ದಿನದ ಸುದ್ದಿ

ಕಳೆದ ವರ್ಷಕ್ಕೆ ಹೋಲಿಸಿದರೆ ವಿದ್ಯುತ್ ಬೇಡಿಕೆ ಈ ವರ್ಷ ಹೆಚ್ಚಿದೆ : ಇಂಧನ ಇಲಾಖೆ

Published

on

ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ಅಭಾವ ಉಂಟಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ಇಂದು ನಡೆಯಿತು.

ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ವಿದ್ಯುತ್ ಬೇಡಿಕೆ ಸರಾಸರಿ ಶೇಕಡ 43 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇಕಡ 55ರಿಂದ 119 ರಷ್ಟು ಏರಿಕೆ ಕಂಡುಬಂದಿದೆ. ರಾಯಚೂರು, ಬಳ್ಳಾರಿ ಶಾಖೋತ್ಪನ್ನ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ನೆರೆಯ ರಾಜ್ಯಗಳಿಂದ ವಿದ್ಯುತ್ ಅನ್ನು ಖರೀದಿಸಲಾಗುತ್ತಿದೆ. ಬೇರೆ ರಾಜ್ಯಗಳಿಗೆ ವಿದ್ಯುತ್ ನೀಡದಂತೆ ಆದೇಶ ಹೊರಡಿಸಲಾಗಿದೆ.

ರೈತ ಸಮುದಾಯಕ್ಕೆ ಅಗತ್ಯತೆಗೆ ಅನುಗುಣವಾಗಿ 5 ರಿಂದ 7 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಪ್ರತಿ ದಿನ 14 ಮಿಲಿಯನ್ ಯುನಿಟ್ ವಿದ್ಯುತ್ ಅಗತ್ಯವಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಿದರು.

ಮುಂದಿನ ವರ್ಷದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸೌರವಿದ್ಯುತ್ ಮೂಲಕ ವಿದ್ಯುತ್ ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚಿಸಿ, ಸೌರವಿದ್ಯುತ್ ಉತ್ಪಾದನೆಗೆ ಇನ್ನಷ್ಟು ಒತ್ತು ನೀಡುವಂತೆ ಸೂಚಿಸಿದರು ಎಂದು ಪ್ರಕಟಣೆ ತಿಳಿಸಿದೆ.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version