Connect with us

ದಿನದ ಸುದ್ದಿ

ಉತ್ತಮ ಇಳುವರಿ, ಒಳ್ಳೆಯ ಲಾಭ ಶೇಂಗಾ ಬೆಳೆಯ ಬೇಸಾಯ ಕ್ರಮಗಳು : ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ: ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಪೂರ್ವ ಉಳುಮೆ ಕಾರ್ಯ ಮುಗಿದಲ್ಲಿ, ಮಣ್ಣಿನ ತೇವಾಂಶದ ಹದ ನೋಡಿ ಶೇಂಗಾ ಬಿತ್ತನೆ ಮಾಡಬಹುದಾಗಿದೆ. ಶೇಂಗಾ ಒಂದು ಪ್ರಮುಖ ದ್ವಿದಳ ಎಣ್ಣೆಕಾಳು ಬೆಳೆಯಾಗಿದ್ದು, ಎಲ್ಲಾ ರೀತಿಯ ಹವಾಗುಣಕ್ಕೂ ಹೊಂದಿಕೊಳ್ಳುವ ಗುಣ ಹೊಂದಿದ್ದು, ಎಲ್ಲಾ ರೀತಿಯ ಮಣ್ಣಿನಲ್ಲೂ ಬೆಳೆಯಬಹುದಾಗಿದೆ.

ಸುಧಾರಿತ ಬೇಸಾಯ ಕ್ರಮಗಳು ಹಾಗೂ ಆಯಾ ಪ್ರದೇಶಕ್ಕೆ ಹೊಂದಿಕೊಳ್ಳುವಂತಹ ತಳಿಗಳ ಆಯ್ಕೆಯನ್ನು ರೈತರು ಅಳವಡಿಸಿಕೊಂಡಲ್ಲಿ ಉತ್ತಮ ಇಳುವರಿಯ ಜೊತೆಗೆ ಒಳ್ಳೆಯ ಲಾಭ ಪಡೆಯಬಹುದಾಗಿದೆ.

2020 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 13,285 ಹೆಕ್ಟೇರ್ ಪ್ರದೇಶದಲ್ಲಿ ನೆಲಗಡಲೆ ಬೆಳೆಯುವ ಗುರಿ ಹೊಂದಲಾಗಿದ್ದು, ಜಗಳೂರು, ಹೊನ್ನಾಳಿ, ನ್ಯಾಮತಿ, ದಾವಣಗೆರೆ ಭಾಗದಲ್ಲಿ ಬೆಳೆಯಲಾಗುವುದು.

ಬಿತ್ತನೆ ಕಾಲ

ಮುಂಗಾರು ಮಳೆಯಾಶ್ರಿತ ನೆಲಗಡಲೆಯನ್ನು ಮೇ ತಿಂಗಳ ಎರಡನೇ ವಾರದಿಂದ ಜುಲೈ ತಿಂಗಳ ಎರಡನೇ ವಾರದೊಳಗೆ ಬಿತ್ತನೆ ಮಾಡಬಹುದು.

ಸುಧಾರಿತ ತಳಿಗಳ ಆಯ್ಕೆ: ತಳಿಗಳು

ಟಿ.ಎಂ.ವಿ-2, ಜಿ.ಪಿ.ಬಿ.ಡಿ-4 & 5, ಜಿ-252, ಕೆ-6. ಪ್ರಮಾಣಿತ ಬಿತ್ತನೆ ಬೀಜವನ್ನು ಪ್ರತಿ ಮೂರು ಹಂಗಾಮಿನಲ್ಲೊಮ್ಮೆ ಬಳಸಬೇಕು. ಪ್ರಮಾಣಿತ ಬಿತ್ತನೆ ಬಳಸಿದ ಮಾದರಿ ಬೆಳೆ ತಾಕಿನಿಂದ ಬಿತ್ತನೆ ಬೀಜ ಆಯ್ಕೆ ಮಾಡಬಹುದಾಗಿದೆ.

ಬೀಜೋಪಚಾರ

ಬೀಜ ಬಿತ್ತನೆ ಮಾಡುವ ಮೊದಲು ಪ್ರತಿ ಕಿ.ಗ್ರಾಂ ನೆಲಗಡಲೆ ಬೀಜಕ್ಕೆ 2.5 ಗ್ರಾಂ ಥೈರಾಮ್ ಪುಡಿಯನ್ನು ಬೆರಸಿ, ನೆರಳಿನಲ್ಲಿ ಒಣಗಿಸಬೇಕು, ನಂತರ ಒಂದು ಎಕರೆ ಬಿತ್ತನೆ ಬೀಜಕ್ಕೆ 150 ಗ್ರಾಂ ರೈಜೋಬಿಯಂ & 400 ಗ್ರಾಂ. ಪಿ.ಎಸ್.ಬಿ. ಜೈವಿಕ ಗೊಬ್ಬರಗಳನ್ನು ಅಂಟು ದ್ರಾವಣ ಬಳಸಿ ಉಪಚರಿಸಿ ಬಿತ್ತನೆಗೆ ಬಳಸಬೇಕು.

ಗೊಣ್ಣೆ ಹುಳು – ಗೆದ್ದಲು ಹುಳುಗಳ ಬಾಧೆ ಇದ್ದಲ್ಲಿ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 15 ಮಿ.ಲೀ. ಕ್ಲೊರೋಫೈರಿಫಾಸ್‍ನ್ನು ಬೀಜಕ್ಕೆ ಹಾನಿಯಾಗದಂತೆ ಲೇಪಿಸಿ ಬಿತ್ತನೆ ಮಾಡುವುದು. ಬೀಜೋಪಚಾರದ ಸಮಯದಲ್ಲಿ ಮೊದಲು ಕೀಟನಾಶಕದಿಂದ ಉಪಚರಿಸಿ ನಂತರ ಜೈವಿಕ ಗೊಬ್ಬರದಿಂದ ಉಪಚರಿಸಬೇಕು.

ಬೀಜ ಪ್ರಮಾಣ – ಅಂತರ

ಪ್ರತಿ ಎಕರೆಗೆ 45 ಕಿ.ಗ್ರಾಂ ಬಿತ್ತನೆ ಬೀಜವನ್ನು 30 ಸೆಂ.ಮೀ x 15 ಸೆಂ.ಮೀ ಅಂತರದ ಸಾಲಿನಲ್ಲಿ ಬಿತ್ತ ಬಹುದಾಗಿದೆ.

ಅಂತರ ಬೆಳೆ

ಶೇಂಗಾ ಬೆಳೆಯಲ್ಲಿ 4 ರಿಂದ 6 ಸಾಲಿಗೆ ಒಂದು ಸಾಲು ತೊಗರಿ ಬೆಳೆಯಬಹುದು. ಇಡಿ ಶೇಂಗಾ ಬೆಳೆ ಬಿತ್ತನೆ ಮಾಡುವಾಗ ಕೊತ್ತುಂಬರಿ, ಹೆಸರು, ಅಲಸಂದೆ, ಉದ್ದು, ನವಣೆ, ಸಾಸುವೆ ಬೆಳೆಗಳನ್ನು ಶೇಂಗಾ ಸಾಲಿನಲ್ಲಿಯೇ ಮಿಶ್ರ ಬೆಳೆಯಾಗಿ ಬೆಳೆಯುವುದರಿಂದ ಉತ್ಪಾದಕತೆ ಮತ್ತು ಆದಾಯ ಹೆಚ್ಚಿಸಬಹುದಾಗಿದೆ.

ಪೋಷಕಾಂಶ ನಿರ್ವಹಣೆ

ಭೂಮಿಯನ್ನು ಚೆನ್ನಾಗಿ ಹದ ಮಾಡಿದ ನಂತರ ಶಿಫಾರಸ್ಸು ಮಾಡಿದ 4 ಟನ್ ಸಾವಯವ ಗೊಬ್ಬರವನ್ನು ಬಿತ್ತನೆಗೆ 2-3 ವಾರ ಮೊದಲು ಬಿತ್ತನೆ ಸಮಯದಲ್ಲಿ ಬಳಸಬೇಕು ಹಾಗೂ ರಸಾಯನಿಕ ಗೊಬ್ಬರಗಳಾದ 10 ಕಿ.ಗ್ರಾಂ

ಸಾರಜನಕ

20 ಕಿ.ಗ್ರಾಂ ರಂಜಕ, 10 ಕಿ.ಗ್ರಾಂ ಪೊಟ್ಯಾಷ್‍ನ್ನು ಬಿತ್ತನೆ ಸಮಯದಲ್ಲಿ ಹಾಕುವುದು.ಎಕರೆಗೆ 4 ಕಿ.ಗ್ರಾಂ ಸತುವಿನ ಸಲ್ಫೇಟ್ ಹಾಗೂ 4 ಕಿ.ಗ್ರಾಂ ಬೋರಾಕ್ಸ್‍ನ್ನು ಸಾವಯವ ಗೊಬ್ಬರಗದೊಂದಿಗೆ ಮಿಶ್ರಣ ಮಾಡಿ ಬಿತ್ತುವ ಸಂದರ್ಭದಲ್ಲಿ ಎರಚಬೇಕು.

ಸಾಮಾನ್ಯವಾಗಿ ರೈತರು ಸಾರಜನಕ, ರಂಜಕ, ಪೊಟ್ಯಾಷ್ ಗೊಬ್ಬರವನ್ನು ಬಳಸುತ್ತಾರೆ. ಆದರೆ ಎಣ್ಣೆಕಾಳು ಬೆಳೆಯಾದ ನೆಲಗಡಲೆಗೆ ಕ್ಯಾಲ್ಸಿಯಂ ಮತ್ತು ಗಂಧಕದ ಅವಶ್ಯಕತೆ ಅಗತ್ಯವಾಗಿರುವುದರಿಂದ ರೈತ ಬಾಂಧವರು ಇತರೆ ಗೊಬ್ಬರಗಳ ಜೊತೆಗೆ ಜಿಪ್ಸಂನ್ನು ಬೆಳೆಗೆ ಪೂರೈಸುವುದು ಅತ್ಯವಶ್ಯಕವಾಗಿದೆ. ಇದರಿಂದಾಗಿ ಕಾಯಿ ಗಟ್ಟಿಯಾಗುವಿಕೆ, ಎಣ್ಣೆ ಅಂಶ ಜಾಸ್ತಿಯಾಗುವುದರಿಂದ ಜೊಳ್ಳು ಬೀಜಗಳು ಕಡಿಮೆಯಾಗಿ ಶೇ. 18 ರಿಂದ 20 ರಷ್ಟು ಇಳುವರಿ ಹೆಚ್ಚಾಗುವುದು.

ಬಿತ್ತನೆ ಸಮಯದಲ್ಲಿ ಎಕರೆಗೆ 2 ಕ್ವಿಂಟಾಲ್ ಜಿಪ್ಸಂ ಅನ್ನು ಸಾಲಿನ ಮಧ್ಯೆ ಹಾಕುವುದು. ಅಥವಾ 40 ರಿಂದ 45 ದಿನದ ಬೆಳೆಗೆ / ಹೂ ಬಿಡುವ ಹಂತದ ಸಮಯದಲ್ಲಿ 2 ಸಾಲುಗಳ ಮಧ್ಯೆ ಹಾಕಿ ಎಡೆ ಹೊಡೆಯುವುದು. ಮೂಟೆ ಲೆಕ್ಕದಲ್ಲಿ ರಸಗೊಬ್ಬರ ಬಳಸದೇ ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರ ಬಳಸಬೇಕು. ರಸಗೊಬ್ಬರಗಳನ್ನು ಅಧಿಕೃತ ಮಾರಾಟಗಾರರಿಂದ ನಿಗಧಿತ ಬಿಲ್ಲು ಪಡೆದು ಖರೀದಿಸಬೇಕು.

ಕಳೆ ನಿರ್ವಹಣೆ

ಬಿತ್ತಿದ ದಿವಸ – ಮಾರನೆ ದಿವ ಎಕರೆಗೆ 1 ಲೀಟರ್ ಅಲಾಕ್ಲೋರ್ 50 ಇ.ಸಿ. ಅಥವಾ 800 ಮು.ಲೀ.ಮೆಟಾಲ್‍ಕ್ಲೋರ್ 50 ಇ.ಸಿ. ಕಳೆನಾಶಕವನ್ನು 300 ಲೀ. ನೀರಿನಲ್ಲಿ ಬೆರಸಿ ಸಿಂಪರಣೆ ಮಾಡಬೇಕು. ಸಿಂಪರಣೆ ಸಮಯದಲ್ಲಿ ಮಣ್ಣಿನಲ್ಲಿ ಸಾಕಷ್ಟು ತೇವಾಂಶವಿರಬೇಕು.

ಅಂತರ ಬೇಸಾಯ

ಬಿತ್ತಿದ 15 ದಿವಸಗಳ ನಂತರ, 10 ದಿವಸಗಳ ಅಂತರದಲ್ಲಿ 3 ಬಾರಿ ಕುಂಟೆ ಹಾಯಿಸಬೇಕು. ಯಾವುದೇ ಕಾರಣಕ್ಕೂ ಬಿತ್ತಿದ 45 ದಿವಸಗಳ ನಂತರ ಕುಂಟೆ ಹಾಯಿಸಬಾರದು ಎಂದು ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending