Connect with us

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್‌ ಖರೀದಿಗೂ ಎದುರಾಗುತ್ತಿದೆ ಒತ್ತಡ

Published

on

ಶಕ್ತಿ ಯೋಜನೆಗೆ ಸರ್ಕಾರದ ಬೆಂಬಲ, ಸಾರಿಗೆ ನಿಗಮಗಳಿಗೆ ಬಾಕಿ ಹೊರೆ; ₹5,651 ಕೋಟಿ ಟಿಕೆಟ್‌ ಹಣ ಯಾವಾಗ?

ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ ಟಿಕೆಟ್‌ಗಳ ಮೊತ್ತದಲ್ಲಿ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ₹5,651.24 ಕೋಟಿ ಬಾಕಿ ಉಳಿಸಿಕೊಂಡಿರುವುದು ನಿಗಮಗಳ ಆರ್ಥಿಕ ನಿರ್ವಹಣೆಗೆ ಸವಾಲಾಗಿ ಪರಿಣಮಿಸಿದೆ. ಬಾಕಿ ಮೊತ್ತದ ಮರುಪಾವತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ವೇತನ, ಡೀಸೆಲ್‌, ಬಿಡಿಭಾಗಗಳ ಖರೀದಿ ಸೇರಿದಂತೆ ದೈನಂದಿನ ವೆಚ್ಚಗಳನ್ನು ನಿರ್ವಹಿಸುವ ಒತ್ತಡ ಹೆಚ್ಚಾಗಿದೆ.

ಶಕ್ತಿ ಯೋಜನೆಗೆ ಮೂರು ವರ್ಷಗಳ ಪಯಣ

ಕಾಂಗ್ರೆಸ್‌ ಸರ್ಕಾರ 2023ರ ಜೂನ್‌ 11ರಂದು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತ್ತು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿತ್ತು. ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಸಾರಿಗೆ ನಿಗಮಗಳ ಮೇಲೆ ಸೇವಾ ಹೊರೆ ಕೂಡ ವಿಸ್ತರಿಸಿದೆ.

2023-24ರಿಂದ 2026ರ ಜುಲೈ ಅಂತ್ಯದವರೆಗೆ ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರು 797.16 ಕೋಟಿ ಪ್ರಯಾಣ ಕೈಗೊಂಡಿದ್ದಾರೆ. ಈ ಪ್ರಯಾಣಗಳಿಗೆ ನೀಡಲಾದ ಉಚಿತ ಟಿಕೆಟ್‌ಗಳ ಒಟ್ಟು ಮೌಲ್ಯ ₹20,955.99 ಕೋಟಿ ಎಂದು ಅಂಕಿ-ಅಂಶಗಳು ತಿಳಿಸುತ್ತವೆ.

₹15,304 ಕೋಟಿ ಪಾವತಿ, ಇನ್ನೂ ₹5,651 ಕೋಟಿ ಬಾಕಿ

ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್‌ ಮೊತ್ತವನ್ನು ಸರ್ಕಾರ ಸಾರಿಗೆ ನಿಗಮಗಳಿಗೆ ಮರುಪಾವತಿ ಮಾಡಬೇಕಿದೆ. ಇದುವರೆಗೆ ₹15,304.76 ಕೋಟಿ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ₹5,651.24 ಕೋಟಿ ಪಾವತಿಯಾಗಬೇಕಿದೆ.

ಈ ಬಾಕಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಪಾಲುದಾರರಾಗಿವೆ.

ನಿಗಮಗಳಿಗೆ ಆರ್ಥಿಕ ಒತ್ತಡ ಏಕೆ?

ಈಗಾಗಲೇ ಹಲವು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದ ಒತ್ತಡದಲ್ಲಿವೆ. ಶಕ್ತಿ ಯೋಜನೆಯ ಟಿಕೆಟ್‌ ಮೊತ್ತ ಸಕಾಲದಲ್ಲಿ ಪಾವತಿಯಾಗದಿರುವುದು ನಗದು ಹರಿವಿನ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿಯ ವೇತನ, ಡೀಸೆಲ್‌ ಖರೀದಿ, ಬಸ್‌ಗಳ ನಿರ್ವಹಣೆ, ಬಿಡಿಭಾಗಗಳ ಪೂರೈಕೆ ಹಾಗೂ ನಿವೃತ್ತ ನೌಕರರ ಬಾಕಿ ಪಾವತಿ ಸೇರಿದಂತೆ ಹಲವು ಜವಾಬ್ದಾರಿಗಳನ್ನು ನಿಗಮಗಳು ನಿರ್ವಹಿಸಬೇಕಿದೆ.

₹18,459 ಕೋಟಿ ನೆರವು ನೀಡಿದರೂ ನಷ್ಟದ ಹೊರೆ

ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಕಾರಣಗಳಿಗಾಗಿ ಸಾರಿಗೆ ನಿಗಮಗಳಿಗೆ ₹18,459.37 ಕೋಟಿ ನೆರವು ನೀಡಿದೆ. ಶಕ್ತಿ ಯೋಜನೆ, ವಿದ್ಯಾರ್ಥಿ ಪಾಸ್‌ಗಳ ಸಹಾಯಧನ, ಸಾಲ ಮತ್ತು ಬಡ್ಡಿ ಮರುಪಾವತಿ, ಬಸ್‌ ಖರೀದಿ, ವೇತನ, ಡೀಸೆಲ್‌, ಪಿಎಫ್‌ ಹಾಗೂ ರಜೆ ನಗದೀಕರಣ ಸೇರಿದಂತೆ ಹಲವು ವೆಚ್ಚಗಳಿಗೆ ಈ ನೆರವು ಬಳಕೆಯಾಗಿದೆ.

ಆದರೂ ನಿಗಮಗಳ ಆರ್ಥಿಕ ಸಂಕಷ್ಟ ಸಂಪೂರ್ಣವಾಗಿ ದೂರವಾಗಿಲ್ಲ. ಡೀಸೆಲ್‌ ಬಸ್‌ಗಳ ಜತೆಗೆ ಎಲೆಕ್ಟ್ರಿಕ್‌ ಬಸ್‌ಗಳ ಕಾರ್ಯಾಚರಣೆಯಿಂದಲೂ ನಿರೀಕ್ಷಿತ ಮಟ್ಟದ ಆದಾಯ ಬರುತ್ತಿಲ್ಲ ಎಂಬುದು ಮತ್ತೊಂದು ಸವಾಲಾಗಿದೆ.

ಸಕಾಲಿಕ ಪಾವತಿಯೇ ಪರಿಹಾರವೇ?

ಶಕ್ತಿ ಯೋಜನೆಯ ಸಾಮಾಜಿಕ ಮಹತ್ವವನ್ನು ಪ್ರಶ್ನಿಸುವುದಕ್ಕಿಂತ, ಅದರ ಆರ್ಥಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಮುಖ್ಯವಾಗಿದೆ. ಸರ್ಕಾರದಿಂದ ಬಾಕಿ ಮೊತ್ತ ಸಕಾಲದಲ್ಲಿ ಬಿಡುಗಡೆಯಾದರೆ ನಿಗಮಗಳ ನಗದು ಹರಿವು ಸುಧಾರಿಸಿ, ವೇತನ, ಇಂಧನ ಮತ್ತು ನಿರ್ವಹಣಾ ವೆಚ್ಚಗಳನ್ನು ನಿರ್ವಹಿಸಲು ಹೆಚ್ಚಿನ ಬಲ ದೊರೆಯಬಹುದು.

Continue Reading

ದಿನದ ಸುದ್ದಿ

ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!

Published

on

ನೀರು ತುಂಬಿದರೆ ಹಬ್ಬ, ಬರಿದಾದರೆ ಆತಂಕ; ಕೃಷಿ, ಕುಡಿಯುವ ನೀರು, ವಿದ್ಯುತ್‌ ಹಾಗೂ ಪರಿಸರಕ್ಕೆ ಭದ್ರೆಯೇ ಆಧಾರ

ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ ಪಯಣವು ರೈತರ ಕೃಷಿ, ಜನರ ಕುಡಿಯುವ ನೀರು, ಸ್ಥಳೀಯ ಆರ್ಥಿಕತೆ, ವಿದ್ಯುತ್‌ ಉತ್ಪಾದನೆ ಹಾಗೂ ಪರಿಸರದೊಂದಿಗೆ ನೇರ ಸಂಬಂಧ ಹೊಂದಿದೆ. ಜಲಾಶಯ ತುಂಬಿದರೆ ಹಲವು ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿದರೆ, ನೀರಿನ ಕೊರತೆ ಎದುರಾದಾಗ ಇದೇ ಪ್ರದೇಶಗಳಲ್ಲಿ ಆತಂಕ ಹೆಚ್ಚುತ್ತದೆ.

http://Visit : www.suddidina.com

ಪಶ್ಚಿಮಘಟ್ಟದಿಂದ ಬಯಲುಸೀಮೆಯವರೆಗೆ ಭದ್ರೆಯ ಪಯಣ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ–ವರಾಹ ಪರ್ವತ ಶ್ರೇಣಿಗಳ ಗಂಗಾಮೂಲದಲ್ಲಿ ಹುಟ್ಟುವ ಭದ್ರಾ ನದಿ ಕಳಸ, ಕೊಪ್ಪ, ನರಸಿಂಹರಾಜಪುರ, ತರೀಕೆರೆ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಹರಿದು ಕೂಡಲಿ ಬಳಿ ತುಂಗಾ ನದಿಯನ್ನು ಸೇರುತ್ತದೆ. ಬಳಿಕ ತುಂಗಾಭದ್ರೆಯಾಗಿ ಮುಂದುವರಿದು ಕೃಷ್ಣಾ ನದಿಯನ್ನು ಸೇರುತ್ತದೆ.

ತರೀಕೆರೆ ತಾಲೂಕಿನ ಲಕ್ಕವಳ್ಳಿ ಬಳಿ ನಿರ್ಮಿಸಲಾಗಿರುವ ಭದ್ರಾ ಜಲಾಶಯ 1,708 ಮೀಟರ್‌ ಉದ್ದ ಹಾಗೂ 59.14 ಮೀಟರ್‌ ಎತ್ತರ ಹೊಂದಿದೆ. ಇದರ ಒಟ್ಟು ಸಂಗ್ರಹ ಸಾಮರ್ಥ್ಯ 71.50 ಟಿಎಂಸಿ. 1,968.40 ಚದರ ಕಿಲೋಮೀಟರ್‌ ಜಲಾನಯನ ಪ್ರದೇಶ ಹೊಂದಿರುವ ಈ ಯೋಜನೆಗೆ ಸ್ವಾತಂತ್ರ್ಯಾನಂತರ 1947ರಲ್ಲಿ ಚಾಲನೆ ದೊರೆತಿದ್ದು, ಅಣೆಕಟ್ಟು ಕಾಮಗಾರಿ 1959ರಲ್ಲಿ ಹಾಗೂ ನಾಲೆಗಳ ಕಾಮಗಾರಿ 1966ರಲ್ಲಿ ಪೂರ್ಣಗೊಂಡಿತು.

ಒಣಭೂಮಿಗೆ ಹಸಿರು ಹೊದಿಸಿದ ನೀರು

ಭದ್ರಾ ನೀರಾವರಿ ಯೋಜನೆಯು ಮಧ್ಯ ಕರ್ನಾಟಕದ ಕೃಷಿಯ ಚಿತ್ರಣವನ್ನೇ ಬದಲಿಸಿದೆ. ಎಡದಂಡೆ ನಾಲೆ 77.24 ಕಿ.ಮೀ. ಹರಿದು ಸುಮಾರು 8,300 ಹೆಕ್ಟೇರ್‌ ಪ್ರದೇಶಕ್ಕೆ ನೀರು ಒದಗಿಸಿದರೆ, ಬಲದಂಡೆ ನಾಲೆ 366.90 ಕಿ.ಮೀ. ಉದ್ದಕ್ಕೆ ಹರಿದು ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸುತ್ತದೆ.

ಒಂದು ಕಾಲದಲ್ಲಿ ಭತ್ತ ಮತ್ತು ಕಬ್ಬು ಪ್ರಧಾನವಾಗಿದ್ದ ಪ್ರದೇಶಗಳಲ್ಲಿ ಇದೀಗ ಅಡಕೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳ ವಿಸ್ತರಣೆ ಕಂಡುಬಂದಿದೆ. ಹೀಗಾಗಿ ಭದ್ರಾ ನೀರು ಕೃಷಿ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿದೆ.

ಕುಡಿಯುವ ನೀರಿಗೂ ಭದ್ರೆಯೇ ಆಸರೆ

ಮಧ್ಯ ಕರ್ನಾಟಕದ ಹಲವು ನಗರಗಳು, ಪಟ್ಟಣಗಳು ಹಾಗೂ ಸಾವಿರಾರು ಹಳ್ಳಿಗಳ ಕುಡಿಯುವ ನೀರಿನ ವ್ಯವಸ್ಥೆಯಲ್ಲೂ ಭದ್ರಾ ಜಲಾಶಯ ಪ್ರಮುಖ ಪಾತ್ರ ವಹಿಸುತ್ತದೆ. ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 8.50 ಟಿಎಂಸಿ ನೀರನ್ನು ಮೀಸಲಿಡಲಾಗಿದೆ. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಸೇರಿದಂತೆ ಹಲವು ಪ್ರದೇಶಗಳ ಜನಜೀವನಕ್ಕೆ ಈ ನೀರು ಆಸರೆಯಾಗಿದೆ.

ಹೂಳು, ಮೇಲ್ದಂಡೆ ಯೋಜನೆ: ಭವಿಷ್ಯದ ಸವಾಲು

ಜಲಾಶಯದ ಸಂಗ್ರಹ ಸಾಮರ್ಥ್ಯದ ಮೇಲೆ ಹೂಳು ಕೂಡ ಪರಿಣಾಮ ಬೀರುತ್ತಿದೆ. ಮೂಲ ಸಂಗ್ರಹಕ್ಕೆ ಹೋಲಿಸಿದರೆ ಸುಮಾರು 95.74 ಮಿಲಿಯನ್‌ ಘನ ಮೀಟರ್‌ ಹೂಳು ಸೇರಿಕೊಂಡಿದೆ ಎನ್ನಲಾಗುತ್ತದೆ. ಸದ್ಯ ಡೆಡ್‌ ಸ್ಟೋರೇಜ್‌ ಇರುವುದರಿಂದ ತಕ್ಷಣದ ಬಳಕೆಗೆ ದೊಡ್ಡ ತೊಂದರೆ ಇಲ್ಲವಾದರೂ, ಭವಿಷ್ಯದ ಜಲಭದ್ರತೆ ದೃಷ್ಟಿಯಿಂದ ಹೂಳು ನಿರ್ವಹಣೆ ಮಹತ್ವದ್ದಾಗಿದೆ.

ಇದರ ನಡುವೆ ಭದ್ರಾ ಮೇಲ್ದಂಡೆ ಯೋಜನೆ ಬರಪೀಡಿತ ಪ್ರದೇಶಗಳಿಗೆ ನೀರೊದಗಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಸೂಕ್ಷ್ಮ ನೀರಾವರಿ ಹಾಗೂ ಕೆರೆಗಳ ಭರ್ತಿಗೆ ಯೋಜನೆ ರೂಪಿಸಲಾಗಿದೆ. ಜತೆಗೆ ನಾಲೆಗಳ ಮೂಲಕ 37.2 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯೂ ನಡೆಯುತ್ತಿದೆ. ಮೀನು ಮರಿ ಸಾಕಣೆ ಕೇಂದ್ರವೂ ಸ್ಥಳೀಯ ಆರ್ಥಿಕತೆಗೆ ಕೊಡುಗೆ ನೀಡುತ್ತಿದೆ.

ಭದ್ರೆಯ ಅಂಕಿ-ಅಂಶಗಳು

  • ಜಲಾನಯನ ಪ್ರದೇಶ: 1,968.40 ಚ.ಕಿ.ಮೀ.
  • ಅಣೆಕಟ್ಟು ಎತ್ತರ: 59.14 ಮೀಟರ್‌
  • ಅಣೆಕಟ್ಟು ಉದ್ದ: 1,708 ಮೀಟರ್‌
  • ನೀರು ಸಂಗ್ರಹ ಸಾಮರ್ಥ್ಯ: 71.50 ಟಿಎಂಸಿ
  • ಅಚ್ಚುಕಟ್ಟು ಪ್ರದೇಶ: 1,05,570 ಹೆಕ್ಟೇರ್‌
  • ನಾಲೆಗಳ ಒಟ್ಟು ಉದ್ದ: 444.14 ಕಿ.ಮೀ.
Continue Reading

ದಿನದ ಸುದ್ದಿ

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

Published

on

ಜಾತಿಯ ಗೋಡೆ ಒಡೆದು ಮದುವೆಯಾದ ಜೋಡಿಗೆ ಹೊಸ ಸಂಕಷ್ಟ: ಪ್ರೋತ್ಸಾಹಧನಕ್ಕೆ ಅರ್ಜಿ ಹಾಕಿದರೂ ಹಣ ಮಾತ್ರ ಮರೀಚಿಕೆ!

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ ಇದೀಗ ಪ್ರಶ್ನೆಗಳ ಸುಳಿಯಲ್ಲಿ ಸಿಲುಕಿದೆ. ಸಮಾಜದ ವಿರೋಧವನ್ನು ಎದುರಿಸಿ ಹೊಸ ಬದುಕು ಕಟ್ಟಿಕೊಳ್ಳುವ ದಂಪತಿಗಳಿಗೆ ನೆರವಾಗಬೇಕಿದ್ದ ಯೋಜನೆಯಲ್ಲಿ ಹಣ ಬಿಡುಗಡೆ ವಿಳಂಬವಾಗುತ್ತಿದ್ದು, ಅರ್ಹ ಫಲಾನುಭವಿಗಳು ಸರ್ಕಾರದ ನೆರವಿಗಾಗಿ ಕಾಯುವಂತಾಗಿದೆ.

ಹೈಲೈಟ್ಸ್: 
  • SC/ST ಪುರುಷ–ಬೇರೆ ಜಾತಿಯ ಮಹಿಳೆ ವಿವಾಹಕ್ಕೆ ₹2.50 ಲಕ್ಷ ನೆರವು
  • SC/ST ಮಹಿಳೆ–ಬೇರೆ ಜಾತಿಯ ಪುರುಷ ವಿವಾಹಕ್ಕೆ ₹3 ಲಕ್ಷ ಪ್ರೋತ್ಸಾಹಧನ
  • 2025-26ರಲ್ಲಿ 5,612 ಅರ್ಜಿಗಳ ಪೈಕಿ 3,997 ಅರ್ಜಿಗಳು ಬಾಕಿ
  • 2026-27ರಲ್ಲಿ 2,194 ಅರ್ಜಿಗಳು; 61ಕ್ಕೆ ಅನುಮೋದನೆ, ಆದರೆ ಹಣ ಪಾವತಿ ಶೂನ್ಯ
  • ಅನುದಾನ ಕೊರತೆ ಮತ್ತು ಅಪೂರ್ಣ ದಾಖಲೆಗಳಿಂದ ಯೋಜನೆ ಅನುಷ್ಠಾನಕ್ಕೆ ವಿಳಂಬ

http://Visit : www.suddidina.com

ಅಂತರ್ಜಾತಿ ವಿವಾಹಕ್ಕೆ ಎಷ್ಟು ಪ್ರೋತ್ಸಾಹಧನ?

ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಪುರುಷ ಬೇರೆ ಜಾತಿಯ ಮಹಿಳೆಯನ್ನು ವಿವಾಹವಾದರೆ ₹2.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಮಹಿಳೆ ಬೇರೆ ಜಾತಿಯ ಪುರುಷನನ್ನು ವಿವಾಹವಾದರೆ ₹3 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.

ಆದರೆ, ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಹಣ ಪಾವತಿ ಮಾತ್ರ ಅದೇ ವೇಗದಲ್ಲಿ ನಡೆಯುತ್ತಿಲ್ಲ. 2025-26ನೇ ಸಾಲಿನಲ್ಲಿ 5,612 ಅರ್ಜಿಗಳು ಸಲ್ಲಿಕೆಯಾಗಿದ್ದು, 1,615 ಅರ್ಜಿಗಳಿಗೆ ಮೊದಲ ಹಂತದ ಪ್ರೋತ್ಸಾಹಧನಕ್ಕೆ ಅನುಮೋದನೆ ದೊರೆತಿದೆ. ಆದರೆ ಕೇವಲ 39 ಫಲಾನುಭವಿಗಳಿಗೆ ಮಾತ್ರ ಹಣ ಪಾವತಿಯಾಗಿದ್ದು, 3,997 ಅರ್ಜಿಗಳು ಇನ್ನೂ ಬಾಕಿ ಉಳಿದಿವೆ. 909 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿಯಾಗಿವೆ.

ಹೊಸ ಸಾಲಿನಲ್ಲೂ ಅದೇ ಕಥೆ

2026-27ನೇ ಸಾಲಿನಲ್ಲಿ ಇದುವರೆಗೆ 2,194 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 61 ಅರ್ಜಿಗಳಿಗೆ ಅನುಮೋದನೆ ದೊರೆತಿದ್ದರೂ, ಮೊದಲ ಕಂತಿನ ಹಣ ಯಾರಿಗೂ ಪಾವತಿಯಾಗಿಲ್ಲ. 392 ಅರ್ಜಿಗಳು ಅಪೂರ್ಣ ದಾಖಲೆಗಳ ಕಾರಣದಿಂದ ಬಾಕಿ ಉಳಿದಿವೆ.

ಅನುದಾನ ಹೆಚ್ಚಳವಾಗದಿರುವುದು ದೊಡ್ಡ ಸಮಸ್ಯೆ

ಅಂತರ್ಜಾತಿ ವಿವಾಹಗಳ ಸಾಮಾಜಿಕ ಸ್ವೀಕಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಏರಿಕೆಯಾಗಿದೆ. ಆದರೆ, ಅರ್ಜಿಗಳ ಸಂಖ್ಯೆಗೆ ಅನುಗುಣವಾಗಿ ಯೋಜನೆಯ ಅನುದಾನ ಹೆಚ್ಚಳವಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಹಿಂದಿನ ವರ್ಷದ ಅರ್ಜಿಗಳೇ ಬಾಕಿ ಉಳಿಯುತ್ತಿರುವಾಗ ಹೊಸ ಅರ್ಜಿಗಳ ವಿಲೇವಾರಿಯೂ ವಿಳಂಬವಾಗುತ್ತಿದೆ.

2018-19ರಲ್ಲಿ ₹64.27 ಕೋಟಿ, 2019-20ರಲ್ಲಿ ₹90.42 ಕೋಟಿ, 2020-21ರಲ್ಲಿ ₹99.9 ಕೋಟಿ, 2021-22ರಲ್ಲಿ ₹171.84 ಕೋಟಿ ಹಾಗೂ 2022-23ರಲ್ಲಿ ₹94.62 ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ವಾರ್ಷಿಕವಾಗಿ ಬರುತ್ತಿರುವ ಅರ್ಜಿಗಳನ್ನು ಸಂಪೂರ್ಣವಾಗಿ ವಿಲೇವಾರಿ ಮಾಡಲು ಈ ಮೊತ್ತ ಸಾಕಾಗುತ್ತಿಲ್ಲ ಎಂಬ ಪ್ರಶ್ನೆ ಎದುರಾಗಿದೆ.

2026-27ನೇ ಸಾಲಿನ ಈವರೆಗಿನ ಅಂತರ್ಜಾತಿ ಪ್ರೋತ್ಸಾಹಧನ ಯೋಜನೆಯ ವಿವರ

  • 2026-27ನೇ ಸಾಲಿನಲ್ಲಿ ಸಲ್ಲಿಕೆಯಾದ ಅರ್ಜಿಗಳು: 2,194
  • ಮೊದಲ ಕಂತಿಗೆ ಅನುಮೋದನೆ: 61
  • ಪ್ರೋತ್ಸಾಹ ಧನ ಪಾವತಿ: 00
  • ಅಪೂರ್ಣ ಅರ್ಜಿಗಳು: 392
  • ತಿರಸ್ಕಾರಗೊಂಡ ಅರ್ಜಿಗಳು: 02

ಸಾಮಾಜಿಕ ಧೈರ್ಯಕ್ಕೆ ಆರ್ಥಿಕ ಬೆಂಬಲ ಬೇಕಿದೆ

ಅಂತರ್ಜಾತಿ ವಿವಾಹದ ನಿರ್ಧಾರ ಕೈಗೊಳ್ಳುವ ಜೋಡಿಗಳು ಕೆಲವೊಮ್ಮೆ ಕುಟುಂಬದ ವಿರೋಧ, ಸಾಮಾಜಿಕ ಒತ್ತಡ, ಬಹಿಷ್ಕಾರ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಪ್ರೋತ್ಸಾಹಧನ ಕೇವಲ ಹಣಕಾಸಿನ ನೆರವಲ್ಲ; ಅದು ಹೊಸ ದಂಪತಿಗಳ ನಿರ್ಧಾರಕ್ಕೆ ಸಾಮಾಜಿಕ ಬೆಂಬಲದ ಸಂಕೇತವೂ ಹೌದು.

ಆದರೆ ಅರ್ಜಿ ಸಲ್ಲಿಸಿ ಅನುಮೋದನೆಗಾಗಿ, ನಂತರ ಹಣಕ್ಕಾಗಿ ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ಉಂಟಾದರೆ ಯೋಜನೆಯ ಮೂಲ ಉದ್ದೇಶವೇ ದುರ್ಬಲವಾಗುತ್ತದೆ. ಹೀಗಾಗಿ ಬಾಕಿ ಅರ್ಜಿಗಳ ತ್ವರಿತ ವಿಲೇವಾರಿ, ದಾಖಲೆ ಪ್ರಕ್ರಿಯೆ ಸರಳೀಕರಣ ಹಾಗೂ ಅಗತ್ಯ ಅನುದಾನ ಹೆಚ್ಚಳಕ್ಕೆ ಸರ್ಕಾರ ಗಮನಹರಿಸಬೇಕಿದೆ.

Continue Reading

Trending