Connect with us

ಬಹಿರಂಗ

ಕೋವಿದನ ನಡುವೆ – ಸುಳ್ಳು ಸುದ್ದಿಯ ವ್ಯಸನವೂ ಮಾಧ್ಯಮವೆಂಬೋ ವ್ಯಾಧಿಯೂ

Published

on

  • ನಾ ದಿವಾಕರ

ಸುದ್ದಿ ಎನ್ನುವುದೇ ಸತ್ಯ-ಮಿಥ್ಯೆಯ ಸಂಗಮ. ಏಕೆಂದರೆ ಅದು ಮನುಷ್ಯನನ್ನು ತಲುಪುವುದು ಬೇರೊಂದು ಮೂಲದಿಂದ. ಎಲ್ಲೋ ನಡೆದ ಒಂದು ವಿದ್ಯಮಾನ ಯಾವುದೋ ಒಂದು ಮೂಲದಿಂದ ನಮ್ಮ ಗಮನಕ್ಕೆ ಬಂದಾಗ ನಾವು ಅದನ್ನು ಸುದ್ದಿ, ವಾರ್ತೆ, ಸಮಾಚಾರ ಮುಂತಾದ ಹೆಸರುಗಳಿಂದ ಗುರುತಿಸುತ್ತೇವೆ. ಸುದ್ದಿಯ ಮೂಲ ಯಾವುದೆಂದು ತಿಳಿಯುವ ಗೋಜಿಗೆ ನಾವು ಹೋಗುವುದಿಲ್ಲ. ನಮಗೆ ತಲುಪಿದ ವಿಷಯ ಸತ್ಯವೋ ಮಿಥ್ಯೆಯೋ ಎಂದು ತಿಳಿಯಲೂ ಆಸಕ್ತಿ ತೋರುವುದಿಲ್ಲ. ನಮ್ಮ ಮನಸ್ಥಿತಿಗೆ ತಕ್ಕಂತೆ, ನಮ್ಮ ಆಲೋಚನೆಗೆ ಪೂರಕವಾಗಿ ನಮ್ಮ ಕಿವಿಗೆ ಬಿದ್ದ ಸಮಾಚಾರವನ್ನು ನಂಬುವುದು ಬಿಡುವುದು ಮಾಡುತ್ತೇವೆ.

ಸಂಪರ್ಕ ಮಾಧ್ಯಮಗಳೇ ಇಲ್ಲದ ಕಾಲದಲ್ಲಿ ಮಾನವ ಸಮಾಜ ಹೇಗೆ ನಿರ್ವಹಿಸಿರಬಹುದು ಎಂದು ಒಮ್ಮೆ ಯೋಚಿಸೋಣ. ಆಗ ಸುದ್ದಿ ಸಮಾಚಾರ ವಾರ್ತೆ ಇದಾವುದೂ ಇರಲಿಕ್ಕಿಲ್ಲ ಅಲ್ಲವೇ. ತಾವು ಕಣ್ಣಾರೆ ನೋಡಿದ್ದನ್ನು ಜನರು ತಮ್ಮನ್ನು ನೇರವಾಗಿ ಸಂಪರ್ಕಿಸುವವರೊಡನೆ ಹಂಚಿಕೊಳ್ಳುತ್ತಿದ್ದರು. ಅಲ್ಲಿ ವಿಷಯದ ವಿನಿಮಯ ಮಾತ್ರವೇ ಇತ್ತು, ವಿತರಣೆ, ಪ್ರಸರಣ ಇರುತ್ತಿರಲಿಲ್ಲ. ಮಾನವ ಸಮಾಜ ಹೆಚ್ಚು ವಿಸ್ತರಣೆಯಾಗದಿದ್ದ ಕಾಲದಲ್ಲಿ ಈ ವಿನಿಮಯವೂ ಸಹ ಸೀಮಿತ ಚೌಕಟ್ಟಿನಲ್ಲಿ ಮಾತ್ರವೇ ಇರುತ್ತಿತ್ತು. ಇದನ್ನು ಸಂದೇಶ ಎನ್ನಲಾಗುತ್ತಿತ್ತು ಸುದ್ದಿ ಎನ್ನುತ್ತಿರಲಿಲ್ಲ. ಏಕೆಂದರೆ ಇಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಮಾತ್ರವೇ ವಿಷಯ ಹರಿದಾಡುತ್ತಿತ್ತು. ಈ ಸಂದೇಶಕ್ಕೆ ಒಂದು ವ್ಯಾಪ್ತಿ ದೊರೆತಿದ್ದು ಅಕ್ಷರ ಮತ್ತು ಬರಹ ಒಂದಾದ ಸಂದರ್ಭದಲ್ಲಿ.

ಪಾರಿವಾಳಗಳ ಮೂಲಕ ತಮ್ಮ ಸಂದೇಶವನ್ನು ದೂರದಲ್ಲಿರುವ ತಮ್ಮ ನಿಕಟವರ್ತಿಗಳಿಗೆ ರವಾನಿಸುವ ಪರಂಪರೆಯ ಸಂದರ್ಭದಲ್ಲೂ ವಿನಿಮಯವಾಗುತ್ತಿದ್ದುದು ಪರಸ್ಪರ ಸಂಬಂಧಿತ ವಿಚಾರಗಳು ಮಾತ್ರ. ಇದನ್ನೂ ಸುದ್ದಿ ಎನ್ನಲಾಗುವುದಿಲ್ಲ. ಈ ಸುದ್ದಿ ಅಥವಾ ಸಮಾಚಾರ ಎಂಬ ವಿದ್ಯಮಾನಕ್ಕೆ ಪುಷ್ಟಿ ದೊರೆತದ್ದು ಬಹುಶಃ ರಾಜಪರಂಪರೆಯಲ್ಲಿ ಇದ್ದಿರಬಹುದು. ಅನ್ಯ ರಾಜ್ಯಗಳಲ್ಲಿ ಅಥವಾ ತಮ್ಮದೇ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಿಳಿದುಕೊಳ್ಳಲು ಸಾಮ್ರಾಟರು ತಮ್ಮ ಬೇಹುಗಾರರನ್ನು ವಿವಿಧ ಪ್ರಾಂತ್ಯಗಳಿಗೆ ಕಳುಹಿಸುವ ಪರಂಪರೆ ಸುದ್ದಿ-ಸಮಾಚಾರದ ಉಗಮಕ್ಕೆ ಕಾರಣವಾಯಿತೇನೋ ! ಇಲ್ಲಿ ಸುದ್ದಿಯ ಸತ್ಯಾಸತ್ಯತೆಯ ನಿಷ್ಕರ್ಷೆಗೆ ಸುದ್ದಿ ತರುವ ಬೇಹುಗಾರನ ನಿಷ್ಠೆ ಮತ್ತು ಬದ್ಧತೆಯೇ ಮೂಲ. ಅವನ ಪ್ರಾಮಾಣಿಕತೆಯೇ ಆಧಾರ.

ತನ್ನ ದೊರೆಗೆ ನಿಷ್ಠಾವಂತನಾದ ಬೇಹುಗಾರರಲ್ಲಿ ಎರಡು ವಿಧ. ಮೊದಲನೆಯದು ತನ್ನ ರಾಜನಿಷ್ಠೆಯನ್ನು ಪ್ರದರ್ಶಿಸಲು, ರಾಜನಿಗೆ ಇಷ್ಟವಾಗುವಂತೆ ಸುದ್ದಿಯನ್ನು ಅರುಹುವುದು. ತನ್ನ ದೊರೆಗೆ ಇಷ್ಟವಾಗದ ವಿಚಾರಗಳನ್ನು ಮರೆಮಾಚುವುದು, ಪ್ರಿಯವಾದುದನ್ನು ರಂಜನೀಯವಾಗಿ ಅರುಹುವುದು, ದೊರೆಯ ಆಕ್ರೋಶಕ್ಕೆ ಕಾರಣವಾಗುವ ವಿಚಾರವನ್ನು ಜಾಣ್ಮೆಯಿಂದ ಹೇಳುವುದು, ಇಲ್ಲವೇ ಹೇಳದೆಯೇ ಇರುವುದು, ಹೀಗೆ. ಈ ರೀತಿಯ ಸುದ್ದಿ ತರುವವರು ಸಾಮಾನ್ಯವಾಗಿ ರಾಜನಿಗೆ ಶತ್ರುಗಳನ್ನು ಸೃಷ್ಟಿಸುತ್ತಿದ್ದುದೇ ಹೆಚ್ಚು. ವ್ಯಕ್ತಿಗತವಾಗಿ ತಮಗೆ ಇಷ್ಟವಾಗದವರ ವಿರುದ್ಧ ರಾಜನ ಬಳಿ ಇಲ್ಲದ ವಿಷಯಗಳನ್ನು ಹೇಳುವ ಮೂಲಕ ಆಗಾಗ್ಗೆ ಸಣ್ಣಪುಟ್ಟ ಶತ್ರುಪಾಳಯಗಳನ್ನು ಸೃಷ್ಟಿಸುವ ಪರಂಪರೆಗೆ ದೀರ್ಘ ಇತಿಹಾಸವೇ ಇದೆ ಅಲ್ಲವೇ ?
ಎರಡನೆಯ ವಿಧ ಎಂದರೆ ತಮ್ಮ ಅಸ್ತಿತ್ವ, ಸ್ಥಾನಮಾನ ಉಳಿಸಿಕೊಳ್ಳಲು, ತಮ್ಮ ಸ್ವಂತ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಲು ಸುದ್ದಿಯನ್ನು ತಿರುಚಿ ಹೇಳುವುದು ಇಲ್ಲವೇ ಇಲ್ಲದ ಸುದ್ದಿಯನ್ನು ಸೃಷ್ಟಿಸಿ ಹೇಳುವುದು.

ಇಂಥವರಿಗೆ ರಾಜನಿಷ್ಠೆ ಇರುತ್ತಿತ್ತು ಆದರೆ ರಾಜನಿಗೆ ಇವರ ಮೇಲಿರುತ್ತಿದ್ದ ವಿಶ್ವಾಸವೇ ಇವರ ಬಂಡವಾಳವಾಗುತ್ತಿತ್ತು. ದೊರೆ ತಾನು ಹೇಳಿದ್ದನ್ನು ನಂಬುತ್ತಾನೆ ಎನ್ನುವ ವಿಶ್ವಾಸವೇ ಇವರ ಸುದ್ದಿಮನೆಯ ಕುಲುಮೆಗೆ ಶಾಖ ನೀಡುತ್ತಿತ್ತು. ಇವರ ಭಟ್ಟಂಗಿತನ, ವಂದಿಮಾಗಧ ನಡೆ ರಾಜನ ದೃಷ್ಟಿಯಲ್ಲಿ ಪ್ರಾಮಾಣಿಕತೆ ಎನಿಸಿದರೂ, ಅದು ಅಪಾಯಕಾರಿಯಾಗಿ ಪರಿಣಮಿಸುತ್ತಿತ್ತು. ಆದರೆ ಇವರು ಮುಟ್ಟಿಸುತ್ತಿದ್ದ ಸುದ್ದಿ ರಾಜನನ್ನೂ ಸಂಪ್ರೀತಗೊಳಿಸುತ್ತಿತ್ತು. ಹಾಗಾಗಿ ಇವರ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುತ್ತಿರಲಿಲ್ಲ.
ದೊರೆಗೆ ಈ ಎರಡೂ ರೀತಿಯ ಸುದ್ದಿ ವಾಹಕರು ಪ್ರಿಯವಾಗಿಯೇ ಕಾಣುತ್ತಿದ್ದರು. ಏಕೆಂದರೆ ತನ್ನ ಸಾಮ್ರಾಜ್ಯದ ರಕ್ಷಣೆಗೆ ಇದು ಅತ್ಯವಶ್ಯವಾಗುತ್ತಿತ್ತು.

ರಾಜಪ್ರಭುತ್ವದ ಕಾಲದಲ್ಲೇ ಬಹುಶಃ ಸುಳ್ಳುಸುದ್ದಿಯ ವ್ಯಸನ ಉಗಮಿಸಿರಬೇಕು. ಹೊರ ರಾಜ್ಯದಿಂದ ಅಥವಾ ಶತ್ರು ಪಾಳಯದಿಂದ ಸತ್ಯವೋ ಸುಳ್ಳೋ ಯಾವುದೋ ಒಂದು ಸುದ್ದಿ ತರದಿದ್ದರೆ ಸುದ್ದಿವಾಹಕರು ದೊರೆಯ ಕೆಂಗಣ್ಣಿಗೆ ಗುರಿಯಾಗಬೇಕಿತ್ತು. ಬಹುಶಃ ಈ ಕಾಲಘಟ್ಟದಿಂದಲೇ ಸುದ್ದಿಮನೆಯ ಒಂದು ನಿರ್ದಿಷ್ಟ ಪರಿಕಲ್ಪನೆ ಮೂಡಿರಬೇಕು. ಈ ಪರಿಕಲ್ಪನೆಯ ಚೌಕಟ್ಟಿನಲ್ಲೇ ಸುಳ್ಳು ಸುದ್ದಿಯ ವ್ಯಸನವೂ ನೆಲೆ ಕಂಡಿರಬೇಕು.

ದೊರೆಗೆ ಏನಾದರೂ ಸುದ್ದಿ ಮುಟ್ಟಿಸಬೇಕು ಎನ್ನುವುದೇ ಸುದ್ದಿವಾಹಕರ ಆದ್ಯತೆಯಾಗಿರಲಿಕ್ಕೂ ಸಾಕು.
(ಇವಿಷ್ಟೂ ಇತಿಹಾಸದ ಆಕರಗಳನ್ನು ಆಧರಿಸಿ ಮಂಡಿಸಿದ ವಿಚಾರ ಅಲ್ಲ. ಹೀಗಿದ್ದಿರಬಹುದು ಎನ್ನುವ ಕಲ್ಪನೆ. ಇರಲೂಬಹುದಲ್ಲವೇ, ಇತಿಹಾಸದ ಅಧ್ಯಯನದಲ್ಲಿ ಗಮನಿಸಿರುವುದೇ ಆಗಿದೆ)
ಈಗ 21ನೆಯ ಶತಮಾನದ 3ನೆಯ ದಶಮಾನಕ್ಕೆ ಬರೋಣ. ಇಂದು ನಮಗೆ ಸುದ್ದಿ ಎನ್ನುವುದು ಮನೆಯ ಮಾತಿನಂತಾಗಿಬಿಟ್ಟಿದೆ. ಯಾವುದು ಸುದ್ದಿ, ಯಾವುದು ಸಂದೇಶ ಎಂಬ ವ್ಯತ್ಯಾಸವನ್ನೇ ಗ್ರಹಿಸಲಾರದಷ್ಟು ಮಟ್ಟಿಗೆ ಸಂಪರ್ಕ ಮತ್ತು ಸಂವಹನ ಮಾರ್ಗಗಳು ನಮ್ಮನ್ನು ಆವರಿಸಿಕೊಂಡುಬಿಟ್ಟಿವೆ. “ಆಕಾಶವಾಣಿ ವಾರ್ತೆಗಳು ಓದುತ್ತಿರುವವರು ಕೆ.ಎಸ್. ಪುರುಷೋತ್ತಮ್” ಅಥವಾ “ ಆಕಾಶವಾಣಿ ಪ್ರದೇಶ ಸಮಾಚಾರ ಓದುತ್ತಿರುವವರು ನಾಗಮಣಿ ಎಸ್ ರಾವ್ ” ಈ ದನಿಗಳನ್ನೊಮ್ಮೆ ನೆನಪಿಸಿಕೊಳ್ಳೋಣ. ಸುದ್ದಿ ಮತ್ತು ಸಂದೇಶದ ನಡುವಿನ ವ್ಯತ್ಯಾಸವನ್ನು ಅವರ ದನಿಗಳಲ್ಲಿ ಕಾಣಬಹುದಿತ್ತು. ಇಂದು ನಾವು ಆಕಾಶದಲ್ಲೇ ವಿಹರಿಸುತ್ತಿದ್ದೇವೆ ಆದರೆ ವಾಣಿ ಕಡಲ ಪಾಲಾಗಿದೆ.

ಹಾಗಾಗಿ ಸುದ್ದಿಮನೆಗಳೇ ಅನಿವಾರ್ಯ ಎನಿಸಿಬಿಟ್ಟಿದೆ. ಸುದ್ದಿಯ ವ್ಯಾಪ್ತಿ ಹೆಚ್ಚಾಗಿದೆ. ಆದರೆ ಮೂಲ ಸ್ವರೂಪ ಬದಲಾಗಿಲ್ಲ. ಆದರೆ ಸುದ್ದಿ ಮತ್ತು ಸಮಾಚಾರದ ಬಗ್ಗೆ ನಮ್ಮ ಗ್ರಹಿಕೆ ಕೊಂಚ ಬದಲಾದಂತಿದೆ. ನಾಲ್ಕೈದು ದಶಕಗಳ ಹಿಂದೆ ಪರಿಚಯಸ್ಥರು ಎದುರಾಗಿ ಏನ್ಸಮಾಚಾರ ಅಂದ್ರೆ ಏನಿಲ್ಲ ಎನ್ನುತ್ತಿದ್ದೆವು ಇಲ್ಲವಾದರೆ ನಮ್ಮನ್ನೇ ಕುರಿತು ಒಂದೆರಡು ಮಾತುಗಳನ್ನಾಡಿ ನಡೆಯುತ್ತಿದ್ದೆವು. ಈಗ ಏನ್ಸಮಾಚಾರ ಅಂದ್ರೆ ಸಾಕು ನೆಹರೂ ಅವರಿಂದ ಮೋದಿಯವರೆಗೆ, ಮೊಘಲರಿಂದ ಒಡೆಯರ್ ವರೆಗೆ ಮಾತಿನ ಲಹರಿ ಬೆಳೆಯುತ್ತದೆ. ಇತಿಹಾಸ, ವಿಜ್ಞಾನ, ಸುಜ್ಞಾನ, ಅಜ್ಞಾನ ಎಲ್ಲವನ್ನೂ ಮಾತನಾಡಿ ಕೊನೆಗೆ ಕೈ ಕುಲುಕಲೂ ಆಗದಷ್ಟು ಮನಸು ಭಾರ ಮಾಡಿಕೊಂಡು ಎರಡು ಧೃವಗಳತ್ತ ಮುಖ ಮಾಡಿ ಹೊರಟುಬಿಡುತ್ತೇವೆ. ಇದು ಸಾರ್ವತ್ರಿಕ ಸತ್ಯ ಅಲ್ಲ, ಆದರೆ ನಿರಾಕರಿಸುವ ವಿದ್ಯಮಾನವೂ ಅಲ್ಲ.

ಏಕೆ ಹೀಗೆ ? ಏಕೆಂದರೆ ಇಂದು ನಮಗೆ ಸುದ್ದಿ ಎಂದರೆ ನಮಗೆ ನೀಡಲಾಗುವ ಅಥವಾ ಒದಗಿಸಲಾಗುವ ಮಾಹಿತಿಯೇ ಹೊರತು, ನಾವು ಪ್ರತ್ಯಕ್ಷವಾಗಿ ನೋಡಿ ಪ್ರಮಾಣಿಸಿದ ಮಾಹಿತಿ ಅಲ್ಲ. ಹಾಗೊಮ್ಮೆ ನಾವು ನೋಡಿದ್ದುದೇ ಆದರೂ, ನಮ್ಮ ಕಣ್ಣೋಟವೇ ಸರಿಯಿಲ್ಲವೇನೋ ಎನ್ನುವ ಮಟ್ಟಿಗೆ ಸುದ್ದಿಮನೆಗಳು ಒಂದು ಘಟನೆಯನ್ನು ರುಬ್ಬಿ ರುಬ್ಬಿ ಚಟ್ನಿ ಮಸಾಲೆ ಮಾಡಿಬಿಟ್ಟಿರುತ್ತವೆ. ಸುದ್ದಿ ಮತ್ತು ಸಮಾಚಾರಗಳನ್ನು ಜನತೆಗೆ ತಲುಪಿಸುವ ಮುದ್ರಣ ಮಾಧ್ಯಮ ಯುಗದ ಕನಿಷ್ಟ ಪ್ರಜ್ಞಾವಂತಿಕೆಯನ್ನೂ ವಿದ್ಯುನ್ಮಾನ ಮಾಧ್ಯಮದ ಯುಗದಲ್ಲಿ ಕಾಣಲಾಗುತ್ತಿಲ್ಲ. ಏಕೆಂದರೆ ಬೆರಳ ತುದಿಯಲ್ಲಿ ಲಭಿಸುವ ಸುದ್ದಿಯನ್ನು ಕ್ಷಣಮಾತ್ರದಲ್ಲಿ ತಮ್ಮ ಪರದೆಯ ಮೇಲೆ ಬಿಂಬಿಸದೆ ಹೋದರೆ ಸುದ್ದಿಮನೆಯ ಅಸ್ತಿತ್ವಕ್ಕೆ ಕುಂದುಬರುತ್ತದೆ. ಮಾರುಕಟ್ಟೆಯಲ್ಲಿ ಮೌಲ್ಯ ಕುಸಿಯುತ್ತದೆ.

ಮತ್ತೊಮ್ಮೆ ಆಕಾಶವಾಣಿಯತ್ತ ನೋಡೋಣ. ಆಗಿನ ವಾರ್ತೆಗಳನ್ನು ಓದುತ್ತಿರುವವರ ಧ್ವನಿಯನ್ನು ಕೇಳಿಯೇ ದೇಶದಲ್ಲಿ ಏನೋ ಆಘಾತಕಾರಿ ಘಟನೆ ಸಂಭವಿಸಿದೆ, ಯಾರೋ ಮಹನೀಯರು ಮೃತಪಟ್ಟಿದ್ದಾರೆ ಎಂದು ಹೇಳಬಹುದಿತ್ತು. ಏಕೆಂದರೆ ಇಂತಹ ವಿಷಾದದ ಸುದ್ದಿಯನ್ನು ಓದುವಾಗ ಅವರ ಮೆಲುದನಿಯಲ್ಲಿ ವಿಷಾದದ ಎಳೆ ಕಂಡುಬರುತ್ತಿತ್ತು. ಇದನ್ನು ಈಗಿನ ಸುದ್ದಿಮನೆಗಳಲ್ಲಿ ಊಹಿಸಲು ಸಾಧ್ಯವೇ ? “ ಕೋರೋನಾದಿಂದ ಸತ್ತವರ ಸಂಖ್ಯೆ ಒಂದು ಲಕ್ಷ ದಾಟಿದೆ ” ಎಂದು ಏರುದನಿಯಲ್ಲಿ ಹೇಳುವ ನಿರೂಪಕಿಯ ಮುಖಭಾವವನ್ನು ನೋಡಿದರೆ, ಏನೋ ಸಂಭ್ರಮ ಮನೆಮಾಡಿದಂತೆ ಕಾಣುತ್ತದೆ.

ಇಲ್ಲಿ ಸಂಯಮ ಮತ್ತು ಸಂವೇದನೆಯ ಕೊರತೆ ಎದ್ದು ಕಾಣುತ್ತದೆ. ಇದರ ನೇರ ಪರಿಣಾಮವೇ ಈ ಸುದ್ದಿಮನೆಗಳನ್ನು ಆವರಿಸಿರುವ ಸುಳ್ಳು ಸುದ್ದಿಯ ವ್ಯಸನ. ಇಲ್ಲಿ ಪುನಃ ರಾಜಪ್ರಭುತ್ವಕ್ಕೆ ಮರಳೋಣ. ಇಂದಿನ ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆಗೂ, ಅಂದಿನ ರಾಜಪ್ರಭುತ್ವಕ್ಕೂ ವ್ಯತ್ಯಾಸವೇನಾದರೂ ಇದ್ದರೆ ಅದು ಆಯ್ಕೆ ಪ್ರಕ್ರಿಯೆಯಲ್ಲಿ ಮಾತ್ರ ಎನ್ನುವುದನ್ನು ತಾತ್ವಿಕವಾಗಿಯಾದರೂ ಒಪ್ಪಲೇಬೇಕು. ಏಕೆಂದರೆ ಎಷ್ಟೇ ಪ್ರಜಾಸತ್ತಾತ್ಮಕ ಧೋರಣೆಯನ್ನು ಅನುಸರಿಸಿದರೂ ಆಡಳಿತಾರೂಢ ಸರ್ಕಾರಗಳು ಗತಕಾಲದ ಸಾಮ್ರಾಟರನ್ನೇ ಹೋಲುವಂತೆ ವರ್ತಿಸುತ್ತಿರುವುದನ್ನು ಭಾರತದಲ್ಲಂತೂ ಕಾಣುತ್ತಲೇ ಬಂದಿದ್ದೇವೆ. ದೊರೆ ಬದಲಾಗುತ್ತಾನೆ, ರಾಜಗೃಹದ ಲಕ್ಷಣಗಳು ಬದಲಾಗುವುದಿಲ್ಲ. ಪ್ರಭುತ್ವದ ಲಕ್ಷಣಗಳೂ ಬದಲಾಗುವುದಿಲ್ಲ.

ಇಲ್ಲಿ ರಾಜಪ್ರಭುತ್ವ ಕಾಲದ ಸುದ್ದಿವಾಹಕರತ್ತ ನೋಡೋಣ. ಎರಡೂ ವಿಧದ ಸುದ್ದಿವಾಹಕರು ಇಂದಿಗೂ ಇದ್ದಾರೆ ಅಲ್ಲವೇ ? ಆಗ ದೊರೆಗೆ ಸುದ್ದಿ ತಲುಪಿಸುತ್ತಿದ್ದರು. ಈಗ ದೊರೆಗೆ ಬೇಕಾದಂತೆ ಜನತೆಗೆ ಸುದ್ದಿ ತಲುಪಿಸುತ್ತಾರೆ. ದೊರೆಯ ಸಂತೃಪ್ತಿಯೇ ತಮ್ಮ ಆತ್ಮತೃಪ್ತಿ ಎಂದು ಭಾವಿಸುವ ಒಂದು ಪಡೆ, ತಮ್ಮ ಅಸ್ತಿತ್ವ ರಕ್ಷಣೆಗಾಗಿ ದೊರೆಯನ್ನು ಹೇಗಾದರೂ ತೃಪ್ತಿಪಡಿಸುವ ಮತ್ತೊಂದು ಪಡೆ ಎರಡೂ ಆಯಾಮಗಳಲ್ಲಿ ನಾವಿಂದು ಅತ್ಯಾಧುನಿಕ ಸುದ್ದಿಮನೆಗಳನ್ನು ನೋಡುತ್ತಿದ್ದೇವೆ. ಇದರಿಂದ ಹೊರತಾದ ಮತ್ತೊಂದು ಆಯಾಮವೂ ಇದ್ದರೂ, ಅದು ಆಡಳಿತಾರೂಢ ಪಕ್ಷವನ್ನು ಅವಲಂಬಿಸುತ್ತದೆ. ಅಂದರೆ ವ್ಯವಸ್ಥೆಯ ವಿರುದ್ಧ, ಪ್ರಭುತ್ವದ ವಿರುದ್ಧ ಮಾತನಾಡುವ ಸುದ್ದಿಮನೆ ಇರುವುದು ಊಹಿಸಲಸಾಧ್ಯ .

ರಾಜಪ್ರಭುತ್ವದ ಲಕ್ಷಣಗಳನ್ನು ರಾಜಭವನಗಳಲ್ಲಿ ಕಾಣಲಾಗದಿದ್ದರೂ ಈ ಸುದ್ದಿಮನೆಗಳ ಮೂಲಕ ಕಾಣಬಹುದು.
ಇಂದಿನ ವಿದ್ಯುನ್ಮಾನ ಮಾಧ್ಯಮ ಮತ್ತು ಕೊಂಚಮಟ್ಟಿಗೆ ಮುದ್ರಣ ಮಾಧ್ಯಮಗಳ ಸುಳ್ಳುಸುದ್ದಿಯ ವ್ಯಸನಕ್ಕೆ ಇದೇ ಮೂಲ ಕಾರಣ. ಸುದ್ದಿಮನೆಗಳು ಸುದ್ದಿ ಸಮಾಚಾರವನ್ನು ಸತ್ಯಸಂಧರಂತೆ ಜನತೆಗೆ ಮುಟ್ಟಿಸಲು ಸ್ಥಾಪನೆಯಾಗುತ್ತಿಲ್ಲ. ಆಳುವ ವರ್ಗಗಳಿಗೆ ಅಥವಾ ಆಡಳಿತಾರೂಢ ಪಕ್ಷಗಳಿಗೆ ಅನುಕೂಲವಾಗುವಂತೆ ಸುದ್ದಿಯನ್ನು ಜನರ ಬಳಿ ಕೊಂಡೊಯ್ಯಲು ಸ್ಥಾಪನೆಯಾಗುತ್ತಿವೆ. ಹಾಗಾಗಿ ಜನರಿಗೆ ಏನು ಬೇಕು ಎನ್ನುವುದು ಇಲ್ಲಿ ಪ್ರಸ್ತುತ ಎನಿಸುವುದೇ ಇಲ್ಲ. ನಾವು ಕೊಟ್ಟಿದ್ದನ್ನು ಜನರು ಸ್ವೀಕರಿಸುತ್ತಾರೆ ಎನ್ನುವ ಊಳಿಗಮಾನ್ಯ ಧೋರಣೆಯೇ ಪ್ರಧಾನವಾಗುತ್ತದೆ. ಇದು ಸಮಾಚಾರಗಳಿಂದ ಧಾರಾವಾಹಿಯವರೆಗೂ ಸತ್ಯ. ನಿಮ್ಮ ಮೆಚ್ಚಿನ ಚಿತ್ರಗೀತೆ ಕಾರ್ಯಕ್ರಮವನ್ನು ಆಕಾಶವಾಣಿಯಲ್ಲಿ ಕೇಳುತ್ತಿದ್ದೆವು, ಇದು ಇಲ್ಲಿ ಸಾಧ್ಯವೇ ? ಇಲ್ಲ ಅಲ್ವಾ.

ರಾಜಪ್ರಭುತ್ವದ ಕಾಲದಲ್ಲಿ ಸುದ್ದಿವಾಹಕನ ಸುದ್ದಿ ಕೇಳಿ ರಾಜ ಸಂಪ್ರೀತನಾದರೆ ಮಡಿಲಿಗೆ ವರಹಗಳನ್ನು ಸುರಿಯತ್ತಿದ್ದ. ಈಗ ಜಾಹೀರಾತು ಅಥವಾ ಇನ್ನಿತರ ಮಾರುಕಟ್ಟೆ ರೂಪದ ವರಹಗಳನ್ನು ಸುರಿಯಲಾಗುತ್ತದೆ. ಈ ದಕ್ಷಿಣೆಗೆ ಪ್ರತಿಯಾಗಿ ಸುದ್ದಿಮನೆಗಳು ಏನು ಮಾಡಬೇಕು. ಸುಳ್ಳನ್ನೂ ಸತ್ಯ ಎಂದು ಜನರು ನಂಬುವ ಹಾಗೆ ಸುದ್ದಿಯನ್ನು ಸಿದ್ಧಪಡಿಸಬೇಕು. ಅದಕ್ಕಾಗಿಯೇ ಆ ಏರುದನಿಯ ನಿರೂಪಕರನ್ನೂ ತಯಾರಿಸಲಾಗುತ್ತದೆ. ಸತ್ಯವನ್ನು ಸುಳ್ಳು ಎಂದು ಬಿಂಬಿಸುವುದು, ಸುಳ್ಳನ್ನು ಸತ್ಯ ಎಂದು ಬಿಂಬಿಸುವುದು ಎರಡೂ ಪ್ರಕ್ರಿಯೆಗಳು ಒಟ್ಟೊಟ್ಟಿಗೇ ಸಾಗಲು ಆಧುನಿಕ ತಂತ್ರಜ್ಞಾನದ ಸಂವಹನ ಮಾಧ್ಯಮಗಳು ನೆರವಾಗುತ್ತವೆ. ಬೆರಳತುದಿಯಲ್ಲಿರುವ ಸುದ್ದಿಯನ್ನು ಕೂಡಲೇ ಬಿತ್ತರಿಸಿ, ನಾವೇ ಮೊದಲು ಎಂದು ಘೋಷಿಸಿದ ಕೂಡಲೇ ನೋಡುಗರಲ್ಲಿ ವಿಶ್ವಾಸ ಮೂಡುವುದು ಸಹಜ.

ಈ ಸುದ್ದಿಮನೆಗಳನ್ನು ನೋಡಿ ಸುದ್ದಿಯನ್ನು ನಂಬುವ ಜನರ ಮುಂದೆ ಬೇರೆ ಆಯ್ಕೆ ಇದೆಯೇ ? ಖಂಡಿತವಾಗಿಯೂ ಇದೆ. ಮುದ್ರಣ ಮಾಧ್ಯಮಗಳು ಸ್ವಲ್ಪಮಟ್ಟಿಗೆ ವಾಸಿ. ದೂರದರ್ಶನ ವಾರ್ತೆಗಳೂ ಇವೆ. ಆದರೆ ಆಧುನಿಕ ಸಮಾಜ, ವಿಶೇಷವಾಗಿ ಮಧ್ಯಮ ವರ್ಗಗಳು ಮತ್ತು ಶ್ರೀಮಂತ ವರ್ಗಗಳಿಗೆ ಭೋಗದ ವ್ಯಸನ ಹೆಚ್ಚಾಗಿದೆ. ಹಿಂಬದಿಯ ಪರದೆ, ಒಂದು ಮೇಜು, ತಾಲ್ಲೂಕು ಕಚೇರಿಯಲ್ಲಿರುವಂತಹ ವಾತಾವರಣದಲ್ಲಿ ಸುದ್ದಿವಾಹಕರು ಕುಳಿತು ಸುದ್ದಿ ಓದಿದರೆ ಈ ವರ್ಗಗಳಿಗೆ ರುಚಿಸುವುದಿಲ್ಲ. ರಂಜನೀಯವಾಗಿರಬೇಕು, ಪ್ರತಿ ವಾಕ್ಯದ ಹಿನ್ನೆಲೆಯಲ್ಲಿ ವಾದ್ಯಗಳ ಅಬ್ಬರ ಬೇಕು, ಗ್ರಾಫಿಕ್ಸ್ ಇರಬೇಕು, ಒಂದೇ ಪರದೆಯಲ್ಲಿ ಹತ್ತಾರು ಸುದ್ದಿಗಳು ಚಿಂದಿ ಚಿಂದಿಯಾಗಿ ಕಾಣಬೇಕು. ಹೀಗೆ ಸಮಾಜದ ಈ ಅವಲಕ್ಷಣಗಳಿಗೆ ಸುದ್ದಿಮನೆಗಳು ಸ್ಪಂದಿಸಲು ಸದಾ ಸಿದ್ಧವಾಗಿರುತ್ತವೆ.

ಈ ಬೌದ್ಧಿಕ ದಾರಿದ್ರ್ಯದ ನೆಲೆಯಲ್ಲೇ ಭಾರತದ ಸುದ್ದಿಮನೆಗಳನ್ನು ಸುಳ್ಳುಸುದ್ದಿಯ ವ್ಯಸನ ಕಾಡುತ್ತಿದೆ. ಸಮಾಜಮುಖಿ ಪ್ರಾಮಾಣಿಕ ವರದಿಗಾರರಿಗೆ ಜಾಗವೇ ಇಲ್ಲದಂತಹ ವಾತಾವರಣ ಮುದ್ರಣ ಮಾಧ್ಯಮಗಳಲ್ಲೂ ಸೃಷ್ಟಿಯಾಗುತ್ತಿದೆ. ಇಲ್ಲಿ ಪ್ರಗತಿಪರತೆ, ಪ್ರತಿಗಾಮಿತನ ಎನ್ನುವುದಕ್ಕಿಂತಲೂ ಮಾಧ್ಯಮಗಳ ಸಮಾಜೋ ರಾಜಕೀಯ ಹೊಣೆಗಾರಿಕೆ ಮುಖ್ಯವಾಗುತ್ತದೆ. ಪಕ್ಷ ರಾಜಕಾರಣವನ್ನು ಹೊರಗಿಟ್ಟು ನೋಡಿದಾಗ ಇದು ಅರ್ಥವಾಗುತ್ತದೆ. ಮಾಧ್ಯಮಗಳು ಯಾವುದೇ ರಾಜಕೀಯ ಸಿದ್ಧಾಂತ ಅಥವಾ ಮತಧಾರ್ಮಿಕ ತತ್ವಗಳಿಗೆ ಬದ್ಧವಾಗಿರಬೇಕಿಲ್ಲ. ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಸ್ತಂಭ ಎನಿಸಿಕೊಂಡಿರುವ ಈ ಕ್ಷೇತ್ರಕ್ಕೆ ತನ್ನದೇ ಆದ ಇತಿಹಾಸ ಇದೆ ಎನ್ನುವ ಸಾಮಾನ್ಯ ಪ್ರಜ್ಞೆ ಇದ್ದರೆ ಸಾಕು. ತುರ್ತುಪರಿಸ್ಥಿತಿಯ ಸಂದರ್ಭವನ್ನು ಒಮ್ಮೆ ತಿರುಗಿ ನೋಡಿದರೂ ಸಾಕು.

ಆದರೆ ಹಣಕಾಸು ಬಂಡವಾಳದ ಮಾರುಕಟ್ಟೆ ವ್ಯವಸ್ಥೆಯಲ್ಲಿ ಪ್ರಪಂಚದ ಯಾವುದೇ ವಿದ್ಯಮಾನವೂ ಈ ವ್ಯೂಹದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮಾಧ್ಯಮ ಕ್ಷೇತ್ರವೇ ಮಾರುಕಟ್ಟೆಗೆ ಶರಣಾಗಿಬಿಟ್ಟಿದೆ. ಆಡಳಿತ ಯಂತ್ರವನ್ನು ನಿಯಂತ್ರಿಸುವ ಕಾರ್ಪೋರೇಟ್ ಕೈಗಳೇ ಮಾಧ್ಯಮಗಳನ್ನೂ ನಿಯಂತ್ರಿಸುತ್ತವೆ. ಒಂದು ಸುದ್ದಿ ಪತ್ರಿಕೆ ಇಂದು ಬದುಕುಳಿಯಬೇಕಾದರೆ, ಆಳುವ ವರ್ಗಗಳ ಕೃಪಾಕಟಾಕ್ಷಕ್ಕಾಗಿ ಕೈಚಾಚಬೇಕಾದ ಪರಿಸ್ಥಿತಿ ಎದುರಾಗಿದೆ. ಮಾಧ್ಯಮ ಲೋಕದ ಸ್ವಾಯತ್ತತೆ ಮತ್ತು ಸ್ವಂತಿಕೆಯ ಬಗ್ಗೆ ಚರ್ಚೆ ನಡೆಸುವ ಕಲ್ಪನೆ ಈಗಾಗಲೇ ಇತಿಹಾಸದ ಕಸದಬುಟ್ಟಿ ಸೇರಿದೆ. ದುರಂತ ಎಂದರೆ ಭಾರತದ ವಿದ್ಯುನ್ಮಾನ ಮಾಧ್ಯಮಗಳು ತಮ್ಮ ಮಾನ ಹರಾಜು ಹಾಕಿಕೊಳ್ಳಲು ಕೊರೋನಾ ಸಂದರ್ಭವನ್ನು ಬಳಸಿಕೊಂಡಿವೆ.

ಕೊರೋನಾ-ಕೋವಿದ್ 19 ಸುದ್ದಿಮನೆಗಳ ಜವಾಬ್ದಾರಿ ಮತ್ತು ಉತ್ತರದಾಯಿತ್ವವನ್ನು ಹೆಚ್ಚಿಸಬೇಕಿತ್ತು. ಇಡೀ ದೇಶವೇ ಆತಂಕಕ್ಕೊಳಗಾಗಿರುವ ಸಂದರ್ಭದಲ್ಲಿ ಸುದ್ದಿಮನೆಗಳಲ್ಲಿ ತಯಾರಾಗುವ ಪ್ರತಿಯೊಂದು ಸುದ್ದಿಯೂ ಜನಮಾನಸದಲ್ಲಿನ ಆತಂಕಗಳನ್ನು ದೂರ ಮಾಡಿ, ಸಮಾಜದಲ್ಲಿನ ಅಂತರಗಳನ್ನು ಕಡಿಮೆ ಮಾಡಿ, ಸಮಸ್ತ ಭಾರತೀಯ ಪ್ರಜೆಗಳ ಐಕಮತ್ಯ ಸಾಧಿಸುವಂತಿರಬೇಕಿತ್ತು. ಆದರೆ ಇದಕ್ಕೆ ತದ್ವಿರುದ್ಧವಾದುದನ್ನು ನಾವಿಂದು ಕಾಣುತ್ತಿದ್ದೇವೆ. ದೈಹಿಕ ಅಂತರ ಕಾಪಾಡಿಕೊಳ್ಳುತ್ತಿರುವ ಜನರ ನಡುವೆ ಸಾಮುದಾಯಿಕ ಅಂತರವನ್ನು ಹೆಚ್ಚಿಸಿರುವುದು ಮಾಧ್ಯಮಗಳ ಹೆಗ್ಗಳಿಕೆ.

ಈ ಕ್ಷಣದ ಮಾರುಕಟ್ಟೆ ಮೌಲ್ಯ ವೃದ್ಧಿಗೆ ಸುಳ್ಳು ಸುದ್ದಿಗಳು ನೆರವಾಗುತ್ತಿವೆ. ಇತ್ತ ದೊರೆಗಳೂ ಸಂಪ್ರೀತರಾಗುತ್ತಾರೆ. ಸೂಕ್ತ ದಕ್ಷಿಣೆಯೂ ದೊರೆಯುತ್ತದೆ. ನಾಳೆ ಕ್ಷಮೆ ಕೋರಿದರೂ, ಬಾಚಿಕೊಂಡ ಲಾಭ ಭಂಡಾರ ಸೇರಿರುತ್ತದೆ. ಅರ್ನಾಬ್ ಗೋಸ್ವಾಮಿ ಮತ್ತು ಇವರ ಶಿಷ್ಯ ವೃಂದಕ್ಕೆ ಈ ತಂತ್ರ ಚೆನ್ನಾಗಿಯೇ ತಿಳಿದಿದೆ.
ಕೋವಿದ್ 19 ಭಾರತವನ್ನು ಎಲ್ಲ ರೀತಿಯಲ್ಲೂ ಬೆತ್ತಲೆ ಮಾಡಿದೆ. ಮಾಧ್ಯಮ ಮತ್ತು ಸುದ್ದಿಮನೆಗಳು ಅಪವಾದವಾಗಬೇಕಿಲ್ಲ. ಸುದ್ದಿಮನೆಗಳ ಸುಳ್ಳು ಸುದ್ದಿಯ ವ್ಯಸನ ಸಮಾಜದಲ್ಲಿ ಸೃಷ್ಟಿಯಾಗಿದ್ದ, ಸೃಷ್ಟಿಯಾಗಬಹುದಿದ್ದ ಸೌಹಾರ್ದತೆಯನ್ನೂ ಹಾಳುಗೆಡಹಿವೆ. ಭೋ ಪರಾಕ್ ಹೇಳುವ ವಂದಿಮಾಗಧ ಸಂಸ್ಕøತಿಯಿಂದ ಭಾರತ ಬಹುದೂರ ಸಾಗಿ ಬಂದಿದೆ.

ಆದರೆ ಸುದ್ದಿಮನೆಗಳಲ್ಲಿ ಈ ಸಂಸ್ಕೃತಿ ನಿರಂತರವಾಗಿ ನಡೆದುಬಂದಿದೆ. ಏಕೆಂದರೆ ರಾಜಪ್ರಭುತ್ವದ ಪಳೆಯುಳಿಕೆಗಳನ್ನು ನಾಶಪಡಿಸಲು ನಮ್ಮಿಂದ ಸಾಧ್ಯವಾಗಿಲ್ಲ, ಸಾಧ್ಯವಾಗುತ್ತಿಲ್ಲ. ಆದರೆ ಸಾಧ್ಯವಿದೆ ಎನ್ನುವ ಭರವಸೆಯನ್ನು ಕೊರೋನಾ ಮೂಡಿಸಿದೆ.
ಪ್ರಭುತ್ವ ಮತ್ತು ಪ್ರಭುತ್ವವನ್ನು ಪೋಷಿಸುವ ಎಲ್ಲ ಸಾಂಸ್ಥಿಕ ನೆಲೆಗಳೂ ಬೆತ್ತಲಾಗುತ್ತಿರುವ ಈ ಸಂದರ್ಭದಲ್ಲಿ ಸುಳ್ಳುಸುದ್ದಿಯ ವ್ಯಸನಕ್ಕೆ ಒಳಗಾದ ಮಾಧ್ಯಮಗಳು ಸರ್ವವ್ಯಾಪಿ ಕೊರೋನಾಗಿಂತಲೂ ಭೀಕರ ವ್ಯಾಧಿಯಂತೆ ಕಂಡುಬಂದರೆ ಅಚ್ಚರಿಯೇನಿಲ್ಲ.

ಈ ವ್ಯಾಧಿಯನ್ನು ಹೋಗಲಾಡಿಸಲು ಬೇಕಿರುವುದು ಸಾಮಾಜಿಕ ಪ್ರಜ್ಞೆ ಮತ್ತು ನಾಗರಿಕ ಸಂವೇದನೆ. ನಮ್ಮ ಸಮಾಜದಲ್ಲಿ ಇದು ಇನ್ನೂ ಉಳಿದಿದೆ ಎನ್ನುವುದೊಂದೇ ಆಶಾದಾಯಕ ಸಂಗತಿ. ಈ ಸಂವೇದನೆಯ ಕೊಂಡಿಗಳನ್ನು ಬೆಸೆಯುವ ಮೂಲಕ ನಾವು ಮತ್ತೊಂದು ಹೊಸ ಲೋಕವನ್ನು ಸೃಷ್ಟಿಸಬಹುದಲ್ಲವೇ ? ಸುಳ್ಳು ಸುದ್ದಿಯ ವ್ಯಸನಕ್ಕೆ ಮದ್ದು ಇದೆಯೇ ? ಕೊರೋನಾ ನೆರವಾಗುವುದಿಲ್ಲ. ಕೊರೋನಾ ನಂತರದ ದಿನಗಳಲ್ಲಿ ಇದು ಸಾಧ್ಯ. ನಮ್ಮ ನಡುವಿನ ಮಾಧ್ಯಮ ಎನ್ನುವ ವ್ಯಾಧಿಯನ್ನು ಕೊನೆಗೊಳಿಸಲು ಕೊರೋನಾ ಇರಲಿ ಎಂದು ಬಯಸುವುದು ಬೇಡ. ಕೊರೋನಾ ಹೋಗಲಿ, ನಾವು ಇರುತ್ತೇವೆ ಅಲ್ಲವೇ ?

(ವಿಸೂ : ಇಲ್ಲಿ ಮಾಧ್ಯಮ ಎಂದರೆ ಮುಖ್ಯವಾಹಿನಿಯ ಮಾಧ್ಯಮಗಳು ಮಾತ್ರ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

Published

on

~ಗೋವರ್ಧನ ನವಿಲೇಹಾಳು 

ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.

ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .

ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.

ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.

ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.

ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.

ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.

ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.

ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.

ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending