Connect with us

ರಾಜಕೀಯ

ನೀತಿ ನಿರೂಪಣೆಯ ಹೆದ್ದಾರಿ

Published

on

ರ್ಕಾರವನ್ನು ಪ್ರತಿನಿಧಿಸುವವರು ನೀತಿ ನಿರೂಪಣೆ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಾರೆ ಎನ್ನುವುದರ ಆಧಾರದಲ್ಲಿ ಚುನಾವಣೆಯ ಸಂವಾದಗಳು ನಡೆಯಬೇಕು. ಲೋಕಸಭೆ ಅಥವಾ ವಿಧಾನಸಭೆ ಸೇರಿದಂತೆ ಯಾವುದೇ ಸಂವಿಧಾನಿಕ ಸಂಸ್ಥೆಗಳ ಚುನಾವಣೆ ನಡೆದಾಗ ಅಧಿಕಾರಾವಧಿಯಲ್ಲಿ ರೂಪಿತವಾದ ನೀತಿಗಳು ಎಂಥವು ಮತ್ತು ಅವುಗಳನ್ನು ಅನುಷ್ಠಾನಗೊಳಿಸಿದಾಗ ಉಂಟಾದ ಪರಿಣಾಮಗಳೇನೇನು ಎಂಬ ಆಯಾಮದಲ್ಲಿ ಚರ್ಚೆಗಳಾಗಬೇಕು. ಆ ತರಹದ ಚರ್ಚೆಗಳಾದಾಗ ಅಧಿಕಾರರೂಢರು ಮತ್ತು ಪ್ರತಿಪಕ್ಷಗಳನ್ನು ಪ್ರತಿನಿಧಿಸುವವರು ಪ್ರಜಾಪ್ರಭುತ್ವ ನಿರೀಕ್ಷಿಸುವ ಗುರಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಅಂಥ ಗುರಿಯನ್ನೇ ಕೇಂದ್ರೀಕರಿಸಿಕೊಂಡು ಮುನ್ನಡೆಯುವ ಅವರ ನಿಲುವುಗಳ ತಾತ್ವಿಕತೆಯು ಸರಿಯಾದ ಮಾರ್ಗದಲ್ಲಿಯೇ ಅವರು ಹೆಜ್ಜೆಯಿರಿಸುವಂತೆ ಪ್ರೇರಣೆ ನೀಡುತ್ತದೆ. ಈ ರೀತಿಯ ಅವಲೋಕನ ಮತ್ತು ವಿಮರ್ಶಾತ್ಮಕ ಮಾದರಿಯ ನೋಟಗಳು ಚುನಾವಣಾಪೂರ್ವ, ಚುನಾವಣಾ ನಂತರ ಮತ್ತು ಸರ್ಕಾರದ ಅಧಿಕಾರಾವಧಿಯ ಅಷ್ಟೂ ದಿನಗಳ ಕಾಲ ವ್ಯಕ್ತವಾಗುತ್ತಲೇ ಇರಬೇಕಾಗುತ್ತದೆ. ಇವುಗಳನ್ನು ನಿರಂತರವಾಗಿರಿಸುವಂಥ ಬದ್ಧತೆಯನ್ನು ಸರ್ಕಾರವನ್ನು ಪ್ರತಿನಿಧಿಸುವವರು ಮತ್ತು ಪ್ರತಿಪಕ್ಷಗಳಲ್ಲಿರುವವರು ತೋರಬೇಕಾಗುತ್ತದೆ.

ಬದ್ಧತೆಗೆ ತದ್ವಿರುದ್ಧದ ವಾತಾವರಣ

ಭಾರತದಲ್ಲಿ ಚುನಾವಣಾ ರಾಜಕಾರಣವು ಅಂಥ ಬದ್ಧತೆಗೆ ತದ್ವಿರುದ್ಧವಾದ ವಾತಾವರಣವನ್ನು ಸೃಷ್ಟಿಸಿದೆ. ಸಂವಾದವನ್ನು ಕಟ್ಟುವುದರ ಬದಲು ಅತಾರ್ಕಿಕ ವಾಗ್ವಾದಗಳನ್ನು ಹುಟ್ಟುಹಾಕುವುದರ ಕಡೆಗೇ ಅದರ ಗಮನವಿದೆ. ಅಧಿಕಾರ ಪಡೆಯಲೇಬೇಕು ಎಂಬ ಹಂಬಲ ಮತ್ತು ಹಠಗಳು ಸಂವಾದದ ಸಾಧ್ಯತೆಗಳನ್ನೇ ಮೊಟಕುಗೊಳಿಸುತ್ತವೆ. ಜನಪರ ನೀತಿ ನಿರೂಪಣೆಯ ಜವಾಬ್ದಾರಿಯುತ ಐಡೆಂಟಿಟಿಗಿಂತಲೂ ಕೀಳು ಅಭಿಪ್ರಾಯಗಳೊಂದಿಗಿನ ಮನಸ್ಥಿತಿಯನ್ನು ಸೃಷ್ಟಿಸುವುದಕ್ಕೆ ಮೊದಲ ಆದ್ಯತೆ ನೀಡುತ್ತವೆ. ಹಾಗಾಗಿ ಸದ್ಯದ ಅಗತ್ಯಗಳಿಗೆ ಸ್ಪಂದಿಸುವಂಥ ಮತ್ತು ಆ ಮೂಲಕ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳುವುದಕ್ಕೆ ನೆರವಾಗುವ ನೀತಿಗಳು ರೂಪುಗೊಳ್ಳುವುದೇ ಇಲ್ಲ. ಅಂಥ ನೀತಿಗಳು ರೂಪುಗೊಳ್ಳುವುದಕ್ಕೆ ಬೇಕಾದ ಒತ್ತಡವನ್ನು ಹಾಕಬೇಕಾದ ಜನಸಮೂಹವೂ ಅದೇ ನಿರೀಕ್ಷೆಗಳೊಂದಿಗೆ ಯೋಚಿಸುವುದೇ ಇಲ್ಲ. ಒಂದು ವೇಳೆ ಜನಸಮೂಹ ಯೋಚನೆಯ ಹಾದಿ ತುಳಿದರೂ ರಾಜಕಾರಣ ಎಚ್ಚೆತ್ತುಕೊಂಡು ಅದರ ದಿಕ್ಕನ್ನೇ ಬದಲಿಸಿ ನಿರ್ದಿಷ್ಟ ವಿದ್ಯಮಾನಕೇಂದ್ರಿತ ಅಂಶವನ್ನು ಮುನ್ನೆಲೆಗೆ ತಂದು ತನ್ನ ಸಂಕುಚಿತ ಉದ್ದೇಶವನ್ನು ಈಡೇರಿಸಿಕೊಂಡುಬಿಡುತ್ತದೆ.

ನೀತಿಯ ನಿಖರ ವ್ಯಾಖ್ಯಾನ

ಅಧಿಕಾರರೂಢ ರಾಜಕಾರಣ ಮತ್ತು ಪ್ರತಿಪಕ್ಷಗಳ ರಾಜಕಾರಣ ಇಂಥ ಸಂಕುಚಿತ ಉದ್ದೇಶಗಳನ್ನೇಮುಖ್ಯವಾಗಿಸಿಕೊಳ್ಳುವುದರಿಂದ ದೇಶದ ಅಗತ್ಯಗಳನ್ನು ದೃಷ್ಟಿಯಲ್ಲಿರಿಸಿಕೊಂಡ ನೀತಿಯ ಕುರಿತಾದ ಸ್ಪಷ್ಟತೆಯನ್ನು ಹೊಂದಿರುವುದಿಲ್ಲ. ನೀತಿಯ ನಿಖರ ವ್ಯಾಖ್ಯಾನವನ್ನು ನೆಚ್ಚಿಕೊಳ್ಳುವುದಿಲ್ಲ. ಯಾವುದೇ ಆಡಳಿತವು ವರ್ತಮಾನಕ್ಕೆ ಸ್ಪಂದಿಸಿ ಭವಿಷ್ಯವನ್ನೂ ಉಜ್ವಲಗೊಳಿಸುವುದಕ್ಕೆ ತನ್ನದೇ ಆದ ನೀತಿ ಮಾದರಿಯನ್ನು ರೂಪಿಸಿಕೊಳ್ಳಬೇಕಾಗುತ್ತದೆ. ನೀತಿ ರೂಪಿಸುವ ಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸುವ ಆಡಳಿತ ಮತ್ತು ಮೌಲಿಕ ರಾಜಕಾರಣ ಅಸ್ತಿತ್ವದಲ್ಲಿರುವ ಸಮಾಜವು ಸ್ಥಗಿತಗೊಳ್ಳುವುದಿಲ್ಲ. ಅದು ಬದಲಾಗುತ್ತಲೇ ಸಕಾಲಿಕ ನೀತಿಗಳಿಗೆ ಅವಕಾಶಯವೀಯುತ್ತದೆ. ಹೊಸ ಪೀಳಿಗೆಯೂ ನೀತಿನಿರೂಪಣೆಯ ಹೆಜ್ಜೆಗಳು ಹೇಗಿರಬೇಕು ಎಂಬುದನ್ನು ಚಿಂತನೆಯ ಒರೆಗಲ್ಲಿಗೆ ಹಚ್ಚಿ ಯೋಚಿಸುತ್ತದೆ. ಅದೇ ಚಿಂತನೆಯು ಆಡಳಿತದ್ದೂ ಆಗಬೇಕು ಎಂಬ ನಿರೀಕ್ಷೆಯಲ್ಲಿ ದೇಶದ ಉಜ್ವಲ ಭವಿಷ್ಯಕ್ಕೆ ಬೇಕಾಗುವ ಸಂವಾದದ ವಾತಾವರಣವನ್ನು ಸೃಷ್ಟಿಸಿಕೊಳ್ಳುತ್ತದೆ. ಹಾಗಾದಾಗಲೇ ಸರ್ಕಾರ ಮತ್ತು ಪ್ರತಿಪಕ್ಷಗಳವರು ಭಿನ್ನವಾಗಿ ಯೋಚಿಸಲಾರಂಭಿಸುತ್ತಾರೆ. ಬದಲಾವಣೆಯ ಕಡೆಗಿನ ಪ್ರಯಾಣ ಅಧಿಕೃತತೆಯನ್ನು ಪಡೆಯುತ್ತದೆ.

ಹೊಸ ಹಾದಿಯ ನೀತಿಯ ಅಗತ್ಯತೆ

ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣೆ ವೇಳೆ ನಡೆಯುವ ವಿದ್ಯಮಾನಗಳು ಮತ್ತು ಅದನ್ನು ದೃಷ್ಟಿಯಲ್ಲಿರಿಸಿಕೊಂಡು ಏರ್ಪಡುವ ಜಗಳ, ಸಂಘರ್ಷಗಳು ಪ್ರಜಾಸತ್ತಾತ್ಮಕವಾದ ನೀತಿ ರೂಪುಗೊಳ್ಳಬಹುದಾದ ಸಂಭಾವ್ಯತೆಯನ್ನೇ ಇಲ್ಲವಾಗಿಸಿಬಿಡುತ್ತವೆ. ದೇಶದ ವಿವಿಧ ವಲಯಗಳಲ್ಲಿ ಆಗಬೇಕಾದ ಬದಲಾವಣೆಗಳೇನೇನು? ಆ ಬದಲಾವಣೆಯು ಯಾವ ಸ್ವರೂಪದ್ದಾಗಿರಬೇಕು? ಮುಂದಿನ ಐವತ್ತು ವರ್ಷಗಳಲ್ಲಿ ಸಮಾಜದ ಗತಿಶೀಲತೆಯ ಸಾಧ್ಯತೆಗಳಿಗೆ ತಕ್ಕಂತೆ ಹೊಸ ಕಾಯ್ದೆಗಳು ರೂಪುಗೊಳ್ಳಬೇಕೇ? ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಕಾರ್ಯವ್ಯಾಪ್ತಿ ಮತ್ತು ಅವುಗಳ ಕಾರ್ಯವೈಖರಿ ಯಾವ ರೀತಿಯಲ್ಲಿ ವಿಮರ್ಶೆಗೊಳಪಡಬೇಕು? ಹೇಗೆ ಅವುಗಳನ್ನು ಬದಲಾವಣೆಯ ಪರಸ್ಪರ ಪೂರಕ ಸಾಂಸ್ಥಿಕ ಶಕ್ತಿಗಳನ್ನಾಗಿ ಮಾರ್ಪಡಿಸಬೇಕು ಎಂಬ ಪ್ರಶ್ನೆಗಳು ಆದ್ಯತಾನುಸಾರ ಚರ್ಚಿಸಲ್ಪಡಬೇಕು. ಹಾಗಾಗುವುದಿಲ್ಲ. ಅದರ ಬದಲು ತಾತ್ಪೂರ್ತಿಕವಾದ, ಸವಕಲು ಎನ್ನಿಸಿರುವ, ಅಪ್ರಸ್ತುತ ಅಭಿಪ್ರಾಯಗಳನ್ನು ರೂಪಿಸುವುದಕ್ಕೇ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ. ದೇಶದ ಆರ್ಥಿಕತೆ, ಸಾಮಾಜಿಕತೆ, ಶೈಕ್ಷಣಿಕ ವಾಸ್ತವಿಕತೆ, ಮಾನವ ಸಂಪನ್ಮೂಲದ ಆರೋಗ್ಯಕರ ಅಸ್ಮಿತೆ, ಭೌಗೋಳಿಕ ನೈಸರ್ಗಿಕ ವೈಶಿಷ್ಟ್ಯತೆ – ಇವೆಲ್ಲವುಗಳನ್ನು ಸಂವಿಧಾನಿಕ ಆಡಳಿತಾತ್ಮಕ ಅಂಗಗಳು ಗಣನೆಗೆ ತೆಗೆದುಕೊಂಡು ಹೊಸ ಹೆಜ್ಜೆಗಳನ್ನು ಕ್ರಮಿಸುವುದಕ್ಕೆ ಪೂರಕವಾಗುವ ನೀತಿಗಳನ್ನು ರೂಪಿಸಿಕೊಳ್ಳಬೇಕು. ಅಂಥ ವಾತಾವರಣದ ನಿರ್ಮಾಣಕ್ಕೆ ಚುನಾವಣಾಪೂರ್ವ, ಚುನಾವಣಾ ನಂತರದ ಆಡಳಿತಾತ್ಮಕ ಅಧಿಕಾರಾವಧಿಯು ವಿನಿಯೋಗಿಸಲ್ಪಡಬೇಕು.

ರಾಜಕಾರಣದ ನಿರ್ದಯಿ ದಾಹ

ನಿರ್ದಿಷ್ಟ ಆಡಳಿತ ನೀತಿಯು ಅಧಿಕಾರ ರಾಜಕಾರಣದ ನಿರ್ದಯಿ ದಾಹಗಳ ಸೋಂಕನ್ನು ಅಂಟಿಸಿಕೊಳ್ಳಬಾರದು. ಸದ್ಯದಲ್ಲಷ್ಟೇ ಅಲ್ಲದೇ ಯಾವತ್ತೂ ತಾವೇ ಅಧಿಕಾರದಲ್ಲಿರಬೇಕು ಎಂಬ ಹಸಿವು ಸಕಾರಾತ್ಮಕ ಆಲೋಚನಾಕ್ರಮಗಳೊಂದಿಗಿದ್ದರೆ ಸರಿ. ಇಲ್ಲದಿದ್ದರೆ ಆ ಹಸಿವಿಗೆ ಪ್ರಜಾಸತ್ತಾತ್ಮಕ ಅಧಿಕೃತತೆ ದೊರಕುವುದಿಲ್ಲ. ಬದಲಾಗಿ ಆ ಹಸಿವು ಕಂಡವರ ಬದುಕನ್ನು ನಲುಗಿಸುವ, ಎದುರಾಳಿಗಳನ್ನು ಸೃಷ್ಟಿಸಿಕೊಳ್ಳುವ, ಸಂಘರ್ಷಕ್ಕೆ ಕುಮ್ಮಕ್ಕು ನೀಡುವ ವಿಕಾರದದ ಆಯಾಮವನ್ನು ಪಡೆದುಕೊಂಡುಬಿಡುತ್ತದೆ. ಈ ಹಂತದಲ್ಲಿಯೇ ಆಡಳಿತಾತ್ಮಕವಾದ ಸಕಾರತಾತ್ಮಕ ನೀತಿಯೊಂದು ಹುಟ್ಟಿಕೊಳ್ಳುವುದೇ ಇಲ್ಲ. ಇಂಥ ಸಂದರ್ಭದಲ್ಲಿ ಪ್ರಭುತ್ವವು ಯಾವುದನ್ನು ಆಡಳಿತ ನೀತಿ ಎಂದುಕೊಳ್ಳುತ್ತದೋ ಅದು ವಾಸ್ತವದಲ್ಲಿ ಕವಲು ಹಾದಿಯನ್ನು ಸಂಕೇತಿಸಿರುತ್ತದೆ. ಇದನ್ನು ಪ್ರಭುತ್ವಕ್ಕೆ ಅರ್ಥಮಾಡಿಸುವ ಪ್ರಯತ್ನಗಳು ಸಾರ್ವಜನಿಕ ಅಭಿಪ್ರಾಯ ರೂಪಿಸುವ ಪ್ರತಿಪಕ್ಷ ನಾಯಕರು, ತಜ್ಞರು ಮತ್ತು ಮಾಧ್ಯಮ ಪರಿಣಿತರಿಂದ ಆಗಬೇಕು. ಸಕಾರಾತ್ಮಕವಾದ ನೀತಿಯ ವಿಶಾಲ ಆವರಣವನ್ನು ತೋರ್ಪಡಿಸಬೇಕು.

ಉದ್ದೇಶಪೂರ್ವಕ ತಾಟಸ್ಥ್ಯ

ಆಡಳಿತಾತ್ಮಕ ನೀತಿಯನ್ನು ನಿರ್ದೇಶಿಸುವ ಸ್ಪಷ್ಟ ಮಾನದಂಡಗಳನ್ನು ವಿನ್ಯಾಸಗೊಳಿಸಿಕೊಳ್ಳುವುದರ ಕಡೆಗೆ ಬಹುಮತ ಪಡೆದ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುವುದಿಲ್ಲ. ಹಾಗೆ ಆದ್ಯತೆ ನೀಡುವಂಥ ರಚನಾತ್ಮಕ ಸಂವಾದಿ ಆಂದೋಲನವನ್ನು ಪ್ರತಿಪಕ್ಷಗಳೂ ರೂಪಿಸುವುದಿಲ್ಲ. ಉದ್ದೇಶಪೂರ್ವಕವಾಗಿ ಅವು ಈ ವಿಷಯದಲ್ಲಿ ತಟಸ್ಥಗೊಳ್ಳುತ್ತವೆ. ಈ ಕಾರಣಕ್ಕಾಗಿಯೇ ದೇಶದ ವಿವಿಧ ವಲಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿನ ಸ್ವರೂಪವನ್ನು ಪಡೆದುಕೊಂಡು ಬಿಡಿಸಲಾರದಷ್ಟು ಸಂಕೀರ್ಣಗೊಳ್ಳುತ್ತವೆ. ಒಂದು ಪಕ್ಷ ಅಥವಾ ಪಕ್ಷಗಳ ಒಕ್ಕೂಟ ಅಧಿಕಾರಕ್ಕೆ ಬಂದ ತಕ್ಷಣ ಸಮಸ್ಯೆಯೊಂದು ಚಿಗುರೊಡೆಯುವ ಕಾಲಕ್ಕೆ ಅದರ ಮುಂದಿನ ಸ್ವರೂಪವನ್ನು ಊಹಿಸಿ ಪರಿಹಾರೋಪಾಯವನ್ನು ನೆಚ್ಚಿಕೊಂಡ ಸಾಂದರ್ಭಿಕವಾದ ಪರ್ಯಾಯ ಚಿಂತನೆ ರೂಪುಗೊಳ್ಳಬೇಕು. ಅದರ ಆಧಾರದಲ್ಲಿಯೇ ಪರಿಹಾರಸೂತ್ರಗಳನ್ನು ಕಂಡುಕೊಳ್ಳಬೇಕು. ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಬೇಕು. ಅವು ಸದ್ಯಕ್ಕಷ್ಟೇ ಅಲ್ಲದೇ ಭವಿಷ್ಯದ ದಿನಗಳಲ್ಲಿಯೂ ಅನುಕೂಲಕರ ಎನ್ನಿಸುವ ಹಾಗೆ ಫ್ಲೆಕ್ಸಿಬಲ್ ಆಗಿರಬೇಕು. ಈ ಸಾಧ್ಯತೆಗಳ ದೂರಗಾಮಿ ಪರಿಣಾಮ ಲೆಕ್ಕಿಸಿಯೇ ಆಡಳಿತ ಕೇಂದ್ರಗಳು ಸಾರ್ವಜನಿಕ ನೀತಿಯನ್ನು ರಚಿಸಿಕೊಳ್ಳಬೇಕಾಗುತ್ತದೆ. ಈಗ ಇದರ ಗೈರು ಹಾಜರಿ ಎದ್ದುಕಾಣುತ್ತಿದೆ. ಇದರಿಂದಾಗಿ ಭಾರತೀಯ ಸಾಮಾಜಿಕತೆಯು ವಿವಿಧ ಸವಾಲುಗಳನ್ನು ಎದುರಿಸುವುದಕ್ಕಾಗಿಯೇ ತನ್ನ ಶಕ್ತಿಯನ್ನು ವ್ಯಯ ಮಾಡಿಕೊಳ್ಳುತ್ತಿದೆ. ಪ್ರಜೆಗಳ ಸಾಮಾಜಿಕತೆ ಮತ್ತು ಮಾನವ ಸಂಪನ್ಮೂಲದ ಸಶಕ್ತತೆಯು ಸಾರ್ವಜನಿಕ ನೀತಿಯ ವ್ಯಾಪ್ತಿಯ ಒಳಗೆ ಅಧಿಕೃತ ಸ್ಥಾನವನ್ನು ಪಡೆಯುತ್ತಲೇ ಇಲ್ಲ. ಈ ದೃಷ್ಟಿಯಿಂದ ಭಾರತದ ಆಡಳಿತಾತ್ಮಕತೆಯು ರಚನಾತ್ಮಕ ಕಾರ್ಯಸೂಚಿಯ ಕಾಯಕಲ್ಪದಿಂದ ವಂಚಿತವಾಗಿದೆ.

ದಿವ್ಯನಿರ್ಲಕ್ಷ್ಯ ಸೃಷ್ಟಿಸುವ ಬಿಕ್ಕಟ್ಟು

ಈ ಕಾರಣಕ್ಕಾಗಿಯೇ ಕೃಷಿ, ಶಿಕ್ಷಣ, ಆರೋಗ್ಯ, ಪರಿಸರ ಸೇರಿದಂತೆ ವಿವಿಧ ವಲಯಗಳ ವ್ಯಾಪ್ತಿಯಲ್ಲಿ ಕಾಣಿಸಿಕೊಂಡ, ಕಾಣಿಸಿಕೊಳ್ಳುತ್ತಲೇ ಇರುವ ಸಮಸ್ಯೆಗಳಿಗೆ ಪರಿಹಾರವೇ ಸಾಧ್ಯ ಇಲ್ಲ ಎಂಬ ತಪ್ಪು ಅಭಿಪ್ರಾಯಗಳ ವರ್ತುಲ ಸೃಷ್ಟಿಯಾಗಿದೆ. ಸಮಸ್ಯೆಯೊಂದು ಸೃಷ್ಟಿಯಾದ ತಕ್ಷಣವೇ ಆಡಳಿತವು ಅದರೆಡೆಗಿನ ದಿವ್ಯನಿರ್ಲಕ್ಷ್ಯವನ್ನೇ ತನ್ನ ಅಸ್ತಿತ್ವದ ಮಹತ್ವದ ಗುಣಲಕ್ಷಣವಾಗಿಸಿಕೊಳ್ಳುತ್ತದೆ. ತತ್ಪರಿಣಾಮ ನಿರ್ಲಕ್ಷ್ಯಕ್ಕೀಡಾಗುವ ಸಮಸ್ಯೆಯು ಹಲವು ಬಿಕ್ಕಟ್ಟುಗಳನ್ನು ಸೃಷ್ಟಿಸುತ್ತದೆ. ಕ್ರಮೇಣ ಜನಸಮುದಾಯವನ್ನು, ತನ್ಮೂಲಕ ಆಡಳಿತದ ವಿವಿಧ ಹಂತಗಳ ಸಹಜ ಕ್ರಿಯೆಯನ್ನು ಮತ್ತಷ್ಟು ಜಡಗೊಳಿಸಿಬಿಡುತ್ತದೆ. ಆಗ ರೈತರ ಆತ್ಮಹತ್ಯೆಯ ಪ್ರಮಾಣ ಹೆಚ್ಚಾದಾಗಲೂ ಆಡಳಿತ ನಿರ್ಲಿಪ್ತತೆಯನ್ನೇ ತನ್ನ ಬಹುದೊಡ್ಡ ಗುಣವಾಗಿಸಿಕೊಳ್ಳುತ್ತದೆ. ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ನ್ಯಾಯಯುತ ಬೆಲೆ ನಿಗದಿಗೊಳಿಸದೇ ಇದ್ದಾಗ ರೈತ ಸಮುದಾಯ ನಲುಗಿದರೂ ಅದು ನಿರ್ಲಕ್ಷ್ಯ ಧೋರಣೆಯೊಂದಿಗಿನ ಮೌನವನ್ನೇ ಅನುಸರಿಸುತ್ತದೆ. ಜಾತಿ-ಧರ್ಮಗಳ ಸಾಂಪ್ರದಾಯಿಕತೆಯ ಜೊತೆಗೆ ಇಡೀ ಸಮಾಜ ತಳಮಳಕ್ಕೀಡಾದಾಗ ಅದರ ಪ್ರಯೋಜನ ಪಡೆಯುವ ಹುನ್ನಾರದ ಪ್ರಬಲರಿಗೆ ದಾರಿ ಮಾಡಿಕೊಡುತ್ತದೆ. ಹೊಸದೇನನ್ನೂ ಕಲಿಸದೇ ಹಳೆಯದ್ದರ ಆಶ್ರಯದಲ್ಲಿಯೇ ಅಸ್ತಿತ್ವ ಕಂಡುಕೊಳ್ಳಲು ಶಿಕ್ಷಣ ರಂಗವು ಹೆಣಗಾಡುತ್ತಿರುವಾಗಲೂ ಅದನ್ನು ಮತ್ತಷ್ಟು ದುರ್ಬಲಗೊಳಿಸುವುದರ ಕಡೆಗೆ ಅತ್ಯುತ್ಸಾಹ ತೋರುತ್ತದೆ. ಆರೋಗ್ಯ ಕಾಯ್ದುಕೊಳ್ಳಲು ಜನಸಮೂಹಕ್ಕೆ ನೆರವಾಗುವ ಜಾಗೃತಿ ಹೆಜ್ಜೆಗಳ ಬದಲು ದೇಹಗಳನ್ನು ಮತ್ತಷ್ಟು ಜಡಗೊಳಿಸಿ ಮೆಡಿಸಿನ್‍ಗಳಿಗೆ ಒಗ್ಗಿಕೊಳ್ಳುವಂಥ ಮನಸ್ಥಿತಿ ರೂಪಿಸುವ ಔದ್ಯಮಿಕ ಒತ್ತಡಗಳಿಗೆ ಈಡಾಗುತ್ತದೆ. ಈ ಹಂತದಲ್ಲಿಯೇ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ತಮ್ಮ ಸಾಂಸ್ಥಿಕ ಶಕ್ತಿಯನ್ನು ವಿಸ್ತರಿಸಿಕೊಳ್ಳುವ ಬದಲು ಯಥಾಸ್ಥಿತಿಗಳನ್ನು ಖಾಯಂ ಆಗಿರಿಸುವ ದೌರ್ಬಲ್ಯದ ಮಿತಿಗಳನ್ನು ತಮ್ಮ ಗುಣಗಳನ್ನಾಗಿಸಿಕೊಳ್ಳುತ್ತವೆ.

ಸಮಗ್ರ ನೀತಿಯ ಅಲೆಯ ಪ್ರಾಧಾನ್ಯತೆ

ಆ ದೌರ್ಬಲ್ಯವು ದೇಶದ ಉಜ್ವಲ ಭವಿಷ್ಯದ ಸಂಭಾವ್ಯತೆಯನ್ನು ತಡೆದುಬಿಡುತ್ತದೆ. ಅಲ್ಲದೇ ಪೀಳಿಗೆಗಳನ್ನು ಶತಮಾನಗಳಷ್ಟು ಹಿಂದಕ್ಕೆ ಕೊಂಡೊಯ್ಯುತ್ತದೆ. ಮುಂದಿನ ಹೆಜ್ಜೆಗಳ ಬದಲು ಹಿಂದಿನ ಜಡತೆಗೇ ಜೋತುಬೀಳುವ ಅವಲಂಬನೆಯ ಸ್ವಭಾವವನ್ನು ಸಾಮಾಜಿಕವಾಗಿ ನೆಲೆಗೊಳಿಸಿಬಿಡುತ್ತದೆ. ಇಂಥ ಅಪಾಯದಿಂದ ಪಾರಾಗಬೇಕಾದರೆ ರಾಜಕೀಯ ಪಕ್ಷಗಳು, ಸಾರ್ವಜನಿಕ ಸಂಸ್ಥೆಗಳು, ವಿವಿಧ ಜನವರ್ಗಗಳು ಆಯಾ ಕಾಲದ ಅಗತ್ಯಗಳಿಗೆ ತಕ್ಕಂತೆ ಪ್ರತಿಸ್ಪಂದಿಸುವ ಆಡಳಿತಾತ್ಮಕ ಸಮಗ್ರ ನೀತಿಗಳ ಅವಶ್ಯಕತೆಯನ್ನು ಮನಗಂಡು ಅವುಗಳ ಪರವಾದ ವ್ಯಾಪಕ ಅಲೆಯನ್ನು ನಿರ್ಮಿಸಬೇಕು. ಹಾಗಾದಾಗ ಮಾತ್ರ ಚುನಾವಣೆ ಇರಲಿ, ಇಲ್ಲದಿರಲಿ ಎಲ್ಲರೂ ರಚನಾತ್ಮಕ ನೀತಿಗಳನ್ನು ಗಮನದಲ್ಲಿರಿಸಿಕೊಂಡು ಮೌಲಿಕ ಸಂವಾದ ಏರ್ಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಅನಗತ್ಯ ವಿವಾದಗಳ ವೈಭವೀಕರಣ ತಾನಾಗಿಯೇ ನಿಂತು ಸಾರ್ವಜನಿಕ ಆಡಳಿತವು ಸಂವಿಧಾನಾತ್ಮಕ ಮೌಲ್ಯವನ್ನು ತಂದುಕೊಳ್ಳುತ್ತದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading
Advertisement

Title

ದಿನದ ಸುದ್ದಿ1 day ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ2 days ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ2 days ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ2 days ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ2 days ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ2 days ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ2 days ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ2 days ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ2 days ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ2 days ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

Trending