Connect with us

ಲೈಫ್ ಸ್ಟೈಲ್

ಅಪ್ಪ ಎಂದರೆ..!

Published

on

  • ಫರ್ಹಾನಾಜ್ ಮಸ್ಕಿ, ಸಹಾಯಕ ಪ್ರಾಧ್ಯಾಪಕರು ನೆಲಮಂಗಲ, ಬೆಂಗಳೂರು

ಅಪ್ಪ ಎಂದರೆ ಬರೀ ಆಕಾಶವಲ್ಲ, ಅಪರಿಮಿತ ಬ್ರಹ್ಮಾಂಡ. ಅಪ್ಪ ಎಂದರೆ ಬರೀ ಮರವಲ್ಲ ಹೆಮ್ಮರ! ತಾನೇ ದುಡಿದು ತಾನೇ ತಂದು, ತನ್ನ ಹೊಟ್ಟೆ ತುಂಬದಿದ್ದರೂ ಕುಟುಂಬದ ಎಲ್ಲಾ ಪ್ರಭಾರಗಳನ್ನೂ ವಹಿಸಿಕೊಳ್ಳುವ ಅಪ್ಪ ಅಪ್ರತಿಮ ಸಾಧಕ!. ಅಪ್ಪ ಎಂದರೆ ಎಲ್ಲವನ್ನೂ ಎದುರಿಸಿ ಮತ್ತೇ ನಿಲ್ಲಬಲ್ಲ ಪರ್ವತ! ಅಪ್ಪ ಇದ್ದರೆ ಮನೆಯಲ್ಲಿ ಒಂಥರಾ ನೆಮ್ಮದಿ, ತೃಪ್ತಿ, ಸಡಗರ, ಸಮಾಧಾನ.

ಅಪ್ಪ ಇದ್ದಾರೆಂಬುದೇ ಬದುಕಿಗೊಂದು ಛಲ! ಅಪ್ಪನ ಬಗೆಗೆ ಅದೆಷ್ಟು ಹೇಳಿಕೊಂಡರೂ ಸಾಲದು. ಇಂಥ ಅಪ್ಪನ ಗುಣಗಳಲ್ಲಿ ಗಂಡಿನ ಗಡಸುತನ, ಸಿಟ್ಟು, ಅಸಹನೆ, ಕೋಪ, ಮುನಿಸು, ದರ್ಪ, ಗರ್ವಗಳೂ ಇರುವುದನ್ನು ನೋಡಿದ್ದೇವೆ. ಆದರೆ ನಮ್ಯ ನಡತೆ, ಮೃದು ಮನಸ್ಸು, ಮೌನ ಮನೋಭಾವ, ಅನುರಾಗ, ಅನುಕಂಪ, ತಾಯಿಯ ಮನೋಧರ್ಮಗಳನ್ನೇ ಹೋಲುವ ಅಪ್ಪಂದಿರೂ ಇದ್ದಾರೆ. ಜಗತ್ತಿಗೆ ಅದೆಷ್ಟು ಬರಡು ಬರಡಾಗಿದ್ದರೂ ಮಕ್ಕಳಿಗಾಗಿ ಮಾತ್ರ ಅಪ್ಪ, ಬಲಿಷ್ಠರೇ!!

ಮಕ್ಕಳ ವಿಕಸನಕ್ಕಾಗಿ ಅಪ್ಪ ಅದೇನೇನೋ ಮಾಡುತ್ತಾರಂತೆ. ನಮ್ಮಪ್ಪ ವಿಭಿನ್ನ, ವೈವಿಧ್ಯಮಯ ವ್ಯಕ್ತಿತ್ವ ಹೊಂದಿದವರು, ಎಂದೂ ತಿದ್ದಿ ತೀಡಿ ಬುದ್ಧಿ ಹೇಳಲು ಬಲ ಪ್ರಯೋಗ ಮಾಡಲೇ ಇಲ್ಲ. ಇದಕ್ಕೊಂದು‌‌ ನಿದರ್ಶನ ಎಂದರೆ ಒಮ್ಮೆ ನಮ್ಮ ಅಣ್ಣ ತಮ್ಮ ತರಗತಿಯ ಹುಡುಗರೊಂದಿಗೆ ಜಗಳವಾಡಿ ಮನೆಗೆ ಬಂದು ಅಪ್ಪರವರನ್ನು ಕರೆದುಕೊಂಡು ಹೋಗಿ ಆ ಹುಡುಗರನ್ನು ಬೈಯ್ಯಲು ಹೇಳಿದ್ದರಂತೆ, ಆಗ ಅಪ್ಪ ಅಣ್ಣನೊಂದಿಗೆ ಹೋಗಿ, ಆ ಹುಡುಗರನ್ನು ಕರೆದು ತನ್ನ ಜೇಬಿನಲ್ಲಿದ್ದ ಚಾಕಲೇಟುಗಳನ್ನು ಕೊಟ್ಟು “ಮಕ್ಕಳೇ ನೀವೆಲ್ಲಾ ಒಂದೇ! ಹಿಂಗಿಲ್ಲಾ ಜಗಳವಾಡಬಾರದು” ಎಂದು ಮುದ್ದು ಮುದ್ದಾಗಿ ಮಾತಾಡಿ ಬಂದಿದ್ದರಂತೆ.

ಅಣ್ಣನವರು, “ನಮ್ಮಪ್ಪ ಅಂದರೆ ಹಂಗೆ ಹಿಂಗೆ ಬಂದು ನಿಮ್ಮೆಲ್ಲರಿಗೊಂದು ಗತಿ ಕಾಣಿಸುತ್ತಾರೆ” ಎಂದು ಹೇಳಿಕೊಂಡಿದ್ದು ಅಪ್ಪನ ಮೃದು ಸ್ವಭಾವ ದಿಂದಾಗಿ ಮುಜುಗರಕ್ಕೀಡಾಗಿದ್ದರಂತೆ. ಇದಕ್ಕಾಗಿಯೇ ಇರಬಹುದು ನಮ್ಮೂರಿನ ಜನ ನಮ್ಮಪ್ಪರವರಿಗೆ ದೇವರಂಥ ಮನುಷ್ಯ ಎಂದು ಹೇಳುತ್ತಿದ್ದರು. ಇಂಥ ಅಪರೂಪದ ಸ್ವಭಾವ ಹೊಂದಿದ್ದ ಅಪ್ಪ ತಮ್ಮ ಸಿಟ್ಟನ್ನು ನಮ್ಮ ಮೇಲೆ ತೋರಿಸಲೇ ಇಲ್ಲ. ಪ್ರಶಾಂತ ಸಾಗರದಂತಿದ್ದ ಅಪ್ಪ ನಿಜಕ್ಕೂ ಅಂತರ್ಗತ ಅಮೂಲ್ಯ, ಅಮೋಘ, ಅಸಿಮ ಜ್ಞಾನಿ.

ನಮ್ಮ ಬದುಕಿನಲ್ಲಿ ನಡೆವ ಪ್ರತಿಯೊಂದು ಆಗುಹೋಗುಗಳನ್ನು ವಿವರಿಸಲು ಅವರಲ್ಲೊಂದು ನೀತಿ ಕಥೆ ಇದ್ದೇ ಇರುತ್ತಿತ್ತು. ಕಥೆಗಳ ಮೂಲಕವೇ ಜೀವನ ಪಾಠ ಕಲಿಸಿಕೊಟ್ಟಿದ್ದು ಅಪ್ಪ. ಮಕ್ಕಳನ್ನು ತನ್ನ ಕುಡಿಗಳೆಂದಷ್ಟೇ ಅಲ್ಲದೇ ಸಮಾಜದ ಭಾವಿ ಪ್ರಜೆಗಳೆಂದೇ ತಿಳಿದು ಎಲ್ಲಾ ಥರದ ನೈತಿಕತೆ, ಹೊಣೆಗಾರಿಕೆ, ಜವಾಬ್ದಾರಿಗಳನ್ನೂ ಹೇಳಿಕೊಟ್ಟವರು. ಆದ್ದರಿಂದ ಮಕ್ಕಳೊಂದಿಗೆ ಗೆಳೆಯನಂತೆಯೇ ವರ್ತಿಸುತ್ತಿದ್ದರು. ಅದೆಷ್ಟೋ ಜನರು ಹೇಳುತ್ತಾರೆ ಅಪ್ಪ ಅಂದರೆ ಭಯ ಅಂತ. ಆದರೆ ನಮಗೆ ಅಂಥ ಅನುಭವವೇ ಇಲ್ಲ. ನಮ್ಮ ಅಪ್ಪ ಅದೆಷ್ಟು ಪ್ರೀತಿ‌ ನೀಡುತ್ತಿದ್ದರೆಂದರೆ ನಾವೆಲ್ಲಾ ಚಿಕ್ಕವರಿದ್ದಾಗ ಒಮ್ಮೆ ಅಪ್ಪನ ಕಾಲಿಗೆ ಅದೇನೋ ಪೆಟ್ಟಾಗಿ ರಕ್ತ ಬರುತ್ತಿತ್ತು. ಅಮ್ಮ ತುಂಬಾ ಗಾಬರಿಯಿಂದ ಅಪ್ಪನ ಕಾಲಿಗೆ ಔಷಧಿ ಲೇಪಿಸುತ್ತಿದ್ದರು.

ಅಮ್ಮನ ಮುಖದಲ್ಲಿ ನೋವು, ಸಂಕಷ್ಟ ಎದ್ದು ಕಾಣುತ್ತಿದ್ದವು. ಆದರೆ ಮಕ್ಕಳಾದ ನಾವೆಲ್ಲಾ ತುಂಬಾ ಸಂತಸ ಪಡುತ್ತಿದ್ದೆವು. ಅದನ್ನರಿತ ಅಮ್ಮ “ ನೀವೆಲ್ಲಾ ಹುಚ್ಚರಾಗಿದ್ದೀರಿಯೇ ನಿಮ್ಮ ಅಪ್ಪನವರಿಗೆ ಗಾಯ ಆಗಿದೆ. ಅವರು ನೋವಿನಲ್ಲಿದ್ದಾರೆ, ನೀವ್ಯಾಕೆ ಸಂತಸ ಪಡುತ್ತಿದ್ದೀರಾ?” ಎಂದು ಬೈಯ್ಯಲಾರಂಭಿಸಿದರು, ಆಗ ನಾವೆಲ್ಲಾ “ಇಲ್ಲಮ್ಮ, ಅಪ್ಪನವರಿಗೆ ಗಾಯ ಆಗಿದೆ ಅಲ್ವಾ? ನಾಳೆ ಅಪ್ಪ ಮನೆಯಲ್ಲೇ ಇರುತ್ತಾರೆ, ನಮ್ಮೊಂದಿಗೆಯೇ ಕಾಲ ಕಳೆಯುತ್ತಾರೆ ಅಲ್ವಾ” ಎಂದು ಹೇಳಿದಾಗ ಅಪ್ಪ ಅಮ್ಮ ಇಬ್ಬರೂ ನಗಲಾರಂಭಿಸಿದ್ದರು. ಹೀಗೆ ಅಪ್ಪ ಮನೆಯಲ್ಲಿ ನಮ್ಮೊಟ್ಟಿಗೆಯೇ ಇದ್ದರೆ ಅದುವೇ ಸ್ವರ್ಗ.

ಆ ಸ್ವರ್ಗಾನುಭವ ನೀಡುವ ಅಪ್ಪನವರ ಹರಸಾಹಸ ನಮಗೆಲ್ಲಾ ಅಂದು ತಿಳಿಯುತ್ತಿರಲಿಲ್ಲ. ಮಕ್ಕಳನ್ನು ಒಳ್ಳೆಯ ಬದುಕು ಕಟ್ಟಿಕೊಡಲು ಅವರು ಮಾಡಿದ ತ್ಯಾಗ ಬಲಿದಾನಗಳೇನು ನಮಗೆ ಅರಿವಾಗಲೇ ಇಲ್ಲ. ಅದೆಷ್ಟು ತೊಂದರೆಗಳಿದ್ದರೂ ನಮಗೆ ಮಾತ್ರ ಅಪ್ಪನಲ್ಲಿ ಬದುಕುವ ಛಲ, ನಮ್ಮ ಬಗೆಗೆ ಇರುವ ಪ್ರೀತಿ ಮಾತ್ರ ಕಂಡಿದ್ದವು. ಬೆಳೆದು ದೊಡ್ಡವರಾದ ಮೇಲೂ ನಾವೆಲ್ಲಾ ಮಕ್ಕಳು ಅಪ್ಪನವರ ಸುತ್ತ ಕೂತುಕೊಂಡು ಅವರ ಬಾಲ್ಯದ ಕಥೆಗಳು ಮತ್ತು ಅನುಭವಗಳನ್ನು ಕೇಳುತ್ತಿದ್ದೆವು. ಅಪ್ಪ ಅದೆಷ್ಟು ಕಷ್ಟ ಪಟ್ಟು ನಮ್ಮನ್ನೆಲ್ಲಾ ಬೆಳೆಸಿದ್ದಾರೆಂದು ದೊಡ್ಡವರಾದ ಮೇಲೆ ತಿಳಿದಂತಾಯಿತು.

ಈ ಕೊರೊನಾ ಮಹಾಮಾರಿಗೆ ತುತ್ತಾಗಿ ಎಪ್ಪತ್ತೆರಡರ ಜೀವ ಸತತ ಹತ್ತು ಹನ್ನೆರಡು ದಿನಗಳ ವರೆಗೆ ಜೀವನ್ಮರಣದ ಹೋರಾಟದಲ್ಲಿ ಹೊರಟೇ ಹೋಯಿತು. ಅದೆಷ್ಟು ಕಷ್ಟಗಳು ಬಂದರೂ ನಗು ಮುಖ ಬೀರುತ್ತಿದ್ದ ಅಪ್ಪನವರು ಈ ಪಿಶಾಚಿ ಕೊರೊನಾದಿಂದಾಗಿ ನಗುವುದನ್ನೇ ಬಿಟ್ಟಿದ್ದರು. ಅದೆಷ್ಟು ತೊಂದರೆ ಆದರೂ ಹೇಳಿಕೊಳ್ಳದ ಅಪ್ಪ ಕೊರೊನಾ ದಿಂದಾಗುತ್ತಿದ್ದ ಉಸಿರಾಟದ ತೊಂದರೆಯನ್ನೂ ಹೇಳಲೇ ಇಲ್ಲ. ತಾನಾಗಿಯೇ ಐದಾರು ದಿನಗಳ ವರೆಗೆ ಒಬ್ಬಂಟಿಯಾಗಿ ಅದನ್ನು ನಿಭಾಯಿಸಿಕೊಂಡು ಹೋದರು.

ನಮ್ಮ ಬದುಕಿನ ಹೀರೋ ಹೀಗೆ ನಮ್ಮ ಮುಂದೆ ಪ್ರಾಣ ಬಿಡುತ್ತಿರುವ ಸಂದರ್ಭ ಬರುತ್ತದೆ ಎಂದು, ಅಂದುಕೊಂಡಿರಲೇ ಇಲ್ಲ! ಅಪ್ಪರವರ ಪ್ರಾಣ ಉಳಿಸಲು ಬೆಂಗಳೂರಿನ ಬೀದಿ ಬೀದಿಗೆ ರಾತ್ರಿ ಒಂದು ಎರಡು ಗಂಟೆಗಳೆನ್ನದೇ ಬೈಕ್ ಮೇಲೆ ಆಸ್ಪತ್ರೆ ಆಸ್ಪತ್ರೆ ಸುತ್ತಾಡಿದೆವು. ಮನೆಗೆ ಬಂದು ಬಿರಿಯಾನಿ ತಿಂದು ಹೋದ ಅದೆಷ್ಟೋ ಗೆಳೆಯರೂ ಮೂಕರಾಗಿಬಿಟ್ಟಿದ್ದರು. ತಮ್ಮ ಕಷ್ಟಗಳಿಗಾಗಿ, ಹೆಣ್ಣು ಮಕ್ಕಳ ಮದುವೆಗಳಿಗಾಗಿ, ಹಬ್ಬ ಹರಿದಿನಗಳಲ್ಲಿ ಖುಷಿ ಅಂತ ಹಣ ಕೇಳಲು ಮನೆಗೆ ಬರುತ್ತಿದ್ದ, ಕರೆ ಮಾಡುತ್ತಿದ್ದ ಗೆಳೆಯರು, ಸಂಬಂಧಿಗಳು ಕುಶಲ, ಕ್ಷೇಮ ವಿಚಾರಿಸಲೂ ಬಡವರಾಗಿ ಬಿಟ್ಟಿದ್ದರು.

ಕೊನೆಗೆ ಮನುಷ್ಯತ್ವ ಉಳಿದಿದೆ ಎಂಬಂತೆ ಅನೇಕ ಅಪರಿಚಿತರು ನಮಗೆ ಸಹಕಾರ ನೀಡಿದರು. ನಮಗೆ ಒಂದ್ಚೂರು ನೋವಾಗದಂತೆ ನೋಡಿಕೊಳ್ಳುತ್ತಿದ್ದ ಅಪ್ಪರವರನ್ನು ಉಳಿಸಲು ಅಣ್ಣಂದಿರೂ ಹಗಲಿರುಳು ಎನ್ನದೆ ಜೊತೆಯಾಗಿಯೇ ಉಪಚರಿಸಿದರು. ಸಿಕ್ಕ ಸಿಕ್ಕವರನ್ನು ಬೇಡಿಕೊಂಡಾಗ ಕೊನೇ ಕ್ಷಣಗಳಲ್ಲಿ ಆಸ್ಪತ್ರೆ ವ್ಯವಸ್ಥೆ ಮಾಡಲಾಯಿತು. ಆದರೆ ನಮ್ಮ ಪ್ರಾರ್ಥನೆಗಳೆಲ್ಲಾ ವ್ಯರ್ಥವಾದವು ದೇವರಿಗೆ ಮಾತ್ರ ನಮ್ಮ ಮೇಲೆ ಕರುಣೆ ಬರಲೇ ಇಲ್ಲ!! ಅಪ್ಪರವರಿಗೆ ಉಳಿಸುವ ನಮ್ಮ ಪ್ರಯತ್ನದ ಮುಂದೆ ದೇವರು ತೋರಿಸಿದ ಪ್ರೀತಿ ಗೆದ್ದು ಬಿಟ್ಟಿತು. ಅಪ್ಪ ನಮ್ಮನ್ನಗಲಿ ದೇವರತ್ತ ಹೋರಟು ಬಿಟ್ಟರು.

ನಿತ್ಯ ಚಾಚು ತಪ್ಪದೇ ಬಾಗಿಲು ತೆರೆದು ನನ್ನ ಬೀಳ್ಕೊಡುತ್ತಿದ್ದ ಅಪ್ಪ ದಿಢೀರನೇ ಹೊಗಿಬಿಟ್ಟಿದ್ದಾರೆ. ಕೆಲಸಕ್ಕಾಗಿ ಹೊರಡಲು ರೆಡಿಯಾಗಿ ನಿಂತರೆ ನೀರಿನ ಬಾಟಲ್ ತುಂಬಿ ಕೈಗೆ ಕೊಡುತ್ತಿದ್ದ ಅಪ್ಪ ಈಗ ಇಲ್ಲದಿದ್ದರಿಂದ ಆ ಬಾಟಲಿನ ನೀರೂ ಸಹ ಗಂಟಲಿನಿಂದ ಇಳಿಯುವಾಗ ಅಪ್ಪನಿಲ್ಲದ ಕಟು ಸತ್ಯವನ್ನು ಮತ್ತೇ ಮತ್ತೇ ನೆನಪಿಸುತ್ತಿದೆ. ಒಂದು ದಿನವೂ ಮನೆಯ ಹೊಸ್ತಿಲು ಒಬ್ಬಂಟಿಯಾಗಿ ದಾಟಲೂ ಬಿಡದೇ ಜೊತೆಯಲ್ಲಿ ಕಾವಲುಗಾರನಾಗಿದ್ದ ಅಪ್ಪ ಈಗಿಲ್ಲದಿರುವಾಗ ಪ್ರತಿ ಹೆಜ್ಜೆ ಹೆಜ್ಜೆಗೂ ತಾಗುವ ಕವಲುದಾರಿಗಳು ತೊಂದರೆಯನ್ನುಂಟುಮಾಡುತ್ತಿವೆ.

“ಅದೆಷ್ಟು ದೊಡ್ಡವರಾದರೂ ಅಪ್ಪ ಅಮ್ಮರನ್ನು ಮರೆಯುವಷ್ಟು ಬಲಿಷ್ಠತೆ ಬರೋದೇ ಇಲ್ಲ!!
ಅದೆಷ್ಟು ಮುಂದೆ ನೆಡದರೂ ಅಪ್ಪ ಅಮ್ಮನ ಕೈ ಹಿಡಿದು ಹಿಂದೆ ಸಾಗಿದ ದಾರಿ ಮರೆಯಕಾಗಲ್ಲ!!
ಅದೆಷ್ಟು ಧೈರ್ಯದಿಂದ ಹಿಗ್ಗಿದರೂ,
ಅಪ್ಪ ಅಮ್ಮನ ಅಗಲಿಕೆ, ಕುಗ್ಗಿಸದೇ ಬಿಡೋದಿಲ್ಲ”!!
ಆದರೂ ವಿಧಿಯಾಟ ನಾವೆಲ್ಲರೂ ಎದುರಿಸಲೇ ಬೇಕು.

ಏನೇ ನೋವು ಬಂದರೂ ಬಾಗದ ಅಪ್ಪನ ಗುಣ,ಛಲ ಮಾತ್ರ ಇಂದಿಗೂ ನಮ್ಮಲ್ಲಿದೆ. ಎಲ್ಲವನ್ನೂ ನಿಭಾಯಿಸುವ ಆತ್ಮವಿಶ್ವಾಸ, ಅಪ್ಪ ಕಲಿಸಿಕೊಟ್ಟ ಅಮೂಲ್ಯ ಸಂಸ್ಕಾರಗಳು ನಮ್ಮೊಟ್ಟಿಗಿವೆ. ಅಪ್ಪ ದೈಹಿಕವಾಗಿಲ್ಲದಿದ್ದರೂ ಮಾನಸಿಕವಾಗಿ ಎಂದಿಗೂ ನಮ್ಮೊಟ್ಟಿಗಿದ್ದಾರೆಂದೇ ಬದುಕುತ್ತಿದ್ದೇವೆ. ಬಾಲ್ಯದಿಂದಲೂ ಅಪ್ಪಂದಿರ ದಿನವನ್ನು ತುಂಬಾ ಸಡಗರದಿಂದ ಆಚರಿಸುತ್ತಿದ್ದೆವು. ಇಂದು ಈ ದಿನ ಅಪ್ಪ ಜೊತೆಗಿಲ್ಲ ಎಂಬ ಕಟು ಸತ್ಯದೊಂದಿಗೆ ಬದುಕುವುದು‌ ಸ್ವಲ್ಪ, ಇಲ್ಲ ಇಲ್ಲ ಬಲೂ ಭಾರ ಅನ್ನಿಸುತ್ತಿದೆ!!! ಆದರೂ ಬದುಕಬೇಕು, ಬದುಕುತ್ತಿದ್ದೇವೆ!!!

(ಫರ್ಹಾನಾಜ್ ಮಸ್ಕಿ (ತಂದೆ- ಖ್ವಾಜಾ ಗೇಸುದರಾಜ್ ಹುಸೇನ್ ಕಿರನ್ ಬ್ಯಾಟರೀಸ್ ಮಸ್ಕಿ), ಸಹಾಯಕ ಪ್ರಾಧ್ಯಾಪಕರು ನೆಲಮಂಗಲ, ಬೆಂಗಳೂರು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂಪಾದಕೀಯ | ಚುನಾವಣೆಗಳಲ್ಲಿ ಹಣ ಮತ್ತು ಜಾತಿ

Published

on

~ಗೋವರ್ಧನ ನವಿಲೇಹಾಳು

ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಚುನಾವಣಾ ಪ್ರಯೋಗಶಾಲೆಯಾಗಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಕೋಟಿಗಟ್ಟಲೆ ಮತದಾರರು ತಮಗೆ ಅರ್ಹವೆನಿಸಿದ  ಪ್ರತಿನಿಧಿಯನ್ನು ಆಯ್ಕೆಯನ್ನು ಮಾಡುತ್ತಾರೆ. ಹಾಗೆಯೇ ಪ್ರಜಾ ಪ್ರಭುತ್ವದ ಪ್ರಯೋಗಶಾಲೆಯಾದ ಭಾರತದ ಚುನಾವಣೆಗಳನ್ನು ಹಣ ಮತ್ತು ಜಾತಿಗಳು ನಿಯಂತ್ರಿಸುತ್ತಿವೆ ಎಂಬುದು ಕರಾಳ ಸತ್ಯ.

ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತವೆ ಮತ್ತು  ಖರೀದಿಸುತ್ತಿವೆ. ಇದು ಕೇವಲ ಒಂದು ತಾತ್ಕಾಲಿಕ ಸಮಸ್ಯೆಯಲ್ಲ; ಇದು ಪ್ರಜಾಪ್ರಭುತ್ವದ ಮೂಲ ತತ್ತ್ವಗಳನ್ನೇ ಕೊಲ್ಲುತ್ತಿರುವ ದೀರ್ಘಕಾಲಿಕ ಕ್ಯಾನ್ಸರ್. ಒಂದು ದಿನಪತ್ರಿಕೆಯ ಸಂಪಾದಕನಾದ ನಾನು ಈ ಸಂಪಾದಕೀಯದ ಮೂಲಕ ಹಣ ಮತ್ತು ಜಾತಿ ಎಂಬ  ಎರಡು ಶಕ್ತಿಗಳು ಹಾಗೂ ದೌರ್ಬಲ್ಯಗಳನ್ನು ವಿಮರ್ಶಾತ್ಮಕವಾಗಿ ಪರೀಕ್ಷಿಸಲು ಬಯಸುತ್ತೇನೆ. ಇದು ಕೇವಲ ಟೀಕೆಯಲ್ಲ;  ಎಚ್ಚರಿಕೆಯೂ ಹೌದು.

ಭಾರತದ ಚುನಾವಣೆಗಳ ವೆಚ್ಚವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. 2019ರ ಲೋಕಸಭಾ ಚುನಾವಣೆಗೆ ಸರ್ಕಾರಿ ಲೆಕ್ಕದ ಪ್ರಕಾರ 60,000 ಕೋಟಿ ರುಪಾಯಿ ವೆಚ್ಚವಾಗಿದ್ದರೆ, 2024ರ ಚುನಾವಣೆಯಲ್ಲಿ ಇದು ಒಂದು ಲಕ್ಷ ಕೋಟಿ ರುಪಾಯಿಗಳನ್ನು ಮೀರಿದೆ ಎಂದು ಅಂಕಿಅಂಶಗಳು ಹೇಳುತ್ತವೆ. ಆದರೆ ನಿಜವಾದ ವೆಚ್ಚ ಇನ್ನೂ ಹೆಚ್ಚು. ಪ್ರತಿ ಅಭ್ಯರ್ಥಿಯು ಒಂದು ಕ್ಷೇತ್ರದಲ್ಲಿ ಕನಿಷ್ಠ 10-20 ಕೋಟಿ ರುಪಾಯಿ ಖರ್ಚು ಮಾಡುತ್ತಾನೆ. ಇದಕ್ಕೆ ಕಾರಣ ಸರಳವಾಗಿದೆ, ಮತದಾರರನ್ನು ‘ಕೊಳ್ಳುವುದು’. ಚುನಾವಣಾ ಆಯೋಗದ ನಿಯಮಗಳು ಎಷ್ಟೇ ಕಟ್ಟುನಿಟ್ಟಾಗಿದ್ದರೂ, ಕಪ್ಪು ಹಣದ ಪ್ರವಾಹವನ್ನು ತಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಎಲೆಕ್ಟ್ರಾಲ್ ಬಾಂಡ್‌ಗಳು ತಾತ್ಕಾಲಿಕವಾಗಿ ಪಾರದರ್ಶಕತೆಯ ಮುಸುಕು ಹಾಕಿದ್ದಾವೆ. ಆದರೆ ಸುಪ್ರೀಂ ಕೋರ್ಟ್ ಅವುಗಳನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿದ ನಂತರವೂ, ಕಾರ್ಪೊರೇಟ್‌ಗಳು ಮತ್ತು ಉದ್ಯಮಪತಿಗಳು ಬೇರೆ ಬೇರೆ ಮಾರ್ಗಗಳ ಮೂಲಕ ಹಣ ಸುರಿಸುತ್ತಲೇ ಇದ್ದಾರೆ. ಫಲಿತಾಂಶ? ಶ್ರೀಮಂತ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಮಾತ್ರ ಸ್ಪರ್ಧಿಸುತ್ತಾರೆ. 2024ರ ಲೋಕಸಭೆಯಲ್ಲಿ ಸರಾಸರಿ ಅಭ್ಯರ್ಥಿಯ ಆಸ್ತಿ 5 ಕೋಟಿ ರುಪಾಯಿಗಳಿಗಿಂತ ಹೆಚ್ಚಿತ್ತು.

ಜನಪ್ರತಿನಿಧಿಯಾಗುವುದು ಇಂದು ಉದ್ಯೋಗವಾಗಿದೆ, ಸೇವೆಯಲ್ಲ. ಹಣವು ಕೇವಲ ವೆಚ್ಚವಲ್ಲ; ಅದು ಅಧಿಕಾರದ ಹಂಚಿಕೆಯನ್ನೂ ನಿರ್ಧರಿಸುತ್ತದೆ. ಪಕ್ಷಗಳು ‘ಕ್ಯಾಷ್ ಫಾರ್ ವೋಟ್’ ಯೋಜನೆಗಳನ್ನು ಅನುಸರಿಸುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಒಂದು ಮನೆಗೆ 500 ರಿಂದ 2000 ರುಪಾಯಿ, ನಗರಗಳಲ್ಲಿ ಮೊಬೈಲ್ ರೀಚಾರ್ಜ್, ಸೈಕಲ್, ಟಿವಿ – ಇವೆಲ್ಲವೂ ಹಣದ ರೂಪದಲ್ಲಿ ಹಂಚಿಕೆಯಾಗುತ್ತವೆ. ಚುನಾವಣಾ ಆಯೋಗವು ರೇಡ್ ನಡೆಸುತ್ತದೆ, ಆದರೆ ಹಣದ ಹರಿವು ನಿಲ್ಲುವುದಿಲ್ಲ. ಇದರ ಫಲಿತಾಂಶವಾಗಿ ಜನರ ಸಮಸ್ಯೆಗಳು – ಬಡತನ, ಉದ್ಯೋಗ, ಶಿಕ್ಷಣ – ಮರೆಯುತ್ತವೆ. ಅಭ್ಯರ್ಥಿಯು ‘ನಾನು ಏನು ಮಾಡುತ್ತೇನೆ’ ಎಂದು ಹೇಳುವ ಬದಲು ‘ನಾನು ಎಷ್ಟು ಕೊಡುತ್ತೇನೆ’ ಎಂದು ಪ್ರಚಾರ ಮಾಡುತ್ತಾನೆ. ಇದು ಜನತಂತ್ರವಲ್ಲ; ಇದು ಹಣತಂತ್ರ.

ಇನ್ನು ಜಾತಿಯ ಸುಳಿಯನ್ನು ಚರ್ಚಿಸುವುದಾದರೆ, ಭಾರತದಲ್ಲಿ ಜಾತಿ ಎಂದರೆ ಕೇವಲ ಸಾಮಾಜಿಕ ವ್ಯವಸ್ಥೆಯಲ್ಲ; ಅದು ರಾಜಕೀಯ ಗಣಿತದ ಮೂಲಭೂತ ಸೂತ್ರ. ಕರ್ನಾಟಕದಲ್ಲಿ ಮಾತ್ರವಲ್ಲ, ಉತ್ತರ ಪ್ರದೇಶ, ಬಿಹಾರ, ತಮಿಳುನಾಡು – ಎಲ್ಲೆಡೆ ಜಾತಿ ಸಮೀಕ್ಷೆಗಳು, ಜಾತಿ ಆಧಾರಿತ ಟಿಕೆಟ್ ಹಂಚಿಕೆ ಮತ್ತು ಜಾತಿ ಬ್ಯಾಂಕ್‌ಗಳು ಚುನಾವಣೆಗಳನ್ನು ನಿರ್ಧರಿಸುತ್ತವೆ.

ಕರ್ನಾಟಕದಲ್ಲಿ ಲಿಂಗಾಯತ, ಒಕ್ಕಲಿಗ, ದಲಿತ, ಮುಸ್ಲಿಂ – ಈ ಜಾತಿ ಬ್ಲಾಕ್‌ಗಳನ್ನು ಲೆಕ್ಕ ಹಾಕದೆ ಯಾವುದೇ ಪಕ್ಷ ಗೆಲ್ಲಲಾರದು. ಪಕ್ಷಗಳು ಜಾತಿ ನಾಯಕರನ್ನು ‘ಖರೀದಿಸುತ್ತವೆ’. ಒಂದು ಜಾತಿಯ ನಾಯಕನಿಗೆ ಟಿಕೆಟ್ ಕೊಟ್ಟರೆ ಆ ಜಾತಿಯ 70-80% ಮತಗಳು ಬರುತ್ತವೆ ಎಂಬ ಲೆಕ್ಕ. ಇದು ಜನರನ್ನು ವ್ಯಕ್ತಿಗಳಾಗಿ ನೋಡುವುದಿಲ್ಲ; ಅವರನ್ನು ಜಾತಿ ಬ್ಯಾಂಕ್‌ಗಳಾಗಿ ಪರಿವರ್ತಿಸುತ್ತದೆ.

ಜಾತಿ ರಾಜಕಾರಣವು ಮೀಸಲಾತಿಯನ್ನು ದುರುಪಯೋಗಪಡಿಸಿಕೊಂಡಿದೆ. ಸಂವಿಧಾನದಲ್ಲಿ ಮೀಸಲಾತಿ ಸಾಮಾಜಿಕ ನ್ಯಾಯಕ್ಕಾಗಿ ಇದೆ. ಆದರೆ ಇಂದು ಅದು ಅಧಿಕಾರದ ಲಾಭಕ್ಕಾಗಿ ಬಳಸಲಾಗುತ್ತಿದೆ. ಜಾತಿ ಸಮೀಕ್ಷೆಯ ಬೇಡಿಕೆಗಳು ಹೆಚ್ಚುತ್ತಿವೆ. ಕರ್ನಾಟಕದಲ್ಲಿ ಕೂಡ ಜಾತಿ ಸಮೀಕ್ಷೆಯ ವಿವಾದ ಎಲ್ಲರಿಗೂ ತಿಳಿದಿದೆ. ಇದು ನಿಜವಾಗಿಯೂ ಸಾಮಾಜಿಕ ನ್ಯಾಯವೇ? ಅಥವಾ ಹೆಚ್ಚು ಮೀಸಲಾತಿ ಬೇಡುವ ಮೂಲಕ ಅಧಿಕಾರ ಹಂಚಿಕೊಳ್ಳುವ ರಾಜಕೀಯ ತಂತ್ರವೇ? ಜಾತಿ ಆಧಾರಿತ ರಾಜಕಾರಣವು ಮೆರಿಟ್ ಅನ್ನು ಕೊಲ್ಲುತ್ತದೆ. ಯೋಗ್ಯರಾದ ಯುವಕರು ಅಥವಾ ಮಹಿಳೆಯರು ಜಾತಿ ಲೆಕ್ಕವಿಲ್ಲದೆ ಅವಕಾಶ ಪಡೆಯುವುದಿಲ್ಲ. ಇದು ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತದೆ.

ಹಣ ಮತ್ತು ಜಾತಿ ಒಂದರೊಂದು ಪೂರಕವಾಗಿ ಕೆಲಸ ಮಾಡುತ್ತವೆ. ಹಣವು ಜಾತಿ ನಾಯಕರನ್ನು ಖರೀದಿಸುತ್ತದೆ. ಜಾತಿ ನಾಯಕರು ಹಣದಿಂದ ಮತಗಳನ್ನು ಖರೀದಿಸುತ್ತಾರೆ. ಒಂದು ಸಣ್ಣ ಗುಂಪು ಅಧಿಕಾರವನ್ನು ತನ್ನ ಕೈಯಲ್ಲಿ ಇಟ್ಟುಕೊಳ್ಳುತ್ತದೆ. ಸಾಮಾನ್ಯ ಜನರು ಕೇವಲ ಮತದಾರರಾಗಿ ಉಳಿಯುತ್ತಾರೆ, ನಿರ್ಣಾಯಕರಾಗುವುದಿಲ್ಲ. ಇದರಿಂದಾಗಿ ಭ್ರಷ್ಟಾಚಾರ ಹೆಚ್ಚುತ್ತದೆ. ಅಧಿಕಾರಕ್ಕೆ ಬಂದವರು ತಮ್ಮ ಹೂಡಿಕೆಯನ್ನು ತಿರುಗಿಸಿಕೊಳ್ಳುತ್ತಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು – ಇವುಗಳ ಬದಲು ಅಭಿವೃದ್ಧಿ ಕೇವಲ ಫೋಟೋ ,ವಿಡಿಯೋಗಳಲ್ಲಿ ಉಳಿಯುತ್ತವೆ

ಈ ಸಮಸ್ಯೆಯನ್ನು ತೊಡೆದುಹಾಕಲು ಏನು ಮಾಡಬಹುದು? ಮೊದಲು ಚುನಾವಣಾ ಆಯೋಗವು ಹೆಚ್ಚು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲಾ ಅಭ್ಯರ್ಥಿಗಳ ಆಸ್ತಿ ಮತ್ತು ವೆಚ್ಚದ ಪಾರದರ್ಶಕ ಲೆಕ್ಕಪತ್ರವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು. ರಾಜ್ಯ ಆರ್ಥಿಕ ನೆರವು (ಸ್ಟೇಟ್ ಫಂಡಿಂಗ್ ಆಫ್ ಎಲೆಕ್ಷನ್ಸ್) ಅನ್ನು ಜಾರಿಗೊಳಿಸಬೇಕು. ಕಾರ್ಪೊರೇಟ್ ದಾನಗಳಿಗೆ ಕಟ್ಟುಪಾಡು ಬೇಕು. ಜಾತಿ ರಾಜಕಾರಣಕ್ಕೆ ಎದುರಾಗಿ ‘ಜಾತಿ-ಮುಕ್ತ’ ಅಭ್ಯರ್ಥಿ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಜಾತಿ ಸಮೀಕ್ಷೆಗಳು ನಡೆಯಬೇಕು, ಆದರೆ ಅದನ್ನು ಅಧಿಕಾರದ ಲಾಭಕ್ಕಾಗಿ ಬಳಸಬಾರದು. ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಮೂಲಕ ಜಾತಿ ಆಧಾರಿತ ರಾಜಕಾರಣವನ್ನು ಕ್ರಮೇಣ ಕಡಿಮೆ ಮಾಡಬೇಕು.

ಜನರು ಈಗ ಎಚ್ಚರಗೊಳ್ಳಬೇಕು. ಮತವನ್ನು ಹಣಕ್ಕಾಗಿ ಅಥವಾ ಜಾತಿಗಾಗಿ ಮಾರಾಟ ಮಾಡುವುದು ಸ್ವಯಂ ವಿನಾಶಕ್ಕೆ ದಾರಿ. ಪ್ರಜಾಪ್ರಭುತ್ವವು ಜನರ ಕೈಯಲ್ಲಿದೆ. ಅದನ್ನು ಹಣ ಮತ್ತು ಜಾತಿಯ ಕೈಗೆ ಬಿಟ್ಟರೆ ನಾವು ನಮ್ಮ ಭವಿಷ್ಯವನ್ನೇ ಮಾರಿಕೊಳ್ಳುತ್ತೇವೆ. ಪತ್ರಿಕೆಗಳು, ಸಾಮಾಜಿಕ ಮಾಧ್ಯಮಗಳು ಮತ್ತು ನಾಗರಿಕ ಸಂಘಟನೆಗಳು ಈ ವಿಷಯವನ್ನು ಸತತವಾಗಿ ಚರ್ಚಿಸಬೇಕು. ಚುನಾವಣೆಗಳು ಕೇವಲ ಅಧಿಕಾರದ ಬದಲಾವಣೆಯಲ್ಲ; ಅವು ನಮ್ಮ ಸಮಾಜದ ದರ್ಶನವನ್ನು ನಿರ್ಧರಿಸುತ್ತವೆ.

ಇಂದು ನಾವು ಎದುರಿಸುತ್ತಿರುವುದು ಕೇವಲ ಒಂದು ಚುನಾವಣಾ ಸಮಸ್ಯೆಯಲ್ಲ; ಇದು ಭಾರತದ ಆತ್ಮದ ಸಮಸ್ಯೆ. ಹಣ ಮತ್ತು ಜಾತಿಯನ್ನು ಮೀರಿ ನಿಲ್ಲುವ ನಾಯಕರು ಬರಬೇಕು. ಅವರು ಜನರ ಸಮಸ್ಯೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಪ್ರಜಾಪ್ರಭುತ್ವವು ಕೇವಲ ಹೆಸರಿನಲ್ಲಿ ಮಾತ್ರ ಉಳಿಯುತ್ತದೆ. ಜನತೆ ಎಚ್ಚರದಿಂದಿರಲಿ. ಇದು ನಮ್ಮ ದೇಶ, ನಮ್ಮ ಭವಿಷ್ಯ.

ಸುದ್ದಿದಿನ | ವಾಟ್ಸಾಪ್ | 9980346243

Continue Reading

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending