Connect with us

ನೆಲದನಿ

ಸಮಾನತೆಯ ಕನಸೊತ್ತ ಬುದ್ಧಮಾರ್ಗಿ’ಹೆಚ್.ಲಿಂಗಪ್ಪ’..!

Published

on

  • ಡಾ.ಕೆ.ಎ.ಓಬಳೇಶ್

ಭಾರತದ ತವರು ಧರ್ಮವಾದ ಬೌದ್ಧಧರ್ಮವು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದು, ವಿಶ್ವದ ಎರಡನೇ ದೊಡ್ಡ ಧರ್ಮವಾಗಿ ತನ್ನ ಕೀರ್ತಿ ಗಳಿಸಿಕೊಂಡಿದೆ. ಆದರೆ ತನ್ನ ತವರು ನೆಲದಲ್ಲಿಯೇ ಇಂದು ಬೌದ್ಧಧರ್ಮವು ಅವನತಿಯನ್ನು ಕಂಡುಕೊಂಡಿದೆ. ಹೀಗೆ ತನ್ನ ತವರು ನೆಲದಿಂದ ಶಾಶ್ವತವಾಗಿ ಮರೆಯಾಗಿದ್ದ ಬೌದ್ಧಧರ್ಮ ಹಾಗೂ ಬುದ್ಧನ ದರ್ಶನವನ್ನು ಪುನರುಜ್ಜಿವನಗೊಳಿಸಿದ ಹಿರಿಮೆ ಭಾರತರತ್ನ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ.

ಬುದ್ಧನ ತತ್ವಾದರ್ಶ, ಸೈದ್ಧಾಂತಿಕ ಚಿಂತನೆ ಹಾಗೂ ಜೀವಪರವಾದ ಮೌಲ್ಯಗಳನ್ನರಿತ ಬಾಬಾಸಾಹೇಬರು ‘ನಾನು ಹಿಂದುವಾಗಿ ಹುಟ್ಟಿದ್ದೇನೆ. ಆದರೆ ಹಿಂದೂವಾಗಿ ಸಾಯಲಾರೆ’ ಎಂಬುದಾಗಿ ನುಡಿದು ತಮ್ಮ ಜೀವಿತದ ಕೊನೆಯ ದಿನಗಳಲ್ಲಿ ತಮ್ಮ ಲಕ್ಷಾಂತರ ಅನುಯಾಯಿಗಳೊಂದಿಗೆ ‘ನಾಗಭೂಮಿ’ಯಲ್ಲಿ ಬೌದ್ಧಧಮ್ಮ ಸ್ವೀಕಾರ ಮಾಡಿದರು.

ಬಾಬಾಸಾಹೇಬರಿಗೆ ಬೌದ್ಧಧಮ್ಮ ಸ್ವೀಕಾರ ಮಾಡಿರುವುದು ಕೇವಲ ಒಂದು ಧರ್ಮವನ್ನು ತೊರೆದು ಇನ್ನೊಂದು ಧರ್ಮವನ್ನು ಒಪ್ಪಿಕೊಳ್ಳುವುದಾಗಿರಲಿಲ್ಲ. ಬಾಬಾಸಾಹೇಬರ ಈ ಧರ್ಮಾಂತರ ಪ್ರಕ್ರಿಯೆಯ ಹಿಂದೆ ಭಾರತದ ಮೂಲನಿವಾಸಿಗಳು ಹಾಗೂ ಈ ದೇಶದ ಬಹುಸಂಖ್ಯಾತರ ಪರವಾದ ಸೈದ್ಧಾಂತಿಕ ತುಡಿತವಿತ್ತು.

ಭಾರತಕ್ಕೆ ವಲಸೆ ಬಂದ ಆರ್ಯರ ಆಕ್ರಮಣಕಾರಿ ನೀತಿಯಿಂದ ಶೋಷಣೆಗೆ ಒಳಗಾದ ಈ ನಾಡಿನ ಬಹುಸಂಖ್ಯಾತರಾದ ಶೂದ್ರರನ್ನು ಶೊಷಣೆಯಿಂದ ಮುಕ್ತಗೊಳಿಸುವುದಾಗಿತ್ತು. ಆ ಮೂಲಕ ಪುರೋಹಿತಶಾಹಿ ಮನಸುಗಳು ತಮ್ಮ ಇಚ್ಚಾನುಸಾರ ರೂಪಿಸಿಕೊಂಡಿದ್ದ ವರ್ಣಾಶ್ರಮ ವ್ಯವಸ್ಥೆ ಹಾಗೂ ಅವೈಜ್ಞಾನಿಕ ನೆಲೆಯ ಮನುವಾದವನ್ನು ತೊಡೆದುಹಾಕಿ ಸಮಾನತೆಯನ್ನು ಸಾರುವ ಭಾಗವಾಗಿ ಬಾಬಾಸಾಹೇಬರು ತಮ್ಮ ನೆಲದ ನಿಜಸತ್ವವನ್ನು ಸಾರುವ ಬೌದ್ಧಧಮ್ಮದತ್ತ ಮುಖಮಾಡಿದರು. ತಾವು ನುಡಿದಂತೆ ನಡೆದು ಬೌದ್ಧಧಮ್ಮ ಸ್ವೀಕಾರ ಮಾಡುವ ಮೂಲಕ ಮುಂದಿನ ಶೋಷಿತ ಜನಾಂಗಕ್ಕೆ ಸ್ವಾಭಿಮಾನಿ ನೆಲೆಯ ಧರ್ಮದ ಮಾರ್ಗವೊಂದನ್ನು ತೋರಿದರು.

ಬಾಬಾಸಾಹೇಬರು ತೋರಿದ ಬೌದ್ಧದರ್ಶನದ ಜಾಡುಹಿಡಿದು ವೈಚಾರಿಕ ಮಾರ್ಗವನ್ನು ಕಂಡುಕೊಳ್ಳುವ ನೆಲೆಯಲ್ಲಿ ಭಾರತದ ಹಲವಾರು ಚಿಂತಕರು ಬೌದ್ಧ ಚಿಂತನೆಗಳನ್ನು ಪ್ರತಿಪಾದಿಸುತ್ತ ಬಂದಿದ್ದಾರೆ. ಬಾಬಾಸಾಹೇಬರ ಬೌದ್ಧದರ್ಶನದ ಪ್ರಭಾವವು ಕನ್ನಡದ ಹಲವಾರು ವಿಚಾರವಾದಿಗಳ ಸೈದ್ಧಾಂತಿಕ ನೆಲೆಗೆ ವೇದಿಕೆಯನ್ನು ರೂಪಿಸಿದೆ.

ಹೀಗೆ ಬಾಬಾಸಾಹೇಬರು ತೋರಿದ ಬೌದ್ಧ ಚಿಂತನೆಗಳನ್ನು ಮೈಗೂಡಿಸಿಕೊಂಡು ಸಮಕಾಲೀನ ಸಮಾಜದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುತ್ತಿರುವ ಬೌದ್ಧ ಚಿಂತಕರಲ್ಲಿ ಶ್ರೀಯುತ ಹೆಚ್.ಲಿಂಗಪ್ಪನವರು ಒಬ್ಬರಾಗಿದ್ದಾರೆ. ದಲಿತ ಸಂವೇದನೆಗಳನ್ನು ಮೈಗೂಡಿಸಿಕೊಂಡು ಶೋಷಿತ ಸಮುದಾಯಗಳಲ್ಲಿ ಜಾಗೃತಿ ಮಾಡಿಸುವ ನೆಲೆಯಲ್ಲಿಯೇ ತಮ್ಮ ವೈಚಾರಿಕ ಚಿಂತನೆಗಳನ್ನು ಪ್ರತಿಪಾದಿಸುತ್ತ ಬಂದಿರುವ ಶ್ರೀಯುತರು ಬಾಬಾಸಾಹೇಬರ ತೋರಿದ ಹಾದಿಯಲ್ಲಿ ಮುನ್ನಡೆಯುತ್ತಿದ್ದಾರೆ.

ಶ್ರೀಯುತ ಹೆಚ್.ಲಿಂಗಪ್ಪನವರು ಓದಿದ್ದು, ಅಧ್ಯಾಪನ ಮಾಡಿದ್ದು ಅರ್ಥಶಾಸ್ತ್ರ ಹಾಗೂ ಹಣಕಾಸಿಗೆ ಸಂಬಂಧಿಸಿದ ವಿಷಯವಾಗಿದ್ದರು ಕೂಡ ತಮ್ಮ ಜೀವಪರವಾದ ಚಿಂತನಧಾರೆಗಳನ್ನು ಅಭಿವ್ಯಕ್ತಿಸಲು ಆಯ್ದುಕೊಂಡಿದ್ದು ಸಾಹಿತ್ಯ ಪ್ರಕಾರ. ಈ ಸಾಹಿತ್ಯ ಪ್ರಕಾರದ ಮೂಲಕ ತಮ್ಮ ಶೋಷಿತ ಸಮುದಾಯದ ಪರವಾದ ಚಿಂತನೆಗಳನ್ನು ಪ್ರತಿಪಾದಿಸುತ್ತ ಬಂದಿದ್ದಾರೆ.

ಇವರ ಈ ವೈಚಾರಿಕ ಚಿಂತನಧಾರೆಗಳಿಗೆ ಪ್ರೇರಕ ಶಕ್ತಿಯೇ ಪರಮಪೂಜ್ಯ ಬಾಬಾಸಾಹೇಬ್ ಅಂಬೇಡ್ಕರ್ ಅವರು. ಬಾಬಾಸಾಹೇಬರ ಸೈದ್ಧಾಂತಿಕ ನೆಲೆಗಳಿಂದ ಪ್ರಭಾವಿತರಾದ ಶ್ರೀಯುತ ಹೆಚ್.ಲಿಂಗಪ್ಪನವರು ವಿದ್ಯಾರ್ಥಿ ದೆಸೆಯಿಂದಲೇ ದಲಿತಪರವಾದ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು.

ಶೋಷಿತ ಸಮುದಾಯಗಳ ಮೇಲೆ ನಡೆಯುವಂತಹ ಹಲ್ಲೆ, ದೌರ್ಜನ್ಯಗಳನ್ನು ಕಣ್ಣಾರೆ ಕಂಡವರು. ಹಿಂದುತ್ವದ ವಿಕೃತ ಸ್ವರೂಪವಾದ ಜಾತಿವಾದದ ಜ್ವಾಲೆಯಿಂದ ಬೆಂದವರು, ನೊಂದವರು. ಹೀಗಾಗಿ ತಮ್ಮ ಬರಹಗಳಲ್ಲಿ ಅಸಮಾನತೆಯ ವಿರೋಧಿ ನೆಲೆಗಳನ್ನೆ ಮುಖ್ಯವಾಗಿಸಿಕೊಂಡಿದ್ದಾರೆ.

ಶ್ರೀಯುತ ಹೆಚ್.ಲಿಂಗಪ್ಪನವರು ಹೋರಾಟ ಕಿಚ್ಚನ್ನು ಹಾಗೂ ದಲಿತಪರವಾದ ಹೋರಾಟಕ್ಕೆ ಬೇಕಾದ ಸೈದ್ಧಾಂತಿಕ ಗಟ್ಟಿತನವನ್ನು ಪ್ರೊ.ಬಿ.ಕೃಷ್ಣಪ್ಪನವರ ಮೂಲಕ ಪಡೆದುಕೊಂಡವರು. ಸಮಾಜದಲ್ಲಿ ನೊಂದವರ ಪರವಾದ ತುಡಿತವನ್ನು ಹೊಂದಿರುವ ಶ್ರೀಯುತರು ಅಂಬೇಡ್ಕರ್ ಅವರ ಚಿಂತಧಾರೆಗಳ ಮೂಲಕವೇ ಸಾಮಾಜಿಕ ಸಮಸ್ಯೆ ಹಾಗೂ ಒತ್ತಡಗಳಿಗೆ ಪರಿಹಾರವನ್ನು ಕಂಡುಕೊಳ್ಳುವತ್ತ ತಮ್ಮ ವಿಚಾರಗಳನ್ನು ವ್ಯಕ್ತಪಡಿಸುತ್ತ ಬಂದಿದ್ದಾರೆ.

ಇವರು ತಮ್ಮ ವೈಚಾರಿಕ ಧಾರೆಗಳ ಮೂಲಕ ಕಟ್ಟಿಕೊಟ್ಟಿರುವ ಕೃತಿಗಳು ದಲಿತ ಹಾಗೂ ಹಿಂದುಳಿದ ಸಮುದಾಯಗಳಿಗೆ ಜಾಗೃತ ನೆಲೆಯೊಂದನ್ನು ರೂಪಿಸಿಕೊಟ್ಟಂತಿವೆ. ತಾವು ರಚಿಸಿರುವ ಹತ್ತಾರು ಕೃತಿಗಳು ಶೋಷಿತ ಸಮುದಾಯದ ಪರವಾದ ತುಡಿತವನ್ನೆ ಹೊಂದಿವೆ.

ಇವರ ಒತ್ತಾಸೆಯ ಮೂಲಕ ರಚನೆಯಾಗಿರುವ ಎಲ್ಲಾ ಕೃತಿಗಳಲ್ಲೂ ಬುದ್ಧ, ಬಸವ, ಅಂಬೇಡ್ಕರ್ ಅವರ ಸಮಾನತೆಯ ಆಶಯಗಳು ಅಂತರ್ಗತವಾಗಿವೆಯೇ ಹೊರತು ವೈಯಕ್ತಿಕವಾದ ಯಾವುದೇ ಸ್ವಾರ್ಥಪರವಾದ ನೆಲೆಗಳು ಕಂಡುಬರುವುದಿಲ್ಲ. ಹೀಗಾಗಿ ನಿಜನೆಲೆಯ ದಲಿತಪರವಾದ ಚಿಂತಕರ ಸಾಲಿನಲ್ಲಿ ಶ್ರೀಯುತ ಹೆಚ್.ಲಿಂಗಪ್ಪನವರು ನಿಲ್ಲುತ್ತಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರು ಶೋಷಣೆಗೆ ಒಳಗಾಗಿರುವ ದಲಿತ ಹಾಗೂ ಹಿಂದುಳಿದ ಸಮುದಾಯವು ಶಿಕ್ಷಣ ಪಡೆದು ಜಾಗೃತರಾದರೆ, ತಮ್ಮ ಶೋಷಿತ ಸಮುದಾಯಗಳ ಪ್ರಗತಿಗಾಗಿ ಹೋರಾಟವನ್ನು ಮುನ್ನಡೆಸುತ್ತಾರೆ ಎಂಬ ಸದಾಶಯವನ್ನು ಹೊಂದಿದ್ದರು. ಹೀಗಾಗಿ ಅವರು ತಮ್ಮ ಹೋರಾಟದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು.

ಆದರೆ ಇಂದು ಬಾಬಾಸಾಹೇಬರು ನೀಡಿರುವ ಸಂವಿಧಾನಿಕ ಸವಲತ್ತು ಪಡೆದ ಬಹುತೇಕ ದಲಿತ ವಿದ್ಯಾವಂತ ವರ್ಗವು ಕಿಂಚಿತ್ತು ಶೋಷಿತರ ಪರವಾದ ತುಡಿತವಿಲ್ಲದೆ ನವಬ್ರಾಹ್ಮಣರಂತೆ ಬದುಕುತಿದ್ದಾರೆ. ಆದರೆ ಬೆರಳೆಣಿಕೆಯಷ್ಟು ದಲಿತ ವಿದ್ಯಾವಂತ ವರ್ಗವು ಮಾತ್ರ ತಮ್ಮ ಸಮುದಾಯದ ಪ್ರಗತಿಗಾಗಿ ತಮ್ಮನ್ನು ಮುಡುಪಾಗಿಟ್ಟುಕೊಂಡು ಸೇವೆ ಸಲ್ಲಿಸುತ್ತಿದೆ.

ಅಂತಹ ಪ್ರಾಮಾಣಿಕ ಅಂಬೇಡ್ಕರ್ ಅನುಯಾಯಿಗಳಲ್ಲಿ ಶ್ರೀಯುತರು ಒಬ್ಬರಾಗಿದ್ದಾರೆ. ಇವರ ಹೋರಾಟ ಹಾಗೂ ಚಿಂತನೆಗಳಲ್ಲಿ ಶೋಷಿತ ಸಮುದಾಯಗಳ ಸ್ವಾಭಿಮಾನದ ತುಡಿತವಿದೆ. ಅಸ್ಪøಶ್ಯತೆಯ ಬೆಂಕಿಯಲ್ಲಿ ಬೆಂದು ನರಳಾಡುತ್ತಿರುವ ತನ್ನ ಸಮುದಾಯವನ್ನು ವೈಚಾರಿಕ ಅರಿವಿನ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬ ಕನಸಿದೆ. ಹೀಗಾಗಿ ಇವರ ಚಿಂತನೆಗಳಲ್ಲಿ ಶೋಷಿತ ಸಮುದಾಯಗಳ ಪರವಾದ ಗಟ್ಟಿ ದನಿಯಿದೆ. ಈ ಸ್ವಾಭಿಮಾನಿ ದನಿಯ ಹಿಂದಿನ ಶಕ್ತಿಯೇ ಬಾಬಾಸಾಹೇಬ್ ಅಂಬೇಡ್ಕರ್.

ಶ್ರೀಯುತ ಹೆಚ್.ಲಿಂಗಪ್ಪನವರು ಅಲಕ್ಷಿತ ಸಮುದಾಯಗಳ ಪರವಾದ ಚಿಂತನೆಯನ್ನೆ ತಮ್ಮ ಸೈದ್ಧಾಂತಿಕ ಅಡಿಪಾಯವಾಗಿಸಿಕೊಂಡಿದ್ದಾರೆ. ಆದ ಕಾರಣ ಹಿಂದುತ್ವದ ತೆಕ್ಕೆಯೊಳಗೆ ತನ್ನ ಅಸ್ಮಿತೆಯನ್ನು ಕಳೆದುಕೊಂಡಿರುವ ಸಮುದಾಯಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನಗಳು ಇವರ ಚಿಂತನೆಯಲ್ಲಿ ಪ್ರಧಾನವಾಗಿ ಕಂಡುಬರುತ್ತವೆ. ಬಾಬಾಸಾಹೇಬರ ಪ್ರಮುಖ ಆಶಯವು ಕೂಡ ಇದೇ ಆಗಿತ್ತು.

ಆದ ಕಾರಣದಿಂದಾಗಿ ಅವರು ‘ಚರಿತ್ರೆ ಇಲ್ಲದವರು ಚರಿತ್ರೆ ನಿರ್ಮಿಸಲಾರರು. ಚರಿತ್ರೆಯನ್ನು ಮರೆತವರು ತಮ್ಮ ಬದುಕನ್ನು ಕಟ್ಟಲಾರರು’ ಎಂಬ ಮಾತನ್ನು ವ್ಯಕ್ತಪಡಿಸಿದ್ದು. ಬಾಬಾಸಾಹೇಬರು ತೋರಿದ ದಾರಿಯಲ್ಲಿ ನಡೆದ ಶ್ರೀಯುತರು ಭಾರತದ ನೆಲದಲ್ಲಿ ಅಸಮಾನತೆಯ ಕೂಸಾದ ಮನುವಾದದ ವಿರುದ್ಧ ಹೋರಾಡಿ, ಸಮಾನತೆಗಾಗಿ ತುಡಿದ ಅಲಕ್ಷಿತ ಸಮುದಾಯದ ಮಹಾನಿಯರ ಮೇಲೆ ಸಾಕಷ್ಟು ಅಧ್ಯಯನಗಳನ್ನು ನಡೆಸುವ ಮೂಲಕ ಮೌಲಿಕವಾದ ಕೃತಿಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಣೆ ಮಾಡಿದ್ದಾರೆ.

ಅಲಕ್ಷಿತ ವಚನಕಾರರು, ವಚನಕಾರ್ತಿಯರು, ಬಾಬು ಜಗಜೀವನ್‍ರಾಮ್, ಬಿ.ಕೃಷ್ಣಪ್ಪ ಹಾಗೂ ಮುಂತಾದ ಅಲಕ್ಷಿತ ಸಮುದಾಯದ ಜೀವಸೆಲೆಗಳ ಹೋರಾಟ ಹಾಗೂ ಅವರ ಸೈದ್ಧಾಂತಿಕ ದೃಷ್ಟಿಕೋನಗಳನ್ನು ಪರಿಚಯಿಸಿದ್ದಾರೆ. ಆ ಮೂಲಕ ಶೋಷಿತ ಸಮುದಾಯಗಳಿಗೆ ವಿಮೋಚನ ನೆಲೆಗಳನ್ನು ತೆರೆದಿಟ್ಟಿದ್ದಾರೆ.

ಬಾಬಾಸಾಹೇಬರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಸಮಾನತೆಯತ್ತ ಮುನ್ನಡೆಯಬೇಕಾದ ದಲಿತ ಸಮುದಾಯಗಳಲ್ಲಿಯೇ ಇಂದು ‘ಎಡ-ಬಲ’ ಎಂಬ ಭಿನ್ನಮತಗಳು ಸೃಷ್ಟಿಯಾಗುತ್ತಿವೆ. ಇದು ಅತ್ಯಂತ ಅಪಾಯಕಾರಿಯಾದ ಬೆಳವಣಿಗೆ. ಎಡ-ಬಲಗಳ ನಡುವಿನ ಈ ದ್ವೇಷವು ಬಾಬಾಸಾಹೇಬರನ್ನು ಕೂಡ ಹುಟ್ಟಿನ ನೆಲೆಯ ಜಾತಿಯ ಆಧಾರದ ಮೇಲೆ ಆರಾಧಿಸುವ, ದ್ವೇಷಿಸುವ ಹಂತವನ್ನು ತಲುಪಿದೆ.

ಇದರ ವಿಕೃತ ಫಲವಾಗಿ ಶೋಷಿತರಿಗಾಗಿಯೇ ತನ್ನ ಬದುಕನ್ನು ಮುಡುಪಾಗಿಟ್ಟ ತಂದೆ ಬಾಬಾಸಾಹೇಬರನ್ನು ದ್ವೇಷಿಸುವ ಹಂತವನ್ನು ನಮ್ಮ ಮುಂದಿನ ಕೆಲವು ದಲಿತ ಸಂಘಟನೆಗಳು ಹಾಗೂ ಅವುಗಳ ನಾಯಕರು ತಲುಪಿದ್ದಾರೆ. ಈ ಪಾಪಕೃತ್ಯ ಹೆತ್ತ ತಂದೆಗೆ ಬಗೆದಷ್ಟೆ ದ್ರೋಹದ್ದು. ನಮ್ಮ ಮುಂದಿರುವ ಎಡ-ಬಲ ಹಾಗೂ ಅನ್ಯ ಸಂಘಟನೆಗಳ ವೈಯಕ್ತಿಕ ದ್ವೇಷ ಏನೆ ಇರಲಿ.

ಆದರೆ ಈ ವೈಯಕ್ತಿಕ ದ್ವೇಷಕ್ಕೆ ಬಾಬಾಸಾಹೇಬರನ್ನು ಬಳಸಿಕೊಳ್ಳುವುದು ಸೂಕ್ತವಲ್ಲ. ಇಂತಹ ಮಾರಕ ಪ್ರವೃತ್ತಿಗಳಿಗೆ ಚಿಕಿತ್ಸಕ ದೃಷ್ಟಿಕೋನವನ್ನು ಬಿತ್ತರಿಸುವ ಅಂಶಗಳು ಶ್ರೀಯುತರ ಹೆಚ್.ಲಿಂಗಪ್ಪನವರ ಚಿಂತನೆಗಳಲ್ಲಿ ಅಂತರ್ಗತವಾಗಿವೆಯಾದರೂ ಮತ್ತಷ್ಟು ಈ ಬಗೆಯ ಚಿಂತನೆಗಳು ಇವರಿಂದ ಹೊರಹೊಮ್ಮಲಿ. ಬಾಬಾಸಾಹೇಬರನ್ನು ಕೇಂದ್ರಶಕ್ತಿಯಾಗಿಟ್ಟುಕೊಂಡು ದಲಿತ ಸಮುದಾಯಗಳು ಅಸ್ಪೃಶ್ಯತೆ ಹಾಗೂ ಅವಮಾನಗಳಿಂದ ಹೊರಬಂದು, ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವಂತಹ ವೇದಿಕೆಯನ್ನು ಸೃಜಿಸುವ ಚಿಂತನಧಾರೆಗಳು ಇಂದಿಗೆ ಅತ್ಯಗತ್ಯವಾಗಿದೆ. ಆದ್ದರಿಂದ ಬಾಬಾಸಾಹೇಬರ ಹಾದಿಯಲ್ಲಿ ಮುನ್ನಡೆಯುತ್ತಿರುವ ಶ್ರೀಯುತರಿಂದ ಇಂತಹ ಹೊಸ ಧಾರೆಗಳು ರೂಪಗೊಳ್ಳಲಿ ಎಂದು ಆಶೀಸುತ್ತೇವೆ.

(-ಡಾ.ಕೆ.ಎ.ಓಬಳೇಶ್ :
9591420216)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’; ವಿದ್ಯಾರ್ಥಿಗಳ ಕಲರವ

Published

on

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

ವಸ್ತು ಪ್ರದರ್ಶನ

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

ದೇಸೀ ಆಟಗಳು

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಜಾನಪದ ಕಲೆ, ಸಂಸ್ಕೃತಿಯು ಹಿಂದಿನಿಂದಲೂ ಮನುಷ್ಯ ಜೀವನದೊಂದಿಗೆ ಸಂಬಂಧ ಹೊಂದಿದ್ದು ಇಂದಿನ ಪೀಳಿಗೆಯ ಮಕ್ಕಳು ಜಾನಪದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ. ಜನಪದ ಪರಂಪರೆಯ ಪ್ರತೀಕವಾಗಿ ‘ಜನಪದ ಉತ್ಸವ – 2025’ ನಮ್ಮ‌ಸಂಸ್ಕೃತಿ ನಮ್ಮ ಹೆಮ್ಮೆ ಹೆಚ್ಚು ಅರ್ಥ ಪೂರ್ಣವಾಗಿ ಮೂಡಿ ಬಂದಿದೆ.
| ಜಾನಪದ ತಜ್ಞ, ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ

ನಮ್ಮ ದೇಶಿ ಸಂಸ್ಕೃತಿಯನ್ನು ಸಂರಕ್ಷಿಸಿ, ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ತಲೆಮಾರುಗಳಿಂದ ಹೊಂದಿರುವ, ಆಯಾ ಪ್ರಾದೇಶಿಕ ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿಯ ಸೊಗಡುಗಳು ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಒಂದು ಅತ್ಯುತ್ತಮ ಪ್ರಯತ್ನ ‘ಜಾನಪದ ‌ಉತ್ಸವ’-2025.
| ಡಾ.ಬಿ‌.ಜಿ.ಅಮೃತೇಶ್ವರ, ಪ್ರಾಂಶುಪಾಲರು

ಜನಪದರ ಬದುಕು, ಆಧುನಿಕ ಜಾಗತೀಕರಣದ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗುತ್ತಿದೆ ಅದರ ಸದಾಶಯವನ್ನು ಕಾಲೇಜು ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ನಮ್ಮ ಕಾಲೇಜಿನ ವಿಧ್ಯಾರ್ಥಿಗಳು ಎಲ್ಲಾ ಅಧ್ಯಾಪಕರ ಸಹಾಯದಿಂದ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ ಅವರಿಗೆ ಅಭಿನಂದನೆಗಳು.
| ಷಣ್ಮುಖಪ್ಪ ಕೆ ಎಚ್ ,ಕಾರ್ಯಕ್ರಮದ ನಿರ್ದೇಶಕರು, ಸಂಚಾಲಕರು,ಸಾಂಸ್ಕೃತಿಕ ವೇದಿಕೆ

Continue Reading

ಅಂತರಂಗ

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

Published

on

  • ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ

ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು

ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.

ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.

ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.

ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ

ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.

ಮಹಿಳಾ ದಿನಾಚರಣೆಯ ಇತಿಹಾಸ

ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:

1. 1908 – ಮಹಿಳಾ ಹಕ್ಕುಗಳ ಹೋರಾಟ:

ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.

2. 1909 – ಮೊದಲ ಮಹಿಳಾ ದಿನಾಚರಣೆ:

ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.

3. 1910 – ಅಂತಾರಾಷ್ಟ್ರೀಯ ಹೋರಾಟ:

ಡೆನ್ಮಾರ್ಕ್‌ನ ಕೊಪನ್‌ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.

4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:

ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.

5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:

1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.

6. 1975 – ವಿಶ್ವ ಮಹಿಳಾ ವರ್ಷ:

UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು

7. 2011 – 100ನೇ ವಾರ್ಷಿಕೋತ್ಸವ:

2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.

ಮಹಿಳಾ ದಿನಾಚರಣೆಯ ಉದ್ದೇಶ

ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.

ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ

ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್‌ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.

ಮಹಿಳೆಯರು ಬದುಕಿನ ಉತ್ಸಾಹ

ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.

ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.

ಸಾಧನೆಗಳ ಬೆಳಕು

1. ಶಿಕ್ಷಣ ಮತ್ತು ಸಶಕ್ತೀಕರಣ:

ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

2. ಉದ್ಯೋಗ ಹಾಗೂ ಉದ್ಯಮಶೀಲತೆ:

ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.

3. ಕ್ರೀಡೆ ಮತ್ತು ಸಾಹಸ:

ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.

4. ಸಮಾಜಸೇವೆ ಮತ್ತು ಪ್ರಭಾವ:

ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.

ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ

ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.

ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್

ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.

“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending