ನೆಲದನಿ
ಮಾಗಿದ ಕಾಲದಲ್ಲಿ ಸಾಹಿತ್ಯ ಕೃಷಿಗೆ ನಿಂತ ಪ್ರೊ.ಜಿ.ಪರಮೇಶ್ವರಪ್ಪ ಅವರ ಸಾಹಿತ್ಯ ಪಯಣ
- ಡಾ.ಕೆ.ಎ.ಓಬಳೇಶ್
ಭಾರತದಂತಹ ವಿಶಿಷ್ಟ ಸಾಂಸ್ಕೃತಿಕ ನಾಡಿನಲ್ಲಿ ವಿಭಿನ್ನ ಪ್ರಕಾರದ ಕಲೆಗಳು ಜನ್ಮತಳೆದಿವೆ. ಈ ಎಲ್ಲಾ ವಿಭಿನ್ನ ಕಲಾ ಪ್ರಕಾರಗಳು ಈ ನೆಲದ ಬಹುತ್ವವನ್ನು ಎತ್ತಿಹಿಡಿಯುವ ಪ್ರಯತ್ನ ಮಾಡಿವೆ. ಇಂತಹ ಬಹುತ್ವವೇ ಭಾರತದ ಸೌಹಾರ್ದತೆಗೆ ಸಾಕ್ಷಿಯಾಗಿರುವುದು ಈ ನೆಲದ ಹೆಮ್ಮೆಯ ಪ್ರತೀಕ.
ಇದಕ್ಕೆ ಪೂರಕವೆಂಬಂತೆ ಕನ್ನಡ ನಾಡಿನಲ್ಲಿ ಹಲವಾರು ಸಾಹಿತಿಗಳು ಈ ನೆಲದ ವಿವಿಧತೆಯನ್ನು ಅನಾವರಣಗೊಳಿಸುವ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವುದನ್ನು ಕಾಣಬಹುದಾಗಿದೆ. ಇಂತಹ ದೇಶಿ ಸೊಗಡನ್ನು ಸಾಹಿತ್ಯದ ಮೂಲಕ ಸೆರೆಹಿಡಿಯುತ್ತ ಬಂದಿರುವ ಸಾಹಿತಿಗಳಲ್ಲಿ ಪ್ರೊ.ಜಿ.ಪರಮೇಶ್ವರಪ್ಪನವರು ಒಬ್ಬರಾಗಿದ್ದಾರೆ.
ಮಧ್ಯ ಕರ್ನಾಟಕದ ಐತಿಹಾಸಿಕ ನಗರವಾಗಿರುವ ಚಿತ್ರದುರ್ಗ ಪ್ರಾಂತ್ಯವು ಕರ್ನಾಟಕದ ಸಾಂಸ್ಕೃತಿಕ ಹಿರಿಮೆ ಮತ್ತು ಗರಿಮೆಗೆ ತನ್ನದೇ ಆದ ವಿಶಿಷ್ಟ ಕಾಣಿಕೆಯನ್ನು ನೀಡಿರುವುದು ಚಾರಿತ್ರಿಕ ಸತ್ಯ. ಇಂತಹ ಸಾಂಸ್ಕೃತಿಕ ಶ್ರೀಮಂತ ನೆಲದಲ್ಲಿ ಹುಟ್ಟಿ ಬೆಳೆದು, ತನ್ನ ಸುತ್ತಮುತ್ತಲಿನ ಪರಿಸರದಲ್ಲಿ ಅಂತರ್ಗತವಾಗಿರುವ ಸಾಹಿತ್ಯದ ದೇಶೀಯತೆ ಹಾಗೂ ಅದರ ವೈಶಿಷ್ಟ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾಹಿತ್ಯ ಚಟುವಟಿಕೆಗೆ ತೊಡಗಿಸಿಕೊಂಡ ಜಿ.ಪರಮೇಶ್ವರಪ್ಪನವರ ಬದುಕಿನ ಸುತ್ತ ಒಂದು ಕೀರುನೋಟ ಬೀರುವುದು ಪ್ರಸ್ತುತ ಲೇಖನದ ಆಶಯವಾಗಿದೆ.
ಶ್ರೀಯುತ ಜಿ.ಪರಮೇಶ್ವರಪ್ಪನವರು ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲ್ಲೂಕು ಹರ್ತಿಕೋಟೆ ಸಮೀಪದ ಕಪಿಲೆಹಟ್ಟಿ ಗ್ರಾಮದಲ್ಲಿ ದಿನಾಂಕ 15 ನವಂಬರ್1950ರಲ್ಲಿ ಜಡಿಯಪ್ಪ ಹಾಗೂ ಸಕ್ರಮ್ಮ ದಂಪತಿಗಳ ತೃತೀಯ ಪುತ್ರನಾಗಿ ಜನಿಸಿದರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹರ್ತಿಕೋಟೆಯಲ್ಲಿ, ಪ್ರೌಢ ಶಿಕ್ಷಣವನ್ನು ಐಮಂಗಳದಲ್ಲಿ, ಪದವಿಪೂರ್ವ ಶಿಕ್ಷಣವನ್ನು ಚಿತ್ರದುರ್ಗದಲ್ಲಿ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಮೈಸೂರಿನಲ್ಲಿ ಪಡೆದರು.
ಕನ್ನಡ ವಿಷಯದಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದ ಇವರು ನಂತರದ ದಿನಮಾನಗಳಲ್ಲಿ ಕರ್ನಾಟಕದ ವಿವಿಧ ಭಾಗಗಳಾದ ಬೀದರ್, ಅಥಣಿ, ಮಾಯಕೊಂಡ, ಚಳ್ಳಕೆರೆ ಹಾಗೂ ಚಿತ್ರದುರ್ಗದಲ್ಲಿ 1980 ರಿಂದ 2020 ರವರೆಗೆ ಸುಮಾರು 30 ವರ್ಷಗಳ ಕಾಲ ಬೋಧಕರಾಗಿ ತಮ್ಮ ಸೇವೆಯನ್ನು ಸಲ್ಲಿಸಿರುತ್ತಾರೆ.
ಬಾಲ್ಯದ ದಿನಗಳಿಂದಲೂ ಗ್ರಾಮೀಣ ಬದುಕಿನೊಂದಿಗೆ ನಂಟನ್ನು ಹೊಂದಿದ್ದ ಇವರಿಗೆ ಜಾನಪದ ಕಲೆ ಹಾಗೂ ಸಾಹಿತ್ಯದೊಂದಿಗೆ ಬೆರೆತು ಹೋಗಿದ್ದರು. ಹಾಗೆಯೇ ಸಾಹಿತ್ಯದ ವಿದ್ಯಾರ್ಥಿಯಾದ ಇವರಿಗೆ ಕನ್ನಡ ಸಾಹಿತ್ಯ ಹಾಗೂ ಹಲವಾರು ಕನ್ನಡ ಸಾಹಿತಿಗಳಿಗೆ ಮಾರುಹೋಗಿದ್ದರು. ಆದರೆ ಸಾಹಿತ್ಯದ ಬರವಣಿಗೆಯ ಬಗ್ಗೆ ಇವರಿಗೆ ಒಂದಷ್ಟು ಭಯವನ್ನು ಕಟ್ಟಿಕೊಂಡ ಕಾರಣ ತಮ್ಮ ಬೋಧನಾ ಅವಧಿಯುದ್ದಕ್ಕೂ ಬರವಣಿಗೆಯಿಂದ ದೂರವೇ ಉಳಿದಿದ್ದರು.
ಶ್ರೀಯುತರು ಬರವಣಿಗೆಯಿಂದ ದೂರ ಉಳಿದಿದ್ದರೂ ಬೋಧನೆಯೊಂದಿಗೆ ಸಾಹಿತ್ಯ ಪ್ರೀತಿಯನ್ನು ಸದಾ ಕಾಪಾಡಿಕೊಂಡಿದ್ದರು. ಪಂಪ, ರನ್ನ, ಕುಮಾರವ್ಯಾಸರಂತಹ ಪ್ರಾಚೀನ ಕವಿಗಳು ಹಾಗೆಯೇ ಕುವೆಂಪು, ಬೇಂದ್ರೆ, ಶಿವರಾಮ ಕಾರಂತ್, ಸಿ.ಪಿ.ಕೃಷ್ಣಮೂರ್ತಿ, ಜಿ.ಎಚ್.ನಾಯಕರಂತಹ ಆಧುನಿಕ ಸಾಹಿತಿಗಳ ಬರಹಗಳು ಇವರ ಮೇಲೆ ಸಾಕಷ್ಟು ಪ್ರೇರಣೆ ಮತ್ತು ಪ್ರಭಾವವನ್ನು ಬೀರಿದ್ದವು.
ಇಂತಹ ಸಾಹಿತ್ಯ ಪರಂಪರೆಯಿಂದ ಸಾಹಿತ್ಯಾಭಿರುಚಿಯನ್ನು ಮೈಗೂಡಿಸಿಕೊಂಡಿರುವ ಜಿ.ಪರಮೇಶ್ವರಪ್ಪನವರು ತಮ್ಮ ವಿದ್ಯಾರ್ಥಿಗಳಿಗೂ ಸಾಹಿತ್ಯಾಸಕ್ತಿಯನ್ನು ಮೂಡಿರುವ ಕಾಯಕದಲ್ಲಿ ತಮ್ಮ ಬೋಧನಾ ವೃತ್ತಿಯನ್ನು ಮುನ್ನಡೆಸಿಕೊಂಡು ಬಂದವರು. ಹಾಗೆಯೇ ಹಳಗನ್ನಡ, ವ್ಯಾಕರಣ, ಛಂದಸ್ಸಿನಲ್ಲಿ ವಿಶೇಷವಾದ ಪರಿಣಿತಿಯನ್ನು ಹೊಂದಿದ್ದ ಇವರು, ತಮ್ಮ ವೃತ್ತಿ ಬದುಕಿನಲ್ಲಿ ಹೆಚ್ಚು ಬೋಧನೆ ಮಾಡಿ, ಇವುಗಳನ್ನು ಕರಗತ ಮಾಡಿಕೊಂಡಿದ್ದರು. ಹೀಗಾಗಿ ಕನ್ನಡ ಸಾಹಿತ್ಯದ ಛಂದೋ ಪ್ರಕಾರದ ತಾಳ, ಲಯವನ್ನು ಸ್ಪಷ್ಟವಾಗಿ ಅರಿತವರಾಗಿದ್ದರು. ಇದು ಮುಂದೆ ಶ್ರೀಯುತರ ಸಾಹಿತ್ಯ ಚಟುವಟಿಕೆಗೆ ವರವಾಗಿ ಪರಿಣಮಿಸಿತು.
ಶ್ರೀಯುತ ಜಿ.ಪರಮೇಶ್ವರಪ್ಪನವರು ತಮ್ಮ ವೃತ್ತಿ ಬದುಕಿನ ಅವಧಿಯಲ್ಲಿ ಸಾಹಿತ್ಯ ರಚನೆಗೆ ತೊಡಗಿದ್ದು ತೀರಾ ವಿರಳ. ಕೆಲವು ಸ್ನೇಹಿತರ ಒತ್ತಡ, ಸಭೆ ಸಮಾರಂಭಗಳಲ್ಲಿ ಉಪನ್ಯಾಸ ನೀಡುವುದಕ್ಕಾಗಿ ಮಾಡಿಕೊಂಡ ಟಿಪ್ಪಣಿಗಳು ಹಾಗೂ ವಿಶೇಷ ದಿನಗಳಿಗಾಗಿ ಪತ್ರಿಕೆಗಳಿಗೆ ಕೆಲವೊಂದು ಲೇಖನಗಳನ್ನು ಬರೆದಿರುವುದನ್ನು ಬಿಟ್ಟರೆ ಸಾಹಿತ್ಯದ ಯಾವುದೇ ಪ್ರಕಾರದಲ್ಲೂ ತಮ್ಮನ್ನು ಗುರುತಿಸಿಕೊಂಡವರಲ್ಲ. ಈ ಎಲ್ಲಾ ಲೇಖನಗಳನ್ನು ಸಂಗ್ರಹಿಸಿ ‘ಚದುರಿದ ಚಿಂತನೆಗಳು’ ಎಂಬ ಕೃತಿಯನ್ನು 2020ರಲ್ಲಿ ಹೊರತಂದಿದ್ದಾರೆ.
ಪ್ರಸ್ತುತ ಕೃತಿಯಲ್ಲಿ ಜಾನಪದ, ಹಳಗನ್ನಡ ಸಾಹಿತ್ಯ, ವಚನಸಾಹಿತ್ಯ ಹಾಗೂ ವೈಚಾರಿಕ ಚಿಂತನೆಗಳ ಮೇಲೆ ಬೆಳಕು ಚೆಲ್ಲಿರುವುದು ಕಂಡುಬರುತ್ತದೆ. ಈ ಕೃತಿಯು ಅವರ ಓದಿನ ವಿಸ್ತಾರ ಹಾಗೂ ಅವರಿಗಿದ್ದ ಸಾಹಿತ್ಯದ ತುಡಿತವನ್ನು ಅನಾವರಣಗೊಳಿಸುತ್ತದೆ. ಆದರೆ ಪರಮೇಶ್ವರಪ್ಪನವರಿಗೆ ಸವಾಲಾಗಿ ಪರಿಣಮಿಸಿದ್ದು ಮಾತ್ರ ಶಾಸ್ತçಬದ್ಧವಾದ ಸಾಹಿತ್ಯ ರಚನೆಗೆ ಮುಂದಾದ ಸಂದರ್ಭ. ತಮ್ಮ ಸುತ್ತಮುತ್ತಲಿನ ಸಾಂಸ್ಕೃತಿಕ ಪರಿಸರದಲ್ಲಿ ತಲಾತಲಾಂತರದಿಂದ ಬಾಯಿಂದ ಬಾಯಿಗೆ ಹರಿದು ಬಂದು, ಜನಜೀವನದಲ್ಲಿ ಬೆರೆತು ಹೋಗಿದ್ದ ಜಾನಪದೀಯ ಮಹಾಕಾವ್ಯವಾದ ‘ಪಾರ್ಥಲಿಂಗ ಚಾರಿತಾಮೃತ’ ಎಂಬ ಕೃತಿಯನ್ನು ಸಂಪಾದಿಸುವುದಕ್ಕೆ ತೊಡಗಿಸಿಕೊಂಡರು.
ಈ ಸಂದರ್ಭದಲ್ಲಿ ಗದ್ಯ ಪ್ರಕಾರದಲ್ಲಿಯೇ ಸಾಹಿತ್ಯ ರಚನೆಗೆ ಮುಂದಾದರು. ಆಗ ಅಲ್ಲಿನ ವಕ್ತೃ ಹಾಗೂ ಪಾರ್ಥಲಿಂಗ ಭಕ್ತರ ಅಭಿಲಾಷೆಯು ಇದನ್ನು ಭಾಮಿನಿ ಷಟ್ಟದಿಯಲ್ಲಿಯೇ ರಚಿಸಬೇಕು ಎಂಬುದಾಗಿತ್ತು. ಇದಕ್ಕೆ ಕಾರಣ ಗದ್ಯದಲ್ಲಿ ಪಾರ್ಥಲಿಂಗನ ಕಾವ್ಯವನ್ನು ಬರೆದರೆ ಯಾರೋ ಓದು ಬರಹ ಕಲಿತವರು ಓದಿ ಸುಮ್ಮನಾಗುತ್ತಾರೆ. ಆದರೆ ರಾಗ, ತಾಳ, ಲಯಬದ್ಧವಾದ ಭಾಮಿನಿ ಛಂದೋ ಪ್ರಕಾರದಲ್ಲಿ ರಚಿಸಿದರೆ ಯಾರೋ ಒಬ್ಬ ಹಾಡಿದರೆ ಅಕ್ಷರ ಬಲ್ಲವರು ಹಾಗೂ ಅಕ್ಷರ ವಂಚಿತರೆಲ್ಲ ಆಸಕ್ತಿಯಿಂದ ಕುಳಿತು ಕೇಳಿ ಆಸ್ವಾದಿಸುತ್ತಾರೆ ಎಂಬುದು ಅವರ ನಿಲುವಾಗಿತ್ತು.
ಆಗ ಕುಮಾರವ್ಯಾಸ ಮಾಡಿದ ಅಂತಹ ಸಾಧನೆಯು ನನ್ನಿಂದ ಸಾಧ್ಯವೇ ಎಂಬ ಅನುಮಾನ ಲೇಖಕರಲ್ಲಿ ಮೂಡಿತು. ಆಗ ಹಳಗನ್ನಡದ ಜನಪ್ರಿಯ ಸಾಹಿತ್ಯ ಪ್ರಕಾರಗಳಲ್ಲಿ ಒಂದಾಗಿರುವ ಷಟ್ಪದಿಯ ಭಾಮಿನಿ ಛಂದೋ ಪ್ರಕಾರದಲ್ಲಿಯೇ ಈ ಕಾವ್ಯವನ್ನು ರಚಿಸಬೇಕು ಎಂದು ಮುಂದಾದ ಸಂದರ್ಭದಲ್ಲಿ ಇದೊಂದು ಸವಾಲಿನ ಕೆಲಸವಾಗಿ ಪರಿಣಮಿಸಿತು. ಸುಮಾರು ಆರು ತಿಂಗಳ ಕಾಲ ನಿರಂತರವಾದ ಪ್ರಯತ್ನ ಮಾಡುತ್ತ ಬರೆಯುವ, ಹರಿಯುವ ಕಾಯಕದಲ್ಲಿ ನಿರತರಾದರು.
ಆಗ ಇದು ಭಾಮಿನಿ ಷಟ್ಪದಿಯ ಪಾಠ ಮತ್ತು ಪ್ರವಚನದಷ್ಟು ಸುಲಭವಾಗಿ ಛಂದೋ ಪ್ರಕಾರದ ಸಾಹಿತ್ಯ ರಚನೆ ಮಾಡಲಾಗದು ಎಂಬ ಅನುಭವವಾಯಿತು. ಈ ಯೋಜನೆಯಿಂದ ದೂರ ಉಳಿದು, ಇದು ನನ್ನಿಂದ ಸಾಧ್ಯವಾಗದ ಕೆಲಸವೆಂದು ಕೈಚೆಲ್ಲಿ ಕುಳಿತರು. ಇಂತಹ ಸಂದರ್ಭದಲ್ಲಿ ಪಾಥಲಿಂಗ ದೈವದ ಭಕ್ತರು ಹಾಗೂ ಕಾವ್ಯವನ್ನು ಹಾಡುವ ವಕ್ತೃಗಳು ಇದು ನಿಮ್ಮಿಂದ ಮಾತ್ರ ಸಾಧ್ಯ. ಪಾರ್ಥಲಿಂದ ದೈವವು ಕೂಡ ಅದು ನಿಮ್ಮಿಂದ ಮಾತ್ರವೇ ಸಾಧ್ಯವಾಗುವ ಕೆಲಸವೆಂದು ಅಪ್ಪಣೆ ನೀಡಿದೆ ಎಂದು ಒತ್ತಡ ಹಾಕಿದಾಗ, ಅವರ ದೈವಕೇಂದ್ರಿತವಾದ ನಂಬಿಕೆಗೆ ಕಟ್ಟುಬಿದ್ದು ಮತ್ತೇ ಛಂದೋಬದ್ಧ ಸಾಹಿತ್ಯ ಪ್ರಯೋಗದಲ್ಲಿ ತಮ್ಮನ್ನು ದುಡಿಮೆಗಚ್ಚಿದರು.
ಪಾರ್ಥಲಿಂಗನ ಭಕ್ತಾಧಿಗಳ ಒತ್ತಡ ಹಾಗೂ ಅವರ ಪ್ರೀತಿಯ ಹಠಕ್ಕೆ ಮಣಿದು, ಕವಿ ಕುಮಾರವ್ಯಾಸ ಹರಿ ಸ್ಮರಣೆಯಿಂದ ಕಾವ್ಯ ರಚನೆಗೆ ಮುಂದಾದಂತೆ ಶ್ರೀಯುತ ಜಿ.ಪರಮೇಶ್ವರಪ್ಪನವರು ಪಾರ್ಥಲಿಂಗನ ಸ್ಮರಣೆಯೊಂದಿಗೆ ಕಾವ್ಯಾಭ್ಯಾಸದ ಗರಡಿಯಲ್ಲಿ ಗಟ್ಟಿಗರಾಗಿ ನಿಂತರು. ಹೀಗೆ ಸಂಪ್ರದಾಯ ಬದ್ಧವಾಗಿ ಮೂಡಿ ಬಂದ ಛಂದೋ ಪ್ರಕಾರದಲ್ಲಿ ಸಾಹಿತ್ಯ ರಚನೆಗೆ ಮುಂದಾದ ಶ್ರೀಯುತರು ಪ್ರಸ್ತುತ ಕಥೆ ರಚನೆಯ ಕುರಿತಾದ ತಮ್ಮ ನಿಲುವನ್ನು ಕುಮಾರವ್ಯಾಸನಂತೆಯೇ ಹಂಚಿಕೊಂಡಿದ್ದಾರೆ;
ಬಾಯಿ ಮಾತಲಿ ಬಸವ ಹೇಳಿದ ತಾಯಿ ಭೂಮಿಯ ಜನರ ಕಿವಿಯಲಿ ಮಾಯೆಯಿಲ್ಲದ ನಿಗಮ ಗೋಚರನಾ ಪುರಾಣವನು ದಾಯಕನೊಲಿದು ಬರೆಸಿದ ಜನಪದೀಯರಾಡುವ ಪಾರ್ಥಕಥೆಯನು ಶಾಯಿಯಿಂದಲಿ ಕೃತಿ ರಚಿಸಿದೆನು ವಿಮಲ ಮನಸಿನಲಿ
ಇಲ್ಲಿ ಲೇಖಕರು ಕುಮಾರವ್ಯಾಸನಂತೆ ತನ್ನನ್ನು ಕೇವಲ ಲಿಪಿಕಾರ ಎಂಬುದಾಗಿ ಬಿಂಬಿಸಿಕೊಂಡಿದ್ದಾರೆ. ಹಾಗೆಯೇ ಇಲ್ಲಿ ತಾನೊಬ್ಬ ಕವಿಯೆಂಬುದನ್ನು ಕೂಡ ಕುಮಾರವ್ಯಾಸನಂತೆ ಛಂದೋ ನೆಲೆಯಲ್ಲಿ ಅಭಿವ್ಯಕ್ತಿಸಿರುವುದನ್ನು ಕಾಣಬಹುದಾಗಿದೆ.
ವೇದ ಶಾಸ್ತ್ರಾಗಮ ಪುರಾಣಗಳೋದಿ ತಲೆಗಳು ಚಿಟ್ಟು ಹಿಡಿದಿವೆ ವಾದ ಗೈವರಿಗೋದು ಬರದವರಿಗೆಡೆಯಿಲ್ಲಲ್ಲಿ ಓದು ಬರದವರಿಲ್ಲಿ ತಿಳಿವುದು ವಾದ ಮಾಡುವರಿಲ್ಲಿ ಬರಬಹು ದೋದಿ ಕುಣಿಸುವನಿಲ್ಲಿ ಕವಿ ಪರಮೇಶ್ವರೆಂಬುವನು
ಹೀಗೆ ತನ್ನನ್ನು ಪರಮೇಶ್ವರ ಕವಿ ಎಂಬುದಾಗಿ ಗುರುತಿಸಿಕೊಂಡು ಪಾರ್ಥಲಿಂಗ ಸ್ಮರಣೆಯ ಮೂಲಕವೇ ಕಾವ್ಯ ರಚನೆಗೆ ಗಟ್ಟಿಯಾಗಿ ನಿಂತರು. ಇಂತಹ ಗಟ್ಟಿತನದ ಪ್ರತೀಕವಾಗಿ ಆರಂಭಿಕ ದಿನಗಳಲ್ಲಿ ದಿನಕ್ಕೊಂದು ಕಾವ್ಯವನ್ನು ಛಂದೋಬದ್ಧವಾಗಿ ರೂಪಿಸುವಲ್ಲಿ ಯಶಸ್ವಿಯಾದರು.
ಹೀಗೆ ಅಳುಕಿನಿಂದಲೇ ಆರಂಭವಾದ ಛಂದೋಬದ್ಧ ಸಾಹಿತ್ಯ ಕೃಷಿಯನ್ನು ಕರಗತ ಮಾಡಿಕೊಂಡು ಸುಮಾರು 497 ಪದ್ಯಗಳಿಂದ ಕೂಡಿದ ಒಟ್ಟು ಏಳು ಅಧ್ಯಾಯಗಳ ‘ಶ್ರೀ ಪಾರ್ಥಲಿಂಗ ಚರಿತಾಮೃತ’ ಎಂಬ ಭಾಮಿನಿ ಷಟ್ಪದಿ ಕಾವ್ಯ ಕೃತಿಯನ್ನು ಛಂದೋ ವಿನ್ಯಾಸಕ್ಕೆ ಚ್ಯುತಿಯಾಗದಂತೆ ಬರೆದು ಮುಗಿಸಿದ ಕೀರ್ತಿ ಕವಿ ಜಿ.ಪರಮೇಶ್ವರಪ್ಪ ಅವರಿಗೆ ಸಲ್ಲುತ್ತದೆ. ‘ಕನ್ನಡದಲ್ಲಿ ಮಹಾಕಾವ್ಯಗಳ ಕಾಲ ಮುಗಿಯಿತು.
ಛಂದೋಬದ್ಧವಾದ ರಚನೆಗಳ ಕಾಲ ಮುಗಿಯಿತು ಎಂಬ ಮಾತುಗಳು ಹುಸಿಯಾಗಿವೆ’ ಎಂಬ ಡಾ.ಬಿ.ವಿ.ವಸಂತಕುಮಾರ್ ಅವರ ಮಾತುಗಳಿಗೆ ಜಿ.ಪರಮೇಶ್ವರಪ್ಪ ಅವರು ರಚಿಸಿರುವ ಛಂದೋಬದ್ಧ ‘ಪಾರ್ಥಲಿಂಗ ಚರಿತಾಮೃತ’ ಸಾಕ್ಷಿಯಾಗಿ ನಿಲ್ಲುತ್ತದೆ.
ಪ್ರಸ್ತುತ ಕೃತಿಯು ಶ್ರೀಯುತ ಜಿ.ಪರಮೇಶ್ವರಪ್ಪನವರಿಗೆ ಸಾಹಿತಿ ಎಂಬ ಬಿರುದಾವಳಿಯನ್ನು ಮಾತ್ರವಲ್ಲದೆ, ಅವರನ್ನು ಪಾರ್ಥಲಿಂಗ ಚರಿತಾಮೃತದ ಕವಿಯೆಂದು ಗುರುತಿಸುವಷ್ಟು ಹೆಗ್ಗಳಿಕೆಯನ್ನು ತಂದುಕೊಟ್ಟಿದೆ.
ಹಾಗೆಯೇ ಈ ಕೃತಿಯು ಸಾಕಷ್ಟು ಜನಮಾನಸದಲ್ಲಿ ಬೆರೆತು ಹೋಗಿದ್ದು, ಈಗಾಗಲೇ ಸುಮಾರು ಐವತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ಪಠನ ಮಾಡಲಾಗಿದೆ. ಇದು ಕವಿಗಳ ಶ್ರಮಕ್ಕೆ ಸಿಕ್ಕ ನಿಜವಾದ ಪ್ರತಿಫಲ. ಕವಿಯಾದವನು ಇದರಾಚೆ ಏನನ್ನು ನಿರೀಕ್ಷಿಸಲಾರ.
ಅಳುಕಿನಿಂದಲೇ ಸಾಹಿತ್ಯ ಕ್ಷೇತ್ರಕ್ಕೆ ಕಾಲಿಟ್ಟ ಜಿ.ಪರಮೇಶ್ವರಪ್ಪನವರು ಛಂದೋಬದ್ಧ ಕಾವ್ಯ ರಚನೆಯಲ್ಲಿ ಮೊದಲ ಯಶಸ್ಸು ಗಳಿಸಿದ ತರುವಾಯ ‘ವದ್ದಿಕೆರೆ ಸಿದ್ಧೇಶ್ವರ ಚರಿತೆ’ಯನ್ನು ಇದೇ ಛಂದೋ ವಿನ್ಯಾಸದಲ್ಲಿ ರಚನೆಗೆ ಮುಂದಾಗಿದ್ದು, ಇದನ್ನು ಒಂದೇ ವರ್ಷದಲ್ಲಿ ಮುಗಿಸುವಷ್ಟು ಛಂದೋಬದ್ಧ ಸಾಹಿತ್ಯ ಕ್ಷೇತ್ರದಲ್ಲಿ ಹಿಡಿತವನ್ನು ಸಾಧಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.
ಪ್ರಸ್ತುತ ಕೃತಿಯು ಕೂಡ ದೈವ ಕೇಂದ್ರಿತವಾದ ಪುರಾಣ ನೆಲೆಯಿಂದ ಕೂಡಿದ್ದು, ಜನಪದರ ಬದುಕಿನೊಳಗೆ ಬೆರೆತು ಹೋದ ಮೌಖಿಕ ಕಥನವೊಂದನ್ನು ಛಂದೋಬದ್ಧ ಹಾಡುಗಬ್ಬವಾಗಿ ರೂಪಿಸುವ ಮಹತ್ತರ ಕಾರ್ಯವೊಂದನ್ನು ಇವರು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಶ್ರೀಯುತ ಪರಮೇಶ್ವರಪ್ಪನವರ ಎರಡನೇ ಕೃತಿಯಾಗಿರುವ ‘ವದ್ದಿಕೆರೆ ಸಿದ್ಧೇಶ್ವರ ಚರಿತೆ’ಯು ಹರಿಹರನ ‘ಶಿವಶರಣರ ರಗಳೆ’ಯ ಕಥನ ಮಾದರಿಯಿಂದ ಪ್ರಭಾವಿತಗೊಂಡಂತಿದೆ.
ಇದನ್ನೂ ಓದಿ |ವಿಮರ್ಶೆ | ಸ್ವಪ್ನದಲ್ಲಿ ಸೊರಗಿದ ಪ್ರೀತಿ
ಈ ಕೃತಿಯು ಒಟ್ಟು 311ಷಟ್ಪದಿ ಪದ್ಯಗಳಿಂದ ಕೂಡಿದೆ. ಇಲ್ಲಿಯೂ ಕೂಡ ಕವಿಗಳು ಪ್ರಾಚೀನ ಕಾವ್ಯ ಪರಂಪರೆಯ ಮುಂದುವರಿಕೆಯ ಭಾಗವೆಂಬಂತೆ ದೈವ ಸ್ತುತಿಯೊಂದಿಗೆ ಕಾವ್ಯಾರಂಭಕ್ಕೆ ಮುಂದಾಗಿರುವುದನ್ನು ಕಾಣಬಹುದಾಗಿದೆ.
ಶುದ್ಧಮನದಲಿ ಖುದ್ದು ಹೇಳುವೆ ಸಿದ್ಧ ಪುರುಷನ ಸಿದ್ಧ ಕಥೆಯನು ಬುದ್ಧ ಜನಗಳು ಮೆಚ್ಚುವಂದದಿ ಹಾಡುಗಬ್ಬದಲಿ ಬಿದ್ದು ಗಂಗೆಯಲೆದ್ದು ಬಂದಂತೆದ್ದು ಹೋಗುವವಿದ್ದ ರುಜಿನಗ ಳೆದ್ದು ಬರುವಾ ಜನ್ಮ ಚಕ್ರವನೊದ್ದು ಹೋಗುವುದು
ಹೀಗೆ ಪ್ರಾಚೀನ ಕಾವ್ಯ ಪರಂಪರೆಯ ತಂತ್ರವನ್ನು ಅನುಸರಿಸುತ್ತಲೇ ಜಾನಪದೀಯ ಕಥನವನ್ನು ಶಿಷ್ಟ ಸಾಹಿತ್ಯದ ಚೌಕಟ್ಟಿಗೆ ಒಳಪಡಿಸುವ ಮೂಲಕ ಛಂದೋಬದ್ಧಗೊಳಿಸುವಲ್ಲಿ ಕವಿ ಜಿ.ಪರಮೇಶ್ವರಪ್ಪನವರ ಪಾತ್ರ ಮಹತ್ವದ್ದಾಗಿದೆ. ಜನಪದರ ಸಾಂಸ್ಕೃತಿಕ ಬದುಕಿನಲ್ಲಿ ಬೆರೆತುಕೊಂಡಿರುವ ಮೌಖಿಕ ಕಥನವನ್ನು ಶಿಷ್ಟ ಪರಂಪರೆಯೊಂದಿಗೆ ಅನುಸಂಧಾನಗೊಳಿಸುವ ಮೂಲಕ ಹಾಡುಗಬ್ಬಗೊಳಿಸಿದ ಕವಿಯ ತಂತ್ರಗಾರಿಕೆಯ ಹಿಂದೆ ನೆಲಮೂಲದ ತುಡಿತ-ಮಿಡಿತವಿದೆ.
ಜನಪದ ಮತ್ತು ಶಿಷ್ಟ ಪರಂಪರೆಯ ನಡುವಿನ ಬೇಲಿ ಹಾಗೂ ಅಂತರವನ್ನು ಕಡಿದು ಹಾಕಿ ಇವೆರಡ ನಡುವೆ ಸಂಕರವನ್ನು ಸಾಧಿಸಿದ್ದಾರೆ. ಈ ಕಾರಣದಿಂದಾಗಿ ಇವರು ನಮ್ಮ ಮುಂದಿನ ಅಪರೂಪದ ಸಾಹಿತಿಗಳಲ್ಲಿ ಒಬ್ಬರಾಗಿ ಕಂಡುಬರುತ್ತಾರೆ.
ಶ್ರೀಯುತರ ಈ ಛಂದೋಬದ್ಧ ಕಾವ್ಯದ ದುಡಿಮೆಯ ಹಿಂದೆ ಒಂದು ಪ್ರಾಮಾಣಿಕ ಪ್ರಯತ್ನವಿದೆ. ಈ ಪ್ರಯತ್ನ ಕಾಯಕ ಪ್ರಧಾನತೆಯಿಂದ ಕೂಡಿದೆ. ಇಂತಹ ಕಾಯಕ ಪ್ರಧಾನ ಕೃಷಿಯು ಇವರ ಸತತ ಪ್ರಯತ್ನವೆಂಬ ತಪಸ್ಸಿನ ಪ್ರತೀಕವಾಗಿ ಕಂಡುಬರುತ್ತದೆ.
ಇಂತಹ ತಪದ ಪ್ರತೀಕ ಹಾಗೂ ಬಾಲ್ಯದ ದಿನಗಳಿಂದ ಮೈಮನಗಳಲ್ಲಿ ಬೆರತು ಹೋದ ಜನಪದ ಸೊಗಡು, ಅಧ್ಯಯನದೊಂದಿಗೆ ಆಸಕ್ತಿಯಾಗಿ ವಿಷಯವಾಗಿ ಪ್ರಭಾವ ಬೀರಿದ ಸಾಹಿತ್ಯಾಭಿರುಚಿ, ಸುದೀರ್ಘವಾದ ಬೋಧನಾನುಭವ ಹಾಗೂ ನಿವೃತ್ತಿಯ ಸಮಯದಲ್ಲಿನ ಸಾಹಿತ್ಯಾಸಕ್ತ ಸಮಾನ ಮನಸ್ಕರ ಪ್ರೇರಣೆ ಮತ್ತು ಪ್ರೋತ್ಸಾಹದ ಫಲವಾಗಿ ಕನ್ನಡ ಸಾರಸ್ವತ ಲೋಕಕ್ಕೆ ‘ಪಾರ್ಥಲಿಂಗ ಚರಿತಾಮೃತ’, ವದ್ದಿಕೆರೆ ಸಿದ್ಧೇಶ್ವರ ಚರಿತೆ’, ‘ವೀರ ಕರಿಯಣ್ಣ’, ‘ಚಿತ್ತಯ್ಯ-ಕಾಟಯ್ಯ’ ಎಂಬ ಛಂದೋ ವಿನ್ಯಾಸದ ಮೌಲ್ಯಯುತ ಷಟ್ಪದಿ ಕೃತಿಗಳನ್ನು ಹಾಗೂ ‘ಚದುರಿದ ಚಿಂತನೆಗಳು’ ಎಂಬ ವೈಚಾರಿಕ ಕೃತಿಯನ್ನು ನೀಡಿದ ಕವಿ, ಸಾಹಿತಿ, ಚಿಂತಕರಾಗಿರುವ ಶ್ರೀಯುತ ಜಿ.ಪರಮೇಶ್ವರಪ್ಪ ಅವರಿಂದ ಕನ್ನಡ ಸಾಹಿತ್ಯಲೋಕ ಮತ್ತಷ್ಟು ಶ್ರೀಮಂತಗೊಳ್ಳಲಿ ಎಂಬುದು ನಮ್ಮ ಹಾರೈಕೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ3 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ1 day agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್



