ನೆಲದನಿ
‘ಹಾದಿಗಲ್ಲು’ : ಜನಪರ ಹೆಜ್ಜೆಗಳ ಅನನ್ಯ ಯಾನ
- ಡಾ.ಎನ್.ಕೆ.ಪದ್ಮನಾಭ,ಸಹಾಯಕ ಪ್ರಾಧ್ಯಾಪಕರು,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ,ಉಜಿರೆ
ಲಾಕ್ಡೌನ್ನ ಸುಧೀರ್ಘ ಅವಧಿಯ ನಂತರ ತೀರಾ ಇತ್ತೀಚೆಗೆ ನಮ್ಮ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಕ್ಲಾಸ್ಗಳು ಶುರುವಾದವು. ಕಳೆದ ವಾರದ ತರಗತಿಯಲ್ಲಿ ಸಾರ್ವಜನಿಕ ಸಂಪರ್ಕದ ಕುರಿತ ವ್ಯಾಖ್ಯಾನ ಆಧರಿಸಿ ಚರ್ಚೆ ಆರಂಭಿಸಿದ್ದೆ.
ಇಡೀ ಸರ್ಕಾರೀ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸಲು ಆಡಳಿತದಲ್ಲಿ ಸಾರ್ವಜನಿಕ ಸಂಪರ್ಕ ಅಥವಾ ಪಬ್ಲಿಕ್ ರಿಲೇಷನ್ಸ್ ಎಂಬ ಪ್ರತ್ಯೇಕ ಇಲಾಖೆ ರೂಪಿಸಿ ಅದನ್ನು ಬಲಪಡಿಸುವುದರ ಕಡೆಗೆ ನೀತಿ ನಿರೂಪಕರು ಯೋಚಿಸುವ ಅಗತ್ಯವಿದೆ ಎಂಬ ಪ್ರತಿಪಾದನೆಯೊಂದಿಗೆ ತರಗತಿಯಲ್ಲಿ ನನ್ನ ಉಪನ್ಯಾಸ ಶುರುವಾಗಿತ್ತು.
ರೆಕ್ಸ್ ಹಾರ್ಲೋ ಅವರ ವಿಸ್ತೃತವಾದ ವ್ಯಖ್ಯಾನವನ್ನು ಈ ಕೇಂದ್ರ ಆಶಯ ಆಧರಿಸಿ ವಿವರಿಸಿದ್ದೆ. ಪ್ರತ್ಯೇಕವಾದ ಸ್ವಾಯತ್ತ ಸಂಸ್ಥೆಯಾಗಿ ಸರ್ಕಾರಿ ಆಡಳಿತದ ಉನ್ನತೀಕರಣಕ್ಕೆ ಹೇಗೆ ನೆರವಾಗಬಹುದು ಎಂಬುದನ್ನು ವಿವಿಧ ಆಯಾಮಗಳಲ್ಲಿ ವಿಶ್ಲೇಷಣೆಗೊಳಪಡಿಸಲು ಪ್ರಯತ್ನಿಸಿದ್ದೆ.
ಇದಾದ ಮರುದಿನ ನನ್ನ ಓದಿಗೆ ಸಿಕ್ಕಿದ್ದು ಐಎಎಸ್ ಅಧಿಕಾರಿ ಕೆ.ಎ.ದಯಾನಂದ ಅವರು ಬರೆದ ‘ಹಾದಿಗಲ್ಲು’ ಕೃತಿ. ‘ಆತ್ಮವೃತ್ತಾಂತದ ಮೊದಲ ಚರಣ’ ಎಂಬ ಟ್ಯಾಗ್ಲೈನ್ನೊಂದಿಗೆ ಐದನೇ ಮುದ್ರಣ ಕಂಡಿರುವ ಈ ಕೃತಿಯೊಂದಿಗಿನ ಓದಿನ ಯಾನ ನನ್ನ ತರಗತಿಯ ಚರ್ಚೆಯ ಮುಂದುವರಿದ ಭಾಗದಂತಿತ್ತು. ವ್ಯಕ್ತಿಗತ ಯಶಸ್ಸನ್ನು ಸಮಾಜಪರ-ಜನಪರ ಕೆಲಸಗಳೊಂದಿಗೆ ಸಮೀಕರಿಸಿ ಸಾಧನೆ ಸಾಧ್ಯವಾಗಿಸಿಕೊಂಡ ಹಿಂದಿನ ಮತ್ತು ವರ್ತಮಾನದ ಎಲ್ಲಾ ಸಾಧಕರೊಳಗೆ ಪಬ್ಲಿಕ್ ರಿಲೇಷನ್ಸ್ ತಂತ್ರಜ್ಞ ಕ್ರಿಯಾಶೀಲತೆ ಇರುತ್ತದೆ ಎಂಬ ನನ್ನ ತರಗತಿಯ ಪ್ರತಿಪಾದನೆಗೆ ಪೂರಕವಾದ ಸಮರ್ಥನಾ ಸಾಕ್ಷ್ಯವಾಗಿ ಇಡೀ ಕೃತಿ ಸಹಾಯಕವಾಯಿತು.
ಖಾಸಗೀಕರಣವೊಂದೇ ಸದ್ಯದ ಎಲ್ಲ ಬಗೆಯ ಸಮಸ್ಯೆಗಳಿಗೆ ಪರಿಹಾರೋಪಾಯ ಎಂಬ ಪೂರ್ವಗ್ರಹಪೀಡಿತ-ಅವಸರದ ದೃಷ್ಟಿಕೋನವೇ ವಿಜೃಂಭಿಸುತ್ತಿರುವಾಗ ಸರ್ಕಾರೀ ಆಡಳಿತದ ಪರಿಕಲ್ಪನೆಯೊಳಗೇ ಇರುವ ಸರ್ವೋದಯದ ಪ್ರಾಯೋಗಿಕ ಆಯಾಮವನ್ನು ಗಂಭೀರವಾಗಿ ಪರಿಗಣಿಸಬೇಕಾದ ಸಕಾರಾತ್ಮಕ ಒತ್ತಡವನ್ನು ‘ಹಾದಿಗಲ್ಲು’ ಸೃಷ್ಟಿಸುತ್ತದೆ. ಈ ಕೃತಿಯ ಓದು ಶುರುವಾಗುವ ಮುನ್ನಾದಿನದ ನನ್ನ ತರಗತಿಯಲ್ಲಿ ಸರ್ಕಾರಿ ವ್ಯವಸ್ಥೆಯೊಳಗೆ ಪಿಆರ್ ಸ್ವಾಯತ್ತ ಸಂಸ್ಥೆಯಾಗಿ ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾವಾರು ಮಟ್ಟಗಳಲ್ಲಿ ಹೇಗೆ ಕಾರ್ಯನಿರ್ವಹಿಸಬಹುದು ಎಂಬುದನ್ನು ಪ್ರಸ್ತಾಪಿಸಿದ್ದೆ.
ದಯಾನಂದ ಅವರು ಬರೆದ ಒಂದೊಂದು ಅಧ್ಯಾಯವೂ ನನ್ನ ಪ್ರತಿಪಾದನೆಗೆ ಸಹಾಯಕವಾಗುವ ಬೌದ್ಧಿಕ ಪ್ರಾಯೋಗಿಕ ಸಂಪನ್ಮೂಲವಾಗಿ ಒದಗಿಬಂದಿದ್ದು ಒಂದು ವಿಶೇಷ ಅನುಭವ. ಒಂದು ಅಧ್ಯಾಯದಿಂದ ಮತ್ತೊಂದು ಅಧ್ಯಾಯಕ್ಕೆ ದಾಟಿಕೊಳ್ಳುವಾಗಲೆಲ್ಲಾ ಅವರೊಳಗೆ ಸುಪ್ತವಾದ ಸಾರ್ವಜನಿಕ ಸಂಪರ್ಕ ಕೌಶಲ್ಯದೊಂದಿಗೆ ಬೆರೆತುಹೋದ ಮನುಷ್ಯಪರ ಕಾಳಜಿ ಸರ್ಕಾರಿ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸಬಹುದು ಎಂಬ ಆಶಾವಾದ ಗಟ್ಟಿಗೊಳ್ಳುತ್ತಲೇ ಇತ್ತು.
ಉನ್ನತ ಹಂತದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ತಾನು ಪ್ರತಿನಿಧಿಸುವ ಆಡಳಿತಾತ್ಮಕ ವ್ಯವಸ್ಥೆಯೊಳಗೆ ಸಮಗ್ರ ಬದಲಾವಣೆ ತರುವ ಕನಸನ್ನು ಬಿತ್ತಿ ಸಮೃದ್ಧಿಯನ್ನು ನೆಲೆಗೊಳಿಸುವ ಮಾದರಿಗಳನ್ನು ಸೃಷ್ಟಿಸಬಹುದು. ಎಲ್ಲವೂ ಸರಿಯಿಲ್ಲ ಎಂಬ ಹತಾಶೆಗಿಂತಲೂ ಮಿತಿಗಳನ್ನೇ ಗುರುತಿಸಿ ಅವುಗಳನ್ನೇ ಸಮೃದ್ಧಿಯ ಕಡೆಗೆ ಪಯಣಿಸಲು ಒತ್ತಡವನ್ನುಂಟುಮಾಡುವ ಅಪೂರ್ವ ಅವಕಾಶಗಳನ್ನಾಗಿಸಿಕೊಂಡರೆ ಬದಲಾವಣೆ ಸಾಧ್ಯವಾಗುತ್ತದೆ. ಈ ಬಗೆಯ ಮಹತ್ವದ ಬದಲಾವಣೆಗಾಗಿ ಮ್ಯಾನೇಜ್ಮೆಂಟಿನ ಅಕ್ಯಾಡೆಮಿಕ್ ಅಧ್ಯಯನದ ಅವಶ್ಯಕತೆ ಇಲ್ಲ.
ಸದಾ ಸಕಾರಾತ್ಮಕ ಮನೋಬಲ, ವ್ಯಕ್ತಿಗತ ಬದುಕಿನ ಅನುಭವಗಳು, ಸ್ವತಃ ಕಂಡುಕೊಂಡ ವಿನೂತನ ಅವಲೋಕನದ ಮಾದರಿ, ಜಗತ್ತನ್ನು, ಸುತ್ತಮುತ್ತಲಿನ ಘಟನೆ- ಮನುಷ್ಯ ವರ್ತನೆಗಳನ್ನು ಸೂಕ್ಷ್ಮವಾಗಿ ನೋಡುವ ಚಿಕಿತ್ಸಕ ದೃಷ್ಟಿಕೋನ, ವೃತ್ತಿಪರ ಯಶಸ್ಸಿನ ಸ್ಪಷ್ಟ ಪ್ರಜ್ಞೆ- ಇವಿಷ್ಟೂ ಇದ್ದರೆ ಬಹುದೊಡ್ಡ ಸಾಮಾಜಿಕ ಪಲ್ಲಟಗಳಿಗೆ ಕಾರಣವಾಗಬಲ್ಲ ಕೊಡುಗೆಗಳನ್ನು ನೀಡಬಹುದು. ‘ಹಾದಿಗಲ್ಲು’ ಇಂಥದ್ದೊಂದು ಒಳನೋಟವನ್ನು ಕಟ್ಟಿಕೊಳ್ಳಲು ನೆರವಾಗುತ್ತದೆ.
ಮ್ಯಾನೇಜ್ಮೆಂಟ್ ಅಕ್ಯಾಡೆಮಿಕ್ ವಲಯದಲ್ಲಿ ಮತ್ತೆ ಮತ್ತೆ ಪ್ರಸ್ತಾಪಿತವಾಗುವ ಸ್ವಾಟ್ ಅನಾಲಿಸಿಸ್ (SWOT Analysis – Strengths, Weaknesses, Opportunities and Threats)ಪರಿಕಲ್ಪನೆಯು ಪರಿಣಾಮಕಾರಿಯಾಗಿ ಪ್ರಯೋಗಕ್ಕೊಳಪಡಬೇಕಾಗಿರುವುದು ಸರ್ಕಾರೀ ಆಡಳಿತಾತ್ಮಕ ಹಂತಗಳಲ್ಲಿ. “ಯೋಜನೆಗಳು ರೂಪುಗೊಳ್ಳುತ್ತವೆ, ಹಾಗೆ ರೂಪುಗೊಂಡು ಅನುಷ್ಠಾನಗೊಳ್ಳದೇ ನಿಷ್ಪ್ರಯೋಜಕವೆನ್ನಿಸುತ್ತವೆ” ಎಂಬ ಸಾರ್ವತ್ರಿಕ ಟೀಕೆ ಈಗಲೂ ವ್ಯಕ್ತವಾಗುತ್ತಲೇ ಇರುತ್ತದೆ.
ಯಾರದೋ ಪ್ರಬಂಧಕ್ಕೆ, ಇನ್ಯಾರದೋ ಭಾಷಣಕ್ಕೆ, ಮತ್ತಿನ್ಯಾರದೋ ಭಾವಾವೇಶಭರಿತ ಜನಪ್ರಿಯ ಸ್ವರೂಪದ ವಾಕ್ ವಾಹಕ್ಕೆ ಈ ಟೀಕಾತ್ಮಕ ಹೇಳಿಕೆಯ ಧ್ವನಿ ಪುನರಾವರ್ತಿತವಾಗುತ್ತಲೇ ಇರುತ್ತದೆ. ಆಡಳಿತ ಮತ್ತು ವಿರೋಧ ಪಕ್ಷಗಳವರು ಈ ಹೇಳಿಕೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಆ ಕ್ಷಣದ ಲಾಭ ಪಡೆದುಕೊಳ್ಳುವ ತಾತ್ಪೂರ್ತಿಕ ಉದ್ದೇಶವನ್ನು ಈಡೇರಿಸಿಕೊಳ್ಳುತ್ತಲೇ ಇರುತ್ತಾರೆ.
ಟಿಆರ್ಪಿ ಎಂಬ ಮಹಾಮಾಯೆಯ ಹಿಡಿತಕ್ಕೊಳಗಾದ ಸುದ್ದಿಮಾಧ್ಯಮಗಳೂ ಇವುಗಳನ್ನೇ ವೈಭವೀಕರಿಸುತ್ತವೆ.ಯೋಜನೆಗಳ ಕಟ್ಟುನಿಟ್ಟಿನ ಅನುಷ್ಠಾನ ಮತ್ತು ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಸರ್ಕಾರಿ ವ್ಯವಸ್ಥೆಯ ಪುನರುತ್ಥಾನದ ಕುರಿತ ಪರಿಹಾರೋಪಾಯದ ತಾರ್ಕಿಕ ಸಂವಾದ ನಡೆದರೂ ಅದು ಸಂಪೂರ್ಣವಾಗಿ ಆಡಳಿತಾತ್ಮಕ ಪ್ರಾಯೋಗಿಕತೆಯಲ್ಲಿ ಪ್ರತಿಫಲಿತವಾಗದೇ ಉಳಿದುಬಿಟ್ಟಿದೆ.
ಬರೀ ಚರ್ಚೆ, ಸಮಾಲೋಚನೆ, ಚಿಂತನೆಗಳು, ಪ್ರಯತ್ನಗಳು ಬಿಡಿಬಿಡಿಯಾಗಿ ನಡೆದವೇ ಹೊರತು ನಿರೀಕ್ಷಿತ ಆಡಳಿತಾತ್ಮಕ ಪ್ರಯೋಗಶೀಲತೆ ಸಮಗ್ರವಾಗಿ ವ್ಯಕ್ತವಾಗಲಿಲ್ಲ. ಇಂಥದ್ದೊಂದು ಕೊರಗಿನೊಂದಿಗೇ ಹೊಸ ಪೀಳಿಗೆ ಬದುಕಬೇಕಾಗಿಲ್ಲ ಎಂಬುದನ್ನು ‘ಹಾದಿಗಲ್ಲು’ ಸ್ಪಷ್ಟಪಡಿಸುತ್ತದೆ. ಆಡಳಿತಾತ್ಮಕ ಪ್ರಯೋಗಶೀಲತೆ ಯಾವ ಯಾವ ರೀತಿಯಲ್ಲಿ ಅಳವಡಿಸಲ್ಪಡಬಹುದು ಎಂಬ ದಾರಿಗಳನ್ನು ಕಾಣಿಸುತ್ತದೆ.
ಆಡಳಿತದ ವಿವಿಧ ಹುದ್ದೆಗಳ ವಿವಿಧ ಹಂತಗಳ ಕಾರ್ಯನಿರ್ವಹಣೆಯು ಆಯಾ ಕಾಲದ ಅಗತ್ಯಗಳಿಗೆ ತಕ್ಕಂತೆ ಹೇಗೆ ಪುನರ್ಸ್ವರೂಪ ಪಡೆದುಕೊಳ್ಳಬಹುದು ಎಂಬ ಹೊಳಹುಗಳನ್ನು ಹೊಳೆಸುತ್ತದೆ. ‘ಅಧಿಕಾರ’ ಮತ್ತು ‘ಅಧಿಕಾರಿ’ ಈ ಎರಡೂ ಪದಗಳ ಕುರಿತು ಬೇರೂರಿಬಿಟ್ಟಿರುವ ಹತಾಶೆ, ಅಸಮಾಧಾನ ಮತ್ತು ಆಕ್ರೋಶದ ಭಾವಗಳೆಲ್ಲವನ್ನೂ ಇಲ್ಲವಾಗಿಸಿ ಅವುಗಳ ಸ್ಥಾನಗಳಲ್ಲಿ ಆಶಾವಾದ, ಆತ್ಮಸಂತೃಪ್ತಿ ಮತ್ತು ಹೊಂಗನಸುಗಳ ಮಹತ್ವಾಕಾಂಕ್ಷೀ ಮನೋಬಲವನ್ನು ನೆಲೆಗೊಳಿಸಿಕೊಳ್ಳಲು ಈ ಕೃತಿಯು ಪ್ರೇರಣೆ ನೀಡುತ್ತದೆ.
ಐಎಎಸ್, ಕೆಎಎಸ್ ಅಧಿಕಾರಿಗಳ ಬಗ್ಗೆ ಜನರಲ್ಲಿ ತಪ್ಪುಕಲ್ಪನೆಯೊಂದಿದೆ. ಎಲ್ಲರೂ ಹೀಗೆ ಯೋಚಿಸುವುದಿಲ್ಲವಾದರೂ ಇದು ಇಡೀ ಸಾಮುದಾಯಿಕ ದೃಷ್ಟಿಕೋನದ ಮೇಲೆಯೇ ಪ್ರಭಾವ ಬೀರುತ್ತದೆ. ಅದೇನೆಂದರೆ, ಅಷ್ಟೆಲ್ಲಾ ಕಷ್ಟಪಟ್ಟು ಓದಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಅಧಿಕಾರಿಗಳಾಗಿ ನೇಮಕಗೊಂಡು ಏನನ್ನೂ ಓದಿಕೊಳ್ಳದ, ವಿಚಿತ್ರ ಧೋರಣೆಗಳೊಂದಿಗಿನ ಮಂತ್ರಿಗಳು, ರಾಜಕಾರಣಿಗಳ ಮುಂದೆ ಕೈಕಟ್ಟಿ ನಿಲ್ಲಬೇಕಾಗುತ್ತದೆ, ಅಂಥದ್ದೊಂದು ವಿಚಿತ್ರ ಸ್ಥಿತಿ ಎದುರಿಸಿ ಸ್ವಾಭಿಮಾನ ಬಲಿಕೊಡಬಾರದು ಎನ್ನುವ ಅವಸರದ ಧಾಟಿಯ ಮಾತುಗಳು ಕೇಳಿಬರುತ್ತವೆ.
ಇಂಥ ಅವಸರವಾದಿ ದೃಷ್ಟಿಕೋನಗಳನ್ನು ‘ಹಾದಿಗಲ್ಲು’ ಅಲ್ಲಗಳೆಯುತ್ತದೆ. ಐಎಎಸ್, ಕೆಎಎಸ್ ಅಧಿಕಾರಿ ಹುದ್ದೆಗಳು ಪ್ರತಿಷ್ಠಿತ ಮಂತ್ರಿಮಹೋದಯರ ಗುಲಾಮಗಿರಿಯ ಸಂಕೇತಗಳಲ್ಲ ಎಂಬುದನ್ನು ಅಧಿಕೃತವಾಗಿ ದೃಢಪಡಿಸುತ್ತದೆ. ವ್ಯಕ್ತಿಗತ ವೃತ್ತಿಬದ್ಧತೆ, ಬದಲಾವಣೆಗೆ ತುಡಿಯುವ ಅಂತರ್ಗತ ಶಕ್ತಿ, ಸದ್ಯದ ಕಾಲದ ಸವಾಲುಗಳಿಗೆ ಎದುರುಗೊಂಡು ಹೊಸತಾದ ಮುನ್ನಡೆ ಸಾಧಿಸುವ ಸೌಜನ್ಯಯುತ ಛಲವೊಂದಿದ್ದರೆ ಈ ಹುದ್ದೆಗಳ ನಿರ್ವಹಣೆಯು ಆತ್ಮತೃಪ್ತಿಯನ್ನು ತಂದುಕೊಡುತ್ತದೆ ಎಂಬುದನ್ನು ದಯಾನಂದ ಅವರು ಸ್ವಾನುಭವದ ನಿದರ್ಶನಗಳ ಮೂಲಕ ಸಾಬೀತುಪಡಿಸಿದ್ದಾರೆ.
ತಾವು ವಿವಿಧ ಇಲಾಖೆಗಳ ನೇತೃತ್ವ ವಹಿಸಿದಾಗಲೆಲ್ಲಾ ನಿಯಮಾವಳಿಗಳಿಗೆ ಅನುಗುಣವಾಗಿ ಅನುಷ್ಟಾನಕ್ಕೆ ತಂದ ಯೋಚನೆ, ಯೋಜನೆಗಳು, ನೊಂದವರಿಗೆ ನ್ಯಾಯ ದೊರಕಿಸಿಕೊಟ್ಟ ತತ್ಕ್ಷಣದ ಕ್ರಮಗಳು, ಇಲಾಖೆಗಳಿಗೆ ಆಧುನಿಕ ತಾಂತ್ರಿಕಸ್ಪರ್ಶ ನೀಡಿದ ಕ್ರಾಂತಿಕಾರಿ ಹೆಜ್ಜೆಗಳು, ಎಲ್ಲಕ್ಕಿಂತ ಹೆಚ್ಚಾಗಿ ಉನ್ನತಾಧಿಕಾರಿ ಹುದ್ದೆಯ ವೃತ್ತಿಪರ ಮೌಲ್ಯವನ್ನು ವಿಸ್ತರಿಸಿದ ಅನೇಕ ಅನುಭವಗಳ ಆಪ್ತ ಉಲ್ಲೇಖವು ಇಡೀ ಕೃತಿಯನ್ನು ಬದಲಾವಣೆಯ ಮಹೋನ್ನತ ಸಾಧ್ಯತೆಗಳನ್ನು ಕಂಡರಿಸುವ ಪ್ರಾಯೋಗಿಕ ಜ್ಞಾನಸಂಪನ್ಮೂಲವನ್ನಾಗಿಸಿದೆ.
ಈ ಕೃತಿಯು ಕೇವಲ ಆಡಳಿತಾತ್ಮಕ ಹುದ್ದೆ ನಿರ್ವಹಣೆಯ ಸ್ವಾನುಭವ ವಿವರಗಳ ಸಂಕಲನವಷ್ಟೇ ಅಲ್ಲ. ಈಗಾಗಲೇ ಬಾಳಿಹೋದ ನಮ್ಮ ಹಿರಿಯ ತಲೆಮಾರುಗಳು ಹಾದುಬಂದ ಒಡಲಬೇಗೆಯನ್ನು ಅಕ್ಷರಗಳಲ್ಲಿ ಹಿಡಿದಿಡುವ ಸೃಜನಶೀಲ ಆಕೃತಿಯನ್ನಾಗಿಯೂ ಇದನ್ನು ಗ್ರಹಿಸಬಹುದು. ಸಾಮಾಜಿಕ ಏಣಿ-ಶ್ರೇಣಿ ವ್ಯವಸ್ಥೆಯೊಳಗೆ ಯಾತನೆ ಅನುಭವಿಸುತ್ತಾ ಬದಲಾವಣೆಯ ಹೊಂಗನಸುಗಳಿಂದ ದೂರ ಉಳಿದು ಅಭಿವೃದ್ಧಿಯ ಮುಖ್ಯವಾಹಿನಿ ಸೇರಿಕೊಳ್ಳುವ ಕನಸುಗಳಿಲ್ಲದೇ ಬದುಕುವ ಅನಿವಾರ್ಯತೆಯ ಗತದ ಕಾಲವನ್ನು ದಯಾನಂದ ಅವರು ಕಾಣಿಸುವ ಪರಿ ಅನನ್ಯ.
ಜಡಗೊಂಡ ಸಾಮಾಜಿಕ ವ್ಯವಸ್ಥೆಯಲ್ಲಿ ಪಲ್ಲಟಗಳನ್ನು ನೆಲೆಗೊಳಿಸುವ ಹೆಜ್ಜೆಗಳ ವಿವರಗಳನ್ನು ಸೌಜನ್ಯದ ಧಾಟಿಯಲ್ಲಿ ಮುಂದಿಡುತ್ತಲೇ ಸಾಂಸ್ಕೃತಿಕ ಪ್ರಜ್ಞೆಯನ್ನು ಕಟ್ಟಿಕೊಳ್ಳಲು ಬೇಕಾದ ಒಳನೋಟಗಳು ಅವರ ಬರಹಕ್ಕೆ ಜೀವಂತಿಕೆಯನ್ನು ತಂದುಕೊಟ್ಟಿವೆ. ಅವರೊಳಗಿನ ಅಪ್ಪಟ ಸಾಹಿತ್ಯಕ ವಿಮರ್ಶಕನನ್ನು ಈ ಕೃತಿ ಪರಿಚಯಿಸಿದೆ.
ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಡಿ.ವಿ.ಜಿ ಅವರಂಥ ಪ್ರತಿಭೆಗಳನ್ನು ದಯಾನಂದ್ ವರ್ತಮಾನದಲ್ಲಿ ನಿಂತು ಗ್ರಹಿಸುವ ಬಗೆ ನಮ್ಮನ್ನು ಚಿಂತನೆಗೆ ಹಚ್ಚುತ್ತದೆ. ಕೆಲವು ಸಿನಿಮಾಗಳ ಪ್ರಸ್ತಾಪದ ಮೂಲಕ ಮೌಲ್ಯಪರ ಆಲೋಚನಾಕ್ರಮಗಳ ವೈಶಿಷ್ಟ್ಯತೆಯನ್ನು ಮನಗಾಣಿಸುತ್ತಾರೆ. ಅಧ್ಯಾಯಗಳಲ್ಲಿ ಕಾಣಿಸಿಕೊಳ್ಳುವ ಪಾತ್ರಗಳು ಕೇವಲ ನೆನಪುಗಳ ಯಾನದ ಸಹಭಾಗೀ ಯಾತ್ರಿಕರು ಮಾತ್ರವಲ್ಲ.
ನನಗೆ ತುಂಬಾ ಇಷ್ಟವಾದ ಪಾತ್ರವ್ಯಕ್ತಿತ್ವಗಳೆಂದರೆ ದಯಾನಂದ ಅವರ ತಂದೆ, ತಾಯಿ ಮತ್ತು ಹುಚ್ಚಮ್ಮತ್ತೆ. ಅಪ್ಪನನ್ನು ಅವರು ಆಧ್ಯಾತ್ಮ ಜೀವಿ ಎಂದು ಗುರುತಿಸುತ್ತಾರೆ. ತಾಯಿಯು ಅವರ ದೃಷ್ಟಿಯಲ್ಲಿ ಆರ್ಥಿಕ ತಜ್ಞೆ. ಹುಚ್ಚಮ್ಮ ಅವರ ತಂದೆಯ ತಂಗಿ. ಅವರ ಮನೆದೇವರ ಹೆಸರನ್ನೇ ಅಜ್ಜ ತನ್ನ ಅತ್ತೆಗೆ ಇಟ್ಟದ್ದನ್ನು ನೆನಪಿಸಿಕೊಳ್ಳುತ್ತಲೇ ತಮ್ಮ ಪಾಲಿನ ನಿಜದ ದೇವರಾಗಿ ಪ್ರಭಾವಿಸಿದ್ದನ್ನು ಪ್ರಸ್ತಾಪಿಸಿದ ಬರಹವು ಜನರ ನೋವಿಗೆ ಸ್ಪಂದಿಸುವ ವ್ಯಕ್ತಿತ್ವ ರೂಪಿಸಿಕೊಳ್ಳಲು ಹುಚ್ಚಮ್ಮತ್ತೆಯೇ ಪ್ರೇರಣೆಯಾಗಿರುವ ದಿವ್ಯತೆಗೆ ಕನ್ನಡಿ ಹಿಡಿಯುತ್ತದೆ.
‘ಚರ್ಮವನ್ನೇ ಚಪ್ಪಲಿಯಾಗಿಸಿಕೊಂಡ ಅಪ್ಪ’ ಶೀರ್ಷಿಕೆಯ ಬರಹವು ಆ ಕಾಲದ ಆರ್ಥಿಕ ದುಃಸ್ಥಿತಿಯ ಸಾಮಾಜಿಕ ರೂಪವನ್ನು ಅನಾವರಣಗೊಳಿಸುತ್ತದೆ. ಇದನ್ನು ಓದುವಾಗ ಮತ್ತೆ ಮತ್ತೆ ನೆನಪಿಗೆ ಬಂದದ್ದು ಪುನೀತ್ ರಾಜಕುಮಾರ್ ಬಾಲನಟರಾಗಿ ಅಭಿನಯಿಸಿದ ‘ಬೆಟ್ಟದ ಹೂವು’ ಸಿನಿಮಾ. ಅಮ್ಮನ ದುಃಖ ದುಮ್ಮಾನಗಳ ನಡುವೆ ಓದುವ ಕನಸನ್ನು ಜೀವಂತವಾಗಿರಿಸಿಕೊಂಡ ಹುಡುಗ ಕುವೆಂಪು ಅವರ ಕೃತಿಯನ್ನು ಕೊಂಡುಕೊಳ್ಳಲು ದುಡ್ಡು ಹೊಂದಿಸಿಕೊಳ್ಳಲು ಹೆಣಗಾಡುತ್ತಾನೆ.
ಕೊನೆಗೆ ದುಡಿಮೆಯ ದುಡ್ಡನ್ನು ಹೇಗೋ ಹೊಂದಿಸಿಕೊಂಡು ಆ ಕೃತಿಯನ್ನು ಕೊಂಡುಕೊಳ್ಳಬೇಕು ಎನ್ನುವಷ್ಟರಲ್ಲಿ ಚಳಿಗಾಲದ ಚಳಿಯಿಂದ ರಕ್ಷಿಸಿಕೊಳ್ಳಲು ಕಂಬಳಿಯ ಅಗತ್ಯ ಮನಗಂಡು ಕೃತಿಯನ್ನು ಓದುವ ಕನಸನ್ನು ಬಿಟ್ಟುಕೊಡುತ್ತಾನೆ. ಬಡತನವು ಎಳೆಯರ ಮನಸುಗಳ ಒಡಲಾಳದ ಕನಸುಗಳ ಬಲಿ ಕೇಳುವ ವೈರುಧ್ಯವನ್ನು ಎನ್.ಲಕ್ಷ್ಮೀನಾರಾಯಣ ಅವರು ಮನಮುಟ್ಟುವಂತೆ ಸಿನಿಮಾದಲ್ಲಿ ಬಿಂಬಿಸಿದ್ದರು.
ದಯಾನಂದ ಅವರು ಈ ಬರಹದ ಮೂಲಕ ಆತ್ಮಕಥನಕ್ಕೆ ಕಾವ್ಯಾತ್ಮಕ ಪ್ರತಿಮೆಯ ಆಯಾಮವನ್ನು ಒದಗಿಸಿಕೊಟ್ಟಿದ್ದಾರೆ. ಇದನ್ನು ಶೀರ್ಷಿಕೆಯೇ ಧ್ವನಿಸುತ್ತದೆ. ಮತ್ತೊಂದು ಅಧ್ಯಾಯದಲ್ಲಿ ಇದೇ ಬರಹದ ಧ್ವನಿ ದಾರ್ಶನಿಕ ಪ್ರತಿಪಾದನೆಯ ಎತ್ತರ ಪಡೆದುಕೊಳ್ಳುತ್ತದೆ. ಆಡಿ-ಕೂಡಿ ಬಾಳುವ ನಮ್ಮತನವು ಬಡತನದ ನಿವಾರಣೆಗಾಗಿಯೋ, ಸಂಪತ್ತಿನ ಆಸೆಗಾಗಿಯೋ ಬಲಿಯಾಗುತ್ತಿರುವುದಂತೂ ಕಟು ಸತ್ಯ ಎಂಬ ಅವರ ವ್ಯಾಖ್ಯಾನವು ವರ್ತಮಾನದ ಬದುಕನ್ನು ವಿಭಿನ್ನವಾಗಿ ಅರ್ಥೈಸಿದೆ.
ಎಲ್ಲಕ್ಕಿಂತ ಮುಖ್ಯವಾಗಿ ಪುರಾಣ ಮತ್ತು ಇತಿಹಾಸದ ಕುರಿತ ಹೊಸದಾದ ವಿಚಾರ ಲಹರಿಯನ್ನೊಳಗೊಂಡ ಬರಹಗಳು ನಮ್ಮನ್ನು ಹೊಸ ರೀತಿಯಲ್ಲಿ ಆಲೋಚಿಸುವಂತೆ ನೆರವಾಗುತ್ತವೆ. ಪುರಾಣಗಳ ಕಾಲ್ಪನಿಕತೆಯೊಳಗೇ ಇರುವ ವಾಸ್ತವವಾದಿ ನೆಲೆಗಳನ್ನು ಶೋಧಿಸುತ್ತವೆ. ಇಲ್ಲದ ಇತಿಹಾಸವನ್ನು ಸೃಷ್ಟಿಸುವ ವರ್ತಮಾನದ ವಿಚಿತ್ರ ಜಾಯಮಾನವನ್ನು ನಿರಾಕರಿಸಿ ಇಸಿಹಾಸವನ್ನು ನೋಡುವ ಬಗೆ ಹೇಗೆಂಬುದನ್ನು ತಿಳಿಸಿಕೊಡುತ್ತವೆ.
ಸಾಮಾಜಿಕ ಸ್ಥಿತ್ಯಂತರಗಳು ಮತ್ತು ಅವುಗಳಿಗೆ ಅನುಗುಣವಾಗಿ ಆಡಳಿತಾತ್ಮಕ ಮಾದರಿಗಳನ್ನು ಮರುರೂಪಿಸಿದ ಪ್ರಯೋಗಶೀಲತೆಯ ಸಾಧ್ಯತೆಯನ್ನು ಈ ಕೃತಿ ಅಂತಃಕರಣದ ಭಾಷೆಯಲ್ಲಿ ಚಿತ್ರಿಸಿದೆ. ಇಡೀ ಕೃತಿಯು ಹಿರಿಯ ಮತ್ತು ಕಿರಿಯ ಅಧಿಕಾರಿಗಳಿಗೆ ಆಡಳಿತಾತ್ಮಕ ಮಾದರಿಗಳನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಮಾರ್ಗದರ್ಶಿಯೂ ಹೌದು. ಕೇವಲ ಅಧಿಕಾರಿಗಳಿಗೆ ಮಾತ್ರವಲ್ಲ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಇದನ್ನೊಮ್ಮೆ ಓದಲೇಬೇಕು.
ಅಧಿಕಾರಿಗಳಾಗಿ ಸಾಧನೆಗೈಯ್ಯುವ ಕನಸುಳ್ಳ ಯುವ ಪೀಳಿಗೆ ಈ ಕೃತಿಯ ಪುಟಗಳೊಂದಿಗೆ ಸಂವಾದಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ತಮ್ಮದೇ ಪ್ರತಿಷ್ಠೆಯ ಗುಂಗಿನಲ್ಲೇ ರಾಜಕಾರಣದ ಮಹತ್ವಪೂರ್ಣ ಅವಧಿಯನ್ನು ಕಳೆಯುವ ಜನಪ್ರತಿನಿಧಿಗಳು ಅತ್ಯಂತ ಶ್ರದ್ಧೆಯಿಂದ ಓದಿಕೊಳ್ಳಬೇಕು. ಮಂತ್ರಿಗಳೆನ್ನಿಸಿಕೊಂಡವರು ‘ತಮ್ಮ ಬಿಡುವಿಲ್ಲದ ಕಾರ್ಯದೊತ್ತಡಗಳ!?’ ಮಧ್ಯೆ ಈ ಕೃತಿಗಾಗಿಯೇ ಸಮಯ ಮೀಸಲಿರಿಸಿ ದೂರದರ್ಶಿತ್ವದ ಗುಣದ ಪಾಠವನ್ನು ಕಲಿತುಕೊಳ್ಳಬೇಕು.
ಈ ಕೃತಿ ಇಂಗ್ಲಿಷ್ಗೆ ಅನುವಾದಿತಗೊಂಡು ರಾಷ್ಟ್ರ ದ ವಿವಿಧ ರಾಜ್ಯಗಳವರೂ ಓದುವಂತಾಗಬೇಕು. ಸಾಮಾಜಿಕ ಬದಲಾವಣೆಯ ಕನಸು ಸಂಪೂರ್ಣವಾಗಿ ಈಡೇರುವುದಕ್ಕೆ ಇಡೀ ಆಡಳಿತಾತ್ಮಕ ವ್ಯವಸ್ಥೆಯನ್ನು ಸಿದ್ಧಗೊಳಿಸುವುದಕ್ಕೆ ಈ ಓದು ಸಹಾಯಕವಾಗಬೇಕು. ಹಾಗಾದಾಗ ಮಾತ್ರ ಇಡೀ ಸರ್ಕಾರೀ ಆಡಳಿತ ವ್ಯವಸ್ಥೆಯೊಳಗೆ ಸಮಗ್ರ ಬದಲಾವಣೆ ತರಲು ಪೂರಕವಾಗುವಂಥ ಪಬ್ಲಿಕ್ ರಿಲೇಷನ್ಸ್ ಎಂಬ ಪ್ರತ್ಯೇಕ ಸ್ವಾಯತ್ತ ಸಂಸ್ಥೆ ಸ್ಥಾಪಿತವಾಗಬಹುದು.
ಅಂಥ ಸಂಸ್ಥೆಯ ಮುಂಚೂಣಿ ನಾಯಕರಾಗಿ ಕೆ.ಎ.ದಯಾನಂದ ಅವರಂಥ ಅಧಿಕಾರಿಗಳೇ ಕಂಗೊಳಿಸಬಹುದು. ಜನರನ್ನು ನಲುಗಿಸುತ್ತಿರುವ ಎಲ್ಲ ಬಗೆಯ ಸಂಕಟಗಳಿಂದ ಪಾರುಮಾಡುವ ಸರ್ವೋದಯದ ಸಾಧ್ಯತೆಗಳು ಸರ್ಕಾರಿ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಕಾಣಿಸಿಕೊಳ್ಳಬಹುದು. ಜನಕಲ್ಯಾಣದ ಆದರ್ಶ ರಾಷ್ಟ್ರವಾಗಿ ಭಾರತ ರೂಪುಗೊಂಡು ಜಗತ್ತನ್ನು ಸೆಳೆಯಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ1 day agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

