Connect with us

ಅಂತರಂಗ

ಒಡಲುಗೊಂಡವ ಹುಸಿಯ: ಜಿ. ರಾಜಶೇಖರ

Published

on

  • ಎಚ್ ಪಟ್ಟಾಭಿರಾಮ ಸೋಮಯಾಜಿ, ಮಂಗಳೂರು

Beneath those rugged elms, that yew tree’s shade,
Where heaves the turf in many a moldering heap,
Each in his narrow cell forever laid,
The rude forefathers of the hamlet sleep.

Oft did the harvest to their sickle yield,
Their furrow oft the stubborn glebe has broke;
How jocund did they drive their team afield!
How bowed the woods beneath their sturdy stroke!

Let not Ambition mock their useful toil,
Their homely joys, and destiny obscure;
Nor Grandeur hear with a disdainful smile
The short and simple annals of the poor.

The boast of heraldry, the pomp of power,
And all that beauty, all that wealth e’er gave,
Awaits alike the inevitable hour.
The paths of glory lead but to the grave….

Full many a gem of purest ray serene,
The dark unfathomed caves of ocean bear:
Full many a flower is born to blush unseen,
And waste its sweetness on the desert air.

Yet even these bones from insult to protect
Some frail memorial erected nigh,
With uncouth rhymes and shapeless sculpture decked,
Implores the passing tribute of a sigh.

-(Thomas Gray: “Elegy Written in a Country Churchyard”; 1754/1751)

” ಬೋಳಿಮಗನೆ, ಬಹುವಚನ ಅಂತೆ ಬಹುವಚನ. ಏಕವಚನ ಮಾಡ್ತೇವೆ ನೋಡ್ತಾ ಇರು, ಸೂಳೆಮಗನೆ. ಇದು ಮಡಿಕೇರಿ, ತಿಳ್ಕೊ” ಎಂದು ವಿಕಾರವಾಗಿ ಕಿರುಚುತ್ತಾ ಸುಮಾರು ಮೂವತ್ತರಿಂದ ನಲವತ್ತರಷ್ಟು ಜನ ಸ್ಟೇಜಿಗೆ ನುಗ್ಗಿ ಕೈಯಲ್ಲಿದ್ದ ಟಿಪ್ಪಣಿ ಕಾಗದಗಳ ಕಟ್ಟನ್ನು ಬಲಾತ್ಕಾರದಿಂದ ಕಸಿದು ಹರಿದು ಬಿಸಾಡಿ, ಮೈಕನ್ನು ಕಿತ್ತು, ಕಾಲರನ್ನು ಹಿಡಿದು ಎಳೆದಾಡಿ ನನ್ನ ಮೇಲೆ ಏಕಾಏಕಿ ನುಗ್ಗಿದರು. ವಿವರವಾದ ಸುದೀರ್ಘ ಟಿಪ್ಪಣಿಗಳ ಆ ಕಾಗದದ ಕಟ್ಟಿನಲ್ಲಿ ಆ ಕಾಲದ ನನ್ನ ಯೋಚನೆಗಳನ್ನು ಭಟ್ಟಿಯಿಳಿಸುವ ಪ್ರಯತ್ನವಿತ್ತು; ಮಹಾತ್ಮಾ ಗಾಂಧಿ, ಮಾರ್ಟಿನ್ ಹೈಡೆಗರ್, ಸಾದತ್ ಹಸನ್ ಮಾಂಟೋ, ರಾಮಕೃಷ್ಣ ಪರಮಹಂಸ ಮುಂತಾದವರಿಂದ ನಾನು ತಯಾರಿಸಿಕೊಂಡ ಟಿಪ್ಪಣಿಗಳೂ ತರ್ಜುಮೆಗಳೂ ಅದರಲ್ಲಿ ಸೇರಿದ್ದವು; ಅದನ್ನು ಕಳೆದುಕೊಂಡ ನೋವು ಈಗಲೂ ನನ್ನನ್ನು ಮಾಯದ ಹಳೆಯ ಗಾಯದಂತೆ ಬಾಧಿಸುವುದು.

ಇದು ಈಗ ಇಪ್ಪತ್ತು ವರ್ಷಗಳ ಹಿಂದಿನ ಮಾತು. ಸ್ಥಳ, ಮಡಿಕೇರಿಯ ಕೋಟೆಯ (ಕೋಟೆ ಎಂದರೆ ನಿಜಕ್ಕೂ ಕೋಟೆಯೇ) ಆವರಣದೊಳಗಿರುವ ಜಿಲ್ಲಾಧಿಕಾರಿ ಕಛೇರಿಯ ಸೆನೆಟ್ ಸಭಾಂಗಣ. ಅಂದು ಭಾನುವಾರ. “ಬಹುವಚನ ಕೊಡಗು” ಎಂಬ ಹೆಸರಿನ ನಮ್ಮ ಪುಟ್ಟ ಬಳಗದಿಂದ ಆಯೋಜಿತವಾಗಿದ್ದ ಮಹತ್ವಾಕಾಂಕ್ಷೆಯ ಇಡೀ ಒಂದು ದಿನದ ನಿಬಿಡ ವಿಚಾರ ಸಂಕಿರಣ. “ಕೋಮುವಾದದ ಕರಾಳ ಮುಖಗಳು” ಎಂಬ ಶೀರ್ಷಿಕೆಯಲ್ಲಿ ನಡೆಯಬೇಕಾಗಿದ್ದ ಈ ಸಂಕಿರಣದ ಶೀರ್ಷಿಕೆಯ ಕುರಿತು ಆರಂಭದಲ್ಲೇ, ನಮ್ಮ ಪುಟ್ಟ ಬಳಗದ ಒಳಗೆಯೇ, ಒಬ್ಬರಿಂದ ಎದ್ದ ಅಪಸ್ವರದ ಕಾರಣದಿಂದಾಗಿ “ಕೋಮುವಾದದ ಹಲವು ಅವತಾರಗಳು” ಎಂದು ಮರುನಾಮಕರಣಗೊಂಡಿತ್ತು; ಆ ಕುರಿತು ನನಗೆ ಅಷ್ಟೇನೂ ಸಮಾಧಾನವಿರಲಿಲ್ಲ ಎಂಬುದು ಬೇರೆ ಮಾತು. ಜಿ ರಾಜಶೇಖರ, ರಹಮತ್ ತರೀಕೆರೆ ಮುಂತಾಗಿ ರಾಜ್ಯದ ಮುಂಚೂಣಿ ಚಿಂತಕ-ಹೋರಾಟಗಾರರು ನಮ್ಮ ಸಂಪನ್ಮೂಲ ವ್ಯಕ್ತಿಗಳು. ಹಾಗಾಗಿ, ಸಹಜವಾಗಿಯೇ ಈ ವಿಚಾರ ಸಂಕಿರಣಕ್ಕೆ ಬಹಳ ದೊಡ್ಡ ಸಂಖ್ಯೆಯ ಜನರು ಹಾಜರಾಗುವವರಿದ್ದರು. ಸಂಪನ್ಮೂಲ ವ್ಯಕ್ತಿಗಳು ಬಂದು ಅದಾಗಲೇ ಸಭಾಂಗಣದ ಮುಂದಿನ ಸಾಲಿನಲ್ಲಿ ಕುಳಿತಿದ್ದರು. ಮಡಿಕೇರಿ ಮತ್ತು ಸುತ್ತಮುತ್ತಲಿನ ಪತ್ರಕರ್ತ ಬಳಗ ಕೂಡಾ ಅದಾಗಲೇ ಹಾಜರಿತ್ತು.

ಸಭಿಕರು ಕೇವಲ ಬೆರಳೆಣಿಕೆಯಷ್ಟಿದ್ದರು; ಅವರಿನ್ನೂ ಬರುವುದರಲ್ಲಿದ್ದರು (ದೊಡ್ಡ ಸಂಖ್ಯೆಯಲ್ಲಿ ಆ ಮೇಲೆ ಬಂದರು ಕೂಡಾ). ಆದರೆ ಸಂಕಿರಣದ ಸುದೀರ್ಘ ಚರ್ಚೆಯು ಒತ್ತಡಕ್ಕೊಳಗಾಗಬಾರದು, ಹಾಗಾಗಿ ಸಮಯ ವ್ಯರ್ಥಮಾಡಬಾರದು ಎಂದು, “ಬಹುವಚನ ಕೊಡಗು” ಕುರಿತು, ದಿನದ ಕಾರ್ಯಕ್ರಮದ ಸ್ವರೂಪದ ಕುರಿತು, ಹಾಗೂ ಮುಖ್ಯವಾಗಿ ವಿಚಾರ ಸಂಕಿರಣದ ಆಶಯದ ಕುರಿತು– ಹತ್ತು ಗಂಟೆಗೆ ಸರಿಯಾಗಿ ನಾನು ವೇದಿಕೆಯಿಂದ ಮಾತನಾಡಲು ಪ್ರಾರಂಭ ಮಾಡಿದೆ. ಆಗ ಇದ್ದಕಿದ್ದಂತೆ ಸಾಲು ಸಾಲಾಗಿ ಆ ಮೂವತ್ತು ನಲವತ್ತರಷ್ಟು ಧಾಂಡಿಗರು ಸಭಾಂಗಣದೊಳಕ್ಕೆ ಲಗುಬಗೆಯಿಂದ ಬಂದರು. ಅವರ ವರ್ತನೆ ಹಾವಭಾವಗಳಾಗಲೀ ವೇಷಭೂಷಣಗಳಾಗಲೀ ಉತ್ತೇಜನಕಾರಿಯಾಗಿ ಕಂಡುಬರದಿದ್ದರೂ ಬಂದವರು ಕುಳಿತುಕೊಳ್ಳಲಿ ಎಂದು ಮಾತುಗಳನ್ನು ಅರ್ಧಕ್ಕೇ ನಿಲ್ಲಿಸಿ ನಾನು ಕಾದೆ. ಅವರು ಕೆಂಡದ ಮೇಲೆ ಕೂತವರಂತೆ ಕುರ್ಚಿಗಳಲ್ಲಿ ಕೂತರು. “ಬಹುವಚನ ಕೊಡಗು…” ಎಂದು ನಾನು ಮಾತುಗಳನ್ನು ಪುನರಾರಂಭಿಸುತ್ತಿದ್ದಂತೆ, ಅಷ್ಟೂ ಜನ ಏಕಾಏಕಿಯಾಗಿ ರಭಸದಿಂದ ನನ್ನ ಮೇಲೆ ನುಗ್ಗಿ ಬಂದರು.

ಆ ಕಾಲಕ್ಕೆ ಆ ರೀತಿ ಸಭೆಗಳಿಗೆ ಅನಾಗರಿಕವಾಗಿ ನುಗ್ಗಿ ನಿರ್ಲಜ್ಜವಾಗಿ ದಾಳಿ ಮಾಡುವುದು ಈಗಿನಷ್ಟು ವ್ಯಾಪಕವಾಗಲೀ, ಸಹಜವಾಗಲೀ, ಸುಲಭವಾಗಲೀ ಆಗಿರಲಿಲ್ಲ. ನಮ್ಮಂತೆ ಆ ಪುಂಡರಿಗೂ ಅದು ಹೊಸತೇ ಅನುಭವ. ನಮ್ಮ ಬಹುವಚನದ ಪುಟ್ಟ ಬಳಗದವರಿಗಂತೂ ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ಈ ಅನಾಹುತ ಶುರುವಾಗಿತ್ತು. ಇದ್ದಬದ್ದ ವಿವೇಕವನ್ನು ಒಗ್ಗೂಡಿಸಿಕೊಂಡು, ಸಂಪನ್ಮೂಲ ವ್ಯಕ್ತಿಗಳ ಸುರಕ್ಷತೆಯೇ ತಮ್ಮ ತುರ್ತು ಆದ್ಯ ಕರ್ತವ್ಯವೆಂದು ಬಗೆದು ಸಂಪನ್ಮೂಲ ವ್ಯಕ್ತಿಗಳನ್ನು ಕ್ಷಿಪ್ರವಾಗಿ ಕರೆದುಕೊಂಡು ಅವರು ಕೋಟೆಯ ಆಚೆಗೆ ಹೊರಟುಹೋದರು. ಪತ್ರಕರ್ತರಿಗೆ ಈ ದಾಂಧಲೆಕೋರರ ಗುರುತು ಹತ್ತಿತು; ಸಂಭಾವ್ಯ ಘಟನಾವಳಿಗಳನ್ನು ಅವರು ಕ್ಷಣಮಾತ್ರದಲ್ಲಿ ಊಹಿಸಿ, ಅದನ್ನು ವರದಿ ಮಾಡಲೆಂದು ಅವರೂ ಎದ್ದು ಹೊರಟು ಹೋದರು. ಆಗಲೇ ಹೇಳಿದಂತೆ, ಸಭಿಕರು ಇನ್ನೂ ಅಷ್ಟಾಗಿ ಬಂದಿರಲಿಲ್ಲ, ಬಂದಿದ್ದವರೂ ಕಂಗಾಲಾಗಿ ದಿಕ್ಕಾಪಾಲಾಗಿ ಚದುರಿ ಹೋದರು; ಕೋಟೆಯ ಹೊರಬಾಗಿಲ ಬಳಿ ನಿಂತುಕೊಂಡು ನಮ್ಮ ಬಳಗದವರೊಬ್ಬರು ಸಂಕಿರಣಕ್ಕಾಗಿ ಒಳಗೆ ಬರುತ್ತಿದ್ದ ಜನರನ್ನು ತಡೆದು, “ಒಳಗೆ ದಾಂಧಲೆ ನಡೆಯುತ್ತಿದೆ, ಹೋಗಬೇಡಿ, ಸುರಕ್ಷಿತವಲ್ಲ” ಎಂದು ಹಿಂದೆ ಕಳುಹಿಸುತ್ತಿದ್ದರು. ಸರಿ ಸುಮಾರು ಮೂವತ್ತರಿಂದ ನಲವತ್ತು ನಿಮಿಷ ಒಳಾಂಗಣ-ಸಭಾಂಗಣ ರಣಾಂಗಣವಾಗಿ ಮಾರ್ಪಟ್ಟಿತ್ತು. ನಾನು ಒಬ್ಬಂಟಿ, ಆದರೆ ವಿಚಲಿತನಾಗಿರಲಿಲ್ಲ.

ಮಡಿಕೇರಿಯಲ್ಲಿ ಆಗ ‘ಪ್ರಜಾವಾಣಿ’ ಪತ್ರಿಕೆಯ ಮುಖ್ಯ ವರದಿಗಾರರಾಗಿದ್ದ, ಆರಡಿಗಿಂತ ಎತ್ತರದ ಆಜಾನುಬಾಹು ರಾಜೇಂದ್ರಪ್ರಸಾದ್ ರವರು, ಯಾರೂ ನನ್ನ ಮೈ ಮುಟ್ಟದಂತೆ ಧೀರೋದಾತ್ತವಾಗಿ ನನ್ನ ರಕ್ಷಣೆಗೆ ನಿಂತರು; ಅವರ ಪತ್ರಿಕಾ ವೃತ್ತಿ ವರ್ಚಸ್ವಿಯಾದುದಾಗಿತ್ತು; ಅಲ್ಲದೇ ದಿನಂಪ್ರತಿ ಎದುರು ಸಿಗುವ ಇಂಥ ಪ್ರಮುಖ ಪತ್ರಕರ್ತರೊಬ್ಬರನ್ನು ಕಡೆಗಣಿಸಿ ನನ್ನ ಮೇಲೆ ದೈಹಿಕ ಹಲ್ಲೆ ಮಾಡುವಷ್ಟು ಭಂಡ ಧೈರ್ಯವಾಗಲೀ ತರಬೇತಿಯಾಗಲೀ ಅಯಾಚಿತ ಸಾರ್ವಜನಿಕ ಬೆಂಬಲವಾಗಲೀ ಆ ಪುಂಡರಿಗೆ ಇರಲಿಲ್ಲ. ನಮ್ಮ ಮಾಧ್ಯಮಲೋಕದಲ್ಲಿ ರಾಜೇಂದ್ರಪ್ರಸಾದರಂಥ ವಿವೇಕಿಗಳಿದ್ದರೆ ಹೇಗೆ ಸಾಮಾಜಿಕ ದುಸ್ಥಿತಿ ಮತ್ತು ಅರಾಜಕತೆಗಳನ್ನು ಸ್ವಲ್ಪಕಾಲವಾದರೂ ತಹಬಂದಿಗೆ ತರಬಹುದು ಎಂಬುದು ಒಂದು ವಿರಳ ರೂಪಕದಂತೆ, ಈ ಘಟನೆಯಿಂದಾಗಿ, ನನ್ನ ಮನಸ್ಸಿನಲ್ಲಿ ಇವತ್ತಿಗೂ ನಾಟಿದೆ.ಇಷ್ಟೂ ಹೊತ್ತು, ಈ ದಾಂಧಲೆಕೋರ ಹುಳಪಾರ್ಟಿಗಳು ನನ್ನನ್ನು ಜಿ ರಾಜಶೇಖರ ಎಂದೇ ತಿಳಿದಿದ್ದರು.

ದಾಂಧಲೆ ಮಾಡುತ್ತಿರುವವರು ಯಾರು, ದಾಂಧಲೆಗೆ ಒಳಗಾಗುತ್ತಿರುವವರು ಯಾರು, ಯಾಕೆ? ಇದನ್ನು ತಡೆಯಬಲ್ಲವರು ಯಾರು, ಹೇಗೆ? ಎಂಬ ಗೆರೆಗಳೆಲ್ಲ ತೆಳುವಾಗುತ್ತ ಅಳಿಸಿಹೋಗಿ ಕಲಸುಮೇಲೋಗರವಾಗಿರುವ ದುರಂತಕ್ಕೆ ಈಗಂತೂ ನಾವೆಲ್ಲರೂ ಅಸಹಾಯಕ ಸಾಕ್ಷಿಗಳು. ಅದೇನಿದ್ದರೂ, ಕರಾವಳಿ ಕರ್ನಾಟಕದಲ್ಲಿ ಆಗಷ್ಟೇ ಉಲ್ಬಣಕ್ಕೆ ಬರುತ್ತಿದ್ದ ಹಿಂದೂತ್ವವಾದೀ ಹಿಂಸಾಚಾರವನ್ನು ಕ್ಲಿನಿಕಲ್ ಅಚ್ಚುಕಟ್ಟುತನದಿಂದ, ಇಲ್ಲಿನ ಕ್ರೂರ ಸತ್ಯವನ್ನು ಮುಕ್ಕಾಗದಂತೆ ವರದಿ ಮಾಡಿ ಆಗ ತಿಳಿಸುತ್ತಿದ್ದ ಏಕಮಾತ್ರ ವ್ಯಕ್ತಿ ಜಿ ರಾಜಶೇಖರ. ಕೋರೈಸುವ ಸತ್ಯ ಮತ್ತು ತರ್ಕಶುದ್ಧತೆಗಳ ಕಾರಣದಿಂದಾಗಿಯೇ ಅವರ ವರದಿಗಳು, ಹುಟ್ಟಾ ಅಜ್ಞಾನಿಗಳಾದ ಹಿಂದೂತ್ವವಾದಿಗಳಿಗೂ ಅಷ್ಟರಮಟ್ಟಿಗೆ ಅರ್ಥವಾಗುವಂತಿತ್ತು. ಆ ಕಾಲದ ವಿಷಯ ಸದ್ಯ ಒತ್ತಟ್ಟಿಗಿರಲಿ, ಕರಾವಳಿ ಕರ್ನಾಟಕದಲ್ಲಿ ಈಗ ಮೂರು ದಶಕಗಳಿಂದ ಹಗಲೂರಾತ್ರಿ ನಡೆಯುತ್ತಿರುವ ಹಿಂದೂತ್ವವಾದೀ ಬರ್ಬರ ಹಿಂಸಾಚಾರದ ಕುರಿತು ನಾನೋ ನೀವೋ ಆಡುವ ಮಾತುಗಳನ್ನು ಕರ್ನಾಟಕದ ಉಳಿದ ಕಡೆಯ ಜನರು, “ಇವರದ್ದೊಂದು ಉತ್ಪ್ರೇಕ್ಷಿತ ಕಟ್ಟುಕತೆ; ಕರ್ನಾಟಕವು ಲಾಗಾಯ್ತಿನಿಂದಲೂ ಸರ್ವಜನಾಂಗದ ಶಾಂತಿಯ ತೋಟ” ಎಂಬ ದೃಢ ನಂಬಿಕೆಯಲ್ಲೇ ಇತ್ತೀಚಿನವರೆಗೂ ವ್ಯವಹರಿಸುತ್ತ ಬಂದದ್ದಿದೆ. ಆ ಉದಾಸಿನಕ್ಕೆ ಮದ್ದಿಲ್ಲ. ಇದನ್ನು ನೆನೆದರೆ ಜಿ ರಾಜಶೇಖರ ಏಕಾಂಗಿಯಾಗಿ ನಡೆಸುತ್ತ ಬಂದ ಹೋರಾಟ ಇಮ್ಮಖವಾದುದು ಎಂಬುದೂ ತಿಳಿದೀತು: ಎದುರಾಳಿಗಳೂ, ಸಹಚರರೂ– ಇಬ್ಬಣಗಳೂ– ಅವರಿಗೆ ಎಡೆಬಿಡದ ಗಮನಕೇಂದ್ರಗಳು.

1998ರಲ್ಲಿ ಮಡಿಕೇರಿಯಲ್ಲಿ ನಾನು ಕೆಲಸಕ್ಕೆ ಸೇರಿದ ಹೊಸದರಲ್ಲಿ ಸುರತ್ಕಲ್ ನಲ್ಲಿ ನಡೆದ ಹಿಂದೂತ್ವವಾದೀ ಭೀಕರ ಹಿಂಸಾಚಾರದಿಂದಾಗಿ ನನಗೆ ಜಿ ರಾಜಶೇಖರರ ನಿಕಟ ಸಂಪರ್ಕ ಬೇಕೆನ್ನಿಸಿತು, ಉಂಟಾಯಿತು. ಆ ಕಾಲದಲ್ಲಿ ಅತ್ಯಂತ ಪ್ರಭಾವಶಾಲಿ ರಾಷ್ಟ್ರೀಯ ನಾಯಕಿಯಾಗಿದ್ದ ಶ್ರೀಮತಿ ಸೋನಿಯಾ ಗಾಂಧಿಯವರೇ ಸ್ವತಃ ಸುರತ್ಕಲ್ ಗೆ ಭೇಟಿಕೊಡಬೇಕಾಗಿ ಬರುವಷ್ಟು ಆ ಹಿಂಸಾಚಾರ ಢಾಳಾಗಿತ್ತು, ಕ್ರೂರವಾಗಿತ್ತು, ದೇಶದ ಗಮನ ಸೆಳೆದಿತ್ತು. ಗೊತ್ತಿರುವವರಿಗೆ ಗೊತ್ತಿರುವಂತೆ, ಈ ಹಿಂದೂತ್ವವಾದೀ ಭೀಕರ ಹಿಂಸಾಚಾರವನ್ನು “ಸುರತ್ಕಲ್ ಗಲಭೆ” ಎಂಬ ರಂಗಿನ ರಂಗೋಲಿಯ ಕೆಳಗೆ ಅಡಗಿಸುವ ಹೊಸ ಭಾಷೆ, ವ್ಯಾಪಕ ವ್ಯಾಕರಣ ಮತ್ತು ಮೀಮಾಂಸೆ ಹುರಿಗಟ್ಟುತ್ತಿದ್ದ ಕಾಲ ಅದು. ಇಲ್ಲಿ ನಡೆದಿರುವುದು ಸಾಂದರ್ಭಿಕ ಕೋಮು ಗಲಭೆಯಲ್ಲ, ಇವತ್ತು ಕಂಡು ನಾಳೆ ಮರೆಯಾಗುವ ಕ್ಷಣಿಕ ಅಪಭ್ರಂಶವಲ್ಲ, ಎರಡೂ ಕಡೆಯವರು ಸೇರಿ ನಡೆಸಿದ ಜೋಡಾಟವೋ ಜುಗಲ್ಬಂದಿಯೋ ಅಲ್ಲ; ಬದಲಾಗಿ, ವ್ಯವಸ್ಥಿತವಾದ, ವ್ಯಾಪಕವಾದ ಹಿಂದೂತ್ವವಾದೀ ದುಷ್ಟಕೂಟದ ಪ್ರಯೋಗವಾಗಿರುವ ಕ್ರೌರ್ಯ ಮತ್ತು ವಿಷ ಎಂದು ಸಾಧಾರವಾಗಿ, ನಿಖರವಾಗಿ, ವಿವರವಾಗಿ ದಾಖಲಿಸಿದವರು ಜಿ ರಾಜಶೇಖರ. ಹಾವನ್ನು ಹಗ್ಗ ಎಂದು ಅವರು ಎಂದೂ ಹೇಳಲಿಲ್ಲ: He had called the spade, the spade. ಎರಡಕ್ಕೆ ಎರಡು ಕೂಡಿಸಿದರೆ ನಾಲ್ಕು, ಎಂಬ ಸರಳಸತ್ಯವನ್ನು ಹೇಳುವುದು ಕೂಡಾ ಒಂದು ದಿಟ್ಟತನವೂ ಹೌದು, ಕಲೆಯೂ ಹೌದು.

ನಾನೊಬ್ಬ ಸಾಹಿತ್ಯದ ಅಧ್ಯಾಪಕ ಹಾಗೂ ವಿದ್ಯಾರ್ಥಿ. ವಿದ್ಯಾರ್ಥಿಯಾಗಿರುವಾಗಲೇ ನನ್ನ ಮೇಲೆ ಅತ್ಯಂತ ಪ್ರಭಾವ ಬೀರಿದ್ದ, ಈಗಲೂ ಸ್ಫೂರ್ತಿದಾಯಕವಾಗಿ ಉಳಿದುಬಂದಿರುವ ಬರಹಗಳಲ್ಲಿ ಬಹುಮುಖ್ಯವಾದ ಒಂದು ಕೃತಿ ಆಲ್ಬರ್ಟ್ ಕಮೂ ಬರೆದ “ದಿ ಔಟ್ ಸೈಡರ್” (1942). ಭಾಷೆ ಎಂಬುದು ಬರಿಯ ಪದವೋ ಪದಾರ್ಥವೋ ಅಲ್ಲ, ಎದುರು ಹರಡಿರುವ ವಸ್ತುಗಳಿಗೆ ಅಚ್ಚುಕಟ್ಟಾಗಿ ಮಾಡಿರುವ ನಾಮಕರಣವೂ ಅಲ್ಲ, ಅದು ಗರಗಸದಂತೆ ಹೋಗುತ್ತ ಕುಯ್ವುದು ಬರುತ್ತ ಕುಯ್ವುದು; ಭಾಷೆ ಎಂಬುದು, ಪ್ರಭುತ್ವವು ಹಲವು ಹೊಂಚುಗಳಲ್ಲಿ ಸ್ಥಿತಗೊಂಡಿರುವ, ಪ್ರಕಟಗೊಳ್ಳುವ, ಸ್ಥಿರೀಕರಣಗೊಳ್ಳುವ, ಬಗೆಬಗೆಯಾಗಿ ಪುನರಾವರ್ತನೆಗೊಳ್ಳುವ, ಏನನ್ನು ಬೇಕಾದರೂ ಲೋಕಜ್ಞಾನವೆಂಬಂತೆ– ಉಸಿರಾಡುವ ಗಾಳಿ, ನೋಟ ಒದಗಿಸುವ ಬೆಳಕಿನಂತೆ– ಸಹಜವಾದದ್ದು ಎಂದು ಯಶಸ್ವಿಯಾಗಿ ನಂಬಿಸಬಲ್ಲ ವ್ಯಾಪಕವಾದ ಜಾಲ. ಸ್ಥೂಲವಾಗಿ ಹೇಳುವುದಾದರೆ, ಇದು ಆ ಕೃತಿಯಲ್ಲಿ ಕಾಣುವ ಹೊಳಹು. ಇದು, ಯೂರೊಪ್ ಕಂಡ ಮಹಾಯುದ್ಧಗಳು ಹಾಗೂ ಫ್ಯಾಶಿಸ್ಮ್ ನ ವಿಕರಾಳ ಕ್ರೌರ್ಯಗಳ ಮೂಸೆಯಲ್ಲಿ ತಯಾರಾದ ಹೊಸ ತಿಳುವಳಿಕೆಯಾಗಿತ್ತು. ಕಮೂ ತನ್ನ ಈ ಕಾದಂಬರಿಯಲ್ಲಿ ನಮ್ಮ ದಿನನಿತ್ಯದ, ಸರ್ವಸಾಮಾನ್ಯವೆಂಬಂತೆ ಕಾಣುವ, ಭಾಷೆಯನ್ನು ಹಾಗೂ ವಿದ್ಯಮಾನಗಳನ್ನು ಸಂಪೂರ್ಣ ಬೆತ್ತಲೆಗೊಳಿಸಿ ನಿರ್ಭಾವುಕವಾಗಿ ಅದರ ಹುನ್ನಾರಗಳನ್ನು ಜಗಜ್ಜಾಹೀರು ಮಾಡಿದವನು.

ಮಡಿಕೇರಿಯಲ್ಲಿ ಕೆಲಸಕ್ಕೆ ಸೇರಿದ್ದ ಹೊಸತರಲ್ಲಿ, ಸುರತ್ಕಲ್ ನ ಹಿಂದೂತ್ವವಾದೀ ಹಿಂಸಾಚಾರದ ಕುರಿತು ಸುದೀರ್ಘವಾದ, ಸಣ್ಣಪುಟ್ಟ ವಿವರಗಳನ್ನೂ ಬಿಡದಂತೆ ಅಚ್ಚುಕಟ್ಟಾಗಿ ಒಳಗೊಂಡ ವರದಿಯನ್ನು ನಾನು ‘ಲಂಕೇಶ್ ಪತ್ರಿಕೆ’ಯಲ್ಲಿ ಓದಿದೆ. ಹಲವು ಕಂತುಗಳಲ್ಲಿ ಪ್ರಕಟವಾದ ಆ ವರದಿ ಈಗಲೂ ನನಗೆ ಕಣ್ಣಿಗೆ ಕಟ್ಟಿದಂತಿದೆ. ಅದರಲ್ಲಿ ಲೇಖಕನ ಸ್ವಂತ ಮಾತುಗಳಾಗಲೀ, ಅಭಿಪ್ರಾಯಗಳಾಗಲೀ, ವಾದಗಳಾಗಲೀ, ಸಮರ್ಥನೆ ಖಂಡನೆ ಮಂಡನೆಗಳಾಗಲೀ ಇರಲಿಲ್ಲ. ಬಲಿಪಶುಗಳಾದ, ಬಲಿ ತೆಗೆದುಕೊಂಡ, ನಮಗ್ಯಾಕೆ ಎಂದು ಕೈಚೆಲ್ಲಿ ಸಾಕ್ಷಿ ನಿಂತ ನಿರ್ಲಿಪ್ತ ವ್ಯಕ್ತಿಗಳ ಹೆಸರು, ವಯಸ್ಸು, ವರಮಾನ, ಉದ್ಯೋಗ, ಮನೆ, ಊರು, ನೆರೆಹೊರೆ, ದೈನಿಕ ಜೀವನ, ಈಗ ಅವರ ಕಣ್ಣೆದುರು ನಡೆದ ಘಟನೆಗಳು ಮುಂತಾಗಿ ಕರಾರುವಾಕ್ಕಾದ ಕ್ಲಿನಿಕಲ್ ವಿವರಗಳಷ್ಟೇ ಇದ್ದವು. ಲೇಖಕ ಸಂಪೂರ್ಣ ಮರೆಗೆ ಸಂದು, ಪಾತ್ರಗಳೇ ಮೈ ತಳೆದು ನಿಂತಿದ್ದವು. ಆ ಪಾತ್ರಗಳು ತಮಗೆ ಕಂಡಷ್ಟನ್ನೇ ಕಂಡಂತೆಯೇ ಭಯ ದಿಗಿಲು ಭರವಸೆಗಳ ಗೋಜಲಿನಲ್ಲಿ ಹೇಳಿದ್ದವು. ಕಮೂ ಕಾದಂಬರಿಯಲ್ಲಿ ನಾನು ಅಚ್ಚರಿಯಲ್ಲಿ ಏನನ್ನು ಕತೆಯಾಗಿ ಕಂಡಿದ್ದೆನೋ ಅದು ಇಲ್ಲಿ ನಮ್ಮದೇ ಕಾಲಬುಡದಲ್ಲಿ ಜೀವನವಾಗಿ ಮರುಕಳಿಸಿದ್ದನ್ನು ಕಂಡು ನಾನು ನಡುಗಿ ಹೋದೆ. ಈ ವರದಿ ಬರೆದವರು ಜಿ ರಾಜಶೇಖರ.

ತಾನು ಸಾಯುವ ಕಾಲಕ್ಕೆ ಬರೆದ ಕೊನೆಯ ಸಂಪಾದಕೀಯದಲ್ಲಿ ಲಂಕೇಶರು ಜಿ ರಾಜಶೇಖರರ ಕುರಿತು ಅಭಿಮಾನ ತೋರಿದ್ದು ಸುಖಾಸುಮ್ಮನೆ ಅಲ್ಲ. ಆ ಹೊತ್ತಲ್ಲಿ ಕೆ ಎನ್ ಫಣಿಕ್ಕರ್ ಸಂಪಾದಕರಾಗಿ ಪ್ರಕಟಿಸಿದ “ಕಾಮನ್ ಮ್ಯಾನ್ಸ್ ಗೈಡ್ ಟು ಕಮ್ಯೂನಲಿಸ್ಮ್” ಎಂಬ ಹೊಸ ಪುಸ್ತಕವನ್ನೂ ನಾನು ಓದಿದ್ದೆ; ಅದು ಬಹಳ ಪ್ರಭಾವಶಾಲಿಯಾದ ಪುಸ್ತಕ. ಈ ಕಾಕತಾಳೀಯಗಳು ಸೇರಿದ್ದರಿಂದಾಗಿ, “ಬಹುವಚನ ಕೊಡಗು” ಎಂಬ ಬಳಗ ಮತ್ತು ಅದರಿಂದ ಹಲವು ಕಾರ್ಯಕ್ರಮಗಳು ಘಟಿಸಿದವು. ಜಿ ರಾಜಶೇಖರ, ಹಾಗೂ ಅವರನ್ನು ಬಗ್ಗುಬಡಿಯುವ ಉದ್ದೇಶದ ಪುಂಡ ಪಟಾಲಂ ಮಡಿಕೇರಿಗೆ ಅವರನ್ನು ಹಿಂಬಾಲಿಸಿ ಬಂದದ್ದು ಹೀಗೆ.

2003ರಲ್ಲಿ ನಾನು ತಿರುಗಿ ಮಂಗಳೂರಿಗೆ ಬಂದು ಕೆಲಸಕ್ಕೆ ಸೇರಿದೆ. ದೂರದ ಗೋದ್ರಾ-ಗುಜರಾತ್ ಮಾತ್ರವಲ್ಲದೇ ಇಲ್ಲೇ ಆದಿ ಉಡುಪಿಯಲ್ಲೂ ಹಿಂದೂತ್ವವಾದೀ ಹಿಂಸಾಚಾರದ ಅಟ್ಟಹಾಸ ಉಲ್ಬಣಾವಸ್ಥೆಗೆ ಏರಿದ್ದ ಉಚ್ಛ್ರಾಯ ಕಾಲ. ಹಾಗಾಗಿ, ಕರಾವಳಿಯಾದ್ಯಂತ, ಮುಖ್ಯವಾಗಿ ಮಂಗಳೂರು ಉಡುಪಿಗಳಲ್ಲಿ, ಜಿ ರಾಜಶೇಖರ ಮತ್ತು ನಾನು ಹಲವು ಪ್ರತಿಭಟನಾ ಸಭೆಗಳಲ್ಲಿ ಪದೇಪದೇ, ಮತ್ತು ತನಿಖಾ ವರದಿಗಳಿಗಾಗಿ ಆಗಾಗ ಜೊತೆಯಾಗುವ ಸಂದರ್ಭಗಳು ಉಂಟಾದವು. ನಮ್ಮ ಈ ಒಡನಾಟಕ್ಕೆ ಸಂಬಂಧಿಸಿ, ಸಂಕ್ಷಿಪ್ತವಾಗಿ ನಾಲ್ಕು ವಿವರಗಳನ್ನಾದರೂ ನಾನಿಲ್ಲಿ ನೆನೆಯಬೇಕು: 2006ರ ಹಿಂದೂತ್ವವಾದೀ ಹಿಂಸಾಕಾಂಡ; ಉಡುಪಿಯ ಸೌಹಾರ್ದ ಸಾಹಿತ್ಯ ಸಮ್ಮೇಳನ; ಹತ್ತು ವರ್ಷಗಳ ಹಿಂದೆ ಮಂಗಳೂರಲ್ಲಿ ನನ್ನ ಮೇಲೆ ನಡೆದ ದೈಹಿಕ ಹಲ್ಲೆ; ಹಾಗೂ, ಮುಸ್ಲಿಮರು ಸಂಘಟಿತರಾಗಲು ಮಾಡಿದ ಪ್ರಯತ್ನದಲ್ಲಿ ನನ್ನ ಮತ್ತು ಜಿ ರಾಜಶೇಖರರ ಪಾಲುದಾರಿಕೆ.

2006ರಲ್ಲಿ, ಮುಖ್ಯವಾಗಿ ಮಂಗಳೂರು ನಗರ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ವಾರಗಟ್ಟಲೆ ಹಿಂದೂತ್ವವಾದೀ ಹಿಂಸಾಚಾರ ನಡೆಯಿತು. ಇಬ್ಬರು ಮುಸ್ಲಿಮರ ಕೊಲೆಯಾಯಿತು. ಪ್ರಭುತ್ವ ಕಳ್ಳರಂತೆ ಅಡಗಿ ಕೂತು ಚಳಿ ಕಾಯಿಸಿಕೊಳ್ಳುತ್ತಿತ್ತು. ಮನುಷ್ಯತ್ವವೇ ಹೊತ್ತಿ ಹೋಗಿ ದಕ್ಷಿಣಕನ್ನಡ ರಕ್ತಸಿಕ್ತ ರಣರಂಗವಾಗಿತ್ತು. ಅಳಿದುಳಿದವರ ಆರ್ತನಾದದ ಆ ದಿನಗಳನ್ನು ನೆನೆಸಿಕೊಂಡರೆ ಈಗಲೂ ಮೈ ನಡುಗುತ್ತದೆ. ಒಂದು ದಿನ, ಜಿ ರಾಜಶೇಖರರವರು ಫೋನ್ ಮಾಡಿ, ಹಿಂಸಾಚಾರಕ್ಕೆ ಈಡಾದ ಪ್ರದೇಶಗಳು ಮತ್ತು ವ್ಯಕ್ತಿಗಳ ಕುರಿತು ವಿವರವಾದ ಮಾಹಿತಿ ಮತ್ತು ಸಂಪರ್ಕಗಳಿರುವ ಒಬ್ಬ ತರುಣನಿದ್ದಾನೆ; ಸಾಧ್ಯವಿದ್ದರೆ ಕೆಲಸಕ್ಕೆ ರಜೆ ಹಾಕಿ ಬಿಡುವು ಮಾಡಿಕೊಂಡು ಬನ್ನಿ, ಏನು ನಡೆದಿದೆ ಎಂಬುದನ್ನು ನೋಡಬೇಕು ಎಂದರು. ಹಾಗೆ, ನಾವಿಬ್ಬರು ಹರ್ಷದ್ ವರ್ಕಾಡಿ ಎಂಬ ತರುಣನ ಮಾರ್ಗದರ್ಶನದಲ್ಲಿ ಜೊತೆಯಾಗಿ, ಆದಷ್ಟೂ ಕೂಲಂಕಷವಾಗಿ ಭೇಟಿ, ಸಂದರ್ಶನ, ಸುತ್ತಾಟ, ಮಾಹಿತಿ ಸಂಗ್ರಹಣೆ ಮಾಡಿದೆವು. ಅಗತ್ಯ ಕಂಡ ಕಡೆಗಳಿಗೆ ಹಲವು ಬಾರಿ ಹೋಗಬೇಕಾಗಿ ಬಂತು. ಸಂತ್ರಸ್ತರು ಮತ್ತು ಅಪರಾಧಿಗಳು ಒಬ್ಬರ ದಾರಿ ಮತ್ತೊಬ್ಬರು ತೋರಿಸಿ ಈ ಕಗ್ಗಂಟಿನ ಹಿಂದೆ ಮುಂದೆ ಒಳಹೊರಗೆ ಸುತ್ತಿ ಸುದೀರ್ಘವಾದ ವರದಿಯನ್ನು ತಯಾರಿಸಿದೆವು. ಆ ವರದಿ ಕಂತು ಕಂತುಗಳಾಗಿ ‘ಲಂಕೇಶ್ ಪತ್ರಿಕೆ’ಯಲ್ಲಿ ಪ್ರಕಟವಾಯಿತು. ‘ಕರ್ನಾಟಕ ಕೋಮು ಸೌಹಾರ್ದ ವೇದಿಕೆ’ ಅದನ್ನು ಒಂದು ಪುಸ್ತಕವಾಗಿ ಪ್ರಕಟಿಸಿತು. ಅದನ್ನು ನನ್ನಿಂದ ಇಂಗ್ಲಿಷ್ ಗೆ ಅನುವಾದಿಸಿ ತೀಸ್ತಾ ಸೆಟಲ್ ವಾಡ್ ತಮ್ಮ ‘ಕಮ್ಯೂನಲಿಸ್ಮ್ ಕಾಂಬ್ಯಾಟ್’ ಪತ್ರಿಕೆಯಲ್ಲಿ ಪ್ರಕಟಿಸಿದರು. ಈ ಸಂಬಂಧವಾಗಿ ತೀಸ್ತಾ ಸೆಟಲ್ ವಾಡ್ ಸ್ವತಃ ಮಂಗಳೂರಿಗೆ ಬಂದು (ಮಾಧ್ಯಮಲೋಕ ಅದಾಗಲೇ ಕುಲಗೆಟ್ಟು ಹಿಂದೂತ್ವವಾದಿಯಾಗಿ ಮತಾಂತರಗೊಂಡಿದ್ದಾಗಲೂ) ಪತ್ರಿಕಾಗೋಷ್ಠಿ ಕರೆದು, ವಿವರಗಳನ್ನು ಸಾರ್ವಜನಿಕರ ಎದುರು ತೆರೆದಿಟ್ಟರು.

ಈ ವರದಿಯ ಉಳಿದ ಫಲಿತಗಳೇನೇ ಇರಲಿ, ನಾನು ಜಿ ರಾಜಶೇಖರರಿಂದ ಆಗ ಕಲಿತದ್ದು ಬಹಳ. ಅದು ಬಹಳ ಅಮೂಲ್ಯ ಕೂಡಾ. ಅಪರಾಧಿಗಳಿರಲಿ, ತಟಸ್ಥರಿರಲಿ, ಸಂತ್ರಸ್ತರಿರಲಿ, ಪ್ರಭುತ್ವವಿರಲಿ– ನಾವು ಭಾವಾವೇಶಕ್ಕೆ ಎಡೆಯಾಗದಂತೆ, ಸಣ್ಣಪುಟ್ಟದು ಎಂಬ ಅಸಡ್ಡೆಯಲ್ಲಿ ಯಾವ ವಿವರಗಳೂ ಕೈ ಜಾರದಂತೆ, ಸಂದರ್ಭದ ಕಗ್ಗಂಟಾದ ಮಗ್ಗುಲುಗಳಿಗೂ ಸಂಕೀರ್ಣತೆ ಸಂದಿಗ್ಧಗಳಿಗೂ ಕುರುಡಾಗದಂತೆ, ಹುಂಬ ಪಕ್ಷಪಾತಿಗಳಾಗದಂತೆ, ಆದರೆ ಸತ್ಯಕ್ಕೆ ಧಕ್ಕೆ ಬರದಂತೆ, ಪ್ರಭುತ್ವದ ಅಟ್ಟಹಾಸದಿಂದ ಕೊಂಕದಂತೆ ನಡೆದ ಈ ತನಿಖೆಯನ್ನು, ಅದರ ಒಂದು ಉದಾಹರಣೆಯ ಮುಖಾಂತರ ಹೇಳುವುದಾದರೆ: ಈ ವರದಿ ತಯಾರಾದ ನಂತರ ದೇಶದ ಬೇರೆ ಭಾಗಗಳಿಂದ ಹಾಗೂ ಹೊರದೇಶಗಳಿಂದ ಕೆಲವು ವರದಿಗಾರರು ಮತ್ತು ಮಾಧ್ಯಮ ಅಧ್ಯಯನ ವಿದ್ಯಾರ್ಥಿಗಳು ಆಗಾಗ ನನ್ನ ಬಳಿ ಬರುತ್ತಿದ್ದರು; ಅವರನ್ನು ಪದೇಪದೇ ನಾನೊಬ್ಬನೇ ಕರೆದುಕೊಂಡು ಹೋಗಬೇಕಾದ ಸಂದರ್ಭಗಳು ಬರುತ್ತಿದ್ದವು. ಆಗ ನನ್ನ ಬಳಿ, ನಾವು ತಯಾರಿಸಿದ ವರದಿಯ ಪುಸ್ತಕಗಳ ಪ್ರತಿಗಳು ಇರುತ್ತಿದ್ದವು. ಗೂಡಂಗಡಿಗಳು, ಬಟ್ಟೆ ಚಪ್ಪಲಿ ತರಕಾರಿ ಅಂಗಡಿಗಳು, ದೂರದೂರದ ಒಂಟಿ ಮನೆಗಳು– ಮುಂತಾದ ಎಲ್ಲ ಕಡೆ ಈ ಪುಸ್ತಕ ನೋಡಿ, ಅದರಲ್ಲಿ ತಮ್ಮ ಹೆಸರು ಮತ್ತು ನಡೆದ ಘಟನೆಗಳ ವಿವರಗಳನ್ನು ನೋಡಿ ಆ ನತದೃಷ್ಟ ಅಮಾಯಕರು ಸಂತಸಗೊಳ್ಳುತ್ತಿದ್ದರು. ಅವರ ಕಣ್ಣಂಚಲ್ಲಿ ತಮ್ಮ ಅಳಲು ನಿರರ್ಥಕವಲ್ಲವೇನೋ ಎಂಬ ಮಿಂಚು ಒಮ್ಮೊಮ್ಮೆ ಮೂಡುತ್ತಿತ್ತು. ಕ್ರೂರ ವ್ಯಂಗ್ಯವೋ ಎಂಬಂತೆ ನನಗೆ ಬೇಂದ್ರೆಯವರ “ಸಾಯೋ ಆಟ” ನಾಟಕದ ಈ ಸಾಲುಗಳು ಬೇಡಬೇಡವೆಂದರೂ ನೆನಪಾಗುತ್ತಿದ್ದವು: “ನಾಲ್ಕು ಜನ ನೋಡುವವರಿದ್ದರೆ ಅತ್ತರೂ ಚೆಂದ, ಸತ್ತರೂ ಚೆಂದ.” ಮನುಷ್ಯರು ಕಡೆಗೂ ಬದುಕಿ ಉಳಿಯುವುದು ಗೋಡೆಗಳಿಗಾದರೂ ಹೇಳಲ್ಪಡುವ ಕತೆಗಳಲ್ಲಿ. (ಹಾಗೊಂದು ಜನಪದ ಕತೆಯೂ– Tell It To The Walls: ಎ ಕೆ ರಾಮಾನುಜನ್– ಇದೆ). ಈ ಅಮಾಯಕರು ಯಾರೋ, ಜಿ ರಾಜಶೇಖರ ಯಾರೋ; ಒಂದರ್ಥದಲ್ಲಿ ಪರಸ್ಪರ ಅವರು ಅಪರಿಚಿತ ಅನಾಮಧೇಯರು. ರಾಜಶೇಖರರಂತೆ, ಅಳಿಸಿ ಹೋಗುವ ನಮ್ಮ ಹೆಜ್ಜೆ ಗುರುತಿಗೂ ಗುರುತು ಬರುವಂತೆ, ಮರೆಯಾಗುವುದು ಸುಲಭವಲ್ಲ.

ಪ್ರಭುತ್ವ ಮತ್ತು ಮಠಮಾನ್ಯಗಳ ಕೃಪೆಯಲ್ಲೂ, ಜಾಗತೀಕರಣವು ಮಂಗಳೂರಿನ ವಿಶೇಷ ಆರ್ಥಿಕ ವಲಯದ ಅವತಾರದಲ್ಲಿ ಸೃಷ್ಟಿಸುತ್ತಿರುವ ದುರಂತಗಳಲ್ಲೂ, ಇವುಗಳ ಹೆಣಿಗೆಯಾಗಿರುವ ದಿವ್ಯ ನಿರ್ಲಕ್ಷ್ಯಗಳ ಹಾಸುಹೊಕ್ಕಿನಲ್ಲೂ– ಕರಾವಳಿ ಕರ್ನಾಟಕದ ಹಿಂದೂತ್ವವಾದೀ ಅಟ್ಟಹಾಸವನ್ನು ಅದೃಶ್ಯಗೊಳಿಸಿ, ಸಾಹಿತ್ಯ-ಸಂಸ್ಕೃತಿ ಎಂಬ ಸುವರ್ಣ ಚೌಕಟ್ಟನ್ನು ಸಾಹಿತ್ಯ ಪರಿಷತ್ತು ಸಿದ್ಧಪಡಿಸುತ್ತಿರುವಾಗಲೇ, ಅದಕ್ಕೆ ಎದುರಾಗಿ ಉತ್ತರವಾಗಿ ಸವಾಲಾಗಿ ಉಡುಪಿಯಲ್ಲಿ ಸೌಹಾರ್ದ ಸಾಹಿತ್ಯ ಸಮ್ಮೇಳನ ನಡೆಯಿತು. ಅದು ಬಹಳ ಅರ್ಥಪೂರ್ಣವೂ ಆಗಿತ್ತು. ಜಿ ರಾಜಶೇಖರ ಮೆಚ್ಚಿಕೊಂಡ ನನ್ನ ಆಶಯ ಭಾಷಣ ಕೂಡಾ ಅದರ ಭಾಗವಾಗಿತ್ತು. ಮಂಗಳೂರಲ್ಲಿ ನನ್ನ ಮೇಲೆ ದೈಹಿಕ ಹಲ್ಲೆ ನಡೆದುದನ್ನು ಖಂಡಿಸಿ ಜಿ ರಾಜಶೇಖರ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಎದುರು ಸಾರ್ವಜನಿಕ ಭಾಷಣ ಮಾಡಿದರು. ‘ಲಂಕೇಶ್ ಪತ್ರಿಕೆ’ಗಾಗಿ ನನ್ನ ಕುರಿತು ಬರೆದರು. ಜೀವಂತ ಇರುವಾಗಲೇ ಶೃದ್ಧಾಂಜಲಿ ಲೇಖನ ಓದಿದಷ್ಟು ಸಂತೋಷವಾಯಿತು ಎಂಬ ನನ್ನ ಪ್ರತಿಕ್ರಿಯೆಗೆ ಮನಃಪುರ್ವಕವಾಗಿ ಅಪರೂಪದ ನಗೆ ನಕ್ಕರು.

ಮುಸ್ಲಿಮರು ಹಲವರು ತಾವು ಸಂಘಟಿತರಾಗಲು ಬಯಸಿ ನಡೆಸಿದ ಪ್ರಯತ್ನಗಳ ಕುರಿತು ಕೆಲವಾದರೂ ಮಾತುಗಳನ್ನು ನಾನು ಹೇಳುವುದಿದೆ. ಧರ್ಮವು ಉತ್ಸವಮೂರ್ತಿಯಾಗಿ, ಆರ್ಥಿಕತೆ ಬೇಕಾಬಿಟ್ಟಿ ಜಾಗತೀಕರಣವಾಗಿ ನಿರ್ದಯವಾಗಿ ಎದುರು ನಿಂತಿರುವ ಕಾಲ ನಮ್ಮದು. ಯಾವ ಕಡೆ ತಿರುಗಿದರೂ ಮನುಷ್ಯತ್ವದ ಪಸೆ ಕಾಣದಂತಾಗಿದೆ. ಸಂಘಪರಿವಾರದ ಅಟ್ಟಹಾಸ ಮೇರೆ ಮೀರಿದೆ. ಪ್ರಭುತ್ವವು ಹಿಂದೂತ್ವವಾದದಲ್ಲಿ ಪರೋಕ್ಷವಾಗಿಯಷ್ಟೇ ಅಲ್ಲದೇ ನೇರವಾಗಿ ಪಾಲುದಾರವಾಗಿದೆ. ಉಳಿದ ರಾಜಕೀಯ ಪಕ್ಷಗಳೂ ಜಾತ್ಯತೀತತೆ ಎಂಬುದನ್ನು ಅನುಕೂಲ ಶಾಸ್ತ್ರವನ್ನಾಗಿ ಮಾರ್ಪಡಿಸಿವೆ. ಒಂದು ಕಾಲಕ್ಕೆ ಬಹಳ ಪ್ರಭಾವಶಾಲಿಯಾಗಿದ್ದ ಎಡಪಕ್ಷಗಳ ವರ್ಚಸ್ಸು ಜಾಗತೀಕರಣದ ಬಂಡವಾಳಶಾಹಿಯ ದಾಳಿಗೆ ಪೇಲವಗೊಳ್ಳುತ್ತಿದೆ. ಕೋಮುವಾದ ಮತ್ತು ನವ ಬಂಡವಾಳಶಾಹಿಗಳ ನಾಗಾಲೋಟದ ಎದುರು, ಚಳುವಳಿಗಳು ಏದುಸಿರುಬಿಡುತ್ತಿವೆ. ನನ್ನನ್ನೇ ಉದಾಹರಣೆಯಾಗಿಟ್ಟು ಆತ್ಮಮರುಕವಿಲ್ಲದೇ ಇಷ್ಟಂತೂ ಹೇಳಬಲ್ಲೆ: ನಾನು ಉದ್ಯೋಗ ಮಾಡುತ್ತಿದ್ದ ಸಂಸ್ಥೆಗಳ ಆಡಳಿತ, ಬಹುಪಾಲು ನನ್ನ ವಿದ್ಯಾರ್ಥಿಗಳು, ಸಂಘಪರಿವಾರದ ಬೀದಿ ಪುಂಡರು ನೇತಾರರು, ಅಷ್ಟೇ ಏಕೆ ಬಸ್ಸು ರಿಕ್ಷಾ ಅಂಗಡಿ ಹೊಟೇಲು ನೆರೆಹೊರೆಯವರು ನನ್ನನ್ನು ಕಂಡದ್ದು ಒಬ್ಬ ಕ್ರಿಮಿನಲ್ ಮತ್ತು ಜನ ಶತ್ರು ಎಂಬಂತೆ. ಅವು ಅಸುರಕ್ಷಿತತೆಯ ಬೇತಾಳ ಹೆಗಲೇರಿದ ದಿನರಾತ್ರಿಗಳು. ಸವಲತ್ತುಗಳ ನಡುವೆಯೂ ನನ್ನ ಪರಿಸ್ಥಿತಿಯೇ ಹೀಗನ್ನಿಸಿದರೆ, ಉಳಿದವರ ಪಾಡು ಕರುಣಾಜನಕ. ಕರ್ನಾಟಕ ಫೋರಮ್ ಫಾರ್ ಡಿಗ್ನಿಟಿ ಹುಟ್ಟಿದ್ದು ಈ ಸಂಧಿಕಾಲದಲ್ಲಿ. ಆ ಆರಂಭದ ದಿನಗಳಿಂದಲೂ ನಾನು ಮತ್ತು ಜಿ ರಾಜಶೇಖರ ಹೆಚ್ಚೂಕಡಿಮೆ ಅವರ ಎಲ್ಲ ಕಾರ್ಯಕ್ರಮಗಳಲ್ಲೂ ಭಾಷಣಕಾರರು ಮತ್ತು ಬೆಂಬಲಿಗರು. ಕೋಮುಸೌಹಾರ್ದ ವೇದಿಕೆಯಲ್ಲಿ ಎಡೆಬಿಡದೇ ಸಕ್ರಿಯರಾಗಿದ್ದುಕೊಂಡೇ ಕೆ ಎಫ್ ಡಿ/ಪಿ ಎಫ್ ಐಗೆ ನಾವು ಜೊತೆಯಾದವರು. ನಮ್ಮದೇ ಸ್ನೇಹಿತರು ನಮ್ಮನ್ನು ಮುಸ್ಲಿಮ್ ಸಂಘಟನೆಗಳಿಂದ ಹೊರಗೆಳೆಯಲು ಮಾಡಿದ ಪ್ರಯತ್ನಗಳ ದೊಡ್ಡ ಕತೆಯೇ ಇದೆ. ಅದೇನೇ ಇದ್ದರೂ, ನನ್ನ ಮತ್ತು ರಾಜಶೇಖರರ ನಿಲುವು ಆಗಲೂ ಈಗಲೂ ಬದಲಾಗದೇ ಉಳಿಯಿತು.

ಕಾರಣ ಇಷ್ಟೇ. ನನ್ನ ವಾದ ಸರಳವಾದದ್ದು, ಆದರೆ ದೃಢವಾದದ್ದು. ಭೋಳೆ ಎನ್ನುವವರ ಬಾಯಿ ಮುಚ್ಚಿಸುವ ದರ್ದು ಅದಕ್ಕಿಲ್ಲ: (೧) ಉದಾರವಾದೀ ಪ್ರಜಾತಂತ್ರ ವ್ಯವಸ್ಥೆಯಲ್ಲಿ, ಎಲ್ಲ ವ್ಯಕ್ತಿಗಳೂ ವ್ಯಕ್ತಿಗಳಾಗಿ ಕೇವಲ ಒಂದು ವೋಟು ಮಾತ್ರ; ಅವರು ಸಂಘಟಿತ ಸ್ವರವಾಗದಿದ್ದರೆ ಅವರನ್ನು ಕೇಳುವವರಿಲ್ಲ. ಕೇಳಿದರೂ, ಕೇಳುವವರು ತೋರಿಸುವ ಕೃಪೆ-ಔದಾರ್ಯ ಬಹಳ ಉಪಯುಕ್ತವೂ ಅಲ್ಲ, ಬಾಳಿಕೆ ಬರುವಂಥದ್ದೂ ಅಲ್ಲ, ಪಡೆಯುವವರ ಘನತೆಗೆ ಹೊಂದುವಂಥದ್ದೂ ಅಲ್ಲ. ಹಾಗಾಗಿ, ಸಂಘಟಿತರಾದರೆ ಉಂಟಾಗಬಹುದಾದ ವಿಕಾರಗಳು ಮತ್ತು ಅಪಾಯಗಳನ್ನು ವಾದಗಳನ್ನಾಗಿ ಸದಾ ಕಾಲ ಚಾಲ್ತಿಯಲ್ಲಿಡಲು ಅವಕಾಶಗಳೂ ಇಲ್ಲ. (೨) ಎರಡನೆಯ ಆರೋಪ ಹೆಚ್ಚು ತೀಕ್ಷ್ಣವಾದದ್ದು, ಕಟುವಾದದ್ದು: ಇದು ಕೇವಲ ಮುಸ್ಲಿಮರ ಸಂಘಟನೆ; ಇದು ಸಂಘಪರಿವಾರದ್ದೇ ಪಡಿಯಚ್ಚು; ಇವರೂ ಕೋಮುವಾದಿಗಳು; ಇವರೂ ಹಲ್ಲೆ ದೊಂಬಿ ದಾದಾಗಿರಿ ನಡೆಸುತ್ತಾರೆ; ಮುಸ್ಲಿಮ್ ಹೆಣ್ಣುಮಕ್ಕಳನ್ನು ಸಂಘಟನೆಯಲ್ಲಿ ಸೇರಿಸಿಕೊಳ್ಳುವುದಿಲ್ಲ, ಅವರು ಸಮಾನತೆಯ ಹಕ್ಕುಗಳನ್ನು ಮಾನ್ಯಮಾಡುವುದಿಲ್ಲ, ಮುಂತಾಗಿ.

ಈ ವಿವರಗಳು ನನಗೆ ಅಷ್ಟು ಮುಖ್ಯವೆಂದು ಅನ್ನಿಸುವುದಿಲ್ಲ. ಅವರ ಘೋಷಿತ ನಿಲುವುಗಳೇನು ಎಂಬುದಷ್ಟೇ ನನಗೆ ಮುಖ್ಯವಾದುದು. ಏಕೆಂದರೆ, ತಪ್ಪುಗಳು ಸಂಭವಿಸಿದ ಸಂದರ್ಭಗಳಲ್ಲಿ ಅದೇ ಘೋಷಿತ ನಿಲುವುಗಳ ಮೂಲಕ ಅವರ ಜೊತೆ ವಾಗ್ವಾದ-ಸಂವಾದ ನಡೆಸಬಹುದಾದ ಬಾಗಿಲು ತೆರೆದೇ ಇದೆ. ಇದನ್ನು ಸಂಘಪರಿವಾರದ ವಿಷಯದಲ್ಲಿ ಹೇಳುವಂತಿಲ್ಲ. ಸಾವರ್ಕರ್, ಗೋಳ್ವಲ್ಕರ್ ಅಥವಾ ಇನ್ನಾವುದೇ ಸಂಘಪರಿವಾರದ ಮುಖವಾಣಿಗಳಾದ ಜನರನ್ನು ಹಾಗೂ ಅವರ ಘೋಷಿತ ನಿಲುವುಗಳನ್ನು ಯಾವ ನಾಗರಿಕ ಸಮಾಜವೂ ಸಮರ್ಥಿಸುವುದು ಸಾಧ್ಯವಿಲ್ಲ. ಅಲ್ಲದೇ, ಬಹುಸಂಖ್ಯಾತ ಕೋಮುವಾದವನ್ನು ಮಾಮೂಲು ತಕ್ಕಡಿಯಲ್ಲಿ ತೂಗುವುದು ಸರ್ವಥಾ ಸಾಧುವಲ್ಲ. ಇದು ನನ್ನ ಖಡಾಖಂಡಿತವಾದ ಲಾಗಾಯ್ತಿನ ನಿಲುವು. ನನಗೆ ತಿಳಿದಮಟ್ಟಿಗೆ ರಾಜಶೇಖರರ ನಿಲುವು ಕೂಡಾ ಇದೇ ಸ್ವರೂಪದ್ದು. ಹಾಗಲ್ಲದೇ, ಮುಸ್ಲಿಮರು ರಾಜಶೇಖರರನ್ನು ತಮ್ಮ ಆಪತ್ಬಾಂಧವ ಎಂದು ತಿಳಿಯಲು ವಿಶೇಷ ಕಾರಣಗಳಿಲ್ಲ.

ರಾಜಶೇಖರರು ಪಡೆಯಬಹುದಾಗಿದ್ದ ಪ್ರಶಸ್ತಿಗಳು ಸನ್ಮಾನಗಳು ಹಲವು. ಕಿರುಚು ಕಂಠದ ಕುಲಗೆಟ್ಟ ಮುಂಚೂಣಿ ಜನರು ಅದನ್ನು ತಡೆದರು. ಅದರಿಂದ ರಾಜಶೇಖರರಿಗೇನೂ ನಷ್ಟವಾಗಲಿಲ್ಲ. ಅಂಥ ಹಲವು ಪ್ರಶಸ್ತಿ ಸನ್ಮಾನಗಳು ಕೂಡಾ ಅವರು ಎದುರಾಳಿಯಾಗಿ ನಿಂತು ಹೋರಾಡಿದ ರಿವಾಜುಗಳ ಕೂಸುಗಳೇ ಆಗಿರುವುದರಿಂದ, ಅಪ್ಪಿ ತಪ್ಪಿ ಅಂಥದ್ದೊಂದು ಪ್ರಶಸ್ತಿ ಬಂದಾಗಲೂ ಅವರು ಅದನ್ನು ನಿರಾಕರಿಸಿದರು. ಆದರೆ ಉಡುಪಿಯಲ್ಲಿ ಮುಸ್ಲಿಮ್ ಸಂಘಟನೆಗಳವರು, ಮಂಗಳೂರಲ್ಲಿ ‘ಪ್ರಸ್ತುತ ಬಳಗ’ದವರು ಕೊಟ್ಟ ಪ್ರಶಸ್ತಿ-ಸನ್ಮಾನಗಳನ್ನು ತನ್ನ ಹೋರಾಟಗಳ ಮುಂದುವರಿಕೆಯಾಗಿಯೇ ಅವರು ಸಂತೋಷದಿಂದ ಸ್ವೀಕರಿಸಿದರು. ಪ್ರಶಸ್ತಿಯನ್ನು ಸ್ವೀಕರಿಸುವುದೂ ಪ್ರಶಸ್ತಿಯನ್ನು ನಿರಾಕರಿಸುವಷ್ಟೇ ಅರ್ಥಪೂರ್ಣವಾದುದು ಎಂಬುದನ್ನು, ಪ್ರಶಸ್ತಿ ಸ್ವೀಕರಿಸುವಾಗ ಅವರು ಆಡಿದ ಮಾತುಗಳು ಕೂಡಾ ಸ್ಪಷ್ಟಪಡಿಸಿವೆ. ಈ ನಿಸ್ಪೃಹತೆ ವಿರಳಾತಿವಿರಳವಾದುದು. ನಿಜವಾಗಿಯೂ ದೊಡ್ಡವರಾಗಿರುವ ನಮ್ಮ ನಡುವಿನ ಹಲವು ಹಿರಿಯರಲ್ಲಿ ಕೂಡಾ ಈ ಗುಣ ದುರ್ಲಭವಾದುದು. ಈ ವಿಷಯದಲ್ಲಿ ದಾಕ್ಷಿಣ್ಯಕ್ಕೆ ಬಸುರಾಗದೇ ಉಳಿದವರ ಸಂಖ್ಯೆ ಬಹಳ ಕಡಿಮೆ.

ಆದರೆ, ಅದಕ್ಕಿಂತ ಮುಖ್ಯವಾದ ವಿಶೇಷವೊಂದಿದೆ. ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಾನು ಆರಂಭಿಸಿದ್ದು, ಮುಖ್ಯವಾಗಿ ನೃತ್ಯ, ಸಂಗೀತ ಮುಂತಾದ ಶಾಸ್ತ್ರೀಯ ಕಲೆಗಳ ಅತ್ಯುತ್ತಮ ವಕ್ತಾರರ ಮುಖಾಂತರ. ಆದರೆ ಅದು ಕೇವಲ “ಕಲೆಗಾಗಿ ಕಲೆ” ಎಂಬಂತಾಗುವ ಅಪಾಯಗಳನ್ನು ತಪ್ಪಿಸುವ ಕಷ್ಟಗಳೇನು ಎಂಬುದು ಅನುಭವದಿಂದ ನನ್ನ ತಿಳುವಳಿಕೆಗೆ ಬಂದಿದೆ. ಆದರೆ ನಾನು ಭಾಗವಹಿಸುವ ಸಾರ್ವಜನಿಕ ಹೋರಾಟ ಪ್ರತಿಭಟನೆ ಮುಂತಾದವು ಢಾಳಾಗಿ ರಾಜಕೀಯ ನಿಲುವುಗಳನ್ನು ಹೊಂದಿರುವಂಥವು. ಇಲ್ಲಿನ ಕೊರತೆಯೆಂದರೆ ಕಲೆಯ ನಯ ನವಿರು ನಾಜೂಕು ಸೂಕ್ಷ್ಮಗಳ ಗೈರುಹಾಜರಿ. ಸೂಕ್ಷ್ಮಗಳಿಗೆ ಒಡ್ಡಿಕೊಳ್ಳದೇ, ಎದುರಾಳಿಯ ಸಂಕಟ-ತಲ್ಲಣಗಳನ್ನು ಗ್ರಹಿಸದೇ, ಅದದೇ ಜನರೆದುರು ಅದದೇ ಮಾತುಗಳನ್ನಾಡುತ್ತ, ಘೋಷಣೆಗಳ ಬುರುಗು ಗೀಳಿನಲ್ಲಿ ಕರಗುತ್ತ ಹೋಗುವ ಅಪಾಯದಿಂದ ತಪ್ಪಿಸಿಕೊಂಡು ಸ್ತಿಮಿತದಲ್ಲಿ ಉಳಿಯುವುದು ಇಂಥಲ್ಲಿ ಕಡುಕಷ್ಟ. ರಾಜಶೇಖರರು ಈ ಇರುಸುಮುರುಸನ್ನು ಮೇಲಿಂದ ಮೇಲೆ ಅನುಭವಿಸಿದ್ದಾರೆ ಎಂದೇ ನನ್ನ ಭಾವನೆ. ಹೀಗಿದ್ದೂ ಗೊಡ್ಡಾಗದೇ ಉಳಿದದ್ದು ಅವರ ಇನ್ನೊಂದೇ ಅಂತರಂಗದ ಹೋರಾಟವಿದ್ದೀತು. ಏಕೆಂದರೆ, ನಿಜಕ್ಕಾದರೆ ದಿನನಿತ್ಯದ ಏಕತಾನದ ಬುರ್ನಾಸು ಸಾಮಾನ್ಯತೆಯಲ್ಲಿ ಕರಗಿಹೋಗದ ಸೂಕ್ಷ್ಮವೇ ಅವರ ಅಡಿಪಾಯ– langue. ದೈನಿಕದ ರಾಜಕೀಯ ಹೋರಾಟ ಮತ್ತು ನಿಲುವುಗಳಾಗಿ ಬೀದಿಗಳಲ್ಲಿ ಅವರು ನಮಗೆ ಕಾಣಿಸಿದ್ದು ಆ ಅಭಿಜಾತ ಅಭಿರುಚಿಯ ಒಂದು ಝಲಕ್– parole. ವಿಪರ್ಯಾಸವೆಂದರೆ, ಜಾರ್ಜ್ ಲುಕಾಕ್ಸ್ ಹೇಳುವಂತೆ, ಉಪಯುಕ್ತವಾದ ಒಂದು ಸರ್ವಸಾಮಾನ್ಯ ಮೇಜನ್ನು ತಯಾರಿಸುವುದಕ್ಕೂ, ನಮ್ಮ ಈ ದುಷ್ಕಾಲದಲ್ಲಿ, ಮೈಖೆಲ್ ಏಂಜೆಲೋನ ಪ್ರತಿಭೆಯೇ ಬೇಕು.

ಸಾಮಾನ್ಯರ ನಡುವೆ ಸಾಮಾನ್ಯರಾಗಿ ಇರುವುದೂ ಒಂದು ಅಸಾಮಾನ್ಯ ಸಾಧನೆ. ನನಗೆ ತಿಳಿದಮಟ್ಟಿಗೆ ರಾಜಶೇಖರರ ಜೀವನಪೂರ್ತಿಯ ಪ್ರಜ್ಞಾಪೂರ್ವಕ ಹುಡುಕಾಟವಿದ್ದುದು ಸಾಮಾನ್ಯ ಜೀವನದ ಸಹಜ ಅಸಾಮಾನ್ಯತೆಯಲ್ಲಿ. ಅನಾಮಧೇಯನಾಗಿ ಉಳಿಯಬೇಕೆಂಬ ಹಠದಲ್ಲಿ.

1992ರ ಡಿಸೆಂಬರ್ ಕೊನೆಯ ಭಾಗದ ಒಂದು ಭಾನುವಾರ. ‘ಸಾಪ್ತಾಹಿಕ ಪ್ರಭ’ದಲ್ಲಿ “ಅಕ್ಕರೆಯ ರಾಮಲಾಲನಿಗೆ ಅಕಾಲ ಮುಪ್ಪು” ಎಂಬ ನನ್ನ ಲೇಖನ ಪ್ರಕಟವಾಗಿತ್ತು. ಮಹಾತ್ಮಾ ಗಾಂಧಿ, ಮಾರ್ಟಿನ್ ಹೈಡೆಗರ್, ಸಾದತ್ ಹಸನ್ ಮಾಂಟೋ ಮತ್ತು ರಾಮಕೃಷ್ಣ ಪರಮಹಂಸರ ವಿಚಾರಗಳಿಗೆ ನಾನು ಮರುಳಾಗಿದ್ದ ಕಾಲ. ಧ್ವಂಸಗೊಂಡ ಬಾಬರೀ ಮಸೀದಿಯ ಕಲ್ಲು ಇಟ್ಟಿಗೆಗಳ ಸಂದಿಯಲ್ಲಿ ಅನಾಥವಾಗಿ ಬಿದ್ದಿದ್ದ ಅಯೋಧ್ಯೆಯ ರಾಮಲಲ್ಲಾನ ಚಿತ್ರವೊಂದನ್ನು ‘ಫ್ರಂಟ್ ಲೈನ್’ ಪತ್ರಿಕೆಯಲ್ಲಿ ಕಂಡಿದ್ದೆ. ರಾಮಕೃಷ್ಣ ಪರಮಹಂಸರ ರಾಮ, ರಾಮಲಾಲ, ಮುದ್ದಿನ ಹಸುಗೂಸು. ಬಿಲ್ಲುಬಾಣ ಹೆದೆಯೇರಿಸಿ, ಇಲ್ಲದ ಶತ್ರುವನ್ನು ನಿರ್ನಾಮ ಮಾಡಬೇಕೆನ್ನುವ ವ್ಯಗ್ರ ಉಮೇದಿನ ಸೆಟೆದು ನಿಂತ ರಾಮನಲ್ಲ. ಹಾಗೆಂದು ಬರೆದಿದ್ದೆ. ಎರಡೇ ದಿನದಲ್ಲಿ ರಾಜಶೇಖರರಿಂದ ಮೆಚ್ಚುಗೆಯ ಪತ್ರ ಹಾಗೂ ಇಂಗ್ಲಿಷ್ ಲೇಖನವೊಂದರ ಛಾಯಾಪ್ರತಿ ಅಂಚೆಯಲ್ಲಿ ಬಂತು. ಇಂಗ್ಲಿಷ್ ಲೇಖನದ ಛಾಯಾಪ್ರತಿ ‘ಇಂಡಿಯನ್ ಎಕ್ಸ್‌ಪ್ರೆಸ್‌’ ಪತ್ರಿಕೆಯಲ್ಲಿ ಮರುದಿನ ಮಹಾತ್ಮಾ ಗಾಂಧಿಯವರ ಮೊಮ್ಮಗ ರಾಮಚಂದ್ರ ಗಾಂಧಿ ಬರೆದದ್ದು. ರಾಮಕೃಷ್ಣ ಪರಮಹಂಸರ ರಾಮಲಲ್ಲಾನ ಸುತ್ತ ನಾನು ಬರೆದಿದ್ದ ಅದದೇ ವಿವರಗಳು ಅದರಲ್ಲಿದ್ದವು. ರಾಜಶೇಖರರು ತಮ್ಮ ಪತ್ರದಲ್ಲಿ, “ಇಲ್ಲಿ ನೋಡಿ, ನಿಮ್ಮ ಲೇಖನ ಒಂದು ದಿನ ತಡವಾಗಿ ಪ್ರಿಂಟಾಗಿದ್ದರೆ ನೀವು ರಾಮಚಂದ್ರ ಗಾಂಧಿಯವರ ಲೇಖನವನ್ನು ನಕಲು ಮಾಡಿದ್ದೀರಿ ಎಂಬ ಅಪವಾದವನ್ನು ಹೊರಬೇಕಾಗುತ್ತಿತ್ತು.”

ಮಾರ್ಟಿನ್ ಹೈಡೆಗರ್ ಹೇಳುವಂತೆ, “One is ready to die as soon as one is born.” ಸಾವೆಂಬುದು ಹುಟ್ಟಿನೊಂದಿಗೇ ಅಂಟಿಬರುವ ಮಾರಣಾಂತಿಕ ಶಾಪ ಎಂಬುದನ್ನು ತಿಳಿಯದವರು ಯಾರು? ತಿಳಿದು ನಡೆದವರು ಯಾರು? ಈ ಜೀವಜಗತ್ತು ಆಸೆಗಳ ಸ್ವರ್ಗವನ್ನೇ ನಮ್ಮೆದುರು ಹರಡಿದೆ. ಆದರೆ ಸಾವು ಎಲ್ಲ ಸಂಭ್ರಮಗಳನ್ನೂ ಕಸಿಯಲು ಅಲ್ಲೇ ಹೊಂಚಿ ಕೂತಿದೆ. ನಮ್ಮ ಅದಮ್ಯ ಆಸೆಗಳನ್ನು ನಿಷ್ಕರುಣ ಅಸಡ್ಡೆಯಿಂದ ತಿರಸ್ಕರಿಸುತ್ತದೆ ಎಂದಾದರೆ ಈ ಬದುಕಿಗೆ ಏನು ಅರ್ಥ? ಸಾವಿನಿಂದ ಶಪಿತವಾದ ಜೀವ ಸ್ವಹತ್ಯೆ ಮಾಡಿಕೊಳ್ಳದೇ ಬದುಕಿರಬೇಕಾದದ್ದಾದರೂ ಯಾಕೆ ಎಂಬುದೇ ಮೂಲಭೂತ ಪ್ರಶ್ನೆ ಎಂದು ಕಮೂ ಹೇಳುತ್ತಾನೆ. ಗುಡ್ಡದ ಬುಡದಿಂದ ಹಲ್ಲುಕಚ್ಚಿ ಪ್ರಯಾಸಪಟ್ಟು ಬಂಡೆಯೊಂದನ್ನು ದೂಡಿ ತುದಿ ಮುಟ್ಟಿಸಿ ಅದು ಉರುಳಿಬೀಳುವುದನ್ನು ಅಸಹಾಯಕತೆಯಲ್ಲಿ ನೋಡುವ, ಪುನರಪಿ ಬಂಡೆಯನ್ನು ಮೇಲಕ್ಕೆ ತಳ್ಳುವ ಸಿಸಿಫಸ್ ಪುರಾಣವೇ ಕಮೂವಿನ ಪ್ರಕಾರ ನಮ್ಮ ಜೀವನ. ಆದರೆ ಸಿಸಿಫಸ್-ಕಮೂ ಸಿನಿಕರಂತೆ ಕೈಚೆಲ್ಲುವುದಿಲ್ಲ. ಬಂಡೆಯನ್ನು ಮೇಲಕ್ಕೆ ದೂಡುವ ಅವಿರತ ಪ್ರಯಾಸ ಹಾಗೂ ಬಂಡೆ ಉರುಳಿ ಕೆಳಕ್ಕೆ ಬೀಳುವುದನ್ನು ನೋಡುತ್ತ ನಿಂತ ಅಸಹಾಯಕ ಸಾಕ್ಷಿತ್ವದ ನಡುವೆ ಸಂದು ಕಡಿಯುವ ಬೆಳ್ಳಿಯ ಗೆರೆಯೊಂದಿದೆ. ಇನ್ನೊಮ್ಮೆ ಬಂಡೆಯನ್ನು ಮೇಲಕ್ಕೆ ದೂಡಲು ಕೆಳಗಿಳಿಯುವ ಕ್ಷಿಪ್ರ ಬಿಡುವೊಂದಿದೆ. ಅದು ನಿರಾಳ ಕಾಲ. ಅದು ಶಾಪದಿಂದ ಕಸಿದ ನಮ್ಮದೇ ಪಾಲು. ಬಂಡೆಯ ನೂಕಾಟದ ನಡುವೆ ಅರ್ಥ ಹೀಗೆ ಹಠಾತ್ತನೆ ಜಿನುಗುವುದು. ಹಾಗಲ್ಲದೇ, ಪರರ ನೋವು ಸಂಕಟ ಸಾವುಗಳ ಸತತ ಧ್ಯಾನ ರಾಜಶೇಖರರಿಗೆ ಒದಗಲು ಸಾಧ್ಯವಿತ್ತೇ?

(ಎಚ್ ಪಟ್ಟಾಭಿರಾಮ ಸೋಮಯಾಜಿ
104ಸಿ, 4ನೇ ಅಡ್ಡರಸ್ತೆ, ಗಿರಿನಗರ
ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್
ದೇರೇಬೈಲ್ ಕೊಂಚಾಡಿ
ಮಂಗಳೂರು, 575008
ಫೋನ್:9448325705
ಇಮೆಯ್ಲ್:somayajihp@gmail.com)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending