ಅಂತರಂಗ
ಕಾರ್ನಾಡರ ಕೊರಳ ಫಲಕ
- ಡಾ. ರಹಮತ್ ತರೀಕೆರೆ
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು.
ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಸಮಾಜವನ್ನು ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕಗಳನ್ನು ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ.
ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ’ ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ.
ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ.
ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯಾದರು.
ಗೌರಿಲಂಕೇಶ್ ಸ್ಮರಣೆಯ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ.
ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು.
ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು.
ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ದೇವರ ಹೂವು
~ ಡಾ. ಸಿ.ಬಿ.ಐನಳ್ಳಿ
ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ
ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ
ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ
ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ
ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ3 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ23 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


