Connect with us

ಸಿನಿ ಸುದ್ದಿ

ಮಲಯಾಳಿ ಮನಸ್ಸುಗಳಲ್ಲಿ ಪ್ರೀತಿ-ಪ್ರೇಮದ ಕಿಡಿ ಹೊತ್ತಿಸಿದ ‘ಮೊಯ್ದಿನ್’..!

Published

on

  • ಶಫಿಕ್ ಅಬ್ಬಾಸ್

1960-70ರ ದಶಕದಲ್ಲಿ ಕೇರಳದ ಕಲ್ಲಿಕೋಟೆ ಜಿಲ್ಲೆಯ ಮುಕ್ಕಂ ಎಂಬ ಊರಿನಲ್ಲಿ ತುಂಬಾ ಆತ್ಮೀಯವಾಗಿದ್ದ ಎರಡು ಕುಟುಂಬದ ಕುಡಿಗಳು ಧರ್ಮವನ್ನೇ ಮೀರಿ ಪ್ರೀತಿಸಿದ್ದರು. ಸಂಪ್ರದಾಯಸ್ಥ ಹಿಂದೂ ಕುಟುಂಬದ ಕಾಂಚನಮಾಲಾ ಹಾಗೂ ಸಂಪ್ರದಾಯಸ್ಥ ಮುಸ್ಲಿಂ ಕುಟುಂಬದ ಬಿ.ಪಿ ಮೊಯ್ದಿನ್ ಪ್ರೀತಿಗೆ ಧರ್ಮ ಅಡ್ಡಿಯಾಗಿದ್ದರಲ್ಲಿ ಅಚ್ಚರಿ ಏನೂ ಇಲ್ಲ. ಅಲ್ಲಾಹ್ ಏಸು ಈಶ್ವರನ ಮೇಲಾಣೆ; ಅದು ಲವ್ ಜಿಹಾದ್ ಅಲ್ಲ, ಶುದ್ಧ ಪ್ರೀತಿ. ಪರಸ್ಪರ ಪ್ರೀತಿಯೇ ಅವರ ಜೀವನ ಆಗಿತ್ತು. ಸಂಪ್ರದಾಯಸ್ಥರ ಮನೆಯಲ್ಲಿ ಹುಟ್ಟಿ ಬೆಳೆದಿದ್ದರೂ ಇಬ್ಬರದ್ದು ರೆಬೆಲ್ ಪರ್ಸನಾಲಿಟಿ..

ಪ್ರೀತಿಸುವುದೇ ಅಪರಾಧವಾಗಿದ್ದ ಆ ಕಾಲದಲ್ಲಿ ‘ಹಿಂದೂ-ಮುಸ್ಲಿಂ’ ಪ್ರೀತಿಯನ್ನು ಯಾರಾದರೂ ಒಪ್ಪಿಯಾರೇ? ಕಾಲೇಜು ಕಲೀತಿದ್ದ ಕಾಂಚನಮಾಲಾಗೆ ಗೃಹಬಂಧನದ ಶಿಕ್ಷೆ.. ತನ್ನ ಆಪ್ತ ಮಿತ್ರನ ಮಗಳನ್ನೇ ಪ್ರೀತಿಸಿದ ಕಾರಣಕ್ಕೆ ಮೊಯ್ದಿನ್ ನ ಮುಂಗೋಪಿ ಅಪ್ಪ ತನ್ನ ಕರುಳ ಕುಡಿಯನ್ನೇ ಗುಂಡಿಕ್ಕಿ ಕೊಲ್ಲಲು ಪ್ರಯತ್ನ ಮಾಡಿದ್ದ.

ಮತ್ತೊಮ್ಮೆ 22 ಬಾರಿ ಇರಿದು ಸೀದಾ ಪೊಲೀಸ್ ಠಾಣೆಗೆ ಹೋದ ಮೊಯ್ದಿನ್ ಅಪ್ಪ, ‘ಮಗನನ್ನು ನಾನೇ ಕೊಂದೆ’ ಅಂತ ಶರಣಾಗಿದ್ದ. ಮೊಯ್ದಿನ್ ಪವಾಡದ ರೀತಿ ಬದುಕುಳಿದಿದ್ದ. “ನನಗ್ಯಾರು ಇರಿದಿಲ್ಲ, ನಾನೇ ಬಿದ್ದು ಗಾಯಗೊಂಡೆ” ಎಂದು ಕೋರ್ಟ್ ಕಟಕಟೆಯಲ್ಲಿ ಸುಳ್ಳು ಹೇಳಿ ಶಿಕ್ಷೆಯಿಂದ ಅಪ್ಪನನ್ನು ಪಾರು ಮಾಡಿದ್ದ. ‘ನನ್ನನ್ನು ಕೊಂದರೂ ನಮ್ಮ ಪ್ರೀತಿ ಸಾಯಲ್ಲ’ ಎಂದು ಹಠ ಹಿಡಿದಿದ್ದ ಮೊಯ್ದಿನ್ ಕೊನೆಗೆ ಹುಟ್ಟಿದ ಮನೆಯಿಂದಲೇ ಹೊರದಬ್ಬಲ್ಪಟ್ಟಿದ್ದ.

ಉಲ್ಲಾಟಿಲ್ ಉನ್ನಿ ಮೊಯ್ದಿನ್ ಸಾಹೇಬರ ಮಗ ಮೊಯ್ದಿನ್ ಹಾಗೂ ಕೊಟ್ಟಂಗಲ್ ಅಚ್ಯುತನ್ ಅವರ ಮಗಳು ಕಾಂಚನಮಾಲಾ ಮಧ್ಯೆ ಪ್ರೀತಿಗೆ ಕಿಚ್ಚು ಹಚ್ಚಿದ್ದು ಮುಕ್ಕಂನಲ್ಲಿ ಹರಿಯುವ ಇರುವಂಜಿ ನದಿ. ಈ ನದಿ ದಂಡೆಯಲ್ಲಿ ಪ್ರೇಮ ಹಕ್ಕಿಗಳು ಬರೋಬ್ಬರಿ ಹತ್ತು ವರ್ಷಗಳ ಬಳಿಕ ಮುಖಾಮುಖಿಯಾದಾಗ ಕಣ್ಣುಗಳೇ ಮಾತಾಡಿ ನಿಟ್ಟುಸಿರು ಬಿಟ್ಟಿದ್ದವು.

‘ಇರುವಂಜಿಪುಝ ಹರಿದು ಅರಬ್ಬಿ ಸಮುದ್ರವನ್ನು ಸೇರುವ ಹಾಗೆ ನಾವು ಒಂದು ದಿನ ಜೊತೆಯಾಗಿ ಬಾಳೋದು ಸತ್ಯ’ ಎಂದು ಮೊಯ್ದಿನ್ ಮಾತು ಕೊಟ್ಟಿದ್ದ. ಕಾಂಚನಾಳ ಈ ಸುದೀರ್ಘ ಗೃಹ ಬಂಧನದ ಸಮಯದಲ್ಲಿ ಇಬ್ಬರ ಮಧ್ಯೆ ಪತ್ರ ವ್ಯವಹಾರ ಮಾತ್ರ ನಡೀತಿತ್ತು. ಯಾರಿಗೂ ಗೊತ್ತಾಗಬಾರದೆಂಬ ಕಾರಣಕ್ಕೆ ತನ್ನ ಪ್ರೇಮ ಪತ್ರಕ್ಕೆ ಹೊಸ ಲಿಪಿ ಕಂಡುಹಿಡಿದಿದ್ದಳು ಕಾಂಚನ. ಈ ಜಗತ್ತಿನಲ್ಲಿ ಮೊಯ್ದಿನ್ ಮತ್ತು ಕಾಂಚನಾಳಿಗೆ ಮಾತ್ರ ಓದೋಕೆ ಬರೆಯೋಕೆ ಸಾಧ್ಯವಿರುವ ಲಿಪಿ ಅದು.

ಇರುವಂಜಿ ನದಿ ಹರಿದು ಸಮುದ್ರ ಸೇರಲು ಒಂದಷ್ಟು ದಿನಗಳಾಗುತ್ತೆ ಅಂತ ನಂಬಿಕೊಂಡಿದ್ದ ಈ ಜೋಡಿ ಕಾಯುವಿಕೆಯನ್ನೂ ಪ್ರೀತಿಸಿದ್ದರು. ಪ್ರೀತಿಗೆ ಮನೆಯವರು ಒಪ್ಪುತ್ತಿಲ್ಲ ಎಂಬ ಸಿಟ್ಟಲ್ಲಿ ಈಗಿನ ಜಮಾನದವರಂತೆ ಓಡಿಹೋಗಲಿಲ್ಲ. ಎರಡು ದಶಕಗಳ ಕಾಲ ಮನೆಯವರ ಒಪ್ಪಿಗೆಗಾಗಿ ಕಾದು ಕುಳಿತರು.

ಆದರೆ ಹೆತ್ತವರ ಮನಸು ಬದಲಾಗಲಿಲ್ಲ. ‘ಹುಡುಗಿ ಇಸ್ಲಾಮಿಗೆ ಮತಾಂತರವಾದರೆ ಓಕೆ’ ಎಂಬ ಅಂತಿಮ ಆಯ್ಕೆಯ ಸಂದೇಶ ಅಪ್ಪನ ಕಡೆಯಿಂದ ಬಂದಾಗ “ಆಕೆ ಮತಾಂತರವಾದ ಕ್ಷಣವೇ ನನ್ನ ಪ್ರೀತಿ ಅಂತ್ಯಗೊಳ್ಳುತ್ತೆ” ಎಂಬ ಉದಾತ್ತ ಧರ್ಮ ಸಹಿಷ್ಣುತೆಯ ಸಂದೇಶ ಮೊಯ್ದಿನ್ ಕಡೆಯಿಂದ ರವಾನೆಯಾಗಿತ್ತು.

ಅಪ್ಪ ಕಟ್ಟಾ ಕಾಂಗ್ರೆಸ್ಸಿಗನಾದರೂ ಮಗ ಮೊಯ್ದಿನ್ ಪಕ್ಕಾ ಸೋಷಿಯಲಿಸ್ಟ್. ಪ್ರಜಾ ಸೋಷಿಯಲಿಸ್ಟ್ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದ ಮೂಗು ಮುಟ್ಟೋಕೂ ಸಾಧ್ಯವಿಲ್ಲ ಎಂದು ಅಪ್ಪ‌ ಮೂದಲಿಸಿದಾಗ ಮುಕ್ಕಂನಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷ ಸಂಘಟಿಸಿ ಕಾಂಗ್ರೆಸಿಗರೇ ಮೂಗು ಮುಟ್ಟಿ ನೋಡಿಕೊಳ್ಳುವಂತೆ ಮಾಡಿದ್ದು ಮೊಯ್ದಿನ್ ಹೆಗ್ಗಳಿಕೆ. ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಮೊಯ್ದಿನ್ ಜನಪ್ರತಿನಿಧಿಯೂ ಆಗಿದ್ದ.

ಮುಕ್ಕಂ ಮಣ್ಣಿನ ಅಪತ್ಬಾಂದವನಾಗಿದ್ದ ಮೊಯ್ದಿನ್ ಬಹುಮುಖ ಪ್ರತಿಭೆ. ಪತ್ರಕರ್ತ, ಛಾಯಗ್ರಾಹಕ, ಲೇಖಕ, ಪ್ರಕಾಶಕ, ನಿರ್ದೇಶಕ, ನಿರ್ಮಾಪಕ, ಜನನಾಯಕ.. ಉತ್ತಮ ಫುಟ್ಬಾಲ್ ಆಟಗಾರ, ನುರಿತ ಈಜುಗಾರ, ಆಟಗಾರ-ಓಟಗಾರ, ಖಡಕ್ ಹೋರಾಟಗಾರ. ಮುಕ್ಕಂನ ಸಮಸ್ಯೆಗೆ ಪರಿಹಾರ ಬೇಕಾದರೆ ಅಲ್ಲಿ ಮೊಯ್ದಿನ್ ಇರಲೇಬೇಕಿತ್ತು. “ಕೇರಳದ ಹುಡುಗಿಯರು ಪ್ರೀತಿ ಮಾಡಿ ಓಡಿಹೋಗಲು ಕಾರಣಾಗಿರುವ ನಟ”, ಕೇರಳಿಯರ ನೆಚ್ಚಿನ ಸಿನಿಮಾ ಹೀರೋ ಪೃಥ್ವಿರಾಜ್ ಗೂ ಈ ಮೊಯ್ದಿನೇ ರಿಯಲ್ ಹೀರೋ.

60 ದಶಕದ ಪ್ರೀತಿ 80ರ ದಶಕವನ್ನು ದಾಟಿತ್ತು. ದಿನಗಳು ಊರುಳುತ್ತಾನೇ ಇತ್ತು. ಗೃಹಬಂಧನದಲ್ಲಿದ್ದ ಕಾಂಚನ,, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಮೊಯ್ದಿನ್.. ಇಬ್ಬರ ವಯಸ್ಸು 40ರ ಗಡಿ ದಾಟಿತ್ತು. ಆದರೆ ಪರಸ್ಪರ ಪ್ರೀತಿ ಚೂರು ಕಡಿಮೆಯಾಗಿರಲಿಲ್ಲ. ದೂರದಲ್ಲೇ ಇದ್ದು ಗಾಢವಾಗಿ ಪ್ರೀತಿಸುತ್ತಲೇ ಇದ್ದರು.

1982ರ ಮಳೆಗಾಲದ ಸಮಯ. ಆ ದಿನ ಮುಕ್ಕಂನಲ್ಲಿ ಮಳೆಯ ಆರ್ಭಟ ಜೋರಿತ್ತು. ಇರುವಂಜಿ ನದಿಯ ನೀರಿನ ಮಟ್ಟ ಕೂಡ ಏರಿತ್ತು. 10 ಜನರ ಕೆಪಾಸಿಟಿ ಇರುವ ದೋಣಿಯಲ್ಲಿ 30 ಮಂದಿ ತೂರಿಕೊಂಡಿದ್ದರು. ಮುಂದಾಗುವ ಅನಾಹುತದ ಸುಳಿವು ಯಾರಿಗೂ ಇರಲಿಲ್ಲ. ನದಿದಂಡೆಯಿಂದ ಹತ್ತಿಪ್ಪತ್ತು ಮೀಟರ್ ದೂರ ಸಾಗುತ್ತಿದ್ದಂತೆ ದೋಣಿ ಮಗುಚಿ ಬಿತ್ತು. ಮುಕ್ಕಂ‌ನ ಆಪತ್ಬಾಂದವ ಮೊಯ್ದಿನ್ ಶಾಲಾ ಮಕ್ಕಳು, ಮಹಿಳೆಯರು ಸೇರಿದಂತೆ ಮುಳುಗುತ್ತಿದ್ದವರ ರಕ್ಷಣೆಗೆ ಧುಮುಕಿದ್ದ. ಆಳಕ್ಕೆ ಹೋಗಿ ಒಬ್ಬರನ್ನೇ ತಂದು ದಡ ಮುಟ್ಟಿಸುತ್ತಿದ್ದ. “ನನ್ನ ಬಗ್ಗೆ ಚಿಂತೆ ಬಿಡಿ, ಬೇರೆಯವರನ್ನು ನೋಡಿ” ಎಂದು ಹೇಳಿ ಕೊನೆಯದಾಗಿ ಆಳಕ್ಕೆ ಹೋದ ಮೊಯ್ದಿನ್ ಮರಳಿ ಬರಲೇ ಇಲ್ಲ.

ಆಳದಲ್ಲಿದ್ದ ನೀರಿನ ಸುಳಿ ಮೊಯ್ದಿನ್ ನ ಬಲಿ ಪಡೆದಿತ್ತು. ಸಮಾಜಕ್ಕಾಗಿ ತನ್ನ ಜೀವನ ಮುಡುಪಾಗಿಟ್ಟಿದ್ದ ಮೊಯ್ದಿನ್ ಬೇರೆಯವರ ಜೀವ ಉಳಿಸಲು ತನ್ನ ಪ್ರಾಣವನ್ನೇ ತ್ಯಾಗ ಮಾಡಿದ್ದ. ಮೂರು ದಿನಗಳ ಬಳಿಕ ಶವ ಮೇಲೆ ಬಂದಾಗಲೂ ಮುಕ್ಕಂನ ಕಣ್ಣೀರು ಕೊನೆಯಾಗಿರಲಿಲ್ಲ. ಮಳೆಯ ರೂಪದಲ್ಲಿ ಕಣ್ಣೀರು ಸುರಿಸುತ್ತ ಆ ವಿಧಿ ಕೂಡ ಪಶ್ಚತಾಪ ಪಟ್ಟಿತ್ತು. ಆ ಕಾಲದಲ್ಲಿ ಮುಕ್ಕಂನ ಮಣ್ಣಿನಲ್ಲಿ ನಿಂತು ಇಂದಿರಾ ಗಾಂಧಿಯ ನೀತಿಗಳ ವಿರುದ್ಧ ಧಿಕ್ಕಾರ ಕೂಗುತ್ತಿದ್ದ ಮೊಯ್ದಿನ್ ಗೆ 1983ರಲ್ಲಿ ಇಂದಿರಾ ಗಾಂಧಿಯ ಸರ್ಕಾರವೇ ಮರಣೋತ್ತರ ಜೀವನ್ ರಕ್ಷಾ ಪದಕ ನೀಡಿ ಗೌರವಿಸಿತ್ತು.

ಪ್ರಿಯಕರನ ಸಾವಿನ ಸುದ್ದಿ ಕೇಳಿ ಕುಸಿದು ಹೋಗಿದ್ದ ಕಾಂಚನಾಳಿಗೆ, ಮೊಯ್ದಿನ್ ಮುಖ ನೋಡಬೇಕೆಂಬ ಕೊನೆ ಆಸೆಯೂ ಈಡೇರಲಿಲ್ಲ. ಮೊಯ್ದಿನ್ ಸಮಾಧಿಯಾಗುವುದರ ಜೊತೆಯಲ್ಲೇ ಅಪ್ಪಟ ಪ್ರೀತಿಯೊಂದಕ್ಕೆ ಗೋರಿ ಕಟ್ಟಲಾಯಿತು. ಮೊಯ್ದಿನ್ ಇಲ್ಲದ ಜಗತ್ತಿನಲ್ಲಿ ಬದುಕಬೇಕೆಂಬ ಯಾವ ಆಸೆಯೂ ಕಾಂಚನಾಳಿಗೆ ಇರಲಿಲ್ಲ. ಐದು ಬಾರಿ ಆತ್ಮಹತ್ಯೆಗೆ ಯತ್ನಿಸಿದಾಗಲೂ ಮನೆಯವರು ತಡೆಯಾದರು.

ಆರನೇ ಪ್ರಯತ್ನದಲ್ಲಿ ಆಸ್ಪತ್ರೆ ಸೇರಿ ಕಣ್ಣುಬಿಟ್ಟಾಗ ಕಾಂಚನಾಳ ಮುಂದೆ ಮೊಯ್ದಿನ್ ತಾಯಿ ನಿಂತಿದ್ದರು. ಮೊಯ್ದಿನ್-ಕಾಂಚನ ಮದುವೆಯಾಗದಿದ್ದರೂ ಹಿಂದೂ ಹುಡುಗಿಯನ್ನು ವಿಧವಾ ಸೊಸೆಯಾಗಿ ಸ್ವೀಕರಿಸಿದಳು ಮೊಯ್ದಿನ್ ಉಮ್ಮ. ಆತ್ಮಹತ್ಯೆ ನಿರ್ಧಾರದಿಂದ ಹಿಂದೆ ಸರಿದ ಕಾಂಚನ, ಮೃತ ಪ್ರಿಯಕರನ ಮನೆ ಸೇರಿಕೊಂಡಳು. ಹಿಂದೂವಾಗಿದ್ದುಕೊಂಡೇ ಮುಸ್ಲಿಂ ಮನೆಯಲ್ಲಿ ಹೊಸ ಜೀವನ ಶುರು ಮಾಡಿದಳು.

79 ವರ್ಷ ವಯಸ್ಸಿನ ಕಾಂಚನ ಅಮ್ಮ, ಮೊಯ್ದಿನ್ ಎಂಬ ಅಮರ ಪ್ರೇಮಿಯ ನೆನಪಲ್ಲಿ ಈಗಲೂ ಅದೇ ಮನೆಯಲ್ಲಿದ್ದಾರೆ. ಮುಕ್ಕಂನ ಮಳೆಯಲಿ ನಡೆಯುತ್ತ, ಇರುವಂಜಿ ನದಿ ದಂಡೆಯಲ್ಲಿ ವಿಹರಿಸುತ್ತ, ಖಬರಸ್ಥಾನದಲ್ಲಿ ಮೊಯ್ದಿನ್ ಸಮಾಧಿ ಸಂದರ್ಶನ ಮಾಡುತ್ತ ತಮ್ಮ ಪ್ರೀತಿಯನ್ನು ಜೀವಂತವಾಗಿಟ್ಟಿದ್ದಾರೆ ದೇವರ ನಾಡಿನ ಬ್ಯಾಚುಲರ್ ವಿಧವೆ ಕಾಂಚನಮಾಲಾ.

ಇವತ್ತು ಜುಲೈ 15.. ಸರಿಯಾಗಿ 37 ವರ್ಷಗಳ ಹಿಂದೆ ಇದೇ ದಿನದಂದು ಇರುವಂಜಿ ನದಿ ಮೊಯ್ದಿನ್ ಎಂಬ ಮಹಾತ್ಮನನ್ನು ಬಲಿ ಪಡೆದಿತ್ತು. ಮೊಯ್ದಿನ್ ಈ ಜಗತ್ತಿನಲ್ಲಿ ಇಲ್ಲದಿದ್ದರೂ ಆತನ ಪ್ರೀತಿ ಇವತ್ತಿಗೂ ಅಮರ. ಮೊಯ್ದಿನ್ ಹುಟ್ಟಿ ಬೆಳೆದಿದ್ದ ಮನೆ ಈಗ ಮೊಯ್ದಿನ್ ಸೇವಾ ಮಂದಿರವಾಗಿ ಬದಲಾಗಿದೆ. ತನ್ನ ಮನೆಯನ್ನು ಮೊಯ್ದಿನ್ ತಾಯಿ ‘ವಿಧವಾ ಸೊಸೆಗೆ’ ಕೊಟ್ಟು ನಿರ್ಗಮಿಸಿದ್ದರು. ಹಿರಿಯ ಜೀವ ಕಾಂಚನಮಾಲಾ ಸೇವಾ ಮಂದಿರದ ಮೂಲಕ ಮೊಯ್ದಿನ್ ಅರ್ಧದಲ್ಲಿ ಬಿಟ್ಟುಹೋಗಿದ್ದ ಕನಸುಗಳನ್ನು ಪೂರ್ತಿ ಮಾಡುತ್ತಿದ್ದಾರೆ.

“ಜಲಂ ಕೊಂಡು ಮುರಿವೇಟಲ್” (ನೀರಿನಿಂದ ಆಗಿರುವ ಗಾಯ) ಹೆಸರಿನ ಡಾಕ್ಯುಮೆಂಟರಿ ಮೂಲಕ ಈ ಅಮರ ಪ್ರೇಮ ಕತೆಯನ್ನು 2006ರಲ್ಲಿ ಜಗತ್ತಿಗೆ ತಿಳಿಸಿದ ಕೇರಳದ ಪತ್ರಕರ್ತ ವಿಮಲ್, 2015ರಲ್ಲಿ ಇದೇ ರಿಯಲ್ ಸ್ಟೋರಿಯನ್ನು “ಎನ್ನುಂ ನಿಂಡೆ ಮೊಯ್ದಿನ್“( ಎಂದಿಗೂ ನಿನ್ನ ಮೊಯ್ದಿನ್) ಹೆಸರಿನ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ತಂದಿದ್ದರು. ಪೃಥ್ವಿರಾಜ್ ಮತ್ತು ಪಾರ್ವತಿ ಮೆನನ್ ನಟನೆಯ ಈ ಚಿತ್ರ ಮಾಲಿವುಡ್ ಬಾಕ್ಸ್ ಆಫೀಸಿನಲ್ಲಿ ಅಬ್ಬರ ಮಾಡಿತ್ತು. ಈ ಸಿನಿಮಾದ ‘ಮುಕ್ಕತ್ತೆ ಪೆಣ್ಣೆ’ ಹಾಡು ಪ್ರೇಮಿಗಳ ಪಾಲಿಗೆ ಪವಿತ್ರ ಗೀತೆ..

ಅಮರ ಪ್ರೇಮ ಅಂದರೆ ರೋಮಿಯೋ-ಜೂಲಿಯೆಟ್,, ಲೈಲಾ- ಮಜ್ನು, ಸಲೀಂ-ಅನಾರ್ಕಲಿ ಅಂತ ಜಗತ್ತು ನೆನಪು ಮಾಡಬಹುದು. ಆದ್ರೆ ಕೇರಳಕ್ಕೆ ಮಾತ್ರ ಮೊಯ್ದಿನ್- ಕಾಂಚನ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending