ದಿನದ ಸುದ್ದಿ
ಪ್ರಾಂಶುಪಾಲರಿಗಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ; ಸರಕಾರಿ ಕಾಲೇಜುಗಳಲ್ಲಿ ಕನಿಷ್ಠ 1,500 ವಿದ್ಯಾರ್ಥಿಗಳಾದರೂ ಇರಬೇಕು: ಅಶ್ವತ್ಥನಾರಾಯಣ
ಸುದ್ದಿದಿನ,ಬೆಂಗಳೂರು: ಸರಕಾರಿ ಕಾಲೇಜುಗಳು ಸುಸಜ್ಜಿತವಾಗಿದ್ದು, ಪ್ರತಿಯೊಂದು ಕಾಲೇಜಿನಲ್ಲೂ ಕನಿಷ್ಠ ಪಕ್ಷ 1,500ದಿಂದ 2,000 ವಿದ್ಯಾರ್ಥಿಗಳಾದರೂ ಇರುವಂತೆ ನೋಡಿಕೊಳ್ಳುವುದು ಪ್ರಾಂಶುಪಾಲರ ಹೊಣೆಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಇಲಾಖೆಯ ವತಿಯಿಂದ ಏರ್ಪಡಿಸಿರುವ ರಾಜ್ಯದ ಎಲ್ಲ ಸರಕಾರಿ ಪ್ರಥಮ ದರ್ಜೆ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರುಗಳ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಶುಕ್ರವಾರ ವರ್ಚುಯಲ್ ಮಾತನಾಡಿದರು. ನಗರದ ಹೊರವಲಯದಲ್ಲಿ ನಡೆಯುತ್ತಿರುವ ಬಿಜೆಪಿ ಚಿಂತನ ಶಿಬಿರದಲ್ಲಿ ಪಾಲ್ಗೊಂಡಿದ್ದ ಸಚಿವರು ಅಲ್ಲಿಂದಲೇ ವರ್ಚುಯಲ್ ಆಗಿ ಮಾತನಾಡಿದರು.
ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಈಗಾಗಲೇ ಎನ್ಇಪಿ ಜಾರಿಯಾಗಿದೆ. ಇದಕ್ಕೆ ತಕ್ಕಂತೆ ಗುಣಮಟ್ಟದ ಕಲಿಕೆಯು ಸರಕಾರಿ ಕಾಲೇಜುಗಳಲ್ಲಿ ಸಾಧ್ಯವಾಗಬೇಕು. ಈಗಾಗಲೇ ಅಭಿವೃದ್ಧಿ ಪಡಿಸಿರುವ 2,500 ಸ್ಮಾರ್ಟ್ ಕ್ಲಾಸ್-ರೂಮುಗಳಲ್ಲಿ ಪಿಪಿಟಿ, ಆಡಿಯೋ ಮತ್ತು ವಿಡಿಯೋಗಳನ್ನು ಬೋಧನೆಯಲ್ಲಿ ಅಳವಡಿಸಿಕೊಳ್ಳಬೇಕು. ಉಳಿದಿರುವ 6,500 ತರಗತಿಗಳನ್ನು ಇನ್ನು ಆರು ತಿಂಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಮುಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಅವರು ಹೇಳಿದರು.
ಉನ್ನತ ಶಿಕ್ಷಣ ಇಲಾಖೆಯು ಪರಿಣಾಮಕಾರಿ ಕಲಿಕೆಯನ್ನು ಸಾಧ್ಯವಾಗಿಸಲು ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು (ಎಲ್ಎಂಎಸ್) ಅಭಿವೃದ್ಧಿ ಪಡಿಸಿದೆ. ಇದರಲ್ಲಿರುವ ಪಠ್ಯ ಮತ್ತು ವಿಚಾರಗಳನ್ನು ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಬಳಸಿಕೊಳ್ಳುವಂತೆ ಪ್ರಾಂಶುಪಾಲರು ಸೂಕ್ತ ಗಮನ ಹರಿಸಬೇಕು. ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣೆ ವ್ಯವಸ್ಥೆ ( ಯುಯುಸಿಎಂಎಸ್) ಜಾರಿಗೆ ಬಂದಿದ್ದು ಅದನ್ನು ಪರಿಣಾಮಕಾರಿಯಾಗಿ ಪ್ರತಿಯೊಂದು ಕಾಲೇಜು ಬಳಸಬೇಕು ಎಂದು ಅವರು ಸೂಚಿಸಿದರು.
ಸದ್ಯಕ್ಕೆ ಕೇವಲ 84 ಸರಕಾರಿ ಕಾಲೇಜುಗಳಲ್ಲಷ್ಟೆ ಶೇ.100ರಷ್ಟು ವಿದ್ಯಾರ್ಥಿಗಳು ಇದ್ದಾರೆ. 105 ಸರಕಾರಿ ಕಾಲೇಜುಗಳಲ್ಲಿ ಒಟ್ಟು ಸಾಮರ್ಥ್ಯದ ಶೇ.40ರಷ್ಟು ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ಈ ದುರವಸ್ಥೆ ತಪ್ಪಿ, ಸರಕಾರಿ ಕಾಲೇಜುಗಳು ಕಲಿಕೆಗೆ ಆಕರ್ಷಕ ತಾಣಗಳಾಗಬೇಕು ಎಂದು ಅವರು ನುಡಿದರು.
ಕಾಲೇಜುಗಳಲ್ಲಿ ಶುಲ್ಕದ ರೂಪದಲ್ಲಿ ಸಂಗ್ರಹವಾಗುತ್ತಿರುವ ಹಣವನ್ನು ಈಗ ಆಯಾ ಕಾಲೇಜುಗಳ ಅಭಿವೃದ್ಧಿಗೇ ಕೊಡಲಾಗುತ್ತಿದೆ. ಈ ಮೂಲಕ ಸ್ವಾವಲಂಬನೆ ಮತ್ತು ಸ್ವಾಯತ್ತೆಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ಮನದಟ್ಟು ಮಾಡಿಕೊಟ್ಟರು.
ಸರಕಾರಿ ಕಾಲೇಜುಗಳಲ್ಲಿ ಕಲಿಯಲು ಬರುವವರು ಆರ್ಥಿಕ ದುರ್ಬಲ ಕುಟುಂಬಗಳ ಮಕ್ಕಳಾಗಿರುತ್ತಾರೆ. ಇವರಿಗೆಲ್ಲ ಉದ್ಯೋಗ ಸಿಗುವಂತೆ ಮಾಡಬೇಕು. ಇದಕ್ಕಾಗಿ ಅಗತ್ಯ ಕೌಶಲ್ಯ ಕಲಿಕೆ ಮತ್ತು ಸೂಕ್ತ ಪಠ್ಯ ಅಳವಡಿಸಿಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.
ಪ್ರತಿಯೊಂದು ಸರಕಾರಿ ಕಾಲೇಜಿನಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕು. ಹಬ್ಬದ ವಾತಾವರಣ ಪಸರಿಸಬೇಕು. ಇದಕ್ಕೆ ವ್ಯಾಪ್ತಿಯಲ್ಲೇ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಅವರು ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ7 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

