ರಾಜಕೀಯ
ನೀತಿ ನಿರೂಪಣೆಯ ಹೆದ್ದಾರಿ
ಸರ್ಕಾರವನ್ನು ಪ್ರತಿನಿಧಿಸುವವರು ನೀತಿ ನಿರೂಪಣೆ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಾರೆ ಎನ್ನುವುದರ ಆಧಾರದಲ್ಲಿ ಚುನಾವಣೆಯ ಸಂವಾದಗಳು ನಡೆಯಬೇಕು. ಲೋಕಸಭೆ ಅಥವಾ ವಿಧಾನಸಭೆ ಸೇರಿದಂತೆ ಯಾವುದೇ ಸಂವಿಧಾನಿಕ ಸಂಸ್ಥೆಗಳ ಚುನಾವಣೆ ನಡೆದಾಗ ಅಧಿಕಾರಾವಧಿಯಲ್ಲಿ ರೂಪಿತವಾದ ನೀತಿಗಳು ಎಂಥವು ಮತ್ತು ಅವುಗಳನ್ನು ಅನುಷ್ಠಾನಗೊಳಿಸಿದಾಗ ಉಂಟಾದ ಪರಿಣಾಮಗಳೇನೇನು ಎಂಬ ಆಯಾಮದಲ್ಲಿ ಚರ್ಚೆಗಳಾಗಬೇಕು. ಆ ತರಹದ ಚರ್ಚೆಗಳಾದಾಗ ಅಧಿಕಾರರೂಢರು ಮತ್ತು ಪ್ರತಿಪಕ್ಷಗಳನ್ನು ಪ್ರತಿನಿಧಿಸುವವರು ಪ್ರಜಾಪ್ರಭುತ್ವ ನಿರೀಕ್ಷಿಸುವ ಗುರಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಅಂಥ ಗುರಿಯನ್ನೇ ಕೇಂದ್ರೀಕರಿಸಿಕೊಂಡು ಮುನ್ನಡೆಯುವ ಅವರ ನಿಲುವುಗಳ ತಾತ್ವಿಕತೆಯು ಸರಿಯಾದ ಮಾರ್ಗದಲ್ಲಿಯೇ ಅವರು ಹೆಜ್ಜೆಯಿರಿಸುವಂತೆ ಪ್ರೇರಣೆ ನೀಡುತ್ತದೆ. ಈ ರೀತಿಯ ಅವಲೋಕನ ಮತ್ತು ವಿಮರ್ಶಾತ್ಮಕ ಮಾದರಿಯ ನೋಟಗಳು ಚುನಾವಣಾಪೂರ್ವ, ಚುನಾವಣಾ ನಂತರ ಮತ್ತು ಸರ್ಕಾರದ ಅಧಿಕಾರಾವಧಿಯ ಅಷ್ಟೂ ದಿನಗಳ ಕಾಲ ವ್ಯಕ್ತವಾಗುತ್ತಲೇ ಇರಬೇಕಾಗುತ್ತದೆ. ಇವುಗಳನ್ನು ನಿರಂತರವಾಗಿರಿಸುವಂಥ ಬದ್ಧತೆಯನ್ನು ಸರ್ಕಾರವನ್ನು ಪ್ರತಿನಿಧಿಸುವವರು ಮತ್ತು ಪ್ರತಿಪಕ್ಷಗಳಲ್ಲಿರುವವರು ತೋರಬೇಕಾಗುತ್ತದೆ.
ಬದ್ಧತೆಗೆ ತದ್ವಿರುದ್ಧದ ವಾತಾವರಣ
ಭಾರತದಲ್ಲಿ ಚುನಾವಣಾ ರಾಜಕಾರಣವು ಅಂಥ ಬದ್ಧತೆಗೆ ತದ್ವಿರುದ್ಧವಾದ ವಾತಾವರಣವನ್ನು ಸೃಷ್ಟಿಸಿದೆ. ಸಂವಾದವನ್ನು ಕಟ್ಟುವುದರ ಬದಲು ಅತಾರ್ಕಿಕ ವಾಗ್ವಾದಗಳನ್ನು ಹುಟ್ಟುಹಾಕುವುದರ ಕಡೆಗೇ ಅದರ ಗಮನವಿದೆ. ಅಧಿಕಾರ ಪಡೆಯಲೇಬೇಕು ಎಂಬ ಹಂಬಲ ಮತ್ತು ಹಠಗಳು ಸಂವಾದದ ಸಾಧ್ಯತೆಗಳನ್ನೇ ಮೊಟಕುಗೊಳಿಸುತ್ತವೆ. ಜನಪರ ನೀತಿ ನಿರೂಪಣೆಯ ಜವಾಬ್ದಾರಿಯುತ ಐಡೆಂಟಿಟಿಗಿಂತಲೂ ಕೀಳು ಅಭಿಪ್ರಾಯಗಳೊಂದಿಗಿನ ಮನಸ್ಥಿತಿಯನ್ನು ಸೃಷ್ಟಿಸುವುದಕ್ಕೆ ಮೊದಲ ಆದ್ಯತೆ ನೀಡುತ್ತವೆ. ಹಾಗಾಗಿ ಸದ್ಯದ ಅಗತ್ಯಗಳಿಗೆ ಸ್ಪಂದಿಸುವಂಥ ಮತ್ತು ಆ ಮೂಲಕ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ನೆರವಾಗುವ ನೀತಿಗಳು ರೂಪುಗೊಳ್ಳುವುದೇ ಇಲ್ಲ. ಅಂಥ ನೀತಿಗಳು ರೂಪುಗೊಳ್ಳುವುದಕ್ಕೆ ಬೇಕಾದ ಒತ್ತಡವನ್ನು ಹಾಕಬೇಕಾದ ಜನಸಮೂಹವೂ ಅದೇ ನಿರೀಕ್ಷೆಗಳೊಂದಿಗೆ ಯೋಚಿಸುವುದೇ ಇಲ್ಲ. ಒಂದು ವೇಳೆ ಜನಸಮೂಹ ಯೋಚನೆಯ ಹಾದಿ ತುಳಿದರೂ ರಾಜಕಾರಣ ಎಚ್ಚೆತ್ತುಕೊಂಡು ಅದರ ದಿಕ್ಕನ್ನೇ ಬದಲಿಸಿ ನಿರ್ದಿಷ್ಟ ವಿದ್ಯಮಾನಕೇಂದ್ರಿತ ಅಂಶವನ್ನು ಮುನ್ನೆಲೆಗೆ ತಂದು ತನ್ನ ಸಂಕುಚಿತ ಉದ್ದೇಶವನ್ನು ಈಡೇರಿಸಿಕೊಂಡುಬಿಡುತ್ತದೆ.
ನೀತಿಯ ನಿಖರ ವ್ಯಾಖ್ಯಾನ
ಅಧಿಕಾರರೂಢ ರಾಜಕಾರಣ ಮತ್ತು ಪ್ರತಿಪಕ್ಷಗಳ ರಾಜಕಾರಣ ಇಂಥ ಸಂಕುಚಿತ ಉದ್ದೇಶಗಳನ್ನೇಮುಖ್ಯವಾಗಿಸಿಕೊಳ್ಳುವುದರಿಂದ ದೇಶದ ಅಗತ್ಯಗಳನ್ನು ದೃಷ್ಟಿಯಲ್ಲಿರಿಸಿಕೊಂಡ ನೀತಿಯ ಕುರಿತಾದ ಸ್ಪಷ್ಟತೆಯನ್ನು ಹೊಂದಿರುವುದಿಲ್ಲ. ನೀತಿಯ ನಿಖರ ವ್ಯಾಖ್ಯಾನವನ್ನು ನೆಚ್ಚಿಕೊಳ್ಳುವುದಿಲ್ಲ. ಯಾವುದೇ ಆಡಳಿತವು ವರ್ತಮಾನಕ್ಕೆ ಸ್ಪಂದಿಸಿ ಭವಿಷ್ಯವನ್ನೂ ಉಜ್ವಲಗೊಳಿಸುವುದಕ್ಕೆ ತನ್ನದೇ ಆದ ನೀತಿ ಮಾದರಿಯನ್ನು ರೂಪಿಸಿಕೊಳ್ಳಬೇಕಾಗುತ್ತದೆ. ನೀತಿ ರೂಪಿಸುವ ಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸುವ ಆಡಳಿತ ಮತ್ತು ಮೌಲಿಕ ರಾಜಕಾರಣ ಅಸ್ತಿತ್ವದಲ್ಲಿರುವ ಸಮಾಜವು ಸ್ಥಗಿತಗೊಳ್ಳುವುದಿಲ್ಲ. ಅದು ಬದಲಾಗುತ್ತಲೇ ಸಕಾಲಿಕ ನೀತಿಗಳಿಗೆ ಅವಕಾಶಯವೀಯುತ್ತದೆ. ಹೊಸ ಪೀಳಿಗೆಯೂ ನೀತಿನಿರೂಪಣೆಯ ಹೆಜ್ಜೆಗಳು ಹೇಗಿರಬೇಕು ಎಂಬುದನ್ನು ಚಿಂತನೆಯ ಒರೆಗಲ್ಲಿಗೆ ಹಚ್ಚಿ ಯೋಚಿಸುತ್ತದೆ. ಅದೇ ಚಿಂತನೆಯು ಆಡಳಿತದ್ದೂ ಆಗಬೇಕು ಎಂಬ ನಿರೀಕ್ಷೆಯಲ್ಲಿ ದೇಶದ ಉಜ್ವಲ ಭವಿಷ್ಯಕ್ಕೆ ಬೇಕಾಗುವ ಸಂವಾದದ ವಾತಾವರಣವನ್ನು ಸೃಷ್ಟಿಸಿಕೊಳ್ಳುತ್ತದೆ. ಹಾಗಾದಾಗಲೇ ಸರ್ಕಾರ ಮತ್ತು ಪ್ರತಿಪಕ್ಷಗಳವರು ಭಿನ್ನವಾಗಿ ಯೋಚಿಸಲಾರಂಭಿಸುತ್ತಾರೆ. ಬದಲಾವಣೆಯ ಕಡೆಗಿನ ಪ್ರಯಾಣ ಅಧಿಕೃತತೆಯನ್ನು ಪಡೆಯುತ್ತದೆ.
ಹೊಸ ಹಾದಿಯ ನೀತಿಯ ಅಗತ್ಯತೆ
ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣೆ ವೇಳೆ ನಡೆಯುವ ವಿದ್ಯಮಾನಗಳು ಮತ್ತು ಅದನ್ನು ದೃಷ್ಟಿಯಲ್ಲಿರಿಸಿಕೊಂಡು ಏರ್ಪಡುವ ಜಗಳ, ಸಂಘರ್ಷಗಳು ಪ್ರಜಾಸತ್ತಾತ್ಮಕವಾದ ನೀತಿ ರೂಪುಗೊಳ್ಳಬಹುದಾದ ಸಂಭಾವ್ಯತೆಯನ್ನೇ ಇಲ್ಲವಾಗಿಸಿಬಿಡುತ್ತವೆ. ದೇಶದ ವಿವಿಧ ವಲಯಗಳಲ್ಲಿ ಆಗಬೇಕಾದ ಬದಲಾವಣೆಗಳೇನೇನು? ಆ ಬದಲಾವಣೆಯು ಯಾವ ಸ್ವರೂಪದ್ದಾಗಿರಬೇಕು? ಮುಂದಿನ ಐವತ್ತು ವರ್ಷಗಳಲ್ಲಿ ಸಮಾಜದ ಗತಿಶೀಲತೆಯ ಸಾಧ್ಯತೆಗಳಿಗೆ ತಕ್ಕಂತೆ ಹೊಸ ಕಾಯ್ದೆಗಳು ರೂಪುಗೊಳ್ಳಬೇಕೇ? ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಕಾರ್ಯವ್ಯಾಪ್ತಿ ಮತ್ತು ಅವುಗಳ ಕಾರ್ಯವೈಖರಿ ಯಾವ ರೀತಿಯಲ್ಲಿ ವಿಮರ್ಶೆಗೊಳಪಡಬೇಕು? ಹೇಗೆ ಅವುಗಳನ್ನು ಬದಲಾವಣೆಯ ಪರಸ್ಪರ ಪೂರಕ ಸಾಂಸ್ಥಿಕ ಶಕ್ತಿಗಳನ್ನಾಗಿ ಮಾರ್ಪಡಿಸಬೇಕು ಎಂಬ ಪ್ರಶ್ನೆಗಳು ಆದ್ಯತಾನುಸಾರ ಚರ್ಚಿಸಲ್ಪಡಬೇಕು. ಹಾಗಾಗುವುದಿಲ್ಲ. ಅದರ ಬದಲು ತಾತ್ಪೂರ್ತಿಕವಾದ, ಸವಕಲು ಎನ್ನಿಸಿರುವ, ಅಪ್ರಸ್ತುತ ಅಭಿಪ್ರಾಯಗಳನ್ನು ರೂಪಿಸುವುದಕ್ಕೇ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ. ದೇಶದ ಆರ್ಥಿಕತೆ, ಸಾಮಾಜಿಕತೆ, ಶೈಕ್ಷಣಿಕ ವಾಸ್ತವಿಕತೆ, ಮಾನವ ಸಂಪನ್ಮೂಲದ ಆರೋಗ್ಯಕರ ಅಸ್ಮಿತೆ, ಭೌಗೋಳಿಕ ನೈಸರ್ಗಿಕ ವೈಶಿಷ್ಟ್ಯತೆ – ಇವೆಲ್ಲವುಗಳನ್ನು ಸಂವಿಧಾನಿಕ ಆಡಳಿತಾತ್ಮಕ ಅಂಗಗಳು ಗಣನೆಗೆ ತೆಗೆದುಕೊಂಡು ಹೊಸ ಹೆಜ್ಜೆಗಳನ್ನು ಕ್ರಮಿಸುವುದಕ್ಕೆ ಪೂರಕವಾಗುವ ನೀತಿಗಳನ್ನು ರೂಪಿಸಿಕೊಳ್ಳಬೇಕು. ಅಂಥ ವಾತಾವರಣದ ನಿರ್ಮಾಣಕ್ಕೆ ಚುನಾವಣಾಪೂರ್ವ, ಚುನಾವಣಾ ನಂತರದ ಆಡಳಿತಾತ್ಮಕ ಅಧಿಕಾರಾವಧಿಯು ವಿನಿಯೋಗಿಸಲ್ಪಡಬೇಕು.
ರಾಜಕಾರಣದ ನಿರ್ದಯಿ ದಾಹ
ನಿರ್ದಿಷ್ಟ ಆಡಳಿತ ನೀತಿಯು ಅಧಿಕಾರ ರಾಜಕಾರಣದ ನಿರ್ದಯಿ ದಾಹಗಳ ಸೋಂಕನ್ನು ಅಂಟಿಸಿಕೊಳ್ಳಬಾರದು. ಸದ್ಯದಲ್ಲಷ್ಟೇ ಅಲ್ಲದೇ ಯಾವತ್ತೂ ತಾವೇ ಅಧಿಕಾರದಲ್ಲಿರಬೇಕು ಎಂಬ ಹಸಿವು ಸಕಾರಾತ್ಮಕ ಆಲೋಚನಾಕ್ರಮಗಳೊಂದಿಗಿದ್ದರೆ ಸರಿ. ಇಲ್ಲದಿದ್ದರೆ ಆ ಹಸಿವಿಗೆ ಪ್ರಜಾಸತ್ತಾತ್ಮಕ ಅಧಿಕೃತತೆ ದೊರಕುವುದಿಲ್ಲ. ಬದಲಾಗಿ ಆ ಹಸಿವು ಕಂಡವರ ಬದುಕನ್ನು ನಲುಗಿಸುವ, ಎದುರಾಳಿಗಳನ್ನು ಸೃಷ್ಟಿಸಿಕೊಳ್ಳುವ, ಸಂಘರ್ಷಕ್ಕೆ ಕುಮ್ಮಕ್ಕು ನೀಡುವ ವಿಕಾರದದ ಆಯಾಮವನ್ನು ಪಡೆದುಕೊಂಡುಬಿಡುತ್ತದೆ. ಈ ಹಂತದಲ್ಲಿಯೇ ಆಡಳಿತಾತ್ಮಕವಾದ ಸಕಾರತಾತ್ಮಕ ನೀತಿಯೊಂದು ಹುಟ್ಟಿಕೊಳ್ಳುವುದೇ ಇಲ್ಲ. ಇಂಥ ಸಂದರ್ಭದಲ್ಲಿ ಪ್ರಭುತ್ವವು ಯಾವುದನ್ನು ಆಡಳಿತ ನೀತಿ ಎಂದುಕೊಳ್ಳುತ್ತದೋ ಅದು ವಾಸ್ತವದಲ್ಲಿ ಕವಲು ಹಾದಿಯನ್ನು ಸಂಕೇತಿಸಿರುತ್ತದೆ. ಇದನ್ನು ಪ್ರಭುತ್ವಕ್ಕೆ ಅರ್ಥಮಾಡಿಸುವ ಪ್ರಯತ್ನಗಳು ಸಾರ್ವಜನಿಕ ಅಭಿಪ್ರಾಯ ರೂಪಿಸುವ ಪ್ರತಿಪಕ್ಷ ನಾಯಕರು, ತಜ್ಞರು ಮತ್ತು ಮಾಧ್ಯಮ ಪರಿಣಿತರಿಂದ ಆಗಬೇಕು. ಸಕಾರಾತ್ಮಕವಾದ ನೀತಿಯ ವಿಶಾಲ ಆವರಣವನ್ನು ತೋರ್ಪಡಿಸಬೇಕು.
ಉದ್ದೇಶಪೂರ್ವಕ ತಾಟಸ್ಥ್ಯ
ಆಡಳಿತಾತ್ಮಕ ನೀತಿಯನ್ನು ನಿರ್ದೇಶಿಸುವ ಸ್ಪಷ್ಟ ಮಾನದಂಡಗಳನ್ನು ವಿನ್ಯಾಸಗೊಳಿಸಿಕೊಳ್ಳುವುದರ ಕಡೆಗೆ ಬಹುಮತ ಪಡೆದ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುವುದಿಲ್ಲ. ಹಾಗೆ ಆದ್ಯತೆ ನೀಡುವಂಥ ರಚನಾತ್ಮಕ ಸಂವಾದಿ ಆಂದೋಲನವನ್ನು ಪ್ರತಿಪಕ್ಷಗಳೂ ರೂಪಿಸುವುದಿಲ್ಲ. ಉದ್ದೇಶಪೂರ್ವಕವಾಗಿ ಅವು ಈ ವಿಷಯದಲ್ಲಿ ತಟಸ್ಥಗೊಳ್ಳುತ್ತವೆ. ಈ ಕಾರಣಕ್ಕಾಗಿಯೇ ದೇಶದ ವಿವಿಧ ವಲಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿನ ಸ್ವರೂಪವನ್ನು ಪಡೆದುಕೊಂಡು ಬಿಡಿಸಲಾರದಷ್ಟು ಸಂಕೀರ್ಣಗೊಳ್ಳುತ್ತವೆ. ಒಂದು ಪಕ್ಷ ಅಥವಾ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದ ತಕ್ಷಣ ಸಮಸ್ಯೆಯೊಂದು ಚಿಗುರೊಡೆಯುವ ಕಾಲಕ್ಕೆ ಅದರ ಮುಂದಿನ ಸ್ವರೂಪವನ್ನು ಊಹಿಸಿ ಪರಿಹಾರೋಪಾಯವನ್ನು ನೆಚ್ಚಿಕೊಂಡ ಸಾಂದರ್ಭಿಕವಾದ ಪರ್ಯಾಯ ಚಿಂತನೆ ರೂಪುಗೊಳ್ಳಬೇಕು. ಅದರ ಆಧಾರದಲ್ಲಿಯೇ ಪರಿಹಾರಸೂತ್ರಗಳನ್ನು ಕಂಡುಕೊಳ್ಳಬೇಕು. ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಬೇಕು. ಅವು ಸದ್ಯಕ್ಕಷ್ಟೇ ಅಲ್ಲದೇ ಭವಿಷ್ಯದ ದಿನಗಳಲ್ಲಿಯೂ ಅನುಕೂಲಕರ ಎನ್ನಿಸುವ ಹಾಗೆ ಫ್ಲೆಕ್ಸಿಬಲ್ ಆಗಿರಬೇಕು. ಈ ಸಾಧ್ಯತೆಗಳ ದೂರಗಾಮಿ ಪರಿಣಾಮ ಲೆಕ್ಕಿಸಿಯೇ ಆಡಳಿತ ಕೇಂದ್ರಗಳು ಸಾರ್ವಜನಿಕ ನೀತಿಯನ್ನು ರಚಿಸಿಕೊಳ್ಳಬೇಕಾಗುತ್ತದೆ. ಈಗ ಇದರ ಗೈರು ಹಾಜರಿ ಎದ್ದುಕಾಣುತ್ತಿದೆ. ಇದರಿಂದಾಗಿ ಭಾರತೀಯ ಸಾಮಾಜಿಕತೆಯು ವಿವಿಧ ಸವಾಲುಗಳನ್ನು ಎದುರಿಸುವುದಕ್ಕಾಗಿಯೇ ತನ್ನ ಶಕ್ತಿಯನ್ನು ವ್ಯಯ ಮಾಡಿಕೊಳ್ಳುತ್ತಿದೆ. ಪ್ರಜೆಗಳ ಸಾಮಾಜಿಕತೆ ಮತ್ತು ಮಾನವ ಸಂಪನ್ಮೂಲದ ಸಶಕ್ತತೆಯು ಸಾರ್ವಜನಿಕ ನೀತಿಯ ವ್ಯಾಪ್ತಿಯ ಒಳಗೆ ಅಧಿಕೃತ ಸ್ಥಾನವನ್ನು ಪಡೆಯುತ್ತಲೇ ಇಲ್ಲ. ಈ ದೃಷ್ಟಿಯಿಂದ ಭಾರತದ ಆಡಳಿತಾತ್ಮಕತೆಯು ರಚನಾತ್ಮಕ ಕಾರ್ಯಸೂಚಿಯ ಕಾಯಕಲ್ಪದಿಂದ ವಂಚಿತವಾಗಿದೆ.
ದಿವ್ಯನಿರ್ಲಕ್ಷ್ಯ ಸೃಷ್ಟಿಸುವ ಬಿಕ್ಕಟ್ಟು
ಈ ಕಾರಣಕ್ಕಾಗಿಯೇ ಕೃಷಿ, ಶಿಕ್ಷಣ, ಆರೋಗ್ಯ, ಪರಿಸರ ಸೇರಿದಂತೆ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ, ಕಾಣಿಸಿಕೊಳ್ಳುತ್ತಲೇ ಇರುವ ಸಮಸ್ಯೆಗಳಿಗೆ ಪರಿಹಾರವೇ ಸಾಧ್ಯ ಇಲ್ಲ ಎಂಬ ತಪ್ಪು ಅಭಿಪ್ರಾಯಗಳ ವರ್ತುಲ ಸೃಷ್ಟಿಯಾಗಿದೆ. ಸಮಸ್ಯೆಯೊಂದು ಸೃಷ್ಟಿಯಾದ ತಕ್ಷಣವೇ ಆಡಳಿತವು ಅದರೆಡೆಗಿನ ದಿವ್ಯನಿರ್ಲಕ್ಷ್ಯವನ್ನೇ ತನ್ನ ಅಸ್ತಿತ್ವದ ಮಹತ್ವದ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ತತ್ಪರಿಣಾಮ ನಿರ್ಲಕ್ಷ್ಯಕ್ಕೀಡಾಗುವ ಸಮಸ್ಯೆಯು ಹಲವು ಬಿಕ್ಕಟ್ಟುಗಳನ್ನು ಸೃಷ್ಟಿಸುತ್ತದೆ. ಕ್ರಮೇಣ ಜನಸಮುದಾಯವನ್ನು, ತನ್ಮೂಲಕ ಆಡಳಿತದ ವಿವಿಧ ಹಂತಗಳ ಸಹಜ ಕ್ರಿಯೆಯನ್ನು ಮತ್ತಷ್ಟು ಜಡಗೊಳಿಸಿಬಿಡುತ್ತದೆ. ಆಗ ರೈತರ ಆತ್ಮಹತ್ಯೆಯ ಪ್ರಮಾಣ ಹೆಚ್ಚಾದಾಗಲೂ ಆಡಳಿತ ನಿರ್ಲಿಪ್ತತೆಯನ್ನೇ ತನ್ನ ಬಹುದೊಡ್ಡ ಗುಣವಾಗಿಸಿಕೊಳ್ಳುತ್ತದೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ನ್ಯಾಯಯುತ ಬೆಲೆ ನಿಗದಿಗೊಳಿಸದೇ ಇದ್ದಾಗ ರೈತ ಸಮುದಾಯ ನಲುಗಿದರೂ ಅದು ನಿರ್ಲಕ್ಷ್ಯ ಧೋರಣೆಯೊಂದಿಗಿನ ಮೌನವನ್ನೇ ಅನುಸರಿಸುತ್ತದೆ. ಜಾತಿ-ಧರ್ಮಗಳ ಸಾಂಪ್ರದಾಯಿಕತೆಯ ಜೊತೆಗೆ ಇಡೀ ಸಮಾಜ ತಳಮಳಕ್ಕೀಡಾದಾಗ ಅದರ ಪ್ರಯೋಜನ ಪಡೆಯುವ ಹುನ್ನಾರದ ಪ್ರಬಲರಿಗೆ ದಾರಿ ಮಾಡಿಕೊಡುತ್ತದೆ. ಹೊಸದೇನನ್ನೂ ಕಲಿಸದೇ ಹಳೆಯದ್ದರ ಆಶ್ರಯದಲ್ಲಿಯೇ ಅಸ್ತಿತ್ವ ಕಂಡುಕೊಳ್ಳಲು ಶಿಕ್ಷಣ ರಂಗವು ಹೆಣಗಾಡುತ್ತಿರುವಾಗಲೂ ಅದನ್ನು ಮತ್ತಷ್ಟು ದುರ್ಬಲಗೊಳಿಸುವುದರ ಕಡೆಗೆ ಅತ್ಯುತ್ಸಾಹ ತೋರುತ್ತದೆ. ಆರೋಗ್ಯ ಕಾಯ್ದುಕೊಳ್ಳಲು ಜನಸಮೂಹಕ್ಕೆ ನೆರವಾಗುವ ಜಾಗೃತಿ ಹೆಜ್ಜೆಗಳ ಬದಲು ದೇಹಗಳನ್ನು ಮತ್ತಷ್ಟು ಜಡಗೊಳಿಸಿ ಮೆಡಿಸಿನ್ಗಳಿಗೆ ಒಗ್ಗಿಕೊಳ್ಳುವಂಥ ಮನಸ್ಥಿತಿ ರೂಪಿಸುವ ಔದ್ಯಮಿಕ ಒತ್ತಡಗಳಿಗೆ ಈಡಾಗುತ್ತದೆ. ಈ ಹಂತದಲ್ಲಿಯೇ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ತಮ್ಮ ಸಾಂಸ್ಥಿಕ ಶಕ್ತಿಯನ್ನು ವಿಸ್ತರಿಸಿಕೊಳ್ಳುವ ಬದಲು ಯಥಾಸ್ಥಿತಿಗಳನ್ನು ಖಾಯಂ ಆಗಿರಿಸುವ ದೌರ್ಬಲ್ಯದ ಮಿತಿಗಳನ್ನು ತಮ್ಮ ಗುಣಗಳನ್ನಾಗಿಸಿಕೊಳ್ಳುತ್ತವೆ.
ಸಮಗ್ರ ನೀತಿಯ ಅಲೆಯ ಪ್ರಾಧಾನ್ಯತೆ
ಆ ದೌರ್ಬಲ್ಯವು ದೇಶದ ಉಜ್ವಲ ಭವಿಷ್ಯದ ಸಂಭಾವ್ಯತೆಯನ್ನು ತಡೆದುಬಿಡುತ್ತದೆ. ಅಲ್ಲದೇ ಪೀಳಿಗೆಗಳನ್ನು ಶತಮಾನಗಳಷ್ಟು ಹಿಂದಕ್ಕೆ ಕೊಂಡೊಯ್ಯುತ್ತದೆ. ಮುಂದಿನ ಹೆಜ್ಜೆಗಳ ಬದಲು ಹಿಂದಿನ ಜಡತೆಗೇ ಜೋತುಬೀಳುವ ಅವಲಂಬನೆಯ ಸ್ವಭಾವವನ್ನು ಸಾಮಾಜಿಕವಾಗಿ ನೆಲೆಗೊಳಿಸಿಬಿಡುತ್ತದೆ. ಇಂಥ ಅಪಾಯದಿಂದ ಪಾರಾಗಬೇಕಾದರೆ ರಾಜಕೀಯ ಪಕ್ಷಗಳು, ಸಾರ್ವಜನಿಕ ಸಂಸ್ಥೆಗಳು, ವಿವಿಧ ಜನವರ್ಗಗಳು ಆಯಾ ಕಾಲದ ಅಗತ್ಯಗಳಿಗೆ ತಕ್ಕಂತೆ ಪ್ರತಿಸ್ಪಂದಿಸುವ ಆಡಳಿತಾತ್ಮಕ ಸಮಗ್ರ ನೀತಿಗಳ ಅವಶ್ಯಕತೆಯನ್ನು ಮನಗಂಡು ಅವುಗಳ ಪರವಾದ ವ್ಯಾಪಕ ಅಲೆಯನ್ನು ನಿರ್ಮಿಸಬೇಕು. ಹಾಗಾದಾಗ ಮಾತ್ರ ಚುನಾವಣೆ ಇರಲಿ, ಇಲ್ಲದಿರಲಿ ಎಲ್ಲರೂ ರಚನಾತ್ಮಕ ನೀತಿಗಳನ್ನು ಗಮನದಲ್ಲಿರಿಸಿಕೊಂಡು ಮೌಲಿಕ ಸಂವಾದ ಏರ್ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅನಗತ್ಯ ವಿವಾದಗಳ ವೈಭವೀಕರಣ ತಾನಾಗಿಯೇ ನಿಂತು ಸಾರ್ವಜನಿಕ ಆಡಳಿತವು ಸಂವಿಧಾನಾತ್ಮಕ ಮೌಲ್ಯವನ್ನು ತಂದುಕೊಳ್ಳುತ್ತದೆ.
-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ
ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಶುಕ್ರವಾರದಂದು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛ ಸಂಕೀರ್ಣ ಘಟಕ, ಕೂಸಿನ ಮನೆ ಹಾಗೂ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ 39 ಕಸ ವಿಲೇವಾರಿ ಘಟಕಗಳ ಪೈಕಿ, ಕನಗೊಂಡನಹಳ್ಳಿಯಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ನೂತನ ಘಟಕ ನಿರ್ಮಿಸಲಾಗಿದೆ. ಇದರ ನಿರ್ವಹಣೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಾಗಿದ್ದು, ಸಾರ್ವಜನಿಕರು ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಗ್ರಾಮಸ್ಥರೇ ಘಟಕಗಳನ್ನು ನಿರ್ವಹಿಸಿದರೆ ಗ್ರಾಮದ ಆರ್ಥಿಕತೆಗೆ ಬಲ ಬರುತ್ತದೆ. ಇದರ ಜೊತೆಗೆ ಚರಂಡಿ ಸ್ವಚ್ಛತೆಯಲ್ಲೂ ಗ್ರಾಮಸ್ಥರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಕಾಮಗಾರಿಗಳ ವಿವರಗಳನ್ನು ತಕ್ಷಣವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇತರ ಉದ್ಘಾಟನೆಗಳು
ಕಾರ್ಯಕ್ರಮ ಆರಂಭಕ್ಕೂ ಮುನ್ನ ಸಂಸದರು ಹೊಸಕೊಳೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ‘ಕೂಸಿನ ಮನೆ’ ಮತ್ತು ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ತದನಂತರ ಹಳೆಕೊಳೇನಹಳ್ಳಿಯಲ್ಲಿ ಮೂರು ಹೊಸ ಶಾಲಾ ಕೊಠಡಿಗಳು ಹಾಗೂ ಅಡುಗೆ ಕೊಠಡಿಯನ್ನು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಿತ್ತೆ ಮಾಧವ ವಿಠಲರಾವ್, ತಾಲ್ಲೂಕು ಪಂಚಾಯಿತಿ ಇಓ ರಾಮ್ ಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ
ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್ಲೈನ್ನಲ್ಲಿ ಅಪ್ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.
ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ (Jamar) ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್ಗಾರ್ಡ್ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್ಗಳನ್ನು ಒದಗಿಸಲಾಗುವುದು.
ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ22 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ21 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ


