ಲೈಫ್ ಸ್ಟೈಲ್
ಏನಿದು ? ಗಡಿಮಾರಿ..!
- ಡಾ.ಎನ್.ಬಿ.ಶ್ರೀಧರ್,ಶಿವಮೊಗ್ಗ
ಈಗ ಸ್ವಲ್ಪ ದಿನಗಳ ಹಿಂದೆ ಶಿವಮೊಗ್ಗದಿಂದ ಸಾಗರಕ್ಕೆ ಕಾರ್ಯನಿಮಿತ್ತ ಹೋಗುವಾಗ ರಸ್ತೆಯ ಬದಿಯಲ್ಲಿ ಒಂದು ಮರದ ಗಾಡಿ, ಅದಕ್ಕೆ ಎಳೆಯಲು ಎರಡು ಮರದ ರೆಂಬೆಗಳು, ಅದರ ಮೇಲೊಂದು ದೇವರ ದೇವತೆಯ ಮೂರ್ತಿ, ಅದರ ಕೈಲೊಂದು ಖಡ್ಗ, ಹಿಂದುಗಡೆ ಕಸಬರಿಗಳ ಮತ್ತು ಕಸದ ರಾಶಿ ಕಂಡೆ. ಕೆಲವೊಮ್ಮೆ ಗಂಡು ಮತ್ತು ಹೆಣ್ಣು ಇರುವ ಜೋಡಿ ಮೂರ್ತಿಗಳೂ ಸಹ ಕಂಡು ಬಂದವು.
ಒಂದಲ್ಲ ಎರಡಲ್ಲ.. ಶಿವಮೊಗ್ಗದಿಂದ ಸಾಗರದವರೆಗಿನ ರಸ್ತೆಯಲ್ಲೆ ಮೂರು ನಾಲ್ಕು ಈ ತರದ ಪ್ರತಿಕೃತಿಗಳು ಕಂಡು ಬರುತ್ತವೆ. ಬಹಳ ವರ್ಷಗಳಿಂದಲೂ ಇದು ಬಹಳ ಸಹಜವಾಗಿ ಕಂಡು ಬರುವ ಈ ದೃಶ್ಯ ಶಿವಮೊಗ್ಗ-ಹೊಸನಗರ, ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿಯೂ ಕಂಡು ಬರುವುದು ಸಾಮಾನ್ಯ. ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಕಂಡು ಬರುವ ಈ ಆಚರಣೆ ಉತ್ತರ ಕರ್ನಾಟಕದಲ್ಲಿ ಕಾಣಸಿಗದು.
ಏನಿದರ ಅರ್ಥ ? ಅಂತ ನೋಡಲು ಹೋದಾಗ ಇದರ ಹೆಸರು “ಗಡಿಮಾರಿ” ಎಂದು ತಿಳಿದು ಬಂದಿತು. ಊರಲ್ಲಿ ಯಾವುದಾದರೂ ಸೋಂಕು ರೋಗ ಕಂಡು ಬಂದರೆ ಅಥವಾ ಇತರ ದುರ್ಘಟನೆಗಳು ನಡೆದರೆ ಆ ಘಟನೆಗೆ ಕಾರಣವಾದ ದುಷ್ಟ ಶಕ್ತಿಯನ್ನು ಊರ ಗಡಿ ದಾಟಿಸಲು ಈ ಪದ್ಧತಿ ಇದೆ ಎಂದು ಹಲವು ಹಿರಿಯರು ಹೇಳಿದರು.
ಈ ಬಗ್ಗೆ ಸದ್ಯದ ಯುವಕರಿಗೆ ಇರುವ ಮಾಹಿತಿ ಅಷ್ಟಕ್ಕಷ್ಟೇ. ಒಂದು ಊರಿನ ಗಡಿ ದಾಟಿಸುವಾಗ ಆ ಮೂರ್ತಿಯ ಜೊತೆಗೆ ಊರಲ್ಲಿರುವ ಕಸ, ಕಡ್ಡಿ ಇತ್ಯಾದಿಗಳನ್ನು ಹೇರಿಕೊಂಡು ಮತ್ತೊಂದು ಊರಿನ ಗಡಿಯ ಹತ್ತಿರ ಬಂದರೆ ಅವರ ಕೆಲಸ ಮುಗಿದಂತೆ.
ಮರದಿಂದ ತಯಾರಿಸಿದ ಬೊಂಬೆಗೆ ಕೆಂಪು, ಬಿಳಿ ಹಳದಿ ಮತ್ತು ಕಪ್ಪು ಬಣ್ಣ ಬಳಿದು ಅದನ್ನು ಚಿಕ್ಕ ಮರದ ಕೈಗಾಡಿಯಲ್ಲಿ ಕುಳ್ಳಿರಿಸಿ ಬೊಂಬೆಯ ಕುತ್ತಿಗೆಗೆ ಹೂವಿನ ಹಾರ ಹಾಕಿ ಪೂಜೆ ಮಾಡುತ್ತಾರೆ. ನಂತರ ಬೊಂಬೆಗೆ ಊದುಬತ್ತಿ ಇಟ್ಟು, ಆರತಿ ಬೆಳಗಿ ಊರಿನ ಜನರೆಲ್ಲ ಮಾರಿಯನ್ನು ಕೈಗಾಡಿಯ ಮುಖೇನ ದೂಡಿಕೊಂಡು ಬಂದು ತಮ್ಮ ಗ್ರಾಮದ ಗಡಿ ದಾಟಿಸಿ ಬಿಡುವುದು ಸಂಪ್ರದಾಯ.
ಕೆಲವೊಮ್ಮೆ ಮುಂದಿನ ಊರಿಗೆ ಒಯ್ಯದಿದ್ದರೆ, ಇದು ಇಟ್ಟಲ್ಲೇ ಕೊಳೆತು ಅಥವಾ ಗೆದ್ದಲು ಹಿಡಿದು ಮಣ್ಣು ಸೇರಲು ಹಲವಾರು ವರ್ಷಗಳು ಬೇಕಾಗುತ್ತವೆ. ಹೀಗಾಗಿ ಸಾಗರ, ತೀರ್ಥಹಳ್ಳಿಯ ರಸ್ತೆಯ ಇಕ್ಕೆಲಗಳಲ್ಲಿ ಇಂಥ ನೂರಾರು ಬೀದಿ ದೇವರು ಯಾವಾಗಲೂ ಕಂಡುಬರುತ್ತವೆ.
ರಾಜ್ಯದ ನಾನಾ ಭಾಗಗಳಲ್ಲಿ ನಾನಾ ರೀತಿಯ ಆಚರಣೆ, ನಂಬಿಕೆ ಈಗಲೂ ಜೀವಂತ. ಈ ನಂಬಿಕೆ ಅನ್ನುವುದು ಹಾಗೆ. ಅದು ಎಲ್ಲಿ, ಹೇಗೆ ಹುಟ್ಟಿಕೊಳ್ಳುತ್ತದೆಯೋ ಗೊತ್ತಿಲ್ಲ. ಅದು ಸಂಪ್ರದಾಯ ಅಥವಾ ಆಚರಣೆ ರೂಪದಲ್ಲಿ ಅವತರಿಸುತ್ತದೆ. ಇಂಥದ್ದೇ ಭಕ್ತಿಯ ಈ ಗಡಿ ಮಾರಿ ದೇವರು!!
ಈ ಗಡಿಮಾರಿಯ ಉಗಮಕ್ಕೆ ತರಹೆವಾರಿ ಕಥೆಗಳಿದ್ದರೂ ಯಾರೂ ಅಷ್ಟು ನಿಖರವಾದ ಮಾಹಿತಿ ನೀಡಲಿಲ್ಲ. ಸಾಗರ ಮತ್ತು ತೀರ್ಥಹಳ್ಳಿಯ ಹಳೆಯ ತಲೆಮಾರಿನ ರೈತರ ಪ್ರಕಾರ, ಇದು ಊರಿನ ಮಾರಿ ದೇವತೆಯಂತೆ. ಪ್ರತೀ ವರ್ಷ ಮಳೆಗಾಲಕ್ಕೂ ಮುನ್ನ ಹಳ್ಳಿಯ ಜನರು ಖಾಯಿಲೆ, ಕೋಟಲೆ, ಕಷ್ಟ-ನಷ್ಟ, ಬಡತನ, ದಾರಿದ್ರ್ಯಡಕ್ಕೆ ಈಡಾಗುತ್ತಿದ್ದರಂತೆ. ಹಸುಗಳು ಖಾಯಿಲೆ ಬೀಳುತ್ತಿದ್ದವಂತೆ.
ಇದನ್ನೂ ಓದಿ | ದಾವಣಗೆರೆ | ಫೆ.24 ರಂದು ಮಹಾನಗರಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ
ಇದಕ್ಕೆಲ್ಲ ಊರ ಮಾರಿಯ ಮುನಿಸೇ ಕಾರಣ ಎಂದುಕೊಂಡ ಹಳ್ಳಿಗರು ಊರಿನ ಮಾರಿಯನ್ನು ಊರಿನ ಗಡಿ ದಾಟಿಸಿ ಬರಲು ಇಂಥ ಆಚರಣೆಯನ್ನು ಶುರುವಿಟ್ಟುಕೊಂಡರಂತೆ. ಇನ್ನು ಹಲವಾರು ಅಂತೆ ಕಂತೆಗಳ ಬೊಂತೆಯೇ ಈ ನಂಬಿಕೆಯ ಹಿಂದಿವೆ.
ಅವರವರ ನಂಬಿಕೆಯಂತೆ ಪೂಜೆಗೊಂಡ ಈ “ಗಡಿಮಾರಿ” ಯನ್ನು ಊರು ದಾಟಿಸುವ ಪದ್ಧತಿಯೇ ವಿಶಿಷ್ಟ. ವಿವಿಧ ವಾಧ್ಯಗಳು, ಕೆಲವೊಮ್ಮೆ ಡೊಲ್ಲು, ತಮಟೆ ಮೆರವಣಿಗೆಯೊಂದಿಗೆ ಹೊರಟ ಮಂದಿ, ಗಡಿಮಾರಿಯನ್ನು ತಮ್ಮ ಊರಿನ ಗಡಿದಾಟಿಸಿ, ಮುಂದಿನ ಊರಿನ ಗಡಿಗೆ ಸೇರಿಸುತ್ತಾರೆ. ಹೀಗೆ ಗಡಿಮಾರಿ ಸಾಗಿ ಹೋದಂತೆ, ಹಿಂದೆ ದಾರಿಯುದ್ದಕ್ಕೂ, ಹಳೇ ಪೊರಕೆ, ಮೊರ, ಚಾಪೆ, ತಟ್ಟಿ, ಬುಟ್ಟಿ, ಒಡೆದ ಮಡಿಕೆ-ಕುಡಿಕೆ, ಹಳೆಯ ಬಟ್ಟೆಗಳನ್ನು ಎಸೆಯುತ್ತ ಹೋಗುತ್ತಾರೆ.
ಸ್ವಲ್ಪ ದಿನಗಳ ನಂತರ ತಮ್ಮ ಗಡಿಯಲ್ಲಿ ಕುಳಿತ ಈ ಗಡಿಮಾರಿಯನ್ನು ಮತ್ತೊಂದು ಗ್ರಾಮದ ಜನರು ತಮ್ಮ ಊರಿನಲ್ಲಿ ಸಂಗ್ರಹವಾದ ಹಳೆಯ ವಸ್ತುಗಳನ್ನು ಸೇರಿಸಿ ತಮ್ಮ ಊರಿಗೆ ಬಂದ ಗಡಿಮಾರಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ತಮ್ಮ ಮುಂದಿನ ಊರಿನ ಎಲ್ಲೆಗೆ ದಾಟಿಸುತ್ತಾರೆ.
ಹೀಗೆ ಎಲ್ಲೆಯಿಂದ ಎಲ್ಲೆಗೆ ಸಂಚಾರಿಸುತ್ತ ಹೋಗುವ ಗಡಿಮಾರಿಯನ್ನು ಕೊನೆಗೆ ಯಾವುದಾದರೊಂದು ನೀರಿರುವ ಜಾಗದಲ್ಲಿ ವಿಸರ್ಜಿಸುತ್ತಾರೆ. ಪ್ರತಿ ಊರಲ್ಲಿ ಕಾಯಿಲೆ ಕಸಾಲೆ ಕಷ್ಟ ಇದ್ದಾಗ ಈ “ಗಡಿಮಾರಿ” ದೇವರನ್ನು ತಯಾರಿಸಿ ಅವರ ಊರಿನ ಗಡಿ ದಾಟಿಸುತ್ತಾರೆ. ಅದಕ್ಕಾಗಿಯೇ ಹಲವಾರು ಗಡಿಮಾರಿಗಳು ನಮಗೆ ರಸ್ತೆಯ ಗುಂಟ ಕಾಣಲು ಸಿಗುವುದು.
ಪ್ರತಿಯೊಂದು ಆಚರಣೆಗೂ ಅದರದೇ ಆದ ಹಿನ್ನೆಲೆ ಇರುತ್ತದೆ. ಗಡಿಮಾರಿಯನ್ನು ಗಡಿಪಾರು ಮಾಡುವ ವಿಶಿಷ್ಟ ಆಚರಣೆಯ ಕಾರಣದಿಂದ, ಗ್ರಾಮವನ್ನು ಶುದ್ಧೀಕರಿಸುವ ಕ್ರಿಯೆ ಮೊದಲಾಗಿ, ಜನರು ತಮ್ಮ ಮನೆಯಲ್ಲಿರುವ ಹಳೆಯ ಸಾಮಾನುಗಳನ್ನು ಹೊರಗೆ ಹಾಕುವುದರಿಂದ, ಊರೆಲ್ಲ ಸ್ವಚ್ಛವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಕಡಿಮೆಯಾಗುವುದೆಂಬುದು ಇದರ ಹಿಂದಿನ ಗೂಢ ಮರ್ಮವಿರಬಹುದೇನೋ..!
ಈಗಲೂ ಅಲ್ಲಿ ಇಲ್ಲಿ ಇಂಥ ಆಚರಣೆಗಳು, ನಂಬಿಕೆಗಳು, ಆರಾಧನೆಗಳು ಇದ್ದರೂ, ಅಂದಿನ ಆರಾಧನಾ ವಿಧಾನಗಳಲ್ಲಿ ಜನಪದರಿಗಿದ್ದ ತನ್ಮಯತೆ, ಸಮರ್ಪಣಾ ಭಾವಗಳನ್ನು ಪ್ರಸ್ತುತ ಕಾಣಲು ಸಾಧ್ಯವಿಲ್ಲ. ಕೆಲವೊಮ್ಮೆ ರಸ್ತೆಯಲ್ಲಿ ಹೋಗುತ್ತಿರುವ ವಾಹನ ಸವಾರನ್ನು ಅಡ್ಡಗಟ್ಟಿ ಒತ್ತಾಯದಿಂದ ಹಣ ವಸೂಲಿ ಮಾಡಿ “ಎಣ್ಣೆ” ಹಾಕುವ ವಸೂಲಿ ದಂಧೆಯಾಗಿಯೂ ಗೋಚರಿಸುತ್ತದೆ.
ಇನ್ನು ಕೆಲವು ವರ್ಷ ಕಳೆದರೆ ಈ ಗಡಿಮಾರಿಗಳು ಗಡಿ ದಾಟಿದರೂ ಆಶ್ಚರ್ಯವಿಲ್ಲ! ಈ ಗಡಿಮಾರಿಯನ್ನು ಊರಿಂದ ಹೊರಗಟ್ಟುವ ದಿನ ಊರಿನ ಗಡಿಯಲ್ಲಿ ಕೋಳಿಯನ್ನು ಬಲಿಕೊಡುವ ಸಂಪ್ರದಾಯವೂ ಚಾಲ್ತಿಯಲ್ಲಿದೆ. ಇಲ್ಲಿ ಬಲಿ ನೀಡಿದ ಕೋಳಿಗಳನ್ನು ಹಳ್ಳಿಗರು ತಂತಮ್ಮ ಮನೆಗೆ ಕೊಂಡೊಯ್ದು ಹಬ್ಬದ ಅಡುಗೆ ಮಾಡಿ ಸವಿಯುತ್ತಾರೆ.
ಗಡಿಮಾರಿ ಓಡಿಸುವ ದಿನ ಮನೆಗೆ ನೆಂಟರಿಷ್ಟರು, ಬಂಧು ಬಳಗ ಬರುವ ವಾಡಿಕೆಯೂ ಇಡೀ ಊರಿನಲ್ಲಿ ಇದೊಂಥರಾ ಜಾತ್ರೆಯ ವಾತಾವರಣ ಸಷ್ಟಿಸುತ್ತದೆ. ಇದೊಂದು ಹಳ್ಳಿ ಜನರ ದುಗುಡ ನಿವಾರಣೆಯ ದಾರಿಯಾಗಿದೆ ಎಂದರು ಸಹ ಆಶ್ಚರ್ಯವಿಲ್ಲ..!
ಈ ಗಡಿಮಾರಿ ದೇವರು ಘಟ್ಟದ ಮೇಲಿನವರ ನಂಬಿಕೆಯಾದರೂ ಬೊಂಬೆ ತಯಾರಿಯಲ್ಲಿ ಕಲಾವಿದನ ಕೈಚಳಕ ಗಮನ ಸೆಳೆಯದೇ ಇರದು. ಬೊಂಬೆ ಕೆತ್ತನೆಯಲ್ಲಿ ನೈಪುಣ್ಯ ತೋರಿಸುವ ಕಲಾವಿದ, ಅದರ ಮುಖ, ಹುಬ್ಬು, ಕಣ್ಣು, ತುಟಿ, ಗಾಂಭೀರ್ಯ ಎಲ್ಲವನ್ನೂ ಚಿತ್ರಿಸಿದ ಚಂದಕ್ಕೆ ಬೆರಗಾಗಲೇಬೇಕು. ತಲೆತಲಾಂತರಗಳು ಉರುಳಿದರೂ ಇಂದಿಗೂ ಬೀದಿ ದೇವರು ಅದರದ್ದೇ ಆದ ಗತ್ತು-ಗೈರತ್ತುಗಳಿಂದ ಮಲೆನಾಡಿನ ಜನರ ಆರಾಧ್ಯ ದೇವತೆಯಾಗಿ ಉಳಿದಿದೆ.
ಇತ್ತೀಚೆಗೆ ಈ ಮೂರ್ತಿಗಳನ್ನು ತಯಾರಿಸುವವರು ಸಿಗದೇ, ಪೂರ್ತಿ ಕಸುಬು ಬಾರದವರು ತಯಾರಿಸುವುದರಿಂದ ಇವು ವಿಕಾರವಾಗಿ ಭೂತದಂತೆ ಕಾಣಿಸುವುದೂ ಇದೆ.
ಅದರಲ್ಲೂ ಪಶುಗಳಲ್ಲಿ ಸಾಮಾನ್ಯವಾಗಿ ಬರುವ ಕಾಲುಬಾಯಿ ಜ್ವರವೆಂಬ ವೈರಾಣು ಕಾಯಿಲೆ ಬಂದಾಗ ಈ ರೀತಿ ಗಡಿಮಾರಿಗಳು ಊರಿಂದ ಊರಿನ ಗಡಿಯಲ್ಲಿ ಕಂಡು ಬರುವುದು ಸಾಮಾನ್ಯ.
ಇದೊಂದು ಗ್ರಾಮೀಣ ಜನರ ಮನಸ್ಸಿನ ದುಗುಡ ತುಮುಲವನ್ನು ಹಗುರಗೊಳಿಸಲು ಇರುವ ಸಂಪ್ರದಾಯ ಹಾಗೇ ಇರಲಿ ಎಂದು ಸ್ವೀಕರಿಸಬೇಕೋ ಅಥವಾ ರೋಗಗಳನ್ನು ನಿಯಂತ್ರಿಸಲು ಉತ್ತಮ ಲಸಿಕೆಗಳು, ಉತ್ತಮ ತಂತ್ರಜ್ಞಾನವಿರುವ ಈ ಆಧುನಿಕ ಯುಗದಲ್ಲಿ ಇಂತಹ ಆಚರಣೆ ಎಷ್ಟರ ಮಟ್ಟಿಗೆ ಸರಿ ?! ಇದು ಮೌಢ್ಯವಲ್ಲವೇ? ಎಂಬ ಪ್ರಶ್ನೆಗಳಿಗೆಲ್ಲಾ ಓದುಗರೇ ಉತ್ತರಿಸಬೇಕು.!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.
http://Visit : www.suddidina.com
3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?
ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.
ಉದಾಹರಣೆ:
ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.
ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!
ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.
ಖಾತೆದಾರರು ಏನು ಮಾಡಬೇಕು?
1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.
2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.
3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

ದಿನದ ಸುದ್ದಿ
ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್ಗಳಾದ ಓಲಾ, ಉಬರ್, ರ್ಯಾಪಿಡೋ ನಂತಹ ಆ್ಯಪ್ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
http://Visit : www.suddidina.com
ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.
ನಮ್ಮ ಬಿಎಂಟಿಸಿ 2.0′ ಆ್ಯಪ್ನಲ್ಲಿ ಏನಿದೆ ಹೊಸತು?
ಖಾಸಗಿ ಆ್ಯಪ್ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್ನಲ್ಲಿ ಬಿಎಂಟಿಸಿ ನೆಟ್ವರ್ಕ್ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್ಗಳು ಸೇರಿದಂತೆ ಒಟ್ಟು 6,938 ಬಸ್ಗಳಿವೆ. ಪ್ರತಿದಿನ ಸರಾಸರಿ 6,200 ಬಸ್ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.
ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ:
ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
200 ಹೊಸ ಮಿನಿ ಬಸ್ಗಳ ಖರೀದಿ:
ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:
ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್ಗಳ ಪೈಕಿ 200 ಮಿನಿ ಎಸಿ ಇ-ಬಸ್ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

ದಿನದ ಸುದ್ದಿ
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.
http://Visit : www.suddidina.com
ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.
ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.
ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.
ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.
ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ2 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್


