ನೆಲದನಿ
‘ಹಾದಿಗಲ್ಲು’ : ಜನಪರ ಹೆಜ್ಜೆಗಳ ಅನನ್ಯ ಯಾನ
- ಡಾ.ಎನ್.ಕೆ.ಪದ್ಮನಾಭ,ಸಹಾಯಕ ಪ್ರಾಧ್ಯಾಪಕರು,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ
ಲಾಕ್ಡೌನ್ನ ಸುಧೀರ್ಘ ಅವಧಿಯ ನಂತರ ತೀರಾ ಇತ್ತೀಚೆಗೆ ನಮ್ಮ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಕ್ಲಾಸ್ಗಳು ಶುರುವಾದವು. ಕಳೆದ ವಾರದ ತರಗತಿಯಲ್ಲಿ ಸಾರ್ವಜನಿಕ ಸಂಪರ್ಕದ ಕುರಿತ ವ್ಯಾಖ್ಯಾನ ಆಧರಿಸಿ ಚರ್ಚೆ ಆರಂಭಿಸಿದ್ದೆ.
ಇಡೀ ಸರ್ಕಾರೀ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸಲು ಆಡಳಿತದಲ್ಲಿ ಸಾರ್ವಜನಿಕ ಸಂಪರ್ಕ ಅಥವಾ ಪಬ್ಲಿಕ್ ರಿಲೇಷನ್ಸ್ ಎಂಬ ಪ್ರತ್ಯೇಕ ಇಲಾಖೆ ರೂಪಿಸಿ ಅದನ್ನು ಬಲಪಡಿಸುವುದರ ಕಡೆಗೆ ನೀತಿ ನಿರೂಪಕರು ಯೋಚಿಸುವ ಅಗತ್ಯವಿದೆ ಎಂಬ ಪ್ರತಿಪಾದನೆಯೊಂದಿಗೆ ತರಗತಿಯಲ್ಲಿ ನನ್ನ ಉಪನ್ಯಾಸ ಶುರುವಾಗಿತ್ತು.
ರೆಕ್ಸ್ ಹಾರ್ಲೋ ಅವರ ವಿಸ್ತೃತವಾದ ವ್ಯಖ್ಯಾನವನ್ನು ಈ ಕೇಂದ್ರ ಆಶಯ ಆಧರಿಸಿ ವಿವರಿಸಿದ್ದೆ. ಪ್ರತ್ಯೇಕವಾದ ಸ್ವಾಯತ್ತ ಸಂಸ್ಥೆಯಾಗಿ ಸರ್ಕಾರಿ ಆಡಳಿತದ ಉನ್ನತೀಕರಣಕ್ಕೆ ಹೇಗೆ ನೆರವಾಗಬಹುದು ಎಂಬುದನ್ನು ವಿವಿಧ ಆಯಾಮಗಳಲ್ಲಿ ವಿಶ್ಲೇಷಣೆಗೊಳಪಡಿಸಲು ಪ್ರಯತ್ನಿಸಿದ್ದೆ.
ಇದಾದ ಮರುದಿನ ನನ್ನ ಓದಿಗೆ ಸಿಕ್ಕಿದ್ದು ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಅವರು ಬರೆದ ‘ಹಾದಿಗಲ್ಲು’ ಕೃತಿ. ‘ಆತ್ಮವೃತ್ತಾಂತದ ಮೊದಲ ಚರಣ’ ಎಂಬ ಟ್ಯಾಗ್ಲೈನ್ನೊಂದಿಗೆ ಐದನೇ ಮುದ್ರಣ ಕಂಡಿರುವ ಈ ಕೃತಿಯೊಂದಿಗಿನ ಓದಿನ ಯಾನ ನನ್ನ ತರಗತಿಯ ಚರ್ಚೆಯ ಮುಂದುವರಿದ ಭಾಗದಂತಿತ್ತು. ವ್ಯಕ್ತಿಗತ ಯಶಸ್ಸನ್ನು ಸಮಾಜಪರ-ಜನಪರ ಕೆಲಸಗಳೊಂದಿಗೆ ಸಮೀಕರಿಸಿ ಸಾಧನೆ ಸಾಧ್ಯವಾಗಿಸಿಕೊಂಡ ಹಿಂದಿನ ಮತ್ತು ವರ್ತಮಾನದ ಎಲ್ಲಾ ಸಾಧಕರೊಳಗೆ ಪಬ್ಲಿಕ್ ರಿಲೇಷನ್ಸ್ ತಂತ್ರಜ್ಞ ಕ್ರಿಯಾಶೀಲತೆ ಇರುತ್ತದೆ ಎಂಬ ನನ್ನ ತರಗತಿಯ ಪ್ರತಿಪಾದನೆಗೆ ಪೂರಕವಾದ ಸಮರ್ಥನಾ ಸಾಕ್ಷ್ಯವಾಗಿ ಇಡೀ ಕೃತಿ ಸಹಾಯಕವಾಯಿತು.
ಖಾಸಗೀಕರಣವೊಂದೇ ಸದ್ಯದ ಎಲ್ಲ ಬಗೆಯ ಸಮಸ್ಯೆಗಳಿಗೆ ಪರಿಹಾರೋಪಾಯ ಎಂಬ ಪೂರ್ವಗ್ರಹಪೀಡಿತ-ಅವಸರದ ದೃಷ್ಟಿಕೋನವೇ ವಿಜೃಂಭಿಸುತ್ತಿರುವಾಗ ಸರ್ಕಾರೀ ಆಡಳಿತದ ಪರಿಕಲ್ಪನೆಯೊಳಗೇ ಇರುವ ಸರ್ವೋದಯದ ಪ್ರಾಯೋಗಿಕ ಆಯಾಮವನ್ನು ಗಂಭೀರವಾಗಿ ಪರಿಗಣಿಸಬೇಕಾದ ಸಕಾರಾತ್ಮಕ ಒತ್ತಡವನ್ನು ‘ಹಾದಿಗಲ್ಲು’ ಸೃಷ್ಟಿಸುತ್ತದೆ. ಈ ಕೃತಿಯ ಓದು ಶುರುವಾಗುವ ಮುನ್ನಾದಿನದ ನನ್ನ ತರಗತಿಯಲ್ಲಿ ಸರ್ಕಾರಿ ವ್ಯವಸ್ಥೆಯೊಳಗೆ ಪಿಆರ್ ಸ್ವಾಯತ್ತ ಸಂಸ್ಥೆಯಾಗಿ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾವಾರು ಮಟ್ಟಗಳಲ್ಲಿ ಹೇಗೆ ಕಾರ್ಯನಿರ್ವಹಿಸಬಹುದು ಎಂಬುದನ್ನು ಪ್ರಸ್ತಾಪಿಸಿದ್ದೆ.
ದಯಾನಂದ ಅವರು ಬರೆದ ಒಂದೊಂದು ಅಧ್ಯಾಯವೂ ನನ್ನ ಪ್ರತಿಪಾದನೆಗೆ ಸಹಾಯಕವಾಗುವ ಬೌದ್ಧಿಕ ಪ್ರಾಯೋಗಿಕ ಸಂಪನ್ಮೂಲವಾಗಿ ಒದಗಿಬಂದಿದ್ದು ಒಂದು ವಿಶೇಷ ಅನುಭವ. ಒಂದು ಅಧ್ಯಾಯದಿಂದ ಮತ್ತೊಂದು ಅಧ್ಯಾಯಕ್ಕೆ ದಾಟಿಕೊಳ್ಳುವಾಗಲೆಲ್ಲಾ ಅವರೊಳಗೆ ಸುಪ್ತವಾದ ಸಾರ್ವಜನಿಕ ಸಂಪರ್ಕ ಕೌಶಲ್ಯದೊಂದಿಗೆ ಬೆರೆತುಹೋದ ಮನುಷ್ಯಪರ ಕಾಳಜಿ ಸರ್ಕಾರಿ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಬಹುದು ಎಂಬ ಆಶಾವಾದ ಗಟ್ಟಿಗೊಳ್ಳುತ್ತಲೇ ಇತ್ತು.
ಉನ್ನತ ಹಂತದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ತಾನು ಪ್ರತಿನಿಧಿಸುವ ಆಡಳಿತಾತ್ಮಕ ವ್ಯವಸ್ಥೆಯೊಳಗೆ ಸಮಗ್ರ ಬದಲಾವಣೆ ತರುವ ಕನಸನ್ನು ಬಿತ್ತಿ ಸಮೃದ್ಧಿಯನ್ನು ನೆಲೆಗೊಳಿಸುವ ಮಾದರಿಗಳನ್ನು ಸೃಷ್ಟಿಸಬಹುದು. ಎಲ್ಲವೂ ಸರಿಯಿಲ್ಲ ಎಂಬ ಹತಾಶೆಗಿಂತಲೂ ಮಿತಿಗಳನ್ನೇ ಗುರುತಿಸಿ ಅವುಗಳನ್ನೇ ಸಮೃದ್ಧಿಯ ಕಡೆಗೆ ಪಯಣಿಸಲು ಒತ್ತಡವನ್ನುಂಟುಮಾಡುವ ಅಪೂರ್ವ ಅವಕಾಶಗಳನ್ನಾಗಿಸಿಕೊಂಡರೆ ಬದಲಾವಣೆ ಸಾಧ್ಯವಾಗುತ್ತದೆ. ಈ ಬಗೆಯ ಮಹತ್ವದ ಬದಲಾವಣೆಗಾಗಿ ಮ್ಯಾನೇಜ್ಮೆಂಟಿನ ಅಕ್ಯಾಡೆಮಿಕ್ ಅಧ್ಯಯನದ ಅವಶ್ಯಕತೆ ಇಲ್ಲ.
ಸದಾ ಸಕಾರಾತ್ಮಕ ಮನೋಬಲ, ವ್ಯಕ್ತಿಗತ ಬದುಕಿನ ಅನುಭವಗಳು, ಸ್ವತಃ ಕಂಡುಕೊಂಡ ವಿನೂತನ ಅವಲೋಕನದ ಮಾದರಿ, ಜಗತ್ತನ್ನು, ಸುತ್ತಮುತ್ತಲಿನ ಘಟನೆ- ಮನುಷ್ಯ ವರ್ತನೆಗಳನ್ನು ಸೂಕ್ಷ್ಮವಾಗಿ ನೋಡುವ ಚಿಕಿತ್ಸಕ ದೃಷ್ಟಿಕೋನ, ವೃತ್ತಿಪರ ಯಶಸ್ಸಿನ ಸ್ಪಷ್ಟ ಪ್ರಜ್ಞೆ- ಇವಿಷ್ಟೂ ಇದ್ದರೆ ಬಹುದೊಡ್ಡ ಸಾಮಾಜಿಕ ಪಲ್ಲಟಗಳಿಗೆ ಕಾರಣವಾಗಬಲ್ಲ ಕೊಡುಗೆಗಳನ್ನು ನೀಡಬಹುದು. ‘ಹಾದಿಗಲ್ಲು’ ಇಂಥದ್ದೊಂದು ಒಳನೋಟವನ್ನು ಕಟ್ಟಿಕೊಳ್ಳಲು ನೆರವಾಗುತ್ತದೆ.
ಮ್ಯಾನೇಜ್ಮೆಂಟ್ ಅಕ್ಯಾಡೆಮಿಕ್ ವಲಯದಲ್ಲಿ ಮತ್ತೆ ಮತ್ತೆ ಪ್ರಸ್ತಾಪಿತವಾಗುವ ಸ್ವಾಟ್ ಅನಾಲಿಸಿಸ್ (SWOT Analysis – Strengths, Weaknesses, Opportunities and Threats)ಪರಿಕಲ್ಪನೆಯು ಪರಿಣಾಮಕಾರಿಯಾಗಿ ಪ್ರಯೋಗಕ್ಕೊಳಪಡಬೇಕಾಗಿರುವುದು ಸರ್ಕಾರೀ ಆಡಳಿತಾತ್ಮಕ ಹಂತಗಳಲ್ಲಿ. “ಯೋಜನೆಗಳು ರೂಪುಗೊಳ್ಳುತ್ತವೆ, ಹಾಗೆ ರೂಪುಗೊಂಡು ಅನುಷ್ಠಾನಗೊಳ್ಳದೇ ನಿಷ್ಪ್ರಯೋಜಕವೆನ್ನಿಸುತ್ತವೆ” ಎಂಬ ಸಾರ್ವತ್ರಿಕ ಟೀಕೆ ಈಗಲೂ ವ್ಯಕ್ತವಾಗುತ್ತಲೇ ಇರುತ್ತದೆ.
ಯಾರದೋ ಪ್ರಬಂಧಕ್ಕೆ, ಇನ್ಯಾರದೋ ಭಾಷಣಕ್ಕೆ, ಮತ್ತಿನ್ಯಾರದೋ ಭಾವಾವೇಶಭರಿತ ಜನಪ್ರಿಯ ಸ್ವರೂಪದ ವಾಕ್ ವಾಹಕ್ಕೆ ಈ ಟೀಕಾತ್ಮಕ ಹೇಳಿಕೆಯ ಧ್ವನಿ ಪುನರಾವರ್ತಿತವಾಗುತ್ತಲೇ ಇರುತ್ತದೆ. ಆಡಳಿತ ಮತ್ತು ವಿರೋಧ ಪಕ್ಷಗಳವರು ಈ ಹೇಳಿಕೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಆ ಕ್ಷಣದ ಲಾಭ ಪಡೆದುಕೊಳ್ಳುವ ತಾತ್ಪೂರ್ತಿಕ ಉದ್ದೇಶವನ್ನು ಈಡೇರಿಸಿಕೊಳ್ಳುತ್ತಲೇ ಇರುತ್ತಾರೆ.
ಟಿಆರ್ಪಿ ಎಂಬ ಮಹಾಮಾಯೆಯ ಹಿಡಿತಕ್ಕೊಳಗಾದ ಸುದ್ದಿಮಾಧ್ಯಮಗಳೂ ಇವುಗಳನ್ನೇ ವೈಭವೀಕರಿಸುತ್ತವೆ.ಯೋಜನೆಗಳ ಕಟ್ಟುನಿಟ್ಟಿನ ಅನುಷ್ಠಾನ ಮತ್ತು ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಸರ್ಕಾರಿ ವ್ಯವಸ್ಥೆಯ ಪುನರುತ್ಥಾನದ ಕುರಿತ ಪರಿಹಾರೋಪಾಯದ ತಾರ್ಕಿಕ ಸಂವಾದ ನಡೆದರೂ ಅದು ಸಂಪೂರ್ಣವಾಗಿ ಆಡಳಿತಾತ್ಮಕ ಪ್ರಾಯೋಗಿಕತೆಯಲ್ಲಿ ಪ್ರತಿಫಲಿತವಾಗದೇ ಉಳಿದುಬಿಟ್ಟಿದೆ.
ಬರೀ ಚರ್ಚೆ, ಸಮಾಲೋಚನೆ, ಚಿಂತನೆಗಳು, ಪ್ರಯತ್ನಗಳು ಬಿಡಿಬಿಡಿಯಾಗಿ ನಡೆದವೇ ಹೊರತು ನಿರೀಕ್ಷಿತ ಆಡಳಿತಾತ್ಮಕ ಪ್ರಯೋಗಶೀಲತೆ ಸಮಗ್ರವಾಗಿ ವ್ಯಕ್ತವಾಗಲಿಲ್ಲ. ಇಂಥದ್ದೊಂದು ಕೊರಗಿನೊಂದಿಗೇ ಹೊಸ ಪೀಳಿಗೆ ಬದುಕಬೇಕಾಗಿಲ್ಲ ಎಂಬುದನ್ನು ‘ಹಾದಿಗಲ್ಲು’ ಸ್ಪಷ್ಟಪಡಿಸುತ್ತದೆ. ಆಡಳಿತಾತ್ಮಕ ಪ್ರಯೋಗಶೀಲತೆ ಯಾವ ಯಾವ ರೀತಿಯಲ್ಲಿ ಅಳವಡಿಸಲ್ಪಡಬಹುದು ಎಂಬ ದಾರಿಗಳನ್ನು ಕಾಣಿಸುತ್ತದೆ.
ಆಡಳಿತದ ವಿವಿಧ ಹುದ್ದೆಗಳ ವಿವಿಧ ಹಂತಗಳ ಕಾರ್ಯನಿರ್ವಹಣೆಯು ಆಯಾ ಕಾಲದ ಅಗತ್ಯಗಳಿಗೆ ತಕ್ಕಂತೆ ಹೇಗೆ ಪುನರ್ಸ್ವರೂಪ ಪಡೆದುಕೊಳ್ಳಬಹುದು ಎಂಬ ಹೊಳಹುಗಳನ್ನು ಹೊಳೆಸುತ್ತದೆ. ‘ಅಧಿಕಾರ’ ಮತ್ತು ‘ಅಧಿಕಾರಿ’ ಈ ಎರಡೂ ಪದಗಳ ಕುರಿತು ಬೇರೂರಿಬಿಟ್ಟಿರುವ ಹತಾಶೆ, ಅಸಮಾಧಾನ ಮತ್ತು ಆಕ್ರೋಶದ ಭಾವಗಳೆಲ್ಲವನ್ನೂ ಇಲ್ಲವಾಗಿಸಿ ಅವುಗಳ ಸ್ಥಾನಗಳಲ್ಲಿ ಆಶಾವಾದ, ಆತ್ಮಸಂತೃಪ್ತಿ ಮತ್ತು ಹೊಂಗನಸುಗಳ ಮಹತ್ವಾಕಾಂಕ್ಷೀ ಮನೋಬಲವನ್ನು ನೆಲೆಗೊಳಿಸಿಕೊಳ್ಳಲು ಈ ಕೃತಿಯು ಪ್ರೇರಣೆ ನೀಡುತ್ತದೆ.
ಐಎಎಸ್, ಕೆಎಎಸ್ ಅಧಿಕಾರಿಗಳ ಬಗ್ಗೆ ಜನರಲ್ಲಿ ತಪ್ಪುಕಲ್ಪನೆಯೊಂದಿದೆ. ಎಲ್ಲರೂ ಹೀಗೆ ಯೋಚಿಸುವುದಿಲ್ಲವಾದರೂ ಇದು ಇಡೀ ಸಾಮುದಾಯಿಕ ದೃಷ್ಟಿಕೋನದ ಮೇಲೆಯೇ ಪ್ರಭಾವ ಬೀರುತ್ತದೆ. ಅದೇನೆಂದರೆ, ಅಷ್ಟೆಲ್ಲಾ ಕಷ್ಟಪಟ್ಟು ಓದಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಅಧಿಕಾರಿಗಳಾಗಿ ನೇಮಕಗೊಂಡು ಏನನ್ನೂ ಓದಿಕೊಳ್ಳದ, ವಿಚಿತ್ರ ಧೋರಣೆಗಳೊಂದಿಗಿನ ಮಂತ್ರಿಗಳು, ರಾಜಕಾರಣಿಗಳ ಮುಂದೆ ಕೈಕಟ್ಟಿ ನಿಲ್ಲಬೇಕಾಗುತ್ತದೆ, ಅಂಥದ್ದೊಂದು ವಿಚಿತ್ರ ಸ್ಥಿತಿ ಎದುರಿಸಿ ಸ್ವಾಭಿಮಾನ ಬಲಿಕೊಡಬಾರದು ಎನ್ನುವ ಅವಸರದ ಧಾಟಿಯ ಮಾತುಗಳು ಕೇಳಿಬರುತ್ತವೆ.
ಇಂಥ ಅವಸರವಾದಿ ದೃಷ್ಟಿಕೋನಗಳನ್ನು ‘ಹಾದಿಗಲ್ಲು’ ಅಲ್ಲಗಳೆಯುತ್ತದೆ. ಐಎಎಸ್, ಕೆಎಎಸ್ ಅಧಿಕಾರಿ ಹುದ್ದೆಗಳು ಪ್ರತಿಷ್ಠಿತ ಮಂತ್ರಿಮಹೋದಯರ ಗುಲಾಮಗಿರಿಯ ಸಂಕೇತಗಳಲ್ಲ ಎಂಬುದನ್ನು ಅಧಿಕೃತವಾಗಿ ದೃಢಪಡಿಸುತ್ತದೆ. ವ್ಯಕ್ತಿಗತ ವೃತ್ತಿಬದ್ಧತೆ, ಬದಲಾವಣೆಗೆ ತುಡಿಯುವ ಅಂತರ್ಗತ ಶಕ್ತಿ, ಸದ್ಯದ ಕಾಲದ ಸವಾಲುಗಳಿಗೆ ಎದುರುಗೊಂಡು ಹೊಸತಾದ ಮುನ್ನಡೆ ಸಾಧಿಸುವ ಸೌಜನ್ಯಯುತ ಛಲವೊಂದಿದ್ದರೆ ಈ ಹುದ್ದೆಗಳ ನಿರ್ವಹಣೆಯು ಆತ್ಮತೃಪ್ತಿಯನ್ನು ತಂದುಕೊಡುತ್ತದೆ ಎಂಬುದನ್ನು ದಯಾನಂದ ಅವರು ಸ್ವಾನುಭವದ ನಿದರ್ಶನಗಳ ಮೂಲಕ ಸಾಬೀತುಪಡಿಸಿದ್ದಾರೆ.
ತಾವು ವಿವಿಧ ಇಲಾಖೆಗಳ ನೇತೃತ್ವ ವಹಿಸಿದಾಗಲೆಲ್ಲಾ ನಿಯಮಾವಳಿಗಳಿಗೆ ಅನುಗುಣವಾಗಿ ಅನುಷ್ಟಾನಕ್ಕೆ ತಂದ ಯೋಚನೆ, ಯೋಜನೆಗಳು, ನೊಂದವರಿಗೆ ನ್ಯಾಯ ದೊರಕಿಸಿಕೊಟ್ಟ ತತ್ಕ್ಷಣದ ಕ್ರಮಗಳು, ಇಲಾಖೆಗಳಿಗೆ ಆಧುನಿಕ ತಾಂತ್ರಿಕಸ್ಪರ್ಶ ನೀಡಿದ ಕ್ರಾಂತಿಕಾರಿ ಹೆಜ್ಜೆಗಳು, ಎಲ್ಲಕ್ಕಿಂತ ಹೆಚ್ಚಾಗಿ ಉನ್ನತಾಧಿಕಾರಿ ಹುದ್ದೆಯ ವೃತ್ತಿಪರ ಮೌಲ್ಯವನ್ನು ವಿಸ್ತರಿಸಿದ ಅನೇಕ ಅನುಭವಗಳ ಆಪ್ತ ಉಲ್ಲೇಖವು ಇಡೀ ಕೃತಿಯನ್ನು ಬದಲಾವಣೆಯ ಮಹೋನ್ನತ ಸಾಧ್ಯತೆಗಳನ್ನು ಕಂಡರಿಸುವ ಪ್ರಾಯೋಗಿಕ ಜ್ಞಾನಸಂಪನ್ಮೂಲವನ್ನಾಗಿಸಿದೆ.
ಈ ಕೃತಿಯು ಕೇವಲ ಆಡಳಿತಾತ್ಮಕ ಹುದ್ದೆ ನಿರ್ವಹಣೆಯ ಸ್ವಾನುಭವ ವಿವರಗಳ ಸಂಕಲನವಷ್ಟೇ ಅಲ್ಲ. ಈಗಾಗಲೇ ಬಾಳಿಹೋದ ನಮ್ಮ ಹಿರಿಯ ತಲೆಮಾರುಗಳು ಹಾದುಬಂದ ಒಡಲಬೇಗೆಯನ್ನು ಅಕ್ಷರಗಳಲ್ಲಿ ಹಿಡಿದಿಡುವ ಸೃಜನಶೀಲ ಆಕೃತಿಯನ್ನಾಗಿಯೂ ಇದನ್ನು ಗ್ರಹಿಸಬಹುದು. ಸಾಮಾಜಿಕ ಏಣಿ-ಶ್ರೇಣಿ ವ್ಯವಸ್ಥೆಯೊಳಗೆ ಯಾತನೆ ಅನುಭವಿಸುತ್ತಾ ಬದಲಾವಣೆಯ ಹೊಂಗನಸುಗಳಿಂದ ದೂರ ಉಳಿದು ಅಭಿವೃದ್ಧಿಯ ಮುಖ್ಯವಾಹಿನಿ ಸೇರಿಕೊಳ್ಳುವ ಕನಸುಗಳಿಲ್ಲದೇ ಬದುಕುವ ಅನಿವಾರ್ಯತೆಯ ಗತದ ಕಾಲವನ್ನು ದಯಾನಂದ ಅವರು ಕಾಣಿಸುವ ಪರಿ ಅನನ್ಯ.
ಜಡಗೊಂಡ ಸಾಮಾಜಿಕ ವ್ಯವಸ್ಥೆಯಲ್ಲಿ ಪಲ್ಲಟಗಳನ್ನು ನೆಲೆಗೊಳಿಸುವ ಹೆಜ್ಜೆಗಳ ವಿವರಗಳನ್ನು ಸೌಜನ್ಯದ ಧಾಟಿಯಲ್ಲಿ ಮುಂದಿಡುತ್ತಲೇ ಸಾಂಸ್ಕೃತಿಕ ಪ್ರಜ್ಞೆಯನ್ನು ಕಟ್ಟಿಕೊಳ್ಳಲು ಬೇಕಾದ ಒಳನೋಟಗಳು ಅವರ ಬರಹಕ್ಕೆ ಜೀವಂತಿಕೆಯನ್ನು ತಂದುಕೊಟ್ಟಿವೆ. ಅವರೊಳಗಿನ ಅಪ್ಪಟ ಸಾಹಿತ್ಯಕ ವಿಮರ್ಶಕನನ್ನು ಈ ಕೃತಿ ಪರಿಚಯಿಸಿದೆ.
ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಡಿ.ವಿ.ಜಿ ಅವರಂಥ ಪ್ರತಿಭೆಗಳನ್ನು ದಯಾನಂದ್ ವರ್ತಮಾನದಲ್ಲಿ ನಿಂತು ಗ್ರಹಿಸುವ ಬಗೆ ನಮ್ಮನ್ನು ಚಿಂತನೆಗೆ ಹಚ್ಚುತ್ತದೆ. ಕೆಲವು ಸಿನಿಮಾಗಳ ಪ್ರಸ್ತಾಪದ ಮೂಲಕ ಮೌಲ್ಯಪರ ಆಲೋಚನಾಕ್ರಮಗಳ ವೈಶಿಷ್ಟ್ಯತೆಯನ್ನು ಮನಗಾಣಿಸುತ್ತಾರೆ. ಅಧ್ಯಾಯಗಳಲ್ಲಿ ಕಾಣಿಸಿಕೊಳ್ಳುವ ಪಾತ್ರಗಳು ಕೇವಲ ನೆನಪುಗಳ ಯಾನದ ಸಹಭಾಗೀ ಯಾತ್ರಿಕರು ಮಾತ್ರವಲ್ಲ.
ನನಗೆ ತುಂಬಾ ಇಷ್ಟವಾದ ಪಾತ್ರವ್ಯಕ್ತಿತ್ವಗಳೆಂದರೆ ದಯಾನಂದ ಅವರ ತಂದೆ, ತಾಯಿ ಮತ್ತು ಹುಚ್ಚಮ್ಮತ್ತೆ. ಅಪ್ಪನನ್ನು ಅವರು ಆಧ್ಯಾತ್ಮ ಜೀವಿ ಎಂದು ಗುರುತಿಸುತ್ತಾರೆ. ತಾಯಿಯು ಅವರ ದೃಷ್ಟಿಯಲ್ಲಿ ಆರ್ಥಿಕ ತಜ್ಞೆ. ಹುಚ್ಚಮ್ಮ ಅವರ ತಂದೆಯ ತಂಗಿ. ಅವರ ಮನೆದೇವರ ಹೆಸರನ್ನೇ ಅಜ್ಜ ತನ್ನ ಅತ್ತೆಗೆ ಇಟ್ಟದ್ದನ್ನು ನೆನಪಿಸಿಕೊಳ್ಳುತ್ತಲೇ ತಮ್ಮ ಪಾಲಿನ ನಿಜದ ದೇವರಾಗಿ ಪ್ರಭಾವಿಸಿದ್ದನ್ನು ಪ್ರಸ್ತಾಪಿಸಿದ ಬರಹವು ಜನರ ನೋವಿಗೆ ಸ್ಪಂದಿಸುವ ವ್ಯಕ್ತಿತ್ವ ರೂಪಿಸಿಕೊಳ್ಳಲು ಹುಚ್ಚಮ್ಮತ್ತೆಯೇ ಪ್ರೇರಣೆಯಾಗಿರುವ ದಿವ್ಯತೆಗೆ ಕನ್ನಡಿ ಹಿಡಿಯುತ್ತದೆ.
‘ಚರ್ಮವನ್ನೇ ಚಪ್ಪಲಿಯಾಗಿಸಿಕೊಂಡ ಅಪ್ಪ’ ಶೀರ್ಷಿಕೆಯ ಬರಹವು ಆ ಕಾಲದ ಆರ್ಥಿಕ ದುಃಸ್ಥಿತಿಯ ಸಾಮಾಜಿಕ ರೂಪವನ್ನು ಅನಾವರಣಗೊಳಿಸುತ್ತದೆ. ಇದನ್ನು ಓದುವಾಗ ಮತ್ತೆ ಮತ್ತೆ ನೆನಪಿಗೆ ಬಂದದ್ದು ಪುನೀತ್ ರಾಜಕುಮಾರ್ ಬಾಲನಟರಾಗಿ ಅಭಿನಯಿಸಿದ ‘ಬೆಟ್ಟದ ಹೂವು’ ಸಿನಿಮಾ. ಅಮ್ಮನ ದುಃಖ ದುಮ್ಮಾನಗಳ ನಡುವೆ ಓದುವ ಕನಸನ್ನು ಜೀವಂತವಾಗಿರಿಸಿಕೊಂಡ ಹುಡುಗ ಕುವೆಂಪು ಅವರ ಕೃತಿಯನ್ನು ಕೊಂಡುಕೊಳ್ಳಲು ದುಡ್ಡು ಹೊಂದಿಸಿಕೊಳ್ಳಲು ಹೆಣಗಾಡುತ್ತಾನೆ.
ಕೊನೆಗೆ ದುಡಿಮೆಯ ದುಡ್ಡನ್ನು ಹೇಗೋ ಹೊಂದಿಸಿಕೊಂಡು ಆ ಕೃತಿಯನ್ನು ಕೊಂಡುಕೊಳ್ಳಬೇಕು ಎನ್ನುವಷ್ಟರಲ್ಲಿ ಚಳಿಗಾಲದ ಚಳಿಯಿಂದ ರಕ್ಷಿಸಿಕೊಳ್ಳಲು ಕಂಬಳಿಯ ಅಗತ್ಯ ಮನಗಂಡು ಕೃತಿಯನ್ನು ಓದುವ ಕನಸನ್ನು ಬಿಟ್ಟುಕೊಡುತ್ತಾನೆ. ಬಡತನವು ಎಳೆಯರ ಮನಸುಗಳ ಒಡಲಾಳದ ಕನಸುಗಳ ಬಲಿ ಕೇಳುವ ವೈರುಧ್ಯವನ್ನು ಎನ್.ಲಕ್ಷ್ಮೀನಾರಾಯಣ ಅವರು ಮನಮುಟ್ಟುವಂತೆ ಸಿನಿಮಾದಲ್ಲಿ ಬಿಂಬಿಸಿದ್ದರು.
ದಯಾನಂದ ಅವರು ಈ ಬರಹದ ಮೂಲಕ ಆತ್ಮಕಥನಕ್ಕೆ ಕಾವ್ಯಾತ್ಮಕ ಪ್ರತಿಮೆಯ ಆಯಾಮವನ್ನು ಒದಗಿಸಿಕೊಟ್ಟಿದ್ದಾರೆ. ಇದನ್ನು ಶೀರ್ಷಿಕೆಯೇ ಧ್ವನಿಸುತ್ತದೆ. ಮತ್ತೊಂದು ಅಧ್ಯಾಯದಲ್ಲಿ ಇದೇ ಬರಹದ ಧ್ವನಿ ದಾರ್ಶನಿಕ ಪ್ರತಿಪಾದನೆಯ ಎತ್ತರ ಪಡೆದುಕೊಳ್ಳುತ್ತದೆ. ಆಡಿ-ಕೂಡಿ ಬಾಳುವ ನಮ್ಮತನವು ಬಡತನದ ನಿವಾರಣೆಗಾಗಿಯೋ, ಸಂಪತ್ತಿನ ಆಸೆಗಾಗಿಯೋ ಬಲಿಯಾಗುತ್ತಿರುವುದಂತೂ ಕಟು ಸತ್ಯ ಎಂಬ ಅವರ ವ್ಯಾಖ್ಯಾನವು ವರ್ತಮಾನದ ಬದುಕನ್ನು ವಿಭಿನ್ನವಾಗಿ ಅರ್ಥೈಸಿದೆ.
ಎಲ್ಲಕ್ಕಿಂತ ಮುಖ್ಯವಾಗಿ ಪುರಾಣ ಮತ್ತು ಇತಿಹಾಸದ ಕುರಿತ ಹೊಸದಾದ ವಿಚಾರ ಲಹರಿಯನ್ನೊಳಗೊಂಡ ಬರಹಗಳು ನಮ್ಮನ್ನು ಹೊಸ ರೀತಿಯಲ್ಲಿ ಆಲೋಚಿಸುವಂತೆ ನೆರವಾಗುತ್ತವೆ. ಪುರಾಣಗಳ ಕಾಲ್ಪನಿಕತೆಯೊಳಗೇ ಇರುವ ವಾಸ್ತವವಾದಿ ನೆಲೆಗಳನ್ನು ಶೋಧಿಸುತ್ತವೆ. ಇಲ್ಲದ ಇತಿಹಾಸವನ್ನು ಸೃಷ್ಟಿಸುವ ವರ್ತಮಾನದ ವಿಚಿತ್ರ ಜಾಯಮಾನವನ್ನು ನಿರಾಕರಿಸಿ ಇಸಿಹಾಸವನ್ನು ನೋಡುವ ಬಗೆ ಹೇಗೆಂಬುದನ್ನು ತಿಳಿಸಿಕೊಡುತ್ತವೆ.
ಸಾಮಾಜಿಕ ಸ್ಥಿತ್ಯಂತರಗಳು ಮತ್ತು ಅವುಗಳಿಗೆ ಅನುಗುಣವಾಗಿ ಆಡಳಿತಾತ್ಮಕ ಮಾದರಿಗಳನ್ನು ಮರುರೂಪಿಸಿದ ಪ್ರಯೋಗಶೀಲತೆಯ ಸಾಧ್ಯತೆಯನ್ನು ಈ ಕೃತಿ ಅಂತಃಕರಣದ ಭಾಷೆಯಲ್ಲಿ ಚಿತ್ರಿಸಿದೆ. ಇಡೀ ಕೃತಿಯು ಹಿರಿಯ ಮತ್ತು ಕಿರಿಯ ಅಧಿಕಾರಿಗಳಿಗೆ ಆಡಳಿತಾತ್ಮಕ ಮಾದರಿಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಮಾರ್ಗದರ್ಶಿಯೂ ಹೌದು. ಕೇವಲ ಅಧಿಕಾರಿಗಳಿಗೆ ಮಾತ್ರವಲ್ಲ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಇದನ್ನೊಮ್ಮೆ ಓದಲೇಬೇಕು.
ಅಧಿಕಾರಿಗಳಾಗಿ ಸಾಧನೆಗೈಯ್ಯುವ ಕನಸುಳ್ಳ ಯುವ ಪೀಳಿಗೆ ಈ ಕೃತಿಯ ಪುಟಗಳೊಂದಿಗೆ ಸಂವಾದಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ತಮ್ಮದೇ ಪ್ರತಿಷ್ಠೆಯ ಗುಂಗಿನಲ್ಲೇ ರಾಜಕಾರಣದ ಮಹತ್ವಪೂರ್ಣ ಅವಧಿಯನ್ನು ಕಳೆಯುವ ಜನಪ್ರತಿನಿಧಿಗಳು ಅತ್ಯಂತ ಶ್ರದ್ಧೆಯಿಂದ ಓದಿಕೊಳ್ಳಬೇಕು. ಮಂತ್ರಿಗಳೆನ್ನಿಸಿಕೊಂಡವರು ‘ತಮ್ಮ ಬಿಡುವಿಲ್ಲದ ಕಾರ್ಯದೊತ್ತಡಗಳ!?’ ಮಧ್ಯೆ ಈ ಕೃತಿಗಾಗಿಯೇ ಸಮಯ ಮೀಸಲಿರಿಸಿ ದೂರದರ್ಶಿತ್ವದ ಗುಣದ ಪಾಠವನ್ನು ಕಲಿತುಕೊಳ್ಳಬೇಕು.
ಈ ಕೃತಿ ಇಂಗ್ಲಿಷ್ಗೆ ಅನುವಾದಿತಗೊಂಡು ರಾಷ್ಟ್ರ ದ ವಿವಿಧ ರಾಜ್ಯಗಳವರೂ ಓದುವಂತಾಗಬೇಕು. ಸಾಮಾಜಿಕ ಬದಲಾವಣೆಯ ಕನಸು ಸಂಪೂರ್ಣವಾಗಿ ಈಡೇರುವುದಕ್ಕೆ ಇಡೀ ಆಡಳಿತಾತ್ಮಕ ವ್ಯವಸ್ಥೆಯನ್ನು ಸಿದ್ಧಗೊಳಿಸುವುದಕ್ಕೆ ಈ ಓದು ಸಹಾಯಕವಾಗಬೇಕು. ಹಾಗಾದಾಗ ಮಾತ್ರ ಇಡೀ ಸರ್ಕಾರೀ ಆಡಳಿತ ವ್ಯವಸ್ಥೆಯೊಳಗೆ ಸಮಗ್ರ ಬದಲಾವಣೆ ತರಲು ಪೂರಕವಾಗುವಂಥ ಪಬ್ಲಿಕ್ ರಿಲೇಷನ್ಸ್ ಎಂಬ ಪ್ರತ್ಯೇಕ ಸ್ವಾಯತ್ತ ಸಂಸ್ಥೆ ಸ್ಥಾಪಿತವಾಗಬಹುದು.
ಅಂಥ ಸಂಸ್ಥೆಯ ಮುಂಚೂಣಿ ನಾಯಕರಾಗಿ ಕೆ.ಎ.ದಯಾನಂದ ಅವರಂಥ ಅಧಿಕಾರಿಗಳೇ ಕಂಗೊಳಿಸಬಹುದು. ಜನರನ್ನು ನಲುಗಿಸುತ್ತಿರುವ ಎಲ್ಲ ಬಗೆಯ ಸಂಕಟಗಳಿಂದ ಪಾರುಮಾಡುವ ಸರ್ವೋದಯದ ಸಾಧ್ಯತೆಗಳು ಸರ್ಕಾರಿ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಕಾಣಿಸಿಕೊಳ್ಳಬಹುದು. ಜನಕಲ್ಯಾಣದ ಆದರ್ಶ ರಾಷ್ಟ್ರವಾಗಿ ಭಾರತ ರೂಪುಗೊಂಡು ಜಗತ್ತನ್ನು ಸೆಳೆಯಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243


