Connect with us

ಲೈಫ್ ಸ್ಟೈಲ್

ಮೂಲಿಕೆ ಮದ್ದುಗಳಿಗೂ ಬೇಕು ಸುರಕ್ಷತೆಯ ಅಗ್ನಿಪರೀಕ್ಷೆ..!

Published

on

  • ಡಾ.ಎನ್.ಬಿ.ಶ್ರೀಧರ

ಇಂಗ್ಲಿಷ್ ಔಷಧಿಗಳಿಗೆಲ್ಲಾ ಸೈಡ್ ಇಫೆಕ್ಟ್ ಜಾಸ್ತಿ. ನಾನು ತಗೋಳ್ತಾ ಇರೋದು ಗಿಡಮೂಲಿಕೆ ಔಷಧಿ. ನಮ್ಮನೇ ದನಗಳಿಗೂ ನಾನು ನಾಟಿ ಔಷಧೀನೇ ಮಾಡಿಸೋದು” ಇದು ಕೆಲವು ರೈತರ ಅಭಿಪ್ರಾಯ. ಔಷಧಿ ಅಂದರೆ ಪರಿಣಾಮವಿರುವ ಔಷಧಿಗೆ ಅಡ್ಡಪರಿಣಾಮ ಇದ್ದೇ ಇರುತ್ತದೆ. ಅಡ್ಡಪರಿಣಾಮಗಳಿಲ್ಲ ಅಂದರೆ ಅದಕ್ಕೆ ಪರಿಣಾಮವೂ ಇಲ್ಲ.

ಇದು ಔಷಧಿಗಳಿಗೆಲ್ಲ ಇರುವ ಮಾತೃ ವೇದವಾಕ್ಯ!!. “ಔಷಧಿ ಎರಡೂ ಕರೆ ಕುಯ್ಯುವ ಗರಗಸ ಇದ್ದ ಹಾಗೇ. ಅದು ರೋಗವನ್ನು ವಾಸಿ ಮಾಡಬಲ್ಲದು. ಹಾಗೆಯೇ ಮನುಜನ ಶರೀರಕ್ಕೆ ಹಾನಿಯನ್ನೂ ಉಂಟು ಮಾಡಬಲ್ಲದು” ಎಂದು ಆಂಗ್ಲ ಗಾದೆಯಲ್ಲಿ ಹೇಳಲಾಗಿದೆ. ಹಾಗಿದ್ದರೆ ಈ ಗಿಡಮೂಲಿಕೆಗಳ ಸಾಧಕ ಬಾಧಕಗಳೇನು ಎಂಬುದು ಮುಖ್ಯವಲ್ಲವೇ? ತಿಳಿದುಕೊಳ್ಳೋಣ.

ಭಾರತವು ಪುರಾತನ ಪರಂಪರೆಯಿಂದ ಗಿಡಮೂಲಿಕೆ ಔಷಧಿಗಳನ್ನು ಉಪಯೋಗಿಸುತ್ತಾ ಬಂದಿದೆ. ಪ್ರಪಂಚದಾದ್ಯಂತದ ಜನರು ಪ್ರತಿ ವರ್ಷ ಸಾವಿರಾರು ವಿವಿಧ ಗಿಡಮೂಲಿಕೆ ಔಷಧಿಗಳನ್ನು ಬಳಸುತ್ತಾರೆ. ಇದರ ಫಲವಾಗಿ ಈ ಗಿಡಮೂಲಿಕೆ ಔಷಧಿಗಳ ಉದ್ಯಮವು ಎಷ್ಟು “ಲಾಭದಾಯಕ” ವೆನಿಸಿದೆಯೆಂದರೆ, ವಿಶ್ವದಾದ್ಯಂತ ಈ ಉದ್ಯಮದ ಮೌಲ್ಯವು 7000ರೂ ಕೋಟಿಗೂ ಹೆಚ್ಚಿದೆ. ಮೊದಲು ಮನೆ ಮದ್ದು ಎಂದು ಉಪಯೋಗಿಸಲ್ಪಡುತ್ತಿದ್ದ ಈ ಉತ್ಪನ್ನಗಳು ಇಂದು ಉದ್ಯಮಗಳ ಕಣ್ಮಣಿಯಾಗಿವೆ ಎಂದರೆ ಉತ್ಪ್ರೇಕ್ಷೆ ಅಲ್ಲ.

ಹೌದು! ಉಧ್ಯಮಗಳು ಲಾಭ ಮಾಡಲೆಂದೇ ಇರುವುದು. ಆದರೆ ಅತಂಕದ ವಿಷಯವೆಂದರೆ ಈ ಗಿಡ ಮೂಲಿಕೆ ಔಷಧಿಗಳ ತಯಾರಿಕೆ, ಮಾರಾಟ ಮತ್ತು ಮಾರಾಟೋತ್ತರ ನಡುವಳಿಕೆಗಳ ಬಗ್ಗೆ ಸಾಕಷ್ಟು ಕಾನೂನುಗಳಿದ್ದರೂ ಅವುಗಳ ಪಾಲನೆಯ ಬಗ್ಗೆ ಬಗ್ಗೆ ಕಟ್ಟು ನಿಟ್ಟಾದ ನಿಯಂತ್ರಣ ಇಲ್ಲದೇ ಇಲ್ಲದಿರುವುದು. ಇದರಿಂದಲೇ ಈ ಗಿಡಮೂಲಿಕೆ ಔಷಧಿಗಳ ಹೆಸರಿನಲ್ಲಿ ನಾಯಿ ಕೊಡೆಗಳಂತೆ ತಲೆಯೆತ್ತುತ್ತಿರುವ ಹೊಸ ಹೊಸ ಕಂಪನಿಗಳು !!.

ಈ ಉದ್ಯಮದ ವ್ಯಾಪಕತೆಯು ಕಣ್ಣಿಗೆ ಕಾಣದಂತೇನೂ ಇಲ್ಲ; ಇವುಗಳ ಜಾಹಿರಾತುಗಳಂತೂ ದಿನಬೆಳಗಾದರೆ ಪತ್ರಿಕೆಗಳು, ನಿಯತಕಾಲಿಕೆಗಳು,ಹಲವಾರು ದೃಶ್ಯ ಮಾಧ್ಯಮಗಳಲ್ಲಿ ಕಂಡು ಬರುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಈ ಮಾರುಕಟ್ಟೆಯು ಗಣನೀಯ ವೇಗವನ್ನು ಗಳಿಸಿದೆ. ಇದರ ಜೊತೆಗಿರುವ ಪ್ರಮುಖ ಅಪಾಯವೆಂದರೆ, ಗ್ರಾಹಕರು ತಮಗರಿವಿಲ್ಲದೇ ಪರಿಶೀಲಿಸದ ಅಥವಾ ಅಧಿಕೃತವಲ್ಲದ ಪೂರಕ ಆಹಾರ ಪದಾರ್ಥಗಳು ಮತ್ತು ಔಷಧಿಗಳನ್ನು ಸೇವಿಸುವ ಸಾಧ್ಯತೆ ಹೆಚ್ಚಾಗಿದೆ.ಮೂಲಿಕೆ ಮದ್ದುಗಳೆಲ್ಲಾ ಸುರಕ್ಷಿತ ಎಂಬ ಭ್ರಮೆ ಬೇಡವೇ ಬೇಡ. ಪರಿಣಾಮವಿರುವ ಯಾವುದೇ ಔಷಧಿಗೆ ಯಾವುದಾದರೊಂದು ಅಡ್ಡಪರಿಣಾಮ ಇದ್ದೇ ಇರುತ್ತದೆ ಎನ್ನುವುದು ಕಟು ಸತ್ಯ.

ಆಧುನಿಕ ವಿಜ್ಞಾನದಿಂದ ತುಲನಾತ್ಮಕವಾಗಿ ದೂರವಿರುವ ಗಿಡ ಮೂಲಿಕೆ ಮತ್ತು ಸಾಂಪ್ರದಾಯಿಕ ಔಷಧಿಗಳ ವಿಚಾರದಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಿದ್ದು, ಅವು ಮಾರುಕಟ್ಟೆ ಪ್ರವೇಶಿಸುವ ಮೊದಲು ಕಠಿಣ ತಪಾಸಣೆಗೆ ಒಳಪಡುವುದಿಲ್ಲ ಎಂಬುದು ಬೆಚ್ಚಿಬೀಳಿಸುವ ಸತ್ಯ. ಕೇವಲ “ಇವು ಪಾರಂಪರಿಕ ಔಷಧಗಳು, ಪುರಾತನ ಕಾಲದಿಂದ ಬಳಕೆಯಲ್ಲಿವೆ; ಇವುಗಳಿಗೆ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂಬದು ಒಂದು ಸುಳ್ಳಿನ ಕಂತೆ. ಕೇವಲ ಇವು ಸುರಕ್ಷಿತ ಎಂಬ ನಂಬಿಕೆಯ ಮೇಲೆ ನಡೆಯುತ್ತಿರುವುದು ಮತ್ತು ಮಾರಾಟವಾಗುತ್ತಿರುವುದು ಅಪ್ರಿಯವಾದ ಸತ್ಯ.

ಹಾಗಿದ್ದರೆ ಹೇಗೆ ಈ ಗಿಡಮೂಲಿಕೆಗಳ ಉತ್ಪನ್ನಗಳು ರಹದಾರಿ ಪಡೆಯುತ್ತವೆ ಎಂಬುದನ್ನು ನೋಡೋಣ. ಭಾರತದಲ್ಲಿ ಶೇ 80 ರಷ್ಟು ಹಳ್ಳಿಯ ಜನ ಗಿಡಮೂಲಿಕಾ ಔಷಧಿಗಳನ್ನು ಅವರ ವಿವಿಧ ಕಾಯಿಲೆಗಳ ಪ್ರಾಥಮಿಕ ಚಿಕಿತ್ಸೆಗೆ ಬಳಸುತ್ತಾರಂತೆ. ಆಯುಶ್ ಇಲಾಖೆಯ ಪ್ರಕಾರ ಸಧ್ಯ ಭಾರತದಲ್ಲಿ 10088 ಗಿಡಮೂಲಿಕೆ ಔಷಧಿ ತಯಾರಿಸುವ ರಹದಾರಿ ಪಡೆದಿರುವ ಕಂಪನಿಗಳಿದ್ದರೆ ಇವುಗಳಲ್ಲಿ ಉತ್ತಮ ತಯಾರಿಕಾ ವಿಧಾನ (ಜಿಎಮ್ ಪಿ) ದ ಬಗ್ಗೆ ಅನುಮತಿ ಪಡೆದಿರುವವರು5402 ಮಾತ್ರ.

ಈ ಔಷಧಿಗಳ ತಯಾರಿಕೆಗೆ ರಹದಾರಿ ಪಡೆಯಲು ಮೂರು ಕೊಠಡಿಗಳಿರುವ1200 ಚದರ ಅಡಿ ಕಟ್ಟಡ ಸಾಕು. ಇದರಲ್ಲಿ ಒಂದು ತಯಾರಿಕಾ ಕೊಠಡಿ, ಒಂದು ಸಂಗ್ರಹ ಕೊಠಡಿ ಮತ್ತು ಒಂದು ಕ್ವಾರಂಟೈನ್ ಕೊಠಡಿ ಇರಬೇಕು. ಒಂದು ಔಷಧಿ ತಯಾರಿಕೆಗೆ ಆಯುಶ್ ಮಂತ್ರಾಲಯದವರು ಸೂಚಿಸಿದ ಉಪಕರಣಗಳು, ಕೊಠಡಿಗಳು, ಸಂಬಂಧ ಪಟ್ಟ ವಿವಿಧ ದಾಖಲೆಗಳ ಸಮೇತ ಆಯಾ ರಾಜ್ಯದ ಆಯುಶ್ ಇಲಾಖೆಗೆ ಅರ್ಜಿ ಸಲ್ಲಿಸಿದ ನಂತರ ಅಲ್ಲಿನ ಪರೀಕ್ಷಕರ ವರದಿಯಾದ ನಂತರ ರಹದಾರಿ ದೊರೆಯುತ್ತದೆ. ಉತ್ತಮ ತಯಾರಿಕಾ ವಿಧಾನ (ಜಿಎಮ್ ಪಿ) ದ ಬಗ್ಗೆ ಮತ್ತೊಂದು ಅರ್ಜಿ ಸಲ್ಲಿಸಿ ಪ್ರಮಾಣ ಪತ್ರ ಪಡೆಯಬೇಕು. ಎಲ್ಲ ಕಡೆ ಇರುವಂತೆ ಇಲ್ಲಿಯೂ ಸಹ ಕೆಂಪು ಪಟ್ಟಿ ಅಧಿಕಾರಶಾಹಿ ಇತ್ಯಾದಿ ಅಡೆ ತಡೆ ಇದ್ದೇ ಇರುತ್ತದೆ.

ಉತ್ಪನ್ನ ತಯಾರಿಸುವ ಮೊದಲು ಅದರ ಬಗ್ಗೆ ಪುಸ್ತಕದಲ್ಲಿ ಪರಿಣಾಮದ ಬಗ್ಗೆ ಉಲ್ಲೇಖವಿರಬೇಕು. ಕಂಪನಿಯ ಏಕಮೇವ ಉತ್ಪನ್ನವಾಗಿದ್ದರೆ ಸರ್ಕಾರಿ ಆಸ್ಪತ್ರೆಗಳು ಅಥವಾ ಮಹಾವಿದ್ಯಾಲಯದಿಂದ ಆ ಉತ್ಪನ್ನದ ಬಗ್ಗೆ ಸಂಶೋಧನಾ ಲೇಖನಗಳು ಬೇಕು. ಆಗ ಈ ಔಷಧಿಯನ್ನು ಭಾರತಲ್ಲಿ ಮಾರಾಟ ಮಾಡಲು ತೊಂದರೆ ಇಲ್ಲ.

ಅಮೇರಿಕಾ ಮತ್ತಿತರ ದೇಶಗಳಲ್ಲಿ ಇದನ್ನು “ಅಹಾರ ಪೂರಕ” (ಡಯಟರಿ ಸಪ್ಲಿಮೆಂಟ್) ಎಂದು ಮಾರಾಟ ಮಾಡಬಹುದು. ಇದಕ್ಕೆ ಆ ದೇಶದ 1974 ರ ನಿಯಮದಡಿ ಅವಕಾಶ ನೀಡಲಾಗಿದೆ. ಇದಕ್ಕೆ ಉತ್ಪನ್ನದ ಪರಿಣಾಮ ಮತ್ತು ಅಡ್ಡ ಪರಿಣಾಮದ ಬಗ್ಗೆ ಮಾಹಿತಿ ನೀಡುವ ಅವಶ್ಯಕತೆ ಇಲ್ಲ. ಆದರೆ ಅದನ್ನು ಔಷಧಿ ಎಂದು ಯಾವ ಕಾರಣಕ್ಕೂ ಹೇಳುವ ಹಾಗಿಲ್ಲ. “ಔಷಧಿ” ಎಂದರೆ ಅಹಾರ ಮತ್ತು ಔಷಧ ನಿಯಂತ್ರಣ ಆಡಳಿತ ( ಎಫ಼್ ಡಿ ಏ) ದ ವ್ಯಾಪ್ತಿಯಲ್ಲಿ ಬಂದು ಅತ್ಯಂತ ಕಠಿಣ ನಿಯಮದಡಿ ಬರುತ್ತದೆ.

ಕಾರಣ ಅಮೇರಿಕಾಕ್ಕೆ ಬಹಳ ಗಿಡ ಮೂಲಿಕಾ ಉತ್ಪನ್ನಗಳು ರಪ್ತಾಗುತ್ತವೆ. ಚ್ಯವನ ಪ್ರಾಶದಂತ ಕೆಲವು ಉತ್ಪನ್ನಗಳು ಕೆನಡಾದಂತ ದೇಶದಲ್ಲಿ ಬ್ಯಾನಾಗಿದ್ದು ಅದರಲ್ಲಿ ಸತುವಿನಂತ ಹೆಚ್ಚಿನ ಭಾರ ಲೋಹಗಳಿವೆ ಎಂಬ ಅಂಶಗಳಿಗಾಗಿ. ಆದರೆ ಇದರ ಪರಿಸ್ಥಿತಿ ಯರೋಪ್ ಖಂಡದ ದೇಶದಲ್ಲಿ ಸ್ವಲ್ಪ ಭಿನ್ನವಾಗಿದೆ. ಭಾರತದ ಪಾರಂಪರಿಕ ಗಿಡಮೂಲಿಕಾ ಉತ್ಪನ್ನಗಳನ್ನು ಅಲ್ಲಿ ಅಮೇರಿಕಾದ ಹಾಗೇ ಸುಲಭದಲ್ಲಿ ಮಾರುವ ಹಾಗಿಲ್ಲ. ಇವುಗಳ ಪರಿಣಾಮ ಮತ್ತು ಅಡ್ಡಪರಿಣಾಮ ಇವೆಲ್ಲವುಗಳಿಗೆ ಪೂರಕವಾಗಿ ಹಲವಾರು ಸಂಶೋಧನಾ ಲೇಖನಗಳು ಇನ್ನಿತರ ದಾಖಲೆಗಳನ್ನು ನೀಡಬೇಕು.

ಅಲ್ಲದೇ ಉತ್ಪನ್ನದೊಳಗಿರುವ ಪ್ರತಿಯೊಂದು ಗಿಡಮೂಲಿಕಾ ಪದಾರ್ಥವು ಪ್ರಮಾಣೀಕರಣಗೊಂಡಿರಬೇಕು ಮತ್ತು ಯಾವ ಕಾಲದಲ್ಲಿಯಾದರೂ ಯಾವ ಮಾದರಿಯನ್ನಾದರೂ ತೆಗೆದುಕೊಂಡು ತಾಳೆಹಾಕಿದಾಗ ಅದು ಹೊಂದಾಣಿಕೆಯಾಗಲೇಬೇಕು. ಆ ದೇಶಗಳ ಕಾನೂನಿನಂತೆ ಹರ್ಬಲ್ ಮೆಡಿಸಿನಲ್ ಪ್ರೊಡಕ್ಟ್ ಡೈರೆಕ್ಟಿವ್2004 ರ ನಿಯಮಾನುಸಾರ ಉತ್ಪನ್ನಕ್ಕೆ ಅದರ ಉಪಯೋಗ, ಪ್ರಮಾಣ, ಅಡ್ಡ ಪರಿಣಾಮ, ನೀಡುವ ವಿಧಾನ ಈ ಎಲ್ಲವಕ್ಕೂ ದಾಖಲೆಗಳಿರಬೇಕು. ಅಲ್ಲದೇ ಯರೋಪ್ ದೇಶಗಳಲ್ಲ್ ಮ್ರು ರುಕಟ್ಟೆ ಮಾಡಬೇಕಾದರೆ15ವರ್ಷಗಳ ಮಾರುಕಟ್ಟೆ ಅನುಭವ ಇರಬೇಕು. ಇಷ್ಟೆಲ್ಲ ಕಟ್ಟಳೆಗಳಿರಬೇಕಾದರೆ ಅಲ್ಲಿ ಈ ಗಿಡಮೂಲಿಕಾ ಉತ್ಪನ್ನಗಳನ್ನು ಮಾರುವುದು ಅತ್ಯಂತ ಕಷ್ಠಕರ.

ಇನ್ನು ಆಫ್ರಿಕಾದಂತ ಹಿಂದುಳಿದ ದೇಶದಲ್ಲಿ ಮಾರುಕಟ್ಟೆ ಇದ್ದರೂ ಸಹ ಅಲ್ಲಿನ ನಿಯಮಗಳೇ ಬೇರೆ. ಹೀಗೆ ದೇಶದಿಂದ ದೇಶಕ್ಕೆ ಬದಲಾಗುವ ನಿಯಮಗಳು ಮಾರಾಟಗಾರರನ್ನು ಹೈರಾಣ ಮಾಡಿತು ಅಂದರೆ ತಪ್ಪಿಲ್ಲ. ಗಿಡ ಮೂಲಿಕೆ ಔಷಧಿಗಳಿಗೆ ಭಾರತದಲ್ಲಿ ಸದ್ಯಕ್ಕೆ ರಹದಾರಿ ಪಡೆಯುವುದರಿಂದ ಹಿಡಿದು ಗುಣಮಟ್ಟ ಕಾಪಾಡುವವರೆಗೆ ಹೆಚ್ಚಿನ ಕಟ್ಟು ಪಾಡುಗಳಿಲ್ಲ. ಭಾರತ ಸರ್ಕಾರದ ಅಧೀನದ ಆಯುಶ್ (ಆಯುರ್ವೇದ, ಸಿದ್ಧ, ಯುನಾನಿ, ಹೋಮಿಯೋಪತಿ ಇಲಾಖೆ) ಸಹ ಈ ಗಿಡಮೂಲಿಕೆ ಉತ್ಪನ್ನಗಳ ಬಗ್ಗೆ ಅವು ನಮ್ಮದೇ ದೇಶದ ಪರಂಪರೆಯಿಂದ ಬಂದ ಪದ್ಧತಿ ಎಂದು ಮೃದುದೋರಣೆ ತಳದಿರಬಹುದು.

ಅಲ್ಲದೇ ವನಸ್ಪತಿ ಉತ್ಪನ್ನಗಳ ತಯಾರಿಕೆಗೆ ಬೇಕಾಗುವ ಮೂಲ ಗಿಡಮೂಲಿಕೆಗಳ ಭಾಗ, ಯಾವ ಋತುವಿನಲ್ಲಿ ಇವುಗಳ ಕಟಾವಣೆ ಮಾಡಬೇಕು, ಅರಣ್ಯದ ಅವಲಂಭನೆ, ಇವುಗಳ ಕೃಷಿ ಪದ್ಧತಿ, ಬೆಲೆ ನಿಗದಿ ಮಾಡುವಿಕೆ, ಇವುಗಳ ಗುಣಮಟ್ಟ ಕಾಪಾಡಿಕೊಳ್ಳುವಿಕೆ, ಇವುಗಳಲ್ಲಿ ಕೀಟನಾಶಗಳು ಮತ್ತು ಭಾರಲೋಹದ ಮಟ್ಟ ಕಡಿಮೆ ಮಾಡುವುದು, ಮೂಲ ವಸ್ತುವಿನ ಗುರುತು ಮಾಡುವುದು ಇವುಗಳ ಬಗ್ಗೆ ಗೊಂದಲದ ಗೂಡೇ ಇದ್ದು ಇದು ಸದ್ಯಕ್ಕಂತೂ ಬಗೆಹರಿಯುವ ಲಕ್ಷಣಗಳಿಲ್ಲ. ಆಯುಶ್ ಇಲಾಖೆ ಅನೇಕ ಮಾನದಂಡಗಳನ್ನು ನಿಗದಿ ಮಾಡಿದರೂ ಅನೇಕ ತಯಾರಿಕರಿಗೆ ಲೈಸನ್ಸ್ ಪಡೆಯುವುದು ಮತ್ತು ಅದರ ನವೀಕರಣ ಹೊರತು ಪಡಿಸಿದರೆ ಉಳಿದ ಸಮಯದಲ್ಲಿ ಅದನ್ನು ಸಂಪರ್ಕಿಸುವ ಅವಶ್ಯಕತೆ ಕಂಡು ಬಂದಿಲ್ಲ.

ಆಯುಶ್ ಇಲಾಖೆಯ ಪ್ರಕಾರ 600 ವಿವಿಧ ಗಿಡಮೂಲಿಕೆಗಳು, 52 ಖನಿಜಗಳು, 50 ಪ್ರಾಣಿ ಉಪಪದಾರ್ಥಗಳು ಈ ಉತ್ಪನ್ನಗಳ ತಯಾರಿಕೆಯಲ್ಲಿ ಬಳಸಲ್ಪಡುತ್ತವೆ. ಕಾರಣ ಯಾರು ಬೇಕಾದರೂ ಸುಲಭವಾಗಿ ರಹದಾರಿ ಪಡೆದು ಈ ಉತ್ಪನ್ನಗಳನ್ನು ತಯಾರಿಸಬಹುದು. ಅನೇಕ ಸಲ ಲೇಬಲ್ಲಿನ ಮೇಲೆ ಬರೆದ ಗಿಡ ಮೂಲಿಕೆ ಹಾಕಿರುವರೋ ಇಲ್ಲವೋ ಎಂಬುದೂ ಖಚಿತ ಪಡಿಸಿಕೊಳ್ಳಲು ಸಾಧ್ಯವಿಲ್ಲ.

ಅಲೋಪತಿ ಔಷಧಗಳ ತಯಾರಿಕೆ ವಿಷಯದಂತೆ ಉತ್ತಮ ತಯಾರಿಕಾ ವಿಧಾನ (ಜಿಎಮ್ ಪಿ)ದಲ್ಲಿ ಉತ್ಪನ್ನಗಳ ತಯಾರಿಕೆ ಕಡ್ಡಾಯವಲ್ಲ. ಉತ್ಪನ್ನ ಕಳಪೆಯೆಂದಾದರೆ ದೂರು ನೀಡಬಹುದಾದರೂ ಸಹ ಅನೇಕ ಪದಾರ್ಥಗಳು ಒಂದು ಉತ್ಪನ್ನದಲ್ಲಿ ಇರುವುದರಿಂದ ಮತ್ತು ಇವೆಲ್ಲವು ಅದರಲ್ಲಿ ಇದೆಯೇ ಎಂಬುದನ್ನು ಅಳೆಯಲು ಯಾವುದೇ ಪ್ರಮಾಣೀಕೃತ ಪ್ರಯೋಗ ಪದ್ದತಿಗಳಿಲ್ಲ. ಇದರಿಂದ ಬಹುತೇಕ ತಯಾರಿಕೆದಾರರಲ್ಲಿ ಈ ಕಾನೂನಲ್ಲಿರುವ ಈ ಎಲ್ಲ ಕಂದಕ ಗಮನಿಸಿ ಮೋಸ ಮಾಡಲು ದಾರಿ ಮಾಡಿಕೊಟ್ಟಿದೆ ಎಂದರೆ ತಪ್ಪಾಗಲಾರದು.

ಇತ್ತೀಚಿನ ದಿನಗಳಲ್ಲಿ ಅತ್ಯಂತ ಚರ್ಚೆಗೊಳಗಾದ ವಿಷಯವೆಂದರೆ ಈ ಗಿಡಮೂಲಿಕೆ ಉತ್ಪನ್ನಗಳನ್ನು ಔಷಧಿಯೆಂದು ಪರಿಗಣಿಸಬೇಕೆ ? ಅಥವಾ ಪರಂಪರಾಗತವಾಗಿ ಬಂದವೆಂಬ ಕಾರಣದಿಂದ ಅವುಗಳ ವಿಷಗುಣದ ಬಗ್ಗೆ ಪರೀಕ್ಷೆ ನಡೆಸುವುದು ಬೇಡವೇ? ಎಂಬ ಬಗ್ಗೆ. ಇದರ ಕುರಿತು ಚೈನ ಗಿಡಮೂಲಿಕೆ ಉತ್ಪನ್ನಗಳನ್ನು ಜಾಸ್ತಿ ಬಳಸುವ ಚೈನಾದ ವಿಜ್ಞಾನಿಗಳದ್ದು ಈ ನಿಟ್ಟಿನಲ್ಲಿ ಪ್ರತ್ಯೇಕ ಹೇಳಿಕೆ ನಮ್ಮ ಗಮನ ಸೆಳೆಯುತ್ತದೆ. ಅವರು “ ನಮ್ಮ ಗಿಡಮೂಲಿಕೆ ಉತ್ಪನ್ನಗಳನ್ನು ಔಷಧಿ ಎಂದುಕೊಂಡರೆ ಅವುಗಳನ್ನು ಪಾಶ್ಚಿಮಾತ್ಯ ಪದ್ದತಿಗಳ ಪ್ರಕಾರವೇ ಕಠಿಣ ಪರೀಕ್ಷೆಗೊಳಪಡಿಸಬೇಕು” ಎನ್ನುತ್ತಾರೆ.

ಇವುಗಳು ಸುರಕ್ಷಿತ ಎನ್ನುವುದು ಉತ್ಪ್ರೇಕ್ಷೆಯಿಂದ ಹೇಳುವ ಹೇಳಿಕೆ. ಗಿಡಮೂಲಿಕೆ ಉತ್ಪನ್ನಗಳು ಉತ್ಪನ್ನಗಳು ಎನ್ನುವುದಾದರೆ ಓಇಸಿಡಿ ನಿಯಮಗಳ ಪ್ರಕಾರವೇ ಅವುಗಳ ಪರೀಕ್ಷೆ ನಡೆಯುವುದರಲ್ಲಿ ತಪ್ಪೇನಿದೆ?” ಎಂಬುದು.ಎಲ್ಲಾ ಔಷಧಿಗಳೂ ಅವುಗಳದೇ ಆದ ಅಡ್ಡಪರಿಣಾಮ ಹೊಂದಿವೆ. “ಔಷಧಿ ಎರಡೂ ಕರೆ ಕುಯ್ಯುವ ಗರಗಸ ಇದ್ದ ಹಾಗೇ. ಅದು ರೋಗವನ್ನು ವಾಸಿ ಮಾಡಬಲ್ಲದು. ಹಾಗೆಯೇ ಮನುಜನ ಶರೀರಕ್ಕೆ ಹಾನಿಯನ್ನೂ ಉಂಟು ಮಾಡಬಲ್ಲದು” ಎಂದು ಆಂಗ್ಲ ಗಾದೆಯಲ್ಲಿ ಹೇಳಲಾಗಿದೆ.

ಆದರೆ ಭಾರತೀಯರಲ್ಲಿ ಇದಕ್ಕೆ ಭಿನ್ನಾಭಿಪ್ರಾಯವಿದೆ. “ನಮ್ಮ ಪದ್ಧತಿ ಬಹಳ ಪುರಾತನವಾದದ್ದು. ಇದಕ್ಕೆ 5000 ವರ್ಷಗಳ ಇತಿಹಾಸವಿದೆ. ಇದನ್ನು ಅಲೋಪತಿ ಪದ್ಧತಿಯಲ್ಲಿ ಪರೀಕ್ಷೆಗೆ ಒಳಪಡಿಸುವುದು ಸರಿಯಲ್ಲ” ಎಂಬುದು. ಇದಕ್ಕೆ ತದ್ವಿರುದ್ಧವಾಗಿ ಒಂದಷ್ಟು ಜನ. ನಮ್ಮದು ಪುರಾತನ ಪದ್ಧತಿ ಎನ್ನುವುದು ಸರಿ. ಆದರೆ ಪುರಾತನ ಪದ್ಧತಿಯಾಗಿ ಇದು ಈಗ ಉಳಿದಿಲ್ಲ. ಬಹುತೇಕ ವಾಣಿಜ್ಯೀಕರಣವಾಗಿದೆ. ಲಾಭಕ್ಕಾಗಿಯೇ ಕೆಲವು ಕಂಪನಿಗಳು ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಅವುಗಳಿಗೆ ಕಠಿಣ ಪರೀಕ್ಷೆಗಳ ಕಡಿವಾಣ ಹಾಕಲೇಬೇಕು” ಎನ್ನುತ್ತಾರೆ ಅನೇಕರು.

ಇದಕ್ಕೆ ಅನೇಕ ಉದಾಹರಣೆಗಳನ್ನು ಅವರು ನೀಡುತ್ತಾರೆ. ಗಿಡಮೂಲಿಕೆಗಳನ್ನು ಹೊಂದಿದೆ ಎನ್ನಲಾಗುವ ಸೋಪುಗಳು, ಮುಲಾಮುಗಳು ಮೈಗೆ ಹಚ್ಚಿದ ಕೂಡಿದ ಕೂಡಲೇ ಅಲರ್ಜಿಯನ್ನುಂಟು ಮಾಡುವುದು, ಕೆಲವೊಂದು ಗಿಡಮೂಲಿಕೆಗಳ ಪ್ರಮಾಣ ಜಾಸ್ತಿಯಾದರೆ ಅದು ವಿಷಕಾರಿಯಾಗಬಲ್ಲದು ಎನ್ನುತ್ತಾರೆ. ಇವುಗಳಲ್ಲಿ ತಲೆನೋವು, ತಲೆ ತಿರುಗುವಿಕೆ, ಚರ್ಮದ ಮೇಲೇಳುವ ಸಣ್ಣ ಸಣ್ಣ ಕೆಂಪು ಗುಳ್ಳೆಗಳು ಸೇರಿರುತ್ತವೆ.

ಉದಾಹರಣೆಗೆ ಅಮೇರಿಕಾದ ಎಫ್ ಡಿ ಎ ಇದು2004 ರಲ್ಲಿ ಚೀನಾ ಮತ್ತು ಭಾರತದಿಂದ ಆಮದಾಗುವ ದೇಹತೂಕವನ್ನು ಕಡಿಮೆ ಮಾಡಲು ಬಳಸುವ ಎಫಿಡ್ರಾ ಗಿಡಮೂಲಿಕೆಯನ್ನು ಹೊಂದಿದ ಎಲ್ಲಾ ಉತ್ಪನ್ನಗಳನ್ನು ಬ್ಯಾನ್ ಮಾಡಿತು. ಕಾರಣ ಇಷ್ಟೇ. ಈ ಎಫಿಡ್ರಾ ಸಿನಿಕಾ ಎಂಬ ಗಿಡದ ಬಹುತೇಕ ಭಾಗಗಳಲ್ಲಿ ಎಫಿಡ್ರಿನ್ ಮತ್ತು ಅಂಫೆಟಮೈನ್ ಎಂಬ ಔಷಧಿ ಇದ್ದು ಇದು ನರಮಂಡಲದ ಉದ್ರೇಕಿಸಿ ವಿಷವನ್ನುಂಟು ಮಾಡಿ ಸುಮಾರು 155 ಜನರನ್ನು ಮುಗಿಸಿತು ಎಂದು ಎಫ್ ಡಿ ಏ ವಾದ.

ಒಂದು ಗಿಡಮೂಲಿಕೆ ಮೂಲದ ಉತ್ಪನ್ನಗಳು ಸುರಕ್ಷಿತವೆಂದು ಎಲ್ಲರಿಂದ ಪರಿಗಣಿಸಲ್ಪಡುವುದಾದರೂ, ಮುಂಜಾಗ್ರತೆಯು ಅಗತ್ಯವಾಗಿದೆ. ಒಂದು ವಸ್ತುವಿನ ಲೇಬಲ್‌ನಲ್ಲಿ “ನೈಸರ್ಗಿಕ” ಎಂದು ಬರೆಯಲ್ಪಟ್ಟಿದ್ದ ಮಾತ್ರಕ್ಕೆ ಮುಂಜಾಗ್ರತೆ ವಹಿಸುವುದನ್ನು ಅಲಕ್ಷಿಸಬಾರದು. “ಸುರಕ್ಷಿತ” ಎಂಬುದು ಈ ಉತ್ಪನ್ನಗಳ ವಿಷಯದಲ್ಲಿ ಒಂದು ನಂಬಿಕೆ ಅಷ್ಟೇ. ಯಾವುದೂ ವೈಜ್ಞಾನಿಕ ಪದ್ಧತಿಯಲ್ಲಿ ಸಿದ್ಧವಾಗಿಲ್ಲ. ಇದರಲ್ಲಿ ವನಸ್ಪತಿಗಳ ಪ್ರಮಾಣ ಬಹಳ ಕಡಿಮೆ ಇರುವುದರಿಂದ ಇವುಗಳು ತುಂಬಾ ಸುರಕ್ಷಿತ ಎಂಬುದು ಹಲವರ ನಂಬಿಕೆ.

ಕೆಲವು ಗಿಡಮೂಲಿಕೆಗಳ ಉತ್ಪನ್ನಗಳ ವಿಷಯದಲ್ಲಿ ಇದು ನಿಜ ಕೂಡಾ. ಆದರೆ ಜೀವನದಲ್ಲಿ ನಂಬಿಕೆ ಹೊರತು ನಂಬಿಕೆಯೇ ಜೀವನವಾಗಬಾರದು. ಈ ಗಿಡಮೂಲಕ ಉತ್ಪನ್ನಗಳನ್ನು ಪ್ರಿಕ್ಲಿನಿಕಲ್ ಅಡ್ಡಪರಿಣಾಮಗಳ ಪರೀಕ್ಷೆಗೆ ಒಡ್ಡಲೇಬೇಕೆನ್ನುವುದು ನಿಜ.

ಒಂದು ವಿಚಾರ. ಇಷ್ಟೆಲ್ಲಾ ಇದ್ದರೂ ಈ ಗಿಡಮೂಲಿಕೆ ಔಷಧಿಗಳ ದರ ಸಾಮಾನ್ಯ ಜನರ ಕೈಗೆಟಕುವ ಹಾಗೆ ಇವೆಯೇ? ಖಂಡಿತಾ ಇಲ್ಲ. ಬಹುತೇಕ ಕಂಪನಿಗಳು ತಯಾರಿಸುವ “ನೈಸರ್ಗಿಕ” ಉತ್ಪನ್ನಗಳ ಬೆಲೆ ಸಾಮಾನ್ಯರಿಗೆ ಗಗನ ಕುಸುಮ. ಅಲ್ಪ ಸ್ವಲ್ಪ ಸಂಶೋಧನೆಗಾಗಿ ಮತ್ತು ಧಾರಾಳವಾಗಿ ಜಾಹಿರಾತಿಗಾಗಿ ಹಣ ಖರ್ಚು ಮಾಡುವ ಪ್ರತೀಷ್ಠಿತ ಗಿಡಮೂಲಿಕಾ ಉತ್ಪನ್ನಗಳ ತಯಾರಿಕಾ ಕಂಪನಿಗಳ ಉತ್ಪನ್ನಗಳ ಬೆಲೆಯಂತೂ ಸಾಮಾನ್ಯರ ಪಾಲಿಗೆ ಮುಗಿಲ ಮಲ್ಲಿಗೆ. ಹಾಗಿದ್ದರೆ ಯಾವ ರೀತಿಯಲ್ಲಿ ಈ ಉತ್ಪನ್ನಗಳು ಒಳ್ಳೆಯವು? ಉಪಯೋಗಿಸುವವರೇ ಈ ಕುರಿತು ವಿಚಾರ ಮಾಡಬೇಕು.

ಒಂದು ದೇಶಕ್ಕೆ ಸೀಮಿತವಾಗಿರದೇ ಜಗತ್ತಿನ ಸುಮಾರು 56 ದೇಶಗಳಲ್ಲಿ ಜನರ ದೈನಂದಿನ ಬದುಕಿನಲ್ಲಿ ಉಪಯೋಗುತ್ತಿರುವ ವನಸ್ಪತಿ ಗಿಡಮೂಲಿಕೆಗಳ ಉತ್ಪನಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ಉತ್ಪನ್ನಗಳ ಬಗ್ಗೆ ವಿಶ್ವ ಮಟ್ಟದ ಮಾನದಂಡ, ಸಮಯೋಚಿತ ಉಪಯೋಗ, ಗುಣಮಟ್ಟ ಕಾಯ್ದುಕೊಳ್ಳುವಿಕೆ, ವನಸ್ಪತಿಗಳ ಉತ್ತಮ ತಳಿ ಬೀಜಗಳ ಲಭ್ಯತೆ, ಇವುಗಳ ಉತ್ತಮ ಕೃಷಿ ಪದ್ದತಿ, ಕಟಾವಣೆ ಪದ್ಧತಿ, ಶೇಖರಣಾ ಪದ್ಧತಿ, ಸಂಸ್ಕರಣೆ, ಕಚ್ಚಾ ವಸ್ತು ಮತ್ತು ವಾಣಿಜ್ಯ ಉತ್ಪನ್ನಗಳ ಕನಿಷ್ಠ ದರ ನಿಗದಿ ಮಾಡುವಿಕೆ, ವಾಣಿಜ್ಯ ಉತ್ಪಾದನೆ ಇವುಗಳ ಬಗ್ಗೆ ಗಮನ ಹರಿಸಿ ಜಾಗತಿಕ ಮಾನದಂಡ ರೂಪಿಸಬೇಕಾದ ಅವಶ್ಯಕತೆಯಿದೆ. “ವಿಶ್ವಗುರು” ಎಂದು ಕರೆಸಿಕೊಳ್ಳಲು ಉತ್ಸುಕವಾದ ಭಾರತವೇ ಈ ನಿಟ್ಟಿನಲ್ಲಿ ನಾಯಕತ್ವವಹಿಸಿ ಮೂಲಿಕೆ ಮದ್ದುಗಳನ್ನು ಮಾರಾಟಮಾಡಲು ಕಠಿಣ ನಿಯಮ ತಂದು ಅಗ್ನಿಪರೀಕ್ಷೆಗೆ ಒಡ್ಡಿ ಪುಟವಿಟ್ಟ ಬಂಗಾರದಂತೆ ಹೊರಬಂದು ಜನರ ಆರೋಗ್ಯದ ರಕ್ಷಣೆ ಮಾಡಲಿ ಎಂಬುದೇ ಈ ಲೇಖನದ ಉದ್ದೇಶ.

ಆಕರ ವೈಜ್ಞಾನಿಕ ಲೇಖನಗಳು

1. BENT, S. 2008. Herbal medicine in the United States: Review of efficacy, safety, and regulation: Grand rounds at University of California, San Francisco Medical Center. Journal of General Internal Medicine, 23(6):854-859.

2. JUNHUA ZHANG, IGHO J. ONAKPOYA, PAUL POSADZKI and MOHAMED EDDOUKS.2015. The Safety of Herbal Medicine: From Prejudice to Evidence. Evidence-Based Complementary and Alternative Medicine, 15 (2): 231-234.

3. LEE, M. K. , CHENG, B. W. H. , CHE, C. T. AND HSIEH, D. P. H. 2006. Cytotoxicity assessment of Ma-Huang (Ephedra) under different conditions of preparation. Toxicological Sciences, 56(2): 424-430

4. NIHARIKA SAHOO and PADMAVATI MANCHIKANTI, 2013. Herbal Drug Regulation and Commercialization. An Indian Industry Perspective. The Journal of Alternative and Complementary Medicine, 19(12):957-963

5. Ramawat, K.G. and Goyal, S.2008. The Indian Herbal Drugs Scenario in Global Perspectives. Bioactive Molecules and Medicinal Plants. 5(1):1-25

6. The Drugs and Cosmetics Act, 1940 and Drugs and Cosmetics (Amendments) Act, 2019. Ministry of Health and Family Welfare. Department of Health. Government of India. Updated till 30th April, 2019. pp 452-545.

7. World Health Organization. 1998. Regulatory Situation of Herbal Medicines A Worldwide Review. https://apps.who.int/medicinedocs/pdf/whozip57e/whozip57e.pdf

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending