Connect with us

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending