Connect with us

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

Published

on

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.

ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.

ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.

ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending