Connect with us

ಬಹಿರಂಗ

ಪರಿಸರ ಪ್ರಜ್ಞೆಯ ಕೊರತೆಯ ನಡುವೆಯೇ ಮತ್ತೊಂದು ದಿನ..!

Published

on

  • ನಾ ದಿವಾಕರ

ನಮ್ಮ ಸುತ್ತಲಿನ ವಾತಾವರಣವನ್ನೂ ಮೀರಿದ ವಿಶಾಲ ಪ್ರಪಂಚದ ಅರಿವು ಅತ್ಯವಶ್ಯ.


ಮಾನವ ಸಮಾಜಕ್ಕೆ ಸಂಬಂಧಪಟ್ಟ ಎಲ್ಲ ಚಟುವಟಿಕೆಗಳಿಗೂ ಒಂದು ದಿನಾಚರಣೆ ಇರುವುದು ಆಧುನಿಕ ಜಗತ್ತಿನ ವೈಶಿಷ್ಟ್ಯ. ಮನುಜ ಸಂಬಂಧಗಳು, ಸಾಮಾಜಿಕ ವಿದ್ಯಮಾನಗಳು, ಚಾರಿತ್ರಿಕ ದಿನಗಳು ವಾರ್ಷಿಕ ದಿನಾಚರಣೆಗಳ ರೂಪದಲ್ಲಿ ಸಾರ್ವಜನಿಕ ಜನಸಾಮಾನ್ಯರ ನಡುವೆ ಇತಿಹಾಸದ ಪ್ರಜ್ಞೆಯನ್ನು ಜಾಗೃತಗೊಳಿಸಿ, ವರ್ತಮಾನದ ಅರಿವನ್ನು ವಿಸ್ತರಿಸಲು ನೆರವಾಗುತ್ತವೆ.

ಮೂಲತಃ ಪಾಶ್ಚಿಮಾತ್ಯ ರಾಷ್ಟ್ರಗಳಿಂದಲೇ ಮೂಡಿಬಂದ ಈ ಆಚರಣೆಗಳು ಆಧುನಿಕ ಯುಗದಲ್ಲಿ, ಜಾಗತೀಕರಣಗೊಂಡ ಅರ್ಥವ್ಯವಸ್ಥೆಯಲ್ಲಿ ಮಾರುಕಟ್ಟೆ ಸಂಬಂಧಿತವಾಗಿಯೇ ಉಳಿದುಬಿಡುತ್ತವೆ. ಒಂದು ವಿಶಿಷ್ಟ, ನಿರ್ದಿಷ್ಟ ದಿನವನ್ನು ಏತಕ್ಕಾಗಿ ಆಚರಿಸಲಾಗುತ್ತದೆ , ಈ ಆಚರಣೆಯ ಮೂಲಕ ಏನನ್ನು ಸಾಧಿಸಲು ಹೊರಟಿದ್ದೇವೆ ಎಂಬ ಸಾಮಾನ್ಯ ಅರಿವೂ ಇಲ್ಲದೆ ಯಾಂತ್ರಿಕವಾಗಿ ಆಚರಿಸಲಾಗುವ ಹಲವು ದಿನಗಳನ್ನು ಕಾಣುತ್ತಲೇ ಬಂದಿದ್ದೇವೆ. ನಾಗರಿಕ ಪ್ರಜ್ಞೆ, ಸಾಮಾಜಿಕ ಕಳಕಳಿ ಮತ್ತು ಮಾನವ ಸಮಾಜದ ಉನ್ನತಿಗಾಗಿ ಸಾಮಾನ್ಯ ಜನರ ನಡುವೆ ಜಾಗೃತ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಈ ದಿನಾಚರಣೆಗಳು ಸಾಗಬೇಕಾಗುತ್ತವೆ. ಇಂತಹ ಆಚರಣೆಗಳಲ್ಲೊಂದು ಇಂದು ಆಚರಿಸಲಾಗುತ್ತಿರುವ ವಿಶ್ವ ಪರಿಸರ ದಿನ.

ಭಾರತದ ಸಂದರ್ಭದಲ್ಲಿ ನೋಡಿದಾಗ ಸಾಮಾನ್ಯ ಪರಿಸರ ಪ್ರಜ್ಞೆಯೇ ಇಲ್ಲದಂತಹ ಒಂದು ಬೃಹತ್‌ ಜನಸಮೂಹ ನಮ್ಮ ನಡುವೆ ಇದೆ. ಪರಿಸರ ಎಂದ ಕೂಡಲೇ ಸಾಮಾನ್ಯ ಗ್ರಹಿಕೆಯು ಕಾಡು ಮೇಡು, ಬೆಟ್ಟ ಗುಡ್ಡ, ಜಲಮೂಲಗಳು ಮತ್ತು ನೈಸರ್ಗಿಕ ಸಂಪನ್ಮೂಲಗಳತ್ತ ಹೊರಳುತ್ತದೆ. ಜೀವ ವೈವಿಧ್ಯತೆಯನ್ನು ಕಾಪಾಡಲು ಬೇಕಾದ ಹಸಿರು ವಲಯ ಇದರಲ್ಲಿ ಪ್ರಧಾನವಾಗಿ ಬಿಂಬಿತವಾಗುತ್ತದೆ. ಭಾರತದ ಅರಣ್ಯ ಇಲಾಖೆ ತನ್ನ 2021ರ ವರದಿಯನ್ನು ಬಿಡುಗಡೆ ಮಾಡಿದ್ದು 2019 ರಿಂದ 21ರ ಅವಧಿಯಲ್ಲಿ ಭಾರತದ ಒಟ್ಟು ಅರಣ್ಯ ಪ್ರದೇಶದಲ್ಲಿ 1540 ಚದರ ಕಿಲೋಮೀಟರ್‌ ಹೆಚ್ಚಳ ಕಂಡುಬಂದಿದೆ. 2021ರ ಭಾರತೀಯ ಅರಣ್ಯ ವರದಿಯ ಅನುಸಾರ ದೇಶದ ಒಟ್ಟು ಅರಣ್ಯ ಪ್ರದೇಶದ ವ್ಯಾಪ್ತಿ 7,13,789 ಚದರ ಕಿಲೋಮೀಟರ್‌ ಇದ್ದು, ಓಟ್ಟು ಭೌಗೋಳಿಕ ಪ್ರದೇಶದ ಶೇ 21.71ರಷ್ಟಿದೆ. 2019ರಲ್ಲಿ ಇದು ಶೇ 21.67ರಷ್ಟಿತ್ತು.

ಈ ವರದಿಯ ಅನುಸಾರ ಭಾರತದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು ಅರಣ್ಯಪ್ರದೇಶದ ವ್ಯಾಪ್ತಿ ಹೆಚ್ಚಾಗಿರುವುದು ಕಂಡುಬರುತ್ತದೆ. ಆದರೆ ಸೂಕ್ಷ್ಮವಾಗಿ ಗಮನಿಸಿದಾಗ ಈ ದತ್ತಾಂಶಗಳಲ್ಲಿ ಕೆಲವು ತಾಂತ್ರಿಕ ತಕರಾರುಗಳನ್ನೂ ಗುರುತಿಸಲು ಸಾಧ್ಯ. ಹೆಚ್ಚಳವಾಗಿರುವ ಅರಣ್ಯ ಪ್ರದೇಶದ ವ್ಯಾಪ್ತಿಗೆ ಮೂಲಕ ಕಾರಣ, ರಿಮೋಟ್‌ ಸೆನ್ಸಿಂಗ್‌ ಮೂಲಕ ಮಾಡಲಾಗುವ ಈ ಸಮೀಕ್ಷೆಯಲ್ಲಿ ಮುಕ್ತ ಅರಣ್ಯಗಳನ್ನೂ ಒಳಗೊಳ್ಳಲಾಗಿದೆ. ಮುಕ್ತ ಅರಣ್ಯಗಳೆಂದರೆ ವಾಣಿಜ್ಯ ಪ್ಲಾಂಟೇಷನ್‌ಗಳನ್ನೂ ಸೇರಿಸಿಕೊಳ್ಳಲಾಗುತ್ತದೆ. ದಟ್ಟಾರಣ್ಯ ಪ್ರದೇಶಗಳನ್ನಷ್ಟೇ ಪರಿಗಣಿಸಿದಾಗ 2019-21ರ ಅವಧಿಯಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿ ಕಡಿಮೆಯಾಗಿರುವುದು ಕಂಡುಬರುತ್ತದೆ.

ಈ ವರದಿಯೊಂದಿಗೇ ಬಿಡುಗಡೆಯಾಗಿರುವ ಮಾಂಗಬೇ-ಇಂಡಿಯಾ ಸಮೀಕ್ಷೆಯ ಅನುಸಾರ 2009-19ರ ಒಂದು ದಶಕದ ಅವಧಿಯಲ್ಲಿ ಭಾರತದ ಈಶಾನ್ಯ ಪ್ರದೇಶದಲ್ಲಿ 3199 ಚದರ ಕಿಲೋಮೀಟರ್‌ ಅರಣ್ಯಪ್ರದೇಶ ಮರೆಯಾಗಿದೆ. ಇದು ಅತಂಕಕಾರಿ ವಿಚಾರವಾಗಿದೆ. ಏಕೆಂದರೆ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್‌, ಸಿಕ್ಕಿಂ ಮತ್ತು ತ್ರಿಪುರಾ ಈ ರಾಜ್ಯಗಳನ್ನೊಳಗೊಳ್ಳುವ ಈಶಾನ್ಯ ಭಾರತ, ಜಗತ್ತಿನ 17 ಅತಿದೊಡ್ಡ ಜೀವವೈವಿಧ್ಯ ಉಷ್ಣ ಪ್ರದೇಶವಾಗಿದೆ. ಭಾರತದ ಒಟ್ಟು ಶೇ 7.98 ಭೌಗೋಳಿಕ ಪ್ರದೇಶವನ್ನು ಹೊಂದಿರುವ ಈಶಾನ್ಯ ಭಾರತ ಒಟ್ಟು ಶೇ 25ರಷ್ಟು ಅರಣ್ಯಪ್ರದೇಶವನ್ನು ಹೊಂದಿದೆ.

ಈ ಪ್ರದೇಶದಲ್ಲೇ ಅರಣ್ಯ ವಲಯ ಕ್ಷೀಣಿಸುತ್ತಿರುವುದು ಚಿಂತೆಗೀಡುಮಾಡುವ ವಿಚಾರವಾಗಿದ್ದು ಇದಕ್ಕೆ ಮೂಲ ಕಾರಣ ಅಭಿವೃದ್ಧಿ ಯೋಜನೆಗಳೇ ಆಗಿವೆ. ಬಂಡವಾಳಶಾಹಿ ಆರ್ಥಿಕತೆಯಲ್ಲಿ ಅರಣ್ಯ ಮತ್ತು ಜಲಸಂಪನ್ಮೂಲಗಳನ್ನೂ ಸೇರಿದಂತೆ ಎಲ್ಲ ನೈಸರ್ಗಿಕ ಸಂಪನ್ಮೂಲಗಳನ್ನೂ ಮಾರುಕಟ್ಟೆಯ ಉತ್ಪಾದನೆಯ ಮೂಲಗಳೆಂದೇ ಪರಿಗಣಿಸುವುದರಿಂದ, ನಿಸರ್ಗ ಶೋಷಣೆ ಅವ್ಯಾಹತವಾಗಿ ನಡೆಯುತ್ತಲೇ ಇರುತ್ತದೆ. ಕಳೆದ ಮೂರು ದಶಕಗಳಲ್ಲಿ ಭಾರತದಲ್ಲಿ 29 ಸಾವಿರ ಚದರ ಕಿಲೋಮೀಟರ್‌ ಅರಣ್ಯ ಪ್ರದೇಶಗಳು ಅಭಿವೃದ್ಧಿ ಯೋಜನೆಗಳಿಗೆ ಬಲಿಯಾಗಿವೆ.

ಇದರ ಪೈಕಿ 23 ಸಾವಿರ ಚದರ ಕಿಲೋಮೀಟರ್‌ ಕೈಗಾರಿಕಾ ಯೋಜನೆಗಳಿಗೇ ಬಲಿಯಾಗಿದೆ. ಮಧ್ಯಪ್ರದೇಶವೊಂದರಲ್ಲೇ ಈ ಅವಧಿಯಲ್ಲಿ 14 ಸಾವಿರ ಚದರ ಕಿಲೋಮೀಟರ್‌ ಅರಣ್ಯ ಪ್ರದೇಶವನ್ನು ಗಣಿಗಾರಿಕೆ, ರಕ್ಷಣಾ ಯೋಜನೆಗಳು ಮತ್ತು ಜಲವಿದ್ಯುತ್‌ ಉತ್ಪಾದನೆಗಾಗಿ ನೀಡಲಾಗಿದೆ. ಸ್ವತಂತ್ರ ಅಧ್ಯಯನಗಳ ಪ್ರಕಾರ ಪಶ್ಚಿಮ ಘಟ್ಟಗಳ ನಾಲ್ಕೂ ವಲಯಗಳಲ್ಲಿ ಅರಣ್ಯ ಸಂಪತ್ತು ಕ್ಷೀಣಿಸುತ್ತಿದ್ದು ಉತ್ತರದಲ್ಲಿ ಶೇ 2.84, ಕೇಂದ್ರದಲ್ಲಿ ಶೇ 4.38 ಮತ್ತು ದಕ್ಷಿಣದಲ್ಲಿ ಶೇ 5.77ರಷ್ಟು ಅರಣ್ಯ ವಲಯ ಅಭಿವೃದ್ಧಿ ಯೋಜನೆಗಳ ಪಾಲಾಗಿದೆ. ಕೇಂದ್ರ ಸರ್ಕಾರದ ಬದಲಾದ ನೀತಿಗಳ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ 25 ಸಾವಿರ ಹೆಕ್ಟೇರ್‌ ಅಂದರೆ 250 ಚದರ ಕಿಲೋಮೀಟರ್‌ ಅರಣ್ಯ ಪ್ರದೇಶವನ್ನು ಅರಣ್ಯೇತರ ಚಟುವಟಿಕೆಗಳಿಗಾಗಿ ಒದಗಿಸಲಾಗುತ್ತದೆ. ಇವುಗಳಲ್ಲಿ ಮುಖ್ಯವಾಗಿ ಗಣಿಗಾರಿಕೆ, ರಕ್ಷಣಾ ಯೋಜನೆಗಳು, ಅಣೆಕಟ್ಟುಗಳು, ವಿದ್ಯುತ್‌ ಉತ್ಪಾದನೆ, ಕೈಗಾರಿಕೆ ಮತ್ತು ರಸ್ತೆ ಅಭಿವೃದ್ಧಿಯನ್ನು ಗುರುತಿಸಬಹುದು.

2019ರಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಕೇಂದ್ರ ಪರಿಸರ ಸಚಿವಾಲಯವು ಛತ್ತಿಸ್‌ಘಡದ ದಟ್ಟ ಹಸದೇವ್‌ ಅರಂಡ್‌ ಅರಣ್ಯ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಅನುಮತಿ ನೀಡಿ ಪರಿಸರ ನಿರಪೇಕ್ಷಣೆಯನ್ನು ನೀಡಿತ್ತು. ಈ ಪ್ರದೇಶದ 1 ಲಕ್ಷ 70 ಸಾವಿರ ಹೆಕ್ಟೇರ್‌ ದಟ್ಟಾರಣ್ಯವನ್ನು ಕಲ್ಲಿದ್ದಲು ಗಣಿಗಾರಿಕೆಗಾಗಿ ನೀಡಲಾಗಿತ್ತು. 30 ಕಲ್ಲಿದ್ದಲು ನಿಕ್ಷೇಪಗಳಿರುವ ಈ ಪ್ರದೇಶದಲ್ಲಿ ರಾಜಸ್ಥಾನ ವಿದ್ಯುತ್‌ ಉತ್ಪಾದನ್‌ ನಿಗಮ್‌ ನಿಗಮವು ವಿದ್ಯುತ್‌ ಉತ್ಪಾದನೆ ಮಾಡಲಿದ್ದು, ಇದರ ನಿರ್ವಹಣೆಯನ್ನು ಅದಾನಿ ಒಡೆತನದ ರಾಜಸ್ಥಾನ ಕೊಲೀರೀಸ್‌ ಲಿಮಿಟೆಡ್‌ಗೆ ನೀಡಲಾಗಿದೆ. ಈಗಾಗಲೇ 841 ಹೆಕ್ಟೇರ್‌ ದಟ್ಟಾರಣ್ಯ ಪ್ರದೇಶವನ್ನು ಈ ಕಂಪನಿಗೆ ಗುತ್ತಿಗೆಯ ಆಧಾರದಲ್ಲಿ ನೀಡಲಾಗಿದೆ.

ಕಳೆದ ಅಕ್ಟೋಬರ್‌ ಮಾಹೆಯಲ್ಲಿ ಛತ್ತೀಸ್ಘಡದ ಹಲವು ಸಂಘಟನೆಗಳು ಈ ಯೋಜನೆಗಳನ್ನು ವಿರೋಧಿ, ಅರಣ್ಯ ಒತ್ತುವರಿಯನ್ನು ತಡೆಗಟ್ಟುವ ಆಗ್ರಹದೊಂದಿಗೆ 300 ಕಿಲೋಮೀಟರ್‌ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದವು. ರಾಯ್‌ಪುರ ವಲಯದ 350ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ಅಕ್ರಮ ಭೂ ಒತ್ತುವರಿಯ ವಿರುದ್ಧ ಈ ಹೋರಾಟದಲ್ಲಿ ಭಾಗವಹಿಸಿದ್ದವು. ಆದಾಗ್ಯೂ ಈ ವರ್ಷದ ಮಾರ್ಚ್‌ ಮಾಹೆಯಲ್ಲಿ ರಾಜ್ಯ ಸರ್ಕಾರವು ಪಾರ್ಸಾ ಕಲ್ಲಿದ್ದಲು ನಿಕ್ಷೇಪದ ಕಾರ್ಯಾಚರಣೆಗಾಗಿ 1136 ಹೆಕ್ಟೇರ್‌ ಭೂಮಿಯನ್ನು ಗಣಿಗಾರಿಕೆಗೆ ಬಳಸಿಕೊಳ್ಳಲು ನಿರಪೇಕ್ಷಣ ಪತ್ರವನ್ನು ನೀಡಿದೆ.

ಆಳುವ ವರ್ಗಗಳ ಈ ದ್ವಂದ್ವ ನೀತಿಗಳ ನಡುವೆಯೇ ಭಾರತ ಇಂದು ಹೆಚ್ಚಿನ ಉಷ್ಣಾಂಶದ ಅಪಾಯವನ್ನು ಎದುರಿಸುತ್ತಿದೆ. 2030ರ ವೇಳೆಗೆ ದೇಶದ ಒಟ್ಟು ಭೂ ಪ್ರದೇಶದ ಶೇ 30ರಷ್ಟನ್ನು ಅರಣ್ಯವಲಯವನ್ನಾಗಿ ಮಾಡುವ ಸರ್ಕಾರದ ಧ್ಯೇಯ ಸಾಕಾರಗೊಳ್ಳುವುದು ಬಹುಶಃ ಅಂಕಿಅಂಶಗಳಲ್ಲಿ ಮಾತ್ರವೇ ಸಾಧ್ಯ ಎನಿಸುತ್ತದೆ. ಅಥವಾ ಕಾಫಿ, ಚಹಾ, ತೆಂಗು ಮುಂತಾದ ಅರಣ್ಯೇತರ ಉತ್ಪನ್ನಗಳ ಪ್ಲಾಂಟೇಷನ್‌ಗಳನ್ನು ಒಳಗೊಳ್ಳುವ ಮೂಲಕ ಒಟ್ಟಾರೆ ಅರಣ್ಯ ಪ್ರದೇಶದ ಹೆಚ್ಚಳವನ್ನು ಬಿಂಬಿಸಬಹುದು. ಆದರೆ ಅರಣ್ಯವನ್ನೇ ನಂಬಿ ಬದುಕುವ ಸಾವಿರಾರು ಜೀವ ಪ್ರಬೇಧಗಳು ಮತ್ತು ಅರಣ್ಯ ಬದುಕನ್ನೇ ಆಶ್ರಯಿಸುವ ಲಕ್ಷಾಂತರ ಆದಿವಾಸಿ ಕುಟುಂಬಗಳ ಜೀವನೋಪಾಯಕ್ಕೆ ಅಂಕಿಅಂಶಗಳು ನೆರವಾಗುವುದಿಲ್ಲ. ದಿನದಿಂದ ದಿನಕ್ಕೆ ತಮ್ಮ ಮೂಲ ನೆಲೆಯನ್ನು ಕಳೆದುಕೊಳ್ಳುತ್ತಿರುವ ಆದಿವಾಸಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಈ ಆತಂಕಗಳ ನಡುವೆಯೇ ನಾವು ಮತ್ತೊಂದು ಪರಿಸರ ದಿನವನ್ನು ಆಚರಿಸುತ್ತಿದ್ದೇವೆ. ಪರಿಸರ ಮಾಲಿನ್ಯ ಎಂದರೆ ಕೇವಲ ಕಾರ್ಖಾನೆಯಿಂದ ಹೊರಸೂಸಲಾಗುವ ಇಂಗಾಲ ಅಥವಾ ಕೈಗಾರಿಕಾ ತ್ಯಾಜ್ಯಗಳು ಮಾತ್ರವೇ ಅಲ್ಲ. ಅಥವಾ ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಸಮೀಕರಣಕ್ಕೊಳಗಾಗಿರುವ ಶಬ್ದಮಾಲಿನ್ಯದ ಮಾದರಿಗಳೂ ಅಲ್ಲ. ನಾವು ಬದುಕುತ್ತಿರುವ ಸಮಾಜದಲ್ಲಿ ನಿತ್ಯ ಕಾಣುತ್ತಿರುವ ಪರಿಸರ ಮಾಲಿನ್ಯ ಮತ್ತು ಜಲಮಾಲಿನ್ಯದ ಕಾರಣಗಳನ್ನು ಶೋಧಿಸುವುದರಲಿ, ಗುರುತಿಸಲೂ ಆಧುನಿಕ ನಾಗರಿಕತೆ ವಿಫಲವಾಗುತ್ತಿದೆ. ಬೃಹತ್‌ ಬೆಟ್ಟಗಳು, ಬೃಹದಾಕಾರದ ಬಂಡೆಗಳು ನಗರ ಸಂಸ್ಕೃತಿಯ ಗ್ರಾನೈಟ್‌ ಸಂಸ್ಕೃತಿಯ ಬಲಿಪಶುಗಳಾಗುತ್ತಿವೆ. ಕರಗುತ್ತಿರುವ ಈ ಬೆಟ್ಟಗಳು ಭವಿಷ್ಯದಲ್ಲಿ ಭೌಗೋಳಿಕ ಅಸಮತೋಲನ ಉಂಟುಮಾಡುವ ಅಪಾಯ ಒಂದೆಡೆಯಾದರೆ, ವರ್ತಮಾನದಲ್ಲೇ ಕಲ್ಲಿದ್ದಲು ಗಣಿಗಳ ಕುಸಿತ, ಕಲ್ಲುಗಣಿಗಳ ಸ್ಫೋಟ ಮತ್ತು ಬಂಡೆಗಳ ಕುಸಿತದಿಂದ ಸಾವಿರಾರು ಶ್ರಮಜೀವಿಗಳ ಜೀವ ಹರಣವಾಗುತ್ತಿದೆ.

ಜಲಸಂಪನ್ಮೂಲಗಳನ್ನು ರಕ್ಷಿಸುವ ಯಾವುದೇ ವೈಜ್ಞಾನಿಕ ಆಡಳಿತ ನೀತಿಯನ್ನು ಜಾರಿಗೊಳಿಸದ ಸರ್ಕಾರಗಳು ನದಿಗಳು ತುಂಬಿ ಹರಿದಾಗ ಬಾಗಿನ ಅರ್ಪಿಸಲು ತೋರುವಷ್ಟು ಆಸ್ಥೆ ಆ ನದಿ ನೀರಿನ ರಕ್ಷಣೆಯ ಬಗ್ಗೆ ತೋರುವುದಿಲ್ಲ. ಪೂಜನೀಯವಾಗಿ ಕಾಣಲಾಗುವ ಜಲಮೂಲಗಳನ್ನು, ನದಿಗಳನ್ನು ಮಾರುಕಟ್ಟೆ ಬಳಕೆಯ ವಸ್ತುಗಳಂತೆ ಪೋಲು ಮಾಡುತ್ತಿರುವುದನ್ನು ಮತ್ತು ನಗರಗಳ ಐಷಾರಮಿ ಬದುಕಿನ ಕಚ್ಚಾವಸ್ತುಗಳಂತೆ ಬಳಸುತ್ತಿರುವುದನ್ನು ಸದ್ದು ಮಾಡದೆ ಗಮನಿಸುತ್ತಲೇ ಇದ್ದೇವೆ.

ಮೈಸೂರಿನ ಪ್ರತಿಷ್ಠಿತ ಚಾಮುಂಡಿ ಬೆಟ್ಟವೂ ಈ ಆಧುನಿಕತೆ, ಧಾರ್ಮಿಕತೆ ಮತ್ತು ಪ್ರವಾಸೋದ್ಯಮದ ವಾಣಿಜ್ಯ ಹಿತಾಸಕ್ತಿಗಳಿಗೆ ಬಲಿಯಾಗುತ್ತಿದ್ದು, ರೋಪ್‌ವೇ ನಿರ್ಮಿಸುವ ಮೂಲಕ ಅಲ್ಲಿನ ಜೈವವೈವಿಧ್ಯತೆಗೆ ಸಂಚಕಾರ ತರಲು ಎಲ್ಲ ಸಿದ್ಧತೆಗಳೂ ನಡೆದಿವೆ. ಕಲ್ಲಿದ್ದಲು ಗಣಿಗಾರಿಕೆಯಾಗಲೀ, ಅಣು ವಿದ್ಯುತ್‌ ಉತ್ಪಾದನೆಯಾಗಲೀ ಅಥವಾ ಬೃಹತ್‌ ಅಣೆಕಟ್ಟುಗಳೇ ಆಗಲಿ, ಅರಣ್ಯ ಸಂಪತ್ತಿನ ಸಮಾಧಿಯ ಮೇಲೆ ನಿರ್ಮಿತವಾಗುವ ಈ ಮಾರುಕಟ್ಟೆ ಸಾಮ್ರಾಜ್ಯಗಳನ್ನು ವಿರೋಧಿಸುವುದೂ ಸಹ “ ದೇಶದ್ರೋಹ ” ಅಥವಾ “ ಅಭಿವೃದ್ಧಿ ವಿರೋಧ ” ಎಂಬ ಹಣೆಪಟ್ಟಿಯನ್ನು ಹೊತ್ತು ಹೋರಾಟ ನಡೆಸಬೇಕಿದೆ.

ನಗರೀಕರಣ ಹೆಚ್ಚಾದಂತೆಲ್ಲಾ ಜನದಟ್ಟಣೆ ಮತ್ತು ವಾಹನದಟ್ಟಣೆಯೂ ಹೆಚ್ಚಾಗುತ್ತಿದ್ದು, ಆಧುನಿಕ ನಾಗರಿಕತೆಯಲ್ಲಿ ಈ ದಟ್ಟಣೆಯಿಂದುಂಟಾಗುವ ಪರಿಸರ ಮಾಲಿನ್ಯದ ಪರಿಜ್ಞಾನವೇ ಇಲ್ಲದಂತಾಗುತ್ತಿದೆ. ವಾಹನಗಳು ಉಗುಳುವ ಹೊಗೆ, ದಿನಕ್ಕೆ 20 ಗಂಟೆಗಳ ಕಾಲವಾದರೂ ವಾಹನಗಳಿಂದ ಉಂಟಾಗುವ ಶಬ್ದ ಮಾಲಿನ್ಯ, ನಗರೀಕೃತ ಜೀವನದಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಮತ್ತೊಬ್ಬರ ಹೊಣೆಯನ್ನಾಗಿ ಮಾಡಿರುವ ಆಧುನಿಕ ಮಾನವ ಸಮಾಜದ ಬೇಜವಾಬ್ದಾರಿ ನಡವಳಿಕೆ ಇವೆಲ್ಲವೂ ನಮ್ಮ ಸುತ್ತಲಿನ ಪರಿಸರವನ್ನೇ ಗೊಬ್ಬರದ ಗುಂಡಿಗಳನ್ನಾಗಿ ಮಾಡುತ್ತಿದೆ.

ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹಣೆ, ಶೇಖರಣೆ, ಸಂಸ್ಕರಣೆ ಮತ್ತು ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಂಡು ಕೋಟ್ಯಂತರ ರೂಗಳನ್ನು ಖರ್ಚು ಮಾಡಲಾಗುತ್ತಿದೆ. ಆದರೂ ರಸ್ತೆಬದಿಯ ಕಸದ ರಾಶಿ ಇಲ್ಲದ ಬಡಾವಣೆಗಳನ್ನು ಎಲ್ಲೆಂದರಲ್ಲಿ ಕಾಣಬಹುದಾಗಿದೆ. ಗಂಗಾನದಿಯ ಮಾಲಿನ್ಯದ ಬಗ್ಗೆ ಸದಾ ಪರಿತಪಿಸುತ್ತಾ ಭಾವುಕವಾಗುವ ಮಧ್ಯಮ ವರ್ಗದ ಮನಸುಗಳು ತಮ್ಮ ರಸ್ತೆಯಲ್ಲೇ ಇಕ್ಕೆಲಗಳಲ್ಲಿರುವ ಕಸದ ರಾಶಿಯನ್ನು ಕಂಡೂ ಕಾಣದಂತೆ ಇರುತ್ತವೆ. ಈ ಕಸದ ರಾಶಿಯೇ ಬೀಡಾಡಿ ದನಗಳಿಗೆ ಭೂರಿಭೋಜನದ ಕೇಂದ್ರಗಳೂ ಆಗಿರುತ್ತವೆ.

ಅಂದರೆ, ಸಾರ್ವಜನಿಕ ಪರಿಕಲ್ಪನೆಯಲ್ಲಿ “ ಪರಿಸರ ” ಒಂದು ಅಮೂರ್ತ ಪ್ರಜ್ಞೆಯಾಗಿ ಮಾತ್ರ ಕಂಡುಬರುತ್ತಿದೆ. ಅಥವಾ ಅತೀತತೆಯ ನೆಲೆಯಲ್ಲಿ, ಭಾವನಾತ್ಮಕತೆಯ ನೆಲೆಯಲ್ಲಿ ಮಾತ್ರವೇ ಕಂಡುಬರುತ್ತಿದೆ. ಹಾಗಾಗಿಯೇ ನದಿ ಸ್ವಚ್ಚತೆಯ ಬಗ್ಗೆ ಉಪನ್ಯಾಸಗಳನ್ನು ನೀಡುವವರೂ ಸಹ, ನದಿ ತೀರಗಳಲ್ಲಿ ನಡೆಯುವ ಧಾರ್ಮಿಕ ಚಟುವಟಿಕೆಗಳನ್ನಾಗಲೀ, ಅದರಿಂದ ಉಂಟಾಗುವ ಮಾಲಿನ್ಯವನ್ನಾಗಲೀ ಗಂಭೀರವಾಗಿ ಪರಿಗಣಿಸುವುದೇ ಇಲ್ಲ.

ಮೈಸೂರಿನ ಸುತ್ತಲಿನ ಕಾವೇರಿ, ಕಪಿಲೆ, ಕಬಿನಿ ನದಿಯ ತೀರಗಳಲ್ಲಿ ನಡೆಯುವ ಚಟುವಟಿಕೆಗಳನ್ನು ನಿರ್ಬಂಧಿಸುವುದು ಪರಿಸರ ಪ್ರಜ್ಞೆಯ ಒಂದು ಭಾಗವಾದಾಗ ಮಾತ್ರವೇ ನಮ್ಮ ಜಲಮಾಲಿನ್ಯ ಕುರಿತ ಪ್ರಲಾಪಗಳಿಗೆ ಅರ್ಥ ಮೂಡಲು ಸಾಧ್ಯ. ಇಲ್ಲಿ ಧಾರ್ಮಿಕ ನಂಬಿಕೆಗಳ ಪ್ರಶ್ನೆ ಎದುರಾಗುವುದಾದರೂ, ನದಿ ನೀರನ್ನು ಮಲಿನಗೊಳಿಸದೆಯೇ ಈ ವಿಧಿವಿಧಾನಗಳನ್ನು ಆಚರಿಸಬಹುದಾದ ಮಾರ್ಗಗಳನ್ನೂ ಕಂಡುಕೊಳ್ಳಬೇಕಿದೆ. ಜನಸಾಮಾನ್ಯರ ಶ್ರದ್ಧಾಭಕ್ತಿಗಳಿಗೆ ಭಂಗ ಉಂಟುಮಾಡದೆಯೇ ಈ ನದಿಗಳ ಮತ್ತು ಬೆಟ್ಟಗುಡ್ಡಗಳ ನೈಸರ್ಗಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ವಿಶಾಲ ಮನೋಭಾವವನ್ನು ಆಧುನಿಕ ಸಮಾಜ ರೂಢಿಸಿಕೊಳ್ಳಬೇಕಿದೆ.

ಇದಕ್ಕೆ ಅಡ್ಡಿಯಾಗಬಹುದಾದ ಮಾರುಕಟ್ಟೆ, ವಾಣಿಜ್ಯ ಮತ್ತು ಪ್ರವಾಸೋದ್ಯಮದ ಹಿತಾಸಕ್ತಿಗಳಿಗೆ ಎಲ್ಲ ನೈಸರ್ಗಿಕ ಸಂಪನ್ಮೂಲಗಳೂ ಬಂಡವಾಳದ ಮೂಲಗಳಾಗಿಯೇ ಕಾಣುವುದರಿಂದ, ಆಡಳಿತ ನೀತಿಯನ್ನು ರೂಪಿಸುವ ಸರ್ಕಾರಗಳು ತಮ್ಮ ನಿಸರ್ಗ ಪ್ರಜ್ಞೆ ಮತ್ತು ಪರಿಸರ ಪ್ರಜ್ಞೆಯನ್ನು ಮತ್ತಷ್ಟು ಸೂಕ್ಷ್ಮಗೊಳಿಸಬೇಕಿದೆ. ಬಂಡವಾಳಶಾಹಿ ಅಭಿವೃದ್ಧಿಯ ಮಾದರಿಗಳು ನಿಸರ್ಗವನ್ನು ಶೋಷಣೆಗೊಳಪಡಿಸುವುದೇ ಅಲ್ಲದೆ ಪರಿಸರ ಅಸಮತೋಲನವನ್ನು ಹೇಗೆ ಸೃಷ್ಟಿಸುತ್ತದೆ ಎನ್ನಲು ಕೇದಾರನಾಥದಲ್ಲಿ ನಡೆಯುತ್ತಿರುವ ಭೂಕುಸಿತಗಳು, ಎರಡು ವರ್ಷದ ಹಿಂದೆ ಕರ್ನಾಟಕದ ಕೊಡಗಿನಲ್ಲಿ ಸಂಭವಿಸಿದ ಅನಾಹುತಗಳು ಕೇವಲ ನಿದರ್ಶನಗಳಷ್ಟೇ. ಆಧುನಿಕ ನಗರೀಕರಣ ಪ್ರಕ್ರಿಯೆಗೆ ಬಲಿಯಾಗುತ್ತಿರುವ ನದಿ ತೀರಗಳು ಮರಳು ಗಣಿಗಾರಿಕೆಯಿಂದ ಒಡಲು ಬರಿದುಮಾಡಿಕೊಳ್ಳುತ್ತಿರುವಂತೆಯೇ, ನಿಸರ್ಗ ಸಮತೋಲನ ಕಾಪಾಡುವ ಬೆಟ್ಟಗುಡ್ಡಗಳು ನಿರ್ಮಾಣ ಕಾಮಗಾರಿಗಳಿಗೆ ಜಲ್ಲಿ, ಕಲ್ಲು, ಎಮ್‌ಸ್ಯಾಂಡ್‌ ಪೂರೈಸುವ ಸಲುವಾಗಿ ಬರಿದಾಗುತ್ತಿವೆ.

ಮೈಸೂರಿನಲ್ಲೇ ಇರುವ ತ್ಯಾಜ್ಯ ವಿಲೇವಾರಿ ಘಟಕವನ್ನು “ ಸೂಯೆಜ್‌ ಫಾರ್ಮ್‌ ” ಎಂದು ಮುದ್ದಾಗಿ ಕರೆಯಲಾಗುತ್ತದೆ. ವಾಸ್ತವದಲ್ಲಿ ಅದು “ ಸೆವೇಜ್‌ ಫಾರ್ಮ್‌ ” ಅಂದರೆ ಇಡೀ ನಗರದ ತ್ಯಾಜ್ಯವನ್ನು ಸಂಗ್ರಹಿಸುವ ಬೃಹತ್‌ ಕಸದ ಬೆಟ್ಟಗಳನ್ನು ಹೊಂದಿರುವ ಒಂದು ತಾಣ. ಈ ತಾಣದ ಸುತ್ತಲಿನ ಜನತೆ ಎದುರಿಸುತ್ತಿರುವ ಆರೋಗ್ಯದ ಸಮಸ್ಯೆಗಳು ಮೈಸೂರು ಮಹಾನಗರ ಪಾಲಿಕೆಯನ್ನಾಗಲೀ, ಅದೇ ವಲಯದಲ್ಲಿ ವಾಸಿಸುವ ಜನಪ್ರತಿನಿಧಿಗಳಿಗಾಗಲೀ ಸಮಸ್ಯೆ ಎನಿಸುತ್ತಲೇ ಇಲ್ಲ.

ಆದರೂ ಅಲ್ಲಿನ ನಿವಾಸಿಗಳು ತಮ್ಮ ಜೀವನ ನಿರ್ವಹಣೆಗಾಗಿ ಆರೋಗ್ಯ ಕಾಪಾಡಿಕೊಂಡು, ಹಲವು ಅನಾರೋಗ್ಯಗಳೊಂದಿಗೇ ಬದುಕುತ್ತಿದ್ದಾರೆ. ಬಂಡವಾಳಶಾಹಿ ಅರ್ಥವ್ಯವಸ್ಥೆಯಲ್ಲಿ ಅನಾರೋಗ್ಯವನ್ನು ತಪ್ಪಿಸುವ ಯಾವುದೇ ಯೋಜನೆ ಇರುವುದಿಲ್ಲ ಬದಲಾಗಿ ತಲೆದೋರುವ ಅನಾರೋಗ್ಯಗಳ ನಿವಾರಣೆಗೆ “ ಕಲ್ಯಾಣ ಯೋಜನೆಗಳನ್ನು ” ರೂಪಿಸಲಾಗುತ್ತದೆ. ಯಶಸ್ವಿನಿ, ಜನೌಷಧಿ, ಆಯುಷ್ಮಾನ್‌ ಇತ್ಯಾದಿ. ಇದು ಬಂಡವಾಳ ವ್ಯವಸ್ಥೆಯ ದ್ವಂದ್ವಗಳಲ್ಲಿ ಅತ್ಯಂತ ಪ್ರಧಾನವಾದುದು.

ಈ ಕಾಳಜಿ, ಕಳಕಳಿ ಮತ್ತು ದ್ವಂದ್ವಗಳ ನಡುವೆಯೇ ನಾವು ಮತ್ತೊಂದು ಪರಿಸರ ದಿನವನ್ನು ಆಚರಿಸುತ್ತಿದ್ದೇವೆ. ಕಸ ಆಯಲು ಬರುವವರು ಕೈಗವುಸುಗಳಿಲ್ಲದ, ಮುಖಗವುಸುಗಳಿಲ್ಲದೆ, ಸೂಕ್ತ ವೇತನ ಸೌಲಭ್ಯಗಳೂ ಇಲ್ಲದೆ ತಮ್ಮ ಜೀವವನ್ನೇ ಪಣಕಟ್ಟಿಟ್ಟು ಮನೆಮನೆಗೆ ಬರುತ್ತಿರುತ್ತಾರೆ. ಆದರೂ ರಸ್ತೆಯ ಇಕ್ಕೆಲಗಳಲ್ಲಿ ತಾಜ್ಯದ ರಾಶಿ ರಾರಾಜಿಸುತ್ತಿರುತ್ತದೆ. ಮತಯಾಚನೆಗೆ ಬರುವ ಜನಪ್ರತಿನಿಧಿಗಳು ಮೂಗಿನೊಂದಿಗೆ ಒಳಗಣ್ಣನ್ನೂ ಮುಚ್ಚಿಕೊಂಡು ಹಾದು ಹೋಗಿಬಿಡುತ್ತಾರೆ.

ಬೀಡಾಡಿ ದನಗಳು ಈ ಕಸದ ರಾಶಿಗಳಲ್ಲಿ ಬಾಯಾಡಿಸಿ ಮತ್ತಷ್ಟು ಹರಡಿಬಿಡುತ್ತವೆ. ಸುತ್ತ ವಾಸಿಸುವ ನಾಗರಿಕರು, ಗಂಗೆಯ ಪಾವಿತ್ರ್ಯತೆ, ಹಿಮಾಲಯದ ಭವ್ಯತೆಯ ಭ್ರಮೆಯಲ್ಲಿ ತೇಲಾಡುತ್ತಾ ಸ್ವಚ್ಚ ಭಾರತದ ಫಲಾನುಭವಿಗಳಾಗಿ ತಮ್ಮ ಬದುಕು ಸವೆಸುತ್ತಾ ಸಾಗುತ್ತಾರೆ. ಪರಿಸರ ಮಾಲಿನ್ಯ ಬಾಧಿಸಬೇಕಿರುವುದು ಈ ಜನತೆಯನ್ನು, ಜಾಗೃತಿ ಮೂಡಿಸಬೇಕಿರುವುದು ಈ ಜನತೆಯ ನಡುವೆ, ಸಾರ್ವಜನಿಕ ವೇದಿಕೆ ಅಥವಾ ವಿಚಾರ ಸಂಕಿರಣಗಳಲ್ಲಿ ಅಲ್ಲ. ಈ ಸುಡುವಾಸ್ತವವನ್ನು ಅರ್ಥಮಾಡಿಕೊಂಡರೆ ಪರಿಸರ ದಿನಾಚರಣೆಯೂ ಸಾರ್ಥಕವಾದೀತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending