Connect with us

ಬಹಿರಂಗ

‘ಭಾರತ ಸಂವಿಧಾನ’ದ ಬಗ್ಗೆ ನೀವಿಷ್ಟು ತಿಳಿಯಲೇ ಬೇಕು : ಮಿಸ್ ಮಾಡ್ದೆ ಓದಿ

Published

on

ಭಾರತ‌ ಸಂವಿಧಾನದ ಬಗ್ಗೆ ತಿಳಿದುಕೊಳ್ಳುವುದು ಇಂದಿನ ತುರ್ತು. ಈ ಹಿನ್ನಲೆಯಲ್ಲಿ ನಮ್ಮ‌ ಹೆಮ್ಮೆಯ ಸಂವಿಧಾನದ ಬಗ್ಗೆ ಒಂದಷ್ಟು ಮಾಹಿತಿ ನಿಮಗಾಗಿ.

ಭಾರತ ಸಂವಿಧಾನದ ಲಕ್ಷಣಗಳು

1. ಬೃಹತ್ ಸಂವಿಧಾನ

ಇದು ವಿಶ್ವದಲ್ಲಿಯೇ ಬೃಹತ್ ಸಂವಿಧಾನವಾಗಿದೆ. ಮೂಲ ಸಂವಿಧಾನವು ಒಟ್ಟು 395 ವಿಧಿಗಳು, 8 ಅನುಸೂಚಿಗಳು ಮತ್ತು 8 ಭಾಗಗಳನ್ನು ಒಳಗೊಂಡಿತ್ತು. ಆದರೆ ಪ್ರಸ್ತುತ ಸಂವಿಧಾನವು ಒಟ್ಟು 465ವಿಧಿಗಳು, 12 ಅನುಸೂಚಿಗಳು ಮತ್ತು 100 ತಿದ್ದುಪಡಿಗಳನ್ನು ಒಳಗೊಂಡಿದೆ.

ಬೃಹತ್ ಸಂವಿಧಾನಕ್ಕೆ ಕಾರಣಗಳೆಂದರೆ

  • ಭೌಗೋಳಿಕ ವಿಸ್ತೀರ್ಣತೆ.
  • ಐತಿಹಾಸಿಕ ಅಂಶಗಳು (1935ರ ಭಾರತ ಸರ್ಕಾರದ ಕಾಯ್ದೆಯ ಪ್ರಕಾರ).
  • ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ ಇಡೀ ಭಾರತಕ್ಕೆ ಒಂದೇ ಸಂವಿಧಾನ.
  • ನಮ್ಯ ಮತ್ತು ಅನಮ್ಯ ಸ್ವರೂಪದ ಲಕ್ಷಣಗಳು.
  • ನಮ್ಮ ಸಂವಿಧಾನಕ್ಕೆ ಇದುವರೆಗೆ ತರಲಾದ ತಿದ್ದುಪಡಿಗಳ ಮೂಲಕ ಕೆಲವು ಹೊಸ ಅಧ್ಯಾಯ ಹಾಗೂ ವಿಧಿಗಳನ್ನು ಸೇರಿಸಲಾಗಿದೆ.
  • ನಮ್ಮ ಸಂವಿಧಾನವು ಕೇಂದ್ರಾಡಳಿತ ಪ್ರದೇಶಗಳ ಬಗ್ಗೆ ವಿವರಣೆಗಳನ್ನು ಹೊಂದಿದೆ.

2. ಲಿಖಿತ ಸಂವಿಧಾನ

ಅಮೆರಿಕಾ ಸಂವಿಧಾನದಂತೆ ಭಾರತದ ಸಂವಿಧಾನವು ಲಿಖಿತ ಸಂವಿಧಾನವಾಗಿದ್ದು, ಬ್ರಿಟನ್ ಸಂವಿಧಾನದಂತೆ ಅಲಿಖಿತ ಸಂವಿಧಾನವಾಗಿರುವುದಿಲ್ಲ. ಸರ್ಕಾರದ ಅಂಗಗಳಾದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ರಚನೆ, ಅಧಿಕಾರ ಮತ್ತು ಕಾರ್ಯವ್ಯಾಪ್ತಿ, ಮೂಲಭೂತ ಹಕ್ಕು ಮತ್ತು ಕರ್ತವ್ಯಗಳಿಗೆ ಸಂಬಂಧಿಸಿದ ವಿವರಗಳು ಬರವಣಿಗೆಯ ರೂಪದಲ್ಲಿರುವುದನ್ನು ನಾವು ಕಾಣಬಹುದು.

3. ಮೂಲಭೂತ ಹಕ್ಕುಗಳು

ಮೂಲಭೂತ ಹಕ್ಕುಗಳು ವ್ಯಕ್ತಿತ್ವ ವಿಕಸನದ ಅವಿಭಾಜ್ಯ ಅಂಗಗಳಾಗಿವೆ. ಭಾರತದ ಸಂವಿಧಾನದ ಮೂರನೆಯ ಭಾಗವು ತನ್ನ ಪ್ರಜೆಗಳಿಗೆ ಸ್ವಾತಂತ್ರ್ಯದ ಹಕ್ಕು, ಸಮಾನತೆಯ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು, ಶೈಕ್ಷಣಿಕ ಹಾಗೂ ಸಾಂಸ್ಕøತಿಕ ಹಕ್ಕು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಮತ್ತು ಸಂವಿಧಾನಾತ್ಮಕ ಪರಿಹಾರಗಳ ಹಕ್ಕು ಹೀಗೆ ಆರು ಮೂಲಭೂತ ಹಕ್ಕುಗಳನ್ನು ನೀಡಿದೆ. ಸಂವಿಧಾನದ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ನೀಡಿದೆ, ಆದ್ದರಿಂದ ಸರ್ವೋಚ್ಛ ನ್ಯಾಯಾಲಯವನ್ನು “ಭಾರತ ಸಂವಿಧಾನದ ರಕ್ಷಕ/ಕಾವಲುಗಾರ” ಎಂದು ಕರೆಯಲಾಗುತ್ತದೆ.

4. ಮೂಲಭೂತ ಕರ್ತವ್ಯಗಳು

ಮೂಲಭೂತ ಕರ್ತವ್ಯಗಳನ್ನು ನಾವು ಭಾರತ ಸಂವಿಧಾನಕ್ಕೆ ಸೋವಿಯತ್ (ರಷ್ಯಾ) ಸಂವಿಧಾನದಿಂದ ಎರವಲು ಪಡೆದಿದ್ದೇವೆ. 1976ರ 42ನೇ ತಿದ್ದುಪಡಿಯ ಮೂಲಕ ಭಾರತ ಸಂವಿಧಾನಕ್ಕೆ ಮೂಲಭೂತ ಕರ್ತವ್ಯಗಳ ಪಟ್ಟಿಯನ್ನು ಸೇರಿಸಲಾಯಿತು. ಭಾರತ ಸಂವಿಧಾನದಲ್ಲಿ 4-ಎ ಭಾಗದಲ್ಲಿನ 51(ಎ) ವಿಧಿಯಡಿಯಲ್ಲಿ ಹನ್ನೊಂದು ಮೂಲಭೂತ ಕರ್ತವ್ಯಗಳನ್ನು ಕಾಣಬಹುದು.

ಅವುಗಳು ಈ ಕೆಳಗಿನಂತಿವೆ

1.ಸಂವಿಧಾನ, ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸುವುದು.

2.ಸ್ವಾತಂತ್ರ್ಯ ಚಳುವಳಿಯ ಉದಾತ್ತ ಆದರ್ಶಗಳನ್ನು ಪಾಲಿಸುವುದು.

3. ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯುವುದು ಮತ್ತು ಕಾಪಾಡುವುದು.

4. ಕರೆ ಬಂದಾಗ ರಾಷ್ಟ್ರವನ್ನು ರಕ್ಷಿಸುವುದು ಮತ್ತು ದೇಶ ಸೇವೆ ಮಾಡುವುದು.

5. 6 ರಿಂದ 14 ವರ್ಷದೊಳಗಿನ ಮಕ್ಕಳನ್ನು ಪಾಲಕರು ಕಡ್ಡಾಯವಾಗಿ ಶಾಲೆಗೆ ಕಳುಹಿಸತಕ್ಕದ್ದು.

6. ನಮ್ಮ ಸಮ್ಮಿಶ್ರ ಸಂಸ್ಕøತಿಯ ಶ್ರೀಮಂತ ಪರಂಪರೆಯನ್ನು ಗೌರವಿಸುವುದು ಮತ್ತು ರಕ್ಷಿಸುವುದು.

7. ವೈಯಕ್ತಿಕ ಹಾಗೂ ಸಾಮೂಹಿಕ ಚಟುವಟಿಕೆಗಳಲ್ಲಿ ಪ್ರಾವಿಣ್ಯತೆಯನ್ನು ಪ್ರದರ್ಶಿಸಿ ರಾಷ್ಟ್ರದ ಪ್ರಗತಿಗೆ ಶ್ರಮಿಸುವುದು.

8. ಮಹಿಳೆಯರ ಗೌರವಕ್ಕೆ ಚ್ಯುತಿಯುಂಟುಮಾಡುವ ಆಚರಣೆಗಳನ್ನು ತ್ಯಜಿಸುವುದು ಮತ್ತು ಭಾರತೀಯರಲ್ಲಿ ಭ್ರಾತೃತ್ವ ಮತ್ತು ಸಾಮರಸ್ಯ ಭಾವನೆಗಳನ್ನು ಬೆಳೆಸುವುದು.

9. ಅರಣ್ಯಗಳು, ಸರೋವರಗಳು, ನದಿಗಳು ಮತ್ತು ವನ್ಯಜೀವಿಗಳನ್ನು ಒಳಗೊಂಡ ನೈಸರ್ಗಿಕ ಪರಿಸರವನ್ನು ರಕ್ಷಿಸಿ, ಅಭಿವೃದ್ಧಿಪಡಿಸುವುದು.

10. ವೈಜ್ಞಾನಿಕ ಹಾಗೂ ಮಾನವೀಯ ಗುಣಗಳನ್ನು ಮತ್ತು ವಿಚಾರಣಾ ಹಾಗೂ ಸುಧಾರಣಾ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು.

11. ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವುದು ಮತ್ತು ಹಿಂಸೆ ತ್ಯಜಿಸುವುದು.

5. ರಾಜ್ಯ ನೀತಿ ನಿರ್ದೇಶಕ ತತ್ವಗಳು

ಭಾರತ ಸಂವಿಧಾನಕ್ಕೆ ರಾಜ್ಯ ನೀತಿ ನಿರ್ದೇಶಕ ತತ್ವಗಳನ್ನು ಐರ್ಲೆಂಡ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ, ಭಾರತ ಸಂವಿಧಾನದ ನಾಲ್ಕನೇ ಭಾಗವು ರಾಜ್ಯನೀತಿ ನಿರ್ದೇಶಕ ತತ್ವಗಳನ್ನು ಒಳಗೊಂಡಿದೆ. ಕಾನೂನುಗಳನ್ನು ರೂಪಿಸುವಾಗ, ನೀತಿಗಳನ್ನು ಹಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಾಗ ಮತ್ತು ಆಡಳಿತ ನಡೆಸುವಾಗ ರಾಜ್ಯ ನೀತಿ ನಿರ್ದೇಶಕ ತತ್ವಗಳನ್ನು ಅಳವಡಿಸಿಕೊಳ್ಲುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದ್ಯ ಕರ್ತವ್ಯವಾಗಿದೆ.

6. ಎರವಲು ಸಂವಿಧಾನ

ನಮ್ಮ ಸಂವಿಧಾನವು ವಿಶ್ವದ ವಿವಿಧ ಸಂವಿಧಾನಗಳಿಂದ ಅನೇಕ ಲಕ್ಷಣಗಳನ್ನು ಎರವಲು ಪಡೆದಿದೆ, ಆದ್ದರಿಂದ ಇದನ್ನು ಎರವಲು ಸಂವಿಧಾನ ಎಂದು ಕರೆಯುತ್ತಾರೆ. ಉದಾಹರಣೆಗೆ ಮೂಲಭೂತ ಹಕ್ಕುಗಳ ಪಟ್ಟಿ, ನ್ಯಾಯಿಕ ವಿಮರ್ಶೆ, ಪ್ರಸ್ತಾವನೆಗಳನ್ನು ಅಮೆರಿಕಾ ಸಂಯುಕ್ತ ಸಂಸ್ಥಾನದ ಸಂವಿಧಾನದಿಂದಲೂ, ಕಾನೂನಿನ ಆಳ್ವತೆ, ಏಕ ಪೌರತ್ವ, ಸಂಸದೀಯ ಪದ್ದತಿಗಳನ್ನು ಗ್ರೇಲಿತ್ ಬ್ರಿಟನ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ.

7. ಸಂಸದೀಯ ಸರ್ಕಾರ ಪದ್ದತಿ

ಬ್ರಿಟಿಷ ಸಂವಿಧಾನದಿಂದ ನಾವು ಸಂಸದೀಯ ಸರ್ಕಾರ ಪದ್ದತಿಯನ್ನು ಭಾರತೀಯ ಸಂವಿಧಾನಕ್ಕೆ ಎರವಲಾಗಿ ಪಡೆದಿದ್ದೇವೆ. ಭಾರತ ಸಂವಿಧಾನವು ಕೇಂದ್ರ ಹಾಗೂ ರಾಜ್ಯಗಳಲ್ಲಿ ಸಂಸದೀಯ ಪದ್ದತಿಗೆ ಅವಕಾಶ ಮಾಡಿಕೊಟ್ಟಿದೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಕಾರ್ಯಾಂಗವು ಶಾಸಕಾಂಗಕ್ಕೆ ಹೊಣೆಯಾಗಿರುತ್ತದೆ. ಕಾರ್ಯಾಂಗವು ಶಾಸಕಾಂಗದ ವಿಶ್ವಾಸವನ್ನು ಹೊಂದಿರುವವರಿಗೆ ಮಾತ್ರ ಅಧಿಕಾರದಲ್ಲಿ ಮುಂದುವರೆಯುತ್ತದೆ. ಶಾಸಕಾಂಗದ ವಿಶ್ವಾಸವನ್ನು ಕಳೆದುಕೊಂಡ ತಕ್ಷಣ ಅಧಿಕಾರವನ್ನು ಕಳೆದುಕೊಳ್ಳುತ್ತದೆ.

8. ಸಾರ್ವತ್ರಿಕ ವಯಸ್ಕ ಮತದಾನ ಪದ್ದತಿ

ಈ ಪದ್ದತಿಯ ಪ್ರಕಾರ, ಜಾತಿ, ಮತ, ಲಿಂಗ, ಸಾಮಾಜಿಕ ಸ್ಥಾನಮಾನ, ಮುಂತಾದವುಗಳ ಆಧಾರದ ಮೇಲೆ ಯಾವುದೇ ತಾರತಮ್ಯವಿಲ್ಲದೇ 18 ವರ್ಷ ಮೇಲ್ಪಟ್ಟ ಎಲ್ಲ ಪ್ರಜೆಗಳಿಗೆ ಮತದಾನದ ಹಕ್ಕನ್ನು ನೀಡಲಾಗಿದೆ. 1989ರ 61ನೇಯ ತಿದ್ದುಪಡಿಯ ಪ್ರಕಾರ ಮತದಾನದ ವಯಸ್ಸನ್ನು 21 ರಿಂದ 18ಕ್ಕೆ ಇಳಿಸಲಾಯಿತು. ಇದು ಪ್ರಜಾಪ್ರಭುತ್ವವನ್ನು ಬಲಗೊಳಿಸುವಲ್ಲಿ ಕ್ರಾಂತಿಕಾರಿಕ ಹೆಜ್ಜೆಯಾಗಿದೆ. ಸಾರ್ವತ್ರಿಕ ವಯಸ್ಕ ಮತದಾನ ಪದ್ದತಿಯ ಫಲವಾಗಿ ಭಾರತವು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಹೊರಹೊಮ್ಮಿದೆ.

9. ನ್ಯಾಯಿಕ ವಿಮರ್ಶೆ

ನ್ಯಾಯಿಕ ವಿಮರ್ಶೆಯಲ್ಲಿ ಭಾರತ ಸಂವಿಧಾನದ ಪ್ರಮುಖ ಲಕ್ಷಣಗಳಲ್ಲೊಂದಾಗಿದೆ. ನ್ಯಾಯಾಂಗವು ಶಾಸಕಾಂಗ ಮತ್ತು ಕಾರ್ಯಂಗಗಳ ಅಧಿಕಾರ ಹಾಗೂ ಕಾರ್ಯಗಳ ಸಂವಿಧಾನ ಬದ್ದತೆಯನ್ನು ವಿಮರ್ಶಿಸುವ ಅಧಿಕಾರವನ್ನು ಹೊಂದಿದೆ. ಸಂವಿಧಾನವನ್ನು ಉಲ್ಲಂಘಿಸುವ ಶಾಸಕಾಂಗದ ಕಾನೂನುಗಳನ್ನು ನ್ಯಾಯಾಂಗವು ಸಂವಿಧಾನ ಬಾಹಿರ ಬಾಹಿರ, ಅಸಿಂಧು ಎಂದು ಘೋಷಿಸುತ್ತದೆ. ನ್ಯಾಯಾಂಗ ವ್ಯವಸ್ಥೆಯು ಸ್ವತಂತ್ರವಾಗಿರಲು ಕಾರಣಗಳು.

ನೇಮಕಾತಿ ವಿಧಾನ

• ನಿವೃತ್ತಿಯ ನಂತರ ವಕೀಲ ವೃತ್ತಿಯಿಂದ ನಿಷೇಧ.

• ವೇತನ ಮತ್ತು ಭತ್ಯೆಗಳನ್ನು ದೇಶದ ಸಂಚಿತ ನಿಧಿಯಿಂದ ಭರಿಸಲಾಗುತ್ತದೆ.

• ನ್ಯಾಯಾಧೀಶರ ವರ್ತನೆಗಳನ್ನು ಸಂಸತ್ತಿನ ಒಳಗೆ ಮತ್ತು ಹೊರಗೆ ಚರ್ಚಿಸುವಂತಿಲ್ಲ.

10. ಏಕಪೌರತ್ವ

ಭಾರತ ಸಂವಿಧಾನಕ್ಕೆ ಏಕಪೌರತ್ವವನ್ನು ಬ್ರಿಟಿಷ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ. ಭಾರತದಲ್ಲಿ ಒಬ್ಬ ವ್ಯಕ್ತಿ ರಾಷ್ಟ್ರೀಯ ಪೌರತ್ವವನ್ನು ಹೊಂದಿದ್ದಾನೆಯೇ ಹೊರತು ರಾಜ್ಯದ ಪೌರತ್ವವನ್ನು ಹೊಂದಿರುವುದಿಲ್ಲ. ಭಾರತೀಯರಲ್ಲಿ ಏಕತೆ, ಸಮಗ್ರತೆ ಮತ್ತು ಅವಿಭಜಿತ ನಿಷ್ಠೆ ಮುಂತಾದ ಉದಾತ್ತ ಮನೋಭಾವನೆಗಳನ್ನು ಬೆಳೆಸಲು ಏಕಪೌರತ್ವ ಪದ್ದತಿಯು ಪೂರಕವಾಗಿದೆ.

11. ಪ್ರಜಾಪ್ರಭುತ್ವ

ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತ ದೇಶದಲ್ಲಿ ಸಾರ್ವತ್ರಿಕ, ವಯಸ್ಕ ಮತದಾನ ಪದ್ದತಿ ಮೂಲಕ ಚುನಾಯಿತರಾದ ಜನಪ್ರತಿನಿಧಿಗಳು ಪ್ರಜೆಗಳ ಪರವಾಗಿ ರಾಜ್ಯಾಡಳಿತದಲ್ಲಿ ಭಾಗವಹಿಸುತ್ತಾರೆ (326ನೇ ವಿಧಿ), ಹೀಗೆ ಪ್ರಜೆಗಳು ಆಡಳಿತದಲ್ಲಿ ಪರೋಕ್ಷವಾಗಿ ಭಾಗವಹಿಸುವುದನ್ನು ಕಾಣಬಹುದು.

12. ಜಾತ್ಯಾತೀತತೆ

1976ರ ಸಂವಿಧಾನದ 42ನೇ ತಿದ್ದುಪಡಿ ಕಾಯ್ದೆಯ ಮೂಲಕ ಜಾತ್ಯಾತೀತ ಎಂಬ ಪದವನ್ನು ಸಂವಿಧಾನಕ್ಕೆ ಸೇರಿಸಲಾಯಿತು. ಸಂವಿಧಾನದ 25ರಿಂದ 28ನೇ ವಿಧಿಯು ಧಾರ್ಮಿಕ ಸ್ವಾತಂತ್ರಕ್ಕೆ ಅವಕಾಶವನ್ನು ಕಲ್ಪಿಸುತ್ತದೆ. ಭಾರತವು ಒಂದು ಜಾತ್ಯಾತೀತ ರಾಷ್ಟ್ರವಾಗಿದೆ. ಭಾರತವು ತನ್ನದೇ ಆದ ರಾಷ್ಟ್ರಧರ್ಮವನ್ನು ಹೊಂದಿಲ್ಲ, ನಮ್ಮ ದೇಶದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣಲಾಗುತ್ತದೆ. ಸರ್ಕಾರವು ಪ್ರಜೆಗಳ ಧಾರ್ಮಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಸಂವಿಧಾನವು ತನ್ನ ಪ್ರಜೆಗಳಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ, ಆದ್ದರಿಂದ ಒಬ್ಬ ಭಾರತೀಯನು ತನ್ನ ಮನಸಾಕ್ಷೆಗನುಗುಣವಾಗಿ ಯಾವುದೇ ಧರ್ಮವನ್ನು ಪಾಲಿಸುವ, ಆರಾಧಿಸುವ ಹಾಗೂ ಪ್ರಚಾರಪಡಿಸುವ ಸ್ವಾತಂತ್ರ್ಯ ಹೊಂದಿದ್ದಾನೆ.

13. ಸಾರ್ವಭೌಮ ರಾಷ್ಟ್ರ

ಭಾರತವು ಒಂದು ಸಾರ್ವಭೌಮ ರಾಷ್ಟ್ರವಾಗಿದೆ. ಇದು ಆಂತರಿಕ ಶ್ರೇಷ್ಠತೆಯನ್ನು ಹಾಗೂ ಬಾಹ್ಯ ಸ್ವಾತಂತ್ರ್ಯವನ್ನು ಪಡೆದುಕೊಂಡಿದೆ. ಅಂದರೆ ನಮ್ಮ ರಾಷ್ಟ್ರವು ಆಂತರಿಕವಾಗಿ ಸರ್ವೋಚ್ಚ ಅಧಿಕಾರವನ್ನು ಹಾಗೂ ಬಾಹ್ಯವಾಗಿ ಅನ್ಯ ರಾಷ್ಟ್ರಗಳಿಂದ ಸಂಪೂರ್ಣ ಸ್ವತಂತ್ರವನ್ನು ಪಡೆದಿದೆ. ಆದ್ದರಿಂದ ಭಾರತವು ತನ್ನದೇ ಆದ ಸ್ವತಂತ್ರ ವಿದೇಶಾಂಗ ನೀತಿಯನ್ನು ಪಾಲಿಸಬಹುದು.

14. ಗಣರಾಜ್ಯ

ರಾಷ್ಟ್ರದ ಮುಖ್ಯಸ್ಥರನ್ನು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಚುನಾಯಿಸುವ ರಾಜಕೀಯ ವ್ಯವಸ್ಥೆಯನ್ನು ಗಣರಾಜ್ಯ ಎಂದು ಕರೆಯಲಾಗುತ್ತದೆ. ಭಾರತದ ಸಂವಿಧಾನಕ್ಕೆ ಗಣರಾಜ್ಯವನ್ನು ಐರ್ಲೆಂಡ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ. ಭಾರತದ ಮುಖ್ಯಸ್ಥರಾದ ರಾಷ್ಟ್ರಾಧ್ಯಕ್ಷರನ್ನು ಪರೋಕ್ಷ ಚುನಾವಣೆಯಿಂದ ಆಯ್ಕೆ ಮಾಡುವುದರಿಂದ ಭಾರತವು ಒಂದು ಗಣರಾಜ್ಯವಾಗಿದೆ. ‘ಗಣರಾಜ್ಯ’ ಎಂಬ ಪದವು ಭಾರತ ಸರ್ಕಾರದ ಯಾವುದೇ ಅನುವಂಶೀಯ ರಾಜ ಅಥವಾ ರಾಣಿಯ ಆಳ್ವಿಕೆಗೆ ಒಳಪಟ್ಟಿಲ್ಲ ಎಂಬುದನ್ನು ಸೂಚಿಸುತ್ತದೆ.

15. ತುರ್ತುಪರಿಸ್ಥಿತಿ

ಭಾರತ ಸಂವಿಧಾನಕ್ಕೆ ತುರ್ತು ಪರಿಸ್ಥಿತಿಯನ್ನು ಜರ್ಮನಿಯ ಸಂವಿಧಾನದಿಂದ ಎರವಲು ಪಡಯಲಾಗಿದೆ. ರಾಷ್ಟ್ರದ ಆರ್ಥಿಕ ಸ್ಥಿರತೆಗೆ ಧಕ್ಕೆಯಾದಗಿದಾಗ ರಾಷ್ಟ್ರಾಧ್ಯಕ್ಷರು ಆರ್ಥಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಬಹುದು. ರಾಷ್ಟ್ರಾಧ್ಯಕ್ಷರು ಸಂಧಿಗ್ದ ಪರಸ್ಥಿತಿಗಳಲ್ಲಿ ಮೂರು ಬಗೆಯ ತುರ್ತು ಪರಿಸ್ಥಿತಿಗಳನ್ನು ಘೋಷಿಸುವ ಅಧಿಕಾರವನ್ನು ಹೊಂದಿದ್ದಾರೆ. ರಾಷ್ಟ್ರಾಧ್ಯಕ್ಷರು ವಿದೇಶಿ ಆಕ್ರಮಣ, ಸಶಸ್ತ್ರ ಬಂಡಾಯ, ಯುದ್ಧ ಈ ಕಾರಣಗಳಿಂದ ರಾಷ್ಟ್ರೀಯ ಭದ್ರತೆಗೆ ಗಂಡಾಂತರ ಒದಗಬಹುದು ಎಂದು ಭಾವಿಸಿದಲ್ಲಿ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಘೋಷಿಸಬಹುದು. ಸಂವಿಧಾನಾತ್ಮಕ ಯಂತ್ರವು ಕುಸಿದು ಬಿದ್ದ ರಾಜ್ಯಗಳಲ್ಲಿ ರಾಷ್ಟ್ರಾಧ್ಯಕ್ಷರು ತಮ್ಮ ಆಳ್ವಿಕೆಯನ್ನು ಘೋಷಿಸಬಹುದು.

1962ರಲ್ಲಿ ಭಾರತ ಮತ್ತು ಚೀನಾದ ನಡುವೆ ಹಾಗೂ 1971ರಲ್ಲಿ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ದಗಳು ನಡೆದಾಗ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಘೋಷಿಸಲಾಯಿತು.
1975ರಲ್ಲಿ ಆಂತರಿಕ ಗಲಭೆಯ ಕಾರಣದಿಂದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.

16. ಪಂಚಾಯತ್ ರಾಜ್ ವ್ಯವಸ್ಥೆ

73ನೇಯ ತಿದ್ದುಪಡಿ ಕಾಯ್ದೆಯ ಮೂಲಕ 1993ರಲ್ಲಿ ಹೊಸ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಯು 3 ಹಂತದ ಪಂಚಾಯತ್ ರಾಜ್ ವ್ಯವಸ್ಥೆಗೆ ಅವಕಾಶ ಮಾಡಿಕೊಟ್ಟಿದೆ. ಗ್ರಾಮ ಮಟ್ಟಗಳಲ್ಲಿ ಗ್ರಾಮ ಪಂಚಾಯತಿ, ತಾಲ್ಲೂಕು ಮಟ್ಟಗಳಲ್ಲಿ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಮಟ್ಟಗಳಲ್ಲಿ ಜಿಲ್ಲಾ ಪಂಚಾಯತಿಗಳು ಇವೆ. 73ನೇಯ ತಿದ್ದುಪಡಿ ಕಾಯ್ದೆಯು ಭಾರತದ ಗ್ರಾಮೀಣ ಸ್ಥಳೀಯ ಸರ್ಕಾರಗಳ ಇತಿಹಾಸದಲ್ಲಿ ಒಂದು ಮಹತ್ವದ ಮೈಲಿಗಲ್ಲು.

17. ದ್ವಿಸದನ ಶಾಸಕಾಂಗ ಪದ್ದತಿ

ಶಾಸಕಾಂಗವಾದ ಸಂಸತ್ತು ದ್ವಿಸದನ ಪದ್ದತಿಯ ಆಧಾರದ ಮೇಲೆ ರಚನೆಯಾಗಿದೆ. ಆದ್ದರಿಂದ ಇದು ಕೆಳಮನೆ ಮತ್ತು ಮೇಲ್ಮನೆ ಎಂಬ ಎರಡು ಸದನಗಳನ್ನು ಹೊಂದಿದೆ. ಸಂಸತ್ತಿನ ಕೆಳಮನೆಯಾದ ಲೋಕಸಭೆ ಜನರನ್ನು ಪ್ರತಿನಿಧಿಸಿದರೆ, ಮೇಲ್ಮನೆಯಾದ ರಾಜ್ಯಸಭೆಯ ರಾಜ್ಯಗಳನ್ನು ಪ್ರತಿನಿಧಿಸುತ್ತದೆ. ಭಾರತದ ಸಂವಿಧಾನಕ್ಕೆ ದ್ವಿಸದನ ಶಾಸಕಾಂಗ ಪದ್ದತಿಯನ್ನು ಬ್ರಿಟಿಷ್ ಸಂವಿಧಾನದಿಂದ ಎರವಲು ಪಡೆಯಲಾಗಿದೆ.

18. ಸಂಯುಕ್ತ ಪದ್ದತಿ

ಭಾರತ ಸರ್ಕಾರ ಕಾಯ್ದೆ, 1935ರಿಂದ ಸಂಯುಕ್ತ ಪದ್ದತಿಯನ್ನು ಭಾರತದ ಸಂವಿಧಾನಕ್ಕೆ ಸೇರಿಸಲಾಯಿತು. ಭಾರತ ಸಂವಿಧಾನವು ಒಕ್ಕೂಟ ವ್ಯವಸ್ಥೆಗೆ ಅವಕಾಶವನ್ನು ಕಲ್ಪಿಸುತ್ತದೆ. ಒಕ್ಕೂಟ ವ್ಯವಸ್ಥೆ ಎಂದರೆ, ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ಅಧಿಕಾರದ ಹಂಚಿಕೆಯಾಗಿದೆ. ಭಾರತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಂವಿಧಾನಾತ್ಮಕವಾದ ಅಧಿಕಾರ ವಿಭಜನೆಯನ್ನು ಕಾಣಬಹುದು. ವಿದೇಶಾಂಗ ವ್ಯವಹಾರ, ರಕ್ಷಣೆ, ಅಂತರಾಜ್ಯ ವ್ಯಾಪಾರ, ರೇಲ್ವೆ, ಅಂಚೆ ಮತ್ತು ತಂತಿ, ನಾಗರಿಕ ವಿಮಾನಯಾನ, ಆದುದು ಮತ್ತು ರಫ್ತು ಮುಂತಾದ ರಾಷ್ಟ್ರಿಯ ಮಹತ್ವವನ್ನು ಪಡೆದ 99 ವಿಷಯಗಳಿಗೆ ಸಂಬಂಧಿಸಿದಂತೆ ಕಾಯ್ದೆಯನ್ನು ರೂಪಿಸುವ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ. ಸಾರ್ವಜನಿಕ ಆರೋಗ್ಯ, ಪೋಲಿಸ್, ಬಂಧೀಖಾನೆ, ಸಾರ್ವಜನಿಕ ಶಾಂತಿಪಾಲನೆ, ವಾಣಿಜ್ಯ ತೆರಿಗೆ, ಮುಂತಾದ ಸ್ಥಳೀಯ ಮಹತ್ವ ಪಡೆದ 61 ವಿಷಯಗಳಿಗೆ ಸಂಬಂಧಿಸಿದಂತೆ ಕಾಯ್ದೆ ರೂಪಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading
Advertisement

Title

ದಿನದ ಸುದ್ದಿ8 hours ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ2 days ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ1 week ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ1 week ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ1 week ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ1 week ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ1 week ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ1 week ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ1 week ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ1 week ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

Trending