ಬಹಿರಂಗ
ಕೋವಿದನ ನಡುವೆ – ಸುಳ್ಳು ಸುದ್ದಿಯ ವ್ಯಸನವೂ ಮಾಧ್ಯಮವೆಂಬೋ ವ್ಯಾಧಿಯೂ
- ನಾ ದಿವಾಕರ
ಸುದ್ದಿ ಎನ್ನುವುದೇ ಸತ್ಯ-ಮಿಥ್ಯೆಯ ಸಂಗಮ. ಏಕೆಂದರೆ ಅದು ಮನುಷ್ಯನನ್ನು ತಲುಪುವುದು ಬೇರೊಂದು ಮೂಲದಿಂದ. ಎಲ್ಲೋ ನಡೆದ ಒಂದು ವಿದ್ಯಮಾನ ಯಾವುದೋ ಒಂದು ಮೂಲದಿಂದ ನಮ್ಮ ಗಮನಕ್ಕೆ ಬಂದಾಗ ನಾವು ಅದನ್ನು ಸುದ್ದಿ, ವಾರ್ತೆ, ಸಮಾಚಾರ ಮುಂತಾದ ಹೆಸರುಗಳಿಂದ ಗುರುತಿಸುತ್ತೇವೆ. ಸುದ್ದಿಯ ಮೂಲ ಯಾವುದೆಂದು ತಿಳಿಯುವ ಗೋಜಿಗೆ ನಾವು ಹೋಗುವುದಿಲ್ಲ. ನಮಗೆ ತಲುಪಿದ ವಿಷಯ ಸತ್ಯವೋ ಮಿಥ್ಯೆಯೋ ಎಂದು ತಿಳಿಯಲೂ ಆಸಕ್ತಿ ತೋರುವುದಿಲ್ಲ. ನಮ್ಮ ಮನಸ್ಥಿತಿಗೆ ತಕ್ಕಂತೆ, ನಮ್ಮ ಆಲೋಚನೆಗೆ ಪೂರಕವಾಗಿ ನಮ್ಮ ಕಿವಿಗೆ ಬಿದ್ದ ಸಮಾಚಾರವನ್ನು ನಂಬುವುದು ಬಿಡುವುದು ಮಾಡುತ್ತೇವೆ.
ಸಂಪರ್ಕ ಮಾಧ್ಯಮಗಳೇ ಇಲ್ಲದ ಕಾಲದಲ್ಲಿ ಮಾನವ ಸಮಾಜ ಹೇಗೆ ನಿರ್ವಹಿಸಿರಬಹುದು ಎಂದು ಒಮ್ಮೆ ಯೋಚಿಸೋಣ. ಆಗ ಸುದ್ದಿ ಸಮಾಚಾರ ವಾರ್ತೆ ಇದಾವುದೂ ಇರಲಿಕ್ಕಿಲ್ಲ ಅಲ್ಲವೇ. ತಾವು ಕಣ್ಣಾರೆ ನೋಡಿದ್ದನ್ನು ಜನರು ತಮ್ಮನ್ನು ನೇರವಾಗಿ ಸಂಪರ್ಕಿಸುವವರೊಡನೆ ಹಂಚಿಕೊಳ್ಳುತ್ತಿದ್ದರು. ಅಲ್ಲಿ ವಿಷಯದ ವಿನಿಮಯ ಮಾತ್ರವೇ ಇತ್ತು, ವಿತರಣೆ, ಪ್ರಸರಣ ಇರುತ್ತಿರಲಿಲ್ಲ. ಮಾನವ ಸಮಾಜ ಹೆಚ್ಚು ವಿಸ್ತರಣೆಯಾಗದಿದ್ದ ಕಾಲದಲ್ಲಿ ಈ ವಿನಿಮಯವೂ ಸಹ ಸೀಮಿತ ಚೌಕಟ್ಟಿನಲ್ಲಿ ಮಾತ್ರವೇ ಇರುತ್ತಿತ್ತು. ಇದನ್ನು ಸಂದೇಶ ಎನ್ನಲಾಗುತ್ತಿತ್ತು ಸುದ್ದಿ ಎನ್ನುತ್ತಿರಲಿಲ್ಲ. ಏಕೆಂದರೆ ಇಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಮಾತ್ರವೇ ವಿಷಯ ಹರಿದಾಡುತ್ತಿತ್ತು. ಈ ಸಂದೇಶಕ್ಕೆ ಒಂದು ವ್ಯಾಪ್ತಿ ದೊರೆತಿದ್ದು ಅಕ್ಷರ ಮತ್ತು ಬರಹ ಒಂದಾದ ಸಂದರ್ಭದಲ್ಲಿ.
ಪಾರಿವಾಳಗಳ ಮೂಲಕ ತಮ್ಮ ಸಂದೇಶವನ್ನು ದೂರದಲ್ಲಿರುವ ತಮ್ಮ ನಿಕಟವರ್ತಿಗಳಿಗೆ ರವಾನಿಸುವ ಪರಂಪರೆಯ ಸಂದರ್ಭದಲ್ಲೂ ವಿನಿಮಯವಾಗುತ್ತಿದ್ದುದು ಪರಸ್ಪರ ಸಂಬಂಧಿತ ವಿಚಾರಗಳು ಮಾತ್ರ. ಇದನ್ನೂ ಸುದ್ದಿ ಎನ್ನಲಾಗುವುದಿಲ್ಲ. ಈ ಸುದ್ದಿ ಅಥವಾ ಸಮಾಚಾರ ಎಂಬ ವಿದ್ಯಮಾನಕ್ಕೆ ಪುಷ್ಟಿ ದೊರೆತದ್ದು ಬಹುಶಃ ರಾಜಪರಂಪರೆಯಲ್ಲಿ ಇದ್ದಿರಬಹುದು. ಅನ್ಯ ರಾಜ್ಯಗಳಲ್ಲಿ ಅಥವಾ ತಮ್ಮದೇ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ತಿಳಿದುಕೊಳ್ಳಲು ಸಾಮ್ರಾಟರು ತಮ್ಮ ಬೇಹುಗಾರರನ್ನು ವಿವಿಧ ಪ್ರಾಂತ್ಯಗಳಿಗೆ ಕಳುಹಿಸುವ ಪರಂಪರೆ ಸುದ್ದಿ-ಸಮಾಚಾರದ ಉಗಮಕ್ಕೆ ಕಾರಣವಾಯಿತೇನೋ ! ಇಲ್ಲಿ ಸುದ್ದಿಯ ಸತ್ಯಾಸತ್ಯತೆಯ ನಿಷ್ಕರ್ಷೆಗೆ ಸುದ್ದಿ ತರುವ ಬೇಹುಗಾರನ ನಿಷ್ಠೆ ಮತ್ತು ಬದ್ಧತೆಯೇ ಮೂಲ. ಅವನ ಪ್ರಾಮಾಣಿಕತೆಯೇ ಆಧಾರ.
ತನ್ನ ದೊರೆಗೆ ನಿಷ್ಠಾವಂತನಾದ ಬೇಹುಗಾರರಲ್ಲಿ ಎರಡು ವಿಧ. ಮೊದಲನೆಯದು ತನ್ನ ರಾಜನಿಷ್ಠೆಯನ್ನು ಪ್ರದರ್ಶಿಸಲು, ರಾಜನಿಗೆ ಇಷ್ಟವಾಗುವಂತೆ ಸುದ್ದಿಯನ್ನು ಅರುಹುವುದು. ತನ್ನ ದೊರೆಗೆ ಇಷ್ಟವಾಗದ ವಿಚಾರಗಳನ್ನು ಮರೆಮಾಚುವುದು, ಪ್ರಿಯವಾದುದನ್ನು ರಂಜನೀಯವಾಗಿ ಅರುಹುವುದು, ದೊರೆಯ ಆಕ್ರೋಶಕ್ಕೆ ಕಾರಣವಾಗುವ ವಿಚಾರವನ್ನು ಜಾಣ್ಮೆಯಿಂದ ಹೇಳುವುದು, ಇಲ್ಲವೇ ಹೇಳದೆಯೇ ಇರುವುದು, ಹೀಗೆ. ಈ ರೀತಿಯ ಸುದ್ದಿ ತರುವವರು ಸಾಮಾನ್ಯವಾಗಿ ರಾಜನಿಗೆ ಶತ್ರುಗಳನ್ನು ಸೃಷ್ಟಿಸುತ್ತಿದ್ದುದೇ ಹೆಚ್ಚು. ವ್ಯಕ್ತಿಗತವಾಗಿ ತಮಗೆ ಇಷ್ಟವಾಗದವರ ವಿರುದ್ಧ ರಾಜನ ಬಳಿ ಇಲ್ಲದ ವಿಷಯಗಳನ್ನು ಹೇಳುವ ಮೂಲಕ ಆಗಾಗ್ಗೆ ಸಣ್ಣಪುಟ್ಟ ಶತ್ರುಪಾಳಯಗಳನ್ನು ಸೃಷ್ಟಿಸುವ ಪರಂಪರೆಗೆ ದೀರ್ಘ ಇತಿಹಾಸವೇ ಇದೆ ಅಲ್ಲವೇ ?
ಎರಡನೆಯ ವಿಧ ಎಂದರೆ ತಮ್ಮ ಅಸ್ತಿತ್ವ, ಸ್ಥಾನಮಾನ ಉಳಿಸಿಕೊಳ್ಳಲು, ತಮ್ಮ ಸ್ವಂತ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಲು ಸುದ್ದಿಯನ್ನು ತಿರುಚಿ ಹೇಳುವುದು ಇಲ್ಲವೇ ಇಲ್ಲದ ಸುದ್ದಿಯನ್ನು ಸೃಷ್ಟಿಸಿ ಹೇಳುವುದು.
ಇಂಥವರಿಗೆ ರಾಜನಿಷ್ಠೆ ಇರುತ್ತಿತ್ತು ಆದರೆ ರಾಜನಿಗೆ ಇವರ ಮೇಲಿರುತ್ತಿದ್ದ ವಿಶ್ವಾಸವೇ ಇವರ ಬಂಡವಾಳವಾಗುತ್ತಿತ್ತು. ದೊರೆ ತಾನು ಹೇಳಿದ್ದನ್ನು ನಂಬುತ್ತಾನೆ ಎನ್ನುವ ವಿಶ್ವಾಸವೇ ಇವರ ಸುದ್ದಿಮನೆಯ ಕುಲುಮೆಗೆ ಶಾಖ ನೀಡುತ್ತಿತ್ತು. ಇವರ ಭಟ್ಟಂಗಿತನ, ವಂದಿಮಾಗಧ ನಡೆ ರಾಜನ ದೃಷ್ಟಿಯಲ್ಲಿ ಪ್ರಾಮಾಣಿಕತೆ ಎನಿಸಿದರೂ, ಅದು ಅಪಾಯಕಾರಿಯಾಗಿ ಪರಿಣಮಿಸುತ್ತಿತ್ತು. ಆದರೆ ಇವರು ಮುಟ್ಟಿಸುತ್ತಿದ್ದ ಸುದ್ದಿ ರಾಜನನ್ನೂ ಸಂಪ್ರೀತಗೊಳಿಸುತ್ತಿತ್ತು. ಹಾಗಾಗಿ ಇವರ ಅಸ್ತಿತ್ವಕ್ಕೆ ಧಕ್ಕೆ ಉಂಟಾಗುತ್ತಿರಲಿಲ್ಲ.
ದೊರೆಗೆ ಈ ಎರಡೂ ರೀತಿಯ ಸುದ್ದಿ ವಾಹಕರು ಪ್ರಿಯವಾಗಿಯೇ ಕಾಣುತ್ತಿದ್ದರು. ಏಕೆಂದರೆ ತನ್ನ ಸಾಮ್ರಾಜ್ಯದ ರಕ್ಷಣೆಗೆ ಇದು ಅತ್ಯವಶ್ಯವಾಗುತ್ತಿತ್ತು.
ರಾಜಪ್ರಭುತ್ವದ ಕಾಲದಲ್ಲೇ ಬಹುಶಃ ಸುಳ್ಳುಸುದ್ದಿಯ ವ್ಯಸನ ಉಗಮಿಸಿರಬೇಕು. ಹೊರ ರಾಜ್ಯದಿಂದ ಅಥವಾ ಶತ್ರು ಪಾಳಯದಿಂದ ಸತ್ಯವೋ ಸುಳ್ಳೋ ಯಾವುದೋ ಒಂದು ಸುದ್ದಿ ತರದಿದ್ದರೆ ಸುದ್ದಿವಾಹಕರು ದೊರೆಯ ಕೆಂಗಣ್ಣಿಗೆ ಗುರಿಯಾಗಬೇಕಿತ್ತು. ಬಹುಶಃ ಈ ಕಾಲಘಟ್ಟದಿಂದಲೇ ಸುದ್ದಿಮನೆಯ ಒಂದು ನಿರ್ದಿಷ್ಟ ಪರಿಕಲ್ಪನೆ ಮೂಡಿರಬೇಕು. ಈ ಪರಿಕಲ್ಪನೆಯ ಚೌಕಟ್ಟಿನಲ್ಲೇ ಸುಳ್ಳು ಸುದ್ದಿಯ ವ್ಯಸನವೂ ನೆಲೆ ಕಂಡಿರಬೇಕು.
ದೊರೆಗೆ ಏನಾದರೂ ಸುದ್ದಿ ಮುಟ್ಟಿಸಬೇಕು ಎನ್ನುವುದೇ ಸುದ್ದಿವಾಹಕರ ಆದ್ಯತೆಯಾಗಿರಲಿಕ್ಕೂ ಸಾಕು.
(ಇವಿಷ್ಟೂ ಇತಿಹಾಸದ ಆಕರಗಳನ್ನು ಆಧರಿಸಿ ಮಂಡಿಸಿದ ವಿಚಾರ ಅಲ್ಲ. ಹೀಗಿದ್ದಿರಬಹುದು ಎನ್ನುವ ಕಲ್ಪನೆ. ಇರಲೂಬಹುದಲ್ಲವೇ, ಇತಿಹಾಸದ ಅಧ್ಯಯನದಲ್ಲಿ ಗಮನಿಸಿರುವುದೇ ಆಗಿದೆ)
ಈಗ 21ನೆಯ ಶತಮಾನದ 3ನೆಯ ದಶಮಾನಕ್ಕೆ ಬರೋಣ. ಇಂದು ನಮಗೆ ಸುದ್ದಿ ಎನ್ನುವುದು ಮನೆಯ ಮಾತಿನಂತಾಗಿಬಿಟ್ಟಿದೆ. ಯಾವುದು ಸುದ್ದಿ, ಯಾವುದು ಸಂದೇಶ ಎಂಬ ವ್ಯತ್ಯಾಸವನ್ನೇ ಗ್ರಹಿಸಲಾರದಷ್ಟು ಮಟ್ಟಿಗೆ ಸಂಪರ್ಕ ಮತ್ತು ಸಂವಹನ ಮಾರ್ಗಗಳು ನಮ್ಮನ್ನು ಆವರಿಸಿಕೊಂಡುಬಿಟ್ಟಿವೆ. “ಆಕಾಶವಾಣಿ ವಾರ್ತೆಗಳು ಓದುತ್ತಿರುವವರು ಕೆ.ಎಸ್. ಪುರುಷೋತ್ತಮ್” ಅಥವಾ “ ಆಕಾಶವಾಣಿ ಪ್ರದೇಶ ಸಮಾಚಾರ ಓದುತ್ತಿರುವವರು ನಾಗಮಣಿ ಎಸ್ ರಾವ್ ” ಈ ದನಿಗಳನ್ನೊಮ್ಮೆ ನೆನಪಿಸಿಕೊಳ್ಳೋಣ. ಸುದ್ದಿ ಮತ್ತು ಸಂದೇಶದ ನಡುವಿನ ವ್ಯತ್ಯಾಸವನ್ನು ಅವರ ದನಿಗಳಲ್ಲಿ ಕಾಣಬಹುದಿತ್ತು. ಇಂದು ನಾವು ಆಕಾಶದಲ್ಲೇ ವಿಹರಿಸುತ್ತಿದ್ದೇವೆ ಆದರೆ ವಾಣಿ ಕಡಲ ಪಾಲಾಗಿದೆ.
ಹಾಗಾಗಿ ಸುದ್ದಿಮನೆಗಳೇ ಅನಿವಾರ್ಯ ಎನಿಸಿಬಿಟ್ಟಿದೆ. ಸುದ್ದಿಯ ವ್ಯಾಪ್ತಿ ಹೆಚ್ಚಾಗಿದೆ. ಆದರೆ ಮೂಲ ಸ್ವರೂಪ ಬದಲಾಗಿಲ್ಲ. ಆದರೆ ಸುದ್ದಿ ಮತ್ತು ಸಮಾಚಾರದ ಬಗ್ಗೆ ನಮ್ಮ ಗ್ರಹಿಕೆ ಕೊಂಚ ಬದಲಾದಂತಿದೆ. ನಾಲ್ಕೈದು ದಶಕಗಳ ಹಿಂದೆ ಪರಿಚಯಸ್ಥರು ಎದುರಾಗಿ ಏನ್ಸಮಾಚಾರ ಅಂದ್ರೆ ಏನಿಲ್ಲ ಎನ್ನುತ್ತಿದ್ದೆವು ಇಲ್ಲವಾದರೆ ನಮ್ಮನ್ನೇ ಕುರಿತು ಒಂದೆರಡು ಮಾತುಗಳನ್ನಾಡಿ ನಡೆಯುತ್ತಿದ್ದೆವು. ಈಗ ಏನ್ಸಮಾಚಾರ ಅಂದ್ರೆ ಸಾಕು ನೆಹರೂ ಅವರಿಂದ ಮೋದಿಯವರೆಗೆ, ಮೊಘಲರಿಂದ ಒಡೆಯರ್ ವರೆಗೆ ಮಾತಿನ ಲಹರಿ ಬೆಳೆಯುತ್ತದೆ. ಇತಿಹಾಸ, ವಿಜ್ಞಾನ, ಸುಜ್ಞಾನ, ಅಜ್ಞಾನ ಎಲ್ಲವನ್ನೂ ಮಾತನಾಡಿ ಕೊನೆಗೆ ಕೈ ಕುಲುಕಲೂ ಆಗದಷ್ಟು ಮನಸು ಭಾರ ಮಾಡಿಕೊಂಡು ಎರಡು ಧೃವಗಳತ್ತ ಮುಖ ಮಾಡಿ ಹೊರಟುಬಿಡುತ್ತೇವೆ. ಇದು ಸಾರ್ವತ್ರಿಕ ಸತ್ಯ ಅಲ್ಲ, ಆದರೆ ನಿರಾಕರಿಸುವ ವಿದ್ಯಮಾನವೂ ಅಲ್ಲ.
ಏಕೆ ಹೀಗೆ ? ಏಕೆಂದರೆ ಇಂದು ನಮಗೆ ಸುದ್ದಿ ಎಂದರೆ ನಮಗೆ ನೀಡಲಾಗುವ ಅಥವಾ ಒದಗಿಸಲಾಗುವ ಮಾಹಿತಿಯೇ ಹೊರತು, ನಾವು ಪ್ರತ್ಯಕ್ಷವಾಗಿ ನೋಡಿ ಪ್ರಮಾಣಿಸಿದ ಮಾಹಿತಿ ಅಲ್ಲ. ಹಾಗೊಮ್ಮೆ ನಾವು ನೋಡಿದ್ದುದೇ ಆದರೂ, ನಮ್ಮ ಕಣ್ಣೋಟವೇ ಸರಿಯಿಲ್ಲವೇನೋ ಎನ್ನುವ ಮಟ್ಟಿಗೆ ಸುದ್ದಿಮನೆಗಳು ಒಂದು ಘಟನೆಯನ್ನು ರುಬ್ಬಿ ರುಬ್ಬಿ ಚಟ್ನಿ ಮಸಾಲೆ ಮಾಡಿಬಿಟ್ಟಿರುತ್ತವೆ. ಸುದ್ದಿ ಮತ್ತು ಸಮಾಚಾರಗಳನ್ನು ಜನತೆಗೆ ತಲುಪಿಸುವ ಮುದ್ರಣ ಮಾಧ್ಯಮ ಯುಗದ ಕನಿಷ್ಟ ಪ್ರಜ್ಞಾವಂತಿಕೆಯನ್ನೂ ವಿದ್ಯುನ್ಮಾನ ಮಾಧ್ಯಮದ ಯುಗದಲ್ಲಿ ಕಾಣಲಾಗುತ್ತಿಲ್ಲ. ಏಕೆಂದರೆ ಬೆರಳ ತುದಿಯಲ್ಲಿ ಲಭಿಸುವ ಸುದ್ದಿಯನ್ನು ಕ್ಷಣಮಾತ್ರದಲ್ಲಿ ತಮ್ಮ ಪರದೆಯ ಮೇಲೆ ಬಿಂಬಿಸದೆ ಹೋದರೆ ಸುದ್ದಿಮನೆಯ ಅಸ್ತಿತ್ವಕ್ಕೆ ಕುಂದುಬರುತ್ತದೆ. ಮಾರುಕಟ್ಟೆಯಲ್ಲಿ ಮೌಲ್ಯ ಕುಸಿಯುತ್ತದೆ.
ಮತ್ತೊಮ್ಮೆ ಆಕಾಶವಾಣಿಯತ್ತ ನೋಡೋಣ. ಆಗಿನ ವಾರ್ತೆಗಳನ್ನು ಓದುತ್ತಿರುವವರ ಧ್ವನಿಯನ್ನು ಕೇಳಿಯೇ ದೇಶದಲ್ಲಿ ಏನೋ ಆಘಾತಕಾರಿ ಘಟನೆ ಸಂಭವಿಸಿದೆ, ಯಾರೋ ಮಹನೀಯರು ಮೃತಪಟ್ಟಿದ್ದಾರೆ ಎಂದು ಹೇಳಬಹುದಿತ್ತು. ಏಕೆಂದರೆ ಇಂತಹ ವಿಷಾದದ ಸುದ್ದಿಯನ್ನು ಓದುವಾಗ ಅವರ ಮೆಲುದನಿಯಲ್ಲಿ ವಿಷಾದದ ಎಳೆ ಕಂಡುಬರುತ್ತಿತ್ತು. ಇದನ್ನು ಈಗಿನ ಸುದ್ದಿಮನೆಗಳಲ್ಲಿ ಊಹಿಸಲು ಸಾಧ್ಯವೇ ? “ ಕೋರೋನಾದಿಂದ ಸತ್ತವರ ಸಂಖ್ಯೆ ಒಂದು ಲಕ್ಷ ದಾಟಿದೆ ” ಎಂದು ಏರುದನಿಯಲ್ಲಿ ಹೇಳುವ ನಿರೂಪಕಿಯ ಮುಖಭಾವವನ್ನು ನೋಡಿದರೆ, ಏನೋ ಸಂಭ್ರಮ ಮನೆಮಾಡಿದಂತೆ ಕಾಣುತ್ತದೆ.
ಇಲ್ಲಿ ಸಂಯಮ ಮತ್ತು ಸಂವೇದನೆಯ ಕೊರತೆ ಎದ್ದು ಕಾಣುತ್ತದೆ. ಇದರ ನೇರ ಪರಿಣಾಮವೇ ಈ ಸುದ್ದಿಮನೆಗಳನ್ನು ಆವರಿಸಿರುವ ಸುಳ್ಳು ಸುದ್ದಿಯ ವ್ಯಸನ. ಇಲ್ಲಿ ಪುನಃ ರಾಜಪ್ರಭುತ್ವಕ್ಕೆ ಮರಳೋಣ. ಇಂದಿನ ಪ್ರಜಾಸತ್ತಾತ್ಮಕ ಆಡಳಿತ ವ್ಯವಸ್ಥೆಗೂ, ಅಂದಿನ ರಾಜಪ್ರಭುತ್ವಕ್ಕೂ ವ್ಯತ್ಯಾಸವೇನಾದರೂ ಇದ್ದರೆ ಅದು ಆಯ್ಕೆ ಪ್ರಕ್ರಿಯೆಯಲ್ಲಿ ಮಾತ್ರ ಎನ್ನುವುದನ್ನು ತಾತ್ವಿಕವಾಗಿಯಾದರೂ ಒಪ್ಪಲೇಬೇಕು. ಏಕೆಂದರೆ ಎಷ್ಟೇ ಪ್ರಜಾಸತ್ತಾತ್ಮಕ ಧೋರಣೆಯನ್ನು ಅನುಸರಿಸಿದರೂ ಆಡಳಿತಾರೂಢ ಸರ್ಕಾರಗಳು ಗತಕಾಲದ ಸಾಮ್ರಾಟರನ್ನೇ ಹೋಲುವಂತೆ ವರ್ತಿಸುತ್ತಿರುವುದನ್ನು ಭಾರತದಲ್ಲಂತೂ ಕಾಣುತ್ತಲೇ ಬಂದಿದ್ದೇವೆ. ದೊರೆ ಬದಲಾಗುತ್ತಾನೆ, ರಾಜಗೃಹದ ಲಕ್ಷಣಗಳು ಬದಲಾಗುವುದಿಲ್ಲ. ಪ್ರಭುತ್ವದ ಲಕ್ಷಣಗಳೂ ಬದಲಾಗುವುದಿಲ್ಲ.
ಇಲ್ಲಿ ರಾಜಪ್ರಭುತ್ವ ಕಾಲದ ಸುದ್ದಿವಾಹಕರತ್ತ ನೋಡೋಣ. ಎರಡೂ ವಿಧದ ಸುದ್ದಿವಾಹಕರು ಇಂದಿಗೂ ಇದ್ದಾರೆ ಅಲ್ಲವೇ ? ಆಗ ದೊರೆಗೆ ಸುದ್ದಿ ತಲುಪಿಸುತ್ತಿದ್ದರು. ಈಗ ದೊರೆಗೆ ಬೇಕಾದಂತೆ ಜನತೆಗೆ ಸುದ್ದಿ ತಲುಪಿಸುತ್ತಾರೆ. ದೊರೆಯ ಸಂತೃಪ್ತಿಯೇ ತಮ್ಮ ಆತ್ಮತೃಪ್ತಿ ಎಂದು ಭಾವಿಸುವ ಒಂದು ಪಡೆ, ತಮ್ಮ ಅಸ್ತಿತ್ವ ರಕ್ಷಣೆಗಾಗಿ ದೊರೆಯನ್ನು ಹೇಗಾದರೂ ತೃಪ್ತಿಪಡಿಸುವ ಮತ್ತೊಂದು ಪಡೆ ಎರಡೂ ಆಯಾಮಗಳಲ್ಲಿ ನಾವಿಂದು ಅತ್ಯಾಧುನಿಕ ಸುದ್ದಿಮನೆಗಳನ್ನು ನೋಡುತ್ತಿದ್ದೇವೆ. ಇದರಿಂದ ಹೊರತಾದ ಮತ್ತೊಂದು ಆಯಾಮವೂ ಇದ್ದರೂ, ಅದು ಆಡಳಿತಾರೂಢ ಪಕ್ಷವನ್ನು ಅವಲಂಬಿಸುತ್ತದೆ. ಅಂದರೆ ವ್ಯವಸ್ಥೆಯ ವಿರುದ್ಧ, ಪ್ರಭುತ್ವದ ವಿರುದ್ಧ ಮಾತನಾಡುವ ಸುದ್ದಿಮನೆ ಇರುವುದು ಊಹಿಸಲಸಾಧ್ಯ .
ರಾಜಪ್ರಭುತ್ವದ ಲಕ್ಷಣಗಳನ್ನು ರಾಜಭವನಗಳಲ್ಲಿ ಕಾಣಲಾಗದಿದ್ದರೂ ಈ ಸುದ್ದಿಮನೆಗಳ ಮೂಲಕ ಕಾಣಬಹುದು.
ಇಂದಿನ ವಿದ್ಯುನ್ಮಾನ ಮಾಧ್ಯಮ ಮತ್ತು ಕೊಂಚಮಟ್ಟಿಗೆ ಮುದ್ರಣ ಮಾಧ್ಯಮಗಳ ಸುಳ್ಳುಸುದ್ದಿಯ ವ್ಯಸನಕ್ಕೆ ಇದೇ ಮೂಲ ಕಾರಣ. ಸುದ್ದಿಮನೆಗಳು ಸುದ್ದಿ ಸಮಾಚಾರವನ್ನು ಸತ್ಯಸಂಧರಂತೆ ಜನತೆಗೆ ಮುಟ್ಟಿಸಲು ಸ್ಥಾಪನೆಯಾಗುತ್ತಿಲ್ಲ. ಆಳುವ ವರ್ಗಗಳಿಗೆ ಅಥವಾ ಆಡಳಿತಾರೂಢ ಪಕ್ಷಗಳಿಗೆ ಅನುಕೂಲವಾಗುವಂತೆ ಸುದ್ದಿಯನ್ನು ಜನರ ಬಳಿ ಕೊಂಡೊಯ್ಯಲು ಸ್ಥಾಪನೆಯಾಗುತ್ತಿವೆ. ಹಾಗಾಗಿ ಜನರಿಗೆ ಏನು ಬೇಕು ಎನ್ನುವುದು ಇಲ್ಲಿ ಪ್ರಸ್ತುತ ಎನಿಸುವುದೇ ಇಲ್ಲ. ನಾವು ಕೊಟ್ಟಿದ್ದನ್ನು ಜನರು ಸ್ವೀಕರಿಸುತ್ತಾರೆ ಎನ್ನುವ ಊಳಿಗಮಾನ್ಯ ಧೋರಣೆಯೇ ಪ್ರಧಾನವಾಗುತ್ತದೆ. ಇದು ಸಮಾಚಾರಗಳಿಂದ ಧಾರಾವಾಹಿಯವರೆಗೂ ಸತ್ಯ. ನಿಮ್ಮ ಮೆಚ್ಚಿನ ಚಿತ್ರಗೀತೆ ಕಾರ್ಯಕ್ರಮವನ್ನು ಆಕಾಶವಾಣಿಯಲ್ಲಿ ಕೇಳುತ್ತಿದ್ದೆವು, ಇದು ಇಲ್ಲಿ ಸಾಧ್ಯವೇ ? ಇಲ್ಲ ಅಲ್ವಾ.
ರಾಜಪ್ರಭುತ್ವದ ಕಾಲದಲ್ಲಿ ಸುದ್ದಿವಾಹಕನ ಸುದ್ದಿ ಕೇಳಿ ರಾಜ ಸಂಪ್ರೀತನಾದರೆ ಮಡಿಲಿಗೆ ವರಹಗಳನ್ನು ಸುರಿಯತ್ತಿದ್ದ. ಈಗ ಜಾಹೀರಾತು ಅಥವಾ ಇನ್ನಿತರ ಮಾರುಕಟ್ಟೆ ರೂಪದ ವರಹಗಳನ್ನು ಸುರಿಯಲಾಗುತ್ತದೆ. ಈ ದಕ್ಷಿಣೆಗೆ ಪ್ರತಿಯಾಗಿ ಸುದ್ದಿಮನೆಗಳು ಏನು ಮಾಡಬೇಕು. ಸುಳ್ಳನ್ನೂ ಸತ್ಯ ಎಂದು ಜನರು ನಂಬುವ ಹಾಗೆ ಸುದ್ದಿಯನ್ನು ಸಿದ್ಧಪಡಿಸಬೇಕು. ಅದಕ್ಕಾಗಿಯೇ ಆ ಏರುದನಿಯ ನಿರೂಪಕರನ್ನೂ ತಯಾರಿಸಲಾಗುತ್ತದೆ. ಸತ್ಯವನ್ನು ಸುಳ್ಳು ಎಂದು ಬಿಂಬಿಸುವುದು, ಸುಳ್ಳನ್ನು ಸತ್ಯ ಎಂದು ಬಿಂಬಿಸುವುದು ಎರಡೂ ಪ್ರಕ್ರಿಯೆಗಳು ಒಟ್ಟೊಟ್ಟಿಗೇ ಸಾಗಲು ಆಧುನಿಕ ತಂತ್ರಜ್ಞಾನದ ಸಂವಹನ ಮಾಧ್ಯಮಗಳು ನೆರವಾಗುತ್ತವೆ. ಬೆರಳತುದಿಯಲ್ಲಿರುವ ಸುದ್ದಿಯನ್ನು ಕೂಡಲೇ ಬಿತ್ತರಿಸಿ, ನಾವೇ ಮೊದಲು ಎಂದು ಘೋಷಿಸಿದ ಕೂಡಲೇ ನೋಡುಗರಲ್ಲಿ ವಿಶ್ವಾಸ ಮೂಡುವುದು ಸಹಜ.
ಈ ಸುದ್ದಿಮನೆಗಳನ್ನು ನೋಡಿ ಸುದ್ದಿಯನ್ನು ನಂಬುವ ಜನರ ಮುಂದೆ ಬೇರೆ ಆಯ್ಕೆ ಇದೆಯೇ ? ಖಂಡಿತವಾಗಿಯೂ ಇದೆ. ಮುದ್ರಣ ಮಾಧ್ಯಮಗಳು ಸ್ವಲ್ಪಮಟ್ಟಿಗೆ ವಾಸಿ. ದೂರದರ್ಶನ ವಾರ್ತೆಗಳೂ ಇವೆ. ಆದರೆ ಆಧುನಿಕ ಸಮಾಜ, ವಿಶೇಷವಾಗಿ ಮಧ್ಯಮ ವರ್ಗಗಳು ಮತ್ತು ಶ್ರೀಮಂತ ವರ್ಗಗಳಿಗೆ ಭೋಗದ ವ್ಯಸನ ಹೆಚ್ಚಾಗಿದೆ. ಹಿಂಬದಿಯ ಪರದೆ, ಒಂದು ಮೇಜು, ತಾಲ್ಲೂಕು ಕಚೇರಿಯಲ್ಲಿರುವಂತಹ ವಾತಾವರಣದಲ್ಲಿ ಸುದ್ದಿವಾಹಕರು ಕುಳಿತು ಸುದ್ದಿ ಓದಿದರೆ ಈ ವರ್ಗಗಳಿಗೆ ರುಚಿಸುವುದಿಲ್ಲ. ರಂಜನೀಯವಾಗಿರಬೇಕು, ಪ್ರತಿ ವಾಕ್ಯದ ಹಿನ್ನೆಲೆಯಲ್ಲಿ ವಾದ್ಯಗಳ ಅಬ್ಬರ ಬೇಕು, ಗ್ರಾಫಿಕ್ಸ್ ಇರಬೇಕು, ಒಂದೇ ಪರದೆಯಲ್ಲಿ ಹತ್ತಾರು ಸುದ್ದಿಗಳು ಚಿಂದಿ ಚಿಂದಿಯಾಗಿ ಕಾಣಬೇಕು. ಹೀಗೆ ಸಮಾಜದ ಈ ಅವಲಕ್ಷಣಗಳಿಗೆ ಸುದ್ದಿಮನೆಗಳು ಸ್ಪಂದಿಸಲು ಸದಾ ಸಿದ್ಧವಾಗಿರುತ್ತವೆ.
ಈ ಬೌದ್ಧಿಕ ದಾರಿದ್ರ್ಯದ ನೆಲೆಯಲ್ಲೇ ಭಾರತದ ಸುದ್ದಿಮನೆಗಳನ್ನು ಸುಳ್ಳುಸುದ್ದಿಯ ವ್ಯಸನ ಕಾಡುತ್ತಿದೆ. ಸಮಾಜಮುಖಿ ಪ್ರಾಮಾಣಿಕ ವರದಿಗಾರರಿಗೆ ಜಾಗವೇ ಇಲ್ಲದಂತಹ ವಾತಾವರಣ ಮುದ್ರಣ ಮಾಧ್ಯಮಗಳಲ್ಲೂ ಸೃಷ್ಟಿಯಾಗುತ್ತಿದೆ. ಇಲ್ಲಿ ಪ್ರಗತಿಪರತೆ, ಪ್ರತಿಗಾಮಿತನ ಎನ್ನುವುದಕ್ಕಿಂತಲೂ ಮಾಧ್ಯಮಗಳ ಸಮಾಜೋ ರಾಜಕೀಯ ಹೊಣೆಗಾರಿಕೆ ಮುಖ್ಯವಾಗುತ್ತದೆ. ಪಕ್ಷ ರಾಜಕಾರಣವನ್ನು ಹೊರಗಿಟ್ಟು ನೋಡಿದಾಗ ಇದು ಅರ್ಥವಾಗುತ್ತದೆ. ಮಾಧ್ಯಮಗಳು ಯಾವುದೇ ರಾಜಕೀಯ ಸಿದ್ಧಾಂತ ಅಥವಾ ಮತಧಾರ್ಮಿಕ ತತ್ವಗಳಿಗೆ ಬದ್ಧವಾಗಿರಬೇಕಿಲ್ಲ. ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಸ್ತಂಭ ಎನಿಸಿಕೊಂಡಿರುವ ಈ ಕ್ಷೇತ್ರಕ್ಕೆ ತನ್ನದೇ ಆದ ಇತಿಹಾಸ ಇದೆ ಎನ್ನುವ ಸಾಮಾನ್ಯ ಪ್ರಜ್ಞೆ ಇದ್ದರೆ ಸಾಕು. ತುರ್ತುಪರಿಸ್ಥಿತಿಯ ಸಂದರ್ಭವನ್ನು ಒಮ್ಮೆ ತಿರುಗಿ ನೋಡಿದರೂ ಸಾಕು.
ಆದರೆ ಹಣಕಾಸು ಬಂಡವಾಳದ ಮಾರುಕಟ್ಟೆ ವ್ಯವಸ್ಥೆಯಲ್ಲಿ ಪ್ರಪಂಚದ ಯಾವುದೇ ವಿದ್ಯಮಾನವೂ ಈ ವ್ಯೂಹದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮಾಧ್ಯಮ ಕ್ಷೇತ್ರವೇ ಮಾರುಕಟ್ಟೆಗೆ ಶರಣಾಗಿಬಿಟ್ಟಿದೆ. ಆಡಳಿತ ಯಂತ್ರವನ್ನು ನಿಯಂತ್ರಿಸುವ ಕಾರ್ಪೋರೇಟ್ ಕೈಗಳೇ ಮಾಧ್ಯಮಗಳನ್ನೂ ನಿಯಂತ್ರಿಸುತ್ತವೆ. ಒಂದು ಸುದ್ದಿ ಪತ್ರಿಕೆ ಇಂದು ಬದುಕುಳಿಯಬೇಕಾದರೆ, ಆಳುವ ವರ್ಗಗಳ ಕೃಪಾಕಟಾಕ್ಷಕ್ಕಾಗಿ ಕೈಚಾಚಬೇಕಾದ ಪರಿಸ್ಥಿತಿ ಎದುರಾಗಿದೆ. ಮಾಧ್ಯಮ ಲೋಕದ ಸ್ವಾಯತ್ತತೆ ಮತ್ತು ಸ್ವಂತಿಕೆಯ ಬಗ್ಗೆ ಚರ್ಚೆ ನಡೆಸುವ ಕಲ್ಪನೆ ಈಗಾಗಲೇ ಇತಿಹಾಸದ ಕಸದಬುಟ್ಟಿ ಸೇರಿದೆ. ದುರಂತ ಎಂದರೆ ಭಾರತದ ವಿದ್ಯುನ್ಮಾನ ಮಾಧ್ಯಮಗಳು ತಮ್ಮ ಮಾನ ಹರಾಜು ಹಾಕಿಕೊಳ್ಳಲು ಕೊರೋನಾ ಸಂದರ್ಭವನ್ನು ಬಳಸಿಕೊಂಡಿವೆ.
ಕೊರೋನಾ-ಕೋವಿದ್ 19 ಸುದ್ದಿಮನೆಗಳ ಜವಾಬ್ದಾರಿ ಮತ್ತು ಉತ್ತರದಾಯಿತ್ವವನ್ನು ಹೆಚ್ಚಿಸಬೇಕಿತ್ತು. ಇಡೀ ದೇಶವೇ ಆತಂಕಕ್ಕೊಳಗಾಗಿರುವ ಸಂದರ್ಭದಲ್ಲಿ ಸುದ್ದಿಮನೆಗಳಲ್ಲಿ ತಯಾರಾಗುವ ಪ್ರತಿಯೊಂದು ಸುದ್ದಿಯೂ ಜನಮಾನಸದಲ್ಲಿನ ಆತಂಕಗಳನ್ನು ದೂರ ಮಾಡಿ, ಸಮಾಜದಲ್ಲಿನ ಅಂತರಗಳನ್ನು ಕಡಿಮೆ ಮಾಡಿ, ಸಮಸ್ತ ಭಾರತೀಯ ಪ್ರಜೆಗಳ ಐಕಮತ್ಯ ಸಾಧಿಸುವಂತಿರಬೇಕಿತ್ತು. ಆದರೆ ಇದಕ್ಕೆ ತದ್ವಿರುದ್ಧವಾದುದನ್ನು ನಾವಿಂದು ಕಾಣುತ್ತಿದ್ದೇವೆ. ದೈಹಿಕ ಅಂತರ ಕಾಪಾಡಿಕೊಳ್ಳುತ್ತಿರುವ ಜನರ ನಡುವೆ ಸಾಮುದಾಯಿಕ ಅಂತರವನ್ನು ಹೆಚ್ಚಿಸಿರುವುದು ಮಾಧ್ಯಮಗಳ ಹೆಗ್ಗಳಿಕೆ.
ಈ ಕ್ಷಣದ ಮಾರುಕಟ್ಟೆ ಮೌಲ್ಯ ವೃದ್ಧಿಗೆ ಸುಳ್ಳು ಸುದ್ದಿಗಳು ನೆರವಾಗುತ್ತಿವೆ. ಇತ್ತ ದೊರೆಗಳೂ ಸಂಪ್ರೀತರಾಗುತ್ತಾರೆ. ಸೂಕ್ತ ದಕ್ಷಿಣೆಯೂ ದೊರೆಯುತ್ತದೆ. ನಾಳೆ ಕ್ಷಮೆ ಕೋರಿದರೂ, ಬಾಚಿಕೊಂಡ ಲಾಭ ಭಂಡಾರ ಸೇರಿರುತ್ತದೆ. ಅರ್ನಾಬ್ ಗೋಸ್ವಾಮಿ ಮತ್ತು ಇವರ ಶಿಷ್ಯ ವೃಂದಕ್ಕೆ ಈ ತಂತ್ರ ಚೆನ್ನಾಗಿಯೇ ತಿಳಿದಿದೆ.
ಕೋವಿದ್ 19 ಭಾರತವನ್ನು ಎಲ್ಲ ರೀತಿಯಲ್ಲೂ ಬೆತ್ತಲೆ ಮಾಡಿದೆ. ಮಾಧ್ಯಮ ಮತ್ತು ಸುದ್ದಿಮನೆಗಳು ಅಪವಾದವಾಗಬೇಕಿಲ್ಲ. ಸುದ್ದಿಮನೆಗಳ ಸುಳ್ಳು ಸುದ್ದಿಯ ವ್ಯಸನ ಸಮಾಜದಲ್ಲಿ ಸೃಷ್ಟಿಯಾಗಿದ್ದ, ಸೃಷ್ಟಿಯಾಗಬಹುದಿದ್ದ ಸೌಹಾರ್ದತೆಯನ್ನೂ ಹಾಳುಗೆಡಹಿವೆ. ಭೋ ಪರಾಕ್ ಹೇಳುವ ವಂದಿಮಾಗಧ ಸಂಸ್ಕøತಿಯಿಂದ ಭಾರತ ಬಹುದೂರ ಸಾಗಿ ಬಂದಿದೆ.
ಆದರೆ ಸುದ್ದಿಮನೆಗಳಲ್ಲಿ ಈ ಸಂಸ್ಕೃತಿ ನಿರಂತರವಾಗಿ ನಡೆದುಬಂದಿದೆ. ಏಕೆಂದರೆ ರಾಜಪ್ರಭುತ್ವದ ಪಳೆಯುಳಿಕೆಗಳನ್ನು ನಾಶಪಡಿಸಲು ನಮ್ಮಿಂದ ಸಾಧ್ಯವಾಗಿಲ್ಲ, ಸಾಧ್ಯವಾಗುತ್ತಿಲ್ಲ. ಆದರೆ ಸಾಧ್ಯವಿದೆ ಎನ್ನುವ ಭರವಸೆಯನ್ನು ಕೊರೋನಾ ಮೂಡಿಸಿದೆ.
ಪ್ರಭುತ್ವ ಮತ್ತು ಪ್ರಭುತ್ವವನ್ನು ಪೋಷಿಸುವ ಎಲ್ಲ ಸಾಂಸ್ಥಿಕ ನೆಲೆಗಳೂ ಬೆತ್ತಲಾಗುತ್ತಿರುವ ಈ ಸಂದರ್ಭದಲ್ಲಿ ಸುಳ್ಳುಸುದ್ದಿಯ ವ್ಯಸನಕ್ಕೆ ಒಳಗಾದ ಮಾಧ್ಯಮಗಳು ಸರ್ವವ್ಯಾಪಿ ಕೊರೋನಾಗಿಂತಲೂ ಭೀಕರ ವ್ಯಾಧಿಯಂತೆ ಕಂಡುಬಂದರೆ ಅಚ್ಚರಿಯೇನಿಲ್ಲ.
ಈ ವ್ಯಾಧಿಯನ್ನು ಹೋಗಲಾಡಿಸಲು ಬೇಕಿರುವುದು ಸಾಮಾಜಿಕ ಪ್ರಜ್ಞೆ ಮತ್ತು ನಾಗರಿಕ ಸಂವೇದನೆ. ನಮ್ಮ ಸಮಾಜದಲ್ಲಿ ಇದು ಇನ್ನೂ ಉಳಿದಿದೆ ಎನ್ನುವುದೊಂದೇ ಆಶಾದಾಯಕ ಸಂಗತಿ. ಈ ಸಂವೇದನೆಯ ಕೊಂಡಿಗಳನ್ನು ಬೆಸೆಯುವ ಮೂಲಕ ನಾವು ಮತ್ತೊಂದು ಹೊಸ ಲೋಕವನ್ನು ಸೃಷ್ಟಿಸಬಹುದಲ್ಲವೇ ? ಸುಳ್ಳು ಸುದ್ದಿಯ ವ್ಯಸನಕ್ಕೆ ಮದ್ದು ಇದೆಯೇ ? ಕೊರೋನಾ ನೆರವಾಗುವುದಿಲ್ಲ. ಕೊರೋನಾ ನಂತರದ ದಿನಗಳಲ್ಲಿ ಇದು ಸಾಧ್ಯ. ನಮ್ಮ ನಡುವಿನ ಮಾಧ್ಯಮ ಎನ್ನುವ ವ್ಯಾಧಿಯನ್ನು ಕೊನೆಗೊಳಿಸಲು ಕೊರೋನಾ ಇರಲಿ ಎಂದು ಬಯಸುವುದು ಬೇಡ. ಕೊರೋನಾ ಹೋಗಲಿ, ನಾವು ಇರುತ್ತೇವೆ ಅಲ್ಲವೇ ?
(ವಿಸೂ : ಇಲ್ಲಿ ಮಾಧ್ಯಮ ಎಂದರೆ ಮುಖ್ಯವಾಹಿನಿಯ ಮಾಧ್ಯಮಗಳು ಮಾತ್ರ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ4 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ1 day agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ


