Connect with us

ಸಿನಿ ಸುದ್ದಿ

ಮಲಯಾಳಿ ಮನಸ್ಸುಗಳಲ್ಲಿ ಪ್ರೀತಿ-ಪ್ರೇಮದ ಕಿಡಿ ಹೊತ್ತಿಸಿದ ‘ಮೊಯ್ದಿನ್’..!

Published

on

  • ಶಫಿಕ್ ಅಬ್ಬಾಸ್

1960-70ರ ದಶಕದಲ್ಲಿ ಕೇರಳದ ಕಲ್ಲಿಕೋಟೆ ಜಿಲ್ಲೆಯ ಮುಕ್ಕಂ ಎಂಬ ಊರಿನಲ್ಲಿ ತುಂಬಾ ಆತ್ಮೀಯವಾಗಿದ್ದ ಎರಡು ಕುಟುಂಬದ ಕುಡಿಗಳು ಧರ್ಮವನ್ನೇ ಮೀರಿ ಪ್ರೀತಿಸಿದ್ದರು. ಸಂಪ್ರದಾಯಸ್ಥ ಹಿಂದೂ ಕುಟುಂಬದ ಕಾಂಚನಮಾಲಾ ಹಾಗೂ ಸಂಪ್ರದಾಯಸ್ಥ ಮುಸ್ಲಿಂ ಕುಟುಂಬದ ಬಿ.ಪಿ ಮೊಯ್ದಿನ್ ಪ್ರೀತಿಗೆ ಧರ್ಮ ಅಡ್ಡಿಯಾಗಿದ್ದರಲ್ಲಿ ಅಚ್ಚರಿ ಏನೂ ಇಲ್ಲ. ಅಲ್ಲಾಹ್ ಏಸು ಈಶ್ವರನ ಮೇಲಾಣೆ; ಅದು ಲವ್ ಜಿಹಾದ್ ಅಲ್ಲ, ಶುದ್ಧ ಪ್ರೀತಿ. ಪರಸ್ಪರ ಪ್ರೀತಿಯೇ ಅವರ ಜೀವನ ಆಗಿತ್ತು. ಸಂಪ್ರದಾಯಸ್ಥರ ಮನೆಯಲ್ಲಿ ಹುಟ್ಟಿ ಬೆಳೆದಿದ್ದರೂ ಇಬ್ಬರದ್ದು ರೆಬೆಲ್ ಪರ್ಸನಾಲಿಟಿ..

ಪ್ರೀತಿಸುವುದೇ ಅಪರಾಧವಾಗಿದ್ದ ಆ ಕಾಲದಲ್ಲಿ ‘ಹಿಂದೂ-ಮುಸ್ಲಿಂ’ ಪ್ರೀತಿಯನ್ನು ಯಾರಾದರೂ ಒಪ್ಪಿಯಾರೇ? ಕಾಲೇಜು ಕಲೀತಿದ್ದ ಕಾಂಚನಮಾಲಾಗೆ ಗೃಹಬಂಧನದ ಶಿಕ್ಷೆ.. ತನ್ನ ಆಪ್ತ ಮಿತ್ರನ ಮಗಳನ್ನೇ ಪ್ರೀತಿಸಿದ ಕಾರಣಕ್ಕೆ ಮೊಯ್ದಿನ್ ನ ಮುಂಗೋಪಿ ಅಪ್ಪ ತನ್ನ ಕರುಳ ಕುಡಿಯನ್ನೇ ಗುಂಡಿಕ್ಕಿ ಕೊಲ್ಲಲು ಪ್ರಯತ್ನ ಮಾಡಿದ್ದ.

ಮತ್ತೊಮ್ಮೆ 22 ಬಾರಿ ಇರಿದು ಸೀದಾ ಪೊಲೀಸ್ ಠಾಣೆಗೆ ಹೋದ ಮೊಯ್ದಿನ್ ಅಪ್ಪ, ‘ಮಗನನ್ನು ನಾನೇ ಕೊಂದೆ’ ಅಂತ ಶರಣಾಗಿದ್ದ. ಮೊಯ್ದಿನ್ ಪವಾಡದ ರೀತಿ ಬದುಕುಳಿದಿದ್ದ. “ನನಗ್ಯಾರು ಇರಿದಿಲ್ಲ, ನಾನೇ ಬಿದ್ದು ಗಾಯಗೊಂಡೆ” ಎಂದು ಕೋರ್ಟ್ ಕಟಕಟೆಯಲ್ಲಿ ಸುಳ್ಳು ಹೇಳಿ ಶಿಕ್ಷೆಯಿಂದ ಅಪ್ಪನನ್ನು ಪಾರು ಮಾಡಿದ್ದ. ‘ನನ್ನನ್ನು ಕೊಂದರೂ ನಮ್ಮ ಪ್ರೀತಿ ಸಾಯಲ್ಲ’ ಎಂದು ಹಠ ಹಿಡಿದಿದ್ದ ಮೊಯ್ದಿನ್ ಕೊನೆಗೆ ಹುಟ್ಟಿದ ಮನೆಯಿಂದಲೇ ಹೊರದಬ್ಬಲ್ಪಟ್ಟಿದ್ದ.

ಉಲ್ಲಾಟಿಲ್ ಉನ್ನಿ ಮೊಯ್ದಿನ್ ಸಾಹೇಬರ ಮಗ ಮೊಯ್ದಿನ್ ಹಾಗೂ ಕೊಟ್ಟಂಗಲ್ ಅಚ್ಯುತನ್ ಅವರ ಮಗಳು ಕಾಂಚನಮಾಲಾ ಮಧ್ಯೆ ಪ್ರೀತಿಗೆ ಕಿಚ್ಚು ಹಚ್ಚಿದ್ದು ಮುಕ್ಕಂನಲ್ಲಿ ಹರಿಯುವ ಇರುವಂಜಿ ನದಿ. ಈ ನದಿ ದಂಡೆಯಲ್ಲಿ ಪ್ರೇಮ ಹಕ್ಕಿಗಳು ಬರೋಬ್ಬರಿ ಹತ್ತು ವರ್ಷಗಳ ಬಳಿಕ ಮುಖಾಮುಖಿಯಾದಾಗ ಕಣ್ಣುಗಳೇ ಮಾತಾಡಿ ನಿಟ್ಟುಸಿರು ಬಿಟ್ಟಿದ್ದವು.

‘ಇರುವಂಜಿಪುಝ ಹರಿದು ಅರಬ್ಬಿ ಸಮುದ್ರವನ್ನು ಸೇರುವ ಹಾಗೆ ನಾವು ಒಂದು ದಿನ ಜೊತೆಯಾಗಿ ಬಾಳೋದು ಸತ್ಯ’ ಎಂದು ಮೊಯ್ದಿನ್ ಮಾತು ಕೊಟ್ಟಿದ್ದ. ಕಾಂಚನಾಳ ಈ ಸುದೀರ್ಘ ಗೃಹ ಬಂಧನದ ಸಮಯದಲ್ಲಿ ಇಬ್ಬರ ಮಧ್ಯೆ ಪತ್ರ ವ್ಯವಹಾರ ಮಾತ್ರ ನಡೀತಿತ್ತು. ಯಾರಿಗೂ ಗೊತ್ತಾಗಬಾರದೆಂಬ ಕಾರಣಕ್ಕೆ ತನ್ನ ಪ್ರೇಮ ಪತ್ರಕ್ಕೆ ಹೊಸ ಲಿಪಿ ಕಂಡುಹಿಡಿದಿದ್ದಳು ಕಾಂಚನ. ಈ ಜಗತ್ತಿನಲ್ಲಿ ಮೊಯ್ದಿನ್ ಮತ್ತು ಕಾಂಚನಾಳಿಗೆ ಮಾತ್ರ ಓದೋಕೆ ಬರೆಯೋಕೆ ಸಾಧ್ಯವಿರುವ ಲಿಪಿ ಅದು.

ಇರುವಂಜಿ ನದಿ ಹರಿದು ಸಮುದ್ರ ಸೇರಲು ಒಂದಷ್ಟು ದಿನಗಳಾಗುತ್ತೆ ಅಂತ ನಂಬಿಕೊಂಡಿದ್ದ ಈ ಜೋಡಿ ಕಾಯುವಿಕೆಯನ್ನೂ ಪ್ರೀತಿಸಿದ್ದರು. ಪ್ರೀತಿಗೆ ಮನೆಯವರು ಒಪ್ಪುತ್ತಿಲ್ಲ ಎಂಬ ಸಿಟ್ಟಲ್ಲಿ ಈಗಿನ ಜಮಾನದವರಂತೆ ಓಡಿಹೋಗಲಿಲ್ಲ. ಎರಡು ದಶಕಗಳ ಕಾಲ ಮನೆಯವರ ಒಪ್ಪಿಗೆಗಾಗಿ ಕಾದು ಕುಳಿತರು.

ಆದರೆ ಹೆತ್ತವರ ಮನಸು ಬದಲಾಗಲಿಲ್ಲ. ‘ಹುಡುಗಿ ಇಸ್ಲಾಮಿಗೆ ಮತಾಂತರವಾದರೆ ಓಕೆ’ ಎಂಬ ಅಂತಿಮ ಆಯ್ಕೆಯ ಸಂದೇಶ ಅಪ್ಪನ ಕಡೆಯಿಂದ ಬಂದಾಗ “ಆಕೆ ಮತಾಂತರವಾದ ಕ್ಷಣವೇ ನನ್ನ ಪ್ರೀತಿ ಅಂತ್ಯಗೊಳ್ಳುತ್ತೆ” ಎಂಬ ಉದಾತ್ತ ಧರ್ಮ ಸಹಿಷ್ಣುತೆಯ ಸಂದೇಶ ಮೊಯ್ದಿನ್ ಕಡೆಯಿಂದ ರವಾನೆಯಾಗಿತ್ತು.

ಅಪ್ಪ ಕಟ್ಟಾ ಕಾಂಗ್ರೆಸ್ಸಿಗನಾದರೂ ಮಗ ಮೊಯ್ದಿನ್ ಪಕ್ಕಾ ಸೋಷಿಯಲಿಸ್ಟ್. ಪ್ರಜಾ ಸೋಷಿಯಲಿಸ್ಟ್ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದ ಮೂಗು ಮುಟ್ಟೋಕೂ ಸಾಧ್ಯವಿಲ್ಲ ಎಂದು ಅಪ್ಪ‌ ಮೂದಲಿಸಿದಾಗ ಮುಕ್ಕಂನಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷ ಸಂಘಟಿಸಿ ಕಾಂಗ್ರೆಸಿಗರೇ ಮೂಗು ಮುಟ್ಟಿ ನೋಡಿಕೊಳ್ಳುವಂತೆ ಮಾಡಿದ್ದು ಮೊಯ್ದಿನ್ ಹೆಗ್ಗಳಿಕೆ. ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಮೊಯ್ದಿನ್ ಜನಪ್ರತಿನಿಧಿಯೂ ಆಗಿದ್ದ.

ಮುಕ್ಕಂ ಮಣ್ಣಿನ ಅಪತ್ಬಾಂದವನಾಗಿದ್ದ ಮೊಯ್ದಿನ್ ಬಹುಮುಖ ಪ್ರತಿಭೆ. ಪತ್ರಕರ್ತ, ಛಾಯಗ್ರಾಹಕ, ಲೇಖಕ, ಪ್ರಕಾಶಕ, ನಿರ್ದೇಶಕ, ನಿರ್ಮಾಪಕ, ಜನನಾಯಕ.. ಉತ್ತಮ ಫುಟ್ಬಾಲ್ ಆಟಗಾರ, ನುರಿತ ಈಜುಗಾರ, ಆಟಗಾರ-ಓಟಗಾರ, ಖಡಕ್ ಹೋರಾಟಗಾರ. ಮುಕ್ಕಂನ ಸಮಸ್ಯೆಗೆ ಪರಿಹಾರ ಬೇಕಾದರೆ ಅಲ್ಲಿ ಮೊಯ್ದಿನ್ ಇರಲೇಬೇಕಿತ್ತು. “ಕೇರಳದ ಹುಡುಗಿಯರು ಪ್ರೀತಿ ಮಾಡಿ ಓಡಿಹೋಗಲು ಕಾರಣಾಗಿರುವ ನಟ”, ಕೇರಳಿಯರ ನೆಚ್ಚಿನ ಸಿನಿಮಾ ಹೀರೋ ಪೃಥ್ವಿರಾಜ್ ಗೂ ಈ ಮೊಯ್ದಿನೇ ರಿಯಲ್ ಹೀರೋ.

60 ದಶಕದ ಪ್ರೀತಿ 80ರ ದಶಕವನ್ನು ದಾಟಿತ್ತು. ದಿನಗಳು ಊರುಳುತ್ತಾನೇ ಇತ್ತು. ಗೃಹಬಂಧನದಲ್ಲಿದ್ದ ಕಾಂಚನ,, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಮೊಯ್ದಿನ್.. ಇಬ್ಬರ ವಯಸ್ಸು 40ರ ಗಡಿ ದಾಟಿತ್ತು. ಆದರೆ ಪರಸ್ಪರ ಪ್ರೀತಿ ಚೂರು ಕಡಿಮೆಯಾಗಿರಲಿಲ್ಲ. ದೂರದಲ್ಲೇ ಇದ್ದು ಗಾಢವಾಗಿ ಪ್ರೀತಿಸುತ್ತಲೇ ಇದ್ದರು.

1982ರ ಮಳೆಗಾಲದ ಸಮಯ. ಆ ದಿನ ಮುಕ್ಕಂನಲ್ಲಿ ಮಳೆಯ ಆರ್ಭಟ ಜೋರಿತ್ತು. ಇರುವಂಜಿ ನದಿಯ ನೀರಿನ ಮಟ್ಟ ಕೂಡ ಏರಿತ್ತು. 10 ಜನರ ಕೆಪಾಸಿಟಿ ಇರುವ ದೋಣಿಯಲ್ಲಿ 30 ಮಂದಿ ತೂರಿಕೊಂಡಿದ್ದರು. ಮುಂದಾಗುವ ಅನಾಹುತದ ಸುಳಿವು ಯಾರಿಗೂ ಇರಲಿಲ್ಲ. ನದಿದಂಡೆಯಿಂದ ಹತ್ತಿಪ್ಪತ್ತು ಮೀಟರ್ ದೂರ ಸಾಗುತ್ತಿದ್ದಂತೆ ದೋಣಿ ಮಗುಚಿ ಬಿತ್ತು. ಮುಕ್ಕಂ‌ನ ಆಪತ್ಬಾಂದವ ಮೊಯ್ದಿನ್ ಶಾಲಾ ಮಕ್ಕಳು, ಮಹಿಳೆಯರು ಸೇರಿದಂತೆ ಮುಳುಗುತ್ತಿದ್ದವರ ರಕ್ಷಣೆಗೆ ಧುಮುಕಿದ್ದ. ಆಳಕ್ಕೆ ಹೋಗಿ ಒಬ್ಬರನ್ನೇ ತಂದು ದಡ ಮುಟ್ಟಿಸುತ್ತಿದ್ದ. “ನನ್ನ ಬಗ್ಗೆ ಚಿಂತೆ ಬಿಡಿ, ಬೇರೆಯವರನ್ನು ನೋಡಿ” ಎಂದು ಹೇಳಿ ಕೊನೆಯದಾಗಿ ಆಳಕ್ಕೆ ಹೋದ ಮೊಯ್ದಿನ್ ಮರಳಿ ಬರಲೇ ಇಲ್ಲ.

ಆಳದಲ್ಲಿದ್ದ ನೀರಿನ ಸುಳಿ ಮೊಯ್ದಿನ್ ನ ಬಲಿ ಪಡೆದಿತ್ತು. ಸಮಾಜಕ್ಕಾಗಿ ತನ್ನ ಜೀವನ ಮುಡುಪಾಗಿಟ್ಟಿದ್ದ ಮೊಯ್ದಿನ್ ಬೇರೆಯವರ ಜೀವ ಉಳಿಸಲು ತನ್ನ ಪ್ರಾಣವನ್ನೇ ತ್ಯಾಗ ಮಾಡಿದ್ದ. ಮೂರು ದಿನಗಳ ಬಳಿಕ ಶವ ಮೇಲೆ ಬಂದಾಗಲೂ ಮುಕ್ಕಂನ ಕಣ್ಣೀರು ಕೊನೆಯಾಗಿರಲಿಲ್ಲ. ಮಳೆಯ ರೂಪದಲ್ಲಿ ಕಣ್ಣೀರು ಸುರಿಸುತ್ತ ಆ ವಿಧಿ ಕೂಡ ಪಶ್ಚತಾಪ ಪಟ್ಟಿತ್ತು. ಆ ಕಾಲದಲ್ಲಿ ಮುಕ್ಕಂನ ಮಣ್ಣಿನಲ್ಲಿ ನಿಂತು ಇಂದಿರಾ ಗಾಂಧಿಯ ನೀತಿಗಳ ವಿರುದ್ಧ ಧಿಕ್ಕಾರ ಕೂಗುತ್ತಿದ್ದ ಮೊಯ್ದಿನ್ ಗೆ 1983ರಲ್ಲಿ ಇಂದಿರಾ ಗಾಂಧಿಯ ಸರ್ಕಾರವೇ ಮರಣೋತ್ತರ ಜೀವನ್ ರಕ್ಷಾ ಪದಕ ನೀಡಿ ಗೌರವಿಸಿತ್ತು.

ಪ್ರಿಯಕರನ ಸಾವಿನ ಸುದ್ದಿ ಕೇಳಿ ಕುಸಿದು ಹೋಗಿದ್ದ ಕಾಂಚನಾಳಿಗೆ, ಮೊಯ್ದಿನ್ ಮುಖ ನೋಡಬೇಕೆಂಬ ಕೊನೆ ಆಸೆಯೂ ಈಡೇರಲಿಲ್ಲ. ಮೊಯ್ದಿನ್ ಸಮಾಧಿಯಾಗುವುದರ ಜೊತೆಯಲ್ಲೇ ಅಪ್ಪಟ ಪ್ರೀತಿಯೊಂದಕ್ಕೆ ಗೋರಿ ಕಟ್ಟಲಾಯಿತು. ಮೊಯ್ದಿನ್ ಇಲ್ಲದ ಜಗತ್ತಿನಲ್ಲಿ ಬದುಕಬೇಕೆಂಬ ಯಾವ ಆಸೆಯೂ ಕಾಂಚನಾಳಿಗೆ ಇರಲಿಲ್ಲ. ಐದು ಬಾರಿ ಆತ್ಮಹತ್ಯೆಗೆ ಯತ್ನಿಸಿದಾಗಲೂ ಮನೆಯವರು ತಡೆಯಾದರು.

ಆರನೇ ಪ್ರಯತ್ನದಲ್ಲಿ ಆಸ್ಪತ್ರೆ ಸೇರಿ ಕಣ್ಣುಬಿಟ್ಟಾಗ ಕಾಂಚನಾಳ ಮುಂದೆ ಮೊಯ್ದಿನ್ ತಾಯಿ ನಿಂತಿದ್ದರು. ಮೊಯ್ದಿನ್-ಕಾಂಚನ ಮದುವೆಯಾಗದಿದ್ದರೂ ಹಿಂದೂ ಹುಡುಗಿಯನ್ನು ವಿಧವಾ ಸೊಸೆಯಾಗಿ ಸ್ವೀಕರಿಸಿದಳು ಮೊಯ್ದಿನ್ ಉಮ್ಮ. ಆತ್ಮಹತ್ಯೆ ನಿರ್ಧಾರದಿಂದ ಹಿಂದೆ ಸರಿದ ಕಾಂಚನ, ಮೃತ ಪ್ರಿಯಕರನ ಮನೆ ಸೇರಿಕೊಂಡಳು. ಹಿಂದೂವಾಗಿದ್ದುಕೊಂಡೇ ಮುಸ್ಲಿಂ ಮನೆಯಲ್ಲಿ ಹೊಸ ಜೀವನ ಶುರು ಮಾಡಿದಳು.

79 ವರ್ಷ ವಯಸ್ಸಿನ ಕಾಂಚನ ಅಮ್ಮ, ಮೊಯ್ದಿನ್ ಎಂಬ ಅಮರ ಪ್ರೇಮಿಯ ನೆನಪಲ್ಲಿ ಈಗಲೂ ಅದೇ ಮನೆಯಲ್ಲಿದ್ದಾರೆ. ಮುಕ್ಕಂನ ಮಳೆಯಲಿ ನಡೆಯುತ್ತ, ಇರುವಂಜಿ ನದಿ ದಂಡೆಯಲ್ಲಿ ವಿಹರಿಸುತ್ತ, ಖಬರಸ್ಥಾನದಲ್ಲಿ ಮೊಯ್ದಿನ್ ಸಮಾಧಿ ಸಂದರ್ಶನ ಮಾಡುತ್ತ ತಮ್ಮ ಪ್ರೀತಿಯನ್ನು ಜೀವಂತವಾಗಿಟ್ಟಿದ್ದಾರೆ ದೇವರ ನಾಡಿನ ಬ್ಯಾಚುಲರ್ ವಿಧವೆ ಕಾಂಚನಮಾಲಾ.

ಇವತ್ತು ಜುಲೈ 15.. ಸರಿಯಾಗಿ 37 ವರ್ಷಗಳ ಹಿಂದೆ ಇದೇ ದಿನದಂದು ಇರುವಂಜಿ ನದಿ ಮೊಯ್ದಿನ್ ಎಂಬ ಮಹಾತ್ಮನನ್ನು ಬಲಿ ಪಡೆದಿತ್ತು. ಮೊಯ್ದಿನ್ ಈ ಜಗತ್ತಿನಲ್ಲಿ ಇಲ್ಲದಿದ್ದರೂ ಆತನ ಪ್ರೀತಿ ಇವತ್ತಿಗೂ ಅಮರ. ಮೊಯ್ದಿನ್ ಹುಟ್ಟಿ ಬೆಳೆದಿದ್ದ ಮನೆ ಈಗ ಮೊಯ್ದಿನ್ ಸೇವಾ ಮಂದಿರವಾಗಿ ಬದಲಾಗಿದೆ. ತನ್ನ ಮನೆಯನ್ನು ಮೊಯ್ದಿನ್ ತಾಯಿ ‘ವಿಧವಾ ಸೊಸೆಗೆ’ ಕೊಟ್ಟು ನಿರ್ಗಮಿಸಿದ್ದರು. ಹಿರಿಯ ಜೀವ ಕಾಂಚನಮಾಲಾ ಸೇವಾ ಮಂದಿರದ ಮೂಲಕ ಮೊಯ್ದಿನ್ ಅರ್ಧದಲ್ಲಿ ಬಿಟ್ಟುಹೋಗಿದ್ದ ಕನಸುಗಳನ್ನು ಪೂರ್ತಿ ಮಾಡುತ್ತಿದ್ದಾರೆ.

“ಜಲಂ ಕೊಂಡು ಮುರಿವೇಟಲ್” (ನೀರಿನಿಂದ ಆಗಿರುವ ಗಾಯ) ಹೆಸರಿನ ಡಾಕ್ಯುಮೆಂಟರಿ ಮೂಲಕ ಈ ಅಮರ ಪ್ರೇಮ ಕತೆಯನ್ನು 2006ರಲ್ಲಿ ಜಗತ್ತಿಗೆ ತಿಳಿಸಿದ ಕೇರಳದ ಪತ್ರಕರ್ತ ವಿಮಲ್, 2015ರಲ್ಲಿ ಇದೇ ರಿಯಲ್ ಸ್ಟೋರಿಯನ್ನು “ಎನ್ನುಂ ನಿಂಡೆ ಮೊಯ್ದಿನ್“( ಎಂದಿಗೂ ನಿನ್ನ ಮೊಯ್ದಿನ್) ಹೆಸರಿನ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ತಂದಿದ್ದರು. ಪೃಥ್ವಿರಾಜ್ ಮತ್ತು ಪಾರ್ವತಿ ಮೆನನ್ ನಟನೆಯ ಈ ಚಿತ್ರ ಮಾಲಿವುಡ್ ಬಾಕ್ಸ್ ಆಫೀಸಿನಲ್ಲಿ ಅಬ್ಬರ ಮಾಡಿತ್ತು. ಈ ಸಿನಿಮಾದ ‘ಮುಕ್ಕತ್ತೆ ಪೆಣ್ಣೆ’ ಹಾಡು ಪ್ರೇಮಿಗಳ ಪಾಲಿಗೆ ಪವಿತ್ರ ಗೀತೆ..

ಅಮರ ಪ್ರೇಮ ಅಂದರೆ ರೋಮಿಯೋ-ಜೂಲಿಯೆಟ್,, ಲೈಲಾ- ಮಜ್ನು, ಸಲೀಂ-ಅನಾರ್ಕಲಿ ಅಂತ ಜಗತ್ತು ನೆನಪು ಮಾಡಬಹುದು. ಆದ್ರೆ ಕೇರಳಕ್ಕೆ ಮಾತ್ರ ಮೊಯ್ದಿನ್- ಕಾಂಚನ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending