ಲೈಫ್ ಸ್ಟೈಲ್
“ಆಧುನಿಕ ಜೀವನ ಶೈಲಿಗೆ ಆರೋಗ್ಯಕರ ಧಾನ್ಯ ರಾಗಿ” ; ರಾಗಿ ಉಂಡವ ನಿರೋಗಿ..!
- ಆಶಾ ಸಿದ್ದಲಿಂಗಯ್ಯ
“ರಾಗಿ ಉಂಡವ ನಿರೋಗಿ”
ರಾಗಿ ಆಫ್ರಿಕ ಮತ್ತು ಏಷ್ಯಾದ ಹಲವಾರು ಒಣ ಪ್ರದೇಶಗಳಲ್ಲಿ ಬೆಳೆಯಲಾಗುವ ಒಂದು ಬಗೆಯ ಆಹಾರ ಧಾನ್ಯ. ಇತಿಯೋಪಿಯ ಮೂಲದ ಈ ವಾರ್ಷಿಕ ಬೆಳೆಯು ಸುಮಾರು 4000 ವರ್ಷಗಳ ಹಿಂದೆ ಭಾರತಕ್ಕೆ ತರಲಾಯಿತು.
ಭಾರತದಲ್ಲಿ ರಾಗಿಬೆಳೆಯುವ ರಾಜ್ಯಗಳು
ರಾಗಿ ಬೆಳೆ, ದಕ್ಷಿಣ ಭಾರತದಲ್ಲಿ ಹೆಸರುವಾಸಿಯಾಗಿದೆ.
ಕರ್ನಾಟಕ ಬಿಟ್ಟರೆ, ತಮಿಳುನಾಡು, ಮತ್ತು ಮಹಾರಾಷ್ಟ್ರ ರಾಜ್ಯಗಳು ರಾಗಿಯನ್ನು ಹೆಚ್ಚಾಗಿ ಬೆಳೆಯುತ್ತಿವೆ.
ಇದನ್ನು’ಫಿಂಗರ್ ಮಿಲೆಟ್ ” ಎಂದೂ ಕರೆಯುತ್ತಾರೆ. ಪುಷ್ಕಳ ಪೋಶಕಾಂಷವಿರುವ ಈ ಧಾನ್ಯ , ವಿಶ್ವದ ತೃಣಧಾನ್ಯ ಬೆಳೆಗಳಲ್ಲಿ, ಸಜ್ಜೆ, ನವಣೆ, ಬರಗು ಬೆಳೆಗಳನಂತರದ ಸ್ಥಾನ, ರಾಗಿಯದು. ರಾಗಿ ಬೇಸಾಯದಲ್ಲಿ ಭಾರತಕ್ಕೆ ಅಗ್ರಸ್ಥಾನವಿದೆ. ವರ್ಷಂಪ್ರತಿ ಸುಮಾರು 22 ಲಕ್ಷ ಹೆಕ್ಟೇರುಪ್ರದೇಶದಲ್ಲಿ ರಾಗಿ ಬೆಳೆದು 26 ರಿಂದ 28 ಲಕ್ಷ ಟನ್ ರಾಗಿಯನ್ನು ದೇಶದಲ್ಲಿ ಉತ್ಪಾದಿಸಲಾಗುತ್ತಿದೆ. ಉತ್ಪಾದನೆಯ ಮುಕ್ಕಾಲುಪಾಲು ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಮತ್ತು ಮಹಾರಾಷ್ಟ್ರ ರಾಜ್ಯಗಳು ಉತ್ಪಾದಿಸುತ್ತಿವೆ.ಇನ್ನುಳಿದ ಕಾಲು ಭಾಗ, ಬಿಹಾರ, ಉತ್ತರ ಪ್ರದೇಶ, ಒರಿಸ್ಸ, ಮಧ್ಯ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶಗಳು ಪೂರೈಸುತ್ತವೆ.
ರಾಗಿಯ ಉಪಯೋಗಗಳು
ರಾಗಿಹಿಟ್ಟಿನಿಂದ ರೊಟ್ಟಿ, ಮುದ್ದೆ, ಉಪ್ಪಿಟ್ಟು , ದೋಸೆ, ಗಂಜಿ, ಹಾಲ್ಬಾಯಿ (ಸಿಹಿ) ಎಂಬ ತಿನಿಸುಗಳನ್ನು ತಯಾರಿಸುತ್ತಾರೆ. ಮಕ್ಕಳ ಪೌಷ್ಟಿಕ ಆಹಾರವೆಂದರೆ- ಒಡ್ಡರಾಗಿಹಿಟ್ಟು. ಇದು ಅತ್ಯಂತ ವಿಟಮಿನ್-ಯುಕ್ತ ಆಹಾರ. ಜೀರ್ಣಿಸಿಕೊಳ್ಳಲು ಸುಲಭ. ಇದನ್ನು ಸೇವಿಸಿ ಬೆಳೆದ ಮಕ್ಕಳು ಬಹಳ ಆರೋಗ್ಯದಿಂದಲೂ ಗಟ್ಟಿ-ಮುಟ್ಟಾಗಿಯೂ ಇರುತ್ತಾರೆ. ರಾಗಿ ಮಾಲ್ಟನ್ನು ಸರಿಯಾಗಿ ಡಬ್ಬಿಗಳಲ್ಲಿ ಶೇಖರಿಸಿ ಮಾರುವ ಕಂಪೆನಿಗಳು ಚೆನ್ನಾಗಿ ಹಣ ಮಾಡುತ್ತಿವೆ.
ಮಧುಮೇಹ(ಡಾಯಾಬಿಟಿಸ್) ರೋಗಿಗಳಿಗೆ ಇದು ವೈದ್ಯರಿಂದ ಶಿಫಾರಿಸ್ಸು ಪಡೆದ ಪೇಯ. ರಾಗಿ ಅರಳನ್ನು ಹುರಿದು, ಅದನ್ನು ನುಣ್ಣಗೆ ಬೀಸಿ ಪುಡಿಮಾಡಿ, ಅದಕ್ಕೆ ಸರಿಯಾದ ಪ್ರಮಾಣದಲ್ಲಿ ಬೆಲ್ಲದ ಪುಡಿಬೆರೆಸಿ, ಹುಣಸೆಹುಳಿ, ಯಾಲಕ್ಕಿ ಪುಡಿ ಸೇರಿಸಿ,ಸೇವಿಸಿದರೆ, ಬಹಳ ಚೆನ್ನಾಗಿರುತ್ತದೆ. ಅರಳು ಪುಡಿಯನ್ನು ಮೊಸರಿನಲ್ಲಿ ಸೇರಿಸಿ, ಸಕ್ಕರೆ ಅಥವಾ ಬೆಲ್ಲದ ಜೊತೆಯೂ ಸೇವಿಸಬಹುದು.ರಾಗಿ ಮುದ್ದೆ ಬಸ್ಸಾರು ದಕ್ಷಿಣ ಕರ್ನಾಟಕದಲ್ಲಿ ಜನಪ್ರಿಯ.
ಪೋಷಕಾಂಶಗಳ ವಿವರ
ರಾಗಿ ಅತ್ಯಧಿಕ ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶಗಳನ್ನೊಳಗೊಂಡಿದೆ. ಇದು ಒಂದು ಉತ್ತಮ ಆಹಾರ ಬೆಳೆಯಾಗಿದ್ದು ಮಕ್ಕಳು ದೊಡ್ದವರೆನ್ನೆದೆ ಉಪಯೋಗಿಸಬಹುದು. ರಾಗಿಮುದ್ದೆ ಅತ್ಯಂತ ಜನಪ್ರಿಯ ಆಹಾರ ಪ್ರಕಾರವಾಗಿದೆ.
100ಗ್ರಾಮ್ ರಾಗಿಯಲ್ಲಿನ ಪೋಷಕಾಂಶಗಳ
ವಿವರ ಈ ಕೆಳಕಂಡಂತಿದೆ
ಪೋಷಕಾಂಶ ಪ್ರತಿಶತ
ಪ್ರೋಟಿನ್ 7.3 ಗ್ರಾಂ
ಕೊಬ್ಬು 1.3 ಗ್ರಾಂ
ಪಿಷ್ಟ 72ಗ್ರಾಂ
ಖನಿಜಾಂಶ 2.7ಗ್ರಾಂ
ಸುಣ್ಣದಂಶ 3.44ಗ್ರಾಂ
ನಾರಿನಂಶ 3.6 ಗ್ರಾಂ
ರಾಗಿಮುದ್ದೆ ಮಾಡಿದನಂತರ ತಳದಲ್ಲಿ ಮುದ್ದೆಯ ಅಂಟಿನ ಎಳೆ ಯನ್ನು ಸೀಕು ಎಂದು ಹೇಳುತ್ತಾರೆ. ಒಣಗಿದ ಸೀಕು ಕುರುಂ ಕುರುಂ ಹಪ್ಪಳದಂತೆ ಸ್ವಾದಿಷ್ಟ. ಬಾಲ್ಯದಲ್ಲಿ ಅಮ್ಮ ಬಿಡಿಸಿ ಒಲೆ ಗುಂಡಿನ ಮೇಲಿಟ್ಟ ಸೀಕನ್ನು ಚಪ್ಪರಿಸಿದ ರುಚಿ ಇನ್ನೂ ನಾಲಿಗೆಯಲ್ಲಿದೆ. ಸೀಕನ್ನುಕಂಡರೆ ಮಕ್ಕಳಿಗೆ ಕಣ್ಣು ಅರಳುವುದು. ಬಡಮಕ್ಕಳ ಪಾಲಿಗೆ ಸೀಕು- ಚಾಕಲೇಟ್
ಮುದ್ದೆ ಮಾಡಲಿಕ್ಕೆ ಪಳಗಿದ ಕೈಗಳೇ ಆಗಬೇಕು
ರಾಗಿಮುದ್ದೆ ತಯಾರಿಸುವಲ್ಲಿ ಕಲಾತ್ಮಕತೆಯೂ ಇದೆ. ಕುದಿವ ನೀರಿಗೆ ರಾಗಿಹಿಟ್ಟು ಬೆರೆಸಿ ಹದವಾಗಿ ಕುದಿಸಿ, ಪಾಕಕ್ಕೆ ಬಂದ ಮಿಶ್ರಣವನ್ನು ಉಂಡೆಕಟ್ಟುವ ಪ್ರಕ್ರಿಯೆ ಮೇಲ್ನೋಟಕ್ಕೆ ಸುಲಭವಾಗಿಕಂಡರೂ ಅನುಭವ ಬಯಸುವ ಕಾರ್ಯವಾಗಿದೆ. ಮುದ್ದೆ ಗಂಟಾಗದಂತೆ ತಯಾರಿಸುವುದಕ್ಕೆ ಪಳಗಿದ ಕೈಗಳೇ ಆಗಬೇಕು .
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


