ಲೈಫ್ ಸ್ಟೈಲ್
ಏನಿದು ? ಗಡಿಮಾರಿ..!
- ಡಾ.ಎನ್.ಬಿ.ಶ್ರೀಧರ್,ಶಿವಮೊಗ್ಗ
ಈಗ ಸ್ವಲ್ಪ ದಿನಗಳ ಹಿಂದೆ ಶಿವಮೊಗ್ಗದಿಂದ ಸಾಗರಕ್ಕೆ ಕಾರ್ಯನಿಮಿತ್ತ ಹೋಗುವಾಗ ರಸ್ತೆಯ ಬದಿಯಲ್ಲಿ ಒಂದು ಮರದ ಗಾಡಿ, ಅದಕ್ಕೆ ಎಳೆಯಲು ಎರಡು ಮರದ ರೆಂಬೆಗಳು, ಅದರ ಮೇಲೊಂದು ದೇವರ ದೇವತೆಯ ಮೂರ್ತಿ, ಅದರ ಕೈಲೊಂದು ಖಡ್ಗ, ಹಿಂದುಗಡೆ ಕಸಬರಿಗಳ ಮತ್ತು ಕಸದ ರಾಶಿ ಕಂಡೆ. ಕೆಲವೊಮ್ಮೆ ಗಂಡು ಮತ್ತು ಹೆಣ್ಣು ಇರುವ ಜೋಡಿ ಮೂರ್ತಿಗಳೂ ಸಹ ಕಂಡು ಬಂದವು.
ಒಂದಲ್ಲ ಎರಡಲ್ಲ.. ಶಿವಮೊಗ್ಗದಿಂದ ಸಾಗರದವರೆಗಿನ ರಸ್ತೆಯಲ್ಲೆ ಮೂರು ನಾಲ್ಕು ಈ ತರದ ಪ್ರತಿಕೃತಿಗಳು ಕಂಡು ಬರುತ್ತವೆ. ಬಹಳ ವರ್ಷಗಳಿಂದಲೂ ಇದು ಬಹಳ ಸಹಜವಾಗಿ ಕಂಡು ಬರುವ ಈ ದೃಶ್ಯ ಶಿವಮೊಗ್ಗ-ಹೊಸನಗರ, ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯಲ್ಲಿಯೂ ಕಂಡು ಬರುವುದು ಸಾಮಾನ್ಯ. ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಕಂಡು ಬರುವ ಈ ಆಚರಣೆ ಉತ್ತರ ಕರ್ನಾಟಕದಲ್ಲಿ ಕಾಣಸಿಗದು.
ಏನಿದರ ಅರ್ಥ ? ಅಂತ ನೋಡಲು ಹೋದಾಗ ಇದರ ಹೆಸರು “ಗಡಿಮಾರಿ” ಎಂದು ತಿಳಿದು ಬಂದಿತು. ಊರಲ್ಲಿ ಯಾವುದಾದರೂ ಸೋಂಕು ರೋಗ ಕಂಡು ಬಂದರೆ ಅಥವಾ ಇತರ ದುರ್ಘಟನೆಗಳು ನಡೆದರೆ ಆ ಘಟನೆಗೆ ಕಾರಣವಾದ ದುಷ್ಟ ಶಕ್ತಿಯನ್ನು ಊರ ಗಡಿ ದಾಟಿಸಲು ಈ ಪದ್ಧತಿ ಇದೆ ಎಂದು ಹಲವು ಹಿರಿಯರು ಹೇಳಿದರು.
ಈ ಬಗ್ಗೆ ಸದ್ಯದ ಯುವಕರಿಗೆ ಇರುವ ಮಾಹಿತಿ ಅಷ್ಟಕ್ಕಷ್ಟೇ. ಒಂದು ಊರಿನ ಗಡಿ ದಾಟಿಸುವಾಗ ಆ ಮೂರ್ತಿಯ ಜೊತೆಗೆ ಊರಲ್ಲಿರುವ ಕಸ, ಕಡ್ಡಿ ಇತ್ಯಾದಿಗಳನ್ನು ಹೇರಿಕೊಂಡು ಮತ್ತೊಂದು ಊರಿನ ಗಡಿಯ ಹತ್ತಿರ ಬಂದರೆ ಅವರ ಕೆಲಸ ಮುಗಿದಂತೆ.
ಮರದಿಂದ ತಯಾರಿಸಿದ ಬೊಂಬೆಗೆ ಕೆಂಪು, ಬಿಳಿ ಹಳದಿ ಮತ್ತು ಕಪ್ಪು ಬಣ್ಣ ಬಳಿದು ಅದನ್ನು ಚಿಕ್ಕ ಮರದ ಕೈಗಾಡಿಯಲ್ಲಿ ಕುಳ್ಳಿರಿಸಿ ಬೊಂಬೆಯ ಕುತ್ತಿಗೆಗೆ ಹೂವಿನ ಹಾರ ಹಾಕಿ ಪೂಜೆ ಮಾಡುತ್ತಾರೆ. ನಂತರ ಬೊಂಬೆಗೆ ಊದುಬತ್ತಿ ಇಟ್ಟು, ಆರತಿ ಬೆಳಗಿ ಊರಿನ ಜನರೆಲ್ಲ ಮಾರಿಯನ್ನು ಕೈಗಾಡಿಯ ಮುಖೇನ ದೂಡಿಕೊಂಡು ಬಂದು ತಮ್ಮ ಗ್ರಾಮದ ಗಡಿ ದಾಟಿಸಿ ಬಿಡುವುದು ಸಂಪ್ರದಾಯ.
ಕೆಲವೊಮ್ಮೆ ಮುಂದಿನ ಊರಿಗೆ ಒಯ್ಯದಿದ್ದರೆ, ಇದು ಇಟ್ಟಲ್ಲೇ ಕೊಳೆತು ಅಥವಾ ಗೆದ್ದಲು ಹಿಡಿದು ಮಣ್ಣು ಸೇರಲು ಹಲವಾರು ವರ್ಷಗಳು ಬೇಕಾಗುತ್ತವೆ. ಹೀಗಾಗಿ ಸಾಗರ, ತೀರ್ಥಹಳ್ಳಿಯ ರಸ್ತೆಯ ಇಕ್ಕೆಲಗಳಲ್ಲಿ ಇಂಥ ನೂರಾರು ಬೀದಿ ದೇವರು ಯಾವಾಗಲೂ ಕಂಡುಬರುತ್ತವೆ.
ರಾಜ್ಯದ ನಾನಾ ಭಾಗಗಳಲ್ಲಿ ನಾನಾ ರೀತಿಯ ಆಚರಣೆ, ನಂಬಿಕೆ ಈಗಲೂ ಜೀವಂತ. ಈ ನಂಬಿಕೆ ಅನ್ನುವುದು ಹಾಗೆ. ಅದು ಎಲ್ಲಿ, ಹೇಗೆ ಹುಟ್ಟಿಕೊಳ್ಳುತ್ತದೆಯೋ ಗೊತ್ತಿಲ್ಲ. ಅದು ಸಂಪ್ರದಾಯ ಅಥವಾ ಆಚರಣೆ ರೂಪದಲ್ಲಿ ಅವತರಿಸುತ್ತದೆ. ಇಂಥದ್ದೇ ಭಕ್ತಿಯ ಈ ಗಡಿ ಮಾರಿ ದೇವರು!!
ಈ ಗಡಿಮಾರಿಯ ಉಗಮಕ್ಕೆ ತರಹೆವಾರಿ ಕಥೆಗಳಿದ್ದರೂ ಯಾರೂ ಅಷ್ಟು ನಿಖರವಾದ ಮಾಹಿತಿ ನೀಡಲಿಲ್ಲ. ಸಾಗರ ಮತ್ತು ತೀರ್ಥಹಳ್ಳಿಯ ಹಳೆಯ ತಲೆಮಾರಿನ ರೈತರ ಪ್ರಕಾರ, ಇದು ಊರಿನ ಮಾರಿ ದೇವತೆಯಂತೆ. ಪ್ರತೀ ವರ್ಷ ಮಳೆಗಾಲಕ್ಕೂ ಮುನ್ನ ಹಳ್ಳಿಯ ಜನರು ಖಾಯಿಲೆ, ಕೋಟಲೆ, ಕಷ್ಟ-ನಷ್ಟ, ಬಡತನ, ದಾರಿದ್ರ್ಯಡಕ್ಕೆ ಈಡಾಗುತ್ತಿದ್ದರಂತೆ. ಹಸುಗಳು ಖಾಯಿಲೆ ಬೀಳುತ್ತಿದ್ದವಂತೆ.
ಇದನ್ನೂ ಓದಿ | ದಾವಣಗೆರೆ | ಫೆ.24 ರಂದು ಮಹಾನಗರಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ
ಇದಕ್ಕೆಲ್ಲ ಊರ ಮಾರಿಯ ಮುನಿಸೇ ಕಾರಣ ಎಂದುಕೊಂಡ ಹಳ್ಳಿಗರು ಊರಿನ ಮಾರಿಯನ್ನು ಊರಿನ ಗಡಿ ದಾಟಿಸಿ ಬರಲು ಇಂಥ ಆಚರಣೆಯನ್ನು ಶುರುವಿಟ್ಟುಕೊಂಡರಂತೆ. ಇನ್ನು ಹಲವಾರು ಅಂತೆ ಕಂತೆಗಳ ಬೊಂತೆಯೇ ಈ ನಂಬಿಕೆಯ ಹಿಂದಿವೆ.
ಅವರವರ ನಂಬಿಕೆಯಂತೆ ಪೂಜೆಗೊಂಡ ಈ “ಗಡಿಮಾರಿ” ಯನ್ನು ಊರು ದಾಟಿಸುವ ಪದ್ಧತಿಯೇ ವಿಶಿಷ್ಟ. ವಿವಿಧ ವಾಧ್ಯಗಳು, ಕೆಲವೊಮ್ಮೆ ಡೊಲ್ಲು, ತಮಟೆ ಮೆರವಣಿಗೆಯೊಂದಿಗೆ ಹೊರಟ ಮಂದಿ, ಗಡಿಮಾರಿಯನ್ನು ತಮ್ಮ ಊರಿನ ಗಡಿದಾಟಿಸಿ, ಮುಂದಿನ ಊರಿನ ಗಡಿಗೆ ಸೇರಿಸುತ್ತಾರೆ. ಹೀಗೆ ಗಡಿಮಾರಿ ಸಾಗಿ ಹೋದಂತೆ, ಹಿಂದೆ ದಾರಿಯುದ್ದಕ್ಕೂ, ಹಳೇ ಪೊರಕೆ, ಮೊರ, ಚಾಪೆ, ತಟ್ಟಿ, ಬುಟ್ಟಿ, ಒಡೆದ ಮಡಿಕೆ-ಕುಡಿಕೆ, ಹಳೆಯ ಬಟ್ಟೆಗಳನ್ನು ಎಸೆಯುತ್ತ ಹೋಗುತ್ತಾರೆ.
ಸ್ವಲ್ಪ ದಿನಗಳ ನಂತರ ತಮ್ಮ ಗಡಿಯಲ್ಲಿ ಕುಳಿತ ಈ ಗಡಿಮಾರಿಯನ್ನು ಮತ್ತೊಂದು ಗ್ರಾಮದ ಜನರು ತಮ್ಮ ಊರಿನಲ್ಲಿ ಸಂಗ್ರಹವಾದ ಹಳೆಯ ವಸ್ತುಗಳನ್ನು ಸೇರಿಸಿ ತಮ್ಮ ಊರಿಗೆ ಬಂದ ಗಡಿಮಾರಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ತಮ್ಮ ಮುಂದಿನ ಊರಿನ ಎಲ್ಲೆಗೆ ದಾಟಿಸುತ್ತಾರೆ.
ಹೀಗೆ ಎಲ್ಲೆಯಿಂದ ಎಲ್ಲೆಗೆ ಸಂಚಾರಿಸುತ್ತ ಹೋಗುವ ಗಡಿಮಾರಿಯನ್ನು ಕೊನೆಗೆ ಯಾವುದಾದರೊಂದು ನೀರಿರುವ ಜಾಗದಲ್ಲಿ ವಿಸರ್ಜಿಸುತ್ತಾರೆ. ಪ್ರತಿ ಊರಲ್ಲಿ ಕಾಯಿಲೆ ಕಸಾಲೆ ಕಷ್ಟ ಇದ್ದಾಗ ಈ “ಗಡಿಮಾರಿ” ದೇವರನ್ನು ತಯಾರಿಸಿ ಅವರ ಊರಿನ ಗಡಿ ದಾಟಿಸುತ್ತಾರೆ. ಅದಕ್ಕಾಗಿಯೇ ಹಲವಾರು ಗಡಿಮಾರಿಗಳು ನಮಗೆ ರಸ್ತೆಯ ಗುಂಟ ಕಾಣಲು ಸಿಗುವುದು.
ಪ್ರತಿಯೊಂದು ಆಚರಣೆಗೂ ಅದರದೇ ಆದ ಹಿನ್ನೆಲೆ ಇರುತ್ತದೆ. ಗಡಿಮಾರಿಯನ್ನು ಗಡಿಪಾರು ಮಾಡುವ ವಿಶಿಷ್ಟ ಆಚರಣೆಯ ಕಾರಣದಿಂದ, ಗ್ರಾಮವನ್ನು ಶುದ್ಧೀಕರಿಸುವ ಕ್ರಿಯೆ ಮೊದಲಾಗಿ, ಜನರು ತಮ್ಮ ಮನೆಯಲ್ಲಿರುವ ಹಳೆಯ ಸಾಮಾನುಗಳನ್ನು ಹೊರಗೆ ಹಾಕುವುದರಿಂದ, ಊರೆಲ್ಲ ಸ್ವಚ್ಛವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಕಡಿಮೆಯಾಗುವುದೆಂಬುದು ಇದರ ಹಿಂದಿನ ಗೂಢ ಮರ್ಮವಿರಬಹುದೇನೋ..!
ಈಗಲೂ ಅಲ್ಲಿ ಇಲ್ಲಿ ಇಂಥ ಆಚರಣೆಗಳು, ನಂಬಿಕೆಗಳು, ಆರಾಧನೆಗಳು ಇದ್ದರೂ, ಅಂದಿನ ಆರಾಧನಾ ವಿಧಾನಗಳಲ್ಲಿ ಜನಪದರಿಗಿದ್ದ ತನ್ಮಯತೆ, ಸಮರ್ಪಣಾ ಭಾವಗಳನ್ನು ಪ್ರಸ್ತುತ ಕಾಣಲು ಸಾಧ್ಯವಿಲ್ಲ. ಕೆಲವೊಮ್ಮೆ ರಸ್ತೆಯಲ್ಲಿ ಹೋಗುತ್ತಿರುವ ವಾಹನ ಸವಾರನ್ನು ಅಡ್ಡಗಟ್ಟಿ ಒತ್ತಾಯದಿಂದ ಹಣ ವಸೂಲಿ ಮಾಡಿ “ಎಣ್ಣೆ” ಹಾಕುವ ವಸೂಲಿ ದಂಧೆಯಾಗಿಯೂ ಗೋಚರಿಸುತ್ತದೆ.
ಇನ್ನು ಕೆಲವು ವರ್ಷ ಕಳೆದರೆ ಈ ಗಡಿಮಾರಿಗಳು ಗಡಿ ದಾಟಿದರೂ ಆಶ್ಚರ್ಯವಿಲ್ಲ! ಈ ಗಡಿಮಾರಿಯನ್ನು ಊರಿಂದ ಹೊರಗಟ್ಟುವ ದಿನ ಊರಿನ ಗಡಿಯಲ್ಲಿ ಕೋಳಿಯನ್ನು ಬಲಿಕೊಡುವ ಸಂಪ್ರದಾಯವೂ ಚಾಲ್ತಿಯಲ್ಲಿದೆ. ಇಲ್ಲಿ ಬಲಿ ನೀಡಿದ ಕೋಳಿಗಳನ್ನು ಹಳ್ಳಿಗರು ತಂತಮ್ಮ ಮನೆಗೆ ಕೊಂಡೊಯ್ದು ಹಬ್ಬದ ಅಡುಗೆ ಮಾಡಿ ಸವಿಯುತ್ತಾರೆ.
ಗಡಿಮಾರಿ ಓಡಿಸುವ ದಿನ ಮನೆಗೆ ನೆಂಟರಿಷ್ಟರು, ಬಂಧು ಬಳಗ ಬರುವ ವಾಡಿಕೆಯೂ ಇಡೀ ಊರಿನಲ್ಲಿ ಇದೊಂಥರಾ ಜಾತ್ರೆಯ ವಾತಾವರಣ ಸಷ್ಟಿಸುತ್ತದೆ. ಇದೊಂದು ಹಳ್ಳಿ ಜನರ ದುಗುಡ ನಿವಾರಣೆಯ ದಾರಿಯಾಗಿದೆ ಎಂದರು ಸಹ ಆಶ್ಚರ್ಯವಿಲ್ಲ..!
ಈ ಗಡಿಮಾರಿ ದೇವರು ಘಟ್ಟದ ಮೇಲಿನವರ ನಂಬಿಕೆಯಾದರೂ ಬೊಂಬೆ ತಯಾರಿಯಲ್ಲಿ ಕಲಾವಿದನ ಕೈಚಳಕ ಗಮನ ಸೆಳೆಯದೇ ಇರದು. ಬೊಂಬೆ ಕೆತ್ತನೆಯಲ್ಲಿ ನೈಪುಣ್ಯ ತೋರಿಸುವ ಕಲಾವಿದ, ಅದರ ಮುಖ, ಹುಬ್ಬು, ಕಣ್ಣು, ತುಟಿ, ಗಾಂಭೀರ್ಯ ಎಲ್ಲವನ್ನೂ ಚಿತ್ರಿಸಿದ ಚಂದಕ್ಕೆ ಬೆರಗಾಗಲೇಬೇಕು. ತಲೆತಲಾಂತರಗಳು ಉರುಳಿದರೂ ಇಂದಿಗೂ ಬೀದಿ ದೇವರು ಅದರದ್ದೇ ಆದ ಗತ್ತು-ಗೈರತ್ತುಗಳಿಂದ ಮಲೆನಾಡಿನ ಜನರ ಆರಾಧ್ಯ ದೇವತೆಯಾಗಿ ಉಳಿದಿದೆ.
ಇತ್ತೀಚೆಗೆ ಈ ಮೂರ್ತಿಗಳನ್ನು ತಯಾರಿಸುವವರು ಸಿಗದೇ, ಪೂರ್ತಿ ಕಸುಬು ಬಾರದವರು ತಯಾರಿಸುವುದರಿಂದ ಇವು ವಿಕಾರವಾಗಿ ಭೂತದಂತೆ ಕಾಣಿಸುವುದೂ ಇದೆ.
ಅದರಲ್ಲೂ ಪಶುಗಳಲ್ಲಿ ಸಾಮಾನ್ಯವಾಗಿ ಬರುವ ಕಾಲುಬಾಯಿ ಜ್ವರವೆಂಬ ವೈರಾಣು ಕಾಯಿಲೆ ಬಂದಾಗ ಈ ರೀತಿ ಗಡಿಮಾರಿಗಳು ಊರಿಂದ ಊರಿನ ಗಡಿಯಲ್ಲಿ ಕಂಡು ಬರುವುದು ಸಾಮಾನ್ಯ.
ಇದೊಂದು ಗ್ರಾಮೀಣ ಜನರ ಮನಸ್ಸಿನ ದುಗುಡ ತುಮುಲವನ್ನು ಹಗುರಗೊಳಿಸಲು ಇರುವ ಸಂಪ್ರದಾಯ ಹಾಗೇ ಇರಲಿ ಎಂದು ಸ್ವೀಕರಿಸಬೇಕೋ ಅಥವಾ ರೋಗಗಳನ್ನು ನಿಯಂತ್ರಿಸಲು ಉತ್ತಮ ಲಸಿಕೆಗಳು, ಉತ್ತಮ ತಂತ್ರಜ್ಞಾನವಿರುವ ಈ ಆಧುನಿಕ ಯುಗದಲ್ಲಿ ಇಂತಹ ಆಚರಣೆ ಎಷ್ಟರ ಮಟ್ಟಿಗೆ ಸರಿ ?! ಇದು ಮೌಢ್ಯವಲ್ಲವೇ? ಎಂಬ ಪ್ರಶ್ನೆಗಳಿಗೆಲ್ಲಾ ಓದುಗರೇ ಉತ್ತರಿಸಬೇಕು.!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ3 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ2 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ


