Connect with us

ರಾಜಕೀಯ

ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್

Published

on

  • ಅಲ್‌ಮೆಯಿಡಾ ಗ್ಲಾಡ್‌ಸನ್

ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್ ಮಾತ್ರ ಯಾಕೆಂದರೆ 395 ವಿಧಿಗಳು, 8 ಅನುಚ್ಛೇದಗಳು, 22 ಭಾಗಗಳು, ಒಂದು ಲಕ್ಷಕ್ಕಿಂತಲೂ ಹೆಚ್ಚು ಶಬ್ದಗಳು ಹಾಗೂ ಇನ್ನೂರಕ್ಕಿಂತ ಹೆಚ್ಚು ಪುಟಗಳ ಸಂವಿಧಾನವನ್ನು ರಚಿಸುವಲ್ಲಿ ಡಾ ಅಂಬೇಡ್ಕರ್ ಪಟ್ಟ ಶ್ರಮ, ವ್ಯಯಿಸಿದ ಸಮಯ ಎಲ್ಲರಿಗಿಂತಲೂ ಹೆಚ್ಚು.

ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿ ಕೃಷ್ಣಸ್ವಾಮಿ ಅಯ್ಯರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೆ ಎಮ್ ಮುನ್ಶಿಯಂಥ ಘಟಾನುಘಟಿಗಳು ಇದ್ದರೂ, ಸಮಿತಿಯ ಅಧ್ಯಕ್ಷರನ್ನಾಗಿ ಆರಿಸಿದ್ದು ಬಾಬಾಸಾಹೇಬರನ್ನು ಅವರ ಸಾಮರ್ಥ್ಯ ಹಾಗೂ ಅಗಾಧವಾದ ಜ್ಞಾನದಾಧರದಲ್ಲಿ. ಸಂವಿಧಾನ ಕರಡು ಸಮಿತಿಯಲ್ಲಿ ಬಾಬಾಸಾಹೇಬರ ಜೊತೆ ಇನ್ನೂ ಆರು ಜನರಿದ್ದರು. ಆದರೆ ಕಾರಾಣಾಂತರಗಳಿಂದ ಕರಡು ಸಮಿತಿಯ ಹೆಚ್ಚಿನ ಸದಸ್ಯರು ಸಂವಿಧಾನ ರಚನೆಯಲ್ಲಿ ಭಾಗವಹಿಸಲೇ ಇಲ್ಲ. ಒಬ್ಬರು ತೀರಿಹೋದರು, ಇನ್ನೊಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೋರ್ವರು ತಮ್ಮ ರಾಜ್ಯದ ವಿಷಯಗಳಲ್ಲೇ ತಲ್ಲೀನರಾದರು. ಇನ್ನಿಬ್ಬರು ಅನಾರೋಗ್ಯದ ನಿಮಿತ್ತ ದೆಹಲಿ ಕಡೆ ಬರಲೇ ಇಲ್ಲ. ಹೀಗಾಗಿ ಇಡೀ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಬಾಬಾಸಾಹೇಬರ ಹೆಗಲಿಗೇ ಬಿತ್ತು. ಸುಮಾರು ಎರಡೂವರೆ ವರುಷಗಳ ಕಾಲ ನಡೆದ ಸಂವಿಧಾನ ರಚನೆ, ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆಯುವ ಮೊದಲು ಸುಮಾರು 2500 ಬಾರಿ ತಿದ್ದುಪಡಿಗೆ ಒಳಗಾಗಿತ್ತು. ಕೊನೆಗೆ ಈ ಸಂವಿಧಾನ ಅನುಮೋದನೆಯಾದಾಗ ಅದು ಜಗತ್ತಿನ ಅತೀ ದೊಡ್ಡ ಸಂವಿಧಾನವೆಂದು ಪರಿಗಣಿಸಲ್ಪಟ್ಟಿತ್ತು. ಸದ್ಯಕ್ಕೆ ನಮ್ಮ ಸಂವಿಧಾನ ಜಗತ್ತಿನ ಎರಡನೆಯ ಅತೀ ದೊಡ್ಡ ಸಂವಿಧಾನ. ಮೊದಲನೆಯ ಸ್ಥಾನದಲ್ಲಿ ಈವಾಗ ಅಲ್ಬೇನಿಯಾದ ಸಂವಿಧಾನ ಇದೆ.

ನಮ್ಮ ದೇಶ ಯಾವುದೇ ದೇಶದ ಸಂವಿಧಾನದ ಕಾಪಿ-ಪೇಸ್ಟ್ ಅಲ್ಲ ಸಂಘಿಗಳು ಹೇಳುವಂತೆ. ಹೌದು ಬ್ರಿಟನ್, ಅಮೇರಿಕಾ, ಐರ್ಲೆಂಡ್, ಫ್ರಾನ್ಸ್, ಆಸ್ಟ್ರೇಲಿಯಾ, ಜರ್ಮನಿ, ಯುಎಸ್‍ಎಸ್‍ಆರ್ ಮುಂತಾದ ದೇಶಗಳ ಸಂವಿಧಾನಗಳ ಪ್ರಭಾವ ನಮ್ಮ ಸಂವಿಧಾನದ ಮೇಲೂ ಇದೆ. ಆದರೆ ಅಲ್ಲಿಂದ ಕಾಪಿಯಾಗಿಲ್ಲ ಬದಲಾಗಿ ಅವುಗಳ ಕೆಲ ಆಶಯಗಳನ್ನು ಮೂಲಾಧಾರವಾಗಿಟ್ಟು, ಭಾರತದ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ಭೌಗೋಳಿಕ, ಭಾಷಿಕಾ ವಿವಿಧತೆಗಳಿಗೆ ಅನುಸಾರವಾಗಿ ಭಾರತದ ಸಂವಿಧಾನವನ್ನು ರಚಿಸಲಾಗಿದೆ.

ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿದ್ದವರು ಬಾಬಾಸಾಹೇಬ್ ಅಂಬೇಡ್ಕರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೃಷ್ಣಸ್ವಾಮಿ ಅಯ್ಯರ್, ಕೆ‍ಎಮ್ ಮುನ್ಶಿ, ಸಯ್ಯದ್ ಮಹಮೂದ್ ಸಾ’ದುಲ್ಲಾ, ಬಿ ಎಲ್ ಮಿಟ್ಟರ್, ಡಿ ಪಿ ಖೈತಾನ್. (ಮಿಟ್ಟರ್ ಅವರ ಅನಾರೋಗ್ಯದ ಕಾರಣದಿಂದ ಸಮಿತಿಯಿಂದ ಹೊರಗುಳಿದಾಗ ನಮ್ಮ ಮೈಸೂರಿನ ಮಾಧವ ರಾವ್ ಅವರ ಜಾಗಕ್ಕೆ ಆಯ್ಕೆಯಾಗಿದ್ದರೆ, ಡಿ ಪಿ ಖೈತಾನ್ 1948ರಲ್ಲಿ ತೀರಿಹೋದ ಕಾರಣ ಅವರ ಜಾಗಕ್ಕೆ ಟಿ ಟಿ ಕೃಷ್ಣಮಾಚಾರಿ ಆಯ್ಕೆಯಾಗಿದ್ದರು). ಭಾರತದ ಸಂವಿಧಾನ ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆದಾಗ ಸಂವಿಧಾನ ಸಭೆಯನ್ನುದ್ದೇಶಿಸಿ ಮಾತಾನಾಡಿದ ಟಿ ಟಿ ಕೃಷ್ಣಮಾಚಾರಿ ಹೀಗೆಂದಿದ್ದಾರೆ “ಕರಡು ರಚನಾ ಸಮಿತಿಗೆ ಈ ಸಂವಿಧಾನ ಸಭೆ ಏಳು ಜನರನ್ನು ನೇಮಿಸಿತ್ತು. ಅದರಲ್ಲಿ ಒಬ್ಬರು ರಾಜೀನಾಮೆ ಕೊಟ್ಟಾಗ ಅವರ ಜಾಗಕ್ಕೆ ಇನ್ನೋರ್ವರ ಆಯ್ಕೆಯಾಯಿತು. ಒಬ್ಬರು ತೀರಿಹೋದರು, ಒಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೊಬ್ಬ ಸದಸ್ಯರು ತಾವು ಪ್ರತಿನಿಧಿಸುತ್ತಿದ್ದ ರಾಜ್ಯದ ವಿಷಯಗಳಲ್ಲೇ ತಲ್ಲೀನರಾಗಿದ್ದರೆ, ಇನ್ನಿಬ್ಬರು ದೆಹಲಿಯಿಂದ ದೂರವಿದ್ದು, ಅವರ ಅನಾರೋಗ್ಯದ ಕಾರಣದಿಂದ ಸಂವಿಧಾನ ರಚನೆಯಲ್ಲಿ ಭಾಗವಹಿಸಲಿಲ್ಲ. ಹೀಗಾಗಿ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಡಾ ಅಂಬೇಡ್ಕರ್ ಅವರ ಹೆಗಲಿಗೆ ಬಿತ್ತು. ಈ ಜವಾಬ್ದಾರಿಯನ್ನು ಸಮರ್ಪಕವಾಗಿ ಹಾಗೂ ಪ್ರಶಂಸನೀಯ ರೀತಿಯಲ್ಲಿ ನಿಭಾಯಿಸಿದಕ್ಕಾಗಿ ನಾವೆಲ್ಲರೂ ಅವರಿಗೆ ಋಣಿಯಾಗಿರಬೇಕೆಂದು ನನ್ನ ಅಭಿಪ್ರಾಯ.”

ಭಾರತದ ಪ್ರಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಸಂವಿಧಾನ ಸಭೆಯ ಡಿಬೇಟ್‍ನಲ್ಲಿ ಒಂದೊಮ್ಮೆ ಹೀಗೆಂದಿದ್ದರು. “ಅಧ್ಯಕ್ಷನ ಸ್ಥಾನದಲ್ಲಿದ್ದು ಕರಡು ರಚನೆ ಸಮಿತಿಯ ದೈನಂದಿನ ಕೆಲಸಗಳನ್ನು ನಾನು ಬಲು ಹತ್ತಿರದಿಂದ ನೋಡಿದ್ಡೇನೆ. ಹಾಗಾಗಿ ಬೇರೆಯರವರಿಗಿಂತ ಹೆಚ್ಚಾಗಿ ಸಂವಿಧಾನ ಕರಡು ರಚನೆ ಸಮಿತಿಯ ಸದಸ್ಯರು ಹಾಗೂ ಪ್ರತ್ಯೇಕವಾಗಿ ಸಮಿತಿ ಅಧ್ಯಕ್ಷರು ಎಷ್ಟೊಂದು ಶೃದ್ಧೆ ಹಾಗೂ ಚೈತನ್ಯದಿಂದ ಈ ಸಂವಿಧಾನವನ್ನು ರಚಿಸಿದ್ದಾರೆ ಎಂದು ನನಗೆ ತಿಳಿದಿದೆ. ಅಂಬೇಡ್ಕರ್ ಅವರನ್ನು ಕರಡು ಸಮಿತಿಗೆ ಆಯ್ಕೆ ಮಾಡಿ, ತದನಂತರ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕಿಂತ ಹೆಚ್ಚಿನ ಒಳ್ಳೆಯ ಕೆಲಸವನ್ನು ನಾವು ಮಾಡಿಲ್ಲ.”

ಹೀಗಾಗಿ ಬಾಬಾಸಾಹೇಬ್ ಕೊಟ್ಟ ಸಂವಿಧಾನದ ಕಾರಣದಿಂದಲೇ ಇವತ್ತು ಐಎ‍ಎಸ್ ಆಫೀಸರ್ ಆಗಿರುವ ಶಿಕ್ಷಣಾ ಇಲಾಖೆಯ ಅಧಿಕಾರಿ ಉಮಾಶಂಕರ್ ಸಂವಿಧಾನ ರಚನೆಯ ಬಗ್ಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಆಗಿರುವುದು ಪ್ರಮಾದವಲ್ಲ ಬಟ್ ಅಪರಾಧ. ಸಂವಿಧಾನದ ಕಾರಣದಿಂದಲೇ ಇಂಥ ಉನ್ನತ ಹುದ್ದೇಗೇರಿರುವ ವ್ಯಕ್ತಿಗಳು ಮನಸ್ಸಿನಲ್ಲಿ ಇಷ್ಟೊಂದು ಕೊಳಕನ್ನು ಹಾಗೂ ನೀಚತನವನ್ನು ತುಂಬಿಸಿಕೊಂಡಿದ್ದಾರೆಂದರೆ ಅವರು ಸಂವಿಧಾನದ ಪಾಲಕರಾಗಿರಲು ಸಾಧ್ಯವೇ ಇಲ್ಲ. ಇವರನ್ನು ಕೇವಲ ಅಮಾನತ್ತುಗೊಳಿಸಿದರೆ ಸಾಕಾಗೋಲ್ಲ ಬದಲಾಗಿ ಅವರನ್ನು ಸೇವೆಯಿಂದ ವಜಾ ಮಾಡಬೇಕು. ಸಂವಿಧಾನದ ನೆರಳಿನಡಿಯಲ್ಲಿ ಕುಳಿತು ತಮ್ಮ ರಾಜಕೀಯ ಹಾಗೂ ವ್ಯಯಕ್ತಿಕ ಸಿದ್ದಾಂತಗಳನ್ನು ಪ್ರತಿಪಾದಿಸುವ ಬದಲು ನೇರವಾಗಿ ಸೇವೆಗೆ ರಾಜೀನಾಮೆ ಕೊಟ್ಟು ಹೊರಬಂದು ತಮಗೆ ಬೇಕಾದ ರಾಜಕೀಯ ಪಕ್ಷವನ್ನು ಸೇರಲಿ. ಹಾಗಾಗಿ ಉಮಾಶಂಕರ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ತನಕ ಪಟ್ಟು ಸಡಿಲಿಸದೆ ಹೋರಾಡಬೇಕು. ನಮ್ಮ ಬ್ಯೂರೋಕ್ರಸಿಯಲ್ಲಿ ತುಂಬಿರುವ ಇಂಥ ನೀಚರನ್ನು ಗುರುತಿಸಿ ಹೊರಗಟ್ಟಿಲ್ಲವೆಂದರೆ ಮುಂದೊಂದು ದಿನ ಇವರೇ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡೋಡು ಗ್ಯಾರಂಟಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

Published

on

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ.

ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending