ಸಿನಿ ಸುದ್ದಿ
ಮಲಯಾಳಿ ಮನಸ್ಸುಗಳಲ್ಲಿ ಪ್ರೀತಿ-ಪ್ರೇಮದ ಕಿಡಿ ಹೊತ್ತಿಸಿದ ‘ಮೊಯ್ದಿನ್’..!
- ಶಫಿಕ್ ಅಬ್ಬಾಸ್
1960-70ರ ದಶಕದಲ್ಲಿ ಕೇರಳದ ಕಲ್ಲಿಕೋಟೆ ಜಿಲ್ಲೆಯ ಮುಕ್ಕಂ ಎಂಬ ಊರಿನಲ್ಲಿ ತುಂಬಾ ಆತ್ಮೀಯವಾಗಿದ್ದ ಎರಡು ಕುಟುಂಬದ ಕುಡಿಗಳು ಧರ್ಮವನ್ನೇ ಮೀರಿ ಪ್ರೀತಿಸಿದ್ದರು. ಸಂಪ್ರದಾಯಸ್ಥ ಹಿಂದೂ ಕುಟುಂಬದ ಕಾಂಚನಮಾಲಾ ಹಾಗೂ ಸಂಪ್ರದಾಯಸ್ಥ ಮುಸ್ಲಿಂ ಕುಟುಂಬದ ಬಿ.ಪಿ ಮೊಯ್ದಿನ್ ಪ್ರೀತಿಗೆ ಧರ್ಮ ಅಡ್ಡಿಯಾಗಿದ್ದರಲ್ಲಿ ಅಚ್ಚರಿ ಏನೂ ಇಲ್ಲ. ಅಲ್ಲಾಹ್ ಏಸು ಈಶ್ವರನ ಮೇಲಾಣೆ; ಅದು ಲವ್ ಜಿಹಾದ್ ಅಲ್ಲ, ಶುದ್ಧ ಪ್ರೀತಿ. ಪರಸ್ಪರ ಪ್ರೀತಿಯೇ ಅವರ ಜೀವನ ಆಗಿತ್ತು. ಸಂಪ್ರದಾಯಸ್ಥರ ಮನೆಯಲ್ಲಿ ಹುಟ್ಟಿ ಬೆಳೆದಿದ್ದರೂ ಇಬ್ಬರದ್ದು ರೆಬೆಲ್ ಪರ್ಸನಾಲಿಟಿ..
ಪ್ರೀತಿಸುವುದೇ ಅಪರಾಧವಾಗಿದ್ದ ಆ ಕಾಲದಲ್ಲಿ ‘ಹಿಂದೂ-ಮುಸ್ಲಿಂ’ ಪ್ರೀತಿಯನ್ನು ಯಾರಾದರೂ ಒಪ್ಪಿಯಾರೇ? ಕಾಲೇಜು ಕಲೀತಿದ್ದ ಕಾಂಚನಮಾಲಾಗೆ ಗೃಹಬಂಧನದ ಶಿಕ್ಷೆ.. ತನ್ನ ಆಪ್ತ ಮಿತ್ರನ ಮಗಳನ್ನೇ ಪ್ರೀತಿಸಿದ ಕಾರಣಕ್ಕೆ ಮೊಯ್ದಿನ್ ನ ಮುಂಗೋಪಿ ಅಪ್ಪ ತನ್ನ ಕರುಳ ಕುಡಿಯನ್ನೇ ಗುಂಡಿಕ್ಕಿ ಕೊಲ್ಲಲು ಪ್ರಯತ್ನ ಮಾಡಿದ್ದ.
ಮತ್ತೊಮ್ಮೆ 22 ಬಾರಿ ಇರಿದು ಸೀದಾ ಪೊಲೀಸ್ ಠಾಣೆಗೆ ಹೋದ ಮೊಯ್ದಿನ್ ಅಪ್ಪ, ‘ಮಗನನ್ನು ನಾನೇ ಕೊಂದೆ’ ಅಂತ ಶರಣಾಗಿದ್ದ. ಮೊಯ್ದಿನ್ ಪವಾಡದ ರೀತಿ ಬದುಕುಳಿದಿದ್ದ. “ನನಗ್ಯಾರು ಇರಿದಿಲ್ಲ, ನಾನೇ ಬಿದ್ದು ಗಾಯಗೊಂಡೆ” ಎಂದು ಕೋರ್ಟ್ ಕಟಕಟೆಯಲ್ಲಿ ಸುಳ್ಳು ಹೇಳಿ ಶಿಕ್ಷೆಯಿಂದ ಅಪ್ಪನನ್ನು ಪಾರು ಮಾಡಿದ್ದ. ‘ನನ್ನನ್ನು ಕೊಂದರೂ ನಮ್ಮ ಪ್ರೀತಿ ಸಾಯಲ್ಲ’ ಎಂದು ಹಠ ಹಿಡಿದಿದ್ದ ಮೊಯ್ದಿನ್ ಕೊನೆಗೆ ಹುಟ್ಟಿದ ಮನೆಯಿಂದಲೇ ಹೊರದಬ್ಬಲ್ಪಟ್ಟಿದ್ದ.
ಉಲ್ಲಾಟಿಲ್ ಉನ್ನಿ ಮೊಯ್ದಿನ್ ಸಾಹೇಬರ ಮಗ ಮೊಯ್ದಿನ್ ಹಾಗೂ ಕೊಟ್ಟಂಗಲ್ ಅಚ್ಯುತನ್ ಅವರ ಮಗಳು ಕಾಂಚನಮಾಲಾ ಮಧ್ಯೆ ಪ್ರೀತಿಗೆ ಕಿಚ್ಚು ಹಚ್ಚಿದ್ದು ಮುಕ್ಕಂನಲ್ಲಿ ಹರಿಯುವ ಇರುವಂಜಿ ನದಿ. ಈ ನದಿ ದಂಡೆಯಲ್ಲಿ ಪ್ರೇಮ ಹಕ್ಕಿಗಳು ಬರೋಬ್ಬರಿ ಹತ್ತು ವರ್ಷಗಳ ಬಳಿಕ ಮುಖಾಮುಖಿಯಾದಾಗ ಕಣ್ಣುಗಳೇ ಮಾತಾಡಿ ನಿಟ್ಟುಸಿರು ಬಿಟ್ಟಿದ್ದವು.
‘ಇರುವಂಜಿಪುಝ ಹರಿದು ಅರಬ್ಬಿ ಸಮುದ್ರವನ್ನು ಸೇರುವ ಹಾಗೆ ನಾವು ಒಂದು ದಿನ ಜೊತೆಯಾಗಿ ಬಾಳೋದು ಸತ್ಯ’ ಎಂದು ಮೊಯ್ದಿನ್ ಮಾತು ಕೊಟ್ಟಿದ್ದ. ಕಾಂಚನಾಳ ಈ ಸುದೀರ್ಘ ಗೃಹ ಬಂಧನದ ಸಮಯದಲ್ಲಿ ಇಬ್ಬರ ಮಧ್ಯೆ ಪತ್ರ ವ್ಯವಹಾರ ಮಾತ್ರ ನಡೀತಿತ್ತು. ಯಾರಿಗೂ ಗೊತ್ತಾಗಬಾರದೆಂಬ ಕಾರಣಕ್ಕೆ ತನ್ನ ಪ್ರೇಮ ಪತ್ರಕ್ಕೆ ಹೊಸ ಲಿಪಿ ಕಂಡುಹಿಡಿದಿದ್ದಳು ಕಾಂಚನ. ಈ ಜಗತ್ತಿನಲ್ಲಿ ಮೊಯ್ದಿನ್ ಮತ್ತು ಕಾಂಚನಾಳಿಗೆ ಮಾತ್ರ ಓದೋಕೆ ಬರೆಯೋಕೆ ಸಾಧ್ಯವಿರುವ ಲಿಪಿ ಅದು.
ಇರುವಂಜಿ ನದಿ ಹರಿದು ಸಮುದ್ರ ಸೇರಲು ಒಂದಷ್ಟು ದಿನಗಳಾಗುತ್ತೆ ಅಂತ ನಂಬಿಕೊಂಡಿದ್ದ ಈ ಜೋಡಿ ಕಾಯುವಿಕೆಯನ್ನೂ ಪ್ರೀತಿಸಿದ್ದರು. ಪ್ರೀತಿಗೆ ಮನೆಯವರು ಒಪ್ಪುತ್ತಿಲ್ಲ ಎಂಬ ಸಿಟ್ಟಲ್ಲಿ ಈಗಿನ ಜಮಾನದವರಂತೆ ಓಡಿಹೋಗಲಿಲ್ಲ. ಎರಡು ದಶಕಗಳ ಕಾಲ ಮನೆಯವರ ಒಪ್ಪಿಗೆಗಾಗಿ ಕಾದು ಕುಳಿತರು.
ಆದರೆ ಹೆತ್ತವರ ಮನಸು ಬದಲಾಗಲಿಲ್ಲ. ‘ಹುಡುಗಿ ಇಸ್ಲಾಮಿಗೆ ಮತಾಂತರವಾದರೆ ಓಕೆ’ ಎಂಬ ಅಂತಿಮ ಆಯ್ಕೆಯ ಸಂದೇಶ ಅಪ್ಪನ ಕಡೆಯಿಂದ ಬಂದಾಗ “ಆಕೆ ಮತಾಂತರವಾದ ಕ್ಷಣವೇ ನನ್ನ ಪ್ರೀತಿ ಅಂತ್ಯಗೊಳ್ಳುತ್ತೆ” ಎಂಬ ಉದಾತ್ತ ಧರ್ಮ ಸಹಿಷ್ಣುತೆಯ ಸಂದೇಶ ಮೊಯ್ದಿನ್ ಕಡೆಯಿಂದ ರವಾನೆಯಾಗಿತ್ತು.
ಅಪ್ಪ ಕಟ್ಟಾ ಕಾಂಗ್ರೆಸ್ಸಿಗನಾದರೂ ಮಗ ಮೊಯ್ದಿನ್ ಪಕ್ಕಾ ಸೋಷಿಯಲಿಸ್ಟ್. ಪ್ರಜಾ ಸೋಷಿಯಲಿಸ್ಟ್ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದ ಮೂಗು ಮುಟ್ಟೋಕೂ ಸಾಧ್ಯವಿಲ್ಲ ಎಂದು ಅಪ್ಪ ಮೂದಲಿಸಿದಾಗ ಮುಕ್ಕಂನಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷ ಸಂಘಟಿಸಿ ಕಾಂಗ್ರೆಸಿಗರೇ ಮೂಗು ಮುಟ್ಟಿ ನೋಡಿಕೊಳ್ಳುವಂತೆ ಮಾಡಿದ್ದು ಮೊಯ್ದಿನ್ ಹೆಗ್ಗಳಿಕೆ. ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಮೊಯ್ದಿನ್ ಜನಪ್ರತಿನಿಧಿಯೂ ಆಗಿದ್ದ.
ಮುಕ್ಕಂ ಮಣ್ಣಿನ ಅಪತ್ಬಾಂದವನಾಗಿದ್ದ ಮೊಯ್ದಿನ್ ಬಹುಮುಖ ಪ್ರತಿಭೆ. ಪತ್ರಕರ್ತ, ಛಾಯಗ್ರಾಹಕ, ಲೇಖಕ, ಪ್ರಕಾಶಕ, ನಿರ್ದೇಶಕ, ನಿರ್ಮಾಪಕ, ಜನನಾಯಕ.. ಉತ್ತಮ ಫುಟ್ಬಾಲ್ ಆಟಗಾರ, ನುರಿತ ಈಜುಗಾರ, ಆಟಗಾರ-ಓಟಗಾರ, ಖಡಕ್ ಹೋರಾಟಗಾರ. ಮುಕ್ಕಂನ ಸಮಸ್ಯೆಗೆ ಪರಿಹಾರ ಬೇಕಾದರೆ ಅಲ್ಲಿ ಮೊಯ್ದಿನ್ ಇರಲೇಬೇಕಿತ್ತು. “ಕೇರಳದ ಹುಡುಗಿಯರು ಪ್ರೀತಿ ಮಾಡಿ ಓಡಿಹೋಗಲು ಕಾರಣಾಗಿರುವ ನಟ”, ಕೇರಳಿಯರ ನೆಚ್ಚಿನ ಸಿನಿಮಾ ಹೀರೋ ಪೃಥ್ವಿರಾಜ್ ಗೂ ಈ ಮೊಯ್ದಿನೇ ರಿಯಲ್ ಹೀರೋ.
60 ದಶಕದ ಪ್ರೀತಿ 80ರ ದಶಕವನ್ನು ದಾಟಿತ್ತು. ದಿನಗಳು ಊರುಳುತ್ತಾನೇ ಇತ್ತು. ಗೃಹಬಂಧನದಲ್ಲಿದ್ದ ಕಾಂಚನ,, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಮೊಯ್ದಿನ್.. ಇಬ್ಬರ ವಯಸ್ಸು 40ರ ಗಡಿ ದಾಟಿತ್ತು. ಆದರೆ ಪರಸ್ಪರ ಪ್ರೀತಿ ಚೂರು ಕಡಿಮೆಯಾಗಿರಲಿಲ್ಲ. ದೂರದಲ್ಲೇ ಇದ್ದು ಗಾಢವಾಗಿ ಪ್ರೀತಿಸುತ್ತಲೇ ಇದ್ದರು.
1982ರ ಮಳೆಗಾಲದ ಸಮಯ. ಆ ದಿನ ಮುಕ್ಕಂನಲ್ಲಿ ಮಳೆಯ ಆರ್ಭಟ ಜೋರಿತ್ತು. ಇರುವಂಜಿ ನದಿಯ ನೀರಿನ ಮಟ್ಟ ಕೂಡ ಏರಿತ್ತು. 10 ಜನರ ಕೆಪಾಸಿಟಿ ಇರುವ ದೋಣಿಯಲ್ಲಿ 30 ಮಂದಿ ತೂರಿಕೊಂಡಿದ್ದರು. ಮುಂದಾಗುವ ಅನಾಹುತದ ಸುಳಿವು ಯಾರಿಗೂ ಇರಲಿಲ್ಲ. ನದಿದಂಡೆಯಿಂದ ಹತ್ತಿಪ್ಪತ್ತು ಮೀಟರ್ ದೂರ ಸಾಗುತ್ತಿದ್ದಂತೆ ದೋಣಿ ಮಗುಚಿ ಬಿತ್ತು. ಮುಕ್ಕಂನ ಆಪತ್ಬಾಂದವ ಮೊಯ್ದಿನ್ ಶಾಲಾ ಮಕ್ಕಳು, ಮಹಿಳೆಯರು ಸೇರಿದಂತೆ ಮುಳುಗುತ್ತಿದ್ದವರ ರಕ್ಷಣೆಗೆ ಧುಮುಕಿದ್ದ. ಆಳಕ್ಕೆ ಹೋಗಿ ಒಬ್ಬರನ್ನೇ ತಂದು ದಡ ಮುಟ್ಟಿಸುತ್ತಿದ್ದ. “ನನ್ನ ಬಗ್ಗೆ ಚಿಂತೆ ಬಿಡಿ, ಬೇರೆಯವರನ್ನು ನೋಡಿ” ಎಂದು ಹೇಳಿ ಕೊನೆಯದಾಗಿ ಆಳಕ್ಕೆ ಹೋದ ಮೊಯ್ದಿನ್ ಮರಳಿ ಬರಲೇ ಇಲ್ಲ.
ಆಳದಲ್ಲಿದ್ದ ನೀರಿನ ಸುಳಿ ಮೊಯ್ದಿನ್ ನ ಬಲಿ ಪಡೆದಿತ್ತು. ಸಮಾಜಕ್ಕಾಗಿ ತನ್ನ ಜೀವನ ಮುಡುಪಾಗಿಟ್ಟಿದ್ದ ಮೊಯ್ದಿನ್ ಬೇರೆಯವರ ಜೀವ ಉಳಿಸಲು ತನ್ನ ಪ್ರಾಣವನ್ನೇ ತ್ಯಾಗ ಮಾಡಿದ್ದ. ಮೂರು ದಿನಗಳ ಬಳಿಕ ಶವ ಮೇಲೆ ಬಂದಾಗಲೂ ಮುಕ್ಕಂನ ಕಣ್ಣೀರು ಕೊನೆಯಾಗಿರಲಿಲ್ಲ. ಮಳೆಯ ರೂಪದಲ್ಲಿ ಕಣ್ಣೀರು ಸುರಿಸುತ್ತ ಆ ವಿಧಿ ಕೂಡ ಪಶ್ಚತಾಪ ಪಟ್ಟಿತ್ತು. ಆ ಕಾಲದಲ್ಲಿ ಮುಕ್ಕಂನ ಮಣ್ಣಿನಲ್ಲಿ ನಿಂತು ಇಂದಿರಾ ಗಾಂಧಿಯ ನೀತಿಗಳ ವಿರುದ್ಧ ಧಿಕ್ಕಾರ ಕೂಗುತ್ತಿದ್ದ ಮೊಯ್ದಿನ್ ಗೆ 1983ರಲ್ಲಿ ಇಂದಿರಾ ಗಾಂಧಿಯ ಸರ್ಕಾರವೇ ಮರಣೋತ್ತರ ಜೀವನ್ ರಕ್ಷಾ ಪದಕ ನೀಡಿ ಗೌರವಿಸಿತ್ತು.
ಪ್ರಿಯಕರನ ಸಾವಿನ ಸುದ್ದಿ ಕೇಳಿ ಕುಸಿದು ಹೋಗಿದ್ದ ಕಾಂಚನಾಳಿಗೆ, ಮೊಯ್ದಿನ್ ಮುಖ ನೋಡಬೇಕೆಂಬ ಕೊನೆ ಆಸೆಯೂ ಈಡೇರಲಿಲ್ಲ. ಮೊಯ್ದಿನ್ ಸಮಾಧಿಯಾಗುವುದರ ಜೊತೆಯಲ್ಲೇ ಅಪ್ಪಟ ಪ್ರೀತಿಯೊಂದಕ್ಕೆ ಗೋರಿ ಕಟ್ಟಲಾಯಿತು. ಮೊಯ್ದಿನ್ ಇಲ್ಲದ ಜಗತ್ತಿನಲ್ಲಿ ಬದುಕಬೇಕೆಂಬ ಯಾವ ಆಸೆಯೂ ಕಾಂಚನಾಳಿಗೆ ಇರಲಿಲ್ಲ. ಐದು ಬಾರಿ ಆತ್ಮಹತ್ಯೆಗೆ ಯತ್ನಿಸಿದಾಗಲೂ ಮನೆಯವರು ತಡೆಯಾದರು.
ಆರನೇ ಪ್ರಯತ್ನದಲ್ಲಿ ಆಸ್ಪತ್ರೆ ಸೇರಿ ಕಣ್ಣುಬಿಟ್ಟಾಗ ಕಾಂಚನಾಳ ಮುಂದೆ ಮೊಯ್ದಿನ್ ತಾಯಿ ನಿಂತಿದ್ದರು. ಮೊಯ್ದಿನ್-ಕಾಂಚನ ಮದುವೆಯಾಗದಿದ್ದರೂ ಹಿಂದೂ ಹುಡುಗಿಯನ್ನು ವಿಧವಾ ಸೊಸೆಯಾಗಿ ಸ್ವೀಕರಿಸಿದಳು ಮೊಯ್ದಿನ್ ಉಮ್ಮ. ಆತ್ಮಹತ್ಯೆ ನಿರ್ಧಾರದಿಂದ ಹಿಂದೆ ಸರಿದ ಕಾಂಚನ, ಮೃತ ಪ್ರಿಯಕರನ ಮನೆ ಸೇರಿಕೊಂಡಳು. ಹಿಂದೂವಾಗಿದ್ದುಕೊಂಡೇ ಮುಸ್ಲಿಂ ಮನೆಯಲ್ಲಿ ಹೊಸ ಜೀವನ ಶುರು ಮಾಡಿದಳು.
79 ವರ್ಷ ವಯಸ್ಸಿನ ಕಾಂಚನ ಅಮ್ಮ, ಮೊಯ್ದಿನ್ ಎಂಬ ಅಮರ ಪ್ರೇಮಿಯ ನೆನಪಲ್ಲಿ ಈಗಲೂ ಅದೇ ಮನೆಯಲ್ಲಿದ್ದಾರೆ. ಮುಕ್ಕಂನ ಮಳೆಯಲಿ ನಡೆಯುತ್ತ, ಇರುವಂಜಿ ನದಿ ದಂಡೆಯಲ್ಲಿ ವಿಹರಿಸುತ್ತ, ಖಬರಸ್ಥಾನದಲ್ಲಿ ಮೊಯ್ದಿನ್ ಸಮಾಧಿ ಸಂದರ್ಶನ ಮಾಡುತ್ತ ತಮ್ಮ ಪ್ರೀತಿಯನ್ನು ಜೀವಂತವಾಗಿಟ್ಟಿದ್ದಾರೆ ದೇವರ ನಾಡಿನ ಬ್ಯಾಚುಲರ್ ವಿಧವೆ ಕಾಂಚನಮಾಲಾ.
ಇವತ್ತು ಜುಲೈ 15.. ಸರಿಯಾಗಿ 37 ವರ್ಷಗಳ ಹಿಂದೆ ಇದೇ ದಿನದಂದು ಇರುವಂಜಿ ನದಿ ಮೊಯ್ದಿನ್ ಎಂಬ ಮಹಾತ್ಮನನ್ನು ಬಲಿ ಪಡೆದಿತ್ತು. ಮೊಯ್ದಿನ್ ಈ ಜಗತ್ತಿನಲ್ಲಿ ಇಲ್ಲದಿದ್ದರೂ ಆತನ ಪ್ರೀತಿ ಇವತ್ತಿಗೂ ಅಮರ. ಮೊಯ್ದಿನ್ ಹುಟ್ಟಿ ಬೆಳೆದಿದ್ದ ಮನೆ ಈಗ ಮೊಯ್ದಿನ್ ಸೇವಾ ಮಂದಿರವಾಗಿ ಬದಲಾಗಿದೆ. ತನ್ನ ಮನೆಯನ್ನು ಮೊಯ್ದಿನ್ ತಾಯಿ ‘ವಿಧವಾ ಸೊಸೆಗೆ’ ಕೊಟ್ಟು ನಿರ್ಗಮಿಸಿದ್ದರು. ಹಿರಿಯ ಜೀವ ಕಾಂಚನಮಾಲಾ ಸೇವಾ ಮಂದಿರದ ಮೂಲಕ ಮೊಯ್ದಿನ್ ಅರ್ಧದಲ್ಲಿ ಬಿಟ್ಟುಹೋಗಿದ್ದ ಕನಸುಗಳನ್ನು ಪೂರ್ತಿ ಮಾಡುತ್ತಿದ್ದಾರೆ.
“ಜಲಂ ಕೊಂಡು ಮುರಿವೇಟಲ್” (ನೀರಿನಿಂದ ಆಗಿರುವ ಗಾಯ) ಹೆಸರಿನ ಡಾಕ್ಯುಮೆಂಟರಿ ಮೂಲಕ ಈ ಅಮರ ಪ್ರೇಮ ಕತೆಯನ್ನು 2006ರಲ್ಲಿ ಜಗತ್ತಿಗೆ ತಿಳಿಸಿದ ಕೇರಳದ ಪತ್ರಕರ್ತ ವಿಮಲ್, 2015ರಲ್ಲಿ ಇದೇ ರಿಯಲ್ ಸ್ಟೋರಿಯನ್ನು “ಎನ್ನುಂ ನಿಂಡೆ ಮೊಯ್ದಿನ್“( ಎಂದಿಗೂ ನಿನ್ನ ಮೊಯ್ದಿನ್) ಹೆಸರಿನ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ತಂದಿದ್ದರು. ಪೃಥ್ವಿರಾಜ್ ಮತ್ತು ಪಾರ್ವತಿ ಮೆನನ್ ನಟನೆಯ ಈ ಚಿತ್ರ ಮಾಲಿವುಡ್ ಬಾಕ್ಸ್ ಆಫೀಸಿನಲ್ಲಿ ಅಬ್ಬರ ಮಾಡಿತ್ತು. ಈ ಸಿನಿಮಾದ ‘ಮುಕ್ಕತ್ತೆ ಪೆಣ್ಣೆ’ ಹಾಡು ಪ್ರೇಮಿಗಳ ಪಾಲಿಗೆ ಪವಿತ್ರ ಗೀತೆ..
ಅಮರ ಪ್ರೇಮ ಅಂದರೆ ರೋಮಿಯೋ-ಜೂಲಿಯೆಟ್,, ಲೈಲಾ- ಮಜ್ನು, ಸಲೀಂ-ಅನಾರ್ಕಲಿ ಅಂತ ಜಗತ್ತು ನೆನಪು ಮಾಡಬಹುದು. ಆದ್ರೆ ಕೇರಳಕ್ಕೆ ಮಾತ್ರ ಮೊಯ್ದಿನ್- ಕಾಂಚನ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಸಿನಿ ಸುದ್ದಿ
ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್ಡೇ; 53ನೇ ವಸಂತದಲ್ಲಿ ಸುದೀಪ್ ಸಿನಿಮಾ ಸರ್ಪ್ರೈಸ್ಗೆ ಕೌಂಟ್ಡೌನ್!
ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಇಂದು, ಸೆಪ್ಟೆಂಬರ್ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್, ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ವೈಯಕ್ತಿಕ ಕಾರಣಗಳಿಂದಾಗಿ ಸೆ.2ರಂದು ಮನೆ ಬಳಿ ಅಭಿಮಾನಿಗಳು ಯಾರೂ ಬರಬಾರದು ಎಂದು ಸುದೀಪ್ ಈಗಾಗಲೇ ಮನವಿ ಮಾಡಿದ್ದರು. ಹೀಗಾಗಿ ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದ ಕಿಚ್ಚನ ಬರ್ತ್ಡೇ ಈ ಬಾರಿ ವಿಭಿನ್ನವಾಗಿದೆ.
ಆದರೆ, ಅಭಿಮಾನಿಗಳಿಗೆ ನಿರಾಸೆಯಾಗದಂತೆ ಸಿನಿಮಾ ವಿಚಾರದಲ್ಲಿ ಭರ್ಜರಿ ಸರ್ಪ್ರೈಸ್ ಸಿಗುವ ನಿರೀಕ್ಷೆ ಮೂಡಿದೆ. ಹುಟ್ಟುಹಬ್ಬದ ಸಂದರ್ಭದಲ್ಲೇ ಕಿಚ್ಚನ ಮುಂಬರುವ ಸಿನಿಮಾಗಳ ಕುರಿತು ಮಹತ್ವದ ಅಪ್ಡೇಟ್ಗಳು ಹೊರಬರುವ ಸಾಧ್ಯತೆ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
http://Visit : www.suddidina.com
53ನೇ ವಸಂತ, 30 ವರ್ಷದ ಸಿನಿ ಪಯಣ
ಕಿಚ್ಚ ಸುದೀಪ್ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಮತ್ತು ತಮಿಳು ಚಿತ್ರರಂಗದಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು, 1997ರಲ್ಲಿ ಬಿಡುಗಡೆಯಾದ ‘ತಾಯವ್ವ’ ಚಿತ್ರದ ಮೂಲಕ ಸಿನಿಮಾ ಪಯಣ ಆರಂಭಿಸಿದ್ದರು. ಇದೀಗ ಚಿತ್ರರಂಗದಲ್ಲಿ ಮೂರು ದಶಕಗಳ ಪಯಣ ಪೂರ್ಣಗೊಳಿಸಿರುವುದು ಈ ಹುಟ್ಟುಹಬ್ಬದ ಮತ್ತೊಂದು ವಿಶೇಷ.
ನಟನೆಯ ಜೊತೆಗೆ ನಿರ್ದೇಶನ, ನಿರ್ಮಾಣ ಹಾಗೂ ಕಿರುತೆರೆಯಲ್ಲಿಯೂ ಸುದೀಪ್ ತಮ್ಮದೇ ಗುರುತು ಮೂಡಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕರಾಗಿ ಸತತವಾಗಿ ಮುಂದುವರಿದಿರುವುದು ಅವರ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ.
View this post on Instagram
‘ಬಿಲ್ಲ ರಂಗ ಭಾಷಾ’ ಮೇಲೆ ಹೆಚ್ಚಿದ ನಿರೀಕ್ಷೆ
‘ವಿಕ್ರಾಂತ್ ರೋಣ’ ಬಳಿಕ ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಸುದೀಪ್ ಮತ್ತೊಮ್ಮೆ ‘ಬಿಲ್ಲ ರಂಗ ಭಾಷಾ’ ಮೂಲಕ ಒಂದಾಗಿದ್ದಾರೆ. ಈಗಾಗಲೇ ಚಿತ್ರದ ಲುಕ್ ಅಭಿಮಾನಿಗಳ ಗಮನ ಸೆಳೆದಿದ್ದು, ಮಾಸ್ ಅವತಾರದಲ್ಲಿ ಕಿಚ್ಚ ಕಾಣಿಸಿಕೊಂಡಿರುವುದು ನಿರೀಕ್ಷೆ ಹೆಚ್ಚಿಸಿದೆ.
ಚಿತ್ರದ ಬಗ್ಗೆ ನಿರ್ದೇಶಕ ಅನೂಪ್ ಭಂಡಾರಿ ಕೂಡ ಉತ್ಸಾಹ ವ್ಯಕ್ತಪಡಿಸಿದ್ದು, ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಸಿನಿಮಾಗೆ ಸಂಬಂಧಿಸಿದ ಹೊಸ ಅಪ್ಡೇಟ್ ಸಿಗುವ ಸಾಧ್ಯತೆ ಇದೆ. ಸಿನಿಮಾ 2027ರಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ.
4 ಸಿನಿಮಾಗಳ ಸದ್ದು?
2024ರಲ್ಲಿ ‘ಮ್ಯಾಕ್ಸ್’ ಬಿಡುಗಡೆಯಾದ ಬಳಿಕ ಸುದೀಪ್ ಅವರ ಹೊಸ ಸಿನಿಮಾ ತೆರೆಗೆ ಬಂದಿಲ್ಲ. ಇದೀಗ ಒಂದೇ ಬಾರಿ ನಾಲ್ಕು ಸಿನಿಮಾಗಳ ಕುರಿತಂತೆ ಘೋಷಣೆ ಅಥವಾ ಅಪ್ಡೇಟ್ ಸಿಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಈ ಮೂಲಕ ಬರ್ತ್ಡೇ ಸಂಭ್ರಮದಿಂದ ದೂರವಿದ್ದರೂ, ಸಿನಿಮಾ ಸುದ್ದಿಗಳ ಮೂಲಕ ಕಿಚ್ಚ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿರಲಿದ್ದಾರೆ.
ಸೆ.6ಕ್ಕೆ ಮತ್ತೆ ಟಿವಿ ಪರದೆ ಮೇಲೆ ಕಿಚ್ಚ
ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಕಿಚ್ಚನ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ ಗ್ರ್ಯಾಂಡ್ ಪ್ರೀಮಿಯರ್ ಸೆಪ್ಟೆಂಬರ್ 6ರಂದು ನಡೆಯಲಿದ್ದು, ಮತ್ತೊಮ್ಮೆ ಸುದೀಪ್ ನಿರೂಪಕರಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಹೀಗಾಗಿ 53ನೇ ಹುಟ್ಟುಹಬ್ಬ, 30 ವರ್ಷದ ಸಿನಿ ಪಯಣ, ಹೊಸ ಸಿನಿಮಾಗಳ ನಿರೀಕ್ಷೆ ಹಾಗೂ ‘ಬಿಗ್ ಬಾಸ್’ ಎಂಟ್ರಿ—ಈ ಬಾರಿ ಕಿಚ್ಚನ ಬರ್ತ್ಡೇಗೆ ವಿಶೇಷ ಅರ್ಥ ಸಿಕ್ಕಿದೆ.

ದಿನದ ಸುದ್ದಿ
Bigg Boss Kannada 13: ಹೊಸ ಥೀಮ್, ಹೊಸ ಸ್ಪರ್ಧಿಗಳು, 24×7 ಲೈವ್; ಕಿಚ್ಚ ಸುದೀಪ್ ಸಾರಥ್ಯದ ಬಿಗ್ಬಾಸ್ ಕನ್ನಡ 13ರ ವಿಶೇಷತೆಗಳೇನು?
ಸುದ್ದಿದಿನ,ಬೆಂಗಳೂರು: ಅಂತೂ ಇಂತೂ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ **‘ಬಿಗ್ಬಾಸ್ ಕನ್ನಡ ಸೀಸನ್ 13’**ಗೆ ಅಧಿಕೃತ ಚಾಲನೆ ಸಿಗುವ ಸಮಯ ಬಂದಿದೆ. ಈಗಾಗಲೇ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಕುತೂಹಲ ಹೆಚ್ಚಿಸಿರುವ ಕಾರ್ಯಕ್ರಮದ ಟಿವಿ ಸೀಸನ್ ಸೆಪ್ಟೆಂಬರ್ 6ರಿಂದ ಆರಂಭವಾಗಲಿದೆ. ಹೊಸ ಸೀಸನ್ನಲ್ಲಿ ಮನೆ, ಥೀಮ್, ಸ್ಪರ್ಧಿಗಳ ಆಯ್ಕೆ ಹಾಗೂ ವೀಕ್ಷಣಾ ಅನುಭವದಲ್ಲೂ ಹಲವು ವಿಶೇಷತೆಗಳನ್ನು ಪರಿಚಯಿಸಲಾಗುತ್ತಿದೆ.
ಕಳೆದ 12 ಸೀಸನ್ಗಳಂತೆ ಈ ಬಾರಿಯೂ ಕಿಚ್ಚ ಸುದೀಪ್ ಕಾರ್ಯಕ್ರಮದ ನಿರೂಪಕರಾಗಿ ಮುಂದುವರಿಯಲಿದ್ದಾರೆ. ಸತತ 13 ಸೀಸನ್ಗಳನ್ನು ನಿರೂಪಣೆ ಮಾಡುತ್ತಿರುವುದು ಬಿಗ್ಬಾಸ್ ಇತಿಹಾಸದಲ್ಲೇ ಗಮನಾರ್ಹ ದಾಖಲೆಯಾಗಿದೆ.
ಹೈಲೈಟ್ಸ್: ಸೆಪ್ಟೆಂಬರ್ 6ರಿಂದ ಬಿಗ್ಬಾಸ್ ಹವಾ |
|
http://Visit : www.suddidina.com
ಈ ಬಾರಿ ‘Flight’ ಥೀಮ್ ಏಕೆ ವಿಶೇಷ?
ಕಳೆದ ಸೀಸನ್ನಲ್ಲಿ ವೀಕ್ಷಕರು ಅರಮನೆ ಮಾದರಿಯ ಬಿಗ್ಬಾಸ್ ಮನೆಯನ್ನು ಕಂಡಿದ್ದರು. ಆದರೆ ಈ ಬಾರಿ ಇಡೀ ಕಾರ್ಯಕ್ರಮದ ಕಲ್ಪನೆಯೇ ಬದಲಾಗಿದೆ. ‘Flight’ ಥೀಮ್ ಆಧಾರಿತವಾಗಿ ಸೀಸನ್ 13 ರೂಪಿಸಲಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋದಲ್ಲೂ ಇದರ ಝಲಕ್ ಕಾಣಿಸಿಕೊಂಡಿದೆ.
ವಿಶೇಷವೆಂದರೆ ಫ್ಲೈಟ್ ಥೀಮ್ ಕೇವಲ ಪ್ರೋಮೋಗೆ ಸೀಮಿತವಾಗಿಲ್ಲ. ಬಿಗ್ಬಾಸ್ ಮನೆಯ ವಿನ್ಯಾಸದಲ್ಲೂ ಇದೇ ಪರಿಕಲ್ಪನೆಯನ್ನು ಬಳಸಲಾಗಿದೆ. ಹೀಗಾಗಿ ಈ ಬಾರಿ ಮನೆ ಹೇಗೆ ಕಾಣಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸೆಲೆಬ್ರಿಟಿಗಳ ಜತೆಗೆ ಕಾಮನ್ ಮ್ಯಾನ್ ಎಂಟ್ರಿ
ಬಿಗ್ಬಾಸ್ ಕನ್ನಡದ ಪ್ರತಿ ಸೀಸನ್ನಲ್ಲೂ ಸ್ಪರ್ಧಿಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿರುತ್ತದೆ. ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಜನರಿಗೂ ಅವಕಾಶ ಕಲ್ಪಿಸಲಾಗುತ್ತಿದೆ.
‘ಬಿಗ್ಬಾಸ್ ಅಗ್ನಿಪರೀಕ್ಷೆ’ ಮೂಲಕ ಆಯ್ಕೆಯಾಗುವ ಮೂವರು ಸಾಮಾನ್ಯ ಸ್ಪರ್ಧಿಗಳು ಸೀಸನ್ 13ರ ಮನೆಗೆ ಪ್ರವೇಶಿಸಲಿದ್ದಾರೆ. ಇದರಿಂದ ಮನೆಯಲ್ಲಿ ವಿಭಿನ್ನ ಹಿನ್ನೆಲೆಯ ವ್ಯಕ್ತಿಗಳ ನಡುವಿನ ಸಂವಹನ, ಅಭಿಪ್ರಾಯ ಭೇದ ಹಾಗೂ ಹೊಸ ರೀತಿಯ ಸ್ಪರ್ಧೆ ಮೂಡುವ ನಿರೀಕ್ಷೆಯಿದೆ.
ಮನೆಯ ಪ್ರತಿಕ್ಷಣವೂ 24×7 ಲೈವ್
ಈ ಬಾರಿ ವೀಕ್ಷಕರಿಗೆ ಮತ್ತೊಂದು ದೊಡ್ಡ ಸೌಲಭ್ಯ ಸಿಗಲಿದೆ. ಟಿವಿ ಎಪಿಸೋಡ್ಗಳಿಗೆ ಮಾತ್ರ ಸೀಮಿತವಾಗದೆ, ಜಿಯೋಹಾಟ್ಸ್ಟಾರ್ನಲ್ಲಿ ಬಿಗ್ಬಾಸ್ ಮನೆಯ 24×7 ಲೈವ್ ವೀಕ್ಷಣೆ ಲಭ್ಯವಿರಲಿದೆ.
ಅಂದರೆ ದಿನದ ಎಪಿಸೋಡ್ನಲ್ಲಿ ಪ್ರಸಾರವಾಗದ ಮನೆಯೊಳಗಿನ ಹಲವು ಬೆಳವಣಿಗೆಗಳನ್ನೂ ವೀಕ್ಷಕರು ಗಮನಿಸಬಹುದು. ಸ್ಪರ್ಧಿಗಳ ನಡುವಿನ ಮಾತುಕತೆ, ಚಟುವಟಿಕೆಗಳು ಹಾಗೂ ಅನಿರೀಕ್ಷಿತ ಘಟನೆಗಳನ್ನು ಇನ್ನಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ.
ಪ್ರಸಾರದ ಸಮಯವೂ ಫಿಕ್ಸ್
ಸೆಪ್ಟೆಂಬರ್ 6ರಂದು ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಹೊಸ ಸಂಚಿಕೆಗಳು ಪ್ರಸಾರವಾಗಲಿವೆ.
ಇನ್ನು ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಶನಿವಾರ ಮತ್ತು ಭಾನುವಾರದ ವಿಶೇಷ ಸಂಚಿಕೆಗಳು ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿವೆ.
ಬಿಗ್ಬಾಸ್ ಪ್ರಯಾಣ ಯಾವ ದಿಕ್ಕಿಗೆ?
ಫ್ಲೈಟ್ ಥೀಮ್, ಹೊಸ ಮುಖಗಳು, ಸಾಮಾನ್ಯ ಸ್ಪರ್ಧಿಗಳ ಪ್ರವೇಶ ಮತ್ತು 24×7 ಲೈವ್ ವೀಕ್ಷಣೆಯೊಂದಿಗೆ ಸೀಸನ್ 13 ಕುತೂಹಲ ಮೂಡಿಸಿದೆ. ಈ ‘ಫ್ಲೈಟ್’ನಲ್ಲಿ ಯಾರು ಟೇಕಾಫ್ ಆಗುತ್ತಾರೆ, ಯಾರು ಮಧ್ಯದಲ್ಲೇ ಎಲಿಮಿನೇಟ್ ಆಗುತ್ತಾರೆ ಮತ್ತು ಕೊನೆಯವರೆಗೂ ಯಾರು ಪ್ರಯಾಣ ಮುಂದುವರಿಸುತ್ತಾರೆ ಎಂಬುದೇ ಮುಂದಿನ ದಿನಗಳ ಪ್ರಮುಖ ಪ್ರಶ್ನೆ.

ದಿನದ ಸುದ್ದಿ
Bigg Boss Agniparikshé: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಿಂದ ಕುಮಾರಿ ಎಕ್ಸಿಟ್; ಆಟ ಮುಗಿದರೂ ಭವಿಷ್ಯಕ್ಕೆ ಸಿಕ್ಕಿತು ದೊಡ್ಡ ಗಿಫ್ಟ್
ಸುದ್ದಿದಿನ,ಬೆಂಗಳೂರು: ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ರಿಯಾಲಿಟಿ ಶೋನಲ್ಲಿ ತಮ್ಮ ಸರಳತೆ, ಮುಗ್ಧತೆ ಹಾಗೂ ಸಹಜ ವರ್ತನೆಯಿಂದ ವೀಕ್ಷಕರ ಗಮನ ಸೆಳೆದಿದ್ದ ನಂಜನಗೂಡಿನ ಕುಮಾರಿ ಇದೀಗ ಅನಾರೋಗ್ಯದ ಕಾರಣದಿಂದ ಕಾರ್ಯಕ್ರಮದಿಂದ ಅರ್ಧಕ್ಕೆ ನಿರ್ಗಮಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಿ, ವೈದ್ಯರ ಸಲಹೆಯಂತೆ ಆಟವನ್ನು ಮುಂದುವರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶೋನಿಂದ ಹೊರಬಂದಿದ್ದಾರೆ.
ಕಳೆದ ಕೆಲವು ಸಂಚಿಕೆಗಳಲ್ಲಿ ಕುಮಾರಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು. ಅವರು ಯಾಕೆ ಕಾರ್ಯಕ್ರಮದಲ್ಲಿ ಕಾಣಿಸುತ್ತಿಲ್ಲ ಎಂಬ ಪ್ರಶ್ನೆಯೂ ಚರ್ಚೆಗೆ ಬಂದಿತ್ತು. ಇದೇ ಸಂದರ್ಭದಲ್ಲಿ ಮತ್ತೊಬ್ಬ ಸ್ಪರ್ಧಿ ಪೂರ್ಣಿಮಾ, ತಮ್ಮನ್ನು ಕಳುಹಿಸಿ ಕುಮಾರಿಯನ್ನು ಕರೆತರಲಾಗುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಕುಮಾರಿ ಶೋನಿಂದ ದೂರ ಉಳಿದಿರುವ ನಿಜವಾದ ಕಾರಣ ಅನಾರೋಗ್ಯ ಎಂಬುದು ಸ್ಪಷ್ಟವಾಗಿದೆ.
http://Visit : www.suddidina.com
ಆಟ ಅರ್ಧಕ್ಕೆ ನಿಂತರೂ ಸಿಕ್ಕಿತು ₹5 ಲಕ್ಷ!
ಕುಮಾರಿಯ ಬಿಗ್ ಬಾಸ್ ಪಯಣ ಅರ್ಧಕ್ಕೆ ಅಂತ್ಯಗೊಂಡಿದ್ದರೂ, ಕಾರ್ಯಕ್ರಮದ ವೇದಿಕೆ ಅವರಿಗೆ ನಿರೀಕ್ಷೆಗೂ ಮೀರಿದ ನೆರವು ನೀಡಿದೆ. ಕಾರ್ಯಕ್ರಮದ ಪ್ರಾಯೋಜಕರಾದ ಇಕೋ ಪ್ಲ್ಯಾನೆಟ್ ಎಲಿವೇಟರ್ ಸಂಸ್ಥೆ ಕುಮಾರಿಗೆ ಬರೋಬ್ಬರಿ ₹5 ಲಕ್ಷ ನಗದು ನೆರವು ನೀಡಿದೆ.
ಸಾಮಾನ್ಯ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಕುಮಾರಿಗೆ ಈ ಹಣ ದೊಡ್ಡ ಆರ್ಥಿಕ ಆಸರೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ಕುಟುಂಬದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯ ಚಿಕಿತ್ಸೆಗೆ ಈ ಹಣ ನೆರವಾಗಬಹುದು ಎಂಬ ನಿರೀಕ್ಷೆಯೂ ಇದೆ.
ಶಿಕ್ಷಣದ ಬಳಿಕ ಉದ್ಯೋಗಕ್ಕೂ ಭರವಸೆ
₹5 ಲಕ್ಷ ನೆರವಿನ ಜತೆಗೆ ಕುಮಾರಿಗೆ ಮತ್ತೊಂದು ಮಹತ್ವದ ಅವಕಾಶವನ್ನು ಸಂಸ್ಥೆ ಘೋಷಿಸಿದೆ. ಅವರು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ ಬಳಿಕ ಕರ್ನಾಟಕದಲ್ಲಿರುವ ಸಂಸ್ಥೆಯ ಯಾವುದೇ ಶಾಖೆಯಲ್ಲಿ ಅಥವಾ ದುಬೈನಲ್ಲಿರುವ ಶಾಖೆಯಲ್ಲಿ ಉದ್ಯೋಗ ಪಡೆಯುವ ಅವಕಾಶ ನೀಡಲಾಗಿದೆ.
ಇದು ಕುಮಾರಿಯ ಭವಿಷ್ಯಕ್ಕೆ ಹೊಸ ದಿಕ್ಕು ನೀಡುವ ಘೋಷಣೆಯಾಗಿದೆ. ರಿಯಾಲಿಟಿ ಶೋನಿಂದ ಸಿಕ್ಕ ಜನಪ್ರಿಯತೆಯ ಜತೆಗೆ ಇದೀಗ ಶಿಕ್ಷಣ ಮತ್ತು ಉದ್ಯೋಗದ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆ ಇಡುವ ಅವಕಾಶವೂ ದೊರೆತಿದೆ.
ಭಾವುಕ ವಿದಾಯ, ಹೊಸ ಬದುಕಿನ ಭರವಸೆ
ಹಳ್ಳಿಯಿಂದ ಬಂದ ಕುಮಾರಿಗೆ ಬೆಂಗಳೂರನ್ನು ನೋಡುವ ಅವಕಾಶದಿಂದ ಹಿಡಿದು ದೊಡ್ಡ ರಿಯಾಲಿಟಿ ಶೋ ವೇದಿಕೆಯಲ್ಲಿ ಸ್ಪರ್ಧಿಸುವವರೆಗೆ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಹಲವು ಹೊಸ ಅನುಭವಗಳನ್ನು ನೀಡಿದೆ. ಶೋನಿಂದ ನಿರ್ಗಮಿಸುವ ಸಂದರ್ಭದಲ್ಲಿ ಕುಮಾರಿ ಸೇರಿದಂತೆ ಇತರ ಸ್ಪರ್ಧಿಗಳು ಭಾವುಕರಾದರು.
ಸ್ಪರ್ಧೆಯಲ್ಲಿ ಮುಂದುವರಿಯಲು ಸಾಧ್ಯವಾಗದ ನೋವಿನ ನಡುವೆಯೂ, ಇಷ್ಟು ದೊಡ್ಡ ವೇದಿಕೆಯಲ್ಲಿ ಅವಕಾಶ ಸಿಕ್ಕಿದ್ದಕ್ಕೆ ಕುಮಾರಿ ಸಂತಸ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದಾಗಿ ಅವರ ಆಟ ಅಂತ್ಯಗೊಂಡಿದ್ದರೂ, ₹5 ಲಕ್ಷ ನೆರವು ಮತ್ತು ಭವಿಷ್ಯದ ಉದ್ಯೋಗದ ಭರವಸೆ ಕುಮಾರಿಯ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ.
ಹೀಗಾಗಿ ‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ಕುಮಾರಿಯ ಆಟ ಅರ್ಧಕ್ಕೆ ನಿಂತಿದ್ದರೂ, ಕಾರ್ಯಕ್ರಮದ ವೇದಿಕೆಯಿಂದ ಸಿಕ್ಕ ಬೆಂಬಲ ಅವರ ಮುಂದಿನ ಬದುಕಿಗೆ ಮಹತ್ವದ ತಿರುವು ನೀಡಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ4 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ4 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ4 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


