Connect with us

ದಿನದ ಸುದ್ದಿ

ಉತ್ತಮ ಇಳುವರಿ, ಒಳ್ಳೆಯ ಲಾಭ ಶೇಂಗಾ ಬೆಳೆಯ ಬೇಸಾಯ ಕ್ರಮಗಳು : ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ: ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಪೂರ್ವ ಉಳುಮೆ ಕಾರ್ಯ ಮುಗಿದಲ್ಲಿ, ಮಣ್ಣಿನ ತೇವಾಂಶದ ಹದ ನೋಡಿ ಶೇಂಗಾ ಬಿತ್ತನೆ ಮಾಡಬಹುದಾಗಿದೆ. ಶೇಂಗಾ ಒಂದು ಪ್ರಮುಖ ದ್ವಿದಳ ಎಣ್ಣೆಕಾಳು ಬೆಳೆಯಾಗಿದ್ದು, ಎಲ್ಲಾ ರೀತಿಯ ಹವಾಗುಣಕ್ಕೂ ಹೊಂದಿಕೊಳ್ಳುವ ಗುಣ ಹೊಂದಿದ್ದು, ಎಲ್ಲಾ ರೀತಿಯ ಮಣ್ಣಿನಲ್ಲೂ ಬೆಳೆಯಬಹುದಾಗಿದೆ.

ಸುಧಾರಿತ ಬೇಸಾಯ ಕ್ರಮಗಳು ಹಾಗೂ ಆಯಾ ಪ್ರದೇಶಕ್ಕೆ ಹೊಂದಿಕೊಳ್ಳುವಂತಹ ತಳಿಗಳ ಆಯ್ಕೆಯನ್ನು ರೈತರು ಅಳವಡಿಸಿಕೊಂಡಲ್ಲಿ ಉತ್ತಮ ಇಳುವರಿಯ ಜೊತೆಗೆ ಒಳ್ಳೆಯ ಲಾಭ ಪಡೆಯಬಹುದಾಗಿದೆ.

2020 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 13,285 ಹೆಕ್ಟೇರ್ ಪ್ರದೇಶದಲ್ಲಿ ನೆಲಗಡಲೆ ಬೆಳೆಯುವ ಗುರಿ ಹೊಂದಲಾಗಿದ್ದು, ಜಗಳೂರು, ಹೊನ್ನಾಳಿ, ನ್ಯಾಮತಿ, ದಾವಣಗೆರೆ ಭಾಗದಲ್ಲಿ ಬೆಳೆಯಲಾಗುವುದು.

ಬಿತ್ತನೆ ಕಾಲ

ಮುಂಗಾರು ಮಳೆಯಾಶ್ರಿತ ನೆಲಗಡಲೆಯನ್ನು ಮೇ ತಿಂಗಳ ಎರಡನೇ ವಾರದಿಂದ ಜುಲೈ ತಿಂಗಳ ಎರಡನೇ ವಾರದೊಳಗೆ ಬಿತ್ತನೆ ಮಾಡಬಹುದು.

ಸುಧಾರಿತ ತಳಿಗಳ ಆಯ್ಕೆ: ತಳಿಗಳು

ಟಿ.ಎಂ.ವಿ-2, ಜಿ.ಪಿ.ಬಿ.ಡಿ-4 & 5, ಜಿ-252, ಕೆ-6. ಪ್ರಮಾಣಿತ ಬಿತ್ತನೆ ಬೀಜವನ್ನು ಪ್ರತಿ ಮೂರು ಹಂಗಾಮಿನಲ್ಲೊಮ್ಮೆ ಬಳಸಬೇಕು. ಪ್ರಮಾಣಿತ ಬಿತ್ತನೆ ಬಳಸಿದ ಮಾದರಿ ಬೆಳೆ ತಾಕಿನಿಂದ ಬಿತ್ತನೆ ಬೀಜ ಆಯ್ಕೆ ಮಾಡಬಹುದಾಗಿದೆ.

ಬೀಜೋಪಚಾರ

ಬೀಜ ಬಿತ್ತನೆ ಮಾಡುವ ಮೊದಲು ಪ್ರತಿ ಕಿ.ಗ್ರಾಂ ನೆಲಗಡಲೆ ಬೀಜಕ್ಕೆ 2.5 ಗ್ರಾಂ ಥೈರಾಮ್ ಪುಡಿಯನ್ನು ಬೆರಸಿ, ನೆರಳಿನಲ್ಲಿ ಒಣಗಿಸಬೇಕು, ನಂತರ ಒಂದು ಎಕರೆ ಬಿತ್ತನೆ ಬೀಜಕ್ಕೆ 150 ಗ್ರಾಂ ರೈಜೋಬಿಯಂ & 400 ಗ್ರಾಂ. ಪಿ.ಎಸ್.ಬಿ. ಜೈವಿಕ ಗೊಬ್ಬರಗಳನ್ನು ಅಂಟು ದ್ರಾವಣ ಬಳಸಿ ಉಪಚರಿಸಿ ಬಿತ್ತನೆಗೆ ಬಳಸಬೇಕು.

ಗೊಣ್ಣೆ ಹುಳು – ಗೆದ್ದಲು ಹುಳುಗಳ ಬಾಧೆ ಇದ್ದಲ್ಲಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 15 ಮಿ.ಲೀ. ಕ್ಲೊರೋಫೈರಿಫಾಸ್‍ನ್ನು ಬೀಜಕ್ಕೆ ಹಾನಿಯಾಗದಂತೆ ಲೇಪಿಸಿ ಬಿತ್ತನೆ ಮಾಡುವುದು. ಬೀಜೋಪಚಾರದ ಸಮಯದಲ್ಲಿ ಮೊದಲು ಕೀಟನಾಶಕದಿಂದ ಉಪಚರಿಸಿ ನಂತರ ಜೈವಿಕ ಗೊಬ್ಬರದಿಂದ ಉಪಚರಿಸಬೇಕು.

ಬೀಜ ಪ್ರಮಾಣ – ಅಂತರ

ಪ್ರತಿ ಎಕರೆಗೆ 45 ಕಿ.ಗ್ರಾಂ ಬಿತ್ತನೆ ಬೀಜವನ್ನು 30 ಸೆಂ.ಮೀ x 15 ಸೆಂ.ಮೀ ಅಂತರದ ಸಾಲಿನಲ್ಲಿ ಬಿತ್ತ ಬಹುದಾಗಿದೆ.

ಅಂತರ ಬೆಳೆ

ಶೇಂಗಾ ಬೆಳೆಯಲ್ಲಿ 4 ರಿಂದ 6 ಸಾಲಿಗೆ ಒಂದು ಸಾಲು ತೊಗರಿ ಬೆಳೆಯಬಹುದು. ಇಡಿ ಶೇಂಗಾ ಬೆಳೆ ಬಿತ್ತನೆ ಮಾಡುವಾಗ ಕೊತ್ತುಂಬರಿ, ಹೆಸರು, ಅಲಸಂದೆ, ಉದ್ದು, ನವಣೆ, ಸಾಸುವೆ ಬೆಳೆಗಳನ್ನು ಶೇಂಗಾ ಸಾಲಿನಲ್ಲಿಯೇ ಮಿಶ್ರ ಬೆಳೆಯಾಗಿ ಬೆಳೆಯುವುದರಿಂದ ಉತ್ಪಾದಕತೆ ಮತ್ತು ಆದಾಯ ಹೆಚ್ಚಿಸಬಹುದಾಗಿದೆ.

ಪೋಷಕಾಂಶ ನಿರ್ವಹಣೆ

ಭೂಮಿಯನ್ನು ಚೆನ್ನಾಗಿ ಹದ ಮಾಡಿದ ನಂತರ ಶಿಫಾರಸ್ಸು ಮಾಡಿದ 4 ಟನ್ ಸಾವಯವ ಗೊಬ್ಬರವನ್ನು ಬಿತ್ತನೆಗೆ 2-3 ವಾರ ಮೊದಲು ಬಿತ್ತನೆ ಸಮಯದಲ್ಲಿ ಬಳಸಬೇಕು ಹಾಗೂ ರಸಾಯನಿಕ ಗೊಬ್ಬರಗಳಾದ 10 ಕಿ.ಗ್ರಾಂ

ಸಾರಜನಕ

20 ಕಿ.ಗ್ರಾಂ ರಂಜಕ, 10 ಕಿ.ಗ್ರಾಂ ಪೊಟ್ಯಾಷ್‍ನ್ನು ಬಿತ್ತನೆ ಸಮಯದಲ್ಲಿ ಹಾಕುವುದು.ಎಕರೆಗೆ 4 ಕಿ.ಗ್ರಾಂ ಸತುವಿನ ಸಲ್ಫೇಟ್ ಹಾಗೂ 4 ಕಿ.ಗ್ರಾಂ ಬೋರಾಕ್ಸ್‍ನ್ನು ಸಾವಯವ ಗೊಬ್ಬರಗದೊಂದಿಗೆ ಮಿಶ್ರಣ ಮಾಡಿ ಬಿತ್ತುವ ಸಂದರ್ಭದಲ್ಲಿ ಎರಚಬೇಕು.

ಸಾಮಾನ್ಯವಾಗಿ ರೈತರು ಸಾರಜನಕ, ರಂಜಕ, ಪೊಟ್ಯಾಷ್ ಗೊಬ್ಬರವನ್ನು ಬಳಸುತ್ತಾರೆ. ಆದರೆ ಎಣ್ಣೆಕಾಳು ಬೆಳೆಯಾದ ನೆಲಗಡಲೆಗೆ ಕ್ಯಾಲ್ಸಿಯಂ ಮತ್ತು ಗಂಧಕದ ಅವಶ್ಯಕತೆ ಅಗತ್ಯವಾಗಿರುವುದರಿಂದ ರೈತ ಬಾಂಧವರು ಇತರೆ ಗೊಬ್ಬರಗಳ ಜೊತೆಗೆ ಜಿಪ್ಸಂನ್ನು ಬೆಳೆಗೆ ಪೂರೈಸುವುದು ಅತ್ಯವಶ್ಯಕವಾಗಿದೆ. ಇದರಿಂದಾಗಿ ಕಾಯಿ ಗಟ್ಟಿಯಾಗುವಿಕೆ, ಎಣ್ಣೆ ಅಂಶ ಜಾಸ್ತಿಯಾಗುವುದರಿಂದ ಜೊಳ್ಳು ಬೀಜಗಳು ಕಡಿಮೆಯಾಗಿ ಶೇ. 18 ರಿಂದ 20 ರಷ್ಟು ಇಳುವರಿ ಹೆಚ್ಚಾಗುವುದು.

ಬಿತ್ತನೆ ಸಮಯದಲ್ಲಿ ಎಕರೆಗೆ 2 ಕ್ವಿಂಟಾಲ್ ಜಿಪ್ಸಂ ಅನ್ನು ಸಾಲಿನ ಮಧ್ಯೆ ಹಾಕುವುದು. ಅಥವಾ 40 ರಿಂದ 45 ದಿನದ ಬೆಳೆಗೆ / ಹೂ ಬಿಡುವ ಹಂತದ ಸಮಯದಲ್ಲಿ 2 ಸಾಲುಗಳ ಮಧ್ಯೆ ಹಾಕಿ ಎಡೆ ಹೊಡೆಯುವುದು. ಮೂಟೆ ಲೆಕ್ಕದಲ್ಲಿ ರಸಗೊಬ್ಬರ ಬಳಸದೇ ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರ ಬಳಸಬೇಕು. ರಸಗೊಬ್ಬರಗಳನ್ನು ಅಧಿಕೃತ ಮಾರಾಟಗಾರರಿಂದ ನಿಗಧಿತ ಬಿಲ್ಲು ಪಡೆದು ಖರೀದಿಸಬೇಕು.

ಕಳೆ ನಿರ್ವಹಣೆ

ಬಿತ್ತಿದ ದಿವಸ – ಮಾರನೆ ದಿವ ಎಕರೆಗೆ 1 ಲೀಟರ್ ಅಲಾಕ್ಲೋರ್ 50 ಇ.ಸಿ. ಅಥವಾ 800 ಮು.ಲೀ.ಮೆಟಾಲ್‍ಕ್ಲೋರ್ 50 ಇ.ಸಿ. ಕಳೆನಾಶಕವನ್ನು 300 ಲೀ. ನೀರಿನಲ್ಲಿ ಬೆರಸಿ ಸಿಂಪರಣೆ ಮಾಡಬೇಕು. ಸಿಂಪರಣೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿರಬೇಕು.

ಅಂತರ ಬೇಸಾಯ

ಬಿತ್ತಿದ 15 ದಿವಸಗಳ ನಂತರ, 10 ದಿವಸಗಳ ಅಂತರದಲ್ಲಿ 3 ಬಾರಿ ಕುಂಟೆ ಹಾಯಿಸಬೇಕು. ಯಾವುದೇ ಕಾರಣಕ್ಕೂ ಬಿತ್ತಿದ 45 ದಿವಸಗಳ ನಂತರ ಕುಂಟೆ ಹಾಯಿಸಬಾರದು ಎಂದು ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್

Published

on

ಸುದ್ದಿದಿನ,ದಾವಣಗೆರೆ:ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಶನಿವಾರ ನಗರದ ದೊಡ್ಡಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈಗಾಗಲೇ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಗಿಗ್ ಕಾರ್ಮಿಕರನ್ನು ನೋಂದಾಯಿಸಿ, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ‘ಕರ್ನಾಟಕ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಅಧಿನಿಯಮ-2025’ ಜಾರಿ ಮಾಡಲಾಗುವುದು. ರಾಜ್ಯದಲ್ಲಿ ವರ್ಷಕ್ಕೆ ಸುಮಾರು 4 ಕೋಟಿ ಸಿನಿಮಾ ಟಿಕೆಟ್‌ಗಳು ಮಾರಾಟವಾಗುತ್ತವೆ.

ಈ ಟಿಕೆಟ್‌ಗಳ ಮೇಲೆ ಸೆಸ್ ವಿಧಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆಸಲಾಗುತ್ತಿದೆ. ಇದಕ್ಕಾಗಿ ‘ಕರ್ನಾಟಕ ಸಿನಿಮಾ ಮತ್ತು ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರ ಸುಂಕ ಅಧಿನಿಯಮ-2024’ ಅನ್ನು ರಚಿಸಲಾಗಿದೆ. ಇದರೊಂದಿಗೆ ಮನೆಗೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ‘ಕರ್ನಾಟಕ ಗೃಹ ಕಾರ್ಮಿಕರ ಅಧಿನಿಯಮ-2025’ ರಚಿಸಲಾಗಿದೆ. ಈ ಎಲ್ಲಾ ಅಧಿನಿಯಮಗಳ ನಿಯಾವಳಿಗಳನ್ನು ರೂಪಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಈ ಅಧಿನಿಯಮಗಳನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗೆ 5 ವರ್ಷದಲ್ಲಿ 3 ಲಕ್ಷ ಕೋಟಿ ಖರ್ಚು

ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 56 ರಿಂದ 60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿದೆ. ಈ ಮೊತ್ತ 5 ವರ್ಷಗಳಲ್ಲಿ 3 ಲಕ್ಷ ಕೋಟಿ ರೂ. ತಲುಪಬಹುದು. ದೇಶದ ಯಾವುದೇ ರಾಜ್ಯದಲ್ಲಿ ಇಷ್ಟೊಂದು ಮೊತ್ತದ ಹಣವನ್ನು ನೇರವಾಗಿ ಜನರ ಕಲ್ಯಾಣಕ್ಕಾಗಿ ವ್ಯಯಿಸುತ್ತಿಲ್ಲ. ರಾಜ್ಯದಲ್ಲಿ 30 ರಿಂದ 40 ಲಕ್ಷ ಅಸಂಘಟಿತ ಕಾರ್ಮಿಕರು ಇದ್ದು, ಕಾರ್ಮಿಕ ಇಲಾಖೆ 91 ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಿದೆ. ಅಸಂಘಟಿತ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇದಕ್ಕಾಗಿ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ ಜಾರಿ ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 25,45,607 ಕಾರ್ಮಿಕರು, ದಾವಣಗೆರೆ ಜಿಲ್ಲೆಯಲ್ಲಿ 89,493 ಕಾರ್ಮಿಕರು ನೊಂದಣಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿಸಿದ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ, ಚಾಲಕರು, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್, ನಗದು, ಡಿಪೋ ಗುಮಾಸ್ತರು ಸೇರಿದಂತೆ, ಮೋಟಾರು ಕ್ಷೇತ್ರದಲ್ಲಿ ದುಡಿಯತ್ತಿರುವ ಎಲ್ಲಾ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದರು.

ಖಾಸಗಿ ವಲಯದ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶಿತ ದೃಷ್ಠಿಯಿಂದ ‘ಆಶಾದೀಪ’ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಯಡಿ ಉದ್ಯೋಗದಾತ ಮಾಲಿಕರು ಪಾವತಿಸಿದ ಇ.ಎಸ್.ಐ ಮತ್ತು ಇ.ಪಿ.ಎಫ್ ವಂತಿಕೆ ಮರುಪಾವತಿ, ತರಬೇತಿ ನೇಮಿಸಿಕೊಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಶಿಷ್ಯವೇತನ ಮರುಪಾವತಿ, ಹೊಸ ನೇಮಕಾತಿಗೊಂಡವರಿಗೆ ಪಾವತಿಸಿದ ವೇತನದ ಎರಡು ವರ್ಷಗಳ ಅವಧಿಗೆ ಪ್ರತಿ ಉದ್ಯೋಗಿಯ ಮಾಸಿಕ ತಲಾ 6000 ರೂ. ವೇತನವನ್ನು ಉದ್ಯೋಗದಾತರಿಗೆ ಮರುಪಾವತಿ ಮಾಡಲಾಗುವುದು ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.

ಸರ್ಕಾರದಿಂದ ಖಾಸಗಿ ಕಂಪನಿಗಳು ನೀಡುವ ಇ.ಪಿ.ಎಫ್‌ಗಳನ್ನು ಪ್ರತ್ಯೇಕವಾಗಿ ಬ್ಯಾಂಕ್ ಖಾತೆಗಳನ್ನು ತೆರದು ನಿರ್ವಹಣೆ ಮಾಡುವಂತೆ ನಿಯಮ ರೂಪಿಸಲಾಗಿದೆ. ಉದ್ಯೋಗಿ, ಕಂಪನಿ ತೊರೆದ ಸಂದರ್ಭದಲ್ಲಿ ಈ ಹಣ ನೇರವಾಗಿ ಉದ್ಯೋಗಿಯ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ಇದರಿಂದ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಜಿಲ್ಲೆಯಲ್ಲಿ ಅರ್ಹ ಅಸಂಘಟಿತ ಕಾರ್ಮಿಕರನ್ನು ಗುರತಿಸಿ ಸ್ಮಾರ್ಟ್ಕಾರ್ಡ್ ವಿತರಿಸಲಾಗುತ್ತಿದೆ. ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರಿಗೆ ಯೋಜನೆ ಮತ್ತು ಸೌಲಭ್ಯಗಳನ್ನು ಸಮಪರ್ಕವಾಗಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಬಡವರ, ಕಾರ್ಮಿಕ ವರ್ಗದವರ ಕಷ್ಟಗಳ ಬಗ್ಗೆ ಅರಿತಿರುವ ಸಚಿವ ಸಂತೋಷ್ ಲಾಡ್ ಅವರು, ಅನೇಕ ಜನಕಲ್ಯಾಣ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾರ್ಮಿಕ ಇಲಾಖೆ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುತ್ತಿದ್ದಾರೆ. ಈ ಹಿಂದೆ ಕಾರ್ಮಿಕ ಇಲಾಖೆಯಲ್ಲಿ ಮಾತ್ರ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಆದರೆ ಸಚಿವ ಲಾಡ್ ಅವರಿಂದ ಪ್ರಸ್ತುತ ಮೇ 01ರಂದು ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿಯೂ ಆಚರಿಸಲಾಗುತ್ತದೆ ಎಂದರು.

ವಿವಿಧ ಸೌಲಭ್ಯಗಳ ವಿತರಣೆ

ಕಾರ್ಯಕ್ರಮದಲ್ಲಿ ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ಚಾಲಕರ ಅವಲಂಬಿತ ಮಹಿಳೆ ಜಗಳೂರಿನ ಗೌರಮ್ಮನವರಿಗೆ ರೂ.5 ಲಕ್ಷ ಪರಿಹಾರ ಧನ, ಅಪಘಾತದಿಂದ ಮರಣ ಹೊಂದಿದ ಖಾಸಗಿ ವಾಣಿಜ್ಯ ವಾಹನ ಚಾಲಕರ ಮಕ್ಕಳಿಗೆ ರೂ.10,000 ಶೈಕ್ಷಣಿಕ ಧನಸಹಾಯದ ಚೆಕ್ ಹಾಗೂ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸಲಾಯಿತು.

ಕಾರ್ಮಿಕ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಸಂವಿಧಾನ ಪೀಠಿಕೆ ಬೋಧಿಸಿದರು. ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ ಸ್ವಾಗತಿಸಿದರು. ಜಂಟಿ ಕಾರ್ಮಿಕ ಆಯುಕ್ತ ಡಾ. ಎಸ್.ಬಿ. ರವಿಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಚೇತನ್ ಹಾಗೂ ಸಂಡಿಗರ ಕಲಾತಂಡ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಹೊನ್ನಾಳಿ ಶಾಸಕ ಡಿ.ಜಿ.ಶಾಂತನೌಡ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿ.ಪಂ.ಸಿಇಓ ಗಿತ್ತೆ ಮಾಧವ ವಿಠಲ ರಾವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಪ್ರಕರಣಗಳ 18024 ಕೈಗೆತ್ತಿಕೊಂಡಿದ್ದು, ಅದರಲ್ಲಿ ಒಟ್ಟು 9,360 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು, ರೂ.14,33,66,571 ಹಣದ ಪ್ರಕರಣ ಹಾಗೂ ವ್ಯಾಜ್ಯ ಪೂರ್ವ 2,62,712 ಪ್ರಕರಣಗಳು ಮುಕ್ತಾಯಗೊಂಡು ರೂ.72,62,10,788 ಹಣದ ಪರಿಹಾರವಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ತಿಳಿಸಿದ್ದಾರೆ.

ಜಿಲ್ಲೆಯ ನ್ಯಾಯಾಲಯಗಳಲ್ಲಿ 77 ಅಪರಾಧಿಕ, 195 ಚೆಕ್ ಅಮಾನ್ಯ, 43 ಬ್ಯಾಂಕ್ ವಸೂಲಾತಿ, 14 ಇತರೆ ಹಣ ವಸೂಲಾತಿ, 74 ಅಪಘಾತ ಪರಿಹಾರ, 144 ವಿದ್ಯುತ್ ಕಳ್ಳತನ, 02 ಅಕ್ರಮ ಮರಳು ಗಣಿಗಾರಿಕೆ, 51 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆ, 26 ಭೂ ಸ್ವಾಧೀನ ಪರಿಹಾರ ಜಾರಿ ಅರ್ಜಿ, 132 ಇತರೆ ರಾಜಿ ಅರ್ಜಿ ಹಾಗೂ ಹಲವು ಕಾರಣಕ್ಕಾಗಿ ದಾಖಲಿಸಿದ 88 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ 50 ಪ್ರಕರಣಗಳು ಸೇರಿ ಒಟ್ಟು 9360 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.

23 ಜೋಡಿ ವೈವಾಹಿಕ ಜೀವನ ಸುಖಾಂತ್ಯ

ಜಿಲ್ಲೆಯಲ್ಲಿ ಒಟ್ಟು 225 ಜೋಡಿ ವಿವಿಧ ಕಾರಣಗಳಿಂದ ವಿಚ್ಛೇದನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿ ನ್ಯಾಯಾಲಯ ಮೆಟ್ಟಿಲೇರಿದ್ದು, ಅದರಲ್ಲಿ 20 ಪ್ರಕರಣ ದಾವಣಗೆರೆ ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಹಾಗೂ ಹರಿಹರ, ಚನ್ನಗಿರಿ ಹಾಗೂ ಹೊನ್ನಾಳಿ ತಾಲ್ಲೂಕು ನ್ಯಾಯಾಲಯದಲ್ಲಿ ತಲಾ ಒಂದರಂತೆ ಒಟ್ಟು 23 ಜೋಡಿಗಳು ತಮ್ಮ ವೈಮನಸ್ಸುಗಳನ್ನು ಮರೆತು ಒಂದಾಗಿ ಸಹಬಾಳ್ವೆ ನಡೆಸಲು ಒಪ್ಪಿಕೊಂಡಿದ್ದು ಸುಖಾಂತ್ಯ ಕಂಡಿವೆ. ರಾಷ್ಟ್ರೀಯ ಲೋಕ್ ಅದಾಲತ್ ನಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10 ಸಾವಿರ ನಿವೇಶನ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 2 ಸಾವಿರದ 500 ಮನೆಗಳು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕೂಡ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending