ದಿನದ ಸುದ್ದಿ
ದುಡಿಯುವ ವರ್ಗದ ಧೀಮಂತ ನಾಯಕ ಕಾಂII ಹೆಚ್ಕೆಆರ್ – ಒಂದು ನೆನಪು
ಈ ನಾಡು ಕಂಡ ಅದ್ಭುತ ಕಾರ್ಮಿಕ ನಾಯಕ ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪ ಅವರು ದಿನಾಂಕ 08-05-2021 ರಂದು ನಿಧನರಾಗಿದ್ದರು. ಇಂದು ಅವರ ಪ್ರಥಮ ಪುಣ್ಯ ಸ್ಮರಣೆ.
ದಾವಣಗೆರೆ ಎಂದರೆ ಕಾರ್ಮಿಕರ ಹೋರಾಟಕ್ಕೆ ಹೆಸರುವಾಸಿಯಾದ ನೆಲ. ಈ ಮಣ್ಣಿನ ಗುಣವೇ ಸಂಘಟನೆ, ಹೋರಾಟ, ಚಳುವಳಿಗಳಿಗೆ ಪ್ರೇರಣೆ ನೀಡುತ್ತದೆ ಅಂತನಿಸುತ್ತದೆ. ಏಕೆಂದರೆ ಕರ್ನಾಟಕದಲ್ಲಿ ಕಾರ್ಮಿಕರ ಹೋರಾಟ ಎಂದೊಡನೆ ತಟ್ಟಂತೆ ನೆನಪಾಗುವುದೇ ದಾವಣಗೆರೆ.
ಕಾರ್ಮಿಕ ಸಂಘಟನೆ ಮಾತ್ರವಲ್ಲದೇ ಭಾರತೀಯ ಕಮ್ಯುನಿಸ್ಟ್ ಪಕ್ಷವನ್ನು ಉಚ್ಛ್ರಾಯ ಸ್ಥಿತಿಗೆ ತಂದಂತಹ ಊರು ಕೂಡಾ ದಾವಣಗೆರೆ. ಇಂತಹ ಕ್ರಾಂತಿಕಾರಿ ಗುಣಗಳನ್ನು ಹೊಂದಿದ್ದಂತಹ ದಾವಣಗೆರೆಯಲ್ಲಿ ದಿವಂಗತ ಕಾಮ್ರೇಡ್ ಪಂಪಾಪತಿಯವರ ಗರಡಿಯಲ್ಲಿ ಬೆಳೆದು ದುಡಿಯುವ ವರ್ಗದ ಧೀಮಂತ ನಾಯಕನಾಗಿ ಬೆಳೆದು ಕಾರ್ಮಿಕರ ಕಷ್ಟ ಸುಖಗಳನ್ನೇ ತನ್ನ ಉಸಿರಾಗಿಸಿಕೊಂಡು ಬೆಳೆದ ಕಾರ್ಮಿಕ ನಾಯಕನೇ ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪ.
ಭಾರತೀಯ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕನಾಗಿ, ಅಸಂಘಟಿತ ವರ್ಗದ ದುಡಿಯುವ ಜನರ ಹೋರಾಟಗಳಿಗೆ ದೊಡ್ಡ ಶಕ್ತಿಯಾಗಿ ಹಾಗೂ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಮಾರ್ಗದರ್ಶಕರಾಗಿದ್ದ ಕಾಂII ಹೆಚ್.ಕೆ.ರಾಮಚಂದ್ರಪ್ಪ ಅವರು ನಿಧನರಾಗಿ ಒಂದು ವರ್ಷವಾಯಿತು. ಅವರ ನಿಧನ ಕಾರ್ಮಿಕ ವಲಯಕ್ಕೆ ಅದರಲ್ಲೂ ಬಹುಮುಖ್ಯವಾಗಿ ಅಸಂಘಟಿತ ಕಾರ್ಮಿಕ ವಲಯಕ್ಕೆ ಬಹುದೊಡ್ಡ ಆಘಾತವನ್ನು ತಂದೊಡ್ಡಿದೆ.
ಹೆಚ್.ಕೆ.ರಾಮಚಂದ್ರಪ್ಪ ಅವರು ವಿಶೇಷವಾಗಿ ಅಂಗನವಾಡಿ ನೌಕರರು, ಬಿಸಿಯೂಟ ನೌಕರರು, ಆಶಾ ಕಾರ್ಯಕರ್ತರ ಸಂಘಟನೆ ಹಾಗೂ ಇನ್ನೂ ಹಲವಾರು ಕಾರ್ಮಿಕ ಸಂಘಟನೆಗಳಿಗೆ ಧ್ವನಿಯಾಗಿ ತಮ್ಮ ಜೀವನವನ್ನೇ ಕಾರ್ಮಿಕರ ಪರವಾದ ಹೋರಾಟಗಳಿಗೆ ಸಮರ್ಪಿಸಿಕೊಂಡಿದ್ದರು.
ತಮ್ಮ ಮುಂದಿನ ಹೋರಾಟಗಳಿಗೆ ಮುಂದೆ ನಾಯಕ ಯಾರು ಎನ್ನುವ ಪ್ರಶ್ನೆ ದುಡಿಯುವ ವರ್ಗದ ಮುಂದಿದೆ ಎಂದರೂ ತಪ್ಪಾಗಲಾರದು.
ಬಹುಷಃ ಅವರ ಆರು ದಶಕಗಳ ದಣಿವರಿಯದ ಹೋರಾಟದ ಜೀವನದಲ್ಲಿ ಸದಾ ಕಾಲ ಒಡನಾಡಿಯಾಗಿದ್ದ ಕಾಂII ಆನಂದ್ ರಾಜ್ ಅವರ ಮಾರ್ಗದರ್ಶನದಲ್ಲಿ ಕಾಂII ಅವರಗೆರೆ ಉಮೇಶ್ ಹೆಚ್.ಜಿ. ಹಾಗೂ ಕಾಂII ಅವರಗೆರೆ ಚಂದ್ರು ಹಾಗೂ ಮತ್ತಿತರರು ಹೆಚ್ಕೆಆರ್ ಅವರು ನಡೆಸಿಕೊಂಡು ಬಂದ ಹೋರಾಟದ ಕ್ರಾಂತಿಕಾರಿ ರಥವನ್ನು ಮುಂದಕ್ಕೆ ಕೊಂಡೊಯ್ಯುವ ಕೆಲಸವನ್ನು ಮಾಡುವ ಮೂಲಕ ಕಾರ್ಮಿಕ ವರ್ಗಕ್ಕೆ ನ್ಯಾಯ ಒದಗಿಸಬೇಕಾಗಿದೆ.
ಸೈದ್ಧಾಂತಿಕವಾಗಿ ಅತ್ಯಂತ ಪ್ರಭಾವಶಾಲಿಯಾಗಿದ್ದ ಹೆಚ್ಕೆಆರ್ ಅವರು ವಿಶಾಲ ದೃಷ್ಟಿ ಕೋನವನ್ನು ಹೊಂದಿದ್ದ ನಾಯಕರಾಗಿದ್ದರು. ದುಡಿಯುವ ವರ್ಗದ ಅದರಲ್ಲೂ ಪ್ರಮುಖವಾಗಿ ಅಂಗನವಾಡಿ, ಬಿಸಿಯೂಟ, ಆಶಾ, ಕಟ್ಟಡ ಕಾರ್ಮಿಕರು, ಕೈಗಾರಿಕಾ ವಲಯದ ಕಾರ್ಮಿಕರು, ಆಟೋ ಚಾಲಕರು, ಸಾ ಮಿಲ್ ಕಾರ್ಮಿಕರು, ಪುಟ್ಪಾತ್ ವ್ಯಾಪಾರಸ್ಥರು, ಹೋಟೆಲ್ ಕಾರ್ಮಿಕರು, ಮನೆಗೆಲಸದವರು ಹೀಗೆ ಹತ್ತು ಹಲವು ಕಾರ್ಮಿಕ ಸಂಘಟನೆಗಳಿಗೆ ಇವರೇ ಉಸಿರಾಗಿದ್ದರು, ಶಕ್ತಿಯಾಗಿದ್ದರು.
ಸಂಘಟಿತ ವಲಯದ ಬ್ಯಾಂಕ್ ನೌಕರರು, ವಿಮಾ ನೌಕರರು, ರೈಲ್ವೇ ನೌಕರರು, ದೂರಸಂಪರ್ಕ ನಿಗಮದ ನೌಕರರು, ಅಂಚೆ ನೌಕರರು ಮುಂತಾದವರ ಸಂಘಟನೆಗಳಿಗೆ ಮಾರ್ಗದರ್ಶಕರಾಗಿದ್ದರು ಮತ್ತು ಅವರ ಯಾವತ್ತೂ ಹೋರಾಟಗಳಿಗೆ ಸದಾ ಪ್ರೋತ್ಸಾಹ ನೀಡಿ ನೆರವಾಗುತ್ತಿದ್ದರು. ಅಲ್ಲಿನ ಯುವ ನಾಯಕರುಗಳನ್ನು ಸೈದ್ಧಾಂತಿಕವಾಗಿ ಬೆಳೆಸಲು ಮತ್ತು ಎಡಪಂಥೀಯ ವಿಚಾರಧಾರೆಯನ್ನು ಮೈಗೂಡಿಸಿಕೊಂಡು ಪ್ರಬಲ ಹೋರಾಟಗಾರರನ್ನಾಗಿ ರೂಪಿಸಲು ವಿಶೇಷ ಮುತುವರ್ಜಿವಹಿಸುತ್ತಿದ್ದರು.
1943 ರ ಪೆಬ್ರವರಿ 2 ರಂದು ಹರಪನಹಳ್ಳಿ ತಾಲೂಕಿನ ಉಚ್ಛಂಗಿದುರ್ಗದಲ್ಲಿ ಕೆಂಪಣ್ಣ ಮತ್ತು ಕೆಂಪಮ್ಮ ದಂಪತಿಗಳ ಮಗನಾಗಿ ಜನಿಸಿದ ಹೆಚ್ಕೆಆರ್ ಅವರು ವಿದ್ಯಾರ್ಥಿದೆಸೆಯಲ್ಲಿಯೇ ಉತ್ತಮ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡಿದ್ದರು. 1960 ರಲ್ಲಿ ದಾವಣಗೆರೆಯ ಚಂದ್ರೋದಯ ಮಿಲ್ನಲ್ಲಿ ಕೆಲಸಕ್ಕೆ ಸೇರಿದರು. ಆ ಸಂದರ್ಭದಲ್ಲಿ ಅಲ್ಲಿ ಕಾರ್ಮಿಕರ ಮೇಲೆ ನಡೆಯುತ್ತಿದ್ದ ಶೋಷಣೆ, ದಬ್ಬಾಳಿಕೆ, ದೌರ್ಜನ್ಯವನ್ನು ಪ್ರತಿಭಟಿಸಿದರು.
ಇವರ ಹೋರಾಟದ ಮನೋಭಾವನೆಯನ್ನು ಸೂಕ್ಷ್ಮವಾಗಿ ಗಮನಿಸಿದ ಕಾಂII ಪಂಪಾಪತಿ, ಕಾಂII ಸುರೇಶ್, ಕಾಂIIಶೇಖರಪ್ಪ ಇವರನ್ನು ಕಮ್ಯುನಿಸ್ಟ್ ತೆಕ್ಕೆಗೆ ಸೇರಿಸಿಕೊಂಡರು. ಅಲ್ಲಿಂದ ಅವರ ಹೋರಾಟದ ಜೀವನ ಆರಂಭವಾಯಿತು. ಎಲ್ಲಿ ಕಾರ್ಮಿಕರ ಮೇಲೆ ದಬ್ಬಾಳಿಕೆ ನಡೆಯುತ್ತಿತ್ತೋ ಅಲ್ಲಿ ಹೆಚ್ಕೆಆರ್ ಹಾಜರಿರುತ್ತಿದ್ದರು. ವೈಯಕ್ತಿಕ ಬದುಕಿನ ಹಿತಾಸಕ್ತಿಗಳನ್ನು ಕಡೆಗಣಿಸಿ ಕಾರ್ಮಿಕರ ಹಕ್ಕುಗಳಿಗಾಗಿ, ಕಾರ್ಮಿಕರ ನ್ಯಾಯಬದ್ಧವಾದ ಬೇಡಿಕೆಗಳ ಈಡೇರಿಕೆಗಾಗಿ ಕಟಿಬದ್ಧರಾಗಿ ನಿಂತರು. ಚಳುವಳಿ, ಹೋರಾಟ ಇವರ ಜೀವನದ ಅವಿಭಾಜ್ಯ ಅಂಗವಾಯಿತು.
ಎ.ಐ.ಟಿ.ಯು.ಸಿ. ಸಂಘಟನೆಯ ಕೆಂಪು ಬಾವುಟದ ಆಶ್ರಯದಲ್ಲಿ ಅಸಂಘಟಿತ ಕಾರ್ಮಿಕರ, ದುಡಿಯುವ ಮಹಿಳೆಯರ, ರೈತ ಕಾರ್ಮಿಕರ, ವಿದ್ಯಾರ್ಥಿಗಳ, ದುರ್ಬಲವರ್ಗದವರ, ಕೊಳಚೆ ಪ್ರದೇಶಗಳ ನಿವಾಸಿಗಳ ಪರವಾದ ಹೋರಾಟಕ್ಕೆ ಧುಮುಕಿದರು. ಕಾರ್ಲ್ ಮಾರ್ಕ್ಸ್, ಲೆನಿನ್ ಅವರುಗಳ ತತ್ವ ಸಿದ್ಧಾಂತ ಮೂಲಕ ತಮ್ಮ ಮನಸ್ಸನ್ನು ಹದಗೊಳಿಸಿಕೊಂಡರು. ಶೋಷಣೆರಹಿತ ಸಮ ಸಮಾಜದ ನಿರ್ಮಾಣದ ಕನಸು ಕಂಡರು. ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಅಸಂಘಟಿತ ಕಾರ್ಮಿಕರನ್ನು ಸಂಘಟಿಸಿದರು.
ಈ ಹೋರಾಟದ ಹಾದಿಯಲ್ಲಿ ಅನೇಕ ನೋವು, ಸಂಕಷ್ಟ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಬಂಡವಾಳಷಾಹಿ ವ್ಯವಸ್ಥೆಯ ಕೆಂಗಣ್ಣಿಗೆ ಗುರಿಯಾಗಿ ಜೈಲುವಾಸವನ್ನೂ ಅನುಭವಿಸಬೇಕಾಯಿತು. ಅವರ ಕುಟುಂಬವರ್ಗ ಇನ್ನಿಲ್ಲದ ಕಷ್ಟಕ್ಕೆ ತುತ್ತಾಗಬೇಕಾಯಿತು. ಆದರೂ ಅವರು ಎದೆಗುಂದದೇ ಹೋರಾಟದ ಹಾದಿಯಲ್ಲಿ ಮುಂದುವರೆದರು. ಪಂಪಾಪತಿಯವರು 1978, 1983, 1985 ರಲ್ಲಿ ದಾವಣಗೆರೆ ಶಾಸಕರಾಗಿ ಆಯ್ಕೆಯಾಗುವಲ್ಲಿ ಹೆಚ್ಕೆಆರ್ ಶ್ರಮ ಬಹಳಷ್ಟಿತ್ತು.
ಪಂಪಾಪತಿಯವರ ಜೊತೆ ಜೊತೆಗೆ ರಾಜಕೀಯವಾಗಿ ಇವರೂ ಬೆಳೆದರು. 1974 ರಿಂದ ಸತತವಾಗಿ 21 ವರ್ಷಗಳ ಕಾಲ ದಾವಣಗೆರೆ ನಗರಸಭಾ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಅನೇಕ ಜನಪರವಾದ ಆಡಳಿತವನ್ನು ನೀಡಿದರು. ಕಮ್ಯುನಿಸ್ಟ್ ಆಡಳಿತದ ವೈಭವವನ್ನು ದಾವಣಗೆರೆಯ ಹಳೆತಲೆಮಾರಿನ ಜನರು ಈಗಲೂ ಹೆಮ್ಮೆಯಿಂದ ನೆನೆಯುತ್ತಾರೆ. ಮೇ 1 ವಿಶ್ವ ಕಾರ್ಮಿಕ ದಿನಾಚರಣೆ ಬಂತೆಂದರೆ ದಾವಣಗೆರೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗುತ್ತಿತ್ತು. ಹತ್ತಾರು ಸಾವಿರ ಕಾರ್ಮಿಕರ ಮೆರವಣಿಗೆ, ಮುಗಿಲು ಮುಟ್ಟುವಂತಹ ಕಾರ್ಮಿಕರ ಘೋಷಣೆಗಳು ಕಾರ್ಮಿಕರ ದಿನಾಚರಣೆಗೆ ಕೆಳೆಕಟ್ಟುವಂತಿತ್ತು.
ಅದೇ ಮೇ ತಿಂಗಳಿನಲ್ಲಿಯೇ ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪ ಅವರು ಅಸ್ತಂಗತರಾಗಿದ್ದು ಕಾಕತಾಳೀಯವೇ ಸರಿ. ಕಮ್ಯುನಿಸ್ಟ್ ಸಿದ್ಧಾಂತ ಮತ್ತು ಕಾರ್ಮಿಕರ ಪರವಾದ ಹೋರಾಟದ ಮನೋಭಾವವನ್ನು ಅವರು ತಮ್ಮ ಉಸಿರಿರುವವರೆಗೂ ಬಿಡಲಿಲ್ಲ. ಇವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಅನೇಕ ರಾಜಕೀಯ ಪಕ್ಷಗಳು ಇವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸಿದ್ದರು. ಇವರ ಕಣ್ಣೆದುರೇ ಅನೇಕ ಕಮ್ಯುನಿಸ್ಟ್ ನಾಯಕರುಗಳು ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಬೇರೆ ಬೇರೆ ರಾಜಕೀಯ ಪಕ್ಷಗಳಿಗೆ ಸೇರಿದರು.
ಒಂದು ವೇಳೆ ಇವರು ಕೂಡಾ ಬೇರೆ ಯಾವುದಾದರೂ ಪ್ರಬಲ ರಾಜಕೀಯ ಪಕ್ಷಕ್ಕೆ ಸೇರಿದ್ದೇ ಹೌದಾಗಿದ್ದರೆ ಖಂಡಿತವಾಗಿಯೂ ಸಂಸದರಾಗಿಯೋ ಶಾಸಕರಾಗಿಯೋ ಆಯ್ಕೆಗೊಳ್ಳುವುದು ಶತಸಿದ್ಧವಾಗಿತ್ತು ಎಂದು ಅವರ ಸಮಕಾಲೀನ ಮಿತ್ರರೇ ಹೇಳುತ್ತಾರೆ. ಆದರೆ ಹೆಚ್ಕೆಆರ್ ಅವರು ಕಲ್ಲುಬಂಡೆಯಂತೆ ಕಮ್ಯುನಿಸ್ಟ್ ಪಕ್ಷದ ಜೊತೆ ನಿಂತರು. ತತ್ವ, ಸಿದ್ಧಾಂತಗಳಿಗೆ ಕಟಿಬದ್ಧರಾಗಿದ್ದ ಹೆಚ್ಕೆಆರ್ ಅವರು ತಮ್ಮ ಕಮ್ಯುನಿಸ್ಟ್ ನಿಲುವನ್ನು ಯಾವುದೇ ಕಾರಣಕ್ಕೂ ಬದಲಾಯಿಸಲಿಲ್ಲ ಎನ್ನುವುದು ಸೂರ್ಯನಷ್ಟೇ ಸತ್ಯ.
ಇವರ ಹೋರಾಟದ ಜೀವನವನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಇವರನ್ನು ಗೌರವಿಸಿ, ಅಭಿನಂದಿಸಿ, ಸನ್ಮಾನಿಸಿ ಪ್ರಶಸ್ತಿಗಳನ್ನು ನೀಡಿವೆ. ಅದರಲ್ಲಿ ಮುಖ್ಯವಾಗಿ ಚಿತ್ರದುರ್ಗದ ಶ್ರೀ ಮುರುಘಾ ಮಠವು ಪ್ರತೀ ವರ್ಷ ಕೊಡಮಾಡುವ ಪ್ರತಿಷ್ಠಿತ “ಶೂನ್ಯ ಪೀಠ ಚನ್ನಬಸವ ಪ್ರಶಸ್ತಿಯನ್ನು 2015 ರಲ್ಲಿ ಕೊಡಲಾಗಿತ್ತು. ಪ್ರಶಸ್ತಿಯು ರೂ.25000/- ನಗದು ಹಣವನ್ನೂ ಹೊಂದಿತ್ತು. ಹೆಚ್ಕೆಆರ್ ಅವರು ಆ ಪ್ರಶಸ್ತಿಯ ನಗದು ಹಣವನ್ನು ಪ್ರಶಸ್ತಿ ಪ್ರದಾನ ವೇದಿಕೆಯಲ್ಲಿಯೇ ಶ್ರೀ ಮಠದ ಸಮಾಜಮುಖಿ ಕಾರ್ಯಗಳಿಗೆ ದೇಣಿಗೆಯಾಗಿ ನೀಡಿದ್ದು ಅವರ ಔದಾರ್ಯತೆಯನ್ನು ತೋರಿಸುತ್ತದೆ ಮತ್ತು ಸೇರಿದ್ದ ಸಾವಿರಾರು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು.
ಇನ್ನು ಕಾಮ್ರೇಡ್ ಹೆಚ್.ಕೆ.ರಾಮಚಂದ್ರಪ್ಪನವರನ್ನು ರಾಜ್ಯಾದ್ಯಂತ ಎಲ್ಲರೂ ಪಕ್ಷಾತೀತವಾಗಿ ಗೌರವಿಸುತ್ತಿದ್ದರು. ಯಾವುದೇ ಸರಕಾರಿ ಕಛೇರಿಗಳಿಗೆ ಇವರು ಭೇಟಿ ನೀಡಿದಾಗ ಅಧಿಕಾರಿಗಳು ಎದ್ದು ನಿಂತು ಇವರಿಗೆ ಗೌರವ ಕೊಡುತ್ತಿದ್ದರು. 2015ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ದಾವಣಗೆರೆಗೆ ಬರುವ ಕಾರ್ಯಕ್ರಮವಿತ್ತು. ಐಟಿಐ ಕಾಲೇಜಿನಲ್ಲಿ ಹೆಲಿಕಾಪ್ಟರ್ ಬಂದಿಳಿಯಿತು.
ಸಹಜವಾಗಿಯೇ ಸಾವಿರಾರು ಅಭಿಮಾನಿಗಳು, ರಾಜಕೀಯ ಧುರೀಣರು ನೆರೆದಿದ್ದರು. ಹೆಚ್ಕೆಆರ್ ನೇತೃತ್ವದಲ್ಲಿ ಒಂದಿಷ್ಟು ಕಾರ್ಮಿಕರು ಕೂಡಾ ತಮ್ಮ ಮನವಿಯನ್ನು ಸಲ್ಲಿಸಲು ಕಾಯುತ್ತಿದ್ದರು. ಸಿದ್ದರಾಮಯ್ಯನವರು ಹೆಲಿಕಾಪ್ಟರ್ ಇಳಿದು ಎಲ್ಲರ ಕಡೆಗೆ ಒಮ್ಮೆ ದೃಷ್ಟಿಹಾಯಿಸಿದರು. ಸೀದಾ ಅವರು ಬಂದಿದ್ದು ಹೆಚ್ಕೆಆರ್ ಬಳಿಗೆ. ಎನ್ರೀ ರಾಮಚಂದ್ರಪ್ಪ ಅವರೇ ಚೆನ್ನಾಗಿದ್ದೀರಾ ಎಂದು ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಮಾತನಾಡಿಸಿ ಮನವಿಪತ್ರವನ್ನು ತೆಗೆದುಕೊಂಡರು. ಹೆಚ್ಕೆಆರ್ ಅವರು ಅಂಗನವಾಡಿ ಕಾರ್ಯಕರ್ತದ ಗೌರವಧನವನ್ನು ಹೆಚ್ಚಿಸುವಂತೆ ಮನವಿ ಮಾಡಿದರು.
ಅದರಂತೆಯೇ ಸಿದ್ದರಾಮಯ್ಯನವರು ಮುಂದಿನ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತರ ಗೌರವಧನವನ್ನು ಹೆಚ್ಚಿಸಿದ್ದರು. ಹೀಗೆ ಅಜಾತಶತ್ರುವಿನಂತೆ ಎಲ್ಲರ ಗೌರವಕ್ಕೆ ಪಾತ್ರರಾದ ಧೀಮಂತ ವ್ಯಕ್ತಿತ್ವ ಅವರದಾಗಿತ್ತು. ಅವರು ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನ ಪಡೆಯಲು ಅವರ ಬಂಧು ಬಾಂಧವರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಬಂಧುಗಳು ಕೊರೋನಾ ಭಯವನ್ನು ಲೆಕ್ಕಿಸದೇ ಧಾವಿಸಿದ್ದು ಅವರ ಜನಪ್ರಿಯತೆಯನ್ನು ಸಾರಿ ಸಾರಿ ಹೇಳುತಿತ್ತು. ಅಂಗನವಾಡಿ ಹಾಗೂ ಬಿಸಿಯೂಟ ಸಂಘಟನೆಗಳ ಮಹಿಳಾ ಕಾರ್ಮಿಕರಂತೂ ತಮ್ಮ ಸ್ವಂತ ಸಹೋದರನನ್ನೋ ತಂದೆಯನ್ನೋ ಕಳೆದುಕೊಂಡಂತೆ ಬಿಕ್ಕಿ ಬಿಕ್ಕಿ ಅಳುತಿದ್ದುದು ಮನಕಲುಕುವಂತಿತ್ತು.
ಹೆಚ್ಕೆಆರ್ ಅವರ ಉಸಿರು ನಿಂತಿರಬಹುದು. ಆದರೆ ಅವರ ಹೆಸರು ಲಕ್ಷಾಂತರ ಕಾರ್ಮಿಕರ ಮನದಲ್ಲಿ ಹಚ್ಚಹಸಿರಾಗಿ ಮುಂದಿನ ಹೋರಾಟಗಳಿಗೆ ಸ್ಪೂರ್ತಿಯಾಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ.
ಕಾಮ್ರೇಡ್ ಹೆಚ್.ಕೆ.ಆರ್. ಗೆ ಗೌರವ ಡಾಕ್ಟರೇಟ್ ನೀಡಲಿ
- ಕಾಂ.ಹೆಚ್.ಕೆ.ಆರ್. ಶ್ರಮಿಕ ವರ್ಗದ ಬಹುದೊಡ್ಡ ಹೋರಾಟಗಾರನಾಗಿ, ಅದರಲ್ಲೂ ವಿಶೇಷವಾಗಿ ಅಸಂಘಟಿತ ವಲಯದ ಕಾರ್ಮಿಕರಾದ ಅಂಗನವಾಡಿ, ಬಿಸಿಯೂಟ, ಆಶಾ ಹಾಗೂ ಕಟ್ಟಡ ಕಾರ್ಮಿಕರ ಪರವಾಗಿ ಹಾಗೂ ಸಮಾಜದಲ್ಲಿನ ಶೋಷಿತರು, ದಮನಿತರು, ದೀನ-ದಲಿತರು, ವಿದ್ಯಾರ್ಥಿಗಳ ಸಮುದಾಯ, ಮಹಿಳೆಯರ ಪರವಾಗಿ ಸುದೀರ್ಘವಾದ ಆರು ದಶಕಗಳ ಕಾಲ ಹೋರಾಟ ಮಾಡಿ ಆ ವರ್ಗಕ್ಕೆ ಅನೇಕ ಸೌಲಭ್ಯಗಳನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಅವರ ಹೋರಾಟ ಅನನ್ಯವಾದುದು. ಕಾರ್ಮಿಕ ವರ್ಗದ ಪರವಾದ ಅವರ ಹೋರಾಟವನ್ನು ಪರಿಗಣಿಸಿ ದಾವಣಗೆರೆ ವಿಶ್ವವಿದ್ಯಾಲಯ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಬೇಕು.
| ಕೆ.ರಾಘವೇಂದ್ರ ನಾಯರಿ, ಎಐಟಿಯುಸಿ ಜಿಲ್ಲಾಧ್ಯಕ್ಷ
ಕಾಂII ಹೆಚ್ಕೆಆರ್ ಚಿರಾಯುವಾಗಲಿ...
ಕಾಂII ಹೆಚ್ಕೆಆರ್ ಅಮರ ರಹೇ…
(ಲೇಖಕರು: ಕೆ.ರಾಘವೇಂದ್ರ ನಾಯರಿ,
ಕಾರ್ಮಿಕ ಮುಖಂಡ ಹಾಗೂ
AITUC ದಾವಣಗೆರೆ ಜಿಲ್ಲಾಧ್ಯಕ್ಷರು
ಮೊ: 9844314543
mail id : krnairycbeu@gmail.com)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು