವ ರಾಜಕಾರಣದೊಂದಿಗೆ ಗುರುತಿಸಿಕೊಳ್ಳುವ ಮೂಲಕ ತಮ್ಮ ಅಸ್ತಿತ್ವವನ್ನೂ ಕಾಪಾಡಿಕೊಳ್ಳಲು ಶ್ರಮಿಸುತ್ತವೆ.

ಬಹುಪಾಲು ಮಾಧ್ಯಮ ಸಮೂಹಗಳ ಒಡೆತನವನ್ನು ಹಿಂದುತ್ವ ರಾಜಕಾರಣದ ಕಾಲಾಳು ಉದ್ಯಮಿಗಳೇ ಹೊಂದಿರುವುದರಿಂದಲೇ ಇಂದು ಕನ್ನಡದ ಮತ್ತು ಹಿಂದಿಯ ಸುದ್ದಿಮನೆಗಳು ಭಟ್ಟಂಗಿತನದ ಪರಾಕಾಷ್ಠೆ ತಲುಪಿವೆ. ಕನ್ನಡದ ಮಟ್ಟಿಗೆ ಹೇಳುವುದಾದರೆ ಕೋವಿದ್ ಸಾಂಕ್ರಾಮಿಕದ ಸಂದರ್ಭದಲ್ಲೇ ಕನ್ನಡದ ಸುದ್ದಿಮನೆಗಳ ಭ್ರಷ್ಟಾತಿಭ್ರಷ್ಟ ಅವತಾರವನ್ನು ಕಂಡಿದ್ದಾಗಿದೆ. ಹಿಂದುತ್ವ ರಾಜಕಾರಣವನ್ನು ವಿರೋಧಿಸುವ ಅಥವಾ ಜನಪರ ಧ್ವನಿಯನ್ನು ಪ್ರತಿನಿಧಿಸುವ ಯಾವುದೇ ಒಂದು ಪ್ರತಿಭಟನೆ, ಪ್ರತಿರೋಧ, ಆಂದೋಲನ ಅಥವಾ ಮುಷ್ಕರ ಈ ವಾಹಿನಿಗಳ ಪಾಲಿಗೆ ನಗಣ್ಯ ಎನಿಸುತ್ತದೆ. ಪ್ರಸ್ತುತ ಹಿಜಾಬ್ ವಿವಾದದಲ್ಲೂ ಇದೇ ಮಾದರಿಯನ್ನು ಗಮನಿಸುತ್ತಿದ್ದೇವೆ. ತಮ್ಮ ಮಾರುಕಟ್ಟೆ ಟಿಆರ್‍ಪಿ ಹೆಚ್ಚಿಸಿಕೊಳ್ಳುವುದರೊಂದಿಗೇ, ಅತಿಯಾದ ಸ್ವಾಮಿನಿಷ್ಠೆಯನ್ನು ಪ್ರದರ್ಶಿಸುವ ಮೂಲಕ ಕನ್ನಡದ ಸುದ್ದಿಮನೆಗಳು ಜನಸಮೂಹಗಳ ಸಾರ್ವತ್ರಿಕ ಸಮಸ್ಯೆಗಳಿಗೆ ವಿಮುಖವಾಗುತ್ತಿವೆ.

ಒಂದು ಔದ್ಯಮಿಕ ಸಂಸ್ಥೆಯಾಗಿ ಯಾವುದೇ ಮಾಧ್ಯಮ ಸಮೂಹ/ವಾಹಿನಿ/ಸುದ್ದಿಮನೆ ಮಾರುಕಟ್ಟೆಯ ಅನಿವಾರ್ಯತೆಗಳಿಗೆ ತಕ್ಕಂತೆ ವರ್ತಿಸುವುದು ಸಹಜವೇ ಆದರೂ, ಈ ಮಾಧ್ಯಮಗಳನ್ನು ಪ್ರತಿನಿಧಿಸುವ ಪತ್ರಿಕೋದ್ಯೋಗಿಗಳು, ಪತ್ರಕರ್ತರು, ಸುದ್ದಿ ಸಂಪಾದಕರು ಮತ್ತು ವರದಿಗಾರರು ತಮ್ಮ ವೃತ್ತಿಧರ್ಮವನ್ನು ಪಾಲಿಸಬೇಕಲ್ಲವೇ ? ಸಂಘಪರಿವಾರದ ವಕ್ತಾರರಂತೆ ಮಾತನಾಡುವ ಕನ್ನಡದ ಸುದ್ದಿಮನೆಗಳ ಸಂಪಾದಕರು, ನಿರೂಪಕರು ಮತ್ತು ವರದಿಗಾರರು ಈ ವೃತ್ತಿಧರ್ಮವನ್ನು ಮರೆತಿರುವುದರಿಂದಲೇ ಕನ್ನಡದ ಮಾಧ್ಯಮ ಲೋಕ ನೈತಿಕವಾಗಿ ಅಧೋಗತಿಗಿಳಿದಿದೆ. ಈ ಅಧಃಪತನದ ಮೂಲ ಕಾರಣ ಇರುವುದು ಮಾಧ್ಯಮಗಳನ್ನು ಪ್ರತಿನಿಧಿಸುವ ವ್ಯಕ್ತಿಗಳ ಜಾತಿ ಶ್ರೇಷ್ಠತೆಯ ಮೇಲರಿಮೆ ಮತ್ತು ಅಹಮಿಕೆಯಲ್ಲಿ. ತಳಸಮುದಾಯಗಳೊಡನೆ, ಶೋಷಿತ, ತುಳಿತಕ್ಕೊಳಗಾದ, ದಮನಿತ ಜನತೆಯೊಡನೆ ಗುರುತಿಸಿಕೊಳ್ಳಲಾಗದಂತಹ ಒಂದು ತಾತ್ವಿಕ ನೆಲೆಗಳಲ್ಲಿ ಈ ಸಂಪಾದಕರ ವರ್ಗ ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಂಡುಕೊಂಡಿರುತ್ತದೆ.

ಪತ್ರಿಕಾವಲಯದಲ್ಲಿ ಅಥವಾ ವಿದ್ಯುನ್ಮಾನ ಮಾಧ್ಯಮ ವಲಯದಲ್ಲಿರುವ ಪತ್ರಿಕೋದ್ಯೋಗಿಗಳಿಗೆ ಸಮಷ್ಟಿ ಪ್ರಜ್ಞೆ ಸದಾ ಜಾಗೃತಾವಸ್ಥೆಯಲ್ಲಿರಬೇಕಾದ್ದು ಅತ್ಯವಶ್ಯ. ತಾವು ಪ್ರತಿನಿಧಿಸುವ ಮಾಧ್ಯಮ ಸಮೂಹದ ಒಡೆತನಕ್ಕೂ ತಾವು ನಿರ್ವಹಿಸುವ ಸಮಾಜಮುಖಿ ಚಟುವಟಿಕೆಗೂ ನಡುವೆ ಒಂದು ಗೋಡೆ ಅತ್ಯವಶ್ಯವಾಗಿ ಇರಬೇಕು. ಸುದ್ದಿ ವಾಹಕರಾಗಿ, ಸುದ್ದಿ ಸಂಪಾದಕರಾಗಿ ಮತ್ತು ಟಿವಿ ವಾಹಿನಿಯ ನಿರೂಪಕರಾಗಿ ಲಕ್ಷಾಂತರ ಜನರನ್ನು ಕ್ಷಣಮಾತ್ರದಲ್ಲಿ ತಲುಪುವ ಜವಾಬ್ದಾರಿಯನ್ನು ಹೊತ್ತಿರುವ ವ್ಯಕ್ತಿಗಳಲ್ಲಿ ಸಮಷ್ಟಿ ಪ್ರಜ್ಞೆಯೊಡನೆ ಸಮಾಜದ ಆಂತರಿಕ ತುಮುಲಗಳನ್ನು ಗ್ರಹಿಸುವ ತೀಕ್ಷ್ಣತೆಯೂ ಇರಬೇಕಾಗುತ್ತದೆ. ಒಬ್ಬ ಜನಪ್ರತಿನಿಧಿಯಲ್ಲಿ ಇರಬೇಕಾದ ಸೂಕ್ಷ್ಮ ಸಂವೇದನೆಯೇ ಸುದ್ದಿವಾಹಕರಲ್ಲೂ ಇರಬೇಕಾಗುತ್ತದೆ.(ಇಲ್ಲ ಎನ್ನುವುದು ವಾಸ್ತವ.)ಏಕೆಂದರೆ ತಮ್ಮ ಜೀವನೋಪಾಯಕ್ಕಾಗಿ ಮಾಧ್ಯಮದ ಒಡೆಯನನ್ನು ಆಶ್ರಯಿಸಬೇಕಾದರೂ, ಈ ಸುದ್ದಿವಾಹಕರು ಬೌದ್ಧಿಕವಾಗಿ ಜನಸಾಮಾನ್ಯರನ್ನೇ ಪ್ರತಿನಿಧಿಸುತ್ತಾರೆ. ಜನಸಮೂಹಗಳನ್ನು ಕಾಡುವ ಜ್ವಲಂತ ಸಮಸ್ಯೆಗಳು, ಸಂದಿಗ್ಧತೆಗಳು ಮತ್ತು ಜಟಿಲ ಬಿಕ್ಕಟ್ಟುಗಳು ಪ್ರತಿಯೊಬ್ಬ ಸುದ್ದಿವಾಹಕರಲ್ಲೂ ಪ್ರಕ್ಷುಬ್ಧತೆಯನ್ನು ಸೃಷ್ಟಿಸದೆ ಹೋದರೆ, ಅಂಥವರನ್ನು ಸ್ಥಾಪಿತ ವ್ಯವಸ್ಥೆಯ ಏಜೆಂಟರೆಂದಷ್ಟೇ ಪರಿಗಣಿಸಲು ಸಾಧ್ಯ.

ಇಂದು ಕನ್ನಡದ ಸುದ್ದಿಮನೆಗಳಲ್ಲಿ ಇಂತಹ ಏಜೆಂಟರೇ ಪ್ರಧಾನವಾಗಿ ಕಂಡುಬರುತ್ತಿದ್ದಾರೆ. ನೋಟು ಅಮಾನ್ಯೀಕರಣದಿಂದ ಸಿಎಎ-ಎನ್‍ಆರ್‍ಸಿವರೆಗೆ, ಜೆಎನ್‍ಯು ವಿವಾದದಿಂದ ಮೈಸೂರಿನ ರಂಗಾಯಣದವರೆಗೆ, ಕೋವಿದ್ ಸಾಂಕ್ರಾಮಿಕದಿಂದ ಹಿಜಾಬ್ ವಿವಾದದವರೆಗೆ, ಕನ್ನಡದ ಸುದ್ದಿಮನೆಗಳ ಸುದ್ದಿವಾಹಕರು ತಮ್ಮ ವೃತ್ತಿಧರ್ಮಕ್ಕಿಂತಲೂ ಸ್ವಾಮಿನಿಷ್ಠೆಗೇ ಹೆಚ್ಚು ಪ್ರಾಮುಖ್ಯತೆ ನೀಡಿರುವುದನ್ನು ಗಮನಿಸಬೇಕು. ಇದಕ್ಕೆ ಕಾರಣ ಈ ಸುದ್ದಿವಾಹಕರು ತಮ್ಮ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರುವ ಪ್ರಯತ್ನವನ್ನೇ ಮಾಡದಿರುವುದು. ಒಂದೆಡೆ ಧನದಾಹಿ ಬಂಡವಾಳ ವ್ಯವಸ್ಥೆಯ ಆರಾಧಕರಾಗಿ ತಮ್ಮ ಜೀವನೋಪಾಯ ಕಂಡುಕೊಳ್ಳುತ್ತಲೇ ಮತ್ತೊಂದೆಡೆ ತಮ್ಮ ವ್ಯಕ್ತಿಗತ ಜಾತಿ ಅಸ್ಮಿತೆಯ ಚೌಕಟ್ಟಿನಿಂದ ಹೊರಬರಲಾರದೆ, ಮನುಜ ಸೂಕ್ಷ್ಮತೆ ಮತ್ತು ಸಂವೇದನೆಯನ್ನೂ ಕಳೆದುಕೊಂಡು, ಹಿಂದುತ್ವ ರಾಜಕಾರಣದ ಸಾಂಸ್ಕೃತಿಕ ನೆಲೆಗಳಿಗೆ ಮೇವುಣಿಸುತ್ತಿರುವುದು ಕನ್ನಡ ಸುದ್ದಿಮನೆಗಳ ಸುದ್ದಿವಾಹಕರ ಲಕ್ಷಣ.

ಹಾಗಾಗಿಯೇ ಕನ್ನಡದ ಸುದ್ದಿಮನೆಗಳಿಗೆ ಕೊಪ್ಪಳದ ದೇವಸ್ಥಾನದ ಘಟನೆಯಂತಹ ಅಸ್ಪೃಶ್ಯತೆಯ ದೌರ್ಜನ್ಯಗಳು, ಹಾಥ್ರಸ್‍ನಂತಹ ಶೋಷಿತ ಮಹಿಳೆಯರ ಮೇಲಿನ ಅತ್ಯಾಚಾರಗಳು, ಹಿಜಾಬ್ ವಿವಾದದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಚ್ಯುತಿ, ದಿನನಿತ್ಯ ನಡೆಯುತ್ತಿರುವ ಜಾತಿ ದೌರ್ಜನ್ಯದ ಪ್ರಕರಣಗಳು ಪ್ರಮುಖ ಸುದ್ದಿಯಾಗಿ ಕಾಣುವುದಿಲ್ಲ. ಈ ಸುದ್ದಿಮನೆಗಳ ಕ್ಯಾಮರಾ ಕಣ್ಣುಗಳಿಗೆ ಶೋಷಣೆಯ ನೆಲೆಗಳು ಗೋಚರಿಸುವುದಿಲ್ಲ ಹಾಗೆಯೇ ಶೋಷಣೆಯ ವಿರುದ್ಧ ಸಮಾಜದಲ್ಲಿ ಗಟ್ಟಿಯಾಗಿಯೇ ಕೇಳಿಬರುವ ಪ್ರತಿರೋಧದ ಧ್ವನಿಗಳೂ ಕೇಳಿಸುವುದಿಲ್ಲ. ಹಾಗಾಗಿಯೇ ದೆಹಲಿಯ ರೈತಮುಷ್ಕರದಲ್ಲಿ ಆಳುವ ವರ್ಗಗಳಿಗೆ ಕಂಡ ಕಲ್ಪಿತ ಭಯೋತ್ಪಾದಕರು, ಖಲಿಸ್ತಾನಿಗಳು, ಉಗ್ರಗಾಮಿಗಳೇ ಈ ಸುದ್ದಿಮನೆಯ ಸಂಪಾದಕರಿಗೂ ಹಾಗೆಯೇ ಕಾಣುತ್ತಾರೆ. ಸುದ್ದಿಮನೆಗಳ ಸಂಪಾದಕರಿಗೆ ತಮ್ಮದೇ ಆದ ಕಣ್ಣೋಟ/ಮುನ್ನೋಟ ಇದ್ದಿದ್ದರೆ ದೆಹಲಿಯ ಗಡಿಗಳಲ್ಲಿ ರೈತರೇ ಕಾಣುತ್ತಿದ್ದರು. ಆದರೆ ಈ ಮಾಧ್ಯಮ ವಕ್ತಾರರರ ದೃಷ್ಟಿಗೆ ಮಾರುಕಟ್ಟೆಯ ಪರದೆ, ಜಾತಿ ಶ್ರೇಷ್ಠತೆಯ ಮಸುಕು ಕವಿದಿರುತ್ತದೆ.

ಬಂಡವಾಳಶಾಹಿ ಅರ್ಥವ್ಯವಸ್ಥೆ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಲು ಸ್ಥಾಪಿತ ವ್ಯವಸ್ಥೆಯೊಳಗಿನ ಇಂತಹ ಒಳಬಿರುಕುಗಳನ್ನೇ ಹೆಚ್ಚಾಗಿ ಆಶ್ರಯಿಸುತ್ತದೆ. ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ವ್ಯವಸ್ಥೆ, ಅದರೊಳಗಿನ ಶ್ರೇಷ್ಠತೆಯ ವ್ಯಸನ ಮತ್ತು ಅದು ಉಂಟುಮಾಡುವ ಬಿರುಕುಗಳು, ಈ ಜಾತಿ ವ್ಯವಸ್ಥೆಯನ್ನು ಪೋಷಿಸುವ ವೈದಿಕಶಾಹಿ ಸಾಂಸ್ಕೃತಿಕ ರಾಜಕಾರಣ ಇವೆಲ್ಲವೂ ಮಾರುಕಟ್ಟೆಯನ್ನು ಮತ್ತಷ್ಟು ಬಲಪಡಿಸುವ ಸಾಧನಗಳಾಗಿ ಬಳಕೆಯಾಗುತ್ತವೆ. ಹಾಗಾಗಿಯೇ ಪ್ರಜಾವಾಣಿಯಂತಹ ಪತ್ರಿಕೆಯೂ ಸಹ ತನ್ನ ಅಸೂಕ್ಷ್ಮತೆಯನ್ನು ಆಗಿಂದಾಗ್ಗೆ ಪ್ರದರ್ಶಿಸುತ್ತಲೇ ಇರುತ್ತದೆ. ಬಂಡವಾಳಶಾಹಿಯು ತನ್ನ ಉಳಿವಿಗಾಗಿ ಅವಲಂಬಿಸುವ ಪ್ರತಿಯೊಂದು ಸಾಮಾಜಿಕ ನೆಲೆಗಳನ್ನೂ ತನ್ನ ಬಂಡವಾಳದ ಮೂಲಕವೇ ಬಲಪಡಿಸುತ್ತಿರುತ್ತದೆ. ಇದರಲ್ಲಿ ಜಾತಿ ವ್ಯವಸ್ಥೆ ಮತ್ತು ಅದು ಪ್ರತಿನಿಧಿಸುವ ವೈದಿಕಶಾಹಿಯ ಶೋಷಕ ವ್ಯವಸ್ಥೆಯೂ ಒಂದು.

ತನಗೆ ಅತ್ಯವಶ್ಯವಾದ ಸಂವಹನ ಮಾಧ್ಯಮಗಳನ್ನು ಸಂರಕ್ಷಿಸಲು ಬಂಡವಾಳಶಾಹಿ ಮಾರುಕಟ್ಟೆ ಸಮಾಜದ ಬೌದ್ಧಿಕ ನೆಲೆಗಳನ್ನೂ ತನ್ನ ಬಾಹುಗಳಲ್ಲಿ ಬಂಧಿಸಲಾರಂಭಿಸುತ್ತದೆ. ಸಾಮಾನ್ಯ ಅಧ್ಯಯನ, ಸಂಶೋಧನೆ ಮತ್ತು ಪರಿಶೋಧನೆಯ ನೆಲೆಗಳನ್ನೂ ಸಹ ವಾಣಿಜ್ಯೀಕರಣಗೊಳಿಸುವ ಮೂಲಕ, ಸಂವಹನದ ಸೇತುವೆಗಳಲ್ಲಿ ತನ್ನದೇ ಆದ ನಿಯಂತ್ರಕ ಶಕ್ತಿಗಳನ್ನು ರೂಪಿಸುತ್ತಾ ಹೋಗುತ್ತದೆ. ಮಾಧ್ಯಮಗಳು ಏಕೆ ಹೀಗಾಗಿವೆ ? ಶೈಕ್ಷಣಿಕ ವಲಯ, ಬೌದ್ಧಿಕ ವಲಯ, ಅಕಾಡೆಮಿಕ್ ವಲಯ ಏಕೆ ನಿಷ್ಕ್ರಿಯವಾಗಿವೆ ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿ ಕಂಡುಕೊಳ್ಳಬೇಕಿದೆ. ಸಂಸ್ಕೃತಿ, ಕಲೆ, ಜ್ಞಾನ ಮತ್ತು ಬೌದ್ಧಿಕ ಸಂಪತ್ತನ್ನು ಮಾರುಕಟ್ಟೆಯ ಸರಕುಗಳಂತೆಯೇ ಪರಿಗಣಿಸುವ ಮಾರುಕಟ್ಟೆ ವ್ಯವಸ್ಥೆ ಈ ವಲಯಗಳ ಸಂವಹನ ಸೇತುವೆಗಳನ್ನೂ ಹರಾಜು ಮಾರುಕಟ್ಟೆಯ ಜಗುಲಿಯಂತೆಯೇ ಪರಿವರ್ತಿಸಿಬಿಡುತ್ತದೆ. ಹಾಗಾಗಿಯೇ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿಗಳು ಬಿಕರಿಯಾಗುವಂತೆಯೇ ಸಂವಹನ ವಾಹಿನಿಗಳ ಸಂಪಾದಕ, ನಿರೂಪಕ, ಸುದ್ದಿವಾಹಕ ಹುದ್ದೆಗಳೂ ಬಿಕರಿಯಾಗತೊಡಗುತ್ತವೆ.

ಭಾರತದ ಸಂದರ್ಭದಲ್ಲಿ ಇಲ್ಲಿನ ಜಾತಿ ಶ್ರೇಷ್ಠತೆಯ ನೆಲೆಗಳು ಮಾರುಕಟ್ಟೆ ಬಂಡವಾಳದೊಡನೆ ಸುಲಭವಾಗಿ ರಾಜಿಯಾಗುವುದರಿಂದಲೇ ಬಹುತೇಕ ಸಂವಹನದ ನೆಲೆಗಳು ತಮ್ಮ ಸೂಕ್ಷ್ಮ ಸಂವೇದನೆಯನ್ನು ಕಳೆದುಕೊಂಡು ದಿನದಿಂದ ದಿನಕ್ಕೆ ಬೆತ್ತಲಾಗುತ್ತಿವೆ. ಆಳುವ ವರ್ಗಗಳ ಸುಳ್ಳುಗಳನ್ನು ವೈಭವೀಕರಿಸುವಷ್ಟೇ ರೋಚಕವಾಗಿ, ವಿನಾಶಕಾರಿ ಯುದ್ಧವನ್ನೂ ವೈಭವೀಕರಿಸುವ, ಕ್ರೂರ ಅತ್ಯಾಚಾರವನ್ನೂ ರಂಜನೀಯವಾಗಿಸುವ ಒಂದು ವಿಕೃತ ಧೋರಣೆಯನ್ನು ಭಾರತದ ಸುದ್ದಿವಾಹಿನಿಗಳಲ್ಲಿ ಕಾಣಬಹುದಾದರೆ ಅದಕ್ಕೆ ಕಾರಣ ಈ ರಾಜೀ ಸೂತ್ರವೇ ಆಗಿರುತ್ತದೆ. ಹಾಗಾಗಿಯೇ ಆಳುವ ವರ್ಗಗಳ, ಪ್ರಭುತ್ವದ ಮತ್ತು ಸ್ಥಾಪಿತ ಹಿತಾಸಕ್ತಿಗಳ ಪರಿಭಾಷೆಯೇ ಮಾಧ್ಯಮದ ಪರಿಭಾಷೆಯೂ ಆಗುತ್ತದೆ. ಜೆಎನ್‍ಯು ಸಂಘರ್ಷದಲ್ಲಿ, ಹಾಥ್ರಸ್ ಅತ್ಯಾಚಾರ ಪ್ರಕರಣದಲ್ಲಿ, ಕೋವಿದ್ ನಿರ್ವಹಣೆಯಲ್ಲಿ ಇದನ್ನು ನೇರವಾಗಿಯೇ ಕಂಡಿದ್ದೇವೆ. ಹಿಜಾಬ್ ವಿವಾದದಲ್ಲೂ ಕಾಣುತ್ತಿದ್ದೇವೆ.

ಇಲ್ಲಿ ಆಧುನಿಕ ವಿದ್ಯುನ್ಮಾನ ಲೋಕದ ಸಾಮಾಜಿಕ ಮಾಧ್ಯಮಗಳ ಪಾತ್ರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಬಂಡವಾಳಶಾಹಿ ಮಾರುಕಟ್ಟೆಯ ಹಂಗಿಲ್ಲದೆ ಸಮಾಜಮುಖಿಯಾಗಿ, ಜನಸ್ಪಂದನೆಯೊಂದಿಗೆ, ಜನಸಮೂಹಗಳಿಗೆ ದನಿಗೆ ದನಿಯಾಗುವ ನೂತನ ಸಂವಹನ ಸೇತುವೆಗಳನ್ನು ನಾವಿಂದು ನಿರ್ಮಿಸಬೇಕಿದೆ. ಇಲ್ಲಿಯೂ ಸಹ ವ್ಯವಸ್ಥೆಯನ್ನು ಪ್ರತಿನಿಧಿಸುವ ಸಾಮಾಜಿಕ ಮಾಧ್ಯಮಗಳು ಮತ್ತಷ್ಟು ಒಳಬಿರುಕುಗಳನ್ನು ಸೃಷ್ಟಿಸುತ್ತಲೇ ಹೋಗುವ ಸಾಧ್ಯತೆಗಳಿರುತ್ತವೆ. ಇವೆಲ್ಲವನ್ನೂ ಮೀರಿ ಜನಪರ ವಾಹಿನಿಗಳು ವೈಚಾರಿಕತೆಯ ನೆಲೆಯಲ್ಲಿ, ವೈಜ್ಞಾನಿಕ ಮನೋಭಾವದೊಂದಿಗೆ, ಸಾಂವಿಧಾನಿಕ ಬದ್ಧತೆಯೊಂದಿಗೆ, ಪ್ರಜಾಸತ್ತಾತ್ಮಕ ಪ್ರಜ್ಞಾವಂತಿಕೆಯೊಂದಿಗೆ, ಜನಸಮುದಾಯಗಳ ನೋವಿನ ದನಿಗೆ ದನಿಯಾಗಿ ರೂಪುಗೊಳ್ಳಬೇಕಿದೆ. ಭಾರತದ ಸಂವಿಧಾನದ ಆಶಯದಂತೆ ದೇಶವನ್ನು ಒಂದು ಸರ್ವಜನಾಂಗದ ಶಾಂತಿಯ ತೋಟದಂತೆ ರೂಪಿಸಬೇಕಾದರೆ, ಈ ಸಂವಹನ ಸೇತುವೆಗಳು ಬಲಿಷ್ಠವಾಗುವುದು ಅತ್ಯವಶ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಕ ಸಾ ಪ ಮಾಜಿ ಅಧ್ಯಕ್ಷ ಪ್ರೊ . ಎಸ್ ಬಿ ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿನಿಧಿ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ತರಳಬಾಳು ಬಡಾವಣೆಯ ಅವರ ನಿವಾಸದಲ್ಲಿ ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ ವಾಮದೇವಪ್ಪ ಮತ್ತು ಪದಾಧಿಕಾರಿಗಳು ಇಂದು ಪ್ರದಾನ ಮಾಡಿ ಗೌರವಿಸಿದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು  ಅನುವಾದ ಸಾಹಿತ್ಯಕ್ಕಾಗಿ ನೀಡುವ 2023ರ ‘ಶ್ರೀಮತಿ ಭಾರತಿ ಮೋಹನ ಕೋಟಿ ದತ್ತಿ ಪಶಸ್ತಿ’ ಗೆ  ಪ್ರೊ. ಎಸ್.ಬಿ.ರಂಗನಾಥ್  ಅನುವಾದಿಸಿದ ಖ್ಯಾತ ಲೇಖಕ ಶಶಿ ತರೂರು ಅವರ ‘ಕಗ್ಗತ್ತಲ ಕಾಲ’ ಕೃತಿಯು ಆಯ್ಕೆಯಾಗಿತ್ತು. ಶಶಿ ತರೂರ್ ಅವರ ಇಂಗ್ಲಿಷ್ An Era of Darkness ಎಂಬ ಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಇದನ್ನು ಪ್ರೊ. ರಂಗನಾಥ್ ಅವರು ಕೊರೊನಾ ಕಾಲದ ಲಾಕ್ ಡೌನ್‌ ಸಂದರ್ಭದಲ್ಲಿ ಕನ್ನಡಕ್ಕೆ ಅನುವಾದಿಸಿದ್ದರು. 2022ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಈ ಕೃತಿಯನ್ನು ಪ್ರಕಟಿಸಿತ್ತು.

ಪ್ರೊ. ರಂಗನಾಥ್ ಇದುವರೆಗೂ ‘ಪ್ರಜಾವಾಣಿ ‘ ಯ ಅಂಕಣ ಬರಹಗಳ ಸಂಗ್ರಹ ‘ಎಲೆಲೆ ಮಧುಬಾಲೆ’, ‘ಕಚಗುಳಿ(ಗೆ) ಕಾಲ’ ಸೇರಿದಂತೆ ಹತ್ತು ಕೃತಿಗಳ ಲೇಖಕರು. ಬಂಗಾಳಿಯ ಪ್ರಸಿದ್ಧ ಕಾದಂಬರಿಗಳಾದ ‘ಭುವನ್ ಸೋಮ್’ , ‘ಪ್ರತಿದ್ವಂದಿ’ ಮುಂತಾದ ಏಳು ಕೃತಿಗಳನ್ನು ಅನುವಾದಿಸಿದ್ದಾರೆ.  ಇವರ ‘ ಟಿಪ್ಪು ಸುಲ್ತಾನನ ಖಡ್ಗ’ ಕೃತಿಯು ಮೂರು ಮುದ್ರಣಗಳನ್ನು ಕಂಡಿದೆ. ಇತ್ತೀಚೆಗೆ ಅನುವಾದಿಸಿದ ನಿವೃತ್ತ ಐ ಎ ಎಸ್ ಅಧಿಕಾರಿ ಎಂ ಮದನಗೋಪಾಲ್ ಅವರ ‘ಕಾಮನ ಬಿಲ್ಲನು ಬಂಬತ್ತಿ’ ಕೃತಿಯು ರಾಯಚೂರಿನಲ್ಲಿ ಲೋಕಾರ್ಪಣೆಗೊಂಡಿತ್ತು.

ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಪ್ರೊ.ಎಸ್.ಬಿ.ರಂಗನಾಥ್ ಅವರು ತಮ್ಮ ತೀವ್ರ ಅನಾರೋಗ್ಯದ ಕಾರಣದಿಂದ ಹಾಜರಿರಲು ಸಾಧ್ಯವಾಗಿರಲಿಲ್ಲ. ಈಗ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಎಸ್.ಬಿ.ರಂಗನಾಥ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಪ್ರಶಸ್ತಿ ಫಲಕ ಮತ್ತು ಹತ್ತು ಸಾವಿರ ನಗದನ್ನು  ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪರಿಷತ್ತಿನ ಪದಾಧಿಕಾರಿಗಳಾದ ರಾಘವೇಂದ್ರ ನಾಯರ್, ಎಸ್ ಎಂ ಮಲ್ಲಮ್ಮ, ರುದ್ರಾಕ್ಷಿ ಬಾಯಿ ಪುಟ್ಟನಾಯಕ್, ತಾಲ್ಲೂಕು ಅಧ್ಯಕ್ಷೆ ಸುಮತಿ ಜಯಪ್ಪ, ಕಾರ್ಯದರ್ಶಿಗಳಾದ ನಾಗರಾಜ ಸಿರಿಗೆರೆ, ದಾಗಿನಕಟ್ಟೆ ಪರಮೇಶ್ವರಪ್ಪ, ನಿರ್ದೇಶಕರಾದ ಷಡಾಕ್ಷರಪ್ಪ ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ

Published

on

ಸುದ್ದಿದಿನ,ಭದ್ರಾವತಿ: ಆಕಾಶವಾಣಿ ಭದ್ರಾವತಿ ಕೇಂದ್ರದ 60ನೇ ವರ್ಷದ ವಜ್ರಮಹೋತ್ಸವದ ಅಂಗವಾಗಿ ಶಿವಮೊಗ್ಗದ ಕುವೆಂಪು ವಿ.ವಿ.ಯ ಡಾ. ಅಂಬೇಡ್ಕರ್ ಅಧ್ಯಯನ ಕೇಂದ್ರ ಸಹಯೋಗದಲ್ಲಿ ವಿಶ್ವ ಮಾನವ ಡಾ. ಅಂಬೇಡ್ಕರ್ ಅವರ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿಯನ್ನು ಪ್ರಸಾರ ಮಾಡಲಿದ್ದು, ಜೂನ್ 11 ರಂದು ಬೆಳಗ್ಗೆ 7.15 ಕ್ಕೆ ಕುವೆಂಪು ವಿವಿಯ ಕುಲಪತಿ ಡಾ. ಶರತ್ ಅನಂತಮೂರ್ತಿ ಅವರ ಮುನ್ನುಡಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

ಈ ಸರಣಿಯಲ್ಲಿ ಒಟ್ಟು 52 ಕಾರ್ಯಕ್ರಮಗಳಿದ್ದು, ಪ್ರತೀ ಮಂಗಳವಾರ ಬೆಳಗ್ಗೆ 7.15 ಕ್ಕೆ ಪ್ರಸಾರ ಮಾಡಲಿದೆ. ಪ್ರಭಾವಿತ ಮಹನೀಯರ ಅನಿಸಿಕೆಯನ್ನು ಹಂಚಿಕೊಳ್ಳುವುದರೊಟ್ಟಿಗೆ ದೇಶವಿದೇಶದ ಕೇಳುಗರು ತಮ್ಮ ಮೇಲೆ ಅಂಬೇಡ್ಕರ್ ಅವರ ಪ್ರಭಾವನ್ನೂ ಆಕಾಶವಾಣಿಯಲ್ಲಿ ಹಂಚಿಕೊಳ್ಳಲು ವಾಟ್ಸ್ ಆಪ್ ಮೂಲಕ ಅವಕಾಶ ಕಲ್ಪಿಸಿದೆ.

ಕಾರ್ಯಕ್ರಮವು FM 103.05 ಹಾಗೂ MW 675 khz ನಲ್ಲಿ ಕೇಳುವುದರೊಟ್ಟಿಗೆ ಜಗತ್ತಿನಾದ್ಯಂತ Akashavani Bhadravathi live streaming ಮತ್ತು prasarbharati news on air app ನಲ್ಲಿ ಪ್ರಸಾರ ಸಮಯದಲ್ಲಿ ಹಾಗೂ Akashavani Bhadravati YouTube ನಲ್ಲಿ ಪ್ರಸಾರದ ನಂತವೂ ಕೇಳಬಹುದು ಎಂದು ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್. ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಆತ್ಮಕತೆ | ಮಹಾರಾಜಾ ಕಾಲೇಜಿನಲ್ಲಿ ಉಪನ್ಯಾಸಕನಾಗಿ : 1974-1976

Published

on

  • ರುದ್ರಪ್ಪ ಹನಗವಾಡಿ

1967ರಲ್ಲಿ ಎಸ್.ಎಸ್.ಎಲ್.ಸಿ. ಪಾಸು ಮಾಡಿದ ದಿನಗಳಿಂದಲೂ ಮುಂದಿನ ಕಲಿಕೆಗಾಗಿ ಮೈಸೂರಿಗೇ ಹೋಗಬೇಕೆಂದು ಕನಸು ಕಾಣುತ್ತಿದ್ದ ನನಗೆ ಅಲ್ಲಿಯೇ ಓದಿ ನಂತರ ಅಧ್ಯಾಪಕ ವೃತ್ತಿ ದೊರೆತದ್ದು ನನ್ನ ಸಂತೋಷಕ್ಕೆ ಪಾರವೇ ಇರಲಿಲ್ಲ. ಪ್ರಿನ್ಸಿಪಾಲರಾದ ಎನ್. ಶಂಕರಲಿಂಗಯ್ಯನವರು, ರಾಜ್ಯಶಾಸ್ತ್ರದ ಪಾಠ ಮಾಡುತ್ತಿದ್ದರು. ಮತ್ತು ಆಡಳಿತಾಧಿಕಾರಿಯಾಗಿದ್ದ, ಜೆ. ಬಿಲ್ಲಯ್ಯನವರು ನಮ್ಮದೇ ಅರ್ಥಶಾಸ್ತ್ರ ವಿಷಯದಲ್ಲಿ ಅಧ್ಯಾಪಕರಾಗಿದ್ದವರು. ನಮ್ಮ ಅರ್ಥಶಾಸ್ತç ವಿಭಾಗದಲ್ಲಿ ಇಲಾಖಾ ಮುಖ್ಯಸ್ಥರಾಗಿದ್ದ ಪ್ರೊ. ಸಿದ್ದೇಗೌಡರು, ಮತ್ತು ಹರಿಚರಣ್ ನನಗೆ ಎರಡು ವರ್ಷಗಳ ಹಿಂದೆ ಗುರುಗಳಾಗಿದ್ದವರು, ಉಳಿದಂತೆ ಇನ್ನಿಬ್ಬರು ಮಹಿಳಾ ಅಧ್ಯಾಪಕರುಗಳು ಮತ್ತು ಎಂ.ಎ.ನಲ್ಲಿ ನನಗಿಂತ ಹಿರಿಯರಾಗಿದ್ದ ಕೆ.ಸಿ. ಬಸವರಾಜ್ ಕೂಡ ಅಧ್ಯಾಪಕರಾಗಿದ್ದರು.

ಬಿ.ಎ. ಮತ್ತು ಎಂ.ಎ. ತರಗತಿಗಳಲ್ಲಿ ಓದುವಾಗ ಪಠ್ಯಗಳಿಗಿಂತಲೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನನಗೆ ಈಗ ಪಠ್ಯಕ್ರಮಕ್ಕನುಗುಣವಾಗಿ ಒಂದು ಗಂಟೆಗೆ ಬೇಕಾದ ತಯಾರಿಯೊಡನೆ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡುವುದು ಸವಾಲಿನ ಪ್ರಶ್ನೆಯಾಗಿತ್ತು. ಪ್ರತಿ ತರಗತಿಗಳಲ್ಲಿ 50-60 ವಿದ್ಯಾರ್ಥಿಗಳಿದ್ದು ಕೆಲವರು ನನಗಿಂತ ಹೆಚ್ಚಿನ ವಯಸ್ಸು ಮತ್ತು ದೈಹಿಕವಾಗಿ ಬಲವಾಗಿದ್ದವರು ಕೂಡ ಇದ್ದರು. ವಾರಕ್ಕೆ 16 ಗಂಟೆಗಳ ಪಾಠ ಮಾಡುವುದು ಎಲ್ಲ ಅಧ್ಯಾಪಕರಿಗೆ ನಿಗದಿಯಾಗಿತ್ತು. ಹೊಸ ಅಧ್ಯಾಪಕರುಗಳಿಗೆ ವಿಶೇಷವಾಗಿ ದ್ವಿತೀಯ ಮತ್ತು ಅಂತಿಮ ಬಿ.ಎ. ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿ ಅಧ್ಯಾಪಕರಿಗೆ ತಬ್ಬಿಬ್ಬು ಮಾಡುವುದು ನನಗೆ ಕೂಡ ಗೊತ್ತಿದ್ದ ವಿಷಯವಾಗಿತ್ತು. ಆ ಕಾರಣದಿಂದಲೇ ಸರಿರಾತ್ರಿಯರೆಗೆ ಓದಿಕೊಂಡು ಸಜ್ಜಾಗಿಯೇ ತರಗತಿಗಳಿಗೆ ಹೋಗುತ್ತಿದ್ದೆ. ನಿಜವಾದ ಅರ್ಥಶಾಸ್ತçದ ವಿದ್ಯಾರ್ಥಿಯಾಗಿದ್ದುದು, ನಾನು ಅಧ್ಯಾಪಕನಾಗಿ ಸೇರಿದ ಮೇಲೆಯೆ ಎಂದು ನನಗನ್ನಿಸತೊಡಗಿತು. ಪಾಠಗಳನ್ನು ಶಿಸ್ತಿನಿಂದ ಮಾಡಿಕೊಂಡು ಬರುತ್ತಿದ್ದ ಕಾಲದಲ್ಲಿ ಅಂತಿಮ ಬಿ.ಎ. ವಿದ್ಯಾರ್ಥಿಗಳ ತರಗತಿಗಳು ಜೂನಿಯರ್ ಮತ್ತು ಸೀನಿಯರ್ ಹಾಲ್‌ಗಳಲ್ಲಿ ನಡೆಯುತ್ತಿದ್ದವು. ಆಗ ಪ್ರತಿ ಪಿರಿಯಡ್‌ಗೆ ಹಾಜರಾತಿ ತೆಗೆದುಕೊಳ್ಳುವ ಪರಿಪಾಠವಿತ್ತು. ನಾನು ಹಾಜರಾತಿ ತೆಗೆದುಕೊಂಡು ಪಾಠ ಮಾಡಲು ಪ್ರಾರಂಭಿಸಿದಾಗ ಕೆಲವು ವಿದ್ಯಾರ್ಥಿಗಳು ನಾವು ತರಗತಿಯಿಂದ ಹೊರ ಹೋಗಲು ಅನುಮತಿ ನೀಡಬೇಕೆಂದು ಕೋರಿದರು. ಅದರ ಉದ್ದೇಶ ನಿಮ್ಮ ಪಾಠದ ಅಗತ್ಯವಿಲ್ಲ ಎನ್ನೋ ಧೋರಣೆಯಿಂದ ಕೇಳಿದ ಅವರಿಗೆ ನಾನು, ನೀವು ಹೊರಗೆ ಹೋದರೆ ನಿಮ್ಮ ಹಾಜರಾತಿ ದಾಖಲೆ ಪುಸ್ತಕದಲ್ಲಿ ಗೈರು ಹಾಜರಿ ಎಂದು ನಮೂದಿಸುವುದಾಗಿ ಹೇಳಿದೆ.

ಅದಕ್ಕೇನು ಉತ್ತರಿಸದೆ ಹಾಗೆ ಹೊರಗೆ ಹೋದ ಹುಡುಗರು, ಮಾರನೆಯ ದಿನ ಪ್ರಿನ್ಸಿಪಾಲರಾಗಿದ್ದ ಶಂಕರಲಿಂಗಯ್ಯನವರಿಗೆ ಹೋಗಿ ನಾನು ಮಾಡುವ ಪಾಠ ಅರ್ಥವಾಗುತ್ತಿಲ್ಲ ಎಂದೂ ಇವರ ಬದಲು ಬೇರೆ ಅಧ್ಯಾಪಕರನ್ನು ನೇಮಿಸಲು ಮೌಖಿಕವಾಗಿ ಕೇಳಿದ್ದರು. ಪ್ರಿನ್ಸಿಪಾಲರು ಅಲ್ಲೇ ಗದರಿಸಿ ಕಳಿಸುವುದನ್ನು ಬಿಟ್ಟು ನನ್ನನ್ನು ಕರೆಸಿ ಚರ್ಚಿಸಿದರು. ನಾನು ನಡೆದ ವಿಚಾರವನ್ನು ತಿಳಿಸಿದೆ. ಆಯ್ತು ನಾನೇ ನಾಳೆ ನಿಮ್ಮ ಕ್ಲಾಸಿಗೆ ಬರುವೆ ಎಂದು ಹೇಳಿದ ಅವರು ಬಂದು ಕೂತರು. ಅದೇನು ಅವರಿಗೆ ಅನ್ನಿಸಿತೋ, ಅಂತೂ ಕೊನೆಗೆ ಇನ್ನೂ ಹೇಗೆ ಪಾಠ ಮಾಡಬೇಕು ನಿಮಗೆ? ಎಂದು ವಿದ್ಯಾರ್ಥಿಗಳಿಗೆ ಕ್ಲಾಸಿನಲ್ಲಿ ಹೇಳಿ ಹೊರಟು ಹೋದರು.

ಆ ನಂತರ ಬೇರಾವ ಕ್ಲಾಸಿನಲ್ಲಿಯೂ ಈ ರೀತಿಯ ಘಟನೆಗಳು ನಡೆಯಲಿಲ್ಲ ದಿನ ಕಳೆದಂತೆ ನನ್ನ ಆತ್ಮವಿಶ್ವಾಸವೂ ಹೆಚ್ಚಿ ವಿದ್ಯಾರ್ಥಿಗಳು ಆತ್ಮೀಯತೆಯಿಂದ ಸ್ಪಂದಿಸಿ ಆಸಕ್ತಿಯಿಂದ ಕಲಿಯುತ್ತಿದ್ದರು. ನಾನು ತಾತ್ಕಾಲಿಕವಾಗಿ ಮಹೇಶನ ರೂಂನಿಂದ ಕಾಲೇಜಿಗೆ ಓಡಾಡುತ್ತಿದ್ದು ಬೇರೆ ಮನೆ ಅಥವಾ ಪ್ರತ್ಯೇಕ ರೂಮಿಗಾಗಿ ಸರಸ್ವತಿಪುರಂನಲ್ಲಿ ಹುಡುಕುತ್ತಿದ್ದೆ. ಈ ಮಧ್ಯೆ ನನಗೆ ಸೋಷಿಯಾಲಜಿ ವಿಭಾಗದಲ್ಲಿ ಸಂಶೋಧನ ಸಹಾಯಕನಾಗಿದ್ದಾಗ ಪರಿಚಯವಾಗಿದ್ದ ಡಾ. ಪಿ.ಕೆ. ಮಿಶ್ರಾಜಿ ಅವರು ( Director for South Indian Anthropoligical Survey of India ) ಅವರೂ ಕೂಡ ಅಮೇರಿಕನ್ ಸ್ನೇಹಿತರೊಬ್ಬರಿಗೆ ಮನೆಯನ್ನು ಹುಡುಕುತ್ತಿದ್ದರು. ಹೀಗೆ ನಾನೂ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇರಿದ ಬಗ್ಗೆ ತಿಳಿಸಿ ಮನೆ ಹುಡುಕುತ್ತಿರುವ ವಿಷಯ ತಿಳಿಸಿದಾಗ ನೀವಿಬ್ಬರು ಯಾಕೆ ಒಟ್ಟಿಗೆ ಇರುವ ಬಗ್ಗೆ ಯೋಚಿಸಬಾರದು ಎಂದು ಸಲಹೆ ನೀಡಿದರು. ಅದರಂತೆ ನನಗೆ ಸರಸ್ವತಿಪುರಂನ 15ನೇ ಮುಖ್ಯರಸ್ತೆಯಲ್ಲಿ ಒಂದು ಸ್ವತಂತ್ರ ಮನೆ ಬಾಡಿಗೆಗೆ ಸಿಕ್ಕಿತು. 300 ರೂಗಳ ಬಾಡಿಗೆ ಮನೆ ನನ್ನ ಕಾಲೇಜಿಗೂ ಹತ್ತಿರವಾಗಿತ್ತು.

ನನ್ನ ಜೊತೆ ಪ್ರೊ. ಮಿಶ್ರಾಜಿ ಅವರಿಗೆ ಪರಿಚಿತರಾದ ಅಮೇರಿಕಾದ ಒರೆಗಾನ್ ವಿಶ್ವವಿದ್ಯಾಲಯದಿಂದ ಬಂದ ಪ್ರೊ. ಪಾಲ್ ಇ. ಸೈಮನ್ಸ್ ಅವರು ಖ್ಯಾತ ಮಾನವಶಾಸ್ತ್ರದ ಅಧ್ಯಾಪಕರಾಗಿದ್ದು, ಅವರು ನನ್ನೊಟ್ಟಿಗೆ ಇರಲು ಒಪ್ಪಿದರು. ಅವರು ಮೈಸೂರಿಗೆ ಮಂಗಗಳ ಸ್ವಭಾವಗಳ ಮೇಲೆ ಅಧ್ಯಯನ ಮಾಡಲು ಬಂದಿದ್ದರು. ಬೆಳಿಗ್ಗೆ 7 ಗಂಟೆಗೆ ಎದ್ದು ಕುಕ್ಕರಹಳ್ಳಿ ಕೆರೆ ಮೇಲೆ ಓಡಾಡುವ ಮಂಗಗಳ ಬಗ್ಗೆ ತನ್ನ ಕ್ಯಾಮರಾ ತೆಗೆದುಕೊಂಡು ಸೈಕಲ್‌ನಲ್ಲಿ ಹೊರ ಹೋಗಿ 9 ಗಂಟೆಗೆ ಬಂದು ಅವರು ಬೆಳಗಿನ ಉಪಹಾರ ಮಾಡುತ್ತಿದ್ದರು. ಮಧ್ಯಾಹ್ನ ಹಣ್ಣು ಮತ್ತು ಜ್ಯೂಸಿನಲ್ಲಿ ಕಾಲ ಕಳೆದು ಸಂಜೆ 7 ಗಂಟೆಗೆ ಊಟ ಮಾಡುತ್ತಿದ್ದರು. ಮಧ್ಯಾಹ್ನ ಓದು ಮತ್ತು ಬೆಳಗಿನ ಸಮಯದಲ್ಲಿ, ನೋಡಿ ಬಂದ ಮಂಗಗಳ ಬಗೆಗೆ ತನ್ನ ಅಬ್ಸರ್‌ವೇಷನ್‌ಗಳನ್ನು ನೋಟ್ಸ್ ಮಾಡುತ್ತಿದ್ದರು. ಅವರೇ ನಿಗದಿಪಡಿಸಿದ ಊಟಿಯಿಂದ ಬಂದಿದ್ದ ಅಡುಗೆ ಭಟ್ಟ ಚೆನ್ನಾಗಿ ತಿಂಡಿ ಊಟಗಳ ವ್ಯವಸ್ಥೆ ಮಾಡುತ್ತಿದ್ದ. ಮೊದಲ ದಿನ ರಾತ್ರಿ ಊಟ ಮಾಡುವ ಸಮಯಕ್ಕೆ ನಾನು ಬರುವುದು ತಡವಾಯಿತು. ಆತ 7 ಗಂಟೆಗೆ ಊಟ ಮಾಡಿ ಮುಗಿಸಿದ್ದ. ನನಗೆ ದೊಡ್ಡ ತಟ್ಟೆಯಲ್ಲಿ ಮಾಂಸಾಹಾರದ ಅಡುಗೆಯನ್ನು ಬಡಿಸಿಟ್ಟು ನನ್ನ ಮುಂದೆ ಹಿಡಿದು Hope this is sufficeint for you ? ಎಂದು ಕೇಳಿದರು. ನಾನು ಉಂಡು ಇನ್ನೊಬ್ಬರಿಗೂ ಆಗಿ ಮಿಗುವಷ್ಟು ಅದರಲ್ಲಿತ್ತು. ನಾನು ಬಾಡಿಗೆ ಮತ್ತು ವಿದ್ಯುತ್ ವೆಚ್ಚಗಳನ್ನು ನೋಡಿಕೊಂಡರೆೆ ಉಳಿದಂತೆ ಇತರೆ ಎಲ್ಲಾ ಖರ್ಚುಗಳು ಸೈಮನ್ಸ್ ನೋಡಿಕೊಳ್ಳುವಂತೆ ಮಾತಾಡಿ ಹಂಚಿಕೊಂಡಿದ್ದೆವು.

ತಿಂಗಳಲ್ಲಿ ಒಂದೆರಡು ಬಾರಿ ಗುಂಡ್ಲುಪೇಟೆ ಕಡೆ ಹೋಗಿ ಮಂಗಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದರು. ನಾನು ಅಮೆರಿಕನ್ ಜೊತೆ ಪ್ರತ್ಯೇಕ ಅಡುಗೆಯವನೊಬ್ಬನನ್ನು ಇರಿಸಿಕೊಂಡು ಊಟ ಉಪಚಾರ ನಡೆಯುತ್ತಿದ್ದುದರ ಬಗ್ಗೆ ನಮ್ಮ ಮೈಸೂರಿನ ಹಿರಿಕಿರಿ ಸ್ನೇಹಿತರು ವಿಶೇಷವೆಂಬಂತೆ ವಿಚಾರಿಸುತ್ತಿದ್ದರು. ನನ್ನ ಅನೇಕ ಸಮಾಜವಾದಿ ಯುವಜನ ಸಭಾ ಮತ್ತು ದಲಿತ ವಿದ್ಯಾರ್ಥಿ ಮಿತ್ರರು ನನ್ನಲ್ಲಿಗೆ ಬಂದಾಗ ನಮ್ಮಲ್ಲಿಯೇ ಊಟ ತಿಂಡಿ ಮಾಡಿಕೊಂಡು ಹೋಗುತ್ತಿದ್ದರು.

ನಾನು 1974 ಡಿಸೆಂಬರ್ 4 ರಂದು ಅಧ್ಯಾಪಕ ವೃತ್ತಿಗೆ ಸೇರಿದ್ದು, ಮಾರ್ಚ್ ಅಥವಾ ಏಪ್ರಿಲ್ ಶೈಕ್ಷಣಿಕ ವರ್ಷದ ಕೊನೆಯಲ್ಲಿ ರಿಲೀವ್ ಮಾಡುತ್ತಿದ್ದರು. ಸ್ಥಳೀಯ ಅಭ್ಯರ್ಥಿಯಾಗಿ ತೆಗೆದುಕೊಂಡ ಎಲ್ಲ ವಿಷಯದ ಅಧ್ಯಾಪಕರುಗಳಿಗೂ ಇದೇ ವ್ಯವಸ್ಥೆ ಆಗ ಜಾರಿಯಲ್ಲಿತ್ತು. ಅದರಲ್ಲಿ ಆರು ತಿಂಗಳಿಗಿಂತ ಹೆಚ್ಚು ದಿನ ಕೆಲಸ ಮಾಡಿದವರಿಗೆ ಶೈಕ್ಷಣಿಕವಾಗಿದ್ದ ರಜೆಯಲ್ಲೂ ಬೇಸಿಗೆಯ ಸಂಬಳ ನೀಡುತ್ತಿದ್ದರು. ನಾನು ಆರು ತಿಂಗಳಿಗಿAತಲೂ ಕಡಿಮೆ ಅವಧಿಗೆ ಕೆಲಸ ಮಾಡಿದ್ದ ಕಾರಣಕ್ಕೆ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸೇರಿಕೊಂಡಿದ್ದೆ. ಆ ಕಾರಣದಿಂದ ನನಗೆ ಮತ್ತೆ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಪುನರ್ ನೇಮಕವಾಗುವವರೆಗೂ ಸಂಬಳವಿರಲಿಲ್ಲ. ಸುಮಾರು 3-4 ತಿಂಗಳು ರಜೆ ಮತ್ತು ಖರ್ಚಿಗೆ ಹಣವಿಲ್ಲದೆ ಚಿಂತಿತನಾಗಿದ್ದಾಗ ಡಾ. ಮಿಶ್ರಾಜಿ ಅವರು ನನ್ನ ಸಹಾಯಕ್ಕೆ ಬಂದರು.

ಈ ಮೂರು ತಿಂಗಳ ಕಾಲ ನಾನು ಪಾಲ್ ಇ. ಸೈಮನ್ಸ್ ಅವರಿಗೆ ಅನುವಾದಕನಾಗಿ ಕೆಲಸಮಾಡಲು ಸೂಚಿಸಿದ್ದರು. ಅದಕ್ಕಾಗಿ ನನಗೆ ತಿಂಗಳಿಗೆ 500 ರೂ ಸಂಬಳವನ್ನು ನಿಗದಿಪಡಿಸಿದ್ದರು. ಅದೇನು ಕಟ್ಟುನಿಟ್ಟಿನ ಕೆಲವಲ್ಲದೆ, ಸೈಮನ್ಸ್ ಕೇಳುವ ವಿಷಯಗಳ ಕೆಲವು ಹಾಗೂ ಸ್ಥಳೀಯ ಪ್ರದೇಶದ ಬಗ್ಗೆ ಕೇಳಿದಾಗ ಕನ್ನಡದಲ್ಲಿ ವಿಷಯ ಸಂಗ್ರಹಿಸಿ ಇಂಗ್ಲಿಷ್‌ನಲ್ಲಿ ವಿವರಿಸಿ ಹೇಳುವಂತಹದ್ದಾಗಿತ್ತು. ಆಗ ಅದೊಂದು ಕಷ್ಟದ ಕೆಲಸವಾಗೇನೂ ನನಗೆ ಅನ್ನಿಸಿರಲಿಲ್ಲ. ಆದರೆ ಈ ಕೆಲಸ ನನಗೆ ಹಣದ ಬಿಕ್ಕಟ್ಟಿನಿಂದ ಪಾರು ಮಾಡಿತ್ತು. ಅದು ನನ್ನ ಬೇಸಿಗೆ ರಜೆಯಲ್ಲಿ ಸಿಗದ ಸಂಬಳದ ಕೊರತೆಯನ್ನು ಕೂಡ ನೀಗಿಸಿತ್ತು.
ಈ ಮಧ್ಯೆ ಮೂರು ತಿಂಗಳ ರಜೆಯಲ್ಲಿ ನಮ್ಮ ಊರಿಗೆ ಡಾ. ಮಿಶ್ರಾಜಿ ಅವರನ್ನು ಕರೆದುಕೊಂಡು ಹೋಗುವ ಅವಕಾಶವಾಯಿತು. 1975ರ ಬೇಸಿಗೆ ದಿನಗಳಲ್ಲಿ ನಮ್ಮೂರಿಗೆ ಹೊರಟಿದ್ದೆವು. 1975ರ ನಮ್ಮ ಊರಲ್ಲಿ ನಮಗಿದ್ದ ಒಂದು ಮಾಳಿಗೆ ಮನೆ, ದನ ಕರುಗಳನ್ನು ಕಟ್ಟಲು ಬೇರೆ ತಗಡಿನ ಮನೆ ಇದ್ದವು. ಬಂದ ಅತಿಥಿಗಳಿಗೆ ಅನುಕೂಲವಾಗಲೆಂದು ವಾಸ್ತವ್ಯಕ್ಕೆ ಪ್ರತ್ಯೇಕ ಕೊಠಡಿಗಳಾಗಲೀ, ಹಾಸಿಗೆ ದಿಂಬುಗಳಾಗಲೀ ಮನೆಯಲ್ಲಿರಲಿಲ್ಲ. ಆದರೂ ಅದಾವುದರ ಬಗ್ಗೆ ಚಿಂತಿಸದೆ ಅವರನ್ನು ನಮ್ಮ ಊರಿಗೆ ಕರೆದುಕೊಂಡು ಹೋಗಿದ್ದೆ. ರಾತ್ರಿಗೆ ಊರು ಸೇರಿದ್ದ ನಾವು ಮನೆಯಲ್ಲಿ ಊಟ ಮಾಡಿ ಪ್ರೊ. ಮಿಶ್ರಾಜಿ ಅವರಿಗೆ ನಮ್ಮ ಹೊರಗಿನ ಜಗಲಿಯ ಮೇಲೆ ಸೊಳ್ಳೆಪರದೆ ಕಟ್ಟಿ ಮಲಗುವ ವ್ಯವಸ್ಥೆ ಮಾಡಿದೆ. ಬೆಳಗಿನ ಅಗತ್ಯಗಳಿಗೆ ಅವರನ್ನು ಸೀದಾ ಕರೆದುಕೊಂಡು ನಮ್ಮೂರ ಹತ್ತಿರವೇ ಹರಿಯುತ್ತಿರುವ ಸೂಳೆಕೆರೆ ಹಳ್ಳಕ್ಕೆ ಹೋಗಿ ಬೆಳಗಿನ ಕಾರ್ಯಗಳನ್ನು ಮುಗಿಸಿಕೊಂಡು ಬಂದೆವು. ಮನೆಯಲ್ಲಿ ಮಾಡಿದ ತಿಂಡಿ ತಿಂದು ಊರಲ್ಲಿನ ಗೆಳೆಯರಾದ ದಾವಣಗೆರೆ ನಾಗರಾಜ, ಬಾರಿಕರ ಮಾಂತೇಶಿ, ಮತ್ತಿತರ ಗೆಳೆಯರ ಜೊತೆ ತೋಟಕ್ಕೆ ಹೋದೆವು.

ಪ್ರೊ. ಮಿಶ್ರಾಜಿ ಅವರು ಒಬ್ಬ ಸಮಾಜ ವಿಜ್ಞಾನಿ – ಸಂಶೋಧಕ ಹಾಗೂ ಸಾಮಾಜಿಕ ಸಮಸ್ಯೆಗಳ ಆಳವಾದ ಜ್ಞಾನ ಉಳ್ಳವರಾಗಿದ್ದರು. ಊರಲ್ಲಿನ ಸಾಮಾಜಿಕ ಶೈಕ್ಷಣಿಕ ಹಾಗೂ ಕೂಲಿ ಕಾರ್ಮಿಕರ ಸ್ಥಿತಿಗತಿಗಳನ್ನು ವಿಚಾರಿಸುತ್ತಾ ಸೂಕ್ಷö್ಮವಾಗಿ ಎಲ್ಲರನ್ನು ಗಮನಿಸುತ್ತಿದ್ದರು. ಡಿ. ನಾಗರಾಜು ನಾನು ಪ್ರಾಥಮಿಕ ಶಾಲೆಯಲ್ಲಿ ಸಹಪಾಠಿಯಾಗಿದ್ದು ಈಗ ಊರಲ್ಲಿಯೇ ವೀಳ್ಯದೆಲೆ ತೋಟ ಮಾಡಿಕೊಂಡು ಆರಾಮವಾಗಿದ್ದನು. ಅವರ ತೋಟದಲ್ಲಿ ತೆರೆದ ಬಾವಿಯಲ್ಲಿ ಮಿಶ್ರಾಜಿಯೂ ನಾನು ಸೇರಿದಂತೆ ನಾವೆಲ್ಲರು ಈಜಾಡಿದೆವು. ಆಗ ಹೊರಬಂದು ತೋಟದಲ್ಲಿನ ತೆಂಗಿನ ಮರಗಳಿಂದ ಇಳಿಸಿದ ತೆಂಗಿನ ಹೆಂಡವನ್ನು ಸವಿದೆವು. ಮನೆಯಿಂದ ರೊಟ್ಟಿ ಬುತ್ತಿಯನ್ನು ಅಲ್ಲಿಗೇ ತರಿಸಿದ್ದು, ವೀಳ್ಯದೆಲೆಯ ತೋಟದಲ್ಲಿ ಎಲ್ಲರೂ ಕೂತು ಊಟ ಮಾಡಿದೆವು. ಮಿಶ್ರಾಜಿ ಅವರು ಸಂತೋಷದಿಂದಲೇ ಇಡೀ ದಿನ ಕಳೆದರು. ಮಾತಿನ ಮಧ್ಯೆ ನಮ್ಮೂರಲ್ಲಿನ ಶ್ರೀಮಂತರು ಮತ್ತು ದೊಡ್ಡ ರೀತಿಯಲ್ಲಿ ಒಕ್ಕಲುತನ ಮಾಡುವ ಬಣಕಾರ ಸಿದ್ದಪ್ಪನವರನ್ನು ನೋಡುವ ಆಸೆ ವ್ಯಕ್ತಪಡಿಸಿದರು. ಪ್ರೊ. ಅವರನ್ನು ಅವರ ಮನೆಗೂ ಕರೆದುಕೊಂಡು ಹೋದೆ. ನಮ್ಮಪ್ಪನ ಬಹುದೊಡ್ಡ ವಿಶ್ವಾಸಿಕರಾಗಿದ್ದ ಬಣಕಾರ ಸಿದ್ದಪ್ಪನವರು ಮಿಶ್ರಾಜಿ ಅವರ ಜೊತೆ ಗ್ರಾಮೀಣ ಅರ್ಥವ್ಯವಸ್ಥೆಯ, ಕೂಲಿಕಾರ್ಮಿಕರ, ಹಬ್ಬಹರಿದಿನಗಳ ಕುರಿತು ದೀರ್ಘವಾಗಿ ಚರ್ಚಿಸಿದರು. ಕೊನೆಗೆ ಟೀ ಕುಡಿದು ಅವರ ಮನೆಯಿಂದ ವಾಪಸ್ ಬಂದೆವು.

 

ಸಂಜೆ ಸಮಯಕ್ಕೆ ನಮ್ಮೂರಿನಲ್ಲಿಯೇ ಹೊಸದಾಗಿ ಕಲಿತಿದ್ದ ಬ್ಯಾಂಡ್‌ಅನ್ನು ಅವರ ಮುಂದೆ ಬಾರಿಸಿದರು. ಆ ಕಾಲಕ್ಕೆ ದೇಶ ವಿದೇಶಗಳನ್ನು ಪ್ರವಾಸ ಮಾಡಿ ನಮ್ಮ ದೇಶದಲ್ಲಿನ ದಕ್ಷಿಣ ಭಾರತಕ್ಕೆ ಮಾನವಶಾಸ್ತçದ ಅಧ್ಯಯನಕ್ಕೆ ಮುಖ್ಯಸ್ಥರಾಗಿದ್ದ, ಜಾತಿಯಲ್ಲಿ ಅತ್ಯುನ್ನತವಾದ ಶ್ರೇಣಿಗೆ ಸೇರಿದ ಬ್ರಾಹ್ಮಣರಾಗಿದ್ದ ಪ್ರಾಧ್ಯಾಪಕರೊಬ್ಬರು ಯಾವ ಹಮ್ಮು ಬಿಮ್ಮುಗಳಿಲ್ಲದೆ ಸಾಮಾನ್ಯ ಹಳ್ಳಿಗೆ ಬಂದು ಊರಲ್ಲಿಯ, ನಮ್ಮ ಮನೆಯಲ್ಲಿಯೇ ಉಳಿದು ಹೋಗಿದ್ದು ನಮ್ಮೂರಿನ ಮತ್ತು ನನ್ನ ಜೀವನ ಕಾಲಘಟ್ಟದಲ್ಲಿ ಮರೆಯಲಾಗದ ಸವಿನೆನಪಾಗಿ ಉಳಿದಿದೆ. ಅವರ ಸರಳ, ಸಜ್ಜನಿಕೆಯ ವ್ಯಕ್ತಿತ್ವದಿಂದಾಗಿ ಅಂದು ಪರಿಚಯವಾಗಿ, ನನಗೆ ಬೌದ್ಧಿಕ ಮತ್ತು ಆರ್ಥಿಕವಾಗಿ ಶಕ್ತಿ ನೀಡಿ, 50 ವರ್ಷಗಳ ನಂತರ ಇಂದಿಗೂ ನನ್ನ ಮಾರ್ಗದರ್ಶಕ ಗುರುಗಳಾಗಿ ಉಳಿದಿರುವುದು ನನ್ನ ಜೀವನದ ಭಾಗ್ಯವೆಂದೇ ಭಾವಿಸಿದ್ದೇನೆ. ಅವರು ಮಾಡಿದ ಯಾವ ಸಹಾಯವನ್ನೂ, ತಾನು ಮಾಡಿದೆನೆಂಬ ಅಹಂ ಎಲ್ಲೂ ಸುಳಿಯುವುದಿಲ್ಲ. ಅಂದು ನನಗೆ ಸಿಕ್ಕ ಈ ಪ್ರೊಫೆಸರ್ ನಂತರ ನನ್ನ ಸ್ನೇಹ ಬಳಗದ ಮಾದೇವ, ಅರ್ಕೇಶ, ಮಹೇಶ, ಭಕ್ತ, ಗೊಟ್ಟಿಗೆರೆ ಶಿವರಾಜು ಎಲ್ಲರಿಗೂ ಸ್ನೇಹದ ಗುರುಗಳಾಗಿ ಇಂದಿಗೂ ಉಳಿದಿದ್ದಾರೆ. ಈಗಲೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳಿಗೆ ವಿಶೇಷ ಉಪನ್ಯಾಸಕರಾಗಿ ಹೋಗಿ ಬರುತ್ತಿರುವುದನ್ನ ನೋಡಿದರೆ ಆಶ್ಚರ್ಯವಾಗುತ್ತದೆ. ಅವರಿಗಿಂತ ಇಪ್ಪತ್ತು ವರ್ಷಗಳಷ್ಟು ಕಿರಿಯರಾದ ನಾವುಗಳು ಅವರನ್ನು ಇಂದಿಗೂ ಅನುಸರಿಸುತ್ತಾ ಜೀವನ ಸಾಗಿಸುತ್ತಿದ್ದೇವೆ.

ನಾನು ಅಧ್ಯಾಪಕನಾಗಿದ್ದ ಸಮಯದಲ್ಲಿ ಶೈಕ್ಷಣಿಕ ವರ್ಷ ಮುಗಿದು ಮೂರು ತಿಂಗಳ ರಜೆಯಲ್ಲಿ ಊರಿಗೆ ಹೋಗಿದ್ದೆ. ಆಗ ಪಾಲ್ ಇ. ಸೈಮನ್ಸ್ಗೆ ನಾನು ಅನುವಾದಕನಾಗಿ ಕೆಲಸವೊಂದನ್ನು ಮಾಡಲು ಪ್ರೊ. ಮಿಶ್ರಾಜಿ ಅವರು ಒಪ್ಪಿಸಿದ್ದರು ಎಂಬುದನ್ನು ಆಗಲೇ ಹೇಳಿದ್ದೇನೆ. ಅದನ್ನು ನಾನು ಮಾಡುತ್ತಿದ್ದೆನಾದರೂ ನನಗೆ ಪ್ರತಿ ತಿಂಗಳು ಮುಗಿದಾಕ್ಷಣ ಸಂಬಳ ನೀಡಿರಲಿಲ್ಲ. ಆದರೆ ನಾನು ನನ್ನ ಹಳ್ಳಿಯಲ್ಲಿ ಇರುವಾಗ ಮೂರು ತಿಂಗಳ ಒಟ್ಟು ಸಂಬಳ 1500 ರೂಪಾಯಿಗಳನ್ನು ನನ್ನ ವಿಳಾಸಕ್ಕೆ ಮನಿ ಆರ್ಡರ್ ಮುಖಾಂತರ ಕಳಿಸಿದ್ದರು. ನಮ್ಮೂರಿಗೆ ಆಗತಾನೆ ಹೊಸದಾಗಿ ಬಂದಿದ್ದ ಪೋಸ್ಟ್ ಆಫೀಸ್ ಮತ್ತು ಅದರ ಉಸ್ತುವಾರಿಯನ್ನು ನಮ್ಮ ಊರಿನ ಗೌಡ್ರ ಈರಣ್ಣ ಎಂಬುವವರು ನೋಡಿಕೊಳ್ಳುತ್ತಿದ್ದರು. ಅವರು ನನಗೆ ಬಂದ 1500ರೂಗಳಷ್ಟು ಮನಿ ಆರ್ಡರ್ ಹಣ ನೋಡಿ ಆಶ್ರ‍್ಯಗೊಂಡಿದ್ದರು. ಆಗ ನಮ್ಮೂರಿಗೆ ಹೆಚ್ಚೆಂದರೆ 50-100ರೂಗಳು ಎಂ.ಓ. ಗಳು ಬರುತ್ತಿದ್ದ ಕಾಲ. ಇಷ್ಟೊಂದು ಹಣ ಬರುವಷ್ಟು ಈ ಹುಡುಗ ಹೆಂಗೆ ಬೆಳೆದ ಎಂಬೆಲ್ಲ ಯೋಚನೆ ಮಾಡುತ್ತಾ ಊರಿಗೆಲ್ಲ ಸುದ್ದಿ ಮಾಡಿದ್ದ. ಆಗ ನಮ್ಮ ಅಪ್ಪ ಇನ್ನೂ ಸಕ್ರಿಯವಾಗಿ ಕೆಲಸ ಕಾರ್ಯ ಮಾಡುತ್ತಿದ್ದರು. ‘ಅದೇನಪ್ಪ ಅಷ್ಟೊಂದು ದುಡ್ಡು, ಕಳಿಸಿದರ‍್ಯಾರು?’ ಎಂದು ಅಪ್ಪ ಕೂಡ ಆಶ್ಚರ್ಯದಿಂದ ಕೇಳಿದ್ದರು. ಆಗ ಪಡೆದ 1500 ರೂಗಳನ್ನು ಎಂ.ಓ. ಮೂಲಕ ಬಂದು ನೀಡಿದ ಸಂತೋಷವನ್ನು ಅಳೆಯಲಾಗದು. ಎಲ್ಲ ಕೊರತೆಗಳ ಆಗರದಲ್ಲಿ ಹೋರಾಡುತ್ತಿದ್ದ ನನಗೆ ಅದೊಂದು ಯಾವ ಮಾಪಕದಿಂದಲೂ ಅಳಿಯಲಾಗದ ಶಕ್ತಿವರ್ಧಕ ಔಷಧಿಯಂತೆ ಹುರುಪು ನೀಡಿ ಊರಲ್ಲಿ ನನ್ನ ಗೌರವ ಬೆಳೆಸಿತ್ತು.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending