ದಿನದ ಸುದ್ದಿ
ಎಲ್ಲ ರೀತಿಯಿಂದ ದೊಡ್ಡವರು ‘ಜಿ.ಎಸ್.ಆಮೂರ’
ಜಿ ಎಸ್ ಆಮೂರ ಎಲ್ಲ ರೀತಿಯಿಂದಲೂ ದೊಡ್ಡವರು. ಕಳೆದ ಮೇ ತಿಂಗಳಲ್ಲಿ 95 ಮುಗಿಸಿ ನೂರರೆಡೆಗೆ ಹೆಜ್ಜೆ ಹಾಕುತ್ತಿದ್ದರು. ಕನ್ನಡಕ್ಕೆ ಇಂಗ್ಲಿಷ್ ಮೇಷ್ಟ್ರುಗಳ ಲಿಂಕ್ (ಸಂಬಂಧ, ಕೊಡುಗೆ, ಬಾಂಧವ್ಯ ಈ ಪದಗಳಿಗಿಂತ ಉತ್ತಮ) ದೊಡ್ಡದು. ಮೇಷ್ಟ್ರುಗಳಷ್ಟೇ ಅಲ್ಲ ಬೇರೆ ಬೇರೆ ನೌಕರಿಗಳಲ್ಲಿದ್ದವರೂ ಇದ್ದರು. ಇರಲಿ. ನವೋದಯ, ನವೋದಯಪೂರ್ವ ಕಾಲದಿಂದಲೂ ಈ ಇತಿಹಾಸವಿದೆ. ಆ ಪರಂಪರೆಯ ಕೊಂಡಿಯಾಗಿದ್ದ ಅಮೂರ ಕಳಚಿಕೊಂಡು ಕನ್ನಡ ಸಾಹಿತ್ಯ ಚರಿತ್ರೆಯ ಭಾಗವಾದರು.
ಕನ್ನಡಕ್ಕೆ ಗಂಟುಬೀಳುವ ಇಂಗ್ಲಿಷ್ ಮೇಷ್ಟ್ರುಗಳ ಲಿಂಕೂ ಇದೆ ! ಅವರಲ್ಲಿ ಬಹುತೇಕರಿಗೆ ಅತ್ತ ಇಂಗ್ಲಷ್ಷೂ ಐಬು ಇತ್ತ ಅವರ ತಾಯ್ನುಡಿಯೂ ಐಬು. ಅವರು ಇಂಗ್ಲಿಷ್ ಡಿಗ್ರಿ ಸರ್ಟಿಫಿಕೇಟ್ ಇಟ್ಟುಕೊಂಡು ಕನ್ನಡದೊಳಗೆ ಓಡಾಡ್ತಾ ಇರ್ತಾರೆ. ಸ್ವಲ್ಪ ಬೆದರಿಕೆ, ಸ್ವಲ್ಪ ಬೂಟಾಟಿಕೆ ತೋರ್ತಾರೆ ! ಕೆಲವು ಕನ್ನಡದವು ಬೆದರೋದೂ ಉಂಟು !
ಆದರೆ ಕನ್ನಡಕ್ಕೆ ಕಾಮಧೇನುವಿನಂತೆ ಬರುವ ಇಂಗ್ಲಿಷ್ ಮೇಷ್ಟ್ರುಗಳ ಲಿಂಕ್ ಇದ್ಯಲ್ಲಾ ಅದು ಮಹತ್ವದ್ದು. ‘ ಶ್ರೀ ‘ ಯವರಿಂದಲೇ ಶ್ರೀಕಾರಗೊಂಡ ಆ ಪರಂಪರೆಗೆ ಸೇರಿದವರು ಅಮೂರ. ಮುಂದುವರೆದ ಹೊಸ ತಲೆಮಾರಿನಲ್ಲೂ ಕೆಲವರು ಆ ಪರಂಪರೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ.
ಇಂಥವರು ಕನ್ನಡವನ್ನು ಪ್ರೀತಿ ಗೌರವದಿಂದ ಕಾಣುತ್ತಾರೆ. ಕನ್ನಡವೆಂಬುದು ಇಂಗ್ಲಿಷಿನಂತೆಯೇ ಒಂದು ದೊಡ್ಡ ಭಾಷೆಯೆಂಬ ಅರಿವಿನಲ್ಲಿ ಒಡನಾಡುತ್ತಾರೆ, ಕೆಲಸ ಮಾಡುತ್ತಾರೆ. ಅಂಥವರಿಂದಲೇ ಇವಳ ಒಡವೆ ಅವಳಿಗಿಡುವ ಶಕ್ತಿ ಬರುವುದು. ಆಮೂರ ಇಂಗ್ಲಿಷ್ ಮತ್ತು ಕನ್ನಡ ಎರಡನ್ನೂ ಅರಗಿಸಿಕೂಂಡ ವಿಮರ್ಶಕರು. ಯಾವ ವಿಷಯವೇ ಆಗಲಿ ಅವರು ಬುಡಮಟ್ಟ ಶೋಧಿಸಿ ಬರೆಯುತ್ತಿದ್ದರು.
ಕನ್ನಡ ಕಥನ ಪರಂಪರೆ, ಮಹಿಳೆಯರ ಕಾವ್ಯ, ನವೋದಯ ಸಾಹಿತ್ಯ, ಜನಪ್ರಿಯ ಸಾಹಿತ್ಯ ಎಲ್ಲದರ ಬಗ್ಗೆಯೂ ಸಮಾನ ಆಸಕ್ತಿಯಿಂದ ಅಧ್ಯಯನಶೀಲರಾಗುತ್ತಿದ್ದರು. ಬೇಂದ್ರೆ, ಶ್ರೀರಂಗರ ಬಗ್ಗೆ ಎಂಥ ತಾದಾತ್ಮ್ಯ ಹೊಂದುತ್ತಿದ್ದರೋ ಅಷ್ಟೇ ತಾದಾತ್ಮ್ಯದಲ್ಲಿ ಜನಪ್ರಿಯ ಕಾದಂಬರಿಕಾರ ಅನಕೃ ಬಗ್ಗೆ ಚಿಂತಿಸಿ ಬರೆಯುತ್ತಿದ್ದರು. ಜನಪ್ರಿಯ ಸಾಹಿತ್ಯದ ಬಗ್ಗೆ ಸದಭಿರುಚಿಯ ಅಭಿಪ್ರಾಯ ಮೂಡಿಸುತ್ತಿದ್ದರು.
ಇಂಗ್ಲಿಷ್ ಭಾಷೆಯಲ್ಲಿ ಹಲವಾರು ಮೌಲಿಕ ಕೃತಿಗಳನ್ನು ರಚಿಸಿದ್ದಾರೆ. ಮಳಗಾಂವಕರ್, ಮುಲ್ಕ್ ರಾಜ್ ಆನಂದ, ರಾಜಾರಾವ್, ನಾಯ್ಪಾಲ್, ಸಲ್ಮಾನ್ ರುಶ್ದಿ ( ನಾನು ನೈಪಾಲ್, ರಶ್ದಿ ಅಂದಾಗಲೆಲ್ಲ ಅವರು ನಾಯ್ಪಾಲ್, ರುಶ್ದಿ ಅಂತ ಸರಿಮಾಡುತ್ತಿದ್ದರು ! ) ಅವರೆಲ್ಲರ ಕೃತಿಗಳ ವಿಸ್ತೃತ ಓದು ಅವರದಾಗಿತ್ತು. ಕುವೆಂಪು ಅವರ ರಾಮಾಯಣ ದರ್ಶನಂ ಕುರಿತ ಅವರ ಇಂಗ್ಲಿಷ್ ಲೇಖನ ಬಹಳ ಮೌಲಿಕವಾದುದು.
ಪ್ರಾಚೀನ ಸಾಹಿತ್ಯದ ಬಗ್ಗೆ ಇರುವಷ್ಟೇ ಆಸಕ್ತಿಯನ್ನು ಹೊಸದಾಗಿ ಬರೆಯುವವರ ಕತೆ ಕವಿತೆಗಳನ್ನು ಸಂಕಲನಗಳಲ್ಲಿ ಸೇರಿಸುತ್ತಿದ್ದರು. ಬೇರೆ ಬೇರೆ ರೀತಿಯ ಸಂಕಲನಗಳನ್ನು ಸಂಪಾದಿಸುವುದಕ್ಕೆ ಬೇಕಾದ ಅಪಾರ ಓದನ್ನು ಅವರು ಸಂತೋಷದಿಂದ ಮತ್ತು ಪರಿಪೂರ್ಣತೆಯಿಂದ ಮಾಡುತ್ತಿದ್ದರು.
ಬೆಂಗಳೂರಿಗೆ ಬಂದರೆ ಲಂಕೇಶ್ ಅವರಲ್ಲಿಗೆ ಭೇಟಿ ಕೊಟ್ಟು ಅವರೊಡನೆ ಗಂಭೀರ ಸಾಹಿತ್ಯ ಚರ್ಚೆ ಮಾಡುತ್ತಿದ್ದರು. ಹಾಗೆ ಒಮ್ಮೆ ಚರ್ಚಿಸುತ್ತಿದ್ದ ಹೊತ್ತಿನಲ್ಲಿ ಅವರು, ‘ ವರ್ಷಕ್ಕೆ ಒಂದು ಸಾರಿ ತಪ್ಪದೇ War and Peace ಮತ್ತು Anna Karenina ಓದೇ ಓದ್ತೀನಿ ‘ ಅಂತ ಹೇಳಿದ್ದು ನನ್ನ ನೆನಪಿನಲ್ಲಿದೆ. ಅವರ ‘ಭುವನದ ಭಾಗ್ಯ’ ಕುರಿತು ಆಗ ನಾನು ಲಂಕೇಶ್ ಪತ್ರಿಕೆ ಯಲ್ಲಿ ಬರೆದಿದ್ದೆ.
ಅವರು ಬಹುಶೃತ ವಿದ್ವಾಂಸರಾಗಿದ್ದರು. ನಿಷ್ಠುರ ವಿಮರ್ಶಕರಾಗಿದ್ದರು. ಒಮ್ಮೆ ಒಂದು ಪ್ರತಿಷ್ಠಿತ ಪ್ರಶಸ್ತಿ ತೀರ್ಮಾನ ಮಾಡಲು ಒಂದು ಸಭೆ ನಡೆಯಿತು. ಮೂವರು ತೀರ್ಪುಗಾರರಲ್ಲಿ ಅಮೂರ ಒಬ್ಬರು. ಇನ್ನೊಬ್ಬರು ಅವರ ವಯಸ್ಸಿನವರೇ. ಮೂರನೆಯವರು ಇನ್ನೂ ಯುವಕರು. ತೀರ್ಮಾನ ವಿವಾದದಲ್ಲಿ ಆಯಿತು. ಆ ಪ್ರಶಸ್ತಿಗೆ ಯಾವ ರೀತಿಯಿಂದಲೂ ಅರ್ಹವಲ್ಲದ ಕೃತಿಯನ್ನು ಅಮೂರ ಒಪ್ಪಲಿಲ್ಲ.
ಆದರೆ ಉಳಿದಿಬ್ಬರ ಬಹುಮತವಿತ್ತು. ಅದು ಆಯ್ಕೆಯಾಗಬೇಕಾಯ್ತು. ಎಲ್ಲ ಮುಗಿದಮೇಲೆ ಹೊರಡುವಾಗ ಆ ಯುವಕರನ್ನು ಪಕ್ಕಕ್ಕೆ ಕರೆದು ಆಮೂರ ಹೇಳಿದರು, ” ನೀವಿನ್ನೂ ಚಿಕ್ಕ ವಯಸ್ಸಿನವರಿದ್ದೀರಿ, ಇನ್ನು ಮುಂದೆ ಎಂದೂ ಇಂಥ ಲಿಟರರಿ ಪೊಲಿಟಿಕ್ಸ್ ಮಾಡಬೇಡಿ, ” ಅಂದ ಅವರ ಮಾತಿಗೆ ನಾನು ಸಾಕ್ಷಿಯಾಗಿದ್ದೆ. ಆ ಯುವ ಪ್ರಭೃತಿ ತಲೆತಗ್ಗಿಸಿ ನಿಂತಿದ್ದರು.
ಅದು ಸಾಹಿತ್ಯ ಲೋಕದಲ್ಲಿರಬೇಕಾದ ದೊಡ್ಡತನ. ಅಮೂರ ಅಂಥ ಅಪರೂಪದ ದೊಡ್ಡವರು. ನಮಗೆ ಬಹಳಷ್ಟು ಕಲಿಸಿದ್ದಾರೆ. ಅಂಥ ಮೌಲ್ಯಗಳನ್ನು ಕಲಿತು ದೊಡ್ಡವರಾಗಲು ಬದುಕೋಣ. ಅವರ ನೆನಪಿಗೆ ನಮನಗಳು.
-ಅಗ್ರಹಾರ ಕೃಷ್ಣಮೂರ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ7 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ

