ನೆಲದನಿ
‘ಹರಿಹರೇಶ್ವರ ದೇವಾಲಯ’ದ ಬಗ್ಗೆ ನಿಮಗಿಷ್ಟು ತಿಳಿದಿರಲಿ..!
ಈ ದೇವಾಲಯ ನಗರದ ಪಶ್ಚಿಮ ಭಾಗದಲ್ಲಿದ್ದು, ತುಂಗಭದ್ರಾ ನದಿಯ ಬಲದಂಡೆಯ ಮೇಲಿದೆ. ಈ ದೇವಾಲಯ ನಗರದ ಪಶ್ಚಿಮ ಭಾಗದಲ್ಲಿದ್ದು ತುಂಗಭದ್ರಾ ನದಿಯ ಬಲದಂಡೆಯ ಮೇಲಿದೆ. ಹರಿಹರೇಶ್ವರ ದೇವಾಲಯವು ವಿಶಾಲವಾದ ತಳವಿನ್ಯಾಸದಲ್ಲಿ ರಚನೆಗೊಂಡಿದ್ದು ಗರ್ಭಗೃಹ, ಅದೇ ಅಳತೆಯ ಶುಕನಾಸ, ನವರಂಗ ಮತ್ತು ವಿಶಾಲವಾದ ಮಹಾಮಂಟಪವನ್ನು ಹೊಂದಿದೆ. ಚೌಕಾಕಾರದ ಗರ್ಭಗೃಹದಲ್ಲಿ ಹರಿಹರನ ಸ್ಥಾನಿಕ ಶಿಲ್ಪವಿದೆ. ವಿತಾನದಲ್ಲಿ ಪದ್ಮದ ಅಲಂಕರಣವಿದೆ.
ಗರ್ಭಗೃಹದ ಪ್ರವೇಶದ್ವಾರವು ಹೆಚ್ಚಿನ ಅಲಂಕರಣೆಗಳನ್ನು ಹೊಂದಿಲ್ಲವಾದರೂ ಪೇದ್ಯದಲ್ಲಿ ಕುಂಭದ ಅಲಂಕರಣವಿದೆ. ಇದಕ್ಕೆ ಹೊಂದಿಕೊಂಡಂತೆ ಗರ್ಭಗೃಹದಷ್ಟೇ ವಿಸ್ತೀರ್ಣದ ಶುಕನಾಸವಿದೆ. ಇದರಲ್ಲಿ ಯಾವುದೇ ಮೂರ್ತಿಗಳಿಲ್ಲ. ಆದರೆ ವಿತಾನದಲ್ಲಿ ಪದ್ಮದ ಅಲಂಕರಣವಿದೆ. ಪ್ರವೇಶದ್ವಾರದ ಬಲ ಪೇದ್ಯದಲ್ಲಿ ಇಬ್ಬರು ಶೈವ ದ್ವಾರಪಾಲಕರೂ, ಹಾಗೂ ಎಡ ಪೇದ್ಯದಲ್ಲಿ ಇಬ್ಬರು ವೈಷ್ಣವ ದ್ವಾರಪಾಲಕರಿರುವರು. ಪ್ರವೇಶ ದ್ವಾರವು ಪುಷ್ಟ, ಲತಾ, ಸ್ತಂಭ ಇವುಗಳಿಂದ ಅಲಂಕೃತಗೊಂಡಿದೆ. ಸ್ತಂಭಶಾಖೆಯ ಇಕ್ಕೆಲಗಳಲ್ಲಿ ಜಾಲಾಂಧ್ರಗಳಿವೆ. ಈ ಜಲಾಂಧ್ರಗಳನ್ನು ಪುಷ್ಟಗಳಿಂದ ಅಲಂಕರಿಸಲಾಗಿದೆ. ಪುಷ್ಟ ಹಾಗೂ ಲತಾ ಶಾಖೆಗಳು ಲಲಾಟದವರೆಗೂ ಮುಂದುವರೆದಿವೆ. ಲಲಾಟದಲ್ಲಿ ಗಜಲಕ್ಷ್ಮಿಯ ಶಿಲ್ಪವಿದೆ.
ದೇವಾಲಯದ ನವರಂಗವು ತುಂಬ ವಿಶೇಷತೆಯಿಂದ ಕೂಡಿದೆ. ಇದು ದಕ್ಷಿಣ, ಉತ್ತರ ಮತ್ತು ಪೂರ್ವದಿಂದ ಪ್ರವೇಶ ದ್ವಾರಗಳನ್ನು ಹೊಂದಿದೆ. ನವರಂಗದ ಮಧ್ಯಭಾಗದಲ್ಲಿ ತಿರುಗಣಿಯಂತ್ರದ ಸಹಾಯದಿಂದ ನಿರ್ಮಿಸಿರುವ ಬಳಪದಕಲ್ಲಿನ ಘಂಟಾಕೃತಿಯ ನಾಲ್ಕು ಕಂಬಗಳಿವೆ. ಪೀಠದ ಮೇಲೆ ನಿಂತಿರುವ ಬಳಪದಕಲ್ಲಿನ ಘಂಟಾಕೃತಿಯ ನಾಲ್ಕು ಕಂಬಗಳಿವೆ. ಪೀಠದ ಮೇಲೆ ನಿಂತಿರುವ ಕಂಬಗಳ ಕೆಳಬಾಗ ಹನ್ನೊಂದು ವೃತ್ತಗಳುಳ್ಳ ದಿಂಡು, ಮುಗುಚಿದ ಬೋಗುಣಿಯಂತೆ ಮಧ್ಯ ಉಬ್ಬಿದ ವೃತ್ತಕಾರ ಭಾಗ ಹಾಗೂ ಬೋಧಿಗೆಯನ್ನು ಹೊಂದಿದೆ. ಬೋಧಿಗೆಗಳು ಪುಷ್ಟದಳಗಳಿಂದ ಅಲಂಕೃತಗೊಂಡಿದ್ದರೆ, ಮಧ್ಯದ ಮುಗುಚಿದ ಭೋಗುಣಿಯಂತಹ ಭಾಗವು ಪತ್ರ ಹಾಗೂ ಮಾಲಾಲಂಕಾರದಿಂದ ಕೂಡಿವೆ.
ಭುವನೇಶ್ವರಿಯಲ್ಲಿ ಅಷ್ಟದಿಕ್ಪಾಲರನ್ನು ವಾಹನ ಸಮೇತರಾಗಿ ಅತ್ಯಂತ ಸುಂದರವಾಗಿ ನಿರೂಪಿಸಲಾಗಿದೆ. ಉತ್ತರದಿಂದ ಕ್ರಮವಾಗಿ ಕುಬೇರ, ಈಶಾನ, ಇಂದ್ರ, ಅಗ್ನಿ, ಯಮ, ನಿಋತಿ, ವರುಣ ಮತ್ತು ವಾಯು ಇರುವರು. ನವರಂಗದ ಉಳಿದ ವಿತಾನಗಳಲ್ಲಿ ಕಮಲದ ಮೊಗ್ಗುಗಳನ್ನು ಕಾಣಬಹುದು. ಉತ್ತರ ಪ್ರವೇಶದ್ವಾರವು ಲತಾ, ಪುಷ್ಟ, ಹಾಗೂ ಸ್ತಂಭಶಾಖೆಗಳಿಂದ ಅಲಂಕೃತಗೊಂಡಿದ್ದು ದ್ವಾರಪಾಲಕರಿದ್ದಾರೆ. ಲಲಾಟದಲ್ಲಿ ಗಜಲಕ್ಷ್ಮಿ ಶಿಲ್ಪವಿದೆ, ಈ ಪ್ರವೆಶದ್ವಾರಕ್ಕೆ ಹೊಂದಿಕೊಂಡಿರುವ ಕಾಲ ಭೈರವನ ದೇವಾಲಯ ವಿದೆ. ಕಾಲಭೈರವ ದೇವಾಲಯದ ಅಧಿಷ್ಠಾನ, ಭಿತ್ತಿ, ಹಾರಗಳೆಲ್ಲವೂ ಹರಿಹರೇಶ್ವರ ದೇವಾಲಯಕ್ಕೆ ಪೂರಕವಾಗಿಯೇ ರಚನೆಗೊಂಡಿವೆ. ನವರಂಗದ ದಕ್ಷಿಣ ದ್ವಾರವು ಉತ್ತರ ದ್ವಾರದ ಅಲಂಕರಣ ರೀತಿಯಲ್ಲಿಯೇ ಇದೆ. ನವರಂಗದ ಪಶ್ಚಿಮ ಭಾಗದಲ್ಲಿ ಅಂದರೆ ಅಂತರಾಳದ ಇಕ್ಕೆಲಗಳಲ್ಲಿ ಎರಡು ದೇವಕೋಷ್ಟಗಳಿವೆ.
ನವರಂಗದ ಮುಖ್ಯ (ಪೂರ್ವ) ಪ್ರವೇಶದ್ವಾರವು ಹಲವಾರು ಶಾಖೆಗಳಿಂದ ಅಲಂಕೃತಗೊಂಡಿದೆ. ರತ್ನ, ಪುಷ್ಟ, ಸ್ತಂಭ ಯಾಳಶಾಖೆಗಳಿವೆ. ಮೊದಲ ಮೂರು ಶಾಖೆಗಳು ಲಲಾಟದವರೆಗೂ ಮುಂದುವರೆದಿವೆ. ಲಲಾಟದಲ್ಲಿ ಗಜಲಕ್ಷ್ಮಿ ಶಿಲ್ಪಿವಿದೆ. ಚೌಕಾಕಾರದ ಈ ಪಟ್ಟಿಕೆಯ ಇಕ್ಕೆಲಗಳಲ್ಲಿ ಇಳಿ ಬಿದ್ದ ಕಮಲದ ಮೊಗ್ಗಿನ ಸುಂದರ ಅಲಂಕಾರವಿದೆ. ಉತ್ತರಾಂಗವನ್ನು ಪುಷ್ಟ, ಲತೆ ಹಾಗೂ ಸ್ತಂಭಗಳಿಂದ ಅಲಂಕರಿಸಲಾಗಿದೆ. ಮಧ್ಯದಲ್ಲಿ ಹರಿಹರೇಶ್ವರ ಹಾಗು ಇಕ್ಕೆಲಗಳಲ್ಲಿ ಕೆಲವು ಧ್ಯಾನಾಸಕ್ತ ಮೂರ್ತಿಗಳನ್ನು ನಿರೂಪಿಸಿದ್ದು ಇವುಗಳನ್ನು ಕೀರ್ತಿಮುಖಗಳಿಂದ ಸಿಂಗರಿಸಲಾಗಿದೆ. ಪ್ರಸ್ತುತ ದ್ವಾರಬಂಧದ ದ್ವಾರಪಾಲಕರ ಕೆತ್ತನೆಯಲ್ಲಿಯೂ ಸಹ ಶೈವ ಮತ್ತು ವೈಷ್ಣವ ಸಂವೇದನೆಗಳಿಗೆ ಪೂರಕವಾಗಿ ದ್ವಾರಬಂಧದ ಬಲಭಾಗದಲ್ಲಿ ದ್ವಾರಪಾಲಕನ ಪಕ್ಕದಲ್ಲಿ ಶಿವನ ಶಿಲ್ಪವೂ ಎಡಭಾಗದ ದ್ವಾರಪಾಲಕನ ಪಕ್ಕದಲ್ಲಿ ಕೇಶವನ ಶಿಲ್ಪವೂ ಕಂಡುಬರುತ್ತವೆ.
ನವರಂಗಕ್ಕೆ ಹೊಂದಿಕೊಂಡಂತೆ ಪೂರ್ವದಿಕ್ಕಿನಲ್ಲಿ ವಿಶಾಲವಾದ ಮಹಾಮಂಟಪವಿದೆ. ಮಹಾಮಂಟಪಕ್ಕೆ ಪೂರ್ವ, ಉತ್ತರ ಮತ್ತು ದಕ್ಷಿಣದಲ್ಲಿ ಪ್ರವೇಶದ್ವಾರಗಳಿವೆ. ಮಹಾಮಂಟಪದಲ್ಲಿ ಒಟ್ಟು ಅರವತ್ತೆಂಟು ಸುಂದರವಾದ ವಿಭಿನ್ನ ಶೈಲಿಯ ಕಂಬಗಳಿವೆ. ಕಂಬಗಳ ಪೀಠದ ಮೇಲಿನ ಭಾಗ ಚೌಕಾಕಾರವಾಗಿದ್ದು ಅದರ ಮೇಲಿನ ಕಂಬಗಳ ರಚನೆ ನವರಂಗದ ಕಂಬಗಳಂತೆಯೇ ಕಂಡುಬರುತ್ತದೆ. ಬೋಧಿಗೆಯು ಪುಷ್ಟಗಳಿಂದ ಅಲಂಕೃತಗೊಂಡಿದೆ. ಮಹಾಮಂಟಪದ ಮಧ್ಯದ ಭುವನೇಶ್ವರಿಯಲ್ಲಿ ಅರಳಿ ಮುಗುಚಿದ ಕಮಲದ ಹಾಗೂ ಮಧ್ಯದಲ್ಲಿ ಕಮಲದ ಮೊಗಿನ ಅಲಂಕಾರವಿದೆ. ಸುತ್ತಲೂ ಚಿಕ್ಕ ಚಿಕ್ಕ ಪುಷ್ಟಗಳಿವೆ. ಮಹಾಮಂಟಪದ ಸುತ್ತಲೂ ಹೊರಚಾಚಿದ ಕಪೋತದ ಒಳಬಾಗದಲ್ಲಿ ಪುಷ್ಟ, ಹುಲಿಯನ್ನು ಕೊಲ್ಲುತ್ತಿರುವ ಸಳ, ಆನೆ, ಸಿಂಹ,ಹಾಗೂ ಕೀರ್ತಿಮುಖಗಳನ್ನು ನಿರೂಪಿಸಲಾಗಿದೆ.
ಪಾಶ್ರ್ವನೋಟದಲ್ಲಿ ಹರಿಹರೇಶ್ವರ ದೇವಾಲಯವು ಅಧಿಷ್ಠಾನದ ಮೇಲೆ ನಿರ್ಮಾಣಗೊಂಡಿದೆ. ಅಧಿಷ್ಠಾನವು ಉಪಾನ, ಜಗತಿ, ಪದ್ಮ, ಕಪೋತ, ದಂತ ಪಂಕ್ತಿಗಳನ್ನು ಹೊಂದಿದೆ. ಅಧಿಷ್ಠಾನದ ಕೆಲಪಟ್ಟಿ ಅಂದರೆ ಉಪಾನದಲ್ಲಿ ಲತಾಸುರುಳಿವೆ ಭಿತ್ತಿಯು ಅರೆಗಂಬಗಳಿಂದ ಕೂಡಿದ್ದು ಮೇಲ್ಬಾಗದಲ್ಲಿ ಶಿಖರದ ಮಾದರಿಯನ್ನು ಕೆತ್ತಲಾಗಿದೆ. ಇವುಗಳನ್ನು ಭಿತ್ತಿಯಲ್ಲಿಯೇ ಗೂಡಿನಂತೆ ರಚಿಸಿದಂತೆ ಕಂಡುಬರುತ್ತದೆ. ಎರಡೂ ಪಾಶ್ರ್ವಗಳಲ್ಲಿ ಕೋಷ್ಟಪಂಜರಗಳಿವೆ. ಈ ಎಲ್ಲ ಕೋಷ್ಟಳಿಗೆ ಒಂದೇ ಎತ್ತರದಲ್ಲಿ ಕಪೋತ ಪಟ್ಟಿಕೆಗಳಿವೆ. ಮೇಲ್ಭಾಗದಲ್ಲಿ ಶಿಖರಗಳಿವೆ. ದೇವಾಲಯದ ಭಿತ್ತಿಯ ಕೊನೆಸ್ತರದಲ್ಲಿ ಕಪೋತಭಾಗವು ಹೊರಚಾಚಿ ಕೆಳಕ್ಕೆ ಬಾಗಿದ ರೀತಿಯಲ್ಲಿದೆ. ಇದು ಮಹಾಮಂಟಪದ ಸುತ್ತಲೂ ಹೆಚ್ಚು ಹೊರಬಾಗಿದ್ದು ಕಪೋತದ ಮೆಲ್ಭಾಗದಲ್ಲಿ ಕೂಟ, ಪಂಜರ ಹಾಗೂ ಕೀರ್ತಿ ಮುಖಗಳನ್ನು ನಿರೂಪಿಸಲಾಗಿದೆ. ಈ ದೇವಾಲಯದ ಗರ್ಭಗೃಹದ ಮೇಲಿನ ಶಿಖರವು ದ್ರಾವಿಡಶೈಲಿಯ ತ್ರಿತಲದಲ್ಲಿದೆ. ಅಧಿಷ್ಠಾನದಲ್ಲಿರುವ ಅಲಂಕರಣೆಗಳು, ಭಿತ್ತಿಯಲ್ಲಿ ಬರುವ ಕೋಷ್ಟಪಂಜರಗಳು ಕಂಡುಬರುತ್ತವೆ. ಶುಕನಾಸಿಯಲ್ಲಿ ಈಗಿನ ಶಿಖರಕ್ಕೆ ಹೊಂದಿಕೊಂಡಂತೆ ಸಳನು ಹುಲಿಯನ್ನು ಕೊಲ್ಲುತ್ತಿರುವ ಶಿಲ್ಪವನ್ನು ಅಳವಡಿಸಿದ್ದಾರೆ.
ಪ್ರಸ್ತುತ ದೇವಾಲಯವು ವಿಶಾಲವಾದ ಪ್ರಾಕಾರವನ್ನು ಹೊಂದಿದ್ದು, ಮಹಾದ್ವಾರವೂ ಸಹ ಇದೆ. ಈದೇಗುಲದ ಸುತ್ತಲೂ ಕಿರು ದೇವಾಲಯಗಳು ಕಂಡುಬರುತ್ತವೆ. ಈ ದೇವಾಲಯದ ಉತ್ತರಕ್ಕೆ ಇದೇ ಸಂಕೀರ್ಣದಲ್ಲಿ ಲಕ್ಷ್ಮೀ ದೇವಾಲಯವಿದೆ. ಇದೊಂದು ಏಕಕೂಟ ದೇವಾಲಯವಾಗಿದ್ದು, ತಳವಿನ್ಯಾಸದಲ್ಲಿ ಗರ್ಭಗೃಹ, ಮತ್ತು ನೇರವಾಗಿ ಮಹಾ ಮಂಟಪವನ್ನು ಹೊಂದಿದ್ದು. ಮಹಾಮಂಟಪದಿಂದಲೇ ಗರ್ಭಗೃಹವನ್ನು ಪ್ರವೇಶಿಸಬಹುದಾಗಿದೆ. ಗರ್ಭಗೃಹವು ಚೌಕಾಕಾರವಾಗಿದ್ದು ಪಾಶ್ರ್ವನೋಟದಲ್ಲಿ ಅಧಿಷ್ಠಾನ ಮಾತ್ರ ಹರಿಹರೇಶ್ವರ ದೇವಾಲಯದಂತೆಯೇ ಕಂಡುಬರುತ್ತದೆ.
ಮಹಾಮಂಟಪವೂ ಸಹ ಸುತ್ತಲೂ ಕಕ್ಷಾಸನವನ್ನು ಹೊಂದಿದೆ. ಕಕ್ಷಾಸನದ ಹೊರಮೈ ಸ್ತಂಭ ಪಂಜರಗಳಿಂದ ಮತ್ತು ಪುಷ್ಟಗಳಿಂದ ಅಲಂಕೃತವಾಗಿದೆ. ಮಹಾಮಂಟಪದ ಮಧ್ಯದ ಕಂಬಗಳು ಮಾತ್ರ ವೃತ್ತಾಕಾರವಾಗಿದ್ದು ಉಳಿದೆಲ್ಲ ಕಂಬಗಳು ಅಷ್ಟಮುಖಗಳನ್ನು ಹೊಂದಿವೆ. ಇದೇ ಪ್ರಕಾರದಲ್ಲಿ ಪಾರ್ವತಿಯ ದೇವಾಲಯವು ಇದ್ದ ಬಗ್ಗೆ ಮಾಹಿತಿ ಇದ್ದರೂ ಅದು ಈಗ ಸಂಪೂರ್ಣವಾಗಿ ನಾಶವಾಗಿದೆ. ಬಹುಶಃ ಹರಿಹರರ ಪತ್ನಿಯರಾದ ಲಕ್ಷ್ಮೀ ಹಾಗೂ ಪಾರ್ವತಿಯರಿಗಾಗಿ ಈ ದೇವಾಲಯಗಳು ನಿರ್ಮಾಣವಾಗಿರಬಹುದೆಂದು ಲೂಹಿಸಬಹುದಾಗಿದೆ.
ಅಲ್ಲದೆ ಈ ದೇವಾಲಯದ ಮಹಾದ್ವಾರದ ಎರಡು ಪಾಶ್ರ್ವಗಳಲ್ಲಿ ದೀಪಸ್ತಂಬಗಳು ಕಂಡುಬರುತ್ತವೆ. ಈ ರೀತಿಯ ದೀಪಸ್ತಂಭಗಳು ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರಗಳಲ್ಲಿರುವ ದೇವಾಲಯಗಳಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಈ ದೀಪಸ್ತಂಭಗಳು ಅಷ್ಟಮುಖಗಳನ್ನು ಹೊಂದಿದ್ದು, ವೃತ್ತಾಕಾರವಾಗಿವೆ. ಈ ಸ್ತಂಭದಲ್ಲಿ 25 ಹೊರಚಾಚಿದ ಎಣ್ಣೆದೀಪದ ಕುಳಿಗಳಿವೆ. ಇದೇ ರೀತಿಯ ದೀಪದ ಕಂಬಗಳನ್ನು ಬದಾಮಿಯ ಬನಶಂಕರಿ ದೇವಾಲಯದಲ್ಲಿ, ಸವದತ್ತಿ ತಾಲ್ಲೂಕಿನ ಎಲ್ಲಮ್ಮನ ಗುಡ್ಡದಲ್ಲಿ ಕಾಣಬಹುದಾಗಿದೆ. ಇವುಗಳನ್ನು ಮಹಾದ್ವಾರದ ಎರಡೂ ಒಳಪಾಶ್ರ್ವಗಳಲ್ಲಿ ನಿರ್ಮಿಸಿರುವುದು ಕಂಡುಬರುತ್ತದೆ.
ಈ ದೇವಾಲಯಕ್ಕೆ ಸಂಬಂಧಿಸಿದಂತೆ ಸುಮಾರು ಅರವತ್ತು ಶಾಸನಗಳು ದೊರೆಯುತ್ತವೆ. ಆದರೆ ಯಾವ ಶಾಸನವೂ ಮೂಲ ದೇವಾಲಯದ ನಿರ್ಮಾಣದ ಬಗ್ಗೆ ಬೆಳಕು ಚೆಲ್ಲುವುದಿಲ್ಲ. ಕ್ರಿ.ಶ.1110ರ ಉಚ್ಚಂಗಿ ಪಾಂಡ್ಯರ ಶಾಸನವು ಪಾಂಡ್ಯರ ದೊರೆಗಳಾದ ವೀರಪಾಂಡ್ಯ, ವಿಜಯಪಾಂಡ್ಯ ಮತ್ತು ಕಲಚೂರಿಗಳ ಬಿಜ್ಜಳ, ಹೊಯ್ಸಳ, ಯಾದವ ಮತ್ತು ವಿಜಯನಗರ ಅರಸರುಗಳು ಈ ದೇವಾಲಯದ ಉನ್ನತಿಗಾಗಿ ಹಲವಾರು ದಾನಗಳನ್ನು ನೀಡಿದ್ದಾರೆ.
ಆದರೆ ಹೊಯ್ಸಳರ ದೊರೆ ಎರಡನೇ ನರಸಿಂಹ ಮತ್ತು ಬಲ್ಲಾಳರ ಕಾಲದಲ್ಲಿ ಈ ಭಾಗದ ದಂಡನಾಯಕನಾಗಿದ್ದ ಪೊಲಾಳ್ವ ದಂಡನಾಯಕನು ಈ ಹಿಂದೆ ಅಂದರೆ ಕ್ರಿ.ಶ.1124ರಲ್ಲಿ ಪೆರ್ಮಾಡಿಯು ನಿರ್ಮಿಸಿದ್ದ ಈ ದೇವಾಲಯವನ್ನು ಸಂಪೂರ್ಣವಾಗಿ ಪುನರನಿರ್ಮಿಸಿ ದೇವಾಲಯದ ಮೇಲೆ ನೂರಾಹದಿನೈದು ಬಂಗಾರದ ಕಲಶಗಳನ್ನು ಪ್ರತಿಷ್ಟಾಪಿಸಿದನೆಂದು ತಿಳಿದುಬರುತ್ತದೆ. ಹೊಯ್ಸಳ ನರಸಿಂಹನು ಈ ದೇವಾಲಯಕ್ಕೆ ಹಲವಾರು ರೀತಿಯ ದಾನದತ್ತಿಗಳನ್ನು ನೀಡಿದ ವಿಷಯ ಶಾಸನೋಕ್ತವಾಗಿದೆ. ಮಹಾದ್ವಾರವನ್ನು ನಿರ್ಮಿಸಿ ಅದರ ಮೆಲೆ ಸುವರ್ಣ ಕಳಶಗಳನ್ನು ಇರಿಸಿದನೆಂದು ತಿಳಿದುಬರುತ್ತದೆ. ನಂತರದ ಕಾಲದಲ್ಲಿ ಸಾಕಷ್ಟು ಜೀರ್ಣೋದ್ಧಾರಗೊಂಡ ಈ ದೇವಾಲಯ ಪುನಃ ವಿಜಯನಗರದ ಅರಸರ ಕಾಲದಲ್ಲಿ ಹಲವಾರು ಬದಲಾವಣೆಗಳನ್ನು ಕಂಡಿದೆ.
-ಹರೀಶ್. ಟಿ
ಸಂಶೋಧನಾ ವಿದ್ಯಾರ್ಥಿ
ಇತಿಹಾಸ ವಿಭಾಗ
ಗುಲ್ಬರ್ಗ ವಿಶ್ವವಿದ್ಯಾಲಯ
ಮೊಬೈಲ್ : 7090256234
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ5 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ6 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ3 minutes agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ


