ಬಹಿರಂಗ
ಬದಲಾಗುತ್ತಿರುವ ಭಾರತದಲ್ಲಿ ಮಾಧ್ಯಮವೆಂಬೋ ಮಾಂತ್ರಿಕ
- ನಾ ದಿವಾಕರ
ಭಾರತ ಬದಲಾಗುತ್ತಿದೆ. ಸಾಂಸ್ಕೃತಿಕ ರಾಷ್ಟ್ರೀಯತೆ ಮತ್ತು ಮಾರುಕಟ್ಟೆ ಬಂಡವಾಳದ ಸುಳಿಯಲ್ಲಿ ಸಿಲುಕಿ ಉನ್ಮತ್ತ ಸ್ಥಿತಿ ತಲುಪಿರುವ ಭಾರತದ ಒಂದು ವರ್ಗ ಈ ಬದಲಾದ ಭಾರತದ ರಾಯಭಾರಿಯಂತೆ ಕಾಣುತ್ತಿದೆ. ಕೋವಿದ್ 19 ಸಂದರ್ಭದಲ್ಲಿ ಬದಲಾಗುತ್ತಿರುವ ಭಾರತದ ವಿಭಿನ್ನ ಮಜಲುಗಳು ಸಾರ್ವಜನಿಕ ಬದುಕಿನಲ್ಲಿ ಹಂತಹಂತವಾಗಿ ತೆರೆದುಕೊಳ್ಳುತ್ತಿವೆ. 2019ರ ಉತ್ತರಾರ್ಧದಲ್ಲಿ ದೇಶಾದ್ಯಂತ ಸೃಷ್ಟಿಯಾದ ಸಾಮಾಜಿಕ ಪ್ರಕ್ಷುಬ್ಧತೆ, ಸಾಂಸ್ಕೃತಿಕ ಉನ್ಮಾದ ಮತ್ತು ರಾಜಕೀಯ ಪಲ್ಲಟಗಳ ನಡುವೆಯೇ ಭಾರತ ಕೊರೋನಾ ದಾಳಿಗೆ ಸಿಲುಕಿ ದಿಕ್ಕುಗಾಣದ ದೆಸೆಯಲ್ಲಿ ನಿಂತಿದೆ.
ಭಾರತದ ಮಟ್ಟಿಗೆ ಹೇಳುವುದಾದರೆ ಕೊರೋನಾ ಸತ್ಯ ದರ್ಶನದ ಹೆಬ್ಬಾಗಿಲಿನಂತೆ ಕಾಣುತ್ತಿದೆ. ಆಳುವ ವರ್ಗಗಳ ದೃಷ್ಟಿಯಲ್ಲಿ ನಿಕೃಷ್ಟರಾಗಿದ್ದ ಬೃಹತ್ ಜನಸಮುದಾಯ ಇಂದು ತನ್ನ ಅಸ್ತಿತ್ವವನ್ನು ರಕ್ಷಿಸಿಕೊಳ್ಳಲು, ತನ್ನ ಅಸ್ಮಿತೆಯನ್ನು ಗುರುತಿಸಿಕೊಳ್ಳಲು ಎದ್ದು ನಿಂತಿದೆ.
ಈ ಜನಸಮುದಾಯಗಳ ಒಳಗಿನಿಂದಲೇ “ ಅನ್ಯರನ್ನು ” ಗುರುತಿಸಿ ಸ್ವಚ್ಚ ಭಾರತವನ್ನು ನಿರ್ಮಿಸುವ ಕನಸು ಕಾಣುತ್ತಿದ್ದ ಬೌದ್ಧಿಕ-ರಾಜಕೀಯ ವಲಯಕ್ಕೆ ತಮ್ಮ ಆಂತರ್ಯವನ್ನು ಸ್ವಚ್ಚಗೊಳಿಸಿಕೊಳ್ಳಬೇಕಾದ ಸಂದರ್ಭ ಎದುರಾಗಿದೆ.
ಕೊರೋನಾ ಸಮಾಜದ ಎಲ್ಲ ವರ್ಗಗಳನ್ನೂ ಕಾಡುತ್ತಿದೆ ಆದರೆ ಕೊರೋನಾದಿಂದ ಉದ್ಭವಿಸಿರುವ ಸಾವು ಬದುಕಿನ ಸಂಘರ್ಷ ಕೆಲವೇ ವರ್ಗಗಳನ್ನು ಮುನ್ನೆಲೆಗೆ ತಂದಿದೆ. ಈ ಸಂಘರ್ಷದ ನೆಲೆಯಲ್ಲೇ ಭಾರತೀಯ ಸಮಾಜದ ಪ್ರಜ್ಞಾವಂತ ಮನಸುಗಳು ಪ್ರಬುದ್ಧ ಭಾರತದ ಕನಸು ಕಾಣಬೇಕಿದೆ.
ನಾವು ಕೊರೋನಾ ವಿರುದ್ಧ ಯುದ್ಧ ಮಾಡುತ್ತಿದ್ದೇವೆ ಎನ್ನುವ ಒಂದು ಚಿಂತನೆ ನಮ್ಮ ಸೂಕ್ಷ್ಮತೆಯನ್ನು ಮತ್ತಷ್ಟು ಹರಿತಗೊಳಿಸಬೇಕಿತ್ತು. ಆದರೆ ಈ ಯುದ್ಧ ಎನ್ನುವ ಪದ ಅಕ್ಷರಶಃ ರಣರಂಗದ ಪರಿಭಾಷೆಯಲ್ಲಿ ವ್ಯಕ್ತವಾಗುತ್ತಿದ್ದು ಶತ್ರು-ಮಿತ್ರರ ಶೋಧಕ್ಕೆ ಕಾರಣವಾಗುತ್ತಿರುವುದನ್ನು ಗಮನಿಸುತ್ತಲೇ ಬಂದಿದ್ದೇವೆ.
ಇದರ ಒಂದು ಅಕ್ಷರತುಣುಕು ಪ್ರಜಾವಾಣಿ ಪತ್ರಿಕೆಯ ಸಂದರ್ಶನವೊಂದರಲ್ಲಿ ಕಂಡುಬರುತ್ತದೆ. ಸಂಘಪರಿವಾರದ ವಕ್ತಾರ ದತ್ತಾತ್ರೇಯ ಹೊಸಬಾಳೆಯವರೊಡನೆ ಪತ್ರಿಕೆ ನಡೆಸಿದ ಸಂದರ್ಶನವನ್ನು ನೋಡಿದಾಗ ಭಾರತದ ಸಾಂಸ್ಕೃತಿಕ ರಾಜಕಾರಣ ಒಂದು ವೈರಾಣುವನ್ನೂ ಆವಾಹನೆ ಮಾಡುವಷ್ಟು ಬಲಿಷ್ಟವಾಗಿದೆ ಎನ್ನುವುದು ಸ್ಪಷ್ಟವಾಗುತ್ತದೆ.
ಸಾಂಸ್ಕೃತಿಕ ರಾಜಕಾರಣದ ಪರಿಭಾಷೆಗೆ ನಾವು ಒಗ್ಗಿಹೋಗಿದ್ದೇವೆ. ಸದಾ ರಣರಂಗದ ಗುಂಗಿನಲ್ಲೇ ಇರುವ ಉನ್ಮತ್ತ ಮನಸುಗಳು ಇಲ್ಲದ ಶತ್ರುಗಳನ್ನು ಹುಡುಕುತ್ತಲೇ ತಮ್ಮೊಳಗಿನ ವೈರತ್ವದ ಭಾವನೆಯನ್ನು ಮತಧಾರ್ಮಿಕ ಕುಲುಮೆಗಳಲ್ಲಿ ಬೇಯಿಸುತ್ತಿರುತ್ತವೆ. ಕಳೆದ ಮೂರು ದಶಕಗಳಲ್ಲಿ ಭಾರತ ಕಂಡಿರುವ ದುರಂತ ಇದು.
ಈ ದುರಂತದ ಸೋದರ ಸಂಬಂಧಿಯಾಗಿ ಹಣಕಾಸು ಬಂಡವಾಳ ವ್ಯವಸ್ಥೆ ಅಗೋಚರ ಪ್ರಪಂಚವೊಂದನ್ನು ಸೃಷ್ಟಿಸಿಬಿಟ್ಟಿದೆ. ಕೊರೋನಾ ಕೃಪೆಯಿಂದ ಈ ಪ್ರಪಂಚ ಇಂದು ನಮ್ಮ ಕಣ್ಣೆದುರು ನಿಂತಿದೆ. ದೇಶದ ಬಹುಸಂಖ್ಯಾತ ಪ್ರಜೆಗಳನ್ನು ಪ್ರತಿನಿಧಿಸುವ ಈ ಪ್ರಪಂಚ ನಮ್ಮ ಮುಂದಿನ ದಿನಗಳಲ್ಲಿ ನಿರ್ಣಾಯಕ ನೆಲೆ ತಲುಪಲಿದೆ.
ಪ್ರಜಾವಾಣಿಗೆ ನೀಡಿದ ಸಂದರ್ಶನದಲ್ಲಿ ದತ್ತಾತ್ರೇಯ ಹೊಸಬಾಳೆಯವರ ಮೂರು ಅಭಿಪ್ರಾಯಗಳು ಪ್ರಜಾತಂತ್ರದ ಪ್ರಜ್ಞೆಗೆ ಘಾಸಿ ಉಂಟುಮಾಡುತ್ತವೆ. 9/11ರ ಸಂದರ್ಭದಲ್ಲಿ ಅಮೆರಿಕದ ವಿರೋಧ ಪಕ್ಷಗಳು ಸರ್ಕಾರದ ಬೆನ್ನಿಗೆ ನಿಂತಿದ್ದವು, 1971ರ ಯುದ್ಧದ ಸಂದರ್ಭದಲ್ಲಿ ವಾಜಪೇಯಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು.
ಮತ್ತು ಲಾಕ್ ಡೌನ್ ಸಂದರ್ಭದಲ್ಲಿ ಭಾರತದಲ್ಲಿ ಮಿಲಿಟರಿಯನ್ನು ಬಳಸುವ ಪರಿಸ್ಥಿತಿ ಎದುರಾಗಲಿಲ್ಲ ಎಂದು ಜನರನ್ನು ಅಭಿನಂದಿಸಿದ್ದಾರೆ. ಈ ಮೂರು ವಾಕ್ಯಗಳಲ್ಲೂ ಕೊರೋನಾ ರಣಕೇಕೆ(ಸುದ್ದಿಮನೆಯ ಪರಿಭಾಷೆಯಲ್ಲಿ) ಮತ್ತು ಸಾಂಸ್ಕೃತಿಕ ರಾಜಕಾರಣದ ರಣೋತ್ಸಾಹದ ಛಾಯೆ ಕಂಡುಬರುತ್ತದೆ.
ಸಂದರ್ಶನ ನೀಡಿದ ವ್ಯಕ್ತಿ ಯಾರು ಎನ್ನುವುದಕ್ಕಿಂತಲೂ, ಒಂದು ಸಂಘಟನೆಯ ಸದಸ್ಯರಿಗೆ ಸಮಸ್ತ ಭಾರತೀಯರ ರಾಯಭಾರಿಯಾಗಿ ಮಾತನಾಡುವ ಅವಕಾಶ ನೀಡಿದ ಮಾಧ್ಯಮದ ನಡೆ ಇಲ್ಲಿ ಪ್ರಶ್ನಾರ್ಹವಾಗುತ್ತದೆ. ದತ್ತಾತ್ರೇಯ ಅವರ ಅಭಿಪ್ರಾಯಗಳು ವೈಯಕ್ತಿಕ-ತಾತ್ವಿಕ ಮತ್ತು ಸಂಘಟನಾತ್ಮಕ ನೆಲೆಯಲ್ಲಿ ವ್ಯಕ್ತವಾಗುವಂತಹುದು.
ಅವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸೋಣ. ಪತ್ರಿಕೆಯ ಸಂಪಾದಕ ಮಂಡಲಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನೂ ಮನ್ನಿಸೋಣ. ಆದರೆ ರಾಜ್ಯದ ಪ್ರತಿಷ್ಠಿತ ಸುದ್ದಿ ಪತ್ರಿಕೆಯೊಂದರ ಮುಖಪುಟದಲ್ಲಿ ಇಂತಹ ಅಭಿಪ್ರಾಯಗಳು ವಿಜೃಂಭಿಸಿದಾಗ ಪ್ರಜ್ಞಾವಂತ ಮನಸುಗಳಿಗೆ ಆತಂಕ ಉಂಟಾಗುವುದು ಸಹಜ. ಇತರ ಯಾವುದೇ ಪತ್ರಿಕೆಯಲ್ಲಿ ಈ ಸಂದರ್ಶನ ಪ್ರಕಟವಾಗಿದ್ದರೂ ನಿರ್ಲಕ್ಷಿಸಬಹುದಿತ್ತೇನೋ.
ಇರಲಿ, ಇಲ್ಲಿ ಸಮಸ್ಯೆ ಇರುವುದು ಒಂದು ಪತ್ರಿಕೆ ಅಥವಾ ಒಬ್ಬ ವ್ಯಕ್ತಿಯಲ್ಲಿ ಅಲ್ಲ. ಭಾರತದ ಪ್ರಜಾತಂತ್ರ ವ್ಯವಸ್ಥೆ ಎದುರಿಸುತ್ತಿರುವ ಸವಾಲು ಇಂತಹ ಸೂಕ್ಷ್ಮ ಸಂಗತಿಗಳನ್ನೂ ನಿಷ್ಕರ್ಷೆಗೊಡ್ಡುವ ಅನಿವಾರ್ಯತೆಯನ್ನು ಸೃಷ್ಟಿಸಿದೆ.
ನಾವು ಇಂದು ಮಾಧ್ಯಮ ಎಂದು ಭಾವಿಸುವ ವಿದ್ಯುನ್ಮಾನ ಸುದ್ದಿಮನೆಗಳು, ಮುದ್ರಣ ಲೋಕದ ಸುದ್ದಿ ಪತ್ರಿಕೆಗಳು ಮತ್ತು ಸಾಮಾಜಿಕ ತಾಣಗಳು ಪ್ರಜಾತಂತ್ರ ವ್ಯವಸ್ಥೆಯ ಆಧಾರ ಸ್ತಂಭಗಳು ಎನ್ನುವ ಭ್ರಮೆ ನಮ್ಮಿಂದ ಇನ್ನೂ ದೂರವಾಗದೆ ಉಳಿದಿರುವುದೇ ಅಚ್ಚರಿಯ ಸಂಗತಿ. ಬಹುಶಃ ನಮ್ಮ ಸಮಾಜದಲ್ಲಿ ತಾಳ್ಮೆ, ಸಹನೆ ತುಸು ಹೆಚ್ಚಾಗಿಯೇ ಇದೆ ಎನ್ನುವುದನ್ನು ಇದು ನಿರೂಪಿಸುತ್ತದೆ.
1990ರ ಸಂದರ್ಭದ ಸಾಂಸ್ಕೃತಿಕ ರಾಜಕಾರಣ ಮತ್ತು ಜಾಗತಿಕ ಬಂಡವಾಳದ ಪ್ರಹಾರದಿಂದ ಚೇತರಿಸಿಕೊಳ್ಳುವ ಮುನ್ನವೇ ನಮಗೆ ಸತ್ಯದರ್ಶನವಾಗಿದ್ದರೆ ಅದಕ್ಕೆ ಕೊರೋನಾ ಕಾರಣವಾಗಿದೆ. ಒಂದು ವರ್ಷದ ಹಿಂದೆ ದೇಶವ್ಯಾಪಿ ರಾಜಕೀಯ ಸಂಕಥನದ ಕೇಂದ್ರ ಬಿಂದು ಆಗಿದ್ದ “ ವಲಸಿಗರು ” ಇಂದೂ ಸಹ ಸಮಾಜೋ ರಾಜಕೀಯ ಸಂಕಥನದ ಕೇಂದ್ರ ಬಿಂದು ಆಗಿದ್ದಾರೆ.
ಅಂದು ನಿಕೃಷ್ಟರಾಗಿ ನಿರ್ಲಕ್ಷ್ಯಕ್ಕೆ ಅರ್ಹರಾಗಿದ್ದ ಈ ಸಮುದಾಯ ಇಂದು ಕಾಳಜಿ, ಕಳಕಳಿಗೆ ಅರ್ಹತೆ ಪಡೆದಿದ್ದರೂ, ಒಂದು ನೆಲೆಯಲ್ಲಿ ನಿಕೃಷ್ಟರಾಗಿಯೇ ಕಾಣುತ್ತಿದ್ದಾರೆ. ಈ ಅಂಶವನ್ನು ಬದಿಗಿಟ್ಟು ನೋಡಿದಾಗ, ಕೊರೋನಾ ಸಂದರ್ಭದಲ್ಲಿ ನಮಗೆ ಈ ದೇಶದ ಮುದ್ರಣ ಲೋಕ ಮತ್ತು ಡಿಜಿಟಲ್ ಲೋಕದ ಸುದ್ದಿಮನೆಗಳು ದಿನನಿತ್ಯ ಕಾಡುತ್ತವೆ.
ಪ್ರಜಾತಂತ್ರ ವ್ಯವಸ್ಥೆಯ ನಾಲ್ಕನೆಯ ಸ್ತಂಭ ಎನ್ನುವ ಪ್ರತಿಷ್ಠಿತ ಸ್ಥಾನ ಪಡೆದಿರುವ ಈ ಜಗತ್ತು ಇಂದು, ಈ ಆಶಯದ ಆಂತರ್ಯವನ್ನೇ ಮರೆತಂತೆ ಕಾಣುತ್ತಿರುವುದು ದುರಂತ. ಪ್ರಜಾವಾಣಿಯಲ್ಲಿನ ಒಂದು ಸಂದರ್ಶನ ಆಕ್ಷೇಪಾರ್ಹವಾಗಿ ಕಾಣುವುದು ಇಲ್ಲಿಯೇ.
ಮಾಧ್ಯಮ ಲೋಕದಲ್ಲಿ ಸ್ವತಂತ್ರ , ಸ್ವಾಯತ್ತ ಮತ್ತು ನಿಷ್ಪಕ್ಷಪಾತ ಧೋರಣೆಯನ್ನೇ ಮೂಲಮಂತ್ರವಾಗಿ ಭಾವಿಸುವ ಪರಂಪರೆಗೆ ಬಹುಶಃ ನಾವು ವಿದಾಯ ಹೇಳಿದ್ದೇವೆ ಎನಿಸುತ್ತದೆ. ವ್ಯವಸ್ಥೆ, ಪ್ರಭುತ್ವ ಮತ್ತು ಆಡಳಿತಾರೂಢ ಸರ್ಕಾರ ಈ ಮೂರರ ನಡುವಿನ ಅಂತರ, ವ್ಯತ್ಯಾಸ ಮತ್ತು ಕಂದರವನ್ನು ಮೂಲತಃ ಮಾಧ್ಯಮಗಳು ಬಿಂಬಿಸಬೇಕಾಗುತ್ತದೆ.
ಹಾಗಾದಲ್ಲಿ ಮಾತ್ರ ಸರ್ಕಾರದ ಕ್ರಮಗಳಿಂದ ಅಸಮಧಾನ ಹೊಂದಿರುವ, ಪ್ರಭುತ್ವದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ, ವ್ಯವಸ್ಥೆಯ ಲೋಪಗಳ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುವ ಸೂಕ್ಷ್ಮ ಮನಸುಗಳಿಗೆ ಅಕ್ಷರಗಳ ಮೂಲಕ, ಮಾತುಗಳ ಮೂಲಕ ಸ್ಪಂದಿಸಲು ಸಾಧ್ಯ. ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಈ ಸೂಕ್ಷ್ಮತೆಯನ್ನು ಕಳೆದುಕೊಂಡಿರುವುದು ಈ ಕಾಲಘಟ್ಟದ ದುರಂತ.
ತತ್ವ, ಸಿದ್ಧಾಂತ, ನೀತಿ ಮತ್ತು ಮೌಲ್ಯ ಈ ನಾಲ್ಕೂ ಸಹ ಒಂದು ದೇಶದ ಬೌದ್ಧಿಕ ವಲಯದ ಆಸ್ತಿ. ಹಾಗೆಯೇ ದೇಶದ ಮುನ್ನಡೆಗೆ ಪೂರಕವಾಗಬಹುದಾದ ಬೌದ್ಧಿಕ , ಭೌತಿಕ ಸರಕುಗಳು. ಈ ಸರಕುಗಳನ್ನು ನಾವು ಯಾವ ನೆಲೆಯಲ್ಲಿ ನಿಂತು ಬಳಸುತ್ತೇವೆ, ಹೇಗೆ ನಿಷ್ಕರ್ಷೆ ಮಾಡುತ್ತೇವೆ, ಯಾವ ದಿಕ್ಕಿನಲ್ಲಿ ಇವುಗಳನ್ನು ಕೊಂಡೊಯ್ಯುತ್ತೇವೆ ಮತ್ತು ಯಾರ ಪರವಾಗಿ ಈ ನಾಲ್ಕೂ ನೆಲೆಗಳು ನಿಲ್ಲುತ್ತವೆ ಈ ಪ್ರಶ್ನೆಗಳು ಒಂದು ಪ್ರಬುದ್ಧ ಸಮಾಜವನ್ನು ಕಾಡಲೇಬೇಕು.
ಇವುಗಳಿಂದಾಚೆಗೂ ಒಂದು ಪ್ರಪಂಚ ಇದೆ ಎಂದಾದರೆ ಅದು ಅರಾಜಕತೆಯ ನೆಲೆಯಲ್ಲೇ ಇರಬೇಕಾಗುತ್ತದೆ. ಭಾರತ ಈ ನಾಲ್ಕೂ ವಿದ್ಯಮಾನಗಳನ್ನು ಶತಮಾನಗಳಿಂದ ಪರಸ್ಪರ ವಿರುದ್ಧ ನೆಲೆಗಳಲ್ಲಿ, ವೈರುಧ್ಯಗಳ ನಡುವೆ, ವಿರೋಧಾಭಾಸಗಳೊಡನೆ ಮತ್ತು ಸಾಪೇಕ್ಷ ನೆಲೆಗಳಲ್ಲಿ ಎದುರಿಸುತ್ತಲೇ ಬಂದಿದೆ.
1990ರ ನಂತರದಲ್ಲಿ ಈ ನೆಲೆಗಳು ಹೆಚ್ಚು ಸಾಪೇಕ್ಷತೆಯನ್ನು ಪಡೆದುಕೊಳ್ಳುತ್ತಿದ್ದು, ತಮ್ಮ ಅಂತಃಸತ್ವವನ್ನು ಕಳೆದುಕೊಳ್ಳುತ್ತಿರುವುದನ್ನು ಗಮನಿಸಿದ್ದೇವೆ. ವಾದಗಳ ಅಥವಾ ಇಸಂಗಳ ಸಂಘರ್ಷದಲ್ಲಿ ಈ ನಾಲ್ಕೂ ವಿದ್ಯಮಾನಗಳು ಯಾವುದೇ ನೆಲೆಯಲ್ಲಿ ನಿಂತರೂ ಜನಸಮುದಾಯಗಳ ಮೂಲ ಆಶಯಗಳು ಮತ್ತು ಸಮಷ್ಟಿ ಪ್ರಜ್ಞೆಯ ಸಂರಕ್ಷಣೆಯ ಅನಿವಾರ್ಯತೆ ಎದುರಾದಾಗ ಮಾನವೀಯತೆ ಎನ್ನುವ ಒಂದು ವಿದ್ಯಮಾನ ಗೋಚರಿಸಲೇಬೇಕಲ್ಲವೇ ?
ವಸುದೈವ ಕುಟುಂಬಕಂ ಎನ್ನುವ ಅಸ್ಪಷ್ಟ ಘೋಷವಾಕ್ಯಕ್ಕಿಂತಲೂ ವಿಶ್ವಮಾನವತೆ ಎನ್ನುವ ವಿಶಾಲ ಹೃದಯದ ಒಂದು ಪದ ನಮ್ಮ ಮನಸುಗಳಿಗೆ ಹತ್ತಿರವಾಗುವುದು ಈ ಕಾರಣಕ್ಕಾಗಿಯೇ ಅಲ್ಲವೇ ? ಇದು ಮಾಧ್ಯಮ ಜಗತ್ತಿನಿಂದ ಕಣ್ಮರೆಯಾಗುತ್ತಿದೆ.
ಇಲ್ಲಿ ಮಾಧ್ಯಮ ಜಗತ್ತು ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಕಂಡುಕೊಳ್ಳಬೇಕಿತ್ತು. ತನ್ನ ಅಸ್ತಿತ್ವ ಮತ್ತು ಅಸ್ಮಿತೆಗೂ, ಈ ದೇಶದ ಬಹುಸಂಖ್ಯೆಯ ಜನಸಮುದಾಯಗಳ ಅಸ್ತಿತ್ವ ಮತ್ತು ಅಸ್ಮಿತೆಗೂ ಅವಿನಾಭಾವ ಸಂಬಂಧ ಇದೆ, ಈ ಸಂಬಂಧವನ್ನು ಹೊಸೆಯುವ ಸೂಕ್ಷ್ಮ ತಂತುಗಳನ್ನು ನಿಷ್ಕ್ರಿಯಗೊಳಿಸಲು ಸಮಾಜೋ ರಾಜಕೀಯ ನೆಲೆಯಲ್ಲಿ ಮತ್ತು ಸಾಂಸ್ಕೃತಿಕ ನೆಲೆಯಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಸದಾ ಸಕ್ರಿಯವಾಗಿರುತ್ತವೆ ಎನ್ನುವ ಪ್ರಜ್ಞೆ ಮಾಧ್ಯಮ ಜಗತ್ತಿನಲ್ಲಿ ಸದಾ ಜಾಗೃತವಾಗಿರಬೇಕಿತ್ತು.
ಪ್ರಭುತ್ವ ಮತ್ತು ಸರ್ಕಾರ ಅಥವಾ ವ್ಯವಸ್ಥೆ ಈ ಬಹುಸಂಖ್ಯೆಯ ಜನಸಮುದಾಯಗಳನ್ನು ಪ್ರತಿನಿಧಿಸುವುದಿಲ್ಲ, ನಿಯಂತ್ರಿಸುತ್ತವೆ. ಈ ಪ್ರಾತಿನಿಧಿಕ ಹೊಣೆಯನ್ನು ಹೊರಬೇಕಾದುದು ಮಾಧ್ಯಮ ಲೋಕದ ಆದ್ಯತೆಯಾಗಬೇಕಲ್ಲವೇ ?
ಈ ಕೊರತೆಯ ವಿರಾಟ್ ಸ್ವರೂಪವನ್ನು ನಾವು ಕೊರೋನಾ ಸಂದರ್ಭದಲ್ಲಿ ಕಾಣುತ್ತಿದ್ದೇವೆ. ಹಣಕಾಸು ಬಂಡವಾಳ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳನ್ನೂ ಸೇರಿದಂತೆ ವ್ಯವಸ್ಥೆಯ ಎಲ್ಲ ಸಾಂಸ್ಥಿಕ ನೆಲೆಗಳೂ ಬಿಕರಿಯಾಗುತ್ತಿದ್ದರೂ, ತಾನು ಹರಾಜು ಮಾರುಕಟ್ಟೆಯ ಬಲಿಪೀಠದಲ್ಲಿ ತಲೆತಗ್ಗಿಸಿ ನಿಲ್ಲುವುದಿಲ್ಲ ಎನ್ನುವ ದಿಟ್ಟತನ ಮಾಧ್ಯಮ ಜಗತ್ತಿಗೆ ಇರಬೇಕಿತ್ತು. 1975ರ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಇದನ್ನು ಕಂಡಿದ್ದೇವೆ.
ಆದರೆ ಪರಿಸ್ಥಿತಿ ಏನೇ ಇದ್ದರೂ ಇಂದು ವಸ್ತುಸ್ಥಿತಿ ಬದಲಾಗಿದೆ. ಹಣಕಾಸು ಬಂಡವಾಳದ ಮಾರುಕಟ್ಟೆ ಅಧಿಪತ್ಯದೊಂದಿಗೆ, ಸಾಂಸ್ಕೃತಿಕ ರಾಜಕಾರಣ ಮತ್ತು ಜಾತಿ ರಾಜಕಾರಣದ ಕಬಂಧ ಬಾಹುಗಳು ಇಡೀ ವ್ಯವಸ್ಥೆಯನ್ನೇ ಆಕ್ರಮಿಸಿಕೊಂಡಿವೆ. ಪ್ರಭುತ್ವದ ನೆಲೆಗಳು ಈ ಅತಿಕ್ರಮಿತ ಕೋಟೆಯಲ್ಲಿ ಕಂಡುಬರುತ್ತಿವೆ. ಚುನಾಯಿತ ಸರ್ಕಾರಗಳು ತಮ್ಮ ಮೂಲ ನೆಲೆ ಮತ್ತು ಸೆಲೆ ಎರಡನ್ನು ಮರೆತು ಸ್ವಂತಿಕೆ ಕಳೆದುಕೊಂಡಿವೆ.
ಇಂತಹ ವಿಷಮ ಸ್ಥಿತಿಯಲ್ಲಿ 130 ಕೋಟಿ ಜನತೆಯ ಸೂಕ್ಷ್ಮ ಸಂವೇದನೆಗೆ ಸ್ಪಂದಿಸುವ ನೈತಿಕ ಹೊಣೆ ಮಾಧ್ಯಮ ಲೋಕದ ಮೇಲಿದೆ. ಕೆಂಪುಕೋಟೆಯ ಮೇಲಿನ ಛಾಯೆ ಮಾಧ್ಯಮ ಲೋಕದಲ್ಲಿ ಕತ್ತಲು ಆವರಿಸುವಂತೆ ಮಾಡುವ ಪರಂಪರೆ ಇಡೀ ಮಾಧ್ಯಮ ಜಗತ್ತನ್ನೇ ಬದಲಿಸಿಬಿಟ್ಟಿದೆ. ಬಿತ್ತರವಾಗಬೇಕಿದ್ದ ಸುದ್ದಿಗಳು ಉತ್ಪಾದನೆಯಾಗುತ್ತಿವೆ.
ಮಾಧ್ಯಮ ಲೋಕದ ಮಸೂರಗಳು ಸಿಕ್ಕುಗಳಿಗೆ ಸಿಲುಕಿ, ಸೂತ್ರ ಕಳೆದುಕೊಂಡಂತಾಗಿವೆ. ಪತ್ರಿಕೋದ್ಯಮದ ಕಣ್ಣೋಟ ಮತ್ತು ಮುನ್ನೋಟ ಮಸೂರದಲ್ಲೇ ಇರುತ್ತದೆ ಅಲ್ಲವೇ ? ಜನಸಾಮಾನ್ಯರ ನಾಡಿಮಿಡಿತವನ್ನು ಗ್ರಹಿಸಬೇಕಾದ ಮಾಧ್ಯಮ ಲೋಕ ಇಂದು ಉಸಿರುಗಟ್ಟಿರುವ ಸಮಾಜವನ್ನು ಅಕ್ಷರ ಸರಕು ಸಾಗಿಸುವ ಸಾಧನದಂತೆ ಬಳಸಿಕೊಳ್ಳುತ್ತಿದೆ. ಇದರ ನೇರ ಪರಿಣಾಮವನ್ನು ಕೊರೋನಾ ಸಂದರ್ಭದಲ್ಲೇ ಕಂಡಿದ್ದೇವೆ.
ಪ್ರಜಾತಂತ್ರ ಮೌಲ್ಯಗಳ ರಕ್ಷಣೆ ಮಾಧ್ಯಮ ಲೋಕದ ಮೌಖಿಕ ಅಭಿವ್ಯಕ್ತಿಯಿಂದ ಸಾಧ್ಯವಾಗುವಷ್ಟೇ ಅಕ್ಷರದಿಂದಲೂ ಸಾಧ್ಯವಾಗುತ್ತದೆ. ಸುದ್ದಿಮನೆಗಳ ಈ ಅಕ್ಷರಗಳು ಯಾವುದೇ ಚೌಕಟ್ಟಿನೊಳಗೆ ಬಂಧನಕ್ಕೊಳಗಾಗದೆ ಮುಕ್ತ ವಾತಾವರಣದಲ್ಲಿ ಹರಿದಾಡಿದಾಗ ಸಮಾಜದ ವಿಭಿನ್ನ ವರ್ಗಗಳು ಇವುಗಳ ನಡುವೆ ತಮ್ಮ ನೆಲೆ ಕಂಡುಕೊಳ್ಳುತ್ತವೆ.
ಶೋಷಿತ, ಅವಕಾಶವಂಚಿತ, ದಮನಿತ ಜನಸಮುದಾಯಗಳು ಈ ನೆಲೆಯಲ್ಲೇ ತಮ್ಮ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಗುರುತಿಸಿಕೊಳ್ಳುತ್ತವೆ. ಇದು ಪ್ರಜಾತಂತ್ರ ವ್ಯವಸ್ಥೆಯ ಬಲವರ್ಧನೆಗೆ ನೆರವಾಗುತ್ತದೆ. ಪತ್ರಿಕೋದ್ಯಮ ಎನ್ನುವ ಪದವನ್ನು ನಾವೆಷ್ಟೇ ಬಳಸಿದರೂ ಪತ್ರಿಕೆ ಉದ್ಯಮವಾಗುವುದನ್ನು ಸಹಿಸಲಾಗುವುದಿಲ್ಲ. ವಿದ್ಯುನ್ಮಾನ ಮಾಧ್ಯಮಗಳಿಗೂ ಇದು ಅನ್ವಯಿಸುತ್ತದೆ.
ಮಾಧ್ಯಮ ಲೋಕದಲ್ಲಿ ಮಾಂತ್ರಿಕ ಶಕ್ತಿ ಇದೆ. ಈ ಮಾಂತ್ರಿಕ ಶಕ್ತಿಯನ್ನು ಸಮಷ್ಟಿ ಪ್ರಜ್ಞೆಯ ನೆಲೆಯಲ್ಲಿ ಬಳಸಿದರೆ ಪ್ರಜಾತಂತ್ರದ ಮೌಲ್ಯಗಳ ರಕ್ಷಣೆಯಾಗುತ್ತವೆ. ವ್ಯಷ್ಟಿ ಪ್ರಜ್ಞೆಯ ನೆಲೆಯಲ್ಲಿ ಬಳಸಿದರೆ ಮಾದ್ಯಮ ವಸ್ತುನಿಷ್ಠೆಯನ್ನು ಮರೆತು ವ್ಯಕ್ತಿನಿಷ್ಠೆಗೆ ಬಲಿಯಾಗುತ್ತದೆ. ಬೌದ್ಧಿಕ ಸಮಾಜ ವಿನಾಶದತ್ತ ಸಾಗುತ್ತದೆ.
ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿ ಮತ್ತು ಮಾರುಕಟ್ಟೆಯ ಲೆಕ್ಕಾಚಾರಗಳು ಈ ಮಾಂತ್ರಿಕ ಶಕ್ತಿಯನ್ನು ನಿಯಂತ್ರಿಸುವಂತಾದರೆ ಮಾಧ್ಯಮ ಲೋಕ ತನ್ನ ಅಸ್ತಿತ್ವ ಮತ್ತು ಅಸ್ಮಿತೆಯನ್ನು ಸುಲಭವಾಗಿ ಕಳೆದುಕೊಳ್ಳುತ್ತದೆ. ಇಂದು ಈ ಅಪಾಯವನ್ನು ನಾವು ಎದುರಿಸುತ್ತಿದ್ದೇವೆ.
ದುರದೃಷ್ಟವಶಾತ್ ಇಂದು ನಾವು ಔದ್ಯಮಿಕ ಸ್ವರೂಪದ ಮಾಧ್ಯಮಗಳ ನಡುವೆ ಬದುಕುತ್ತಿದ್ದೇವೆ. ಹಾಗಾಗಿಯೇ ಸುದ್ದಿಮನೆಗಳಲ್ಲಿ ಅಭಿಪ್ರಾಯಗಳ ಉತ್ಪಾದನೆಯಾದರೆ, ಮುದ್ರಣ ಮನೆಗಳಲ್ಲಿ ಅಕ್ಷರಗಳು ಉತ್ಪಾದನೆಯಾಗುತ್ತವೆ. ಎರಡೂ ಕಡೆ ಅಕ್ಷರ/ಅಭಿಪ್ರಾಯ ಮೂಡುವ ಪರಿಕಲ್ಪನೆ ಇಲ್ಲವಾಗಿದೆ.
ಪರ್ಯಾಯವೇನು ಎನ್ನುವ ಪ್ರಶ್ನೆಯೊಡನೆಯೇ ನಾವು ಮತ್ತೊಂದು ಮಾಧ್ಯಮ ಜಗತ್ತನ್ನು ಸೃಷ್ಟಿಸುವ ಹಂತಕ್ಕೆ ತಲುಪಿದ್ದೇವೆ. ಅಧಿಕಾರ ರಾಜಕಾರಣ ಮತ್ತು ವ್ಯವಸ್ಥೆಯ ಬಾಹುಗಳಿಂದ ದೂರ ಉಳಿದು ಈ ಹೊಸ ಜಗತ್ತನ್ನು ಸಂರಕ್ಷಿಸಿ, ಮಾನವೀಯ ನೆಲೆಯಲ್ಲಿ ಅಕ್ಷರಗಳನ್ನು ಬಿತ್ತುವ ನಿಟ್ಟಿನಲ್ಲಿ ನಾವು ಸಾಗಬೇಕಿದೆ. ಆಗ ಮಾತ್ರ ವಿಶ್ವಮಾನವ ಸಂದೇಶವನ್ನು ಸಾಕಾರಗೊಳಿಸಲು ಸಾಧ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ
ದಾವಣಗೆರೆ: ಎಸ್ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು ಮಾತ್ರ ಪರಿಗಣಿಸಬೇಕು ಎಂದು ಒತ್ತಾಯಿಸಿ ಎಸ್ಒಜಿ ಕಾಲೊನಿಯ ನಿವಾಸಿಗಳು ಮಹಾನಗರ ಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿ ಸೇರಿದ ಎಸ್ಒಜಿ ಕಾಲೊನಿಯ ನಿವಾಸಿಗಳು ಇಲ್ಲಿಂದಲೇ ಮೆರವಣಿಗೆ ಹೊರಟು ಮಹಾನಗರ ಪಾಲಿಕೆಗೆ ತೆರಳಿ ಮನವಿ ಸಲ್ಲಿಸಿದರು.
ನಗರದ ರವೀಂದ್ರನಾಥ ಬಡಾವಣೆಯಲ್ಲಿ ಇತ್ತೀಚೆಗೆ ತೆರವುಗೊಳಿಸಿದ 36 ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಈ ಕುಟುಂಬಗಳಿಗೆ ಇತ್ತೀಚೆಗೆ ಎಸ್ಒಜಿ ಕಾಲೊನಿಯ ಮುಖ್ಯ ರಸ್ತೆ ಬದಿಯಲ್ಲಿ ನಿವೇಶನ ಒದಗಿಸಲಾಗಿದೆ. ಮುಖ್ಯರಸ್ತೆಯ ವಿಸ್ತೀರ್ಣವನ್ನು ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿದ್ದು ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಾಹನ ದಟ್ಟಣೆ ಸಾಧ್ಯತೆಯನ್ನು ಗಮನಿಸಿ 40 ಅಡಿ ಮುಖ್ಯ ರಸ್ತೆಯನ್ನು ನಿರ್ಮಿಸಲಾಗಿತ್ತು. ಇದೇ ರಸ್ತೆಯ ಬದಿಯಲ್ಲಿ ಒಳಚರಂಡಿ, ಗ್ಯಾಸ್ ಕೊಳವೆ ಮಾರ್ಗ ಹಾಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲಾಗಿದೆ. ರಸ್ತೆ ವಿಸ್ತೀರ್ಣವನ್ನು 25 ಅಡಿಗೆ ಕಡಿತಗೊಳಿಸಿ ಪ್ರತಿ ನಿರಾಶ್ರಿತ ಕುಟುಂಬಕ್ಕೆ 15X40 ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಿಂದ ಕಾಲೊನಿಯ ನಿವಾಸಿಗಳಿಗೆ ತೊಂದರೆ ಆಗಲಿದೆ ಎಂದು ಎಸ್ಓಜಿ ಕಾಲೊನಿ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಡಿ. ಕಲ್ಲೇಶಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಯಾಗಿದ್ದ ಕೆ.ಶಿವರಾಂ ಅವರು ಎಸ್ಒಜಿ ಕಾಲೊನಿ ನಿರ್ಮಿಸಿದ್ದರು. ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನೀರಿನ ಕಂದಾಯಕ್ಕೆ ವಿನಾಯಿತಿ ನೀಡಿದ್ದರು. ಆದರೆ, ಇತ್ತೀಚೆಗೆ ಮಹಾನಗರ ಪಾಲಿಕೆ 25 ವರ್ಷಗಳ ನೀರಿನ ಕಂದಾಯ ಪಾವತಿಸುವಂತೆ ನೋಟಿಸ್ ನೀಡಿದೆ. ಇದು ನಾಗರಿಕರಲ್ಲಿ ಆತಂಕ ಮೂಡಿಸಿದೆ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ2 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ4 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ2 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ


